ಲೋಕಾರೂಢಿ
ಆರ್ಥಿಕ ಕುಸಿತ | ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ : ಡಾ. ಪುರುಷೋತ್ತಮ ಬಿಳಿಮಲೆ ಬರಹ ; ಮಿಸ್ ಮಾಡ್ದೆ ಓದಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/08/Economic-crisis-suddidina-64.jpg&description=ಆರ್ಥಿಕ ಕುಸಿತ | ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ : ಡಾ. ಪುರುಷೋತ್ತಮ ಬಿಳಿಮಲೆ ಬರಹ ; ಮಿಸ್ ಮಾಡ್ದೆ ಓದಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/08/Economic-crisis-suddidina-64.jpg&description=ಆರ್ಥಿಕ ಕುಸಿತ | ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ : ಡಾ. ಪುರುಷೋತ್ತಮ ಬಿಳಿಮಲೆ ಬರಹ ; ಮಿಸ್ ಮಾಡ್ದೆ ಓದಿ', 'pinterestShare', 'width=750,height=350'); return false;" title="Pin This Post">
ಫೇಸ್ ಬುಕ್ ನಲ್ಲಿರುವ ನನ್ನ ಅನೇಕ ಗೆಳೆಯರು ಆರ್ಥಿಕವಾಗಿ ದುರ್ಬಲರೆಂಬುದನ್ನು ನಾನು ಬಲ್ಲೆ. ಇಂಥ ಗೆಳೆಯರ/ಗೆಳತಿಯರ ಸಾಮಾಜಿಕ ಕಳಕಳಿ ಮಾತ್ರ ಅತ್ಯುನ್ನತ ಮಟ್ಟದ್ದು. ಮಾನವನ ಘನತೆಗೆ ಕುಂದು ತರುವ ಯಾವುದೇ ವಿಷಯಗಳ ಮೇಲೆ ಅವರೆಲ್ಲ ತುಂಬ ದಿಟ್ಟವಾಗಿ, ಎಷ್ಟೋಬಾರಿ ಮುಗ್ಧವಾಗಿ ಬರೆಯುತ್ತಿದ್ದಾರೆ. ಅಂಥ ಗೆಳೆಯರ ಬಗ್ಗೆ ಹೆಮ್ಮೆಪಡುತ್ತಾ ಈ ಕೆಳಗಿನ ಟಿಪ್ಪಣಿ-
ಮುಂದಿನ ಕನಿಷ್ಠ ಒಂದು ವರುಷಗಳ ಕಾಲ ಬಡ ಭಾರತೀಯರು ತುಂಬ ಕಷ್ಟಗಳನ್ನು ಇದಿರಿಸಬೇಕಾಗಿದೆ. ಮಧ್ಯಮ ವರ್ಗದವರು ಕೂಡಾ ಈ ಆರ್ಥಿಕ ಸಂಕಷ್ಟಗಳಿಗೆ ಬಲಿಯಾಗಬೇಕಾದ ಎಲ್ಲ ಲಕ್ಷಣಗಳಿವೆ. ಹಾಗಾಗಿ ನಾವು ಅನೇಕ ವಿಷಯಗಳಲ್ಲಿ ಮುಖ್ಯವಾಗಿ ನಮ್ಮ ಹಣಕಾಸಿನ ವಿಷಯಗಳಲ್ಲಿ ತುಂಬ ಎಚ್ಚರಿಕೆಯನ್ನು ವಹಿಸಬೇಕಾಗಿದೆ.
- ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಹದಗೆಟ್ಟಿದ್ದು, ಅದು ಸುಧಾರಿಸಿಕೊಳ್ಳಲು ಬಹಳ ಸಮಯ ಬೇಕು. ಕೇಂದ್ರ ಸರಕಾರಕ್ಕೆ ಈ ಕುರಿತು ಸರಿಯಾಗಿ ಮಾರ್ಗದರ್ಶನ ಮಾಡಬಲ್ಲ ಆರ್ಥಿಕ ತಜ್ಞರಾರೂ ಇದ್ದಂತಿಲ್ಲ. ಇದ್ದವರು ಬಿಟ್ಟು ಹೋಗಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಹಣ ಹರಿದು ಬರುತ್ತಿಲ್ಲ, ಸಾಲ ತೆಗೆದುಕೊಂಡವರು ಹಣ ಹಿಂದಿರುಗಿಸುತ್ತಿಲ್ಲ ( ಈ ಒತ್ತಡ ತಾಳಲಾರದೆ, ಬ್ಯಾಂಕುಗಳಲ್ಲಿ ಕೆಲಸ ಮಾಡುವ ಕೆಲವು ಅಧಿಕಾರಿಗಳು ಸ್ವಯಂ ನಿವೃತ್ತಿ ಪಡೆಯುತ್ತಿದ್ದಾರೆ). ಹೀಗಾಗಿ ಬ್ಯಾಂಕುಗಳನ್ನು ಹೆಚ್ಚು ನಾವು ನೆಚ್ಚಿಕೊಳ್ಳುವಂತಿಲ್ಲ.
- ಕಟ್ಟಿರುವ ಮನೆಗಳು ಮಾರಾಟವಾಗದೆ ಹಾಗೇ ಉಳಿಯುತ್ತಿವೆ ( ನೋಯ್ಡಾ, ಫರಿದಾಬಾದ್ ಮತ್ತು ಗುರುಗ್ರಾಮದಲ್ಲಿ ಪರಿಸ್ಥಿತಿ ವಿಷಮಿಸಿದೆ. ಅರ್ಧ ಕಟ್ಟಿ ಉಳಿದ ಮನೆಗಳನ್ನು ಸರಕಾರವೇ ಪೂರ್ಣಗೊಳಿಸಲು ಸುಪ್ರಿಂ ಕೋರ್ಟು ಆದೇಶ ನೀಡಿದೆ. (ಸರಕಾರ ಹೇಗೆ ಈ ಕೆಲಸವನ್ನು ಪೂರ್ಣಗೊಳಿಸುವುದೋ ಯಾರಿಗೂ ತಿಳಿಯದು)
- ಹೊಸ ಮನೆಗಳು/ಕಟ್ಟಡಗಳು ನಿರೀಕ್ಷಿತ ವೇಗದಲ್ಲಿ ಮೇಲೇಳದೇ ಇರುವುದರಿಂದ ಸ್ಟೀಲ್, ಸಿಮೆಂಟ್, ಮತ್ತಿತರ ಸಾಮಗ್ರಿಗಳಿಗೆ ಬೇಡಿಕೆ ಇಲ್ಲವಾಗಿದೆ.
- ಅಟೋಮೋಬಾಯಿಲ್ ಸೆಕ್ಟರ್ ಈಗಾಗಲೇ 350000 ಉದ್ಯೋಗಿಗಳನ್ನು ಕಳಕೊಂಡಿದೆ. ಮಾರುತಿ 16% ನಷ್ಟವನ್ನು ತೋರಿಸಿದೆಯಲ್ಲದೆ, ಶೇಕಡಾ 50 ಉತ್ಪಾದನೆಯನ್ನು ಕಡಿತಗೊಳಿಸಿದೆ. ಟಾಟಾ ಮೋಟಾರ್ಸ ನವರು ಪೂನಾ ಮತ್ತು ಜಮಶೆದ್ ಪುರ್ ನ ತನ್ನ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿದ್ದು, 8000 ಕೋಟಿ ರೂಪಾಯಿಗಳ ನಷ್ಟವನ್ನು ಡಿಕ್ಲೇರ್ ಮಾಡಿದೆ. ಮೊದಲ ಬಾರಿಗೆ ದ್ವಿಚಕ್ರ ವಾಹನಗಳ ಮಾರಾಟ ಕುಸಿದಿದೆ. ಪತಂಜಲಿ ಕೂಡಾ ತನ್ನ ಜಾಹೀರಾತುಗಳಿಗೆ ಕಡಿವಾಣ ಹಾಕಿದೆ. 2018ರಲ್ಲಿ ಅದು ತನ್ನ ಆದಾಯದಲ್ಲಿ 10% ಕಡಿತ ತೋರಿಸಿದೆ.
- ಖಾಸಗಿಯವರು ಉತ್ಪಾದನೆ ಸ್ಥಗಿತಗೊಳಿಸಿದಾಗ, ಸಹಜವಾಗಿ ಸರಕಾರದ ಆದಾಯ ಇನ್ನಷ್ಟು ಕಡಿಮೆಯಾಗುತ್ತದೆ. ಲಾರಿಗಳನ್ನು ಬಾಡಿಗೆಗೆ ಕೊಳ್ಳುವವರಲ್ಲಿ ಈಗಾಗಲೇ ಶೇಕಡಾ 15 ಕಡಿತವುಂಟಾಗಿ, ಲಾರಿ ಚಾಲಕರು ಉದ್ಯೋಗವಿಲ್ಲದೆ ಅಳುತ್ತಿದ್ದಾರೆ. ಓಡಾಡುವವರಿಲ್ಲದೆ ವಿಮಾನಗಳು ನಿರಂತರ ನಷ್ಟ ಅನುಭವಿಸುತ್ತಿದ್ದು ಪ್ರಯಾಣಿಕರಲ್ಲಿ 25% ಕಡಿತ ಉಂಟಾಗಿದೆ. ಈ ವಿತ್ತೀಯ ಕೊರತೆಯನ್ನು ತುಂಬಿಕೊಳ್ಳಲು ಸರಕಾರ ಇನ್ನಷ್ಟು ತೆರಿಗೆಗಳನ್ನು ನಮ್ಮ ಮೇಲೆ ಹೇರುತ್ತದೆ.
- ಜನರ ಕೊಳ್ಳುವ ಶಕ್ತಿಯು ಈಗಾಗಲೇ 20% ಕಡಿಮೆಯಾಗಿದೆ.
- ಕೆಲವು ಆಯ್ದ ಜಾಗಗಳನ್ನು ಹೊರತು ಪಡಿಸಿದರೆ, ಉಳಿದೆಡೆಗಳಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಭಾರತದ ಅರ್ಥವ್ಯವಸ್ಥೆಗೆ ಮಾರಕ ಹೊಡೆತ ನೀಡಿದ ಡಿಮೋನಿಟೈಸೇಶನ್ ನಿಂದಾಗಿ ಸಣ್ಣ ಉದ್ಯಮಿಗಳೆಲ್ಲಾ ಬೀದಿ ಪಾಲಾಗಿದ್ದಾರೆ. ಇದು ಪರೋಕ್ಷವಾಗಿ ದೊಡ್ಡ ಉದ್ಯಮಗಳ ಮೇಲೂ ಪರಿಣಾಮ ಬೀರಿದೆ.
- ಭಾರತ ಸರಕಾರವು 2020ರಲ್ಲಿ ಐದು ಟ್ರಿಲಿಯನ್ ಅರ್ಥವ್ಯಸ್ಥೆಯನ್ನು ಹೊಂದುವುದಾಗಿ ಘೋಷಿಸಿದೆ. ಇದು ಸಾಧ್ಯವಾಗಬೇಕಾದರೆ, ಭಾರತವು 14-15% ಅಭಿವೃದ್ಧಿಯನ್ನು ಸಾಧಿಸಬೇಕು. ಈಗ ಇರುವಂತೆ ಸರಕಾರ 7% ಅಭಿವೃದ್ಧಿಯನ್ನು ಘೋಷಿಸುತ್ತಿದ್ದರೂ ವಾಸ್ತವವಾಗಿ ಅದಿನ್ನೂ 4% ಆಗಿದೆ ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಿದ್ದಾರೆ. ಹೀಗಾಗಿ 14-15 % ಅಭಿವೃದ್ಧಿ ಮರೀಚಿಕೆಯೇ ಸರಿ.
- ಅಂಕಿ ಅಂಶಗಳನ್ನು ಬೇಕಾದಂತೆ ತಿದ್ದುವ ಪರಿಪಾಠ ಬೆಳೆಯುತ್ತಿದ್ದು, ಸರಕಾರ ಹೇಳಿದ್ದನ್ನು ಯಾರೂ ನಂಬುತ್ತಿಲ್ಲವಾದ್ದರಿಂದ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ವ್ಯತ್ಯಯ ಕಾಣಲಾರಂಭಿಸಿದೆ.
- ಮಳೆ ಇಲ್ಲದೆ/ ಹೆಚ್ಚು ಮಳೆಬಂದು, ರೈತರು ಆತ್ಮಹತ್ಯೆ ಮಾಡಿಕೊಳ್ಳಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
- ಈ ಆರ್ಥಿಕ ಕುಸಿತದ ಸಮಸ್ಯೆಯು ಭಾರತಕ್ಕೆ ಮಾತ್ರ ಸೀಮಿತವಾಗಿರದೆ, ಜಾಗತಿಕವಾಗಿದೆ. ಆಳುವವರು ಈ ಆರ್ಥಿಕ ವಿಫಲತೆಯನ್ನು ಜನರೆದುರು ತೆರೆದಿಡದೆ, ಅದನ್ನು ಮುಚ್ಚಿ ಹಾಕಲು ಬಗೆ ಬಗೆಯ ತಂತ್ರಗಳನ್ನು ಹೆಣೆಯುತ್ತಿರುವುದನ್ನು ನಾವು ದಿನನಿತ್ಯ ಕಾಣುತ್ತಿದ್ದೇವೆ. ಹಿಂದೂ’ಗಳೆಲ್ಲರೂ ಒಂದಾದ ಆನಂತರವೂ ಮೇಲೆ ಹೇಳಿದ ಭಾರತದ ಸಮಸ್ಯೆಗಳು ಹಾಗೆಯೇ ಉಳಿಯುತ್ತವೆ
ಹೀಗಾಗಿ ಕನಿಷ್ಠ ಮುಂದಿನ ಒಂದು ವರ್ಷಗಳವರೆಗೆ ದಯವಿಟ್ಟು ತಮ್ಮ ಹಣ ಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿರಿ. ಶ್ರೀಮಂತರು ಸಹಾಯ ಮಾಡುವುದಿಲ್ಲ. ಮಾಡದಿರುವುದರಿಂದಲೇ ಅವರು ಶ್ರೀಮಂತರಾದದ್ದು. ಕಷ್ಟಕಾಲದಲ್ಲಿ ನೆರವಿಗೆ ಬರುವವರೂ ಕಡಿಮೆ, ಮತ್ತು ಅವರೂ ಕಷ್ಟದಲ್ಲಿರುತ್ತಾರೆ ಎಂಬುದನ್ನು ಮರೆಯದಿರೋಣ.
–ಡಾ.ಪುರುಷೋತ್ತಮ ಬಿಳಿಮಲೆ
ಮುಖ್ಯಸ್ಥರು
ಜೆ.ಎನ್.ಯು ಕನ್ನಡ ಅಧ್ಯಯನ ಪೀಠ
ನವದೆಹಲಿ
- ಕೃಪೆ : ಫೇಸ್ ಬುಕ್ ಪೋಸ್ಟ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಿದ್ಧಾಂತ ಮತ್ತು ಪತ್ರಿಕೋದ್ಯಮ
- ಹರ್ಷಕುಮಾರ್ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್
ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು. ಅವರು ಪತ್ರಿಕೋದ್ಯಮದ ನ್ಯೂಟ್ರಾಲಿಟಿ ಕುರಿತು ಮಾತಾಡುತ್ತಾ, ʼನಾವು ಪತ್ರಕರ್ತರು ನಿಮ್ಮ ರೀತಿ ಯೋಚನೆ ಮಾಡೋದಕ್ಕೆ ಆಗಲ್ಲ. ನಾವು ಯಾವತ್ತೂ ಯಾವುದೇ ಸಿದ್ಧಾಂತಕ್ಕೆ ವಾಲಿಕೊಳ್ಳದೇ ತಟಸ್ಥತೆ ಕಾಪಾಡಬೇಕಾಗುತ್ತದೆʼ ಎಂದು ಹೇಳಿದರು. ʼಅವರ ಜೊತೆ ನಾನು ವಾದಿಸಿದೆ.
ಸರ್, ಸುಳ್ಳನ್ನೇ ಬಂಡವಾಳ ಮಾಡಿಕೊಂಡ ಸಿದ್ಧಾಂತಗಳು ರಾರಾಜಿಸುವಾಗ ಸತ್ಯವನ್ನು ಹುಡುಕಲು ಸಹ ಸಿದ್ಧಾಂತದ ಸಹಾಯ ಬೇಕಾಗುತ್ತದೆ. ಯಾವ ವ್ಯಕ್ತಿಯೂ ಸಿದ್ಧಾಂತದ ಹೊರಗಾಗಿ ಇರಲು ಸಾಧ್ಯವಿಲ್ಲ. ನನಗೆ ಸಿದ್ದಾಂತವೇ ಇಲ್ಲ ಎನ್ನುವ ವ್ಯಕ್ತಿಯನ್ನು ಕೂಡಾ ಅವನಿಗೆ ತಿಳಿದೋ ತಿಳಿಯದೆಯೋ ಒಂದಲ್ಲಾ ಒಂದು ಸಿದ್ದಾಂತ ಇಲ್ಲವೇ ಹಲವು ಸಿದ್ಧಾಂತಗಳು ನಿರ್ದೇಶಿಸುತ್ತಿರುತ್ತವಲ್ಲ.. ʼ ಎಂದ ನನ್ನ ಮಾತಿಗೆ ನಮಗೆ ಪತ್ರಕರ್ತರಿಗೆ ಹಾಗೆ ಯೋಚಿಸಲು ಬರುವುದಿಲ್ಲ. ನೀವು ಎಡ ಪಂಥ ಅಂತೀರಿ, ಅವರು ಬಲಪಂಥ ಅಂತಾರೆ, ನಾವು ಇವೆರಡರ ನಡುವೆ ಸತ್ಯ ಹುಡುಕ್ತೀವಿʼ ಎಂದೆಲ್ಲಾ ಹೇಳಿದರು. ಕೊನೆಗೆ ಯಾರೂ ರಾಜಿಯಾಗಲಿಲ್ಲ.
ಇದಾಗಿ ಹದಿನೈದು ವರ್ಷಗಳ ನಂತರ, 2019ರಲ್ಲಿ ಅದೇ ಪತ್ರಕರ್ತ ಸ್ನೇಹಿತರು ನಮ್ಮ ಜೊತೆ ಕೆಲಸ ಮಾಡುತ್ತಿದ್ದರು. ಅವರು ನರೇಂದ್ರ ಮೋದಿ ಸರ್ಕಾರದ ಆರ್ಥಿಕ ವಂಚನೆಗಳನ್ನು ಅದ್ಭುತ ರೀತಿಯಲ್ಲಿ ಅಂಕಿಅಂಶಗಳ ಸಮೇತ ಬಯಲು ಮಾಡುತ್ತಿದ್ದುದು ಕಂಡು ನನಗೆ ಅಚ್ಚರಿ ಮತ್ತು ಸಂತೋಷವಾಗಿತ್ತು. ಅಂದು ಅವರು ನಿಜಕ್ಕೂ ಸತ್ಯದ ಪರವಾಗಿದ್ದರು. ಆದರೆ ಅವರ ಬರೆಹಗಳನ್ನು ಯಾರಾದರೂ ಬಲಪಂಥೀಯರು ಓದಿದರೆ ಅವರಿಗೆ ಖಂಡಿತಾ ಇವರು ʼಎಡಪಂಥೀಯ ಸಿದ್ಧಾಂತಿʼ, ʼನಗರ ನಕ್ಸಲ್ʼ ಎಂದೆಲ್ಲಾ ಸುಲಭವಾಗಿ ಹಣೆಪಟ್ಟಿ ಕಟ್ಟಬಹುದಿತ್ತು. ಆದರೆ ಆ ಪತ್ರಕರ್ತ ಸ್ನೇಹಿತರು ನಿಜಕ್ಕೂ ಈ ದೇಶದ ಭವಿಷ್ಯದ ಬಗ್ಗೆ ತುಂಬಾ ಆತಂಕಗೊಂಡು, ಕಾಳಜಿಯಿಂದ ಕೆಲಸ ಮಾಡುತ್ತಿದ್ದರು. ಕೊನೆಗೆ ಅವರಿಗೂ ಸಹ ಅವರು ಹಿಂದೆ ಹೇಳಿದ್ದ ರೀತಿಯಲ್ಲಿ ತಟಸ್ಥವಾಗಿ ಪತ್ರಿಕೋದ್ಯಮ ನಡೆಸುವುದು ಸಾಧ್ಯವಿಲ್ಲ ಎಂಬ ಅರಿವಾಗಿರಬಹುದು ಎಂದುಕೊಂಡೆ. ಹೌದು ಪತ್ರಕತ್ರರಾದವರು ಮಾಡಲು ಇರುವ ಬಹಳ ಕೆಲಸಗಳ ನಡುವೆಯೂ ಅವರು ಅದ್ಯತೆಯನ್ನು ಗುರುತಿಸಿಕೊಂಡಿದ್ದರು.
ಪತ್ರಿಕೋದ್ಯಮದ ಬಗ್ಗೆ ಮಾತಾಡುವಾಗ ನಾವು ಒಂದು ಪ್ರಾಥಮಿಕ ಸಂಗತಿಯನ್ನು ತಿಳಿದುಕೊಳ್ಳಬೇಕು. ನಮ್ಮ ದೇಶದಲ್ಲಿ ಪತ್ರಿಕೋದ್ಯಮ ಆರಂಭವಾದ ಸಂದರ್ಭದಲ್ಲಿ ಯಾವೆಲ್ಲಾ ಭಾರತೀಯರು ಪತ್ರಿಕೆಗಳನ್ನು ಹೊರತರುತ್ತಿದ್ದರೋ ಅವರೆಲ್ಲರೂ ಕಟು ಸಿದ್ಧಾಂತಿಗಳಾಗಿದ್ದರು. ಸಾಮ್ರಾಜ್ಯವಾದದ ವಿರುದ್ಧದ ಸಿದ್ದಾಂತ ಅವರೆಲ್ಲರನ್ನು ಮುನ್ನಡೆಸುತ್ತಿತ್ತು. ಬಹುತೇಕ ಅವರೆಲ್ಲರೂ ಸ್ವಾತಂತ್ರ್ಯ ಹೋರಾಟಗಾರರು ಇಲ್ಲವೇ ಸ್ವಾಭಿಮಾನ ಚಳವಳಿಯ ಹೋರಾಟಗಾರರು, ನಾಯಕರು ಆಗಿದ್ದರು. ಅಂತಹ ಸ್ಪಷ್ಟ ಸೈದ್ಧಾಂತಿಕ ಬುನಾದಿಯಿಟ್ಟುಕೊಂಡು ಅವರೆಲ್ಲಾ ಬ್ರಿಟಿಷರ ವಿರುದ್ಧ ಪತ್ರಿಕೋದ್ಯಮ ನಡೆಸದಿದ್ದರೆ ಈ ದೇಶದ ಪತ್ರಿಕೋದ್ಯಮದ ಇತಿಹಾಸ ಅತ್ಯಂತ ಟೊಳ್ಳಾದ, ಬೂಸಾ ಇತಿಹಾಸವಾಗುತ್ತಿತ್ತು.
ಕೆಲ ಬ್ರಿಟಿಷ್ ಪತ್ರಕರ್ತರು ಹೇಗೆ ಬ್ರಿಟಿಷ್ ಅಧಿಕಾರಿಗಳ ಬೆಡ್ ರೂಮ್ ಸ್ಟೋರಿಗಳನ್ನು ಚಪ್ಪರಿಸಿಕೊಂಡು ಅದನ್ನೇ ಪತ್ರಿಕೋದ್ಯಮ ಎಂದು ಬೀಗುತ್ತಿದ್ದರೋ ಅಷ್ಟರಲ್ಲೇ ಭಾರತೀಯ ಪತ್ರಿಕೋದ್ಯಮ ಉಳಿದುಬಿಡುತ್ತಿತ್ತು. ಆದರೆ ಹೀಗೆ ಆಗಲು ಬಿಡದೇ ಉದಾತ್ತ ಧ್ಯೇಯಗಳ ಮೂಲಕ ದೇಶದ ಪತ್ರಿಕೋದ್ಯಮ ಬೆಳೆಸಿದ 19ನೆಯ ಶತಮಾನದ ಅಂತಹ ಧೀಮಂತ ಪತ್ರಕರ್ತರು ಹಲವರು. ಸುರೇಂದ್ರ ನಾಥ್ ಬ್ಯಾನರ್ಜಿ (ಬೆಂಗಾಲಿ ಪತ್ರಿಕೆ- 1879) ಪತ್ರಕರ್ತರಾಗಿ ಕೆಲಸ ಮಾಡುತ್ತಲೇ ಸತ್ಯ ಹೇಳಿದ ಕಾರಣಕ್ಕೆ ಬ್ರಿಟಿಷ್ ಸರ್ಕಾರ ಅವರನ್ನು ವರ್ನಾಕ್ಯುಲರ್ ಪ್ರೆಸ್ ಕಾಯ್ದೆಯ ಅಡಿ ಜೈಲಿಗಟ್ಟಿತ್ತು. ಸಂವಾದ ಕೌಮುದಿ ಎಂಬ ಪತ್ರಿಕೆ ನಡೆಸುತ್ತಿದ್ದ ರಾಜಾರಾಮ ಮೋಹನ್ ರಾಯ್ ಒಬ್ಬ ಸ್ಪಷ್ಟ ವಿಚಾರವಾದಿಯಾಗಿದ್ದರು.
ಅವರು ಈ ದೇಶದ ಅನಿಷ್ಟಗಳ ಕುರಿತೇ ತಮ್ಮ ಪತ್ರಿಕೆಯಲ್ಲಿ ಬರೆಯುತ್ತಾ ಹೋದರು. ಇದೇ ಕೆಲಸವನ್ನು ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ ಆರಂಭಿಸಿದ ಜಂಬೇಕರ್ ಮಾಡಿದರು, ಅವರು ತಮ್ಮ ದರ್ಪಣ್ ಪತ್ರಿಕೆಯ ಮೂಲಕ ಸಾಮಾಜಿಕ ಅನಿಷ್ಟಗಳು ಕುರಿತು ಜಾಗೃತಿ ಮೂಡಿಸಿದರು- ಇವರನ್ನು ಮರಾಠಿ ಪತ್ರಿಕೋದ್ಯಮದ ಪಿತಾಮಹ ಎಂದು ಕರೆಯಲಾಗುತ್ತದೆ. ಬಂಗಾಳದಲ್ಲಿ ಹರೀಶ್ಚಂದ್ರ ರಾಯ್ ಎಂಬುವವರು ಬಂಗದರ್ಶನ್ ಎಂಬ ಪತ್ರಿಕೆ ತಂದರು; ಗುಜರಾತಿಯಲ್ಲಿ ʼಬಾಂಬೆ ಸಮಾಚಾರ್ʼ ಪತ್ರಿಕೆ ಆರಂಭಿಸಿದ ಫರ್ದುನ್ಜಿ ಮರ್ಜ್ ಬಾನ್ ಎಂಬುವವರು ಸಹ ಪತ್ರಿಕೆಯ ಮೂಲಕ ಸಮಾಜ ಸುಧಾರಣೆಗೆ ಒತ್ತು ಕೊಟ್ಟರು. ಇನ್ನು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಬಾಲಗಂಗಾಧರ ತಿಲಕ್ ಕೇಸರಿ ಮತ್ತು ಮರಾಟಾ ಪತ್ರಿಕೆ ಹೊರಡಿಸುತ್ತಿದ್ದರು, ಗಾಂದೀಜಿಯವರು ಆಫ್ರಿಕಾದಲ್ಲಿದ್ದಾಗಲೇ ಇಂಡಿಯನ್ ಒಪಿನಿಯನ್ ಪತ್ರಿಕೆ ನಡೆಸುತ್ತಿದ್ದರೆ, ಭಾರತಕ್ಕೆ ಬಂದ ಮೇಲೆ ಯಂಗ್ ಇಂಡಿಯಾ ಮತ್ತು ಹರಿಜನ್ ಎಂಬ ಪತ್ರಿಕೆಗಳನ್ನು ಹೊರತಂದರು,
ಸುಭಾಷ್ ಚಂದ್ರ ಬೋಸ್ ಅವರು ಸ್ವರಾಜ್ ಪತ್ರಿಕೆಯ ಸಂಪಾದಕರಾಗಿದ್ದರು, ಲಾಲಾ ಲಜಪತ್ ರಾಯ್ ಅವರು ದ ಟ್ರಿಬ್ಯೂನ್ ಎಂಬ ಇಂಗ್ಲಿಷ್ ಪತ್ರಿಕೆ ತಂದರು, ಜೊತೆಗೆ ವಂದೆ ಮಾತರಂ ಎಂಬ ಉರ್ದು ಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು- ಇವುಗಳ ಮೂಲಕ ಸ್ವದೇಶಿ ಚಿಂತನೆಯನ್ನು ಅಥವಾ ಸಿದ್ಧಾಂತವನ್ನು ಪ್ರಚುರಪಡಿಸಿದರು, ಹೋಂರೂಲ್ ಚಳವಳಿಯ ಮುಂದಾಳು ಅನಿಬೆಸೆಂಟ್ ಅವರು ನ್ಯೂ ಇಂಡಿಯಾ ಪತ್ರಿಕೆ ತಂದರು, ಇನ್ನು ಮದನ್ ಮೋಹನ್ ಮಾಳವೀಯ ಅವರು ಮೋತಿಲಾಲ್ ನೆಹರೂ ಜೊತೆ ಸೇರಿಕೊಂಡು ದ ಲೀಡರ್ ಎಂಬ ಪತ್ರಿಕೆ ತಂದರೆ, ನಂತರ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯನ್ನೂ ಪುನರುಜ್ಜೀವಗೊಳಿಸಿದರು. ಇನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ʼಅಸ್ಪೃಶ್ಯರಿಗೆ ಈ ದೇಶದಲ್ಲಿ ಪತ್ರಿಕೆಯಿಲ್ಲʼ ಎಂದು ಘೋಷಿಸಿ ಮೊದಲಿಗೆ ಶಾಹು ಮಹಾರಾಜರ ಬೆಂಬಲದಿಂದ ಮೂಕನಾಯಕ ಪತ್ರಿಕೆ (1920) ತಂದರು; ನಂತರ ಬಹಿಷ್ಕೃತ ಭಾರತ (1927), ನಂತರ ಸಮತಾ (1928), ನಂತರ ಜನತಾ (1930) ಹಾಗೂ ಪ್ರಬುದ್ಧ ಭಾರತ (1956) ಪತ್ರಿಕೆಗಳನ್ನು ಹೊರಡಿಸಿ ನಿರಂತರವಾಗಿ ಅವುಗಳಲ್ಲಿ ಬರೆಯುತ್ತಾ ತಾವೊಬ್ಬ ಧೀಮಂತ ಪತ್ರಕರ್ತ ಎಂಬುದನ್ನೂ ನಿರೂಪಿಸಿದ್ದರು.
ಇವರನ್ನೆಲ್ಲಾ ಹೊರಗಿಟ್ಟು ಕೇವಲ ಬ್ರಿಟಿಷರು ತಂದ ಬೆಂಗಾಲ್ ಗೆಜೆಟ್ ನಂತವುಗಳನ್ನು ಮಾತ್ರವೇ ಭಾರತದ ಪತ್ರಿಕೋದ್ಯಮದ ಇತಿಹಾಸ ಎಂದು ಹೇಳಲು ಬರುತ್ತದೆಯೇ? ಈ ದೇಶದ ಪತ್ರಿಕೋದ್ಯಮದ ಇತಿಹಾಸದ ಸೈದ್ಧಾಂತಿಕ ಅಡಿಪಾಯ ಅತ್ಯಂತ ಭದ್ರವಾಗಿತ್ತು ಎಂಬುದಕ್ಕೆ ಇವೆಲ್ಲಾ ಸಾಕ್ಷಿಯಲ್ಲವೆ? ಅಲ್ಲಿ ಎಡಬಿಡಂಗಿತನಕ್ಕೆ, ಸೊ ಕಾಲ್ಡ್ ತಟಸ್ಥತೆಗೆ ಯಾವುದೇ ಅವಕಾಶವಿರಲಿಲ್ಲ. ಈ ದೇಶವನ್ನು ಕಾಡುತ್ತಿದ್ದ ಸಾಮ್ರಾಜ್ಯಶಾಹಿ ಮತ್ತು ಬ್ರಾಹ್ಮಣಶಾಹಿ ಶಕ್ತಿಗಳನ್ನು ನೇರವಾಗಿ ಎದುರಿಸಿಯೇ ಭಾರತದ ಪತ್ರಿಕೋದ್ಯಮ ನಡೆದುಕೊಂಡುಬಂದಿದೆ ಎಂಬುದಕ್ಕೆ ಮೇಲಿನ ಉದಾಹರಣೆಗಳೇ ಸಾಕ್ಷಿ.
ಸ್ವಾತಂತ್ರ್ಯಾನಂತರದಲ್ಲಿ, ನಮ್ಮ ಕರ್ನಾಟಕದಲ್ಲೇ ನಾವು ಯಾರನ್ನೆಲ್ಲಾ ಇಂದು ಧೀಮಂತ ಪತ್ರಕರ್ತರೆಂದು ಪರಿಗಣಿಸಿದ್ದೇವೆಯೋ, ಯಾರನ್ನೆಲ್ಲಾ ಆದರ್ಶ ಎಂದು ನೋಡುತ್ತೇವೆಯೋ ಅವರೆಲ್ಲರೂ ಅತ್ಯಂತ ಸ್ಪಷ್ಟ ಮತ್ತು ದೃಢವಾದ ಸಿದ್ಧಾಂತಿಗಳೇ ಆಗಿದ್ದರು ಎಂಬುದನ್ನು ಮರೆಯಬಾರದು. ಕರ್ನಾಟಕದ ಪತ್ರಿಕೋದ್ಯಮಕ್ಕೇ ಹೊಸ ಮೆರಗು ತಂದು ಸಂಚಲನ ಮೂಡಿಸಿದ ಪಿ. ಲಂಕೇಶ್ ಅವರು ಕಡಿಮೆ ಸಿದ್ಧಾಂತಿಯೇ? ಸ್ಪಷ್ಟ ಸೈದ್ಧಾಂತಿಕ ತಳಹದಿಯ ಪತ್ರಿಕೋದ್ಯಮವೇ ಅವರ ಆಕ್ಟಿವಿಸಂ ಆಗಿತ್ತು ಮಾತ್ರವಲ್ಲ ಪತ್ರಿಕೋದ್ಯಮದ ಮೂಲಕ ಸಾಮಾಜಿಕ ರಾಜಕೀಯ ಬದಲಾವಣೆಯನ್ನೂ ಮಾಡಲು ಸಾಧ್ಯ ಎಂದು ಪಿ ಲಂಕೇಶ್ ಒಂದು ಮಾದರಿಯನ್ನೇ ಸೃಷ್ಟಿಸಿದರು. ಅದು ಸಾಧ್ಯವಾಗಿದ್ದೇ ಅವರ ಕಟಿಬದ್ಧ ಸೈದ್ಧಾಂತಿಕ ನಿಲುವಿನಿಂದ.
ನಾಡು ಕಂಡ ಮತ್ತೊಬ್ಬ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿ ಕೂಡಾ ಗಟ್ಟಿ ತಾತ್ವಿಕ ನಿಲುವುಗಳ ಮೂಲಕ ನಾಡಿನ ಜನರನ್ನು ತಲುಪಿದರು. ಇನ್ನು 70-80ರ ದಶಕಗಳಲ್ಲಿ ಭಾರತೀಯ ಪತ್ರಿಕೋದ್ಯಮದ ಧೀಮಂತ ಪರಂಪರೆಯಲ್ಲಿ ಸಾಗಿದ ಹಲವಾರು ಕನ್ನಡ ಪತ್ರಿಕೆಗಳಿದ್ದವು- ಸುದ್ದಿ ಸಂಗಾತಿ, ಶೂದ್ರ, ಪಂಚಮ, ಸಮುದಾಯ, ಸಂಕ್ರಮಣ ಮುಂತಾದ ನಿಯತಕಾಲಿಕೆಗಳು ಕನ್ನಡಿಗರ ಅರಿವಿನ ವಿಸ್ತರಣೆಯಲ್ಲಿ ಕಡಿಮೆ ಕೆಲಸ ಮಾಡಿವೆಯೇ? ಹಾಗಾದರೆ ಇವೆಲ್ಲವೂ ಖಚಿತ ಸೈದ್ದಾಂತಿಕತೆಯಿಂದಲೇ ನಡೆಯಲಿಲ್ಲವೇ?
ಇನ್ನು ಕಳೆದ ಕೆಲವು ದಶಕಗಳಲ್ಲಿ, ಅಗ್ನಿ, ಹಾಯ್ ಬೆಂಗಳೂರು, ಗೌರಿ ಲಂಕೇಶ್ ವಾರಪತ್ರಿಗಳೂ ತಮ್ಮ ಛಾಪು ಮೂಡಿಸಿದವು. ಪಿ ಲಂಕೇಶರ ಸ್ಪೂರ್ತಿಯಲ್ಲೇ ದೊಡ್ಡ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ಅನಾವರಣಗೊಳಿಸಿದವು. ಇದ್ದುದರಲ್ಲಿ ರವಿ ಬೆಳಗರೆ ಎಡಬಿಡಂಗಿಯಾಗಿ ಕ್ರೈಂ, ಸೆಕ್ಸ್ ಗಳನ್ನ ಅಸ್ತ್ರವಾಗಿಸಿಕೊಂಡು ಟ್ಯಾಬ್ಲಾಯ್ಡ್ ಪತ್ರಿಕೋದ್ಯಮವನ್ನು ಹಳ್ಳ ಹಿಡಿಸಿದರೂ ಹಾಯ್ ಬೆಂಗಳೂರು ಸಹ ಅನೇಕ ಬ್ರಷ್ಟಾಚಾರ ಹಗರಣಗಳನ್ನು ಬಯಲು ಮಾಡಿದ್ದು ಸತ್ಯ.
ಯಾವನ್ನು ನಾವು ದಿನಪತ್ರಿಕೆಗಳು ಅಥವಾ ವೃತ್ತ ಪತ್ರಿಕೆಗಳು ಎನ್ನುತ್ತೇವೆಯೋ ಇವುಗಳ ಆದ್ಯತೆ ದಿನನಿತ್ಯದ ಸುದ್ದಿಗಳನ್ನು ಜನರಿಗೆ ತಲುಪುವುದು ಮಾತ್ರವಾಗಿದ್ದ ಕಾರಣ ಬಹಳ ಪತ್ರಿಕೆಗಳಲ್ಲಿ ಸೈದ್ಧಾಂತಿಕತೆ ದೊಡ್ಡ ವಿಷಯವಾಗಲಿಲ್ಲ. ಆದರೆ ಅಂತಹ ಕಡೆಗಳಲ್ಲಿ ಸಹ ದೊಡ್ಡ ದೊಡ್ಡ ಸಿದ್ಧಾಂತಿಗಳು ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದ್ದರು ಮತ್ತು ತಮ್ಮ ಖಚಿತ ಅಭಿಪ್ರಾಯಗಳನ್ನು ಆ ವೇದಿಕೆಗಳ ಮೂಲಕ ಜನರಿಗೆ ತಲುಪಿಸುತ್ತಾ ಬಂದಿದ್ದರೆಂಬುದನ್ನು ನಾವು ಮರೆಯಕೂಡದು.
ಈಗ ಹೇಳಿ, ನಮ್ಮ ಪತ್ರಿಕೋದ್ಯಮಕ್ಕೆ ಸಿದ್ಧಾಂತ ಬೇಡವೆ, ಪತ್ರಕರ್ತರಾಗಿರುವವರು ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬಾರದೆ? ಆಕ್ಟಿವಿಸ್ಟುಗಳು ಪತ್ರಕರ್ತರಾಗುವುದು ಅಪರಾಧವೆ? ಪತ್ರಿಕೋದ್ಯಮ ಆಕ್ಟಿವಿಸಂಗೆ ಪೂರಕವಾಗಿರಬಾರದೆ? ಇಂದು ಬ್ರಾಹ್ಮಣ್ಯದ ದಿಗ್ವಿಜಯ ಮತ್ತೊಮ್ಮೆ ನಿಜವಾಗುವ ಕರಾಳ ಛಾಯೆ ಇಡೀ ದೇಶವನ್ನು ಆವರಿಸಿಕೊಂಡಿರುವಾಗ, ಬಾಬಾಸಾಹೇಬರು ಎಚ್ಚರಿಸಿದ್ದ ಆ ʼಪ್ರತಿಕ್ರಾಂತಿʼ ತನ್ನ ಕಬಂಧಬಾಹುಗಳನ್ನು ಚಾಚಿಕೊಂಡ ಎಲ್ಲವನ್ನೂ ನೊಣೆಯುತ್ತಿರುವಾಗ, ಅಪರಾಧವೇ ಅಧಿಕಾರವಾಗಿ ದೇಶದ ಪ್ರಮುಖ ಸಂಸ್ಥೆಗಳೆಲ್ಲವನ್ನೂ ನುಂಗಿ ನೀರುಕುಡಿದು ತಮ್ಮ ಅಂಕೆಯಲ್ಲಿ ತಂದುಕೊಂಡು ಇಡೀ ದೇಶದ ಜನರಿಗೆ ಕರಾಳತೆ ದರ್ಶನ ಮಾಡುತ್ತಾ ಭ್ರಷ್ಟಾಚಾರದ ವ್ಯಾಖ್ಯಾನವನ್ನೇ ತಿರುಗುಮರುಗು ಮಾಡುತ್ತಿರುವಾಗ ಸೊ ಕಾಲ್ಡ್ ತಟಸ್ಥತೆಯ ಬದನೇಕಾಯಿಯನ್ನು ನೆಚ್ಚಿಕೊಳ್ಳದೇ ನಿರ್ಧಾರಿತ ಜನಾಂದೋಲನಗಳಿಗೆ ಪೂರಕವಾಗಿ ಪತ್ರಿಕೋದ್ಯಮ ಮತ್ತು ಪತ್ರಕರ್ತರಾದವರು ಜೊತೆಗೂಡುವುದು ಬೇಡವೇ?
‘ಬೇಡ’ ಎಂಬ ಅಭಿಪ್ರಾಯ ನಿಮ್ಮದಾಗಿದ್ದರೆ ನಿಮ್ಮ ಬಳಿ ಹೇಳಲು ನನಗೆ ಏನೂ ಉಳಿದಿಲ್ಲ. ನೀವು ನಿಮ್ಮದೇ ಸುಖಾಸನದಲ್ಲಿ ನೆಮ್ಮದಿಯಾಗಿ ಪವಡಿಸಬಹುದು, ನನಗೇನೂ ಅಭ್ಯಂತರವಿಲ್ಲ. (ಬರಹ- ಹರ್ಷಕುಮಾರ್ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಬಹಿರಂಗ
‘ಝೀ ವಾಹಿನಿ’ಯಲ್ಲಿ ಅಂತರ್ ಕಲಹ ಮತ್ತೊಂದು ಕೂಗುಮಾರಿ ವಾಹಿನಿಗೆ ಹಾದಿ..!
ವಿದ್ಯುನ್ಮಾನ ಸುದ್ಧಿಮಾಧ್ಯಮಗಳಿಗೆ ಕಾರ್ಪೋರೇಟ್ ಮಾರುಕಟ್ಟೆಯೇ ಸರ್ವಸ್ವ
- ನಾ ದಿವಾಕರ
ಕಳೆದ ಎರಡು ದಶಕಗಳಲ್ಲಿ ಕಾರ್ಪೋರೇಟ್ ಸ್ನೇಹಿ ಬಂಡವಾಳ ವ್ಯವಸ್ಥೆಯ ಒಂದು ಭಾಗವಾಗಿಯೇ ತನ್ನ ಅಸ್ತಿತ್ವವನ್ನು ಕಂಡುಕೊಂಡಿರುವ ಭಾರತದ ಮಾಧ್ಯಮ ಜಗತ್ತಿನಲ್ಲಿ ಯಾವುದೇ ವ್ಯತ್ಯಯ ಸಂಭವಿಸಿದರೂ ಅದರ ಹಿಂದೆ ಮಾರುಕಟ್ಟೆಯ ಕಾರಣಗಳಿರುವಂತೆಯೇ ರಾಜಕೀಯ ಕಾರಣಗಳೂ ಇರುತ್ತವೆ.
ಒಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾವಲುಕಾಯುವಂತಿರಬೇಕಾದ ಮಾಧ್ಯಮಗಳು ಆಳುವ ವರ್ಗಗಳ ವಂದಿಮಾಗಧರಾಗಿರುವುದೇ ಅಲ್ಲದೆ ವ್ಯವಸ್ಥೆಯ ಒಂದು ಭಾಗವೇ ಆಗಿಹೋಗಿರುವುದರಿಂದ, ಮಾಧ್ಯಮ ಲೋಕದಲ್ಲಿ ನಡೆಯುವ ಯಾವುದೇ ಬದಲಾವಣೆಗಳನ್ನು ಸೂಕ್ಷ್ಮವಾಗಿಯೇ ಗಮನಿಸಬೇಕಾಗುತ್ತದೆ. ಕಳೆದ ಎಂಟು ವರ್ಷಗಳಲ್ಲಿ ತಮ್ಮ ಸ್ವಾಯತ್ತತೆ, ಸ್ವಂತಿಕೆ ಮತ್ತು ಸ್ವಾತಂತ್ರ್ಯವನ್ನು ಸ್ವತಃ ತಾವೇ ಕಳೆದುಕೊಂಡು, ಮಾರುಕಟ್ಟೆಯ ಬಂಡವಾಳ ಮತ್ತು ಆಳುವ ವ್ಯವಸ್ಥೆಯ ಬೇಕುಬೇಡಗಳನ್ನು ಅವಲಂಬಿಸಿರುವ ಭಾರತದ ಮಾಧ್ಯಮ ಲೋಕ, ವಿಶೇಷವಾಗಿ ವಿದ್ಯುನ್ಮಾನ ಸುದ್ದಿಮನೆಗಳ ಲೋಕ ಈ ಜಟಿಲತೆಯ ನಡುವೆಯೇ ತನ್ನ ಅಸ್ತಿತ್ವವನ್ನು ಕಾಪಾಡಿಕೊಳ್ಳಬೇಕಿದೆ.
ಕೇವಲ ಒಂದೆರಡು ದಶಕಗಳ ಹಿಂದೆ ಸಾರ್ವಜನಿಕರ ದೃಷ್ಟಿಯಲ್ಲಿ ವ್ಯವಸ್ಥೆಯ ಓರೆಕೋರೆಗಳನ್ನು ಎತ್ತಿತೋರುವ ಮತ್ತು ನೊಂದ ಜನತೆಯನ್ನು ಕೊಂಚಮಟ್ಟಿಗಾದರೂ ಪ್ರತಿನಿಧಿಸುವ ವಾಹಿನಿಗಳಾಗಿದ್ದ ಮಾಧ್ಯಮ ಇಂದು ಬಹುತೇಕವಾಗಿ, ವ್ಯವಸ್ಥೆಯ ಸಮರ್ಥನೆಯ ವೇದಿಕೆಗಳಾಗಿ ಬದಲಾಗಿವೆ. ಮುದ್ರಣ ಮಾಧ್ಯಮಗಳು ಕಾರ್ಪೋರೇಟ್ ಬಂಡವಾಳ ವ್ಯವಸ್ಥೆಯ ಜಾಹೀರಾತು ಆಮಿಷಗಳಿಗೆ ಬಲಿಯಾಗಿದ್ದರೆ, ವಿದ್ಯುನ್ಮಾನ ಮಾಧ್ಯಮಗಳು ಮಾರುಕಟ್ಟೆ ಆಧಾರಿತ ಟಿಆರ್ಪಿ ರೇಟಿಂಗ್ಗಳಿಗಾಗಿ ತಮ್ಮ ಸ್ವಂತಿಕೆಯನ್ನೂ ಕಳೆದುಕೊಂಡು ಬೆತ್ತಲಾಗುತ್ತಿವೆ.
ವಿದ್ಯುನ್ಮಾನ ಸುದ್ದಿಮನೆಗಳು ಸೃಷ್ಟಿಸಿರುವ ಕೂಗುಮಾರಿ ಸಂಸ್ಕೃತಿ ಎಲ್ಲ ಭಾಷೆಗಳಿಗೂ ವ್ಯಾಪಿಸುತ್ತಿದ್ದು, ತಮ್ಮ ಮಾರುಕಟ್ಟೆ ರೇಟಿಂಗ್ ಹೆಚ್ಚಿಸಿಕೊಳ್ಳುವ ಪೈಪೋಟಿಯಲ್ಲಿ ಸುಳ್ಳು ಸುದ್ದಿಗಳನ್ನು ವೈಭವೀಕರಿಸುವ ಮತ್ತು ಸತ್ಯವನ್ನು ಮರೆಮಾಚುವ ಒಂದು ವ್ಯವಸ್ಥಿತ ದಂಧೆಗೆ ಮಾಧ್ಯಮ ಲೋಕ ಅವಕಾಶಗಳನ್ನು ಕಲ್ಪಿಸಿದೆ. ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ನೀಡಿದ ಹೇಳಿಕೆಯ ಬಗ್ಗೆ ಝೀ ಸುದ್ದಿವಾಹಿನಿ ಕ್ಷಮೆ ಯಾಚಿಸಿರುವುದು, ಟೈಂಸ್ನೌ ವಾಹಿನಿಯ ನಾವಿಕಾ ಕುಮಾರ್ ನೂಪುರ್ ಶರ್ಮ ವಿವಾದದ ಕೇಂದ್ರಬಿಂದುವಾಗಿರುವುದು, ಕನ್ನಡದ ಪಬ್ಲಿಕ್ ಟಿವಿಯಲ್ಲಿ ಪ್ರಚೋದನಕಾರಿ ಹೇಳಿಕೆಗಳಿಗೆ ಅವಕಾಶ ಮಾಡಿಕೊಟ್ಟು ನಂತರ ಕ್ಷಮೆ ಕೋರಿರುವುದು ಇವೆಲ್ಲವೂ ಮಾಧ್ಯಮ ಲೋಕದ ಅವನತಿಯ ಸಂಕೇತಗಳೇ ಆಗಿವೆ.
ಈ ಅವನತಿಯ ಹಾದಿಯಲ್ಲೇ ದೇಶದ ಪ್ರತಿಷ್ಠಿತ ಸುದ್ದಿಮನೆಯ ನಿರೂಪಕರೊಬ್ಬರ ನಿರ್ಗಮನ ಸುದ್ದಿಯಲ್ಲಿದೆ. ಇಂದು ಯಾವುದೇ ವಿದ್ಯುನ್ಮಾನ ಸುದ್ದಿಮನೆಯನ್ನು ಗಮನಿಸಿದರೂ, ಅದು ಒಬ್ಬ ನಿರೂಪಕನ ಮೂಲಕವೇ ಗುರುತಿಸಿಕೊಂಡಿರುತ್ತದೆ. ಈ ನಿರೂಪಕರು ಬಹುಪಾಲು ಸಂದರ್ಭಗಳಲ್ಲಿ ಕೂಗುಮಾರಿ ಸಂಸ್ಕೃತಿಯ ಪರಿಚಾರಕರಾಗಿಯೇ ಇರುತ್ತಾರೆ. ಒಂದೆರಡು ವಾಹಿನಿಗಳನ್ನು ಹೊರತುಪಡಿಸಿದರೆ ಉಳಿದೆಲ್ಲವೂ ಇಂತಹ ಕೂಗುಮಾರಿ ನಿರೂಪಕರಿಂದಲೇ ತಮ್ಮ ಟಿಆರ್ಪಿ ರೇಟಿಂಗ್ ಹೆಚ್ಚಿಕೊಳ್ಳುತ್ತವೆ.
ಕನ್ನಡದ ಮಾಧ್ಯಮ ಲೋಕದಲ್ಲಿ ಎಲ್ಲವೂ ಇದೇ ಮಾದರಿಯನ್ನು ಅನುಸರಿಸುತ್ತಿವೆ. ಹಿಂದಿ ವಾಹಿನಿಗಳ ಪೈಕಿ ಕೆಲವು ಈ ಸಂಸ್ಕೃತಿಗೆ ಹೊರತಾಗಿವೆ. ಇಂತಹ ಕೂಗುಮಾರಿ ಸಂಸ್ಕೃತಿಯ ಪರಿಚಾರಕರಲ್ಲೊಬ್ಬರಾದ ಸುಧೀರ್ ಚೌಧರಿ ಝೀ ನ್ಯೂಸ್ ವಾಹಿನಿಯಿಂದ ನಿರ್ಗಮಿಸಿದ್ದಾರೆ. ಮಾರುಕಟ್ಟೆಯಲ್ಲೂ ಅತ್ಯಂತ ಜನಪ್ರಿಯ ನಿರೂಪಕರಲ್ಲಿ ಒಬ್ಬರಾಗಿ ಖ್ಯಾತಿ ಗಳಿಸಿರುವ ಸುಧೀರ್ ಚೌಧರಿಯ ನಿರ್ಗಮನಕ್ಕೆ ತಾತ್ವಿಕ ಅಥವಾ ಸೈದ್ಧಾಂತಿಕ ಕಾರಣಗಳಿಗಿಂತಲೂ ವ್ಯಕ್ತಿಗತ, ವಾಣಿಜ್ಯಾಸಕ್ತಿಗಳೇ ಪ್ರಧಾನವಾಗಿರುವುದು ಸ್ಪಷ್ಟವಾಗಿದೆ.
ಝೀ ನ್ಯೂಸ್ ಇಂದಿಗೂ ಭಾರತದಲ್ಲಿ ಪ್ರಥಮ ಶ್ರೇಣಿಯಲ್ಲಿರುವ ಒಂದು ಸುದ್ದಿಮನೆ. ಭಾರತವು ಮಾರುಕಟ್ಟೆ ಅರ್ಥವ್ಯವಸ್ಥೆಗೆ ತೆರೆದುಕೊಂಡು, ಮಾಧ್ಯಮ ಲೋಕವೂ ಸಹ ಬದಲಾದ ಸನ್ನಿವೇಶಕ್ಕೆ ತಕ್ಕಂತೆ ತನ್ನದೇ ಆದ ಮಾರುಕಟ್ಟೆ ತಂತ್ರಗಳನ್ನು ಅನುಸರಿಸಲಾರಂಭಿಸಿದಾಗ, 1990ರಲ್ಲೇ ಈ ನಿಟ್ಟಿನಲ್ಲಿ ಪ್ರಥಮ ಹೆಜ್ಜೆ ಇಟ್ಟವರು ಝೀ ನ್ಯೂಸ್ನ ಮಾಲೀಕರಾದ ಸುಭಾಷ್ ಚಂದ್ರ. ಮಾಜಿ ರಾಜ್ಯಸಭಾ ಸದಸ್ಯರೂ ಆಗಿರುವ ಸುಭಾಷ್ ಚಂದ್ರ ಭಾರತದ ವಿದ್ಯುನ್ಮಾನ ಮಾಧ್ಯ ಲೋಕಕ್ಕೆ ಮಾರುಕಟ್ಟೆ ಸ್ಪರ್ಶ ನೀಡಿದ್ದೇ ಅಲ್ಲದೆ, ಪಶ್ದಿಮ ರಾಷ್ಟ್ರಗಳ ಮಾಧ್ಯಮ ವಲಯಕ್ಕೆ ಸರಿಸಮಾನವಾದ ಒಂದು ಆಧುನಿಕ ಸ್ವರೂಪವನ್ನು ನೀಡುವುದರಲ್ಲೂ ಯಶಸ್ವಿಯಾಗಿದ್ದಾರೆ.
ಇಂದು ಭಾರತದಲ್ಲಿ ನೂರಾರು ಟಿವಿ ವಾಹಿನಿಗಳಿದ್ದರೂ, ಇವೆಲ್ಲದರ ಜನಕ ಎಂದರೆ ಝೀ ಟೀವಿ ವಾಹಿನಿ ಎಂದು ನಿಸ್ಸಂಶಯವಾಗಿ ಹೇಳಬಹುದು. ಈ ವಾಹಿನಿಯಿಂದಲೇ ಕವಲೊಡೆದ ಹಲವಾರು ವಾಹಿನಿಗಳು ಇಂದು ನಮ್ಮ ನಡುವೆ ಇದೆ, ಹಾಗೆಯೇ ಝೀ ವಾಹಿನಿಯಿಂದಲೇ ತಮ್ಮ ವೃತ್ತಿ ಬದುಕು ಆರಂಭಿಸಿದ ಅನೇಕ ಪತ್ರಕರ್ತರು, ನಿರೂಪಕರು ಇಂದು ವಿವಿಧ ವಾಹಿನಿಗಳಲ್ಲಿ ತಮ್ಮ ನೆಲೆ ಕಂಡುಕೊಂಡಿದ್ದಾರೆ.
ವಿದ್ಯುನ್ಮಾನ ಮಾಧ್ಯಮದ ಪತ್ರಿಕೋದ್ಯೋಗಿಗಳ ಪೈಕಿ ಮೊದಲ ಪೀಳಿಗೆಯವರೆಂದೇ ಗುರುತಿಸಲ್ಪಟ್ಟಿರುವ ಸುಧೀರ್ ಚೌಧರಿ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ್ದೇ ಝೀ ನ್ಯೂಸ್ ವಾಹಿನಿಯ ಮೂಲಕ. 24 ಗಂಟೆಗಳ ಸುದ್ದಿ ಪ್ರಸರಣ ಜನಪ್ರಿಯವಾಗುವುದರ ಹಿಂದೆ ಸುಧೀಂದ್ರ ಚೌಧರಿ ಅವರ ಕೊಡುಗೆಯೂ ಇದೆ ಎನ್ನುವುದನ್ನು ಅಲ್ಲಗಳೆಯಲಾಗುವುದಿಲ್ಲ. 2001ರಲ್ಲಿ ಭಾರತೀಯ ಸಂಸತ್ ಭವನದ ಮೇಲೆ ಭಯೋತ್ಪಾದಕ ದಾಳಿ ನಡೆದ ನಂತರ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪಾಕಿಸ್ತಾನದ ಅಧ್ಯಕ್ಷ ಪರ್ವೇಜ್ ಮುಷರಫ್ ನಡುವೆ ನಡೆದ ಮಾತುಕತೆಗಳ ಸಂದರ್ಭದಲ್ಲಿ ಈ ಸಭೆಯ ಕಲಾಪಗಳನ್ನು ವರದಿಮಾಡಲು ನಿಯೋಜಿಸಲಾಗಿದ್ದ ತಂಡದಲ್ಲಿ ಸುಧೀರ್ ಚೌಧರಿ ಪ್ರಮುಖರಾಗಿದ್ದರು.
2003ರಲ್ಲಿ ಝೀ ನ್ಯೂಸ್ ವಾಹಿನಿಯನ್ನು ತೊರೆದು ಸಹಾರ ಸಮಯ್ ವಾಹಿನಿಯನ್ನು ಆರಂಭಿಸುವುದಕ್ಕೆ ಒತ್ತಾಸೆಯಾಗಿ ನಿಂತಿದ್ದರು. ಸಹಾರ ಉದ್ಯಮ ಸಮೂಹದ ಈ ಹಿಂದಿ ವಾಹಿನಿ ಹೆಚ್ಚು ಕಾಲ ಊರ್ಜಿತವಾಗಲಿಲ್ಲ. ನಂತರ ಸುಧೀರ್ ಇಂಡಿಯಾ ಟಿವಿ ವಾಹಿನಿಯಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸಿದ್ದರು. 2012ರಲ್ಲಿ ಪುನಃ ತಮ್ಮ ತವರಿಗೆ, ಝೀ ನ್ಯೂಸ್ ವಾಹಿನಿಗೆ ಬಂದು ಸೇರಿಕೊಂಡಿದ್ದು, ನಿತ್ಯ ಸುದ್ದಿ ಮತ್ತು ವಿಶ್ಲೇಷಣೆಯ ವಿಭಾಗದಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ತಮ್ಮದೇ ಆದ ಸ್ವಂತ ವಾಹಿನಿಯನ್ನು ಆರಂಭಿಸುವ ಇಚ್ಚೆಯೊಂದಿಗೆ ನಿರ್ಗಮಿಸಿದ್ದಾರೆ.
ಸುಧೀರ್ ಚೌಧರಿ ತಮ್ಮ ವೃತ್ತಿ ಜೀವನದಲ್ಲಿ ಅನೇಕ ಏಳುಬೀಳುಗಳನ್ನೂ ಎದುರಿಸಿದ್ದಾರೆ. ವಾಣಿಜ್ಯೋದ್ಯಮಿ ನವೀನ್ ಜಿಂದಾಲ್ ಅವರಿಂದ ಹಣವಸೂಲಿ ಮಾಡುವ ಆರೋಪಕ್ಕೆ ಸಿಲುಕಿದ್ದ ಚೌಧರಿ 2012ರಲ್ಲಿ ಬಂಧನಕ್ಕೊಳಗಾಗಿದ್ದರು. ಈ ಸಂಬಂಧ ಸುದ್ದಿ ಪ್ರಸರಣ ಸಂಪಾದಕರ ಸಂಘದ ಖಜಾಂಚಿಯೂ ಆಗಿದ್ದ ಸುಧೀರ್ ಅವರನ್ನು ಸಂಘದಿಂದ ಉಚ್ಚಾಟಿಸಲಾಗಿತ್ತು. 2018ರಲ್ಲಿ ಪರಸ್ಪರ ರಾಜಿ ಸೂತ್ರದ ಮೂಲಕ ಈ ವಿವಾದ ಬಗೆಹರಿದಿತ್ತು.
ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಅವರು ತಮ್ಮ ಭಾಷಣವೊಂದರಲ್ಲಿ ಟ್ರೂಮನ್ ಲಾಂಗ್ಮನ್ ಅವರಿಂದ ಕೃತಿಚೌರ್ಯ ಮಾಡಿದ್ದಾರೆ ಎಂದು ಆರೋಪಿಸಿ ಸುಧೀರ್ ಚೌಧರಿ ಮೊಯಿತ್ರಾ ಅವರಿಂದ ಮಾನನಷ್ಟ ಮೊಕದ್ದಮೆ ಎದುರಿಸಬೇಕಾಯಿತು. ನಂತರ ಸ್ವತಃ ಲಾಂಗ್ಮನ್ ಅವರೇ ಈ ಆರೋಪವನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಝೀ ನ್ಯೂಸ್ ಕ್ಷಮಾಪಣೆ ಕೇಳಬೇಕಾಯಿತು. ಕೋವಿದ್ 19 ಸಂದರ್ಭದಲ್ಲಿ ಕೋಮು ಪ್ರಚೋದಕ ಸುದ್ದಿಗಾಗಿಯೇ ಸುಧೀರ್ ಇಸ್ಲಾಂ ಭೀತಿ ಸೃಷ್ಟಿಸುವ ಆರೋಪಕ್ಕೆ ಗುರಿಯಾಗಿದ್ದರು. ಈ ಆರೋಪಗಳ ಹೊರತಾಗಿಯೂ ಸುಧೀರ್ ಒಬ್ಬ ನಿರೂಪಕರಾಗಿ ಝೀ ಸುದ್ದಿವಾಹಿನಿಯನ್ನು ಮಾರುಕಟ್ಟೆಯಲ್ಲಿ ಒಂದು ಪ್ರಬಲ ದನಿಯಾಗಿ ಕಾಪಾಡಿಕೊಂಡು ಬಂದಿದ್ದು ವಾಸ್ತವ.
ಕಳೆದ ಎಂಟು ವರ್ಷಗಳಲ್ಲಿ ದೇಶದಲ್ಲಿ ಬಲಪಂಥೀಯ ರಾಜಕಾರಣ ಬಲವಾಗುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ವ್ಯವಸ್ಥೆಯ ಪರವಾಗಿಯೇ ತಮ್ಮ ಸುದ್ದಿ ನಿರೂಪಣೆಯನ್ನು ನಿರ್ವಹಿಸುವ ಮೂಲಕ ಸುಧೀರ್ ಚೌಧರಿ ಜನಪ್ರಿಯತೆಯನ್ನೂ ಗಳಿಸಿದ್ದಾರೆ. ಕೇಂದ್ರ ಸರ್ಕಾರದ ನೀತಿಗಳನ್ನು ಬಲವಾಗಿ ಸಮರ್ಥನೆ ಮಾಡಿಕೊಳ್ಳುವುದೇ ಅಲ್ಲದೆ, ತಮ್ಮ ಸುದ್ದಿ ನಿರೂಪಣೆಯ ಮೂಲಕ ಮತ್ತು ಝೀ ವಾಹಿನಿಯಲ್ಲಿ ಏರ್ಪಡಿಸುವ ಚರ್ಚೆಗಳ ಮೂಲಕ ಸರ್ಕಾರದ ನೀತಿಗಳನ್ನು ಸಾರ್ವಜನಿಕ ವಲಯದಲ್ಲಿ ಜನಪ್ರಿಯಗೊಳಿಸುವ ಮೂಲಕ ಸುಧೀರ್ ಚೌಧರಿ ವ್ಯವಸ್ಥೆಯ ಪರವಾದ ಒಂದು ದನಿಯಾಗಿ ಕಂಡುಬಂದಿದ್ದಾರೆ.
ಬಹುಶಃ ಈ ಹಿನ್ನೆಲೆಯಲ್ಲೇ ತಮ್ಮದೇ ಆದ ಸ್ವಂತ ವಾಹಿನಿಯನ್ನು ಆರಂಭಿಸುವ ಇಚ್ಚೆಯೊಂದಿಗೆ ಸುಧೀರ್ ಚೌಧರಿ ಝೀ ವಾಹಿನಿಯಿಂದ ನಿರ್ಗಮಿಸಿದ್ದಾರೆ. ಆಂತರಿಕವಾಗಿ ಝೀ ಸಮೂಹದ ಮಾಲೀಕ ಸುಭಾಷ್ ಚಂದ್ರ ಅವರು ಇತ್ತೀಚಿನ ದಿನಗಳಲ್ಲಿ ಸುಧೀರ್ ಚೌಧರಿಯನ್ನು ಮೂಲೆಗುಂಪು ಮಾಡಲು ಯತ್ನಿಸುತ್ತಿದ್ದರು ಎಂಬ ಆರೋಪವೂ ಕೇಳಿಬರುತ್ತಿದೆ. 2021ರಲ್ಲಿ ಎಬಿಪಿ ನ್ಯೂಸ್ ವಾಹಿನಿಯಿಂದ ಬಂದು, ಝೀ ನ್ಯೂಸ್ನ ಕಂಟೆಂಟ್ ಅಧಿಕಾರಿ ಮತ್ತು ಸಂಪಾದಕರಾಗಿ ನಿಯೋಜಿತರಾದ ರಜನೀಶ್ ಅಹುಜಾ ಮತ್ತು ಸುಧೀರ್ ಚೌಧರಿ ನಡುವೆ ಇದ್ದ ಅಧಿಕಾರ ಸಂಘರ್ಷವೂ ಈ ನಿರ್ಧಾರಕ್ಕೆ ಕಾರಣ ಎನ್ನಲಾಗುತ್ತಿದೆ.
ಇತ್ತೀಚಿನ ರಾಜ್ಯಸಭಾ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುಭಾಷ್ ಚಂದ್ರ ಸೋಲು ಅನುಭವಿಸಿದ ನಂತರ, ಝೀ ನ್ಯೂಸ್ ಕೆಲವು ಸಂದರ್ಭಗಳಲ್ಲಿ ತಟಸ್ಥ ನೀತಿಯನ್ನೂ ಅನುಸರಿಸಲಾರಂಭಿಸಿತ್ತು. ಅಸ್ಸಾಂ ಕುರಿತು ಪ್ರಸಾರವಾದ ಒಂದು ಷೋನಲ್ಲಿ ಇದು ಸ್ಪಷ್ಟವಾಗಿದ್ದು, ಈ ಬೆಳವಣಿಗೆಗಳಿಗೆ ಸುಧೀರ್ ಚೌಧರಿ ಸಮ್ಮತಿ ಇರಲಿಲ್ಲ ಎಂದೂ ಹೇಳಲಾಗುತ್ತಿದೆ. ಮಾಧ್ಯಮ ಮಾರುಕಟ್ಟೆಯಲ್ಲಿ ತಮ್ಮದೇ ಆದ ವರ್ಚಸ್ಸು ಬೆಳೆಸಿಕೊಂಡಿರುವ ಸುಧೀರ್ ಚೌಧರಿ ಝೀ ವಾಹಿನಿಯ ಇತ್ತೀಚಿನ ತಟಸ್ಥ ನೀತಿಯಿಂದ ಅಸಮಾಧಾನಗೊಂಡಿದ್ದರೆಂದೂ ಹೇಳಲಾಗುತ್ತಿದೆ.
ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಸ್ಪರ್ಧಿಸಿ, ಸೋಲು ಅನುಭವಿಸಿದ ನಂತರ ಝೀ ನ್ಯೂಸ್ ಮಾಲೀಕ ಸುಭಾಷ್ ಚಂದ್ರ ತಮ್ಮ ಸಂಸ್ಥೆಯ ಕೆಲವು ಸಿಬ್ಬಂದಿಯ ವಿರುದ್ಧ ಅಸಮಾಧಾನಗೊಂಡಿದ್ದು, ಇದರ ಪರಿಣಾಮವೇ ಸುಧೀರ್ ಚೌಧರಿ ಸಹ ನಿರ್ಗಮಿಸಿದ್ದಾರೆ ಎಂದು ನ್ಯೂಸ್ ಲಾಂಡ್ರಿ ಸುದ್ದಿವಾಹಿನಿ ಹೇಳಿದೆ. ಇದೇ ಸಂದರ್ಭದಲ್ಲಿ ಸುಧೀರ್ ಚೌಧರಿ ಬಹುಮಟ್ಟಿಗೆ ಝೀ ನ್ಯೂಸ್ ವಾಹಿನಿಯ ಮುಖವಾಣಿಯಂತಾಗಿದ್ದುದು ಸುಭಾಷ್ ಚಂದ್ರ ಅವರ ಅಸಹನೆಗೆ ಕಾರಣವಾಗಿರಬಹುದು.
ಈ ಆಂತರಿಕ ಬಿಕ್ಕಟ್ಟುಗಳ ಹೊರತಾಗಿಯೂ, ಭಾರತದ ಪ್ರಸ್ತುತ ಸಂದರ್ಭದಲ್ಲಿ ಆಡಳಿತಾರೂಢ ಪಕ್ಷಗಳಿಗೆ ಮತ್ತು ಕಾರ್ಪೋರೇಟ್ ಮಾರುಕಟ್ಟೆಗೆ ತನ್ನದೇ ಆದ ಮಾಧ್ಯಮ ಮುಖವಾಣಿಗಳ ಅವಶ್ಯಕತೆ ಹೆಚ್ಚಾಗಿದೆ. ಸರ್ಕಾರದ ಪರ ವಕಾಲತ್ತು ವಹಿಸುವ ಮತ್ತು ಸರ್ಕಾರದ ನೀತಿಗಳನ್ನು ಸಮರ್ಥಿಸುತ್ತಲೇ ಸಾರ್ವಜನಿಕರ ನಡುವೆ ಒಂದು ಸಕಾರಾತ್ಮಕ ಅಭಿಪ್ರಾಯವನ್ನು ಮೂಡಿಸುವ ನಿಟ್ಟಿನಲ್ಲಿ ಮಾಧ್ಯಮಗಳು, ವಿಶೇಷವಾಗಿ ವಿದ್ಯುನ್ಮಾನ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿರುವುದು ಗುಟ್ಟಿನ ಮಾತೇನಲ್ಲ. ಪ್ರಜಾತಂತ್ರ ವ್ಯವಸ್ಥೆಯ ಒಂದು ಪ್ರಮುಖ ಅಂಗವಾಗಿ ಸಾರ್ವಜನಿಕರ ನಡುವೆ ಸದಾ ಜಾಗೃತಾವಸ್ಥೆಯಲ್ಲಿರುವ ಒಂದು ಸಂಸ್ಥೆಯಾಗಿ ಮಾಧ್ಯಮವೂ ಮುಖ್ಯವಾಗುತ್ತದೆ.
ಆಡಳಿತಾರೂಢ ಪಕ್ಷಗಳು ಈ ಮಾಧ್ಯಮಗಳ ಮೂಲಕ, ವಾಹಿನಿಗಳ ಮೂಲಕ ತಮ್ಮದೇ ಆದ ಪ್ರಭಾವಿ ವಲಯವನ್ನು ಸೃಷ್ಟಿಸಿಕೊಳ್ಳಲು ಸದಾ ಹಾತೊರೆಯುತ್ತಿರುತ್ತವೆ. ಮುದ್ರಣ ಮಾಧ್ಯಮಗಳೇ ಪ್ರಧಾನವಾಗಿದ್ದ ಸಂದರ್ಭದಲ್ಲೂ ಇದನ್ನು ಕಾಣಬಹುದಿತ್ತು. ವಿದ್ಯುನ್ಮಾನ ಮಾಧ್ಯಮಗಳು ದೇಶದ ಮೂಲೆ ಮೂಲೆಗೂ, ಕಟ್ಟಕಡೆಯ ವ್ಯಕ್ತಿಯವರೆಗೂ ತಲುಪುವ ಸಾಮರ್ಥ್ಯ ಹೊಂದಿರುವುದರಿಂದ ಆಡಳಿತಾರೂಢ ಪಕ್ಷಗಳು, ಮಾಧ್ಯಮಗಳನ್ನು ತಮ್ಮ ಆಡಳಿತ ನೀತಿಗಳ ವಾಹಕಗಳಾಗಿ ಬಳಸಿಕೊಳ್ಳುತ್ತವೆ. ಹಿಂದಿನ ಕಾಂಗ್ರೆಸ್ ಸರ್ಕಾರಗಳೂ ಇದನ್ನು ಮಾಡುತ್ತಲೇ ಬಂದಿವೆ. ಬಿಜೆಪಿ ಸರ್ಕಾರ ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿದೆ.
ಇದರೊಟ್ಟಿಗೇ ನವ ಉದಾರವಾದ ಮತ್ತು ಜಾಗತೀಕರಣದ ಆರ್ಥಿಕ ನೀತಿಗಳು ದೇಶದಲ್ಲಿ ಸೃಷ್ಟಿಸುತ್ತಿರುವ ಜನಾಕ್ರೋಶ ಮತ್ತು ಜನಸಾಮಾನ್ಯರ ನಡುವೆ ಸೃಷ್ಟಿಯಾಗುತ್ತಿರುವ ಹತಾಶೆಯನ್ನು ನಿವಾರಿಸುವ ನಿಟ್ಟಿನಲ್ಲಿ, ಆಡಳಿತ ನೀತಿಗಳ ಪರವಾದ ಸಾರ್ವಜನಿಕ ಅಭಿಪ್ರಾಯವನ್ನು ಉತ್ಪಾದಿಸುವಲ್ಲಿ ವಿದ್ಯುನ್ಮಾನ ಮಾಧ್ಯಮಗಳು ಪ್ರಧಾನ ಪಾತ್ರ ವಹಿಸುತ್ತವೆ. ಟಿವಿ ವಾಹಿನಿಗಳಲ್ಲಿ ನಡೆಯುವ ಏಕಮುಖಿ ಚರ್ಚೆಗಳು ಈ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕಂಡುಬರುತ್ತವೆ. ಹಾಗಾಗಿ ಮಾರುಕಟ್ಟೆ ವ್ಯವಸ್ಥೆ ಮತ್ತು ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳಿಗೆ ವಿದ್ಯುನ್ಮಾನ ಮಾಧ್ಯಮಗಳು ಒಂದು ಪ್ರಬಲ ವೇದಿಕೆಗಳೂ ಆಗುತ್ತವೆ. ಡಿಜಿಟಲ್ ಯುಗದಲ್ಲಿ ದೇಶದ ಅರ್ಥವ್ಯವಸ್ಥೆ ಹೆಚ್ಚು ಹೆಚ್ಚು ಕಾರ್ಪೋರೇಟ್ ಮಾರುಕಟ್ಟೆ ಕೇಂದ್ರಿತವಾಗುತ್ತಿರುವುದರಿಂದ ಆಳುವ ವರ್ಗಗಳಿಗೂ ಈ ವೇದಿಕೆಗಳು ಅಪ್ಯಾಯಮಾನವಾಗಿ ಕಾಣುತ್ತವೆ.
ಸುಧೀರ್ ಚೌಧರಿ ಬಹುಶಃ ಇಂತಹುದೇ ಒಂದು ಹೊಸ ವೇದಿಕೆಯನ್ನು ದೇಶದ ಜನತೆಗೆ ಸಮರ್ಪಿಸಲಿದ್ದಾರೆ. ವಸ್ತುನಿಷ್ಠ ವರದಿಗಾರಿಕೆ , ಜನಪರ ದನಿಯನ್ನು ಬಿಂಬಿಸುವ ಧೋರಣೆ ಮತ್ತು ಜನಸಮುದಾಯಗಳ ನಿತ್ಯ ಬದುಕಿನ ಬವಣೆಗಳನ್ನು ಬಿಂಬಿಸುವ ಜನೋಪಯೋಗಿ ವಿಧಾನಗಳಿಗಿಂತಲೂ ಮಿಗಿಲಾಗಿ, ಆಳುವ ವರ್ಗಗಳ ಆಡಳಿತ ನೀತಿಗಳನ್ನು ಜನರ ನಡುವೆ ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಈ ವಾಹಿನಿಗಳು ಕಾರ್ಯನಿರ್ವಹಿಸುತ್ತವೆ. ತಮ್ಮ ಕೂಗುಮಾರಿ ಧೋರಣೆಗೆ ಖ್ಯಾತಿ ಪಡೆದಿರುವ ಸುಧೀರ್ ಚೌಧರಿ ಬಹುಶಃ ತಮ್ಮ ಭವಿಷ್ಯದ ಯೋಜನೆಯಲ್ಲಿ ಯಶಸ್ಸುಗಳಿಸಲೂ ಇದೇ ಧೋರಣೆ ನೆರವಾಗುತ್ತದೆ.
ಕಾರ್ಪೋರೇಟ್ ಬಂಡವಾಳ ಸ್ನೇಹಿ ಸರ್ಕಾರ ಮತ್ತು ಮಾರುಕಟ್ಟೆ ಸ್ನೇಹಿ ಮಾಧ್ಯಮ ಜಂಟಿಯಾಗಿ ನವ ಉದಾರವಾದವನ್ನು ತಳಮಟ್ಟದವರೆಗೂ ಪರಿಣಾಮಕಾರಿಯಾಗಿ ವಿಸ್ತರಿಸಲು ನೆರವಾಗುವುದನ್ನು ಈ ಸಂದರ್ಭದಲ್ಲಿ ಗಮನಿಸಬೇಕಾಗುತ್ತದೆ. ಬಹುಶಃ ಸುಧೀರ್ ಚೌಧರಿ ಆರಂಭಿಸಲಿರುವ ಹೊಸ ವಾಹಿನಿ ಈ ಸಾಲಿಗೆ ಸೇರ್ಪಡೆಯಾಗಲಿರುವ ಮತ್ತೊಂದು ವೇದಿಕೆಯಾಗಲಿದೆ. ಸುಧೀರ್ ಚೌಧರಿ ಸ್ವತಃ ಕಾರ್ಪೋರೇಟ್ ರೂಪದಲ್ಲಿ ಹೊರಹೊಮ್ಮಲಿದ್ದಾರೋ ಅಥವಾ ಮತ್ತೊಂದು ಉದ್ದಿಮೆಯ ಭಾಗವಾಗಿ ತಮ್ಮ ವಾಹಿನಿಯ ಸಾರಥ್ಯ ವಹಿಸುವರೋ ಕಾದುನೋಡಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ5 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ4 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ಅಂಕಣ3 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ3 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ4 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ


