Connect with us

ದಿನದ ಸುದ್ದಿ

ಡಾ. ಎಂ.ಎಂ. ಕಲ್ಬುರ್ಗಿಯವರು ಮಾಡಿದ ತಪ್ಪಾದರೂ ಏನು..?

Published

on

  • ಆರ್.ರಾಮಕೃಷ್ಣ

ಗಸ್ಟ್, ಸೆಪ್ಟೆಂಬರ್ ತಿಂಗಳುಗಳು ಬಂದರೆ ವೈಚಾರಿಕತೆ, ವೈಜ್ಞಾನಿಕ ಮನೋಭಾವವನ್ನು ಪ್ರತಿಪಾದಿಸುವ ಮನಸ್ಸುಗಳಲ್ಲಿ ಒಂದು ಬಗೆಯ ವಿಷಾದಭಾವ ಆವರಿಸುತ್ತದೆ. ಈ ದಿನಗಳಲ್ಲಿ ಕೆಲವು ವ್ಯಕ್ತಿಗಳನ್ನು ನೆನಪಿಸಿಕೊಳ್ಳದೇ ಇರುವುದು ಸಾಧ್ಯವೇ ಇಲ್ಲ.

ಆಗಸ್ಟ್ 20, 2019 ರಂದು ಹತ್ಯೆಯಾದ ಮಹಾರಾಷ್ಟ್ರದ ಖ್ಯಾತ ವಿಚಾರವಾದಿ ಡಾ. ನರೇಂದ್ರ ದಾಬೋಲ್ಕರ್, ಖ್ಯಾತ ಬರಹಗಾರ, ಸಾಮಾಜಿಕ ಕಾರ್ಯಕರ್ತ ಗೋವಿಂದ ಪನ್ಸಾರೆ, ಆಗಸ್ಟ್ 30, 2015 ರಂದು ಹತ್ಯೆಯಾದ ನಮ್ಮಧೇ ಕರ್ನಾಟಕದ ಘನ ವಿದ್ವಾಂಸ ಡಾ. ಎಂ.ಎಂ. ಕಲ್ಬುರ್ಗಿ, ಸೆಪ್ಟೆಂಬರ್ 5, 2017 ರಂದು ಹತ್ಯೆಯಾದ ಕೋಮು ಸೌಹಾರ್ದ ಚಳುವಳಿಯ ಕಾರ್ಯಕರ್ತೆ, ಪತ್ರಕರ್ತೆ ಗೌರಿ ಲಂಕೇಶ್ ಇವರೇ ಈ ವ್ಯಕ್ತಿಗಳು.

ಈ ನಾಲ್ವರ ಹತ್ಯೆಗಳು ಬಹುತೇಕ ಒಂದೇ ರೀತಿಯಲ್ಲಿ ಆಗಿವೆ. ಸಂಚು ಮಾಡಿ, ಹೊಂಚುಹಾಕಿ ಈ ಚಿಂತಕರ, ಸಾಮಾಜಿಕ ಕಾರ್ಯಕರ್ತರ ದೇಹಗಳಿಗೆ ಗುಂಡು ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಎಲ್ಲ ಹತ್ಯೆಗಳೂ ಬಹುತೇಕ ಒಂದೇ ರೀತಿಯ ಕಾರಣಕ್ಕೇ ಆಗಿವೆ. ಇವರೆಲ್ಲರೂ ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರ, ಜಾತಿತಾರತಮ್ಯ, ಅಸ್ಪೃಶ್ಯತೆಗಳನ್ನು ವಿರೋಧಿಸುತ್ತಿದ್ದರು. ಕೋಮುದ್ವೇಷವನ್ನು ನಿವಾರಿಸಿ ಸಮಾಜದಲ್ಲಿ ಸೌಹಾರ್ಧತೆಯನ್ನು ಸ್ಥಾಪಿಸಲು ಬಯಸಿದ್ದರು.

ಇತ್ತೀಚಿನ ವರ್ಷಗಳಲ್ಲಿ ನಮ್ಮ ಸಮಾಜದಲ್ಲಿ ವೈಚಾರಿಕತೆಯ ಮೇಲೆ, ಚಿಂತಕರು, ವಿಚಾರವಾದಿಗಳ ಮೇಲೆ ಹಲ್ಲೆಗಳು ಹೆಚ್ಚುತ್ತಿವೆ. ಅಸಹನೆ ತೀವ್ರವಾಗುತ್ತಿದೆ. ನಿರುದ್ಯೋಗ-ಬಡತನ ಮುಂತಾದ ಸಮಸ್ಯೆಗಳ ಕಾರಣದಿಂದ ಜನಸಾಮಾನ್ಯರಲ್ಲಿರುವ ಹೆಚ್ಚುತ್ತಿರುವ ಅತೃಪ್ತಿ, ಅಸಮಾಧಾನಗನ್ನು ಬಳಸಿಕೊಂಡು ಈ ಸಮಸ್ಯೆಗಳಿಗೆ ತಪ್ಪು ಕಾರಣಗಳನ್ನು ಮೂಲವೆಂದು ತೋರಿಸಿ ಅನ್ಯಮತ ದ್ವೇಷವನ್ನು ಪ್ರಚೋದಿಸಿ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡಲಾಗುತ್ತಿದೆ.

ಪ್ರಜಾಪ್ರಭುತ್ವದ ಮೂಲ ಅಡಿಪಾಯವಾದ ಮುಕ್ತ ಚಿಂತನೆ, ವೈಚಾರಿಕತೆಯ ಮೇಲೆ ಹಲ್ಲೆಗಳನ್ನು ಪ್ರಚೋದಿಸಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸೌಹಾರ್ದತೆ, ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಚಿಂತಕರ ಹತ್ಯೆಗಳು ನಡೆದಿವೆ. ಈ ಮೇಲೆ ಹೇಳಲಾದ ಎಲ್ಲ ಹತ್ಯೆಗಳೂ ಇಂತಹ ವಿಕೃತ ಪ್ರಚೋಧನೆಯ ಪರಿಣಾಮವೇ ಆಗಿವೆ.

ಪತ್ರಿಕೆಗಳು, ದೂರದರ್ಶನ ಚಾನೆಲ್ ಮುಂತಾದವು ಸೇರಿದ ಸಮೂಹ ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಲಾಗುತ್ತದೆ. ನಮ್ಮ ದೇಶದ ಸುಧೀರ್ಘ ಸ್ವಾತಂತ್ರ್ಯ ಹೋರಾಟದಲ್ಲಿ ಬೆಳೆದು ಬಂದ ನಮ್ಮ ದೇಶದ ಪ್ರತ್ರಿಕಾ ರಂಗವು ದೇಶದಲ್ಲಿ ಸಾಮಾಜಿಕ ನ್ಯಾಯದ ಪ್ರತಿಪಾದನೆಯಲ್ಲಿ, ಮೌಢ್ಯ-ಕಂದಾಚಾರಗಳ ವಿರುದ್ಧ ವೈಜ್ಞಾನಿಕ ಮನೋಭಾವನ್ನು ಹರಡುವಲ್ಲಿ, ವೈಚಾರಿಕತೆಯನ್ನು ಬೆಳೆಸುವಲ್ಲಿ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತಾ ಬಂದಿವೆ.

ಆದರೆ ಇತ್ತೀಚಿನ ವರ್ಷಗಳಲ್ಲಿ ಗಣನೀಯ ಭಾಗದ ಸಮೂಹ ಮಾಧ್ಯಮಗಳ ಧೋರಣೆಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನಿಸಿದಲ್ಲಿ ಇದೇ ಮಾತನ್ನು ಹೇಳುವುದು ಸಾಧ್ಯವಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ. ಡಾ. ಎಂ.ಎಂ. ಕಲ್ಬುರ್ಗಿಯವರ ಹತ್ಯೆಯಲ್ಲಿ ನಮ್ಮ ಪತಿಕಾ ಮಾಧ್ಯಮವು ಅತ್ಯಂತ ವೈಚಾರಿಕತೆಯನ್ನು, ಮಾಧ್ಯಮ ಪಾಲಿಸಲೇ ಬೇಕಾದ ನೈತಿಕತೆಯನ್ನು ಮರೆತು ಸುದ್ದಿ-ವಿಚಾರಗಳನ್ನು ತಪ್ಪು, ತಪ್ಪಾಗಿ, ವಿಕೃತವಾಗಿ ಬಿಂಬಿಸಿದ್ದು ಒಂದು ಕಾರಣ ಎಂದು ನಾವು ಬಹಳ ವಿಷಾದದಿಂದ ಗಮನಿಸಬೇಕಾಗಿದೆ.

ಕಲ್ಬುರ್ಗಿಯವರ ಹತ್ಯೆಗೆ ಕಾರಣವಾದ ಅಂಶಗಳನ್ನೇ ನಾವು ಒಮ್ಮೆ ಪರಿಶೀಲಿಸೋಣ. ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಭಾಂಗಣದಲ್ಲಿ ಅಖಿಲ ಕರ್ನಾಟಕ ವಿಚಾರವಾದಿಗಳ ವೇದಿಕೆಯು ಸಂಘಟಿಸಿದ್ದ, ವೈಚಾರಿಕತೆಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಕಲ್ಬುರ್ಗಿಯವರು ಡಾ.ಯು.ಆರ್. ಅನಂತ ಮೂರ್ತಿಯವರ ಬರಹದಲ್ಲಿ ಪ್ರಸ್ತಾಪವಾಗಿರುವ ವಿಚಾರವೊಂದನ್ನು ಸಾಂದರ್ಭಿಕವಾಗಿ ಪ್ರಸ್ತಾಪಿಸಿದರು.

`ಬೆತ್ತಲೆ ಫೂಜೆ ಏಕೆ ಕೂಡದು’ ಎಂಬ ಅನಂತಮೂರ್ತಿಯವರ ಪುಸ್ತಕದಲ್ಲಿ `ನನ್ನನ್ನು ಬೆಳಸಿದ ಕರ್ನಾಟಕ’ ಎಂಬ ಲೇಖನವೊಂದಿದೆ. ಅದರಲ್ಲಿ ಸ್ವಾತಂತ್ರ್ಯಪೂರ್ವದ ಆ ಕಾಲಘಟ್ಟದಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬೆಳೆದ ಆನಂತ ಮೂರ್ತಿಯವರು ತಮ್ಮ ಬಾಲ್ಯಕಾಲದ ಸಾಮಾಜಿಕ ಪರಿಸರವನ್ನು ವಿವರಿಸುತ್ತಾ, ದಟ್ಟ ಸಾಂಪ್ರದಾಯಿಕ ಸಮಾಜದಲ್ಲಿನ ಅನುಭವಗಳು, ಅಂತಹ ಸನ್ನಿವೇಶದಲ್ಲಿ ಶಿವರಾಮ ಕಾರಂತರ ಚೋಮನದುಡಿ, ಕುವೆಂಪು ಅವರ ಸಾಹಿತ್ಯ ಕೃತಿಗಳು, ತಂದೆಯವರು ತರಿಸುತ್ತಿದ್ದ ಮಹಾತ್ಮ ಗಾಂಧಿಯವರ ಸಂಪಾದಕತ್ವದ `ಹರಿಜನ’ ಪತ್ರಿಕೆಯ ಓದು, ಶಾಂತವೇರಿ ಗೋಪಾಲಗೌಡರ ವಿಚಾರಗಳು ಮುಂತಾದ ನಾನಾ ಪ್ರಭಾವಗಳಿಂದ ಹೊಸ ಚಿಂತನೆಗೆ ಮನಸ್ಸನ್ನು ತೆರೆದುಕೊಂಡದ್ದು, ಆ ಕಾಲಘಟ್ಟದಲ್ಲಿ ಹಲವು ಬಗೆಯ ಗೊಂದಲಗಳು ಅವರನ್ನು ಕಾಡಿದ್ದು ಎಲ್ಲವನ್ನು ವಿವರಿಸುತ್ತಾರೆ.

ಕರಾವಳಿಯಿಂದ ಬಂದ ಕಲಾವಿದರ ಯಕ್ಷಗಾನ, ತುಳುವರ ಕೋಲ ಇತ್ಯಾದಿಗಳ ಮೂಲಕ ಪುರಾಣ ಕಥಾನಕಗಳನ್ನು ನೋಡುತ್ತಾ, ಕೇಳುತ್ತಾ ಬೆಳೆಯುತ್ತಿದ್ದ ಕಾಲಘಟ್ಟದಲ್ಲಿ.., ಸುತ್ತ ಮುತ್ತಲ ಮರ, ಕಲ್ಲು, ನದಿ ಎಲ್ಲವೂ ಪವಿತ್ರ ಎಂಬಂತಹ ನಂಬಿಕೆಯಿದ್ದ ಪರಿಸರದಲ್ಲಿ…. ತಮ್ಮನ್ನು ತಾವು `ನಿರ್ ಪುರಾಣೀಕರಿಸಿಕೊಳ್ಳುವ’ ನಿಟ್ಟಿನಲ್ಲಿ, `ಏನಾದರೂ ತೀರಾ ಅಸಹಜವಾದದ್ದನೋ ಮಾಡಿ, ಕಲ್ಲು ಎನ್ನುವುದು ಬರಿ ಕಲ್ಲು- ಮರ ಎಂದರೆ ಮರ ಎಂದು ನನ್ನನ್ನು ನಾನು ನಂಬಿಸಿಕೊಳ್ಳುವುದು ಆಗಬೇಕಿತ್ತು’ ಅದಕ್ಕಾಗಿ, `ಜನರು ಬಹಳ ಪ್ರಭಾವಶಾಲಿ ಎಂದು ನಂಬುತ್ತಿದ್ದ ಮರದಡಿಯ ಭೂತದ ಕಲ್ಲೊಂದರ ಮೇಲೆ ಗುಟ್ಟಾಗಿ ಮೂತ್ರ ಮಾಡಿದೆ.’ ಎಂದು ಬರೆದುಕೊಂಡಿದ್ದಾರೆ. ಆನಂತರ `ಏನು ಶಿಕ್ಷೆ ಕಾದಿದೆಯೋ ಎಂದು ದಿಗಿಲಿನಲ್ಲೇ ಹಲವಾರು ದಿನಕಳೆದೆ’ ಎಂದೂ ಅವರು ಹೇಳಿಕೊಂಡಿದ್ದಾರೆ.

ತಮ್ಮ ಬಾಲ್ಯಕಾಲದಲ್ಲಿ, ಎಲ್ಲರಿಗೂ ಸಹಜವಾದ ಅಪಕ್ವ ಮನಸ್ಥಿತಿಯಲ್ಲಿ…, ಮನಸ್ಸು ವೈಚಾರಿಕತೆಗೆ ತೆರೆದುಕೊಳ್ಳುವ ಕಾಲಘಟ್ಟದಲ್ಲಿನ ಗೊಂದಲದ ಮನಸ್ಥಿತಿಯಲ್ಲಿ ತಾವು ಮಾಡಿದ ಕೆಲಸವೊಂದರ ಬಗೆಗೆ ಅನಂತಮೂರ್ತಿಯವರು ಹೇಳಿಕೊಂಡಿದ್ದಾರೆ. ಲೇಖನದಲ್ಲಿ ಅನಂತಮೂರ್ತಿಯವರು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿಲ್ಲ. ಅವರು ಸಮರ್ಥಿಸಿಕೊಳ್ಳುವಂಥವರೂ ಅಲ್ಲ.

ಚಳುವಳಿಕಾರರು ತಮ್ಮ ಹಲವಾರು ಪ್ರತಿಭಟನೆಗಳನ್ನು ನಡೆಸುವಾಗ ಸಾಂಕೇತಿಕ ಪ್ರತಿಭಟನೆಯ ಭಾಗವಾಗಿ ಹಲವು ವ್ಯಕ್ತಿಗಳ `ಭೂತದಹನ’ ಮಾಡುವುದು ತುಂಬಾ ಸಾಮಾನ್ಯ. ಆದರೆ ಅನಂತ ಮೂರ್ತಿಯವರು ಇಂತಹ ಸಾಂಕೇತಿಕ ಭೂತದಹನವನ್ನು ಸಹ ವಿರೋಧಿಸುತ್ತಿದ್ದವರು ಎಂಬುದನ್ನು ನಾವು ಗಮನಿಸಬೇಕು. ಇನ್ನೂ ಜನಸಾಮಾನ್ಯರು ಭಕ್ತಿಯಿಂದ ಗೌರವಿಸುವ ದೇವರನ್ನು ಅಪಮಾನಿಸುವುದನ್ನ ಸಮರ್ಥಿಸುವರೇ ? ಸಾರ್ವಜನಿಕ ಸಮಾರಂಭದಲ್ಲಿ ಸಾಂದರ್ಭಿಕವಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ ಕಲ್ಬುರ್ಗಿಯವರೂ ಸಹ ಅನಂತ ಮೂರ್ತಿಯವರ ಈ ಕೆಲಸವನ್ನು ಸಮರ್ಥಿಸಲಿಲ್ಲ ಎಂಬುದನ್ನು ಸಹ ಗಮನಿಸಬೇಕು.

ಆದರೆ ಕೆಲವು ಪತ್ರಿಕೆಗಳಲ್ಲಿ ಸಮಯ, ಸಂದರ್ಭದ ಯಾವ ಹಿನ್ನೆಲೆ ಮುನ್ನೆಲೆಯನ್ನು ಗಮನಕ್ಕೆ ತೆಗೆದುಕೊಳ್ಳದೇ, ಮಾತಿನ ಸರಿಯಾದ ಅರ್ಥವನ್ನು ಬಿಂಬಿಸದೇ, ಅನಂತಮೂರ್ತಿಯವರು ದೇವರ ಮೂರ್ತಿಯ ಮೇಲೆ ಮೂತ್ರ ಮಾಡಿದ್ದಾಗಿ ಬರೆದುಕೊಂಡಿದ್ದಾರೆ ಎಂಬಂತೆ ಮತ್ತು ಕಲ್ಬುರ್ಗಿಯವರು ಅದನ್ನು ಸಮರ್ಥಿಸಿ ಇಂಥ ಪ್ರಯೋಗ ನಡೆಸಲು ಕರೆ ನೀಡಿದ್ದಾರೆ ಎಂಬಂತೆ ಬಿಂಬಿಸಲಾಯಿತು. ಕಲ್ಬುರ್ಗಿಯವರಿಗೆ `ಹಿಂದೂ ವಿರೋಧಿ’ ಎಂಬ ಹಣೆಪಟ್ಟಿ ಹಚ್ಚಲಾಯಿತು.

ನಂತರ ನಡೆದ ದುರಂತ ಈಗ ಎಲ್ಲರಿಗೂ ತಿಳಿದದ್ದು. ಅನಂತ ಮೂರ್ತಿಯವರ ಬರಹ ವಿಚಾರವನ್ನು ನಾವು ಒಪ್ಪಬಹುದು ಅಥವಾ ಒಪ್ಪದೇ ಇರಬಹುದು. ಕಲ್ಬುರ್ಗಿಯವರ ಮಾತು, ವಿಚಾರಗಳನ್ನು ನಾವು ಒಪ್ಪಬಹುದು ಒಪ್ಪದಿರಬಹುದು. ಆದರೆ ಆ ಕಾರಣಕ್ಕಾಗಿ ಒಬ್ಬ ಘನ ವಿದ್ವಾಂಸನ ಕೊಲೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗದು. ಇದಕ್ಕೆ ಕಾರಣವಾದ ಮಾಧ್ಯಮಗಳ ಪಾತ್ರವನ್ನೂ ಮರೆಯಲಾಗದು.

ಕೊನೆಯಲ್ಲಿ ಒಂದು ವಿಷಯ ಗಮನಿಸಬೇಕು. ಕಲ್ಬುರ್ಗಿಯವರು ನಾಸ್ತಿಕರಾಗಿರಲಿಲ್ಲ. ಅವರು ಆಸ್ತಿಕರಾಗಿದ್ದರು. ದೇವರಲ್ಲಿ ನಂಬಿಕೆ ಇಟ್ಟವರಾಗಿದ್ದರು. ಮತಾಂಧತೆ, ವಿವೇಕ ಹೀನ ದ್ವೇಷ ಒಬ್ಬ ಅಪರೂಪದ ಸಂಶೋಧಕನ ಹತ್ಯೆಗೆ ಕಾರಣವಾಗಿದ್ದು ಮಾತ್ರ ದುರಂತ. ಇಂತಹ ದುರಂತಗಳು ಮತ್ತೆ ಸಂಭವಿಸದಂತಹ ಎಚ್ಚರಿಕೆಯನ್ನು ಎಲ್ಲರೂ ವಹಿಸಬೇಕು. ಭಿನ್ನಾಭಿಪ್ರಾಯಗಳಿದ್ದಲ್ಲಿ ಆರೋಗ್ಯಕರ ಟೀಕೆ-ಸಂವಾದಗಳ ಮೂಲಕ ಅದನ್ನು ಬಗೆಹರಿಸಿಕೊಳ್ಳಲು ಅವಕಾಶ ನೀಡುವ ಪ್ರಜಾಪ್ರಭುತ್ವ ಮೌಲ್ಯಗಳು ಉಳಿಯಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending