ದಿನದ ಸುದ್ದಿ
ಡಾ. ಎಂ.ಎಂ. ಕಲ್ಬುರ್ಗಿಯವರು ಮಾಡಿದ ತಪ್ಪಾದರೂ ಏನು..?
- ಆರ್.ರಾಮಕೃಷ್ಣ
ಆಗಸ್ಟ್, ಸೆಪ್ಟೆಂಬರ್ ತಿಂಗಳುಗಳು ಬಂದರೆ ವೈಚಾರಿಕತೆ, ವೈಜ್ಞಾನಿಕ ಮನೋಭಾವವನ್ನು ಪ್ರತಿಪಾದಿಸುವ ಮನಸ್ಸುಗಳಲ್ಲಿ ಒಂದು ಬಗೆಯ ವಿಷಾದಭಾವ ಆವರಿಸುತ್ತದೆ. ಈ ದಿನಗಳಲ್ಲಿ ಕೆಲವು ವ್ಯಕ್ತಿಗಳನ್ನು ನೆನಪಿಸಿಕೊಳ್ಳದೇ ಇರುವುದು ಸಾಧ್ಯವೇ ಇಲ್ಲ.
ಆಗಸ್ಟ್ 20, 2019 ರಂದು ಹತ್ಯೆಯಾದ ಮಹಾರಾಷ್ಟ್ರದ ಖ್ಯಾತ ವಿಚಾರವಾದಿ ಡಾ. ನರೇಂದ್ರ ದಾಬೋಲ್ಕರ್, ಖ್ಯಾತ ಬರಹಗಾರ, ಸಾಮಾಜಿಕ ಕಾರ್ಯಕರ್ತ ಗೋವಿಂದ ಪನ್ಸಾರೆ, ಆಗಸ್ಟ್ 30, 2015 ರಂದು ಹತ್ಯೆಯಾದ ನಮ್ಮಧೇ ಕರ್ನಾಟಕದ ಘನ ವಿದ್ವಾಂಸ ಡಾ. ಎಂ.ಎಂ. ಕಲ್ಬುರ್ಗಿ, ಸೆಪ್ಟೆಂಬರ್ 5, 2017 ರಂದು ಹತ್ಯೆಯಾದ ಕೋಮು ಸೌಹಾರ್ದ ಚಳುವಳಿಯ ಕಾರ್ಯಕರ್ತೆ, ಪತ್ರಕರ್ತೆ ಗೌರಿ ಲಂಕೇಶ್ ಇವರೇ ಈ ವ್ಯಕ್ತಿಗಳು.
ಈ ನಾಲ್ವರ ಹತ್ಯೆಗಳು ಬಹುತೇಕ ಒಂದೇ ರೀತಿಯಲ್ಲಿ ಆಗಿವೆ. ಸಂಚು ಮಾಡಿ, ಹೊಂಚುಹಾಕಿ ಈ ಚಿಂತಕರ, ಸಾಮಾಜಿಕ ಕಾರ್ಯಕರ್ತರ ದೇಹಗಳಿಗೆ ಗುಂಡು ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಎಲ್ಲ ಹತ್ಯೆಗಳೂ ಬಹುತೇಕ ಒಂದೇ ರೀತಿಯ ಕಾರಣಕ್ಕೇ ಆಗಿವೆ. ಇವರೆಲ್ಲರೂ ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರ, ಜಾತಿತಾರತಮ್ಯ, ಅಸ್ಪೃಶ್ಯತೆಗಳನ್ನು ವಿರೋಧಿಸುತ್ತಿದ್ದರು. ಕೋಮುದ್ವೇಷವನ್ನು ನಿವಾರಿಸಿ ಸಮಾಜದಲ್ಲಿ ಸೌಹಾರ್ಧತೆಯನ್ನು ಸ್ಥಾಪಿಸಲು ಬಯಸಿದ್ದರು.
ಇತ್ತೀಚಿನ ವರ್ಷಗಳಲ್ಲಿ ನಮ್ಮ ಸಮಾಜದಲ್ಲಿ ವೈಚಾರಿಕತೆಯ ಮೇಲೆ, ಚಿಂತಕರು, ವಿಚಾರವಾದಿಗಳ ಮೇಲೆ ಹಲ್ಲೆಗಳು ಹೆಚ್ಚುತ್ತಿವೆ. ಅಸಹನೆ ತೀವ್ರವಾಗುತ್ತಿದೆ. ನಿರುದ್ಯೋಗ-ಬಡತನ ಮುಂತಾದ ಸಮಸ್ಯೆಗಳ ಕಾರಣದಿಂದ ಜನಸಾಮಾನ್ಯರಲ್ಲಿರುವ ಹೆಚ್ಚುತ್ತಿರುವ ಅತೃಪ್ತಿ, ಅಸಮಾಧಾನಗನ್ನು ಬಳಸಿಕೊಂಡು ಈ ಸಮಸ್ಯೆಗಳಿಗೆ ತಪ್ಪು ಕಾರಣಗಳನ್ನು ಮೂಲವೆಂದು ತೋರಿಸಿ ಅನ್ಯಮತ ದ್ವೇಷವನ್ನು ಪ್ರಚೋದಿಸಿ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡಲಾಗುತ್ತಿದೆ.
ಪ್ರಜಾಪ್ರಭುತ್ವದ ಮೂಲ ಅಡಿಪಾಯವಾದ ಮುಕ್ತ ಚಿಂತನೆ, ವೈಚಾರಿಕತೆಯ ಮೇಲೆ ಹಲ್ಲೆಗಳನ್ನು ಪ್ರಚೋದಿಸಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸೌಹಾರ್ದತೆ, ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಚಿಂತಕರ ಹತ್ಯೆಗಳು ನಡೆದಿವೆ. ಈ ಮೇಲೆ ಹೇಳಲಾದ ಎಲ್ಲ ಹತ್ಯೆಗಳೂ ಇಂತಹ ವಿಕೃತ ಪ್ರಚೋಧನೆಯ ಪರಿಣಾಮವೇ ಆಗಿವೆ.
ಪತ್ರಿಕೆಗಳು, ದೂರದರ್ಶನ ಚಾನೆಲ್ ಮುಂತಾದವು ಸೇರಿದ ಸಮೂಹ ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಲಾಗುತ್ತದೆ. ನಮ್ಮ ದೇಶದ ಸುಧೀರ್ಘ ಸ್ವಾತಂತ್ರ್ಯ ಹೋರಾಟದಲ್ಲಿ ಬೆಳೆದು ಬಂದ ನಮ್ಮ ದೇಶದ ಪ್ರತ್ರಿಕಾ ರಂಗವು ದೇಶದಲ್ಲಿ ಸಾಮಾಜಿಕ ನ್ಯಾಯದ ಪ್ರತಿಪಾದನೆಯಲ್ಲಿ, ಮೌಢ್ಯ-ಕಂದಾಚಾರಗಳ ವಿರುದ್ಧ ವೈಜ್ಞಾನಿಕ ಮನೋಭಾವನ್ನು ಹರಡುವಲ್ಲಿ, ವೈಚಾರಿಕತೆಯನ್ನು ಬೆಳೆಸುವಲ್ಲಿ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತಾ ಬಂದಿವೆ.
ಆದರೆ ಇತ್ತೀಚಿನ ವರ್ಷಗಳಲ್ಲಿ ಗಣನೀಯ ಭಾಗದ ಸಮೂಹ ಮಾಧ್ಯಮಗಳ ಧೋರಣೆಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನಿಸಿದಲ್ಲಿ ಇದೇ ಮಾತನ್ನು ಹೇಳುವುದು ಸಾಧ್ಯವಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ. ಡಾ. ಎಂ.ಎಂ. ಕಲ್ಬುರ್ಗಿಯವರ ಹತ್ಯೆಯಲ್ಲಿ ನಮ್ಮ ಪತಿಕಾ ಮಾಧ್ಯಮವು ಅತ್ಯಂತ ವೈಚಾರಿಕತೆಯನ್ನು, ಮಾಧ್ಯಮ ಪಾಲಿಸಲೇ ಬೇಕಾದ ನೈತಿಕತೆಯನ್ನು ಮರೆತು ಸುದ್ದಿ-ವಿಚಾರಗಳನ್ನು ತಪ್ಪು, ತಪ್ಪಾಗಿ, ವಿಕೃತವಾಗಿ ಬಿಂಬಿಸಿದ್ದು ಒಂದು ಕಾರಣ ಎಂದು ನಾವು ಬಹಳ ವಿಷಾದದಿಂದ ಗಮನಿಸಬೇಕಾಗಿದೆ.
ಕಲ್ಬುರ್ಗಿಯವರ ಹತ್ಯೆಗೆ ಕಾರಣವಾದ ಅಂಶಗಳನ್ನೇ ನಾವು ಒಮ್ಮೆ ಪರಿಶೀಲಿಸೋಣ. ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಭಾಂಗಣದಲ್ಲಿ ಅಖಿಲ ಕರ್ನಾಟಕ ವಿಚಾರವಾದಿಗಳ ವೇದಿಕೆಯು ಸಂಘಟಿಸಿದ್ದ, ವೈಚಾರಿಕತೆಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಕಲ್ಬುರ್ಗಿಯವರು ಡಾ.ಯು.ಆರ್. ಅನಂತ ಮೂರ್ತಿಯವರ ಬರಹದಲ್ಲಿ ಪ್ರಸ್ತಾಪವಾಗಿರುವ ವಿಚಾರವೊಂದನ್ನು ಸಾಂದರ್ಭಿಕವಾಗಿ ಪ್ರಸ್ತಾಪಿಸಿದರು.
`ಬೆತ್ತಲೆ ಫೂಜೆ ಏಕೆ ಕೂಡದು’ ಎಂಬ ಅನಂತಮೂರ್ತಿಯವರ ಪುಸ್ತಕದಲ್ಲಿ `ನನ್ನನ್ನು ಬೆಳಸಿದ ಕರ್ನಾಟಕ’ ಎಂಬ ಲೇಖನವೊಂದಿದೆ. ಅದರಲ್ಲಿ ಸ್ವಾತಂತ್ರ್ಯಪೂರ್ವದ ಆ ಕಾಲಘಟ್ಟದಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬೆಳೆದ ಆನಂತ ಮೂರ್ತಿಯವರು ತಮ್ಮ ಬಾಲ್ಯಕಾಲದ ಸಾಮಾಜಿಕ ಪರಿಸರವನ್ನು ವಿವರಿಸುತ್ತಾ, ದಟ್ಟ ಸಾಂಪ್ರದಾಯಿಕ ಸಮಾಜದಲ್ಲಿನ ಅನುಭವಗಳು, ಅಂತಹ ಸನ್ನಿವೇಶದಲ್ಲಿ ಶಿವರಾಮ ಕಾರಂತರ ಚೋಮನದುಡಿ, ಕುವೆಂಪು ಅವರ ಸಾಹಿತ್ಯ ಕೃತಿಗಳು, ತಂದೆಯವರು ತರಿಸುತ್ತಿದ್ದ ಮಹಾತ್ಮ ಗಾಂಧಿಯವರ ಸಂಪಾದಕತ್ವದ `ಹರಿಜನ’ ಪತ್ರಿಕೆಯ ಓದು, ಶಾಂತವೇರಿ ಗೋಪಾಲಗೌಡರ ವಿಚಾರಗಳು ಮುಂತಾದ ನಾನಾ ಪ್ರಭಾವಗಳಿಂದ ಹೊಸ ಚಿಂತನೆಗೆ ಮನಸ್ಸನ್ನು ತೆರೆದುಕೊಂಡದ್ದು, ಆ ಕಾಲಘಟ್ಟದಲ್ಲಿ ಹಲವು ಬಗೆಯ ಗೊಂದಲಗಳು ಅವರನ್ನು ಕಾಡಿದ್ದು ಎಲ್ಲವನ್ನು ವಿವರಿಸುತ್ತಾರೆ.
ಕರಾವಳಿಯಿಂದ ಬಂದ ಕಲಾವಿದರ ಯಕ್ಷಗಾನ, ತುಳುವರ ಕೋಲ ಇತ್ಯಾದಿಗಳ ಮೂಲಕ ಪುರಾಣ ಕಥಾನಕಗಳನ್ನು ನೋಡುತ್ತಾ, ಕೇಳುತ್ತಾ ಬೆಳೆಯುತ್ತಿದ್ದ ಕಾಲಘಟ್ಟದಲ್ಲಿ.., ಸುತ್ತ ಮುತ್ತಲ ಮರ, ಕಲ್ಲು, ನದಿ ಎಲ್ಲವೂ ಪವಿತ್ರ ಎಂಬಂತಹ ನಂಬಿಕೆಯಿದ್ದ ಪರಿಸರದಲ್ಲಿ…. ತಮ್ಮನ್ನು ತಾವು `ನಿರ್ ಪುರಾಣೀಕರಿಸಿಕೊಳ್ಳುವ’ ನಿಟ್ಟಿನಲ್ಲಿ, `ಏನಾದರೂ ತೀರಾ ಅಸಹಜವಾದದ್ದನೋ ಮಾಡಿ, ಕಲ್ಲು ಎನ್ನುವುದು ಬರಿ ಕಲ್ಲು- ಮರ ಎಂದರೆ ಮರ ಎಂದು ನನ್ನನ್ನು ನಾನು ನಂಬಿಸಿಕೊಳ್ಳುವುದು ಆಗಬೇಕಿತ್ತು’ ಅದಕ್ಕಾಗಿ, `ಜನರು ಬಹಳ ಪ್ರಭಾವಶಾಲಿ ಎಂದು ನಂಬುತ್ತಿದ್ದ ಮರದಡಿಯ ಭೂತದ ಕಲ್ಲೊಂದರ ಮೇಲೆ ಗುಟ್ಟಾಗಿ ಮೂತ್ರ ಮಾಡಿದೆ.’ ಎಂದು ಬರೆದುಕೊಂಡಿದ್ದಾರೆ. ಆನಂತರ `ಏನು ಶಿಕ್ಷೆ ಕಾದಿದೆಯೋ ಎಂದು ದಿಗಿಲಿನಲ್ಲೇ ಹಲವಾರು ದಿನಕಳೆದೆ’ ಎಂದೂ ಅವರು ಹೇಳಿಕೊಂಡಿದ್ದಾರೆ.
ತಮ್ಮ ಬಾಲ್ಯಕಾಲದಲ್ಲಿ, ಎಲ್ಲರಿಗೂ ಸಹಜವಾದ ಅಪಕ್ವ ಮನಸ್ಥಿತಿಯಲ್ಲಿ…, ಮನಸ್ಸು ವೈಚಾರಿಕತೆಗೆ ತೆರೆದುಕೊಳ್ಳುವ ಕಾಲಘಟ್ಟದಲ್ಲಿನ ಗೊಂದಲದ ಮನಸ್ಥಿತಿಯಲ್ಲಿ ತಾವು ಮಾಡಿದ ಕೆಲಸವೊಂದರ ಬಗೆಗೆ ಅನಂತಮೂರ್ತಿಯವರು ಹೇಳಿಕೊಂಡಿದ್ದಾರೆ. ಲೇಖನದಲ್ಲಿ ಅನಂತಮೂರ್ತಿಯವರು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿಲ್ಲ. ಅವರು ಸಮರ್ಥಿಸಿಕೊಳ್ಳುವಂಥವರೂ ಅಲ್ಲ.
ಚಳುವಳಿಕಾರರು ತಮ್ಮ ಹಲವಾರು ಪ್ರತಿಭಟನೆಗಳನ್ನು ನಡೆಸುವಾಗ ಸಾಂಕೇತಿಕ ಪ್ರತಿಭಟನೆಯ ಭಾಗವಾಗಿ ಹಲವು ವ್ಯಕ್ತಿಗಳ `ಭೂತದಹನ’ ಮಾಡುವುದು ತುಂಬಾ ಸಾಮಾನ್ಯ. ಆದರೆ ಅನಂತ ಮೂರ್ತಿಯವರು ಇಂತಹ ಸಾಂಕೇತಿಕ ಭೂತದಹನವನ್ನು ಸಹ ವಿರೋಧಿಸುತ್ತಿದ್ದವರು ಎಂಬುದನ್ನು ನಾವು ಗಮನಿಸಬೇಕು. ಇನ್ನೂ ಜನಸಾಮಾನ್ಯರು ಭಕ್ತಿಯಿಂದ ಗೌರವಿಸುವ ದೇವರನ್ನು ಅಪಮಾನಿಸುವುದನ್ನ ಸಮರ್ಥಿಸುವರೇ ? ಸಾರ್ವಜನಿಕ ಸಮಾರಂಭದಲ್ಲಿ ಸಾಂದರ್ಭಿಕವಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ ಕಲ್ಬುರ್ಗಿಯವರೂ ಸಹ ಅನಂತ ಮೂರ್ತಿಯವರ ಈ ಕೆಲಸವನ್ನು ಸಮರ್ಥಿಸಲಿಲ್ಲ ಎಂಬುದನ್ನು ಸಹ ಗಮನಿಸಬೇಕು.
ಆದರೆ ಕೆಲವು ಪತ್ರಿಕೆಗಳಲ್ಲಿ ಸಮಯ, ಸಂದರ್ಭದ ಯಾವ ಹಿನ್ನೆಲೆ ಮುನ್ನೆಲೆಯನ್ನು ಗಮನಕ್ಕೆ ತೆಗೆದುಕೊಳ್ಳದೇ, ಮಾತಿನ ಸರಿಯಾದ ಅರ್ಥವನ್ನು ಬಿಂಬಿಸದೇ, ಅನಂತಮೂರ್ತಿಯವರು ದೇವರ ಮೂರ್ತಿಯ ಮೇಲೆ ಮೂತ್ರ ಮಾಡಿದ್ದಾಗಿ ಬರೆದುಕೊಂಡಿದ್ದಾರೆ ಎಂಬಂತೆ ಮತ್ತು ಕಲ್ಬುರ್ಗಿಯವರು ಅದನ್ನು ಸಮರ್ಥಿಸಿ ಇಂಥ ಪ್ರಯೋಗ ನಡೆಸಲು ಕರೆ ನೀಡಿದ್ದಾರೆ ಎಂಬಂತೆ ಬಿಂಬಿಸಲಾಯಿತು. ಕಲ್ಬುರ್ಗಿಯವರಿಗೆ `ಹಿಂದೂ ವಿರೋಧಿ’ ಎಂಬ ಹಣೆಪಟ್ಟಿ ಹಚ್ಚಲಾಯಿತು.
ನಂತರ ನಡೆದ ದುರಂತ ಈಗ ಎಲ್ಲರಿಗೂ ತಿಳಿದದ್ದು. ಅನಂತ ಮೂರ್ತಿಯವರ ಬರಹ ವಿಚಾರವನ್ನು ನಾವು ಒಪ್ಪಬಹುದು ಅಥವಾ ಒಪ್ಪದೇ ಇರಬಹುದು. ಕಲ್ಬುರ್ಗಿಯವರ ಮಾತು, ವಿಚಾರಗಳನ್ನು ನಾವು ಒಪ್ಪಬಹುದು ಒಪ್ಪದಿರಬಹುದು. ಆದರೆ ಆ ಕಾರಣಕ್ಕಾಗಿ ಒಬ್ಬ ಘನ ವಿದ್ವಾಂಸನ ಕೊಲೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗದು. ಇದಕ್ಕೆ ಕಾರಣವಾದ ಮಾಧ್ಯಮಗಳ ಪಾತ್ರವನ್ನೂ ಮರೆಯಲಾಗದು.
ಕೊನೆಯಲ್ಲಿ ಒಂದು ವಿಷಯ ಗಮನಿಸಬೇಕು. ಕಲ್ಬುರ್ಗಿಯವರು ನಾಸ್ತಿಕರಾಗಿರಲಿಲ್ಲ. ಅವರು ಆಸ್ತಿಕರಾಗಿದ್ದರು. ದೇವರಲ್ಲಿ ನಂಬಿಕೆ ಇಟ್ಟವರಾಗಿದ್ದರು. ಮತಾಂಧತೆ, ವಿವೇಕ ಹೀನ ದ್ವೇಷ ಒಬ್ಬ ಅಪರೂಪದ ಸಂಶೋಧಕನ ಹತ್ಯೆಗೆ ಕಾರಣವಾಗಿದ್ದು ಮಾತ್ರ ದುರಂತ. ಇಂತಹ ದುರಂತಗಳು ಮತ್ತೆ ಸಂಭವಿಸದಂತಹ ಎಚ್ಚರಿಕೆಯನ್ನು ಎಲ್ಲರೂ ವಹಿಸಬೇಕು. ಭಿನ್ನಾಭಿಪ್ರಾಯಗಳಿದ್ದಲ್ಲಿ ಆರೋಗ್ಯಕರ ಟೀಕೆ-ಸಂವಾದಗಳ ಮೂಲಕ ಅದನ್ನು ಬಗೆಹರಿಸಿಕೊಳ್ಳಲು ಅವಕಾಶ ನೀಡುವ ಪ್ರಜಾಪ್ರಭುತ್ವ ಮೌಲ್ಯಗಳು ಉಳಿಯಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.
ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


