Connect with us

ಬಹಿರಂಗ

ಬೀದರ್ ದೇಶದ್ರೋಹ ಪ್ರಕರಣದ ಸುತ್ತ ಮುತ್ತ

Published

on

  • ಕುಮಾರ ಬುರಡಿಕಟ್ಟಿ

ಬೀದರ್‌ನ ಶಾಹೀನ್ ಶಾಲೆಯ ಮೇಲೆ ಹಾಗೂ ಮೈಸೂರಿನ ವಿದ್ಯಾರ್ಥಿನಿಯ ಮೇಲೆ ಹಾಕಲಾದ ದೇಶದ್ರೋಹ ಪ್ರಕರಣಗಳು ಸಧ್ಯಕ್ಕೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ ಹೇಗೆ ದುರ್ಬಳಕೆಯಾಗುತ್ತಿದೆ ಎಂಬುದಕ್ಕೆ ಇತ್ತೀಚಿನ ಜೀವಂತ ಪ್ರತಿಮೆಗಳಾಗಿ ನಿಂತಿವೆ.

ಬೀದರ್ ಪ್ರಕರಣವನ್ನು ತುಸು ಹತ್ತಿರದಿಂದಲೇ ನೋಡುತ್ತಾ ವರದಿ ಮಾಡುತ್ತಿರುವುದರಿಂದ ಹಾಗೂ ನಿನ್ನೆ (ಸೋಮವಾರ) ಬೀದರ್‌ಗೆ ಹೋಗಿ ಇಡೀ ದಿನ ಆ ಪ್ರಕರಣದ ಬಲಿಪಶುಗಳನ್ನು ಮಾತಾಡಿಸಿದ ನಂತರ ನನಗೆ ಕಂಡ ಒಂದಿಷ್ಟು ಬಿಡಿಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವೆ.

ಕಳೆದ ಜನವರಿ 21ರಂದು ಬೀದರ್‌ನ ಪ್ರತಿಷ್ಠಿತ ಶಾಹೀನ್ ಸ್ಕೂಲಿನಲ್ಲಿ ವಾರ್ಷಿಕೋತ್ಸವ ಸಮಾರಂಭವಿತ್ತು. ವಿದ್ಯಾರ್ಥಿಗಳು ವಿಭಿನ್ನ ರೀತಿಯ, ಸೃಜನಶೀಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಅಂತಹ ಕಾರ್ಯಕ್ರಮಗಳಲ್ಲಿ ಆರನೇ ತರಗತಿಯ ಮಕ್ಕಳು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್‌ಸಿ) ಕುರಿತು ಪ್ರದರ್ಶಿಸಿದ ಕಿರುನಾಟಕ ಕೂಡ ಒಂದು.

ಈ ನಾಟಕದಲ್ಲಿ ಕೆಲವು ಪಾತ್ರಗಳು ಎನ್ಆರ್‌ಸಿ ಕುರಿತು ಚರ್ಚೆ ಮಾಡುತ್ತವೆ. “ಸತ್ತು ಗೋರಿಯಲ್ಲಿರುವ ನನ್ನ ಅಜ್ಜ, ಮುತ್ತಜ್ಜನ ದಾಖಲೆಗಳನ್ನು ಕೇಳಿದರೆ ನಾನೆಲ್ಲಿಂದ ತಂದುಕೊಡಲಿ?” “ಏನೇ ಆದ್ರೂ ನಾನಂತೂ ನನ್ನ ಪೌರತ್ವ ಸಾಬೀತು ಪಡಿಸಲು ದಾಖಲೆ ಕೊಡಲ್ಲ”, “ನನ್ನ ದಾಖಲೆಗಳನ್ನು ಕೇಳಲು ಬಂದರೆ ಚಪ್ಪಲಿಯಿಂದ ಹೊಡೆಯುತ್ತೇನೆ” ಎಂಬಿತ್ಯಾದಿ ಮಾತುಗಳನ್ನು ಒಂದೊಂದು ಪಾತ್ರ ಆಡುತ್ತದೆ. ಈ ಕೊನೆಯ ಡೈಲಾಗನ್ನು ಹೇಳಿದ್ದು ಆಯೇಷಾ (ಹೆಸರನ್ನು ಬದಲಾಯಿಸಲಾಗಿದೆ) ಎಂಬ ಹನ್ನೊಂದು ವರ್ಷದ ಹುಡುಗಿ.

ಸೂಕ್ಷ್ಮವಾಗಿ ನೋಡಿದರೆ ಇದೊಂದು ವಿಡಂಬನಾತ್ಮಕ ನಾಟಕ. ಚಪ್ಪಲಿಯಿಂದ ಹೊಡೆಯುತ್ತೇನೆ ಎಂಬುದು ಉರ್ದು/ ಹಿಂದಿ ಭಾಷೆಯಲ್ಲಿ ಜನಸಾಮಾನ್ಯರು ಬಹಳ ಸಲೀಸಾಗಿ, ಮಾಮೂಲಿಯಾಗಿ ಸಣ್ಣಪುಟ್ಟ ವಿಷಯಕ್ಕೆಲ್ಲಾ ಆಡುವ ಮಾತು (ಜ್ಯೂತೆ ಸೆ ಮಾರುಂಗ). ಅದರೆ ಇಲ್ಲಿ ಆ ಡೈಲಾಗೇ ಬಹಳ ಜನರಿಗೆ ಮುಳುವಾಗಿ ಪರಿಣಮಿಸಿದೆ.

ಈ ನಾಟಕದ ವೀಡಿಯೋ ತುಣುಕೊಂದನ್ನು ಮೊಹಮ್ಮದ್ ಯೂಸೂಫ್ ಎಂಬ ಸ್ಥಳೀಯ ಉರ್ದು ಪತ್ರಿಕೆಯ ವರದಿಗಾರನೊಬ್ಬ ಫೇಸ್ಬುಕ್ಕಿನಲ್ಲಿ ಪೋಸ್ಟ್ ಮಾಡುತ್ತಾನೆ. ಇದು ನೀಲೇಶ್ ರಕ್ಷ್ಯಾಳ್ ಎಂಬ ಬಲಪಂಥೀಯ ವ್ಯಕ್ತಿಯೊಬ್ಬನ ಗಮನಕ್ಕೆ ಬರುತ್ತದೆ. ಆತ ಈ ನಾಟಕದಲ್ಲಿರುವ ಸಂಭಾಷಣೆಗಳು, ಅದರಲ್ಲೂ ವಿಶೇಷವಾಗಿ “ಚಪ್ಪಲಿಯಿಂದ ಹೊಡೆಯುತ್ತೇನೆ” ಎನ್ನುವ ಡೈಲಾಗು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮಾಡಿದ ಅವಮಾನ ಎಂಬುದಾಗಿ ಹಾಗೂ ಅದೊಂದು ದೇಶದ್ರೋಹದ ಕೃತ್ಯ ಎಂಬುದಾಗಿ ಆರೋಪಿಸಿ ಈ ನಾಟಕ ಪ್ರದರ್ಶನ ಮಾಡಿದ ಶಾಹೀನ್ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೀದರ್ನ ನ್ಯೂಟೌನ್ ಪೊಲೀಸ್ ಸ್ಟೇಷನ್ನಿನಲ್ಲಿ ಜನವರಿ 26ರಂದು ದೂರು ದಾಖಲಿಸುತ್ತಾನೆ.

ಇದನ್ನು ಆಧರಿಸಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿಭಂಗ ಮಾಡುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 124ಎ (ದೇಶದ್ರೋಹ) ಮತ್ತು ಇತರ ಸೆಕ್ಷನ್ನುಗಳ ಅಡಿಯಲ್ಲಿ ಶಾಹಿನ್ ಸಂಸ್ಥೆಯ ಅಧ್ಯಕ್ಷ, ಆಡಳಿತ ಮಂಡಳಿ ಮತ್ತು ಮೊಹಮ್ಮದ್ ಯೂಸೂಫ್ ಮೇಲೆ ಪ್ರಕರಣ ದಾಖಲಿಸುತ್ತಾರೆ.

ಮರುದಿನದಿಂದಲೇ ಪೊಲೀಸರು ಶಾಲೆಗೆ ಬಂದು ಪ್ರಕರಣದ ವಿಚಾರಣೆ ಶುರು ಮಾಡುತ್ತಾರೆ. ಶಾಲೆಯ ಸಿಸಿಟೀವಿ ಕ್ಯಾಮೆರಾದ ದೃಶ್ಯಗಳನ್ನು ವಶಪಡಿಸಿಕೊಳ್ಳುತ್ತಾರೆ. ಶಾಲೆಯ ಶಿಕ್ಷಕರು ಮತ್ತು ಇತರ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸುತ್ತಾರೆ.

ಮರುದಿನ, ಅಂದರೆ ಜನವರಿ 28ನೇ ತಾರೀಖು ಡಿವೈಎಸ್ಪಿ ಬಸವೇಶ್ವರ ಹೀರಾ ನೇತೃತ್ವದಲ್ಲಿ ಸಮವಸ್ತ್ರದಲ್ಲೇ ಬರುವ ಪೊಲೀಸರು ಸುಮಾರು 46 ಮಕ್ಕಳನ್ನು ವಿಚಾರಣೆಗೊಳಪಡಿಸುತ್ತಾರೆ. ಮಕ್ಕಳನ್ನು ವಿಚಾರಣೆಗೆ ಒಳಪಡಿಸುವಾಗ ಪೊಲೀಸರು ಸಮವಸ್ತ್ರದಲ್ಲಿರಬಾರದು ಹಾಗೂ ಮಕ್ಕಳ ಹಿತರಕ್ಷಣಾ ಸಮಿತಿಯ ಸದಸ್ಯರು ಜೊತೆಯಲ್ಲಿರಬೇಕು ಎಂಬ ಕನಿಷ್ಠ ಜ್ಞಾನವನ್ನೂ ಹೊಂದಿರದ ಬೀದರ್ ಪೊಲೀಸರು ಈ ಬಾಲನ್ಯಾಯ ನಿಯಮಗಳನ್ನು ಗಾಳಿಗೆ ತೂರುತ್ತಾರೆ.

ಸಮವಸ್ತ್ರಧಾರಿ ಪೊಲೀಸರು ಪುಟ್ಟ ಪುಟ್ಟ ಮಕ್ಕಳನ್ನು ವಿಚಾರಣೆಗೊಳಪಡಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಾದ್ಯಂತ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಬೀದರ್ ಪೊಲೀಸರು ಮರುದಿನ ಶಾಲೆಗೆ ಸಿವಿಲ್ ಡ್ರೆಸ್ಸಿನಲ್ಲಿ ಬರುತ್ತಾರೆ. ಆದರೆ ಆವತ್ತು ಯಾವ ಮಕ್ಕಳನ್ನೂ ವಿಚಾರಣೆಗೆ ಒಡಪಡಿಸದೇ ಕೇವಲ ಸಿಬ್ಬಂದಿಯನ್ನು ವಿಚಾರಣೆ ಮಾಡಿ ಹಿಂತಿರುಗುತ್ತಾರೆ.

ಅದರ ಮರುದಿನ, ಅಂದರೆ, ಜನವರಿ 29ರಂದು ಮತ್ತೆ ಸಿವಿಲ್ ಡ್ರೆಸ್ಸಿನಲ್ಲಿ ಬರುವ ಪೊಲೀಸರು ತಮ್ಮೊಂದಿಗೆ ಮಕ್ಕಳ ಹಿತರಕ್ಷಣಾ ಸಮಿತಿಯ ಇಬ್ಬರು ಮಹಿಳಾ ಸದಸ್ಯರನ್ನು ಕರೆದುಕೊಂಡು ಬಂದಿರುತ್ತಾರೆ. ಈ ಬಾರಿ ಅವರು ಮತ್ತೆ ಮಕ್ಕಳನ್ನು ವಿಚಾರಣೆಗೆ ಒಳಪಡಿಸುತ್ತಾರೆ. ಈ ಬಾರಿ ಅವರು ಸುಮಾರು ಮೂರು ತಾಸು ವಿಚಾರಣೆ ಮಾಡುತ್ತಾರೆ.

ಪ್ರತೀ ವಿಚಾರಣೆಯ ಸಮಯದಲ್ಲೂ ನಾಟಕದಲ್ಲಿ “ಚಪ್ಪಲಿಯಿಂದ ಹೊಡೆಯುತ್ತೇನೆ” ಎಂಬ ಡೈಲಾಗ್ ಹೇಳಿದ ಆರನೆಯ ತರಗತಿಯ ಆಯೇಶಾಳನ್ನೇ ತೀವ್ರವಾಗಿ ವಿಚಾರಣೆ ಮಾಡುತ್ತಾರೆ. ವಿಚಾರಣೆಯ ಸಮಯದಲ್ಲಿ ಆ ಹುಡುಗಿ ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ಆ ಡೈಲಾಗನ್ನು ತನ್ನ ತಾಯಿ ಹೇಳಿಕೊಟ್ಟಿರುವುದಾಗಿ ಹೇಳುತ್ತಾಳೆ.

ಅದನ್ನೇ ಆಧಾರವಾಗಿಟ್ಟುಕೊಂಡ ಪೊಲೀಸರು ಮಾರನೆಯ ದಿನ, ಅಂದರೆ ಜನವರಿ 30ರಂದು ಮತ್ತೆ ಶಾಲೆಗೆ ಬಂದು ಸಿಬ್ಬಂದಿಯನ್ನು ವಿಚಾರಣೆ ಮಾಡುತ್ತಾರೆ. ಈ ಸಮಯದಲ್ಲಿ ಆ ನಾಟಕ ಪ್ರದರ್ಶನದ ಉಸ್ತುವಾರಿ ವಹಿಸಿದ್ದು ಶಾಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಎಂಬುದನ್ನು ಕಂಡುಕೊಳ್ಳುತ್ತಾರೆ.

ಆಯೇಶಾಳ ಹೇಳಿಕೆ ಆಧಾರದಲ್ಲಿ ಆಕೆಯ ತಾಯಿ ನಜ್ಬುನ್ನೀಸಾಳನ್ನು ಹಾಗೂ ಶಾಲೆಯ ಸಿಬ್ಬಂದಿಯ ಹೇಳಿಕೆಯ ಆಧಾರದಲ್ಲಿ ನಾಟಕದ ಉಸ್ತುವಾರಿ ನೋಡಿಕೊಂಡಿದ್ದ ಮುಖ್ಯಶಿಕ್ಷಕಿ ಫರಿದಾ ಬೇಗಂ ಅವರನ್ನು ಸುಮಾರು ಮಧ್ಯಾಹ್ನ 4 ಗಂಟೆಯ ಹೊತ್ತಿಗೆ ಬಂಧಿಸಿ ಕರೆದೊಯ್ಯುತ್ತಾರೆ.

ಮಾರನೆಯ ದಿನ, ಅಂದರೆ ಜನವರಿ 31ನೇ ತಾರೀಖಿನಂದು ಮತ್ತೆ ಶಾಲೆಗೆ ಬರುವ ಪೊಲೀಸರು ಕೆಲವು ಮಕ್ಕಳ ಪಟ್ಟಿಯನ್ನು ಕೊಟ್ಟು ಅವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬರುವಂತೆ ಒತ್ತಾಯಿಸುತ್ತಾರೆ. ಆದರೆ ಅದಕ್ಕೆ ಶಾಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತೌಸೀಫ್ ಮಡಿಕೇರಿ ಖಂಡಿತ ಒಪ್ಪುವುದಿಲ್ಲ. ಅಷ್ಟೊತ್ತಿಗಾಗಲೇ ಬೀದರ್ ದೇಶದ್ರೋಹದ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿರುತ್ತದೆ.

ಪೊಲೀಸರು ಸಮವಸ್ತ್ರದಲ್ಲೇ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ್ದಕ್ಕೆ ತೀವ್ರ ವೀರೋಧ ವ್ಯಕ್ತವಾಗಿದ್ದು ಮಾತ್ರವಲ್ಲದೇ ರಾಷ್ಟ್ರೀಯ ಮತ್ತು ರಾಜ್ಯ ಮಾನವ/ಮಕ್ಕಳ ಹಕ್ಕುಗಳ ಸಂಸ್ಥೆಗಳು ಶಾಲೆಯನ್ನು, ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿರುತ್ತವೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಪೊಲೀಸ್ ಠಾಣೆಗೆ ಕಳಿಸಿಕೊಡಲು ಶಾಲೆಯ ಆಡಳಿತ ಮಂಡಳಿ ಸುತಾರಾಂ ಒಪ್ಪುವುದಿಲ್ಲ. ಈ ವಿಷಯದಲ್ಲಿ ಪೊಲೀಸರಿಗೂ ಮತ್ತು ಶಾಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತೌಸಿಫ್ ಮಡಿಕೇರಿ ನಡುವೆ ಸಣ್ಣದೊಂದು ಮಾತಿನ ಚಕಮಕಿಯೂ ನಡೆಯುತ್ತದೆ.

ಬಾಲ ನ್ಯಾಯ ವ್ಯವಸ್ಥೆಯ ಬಗ್ಗೆ ತನಗೆ ಪಾಠ ಮಾಡಬೇಡ ಎಂದು ವಿಚಾರಣಾಧಿಕಾರಿ ಡಿವೈಎಸ್ಪಿ ಬಸವೇಶ್ವರ ಹೀರಾ ಅವರು ತೌಸಿಫ್ ಮಡಿಕೇರಿಗೆ ಧಮಕಿಯನ್ನೂ ಹಾಕುತ್ತಾರೆ. ಇಷ್ಟೆಲ್ಲಾ ಆದರೂ ಮಕ್ಕಳನ್ನು ಪೊಲೀಸ್ ಸ್ಟೇಷನ್ನಿಗೆ ಕಳಿಸಿಕೊಡಲು ಶಾಲೆಯ ಆಡಳಿತ ಮಂಡಳಿ ಒಪ್ಪದಿದ್ದುದರಿಂದ ಅನಿವಾರ್ಯವಾಗಿ ಶಾಲೆಯಲ್ಲೇ ವಿಚಾರಣೆ ಮಾಡುತ್ತಾರೆ.

ನಂತರ ಫೆಬ್ರವರಿ 1, 3 ಮತ್ತು 4ನೇ ತಾರೀಖಿನಂದು ಮತ್ತೆ ಮತ್ತೆ ಶಾಲೆಗೆ ಬಂದು ವಿದ್ಯಾರ್ಥಿಗಳನ್ನು ವಿಚಾರಣೆ ಮಾಡುತ್ತಾರೆ. ಹೀಗೆ, ಪೊಲೀಸರು ಒಟ್ಟು ಐದು ಬಾರಿ ಮಕ್ಕಳನ್ನು ವಿಚಾರಣೆಗೆ ಒಳಪಡಿಸುತ್ತಾರೆ. ವಿಚಾರಣೆಗೆ ಒಳಗಾದ ಒಟ್ಟು ಮಕ್ಕಳ ಸಂಖ್ಯೆ ಸುಮಾರು 80. ನಾಟಕದಲ್ಲಿ ಪಾತ್ರಗಳನ್ನು ಮಾಡಿದ ಮಕ್ಕಳನ್ನಂತೂ ಪೊಲೀಸರು ಪದೇಪದೇ ವಿಚಾರಣೆಗೆ ಒಳಪಡಿಸಿದರೆ ಉಳಿದ ಮಕ್ಕಳನ್ನು ಒಂದೆರಡು ಬಾರಿ ಮಾತ್ರ ವಿಚಾರಣೆ ಮಾಡುತ್ತಾರೆ.

ಈ ನಾಟಕದ ಸ್ಕ್ರಿಪ್ಟ್ ಬರೆದದ್ದು ಯಾರು? ಈ ನಾಟಕದ ಡೈಲಾಗ್ ಯಾರು ಹೇಳಿಕೊಟ್ಟರು? ಪ್ರಧಾನಮಂತ್ರಿ ಮುಸ್ಲೀಂ ಆಗಿದ್ರೆ ಹೀಗೆ ಚಪ್ಪಲಿಯಿಂದ ಹೊಡೆಯುತ್ತೇನೆ ಅಂತಿದ್ತಾ? ನಾಟಕದ ರಿಹರ್ಸಲ್ ಎಲ್ಲಿ ಮಾಡಿದ್ರಿ? ನೋಡೋದಕ್ಕೆ ತಂದೆತಾಯಿ ಬಂದಿದ್ರಾ? ಎಂಬಿತ್ಯಾದಿ ಪ್ರಶ್ನೆಗಳನ್ನೇ ಪ್ರತೀದಿನ ಕೇಳುತ್ತಿದ್ದರು. ಸಿಸಿಟೀವಿ ಕ್ಯಾಮೆರಾದ ಕವರೇಜ್ ಇಲ್ಲದ ಶಾಲಾ ಕಟ್ಟಡದ ಮೂಲೆಯ ಕೋಣೆಯೊಂದನ್ನು ಅವರು ವಿಚಾರಣೆಗಾಗಿ ಆಯ್ಕೆ ಮಾಡಿಕೊಂಡಿದ್ದರು. ಫೆಬ್ರುವರಿ 4ನೇ ತಾರೀಖಿನ ನಂತರ ಪೊಲೀಸರು ಮತ್ತೆ ಶಾಲೆಯ ಕಡೆ ಬಂದಿಲ್ಲವಂತೆ.

ಈ ಇಡೀ ಪ್ರಕರಣದಲ್ಲಿ ಅತಿ ಹೆಚ್ಚು ನೋವು ಅನುಭವಿಸಿದವರು ಮತ್ತು ಈಗಲೂ ಅನುಭವಿಸುತ್ತಿರುವವರು ಎಂದರೆ ನಜ್ಬುನ್ನಿಸಾ ಮತ್ತು ಅವಳ ಮಗಳು ಆಯೇಶಾ. ನಜ್ಬುನ್ನಿಸಾ ಬೀದರಿನಿಂದ ಸುಮಾರು ನಲ್ವತ್ತು ಕಿ.ಮೀ. ದೂರದಲ್ಲಿರುವ ಹಳ್ಳಿಕೇಡ್ ಗ್ರಾಮದವಳು. ಸುಮಾರು 27 ವರ್ಷ ಇರಬಹುದು. ಮಗಳು ಆಯೇಶಾಳಿಗೆ ಸುಮಾರು 11 ವರ್ಷ ಇರಬಹುದು. ಸುಮಾರು ಏಳು ವರ್ಷಗಳ ಹಿಂದೆಯೇ ಅವಳ ಗಂಡ ಕ್ಯಾನ್ಸರಿನಿಂದ ಬಳಲಿ ಅಸುನೀಗಿದ್ದಾನೆ. ಅಂದಿನಿಂದಲೂ ನಜ್ಬುನ್ನೀಸಾಳೇ ತನ್ನ ಮತ್ತು ತನ್ನ ಮಗಳ ಹೊಟ್ಟೆಪಾಡನ್ನು ನೋಡಿಕೊಳ್ಳುತ್ತಿರುವುದು.

ಶಾಹೀನ್ ಸಂಸ್ಥೆಯು ಹಳ್ಳಿಕೇಡದಲ್ಲೂ ಒಂದು ಪ್ರಾಥಮಿಕ ಶಾಲೆಯನ್ನು ನಡೆಸುತ್ತಿದೆ. ಅಲ್ಲಿ ಶಿಕ್ಷಕಿಯೊಬ್ಬಳ ಮಗಳು ಮುಂದೆ ಬೀದರಿಗೆ ಬಂದು ಶಾಹೀನ್ ಸಂಸ್ಥೆಯ ಹೈಸ್ಕೂಲಿನಲ್ಲಿ, ಪಿಯೂಸಿ ಕಾಲೇಜಿನಲ್ಲಿ ಓದಿ ಸರ್ಕಾರಿ ಕೋಟದಡಿಯಲ್ಲಿ ಉಚಿತ ಮೆಡಿಕಲ್ ಸೀಟು ಪಡೆದಿರುತ್ತಾಳೆ. ಇಂತಹ ಒಂದೆರಡು ಉದಾಹರಣೆಗಳು ನಜ್ಬುನ್ನೀಸಾಳಲ್ಲೂ ತನ್ನ ಮಗಳ ಬಗ್ಗೆ ಆಸೆ, ಆಕಾಂಕ್ಷೆಗಳನ್ನು ಹುಟ್ಟಿಸಿರುತ್ತವೆ. ಆಯೇಶಾಳನ್ನೂ ಬೀದರಿನ ಶಾಹೀನ್ ಶಾಲೆಗೆ ಸೇರಿಸಿದರೆ ಅವಳೂ ಡಾಕ್ಟರ್ ಅಥವಾ ಎಂಜಿನೀಯರ್ ಆಗಬಹುದು ಎಂಬ ಕನಸುಗಳು ಆಕೆಯಲ್ಲಿ ಮೊಳೆಯುತ್ತವೆ. ಈ ಕನಸುಗಳೇ ಅವಳನ್ನು ಮಗಳ ಜೊತೆ ಹಳ್ಳಿಕೇಡ್ ತೊರೆದು ಬೀದರಿಗೆ ಬರುವುದಕ್ಕೆ ಪ್ರೇರೇಪಿಸುತ್ತವೆ.

ಈಗ್ಗೆ ನಾಲ್ಕೈದು ತಿಂಗಳ ಹಿಂದಷ್ಟೇ ಕಣ್ಣತುಂಬಾ ಕನಸು ಕಟ್ಟಿಕೊಂಡು ಆಯೇಶಾ ಜೊತೆ ಬೀದರಿಗೆ ಬಂದಿದ್ದ ನಜ್ಬುನ್ನಿಸಾ ಬೀದರಿನ ದುಡಿಯುವ ಜನ ವಾಸಿಸುವ ಏರಿಯಾದಲ್ಲಿ ಒಂದು ಸಣ್ಣ ರೂಮನ್ನು ಬಾಡಿಗೆಗೆ ಪಡೆದು ನೆಲೆಸುತ್ತಾಳೆ. ತಾನು ಅವರಿವರ ಮನೆಯಲ್ಲಿ ಮನೆಗೆಲಸ ಮಾಡಿಕೊಂಡಿದ್ದು ಮಗಳನ್ನು ತನ್ನ ಆಸೆಯಂತೆಯೇ ಶಾಹೀನ್ ಶಾಲೆಗೆ ಸೇರಿಸುತ್ತಾಳೆ.

ಅಸಲಿಗೆ ಶಾಹಿನ್ ಶಾಲೆ ಮುಸ್ಲಿಂ ಸಮುದಾಯದ ಶಾಲೆ ಎಂದೇ ಪರಿಚಿತವಾಗಿದ್ದರೂ ಇಲ್ಲಿ ಶೇಕಡ 50ರಷ್ಟು ಮುಸ್ಲೀಮೇತರ ಮಕ್ಕಳು ಕಲಿಯುತ್ತಿದ್ದಾರೆ. ಹಿಂದೂ, ಸಿಖ್, ಕ್ರಿಶ್ಚಿಯನ್, ಮುಸ್ಲಿಂ – ಎಲ್ಲಾ ಧರ್ಮದ ಬಡ ಮಕ್ಕಳಿಗೆ ಇಲ್ಲಿ ಪ್ರವೇಶ ಸಿಗುತ್ತದೆ. ಇದು ಒಳ್ಳೆಯ ಹೆಸರು ಮಾಡಿರುವ ಸಂಸ್ಥೆ. ದೇಶಾದ್ಯಂತ ಸುಮಾರು 40 ಕಡೆ ಈ ಸಂಸ್ಥೆಯ ಶಾಲೆಗಳಿವೆ. ಬೀದರ್ ಶಾಲೆಯೊಂದರಿಂದಲೇ ಕಳೆದ ವರ್ಷ 327 ವಿದ್ಯಾರ್ಥಿಗಳು ನೀಟ್ ಮೂಲಕ ಸರ್ಕಾರಿ ಕೋಟಾದಲ್ಲಿ ಉಚಿತ ಮೆಡಿಕಲ್ ಸೀಟುಗಳನ್ನು ಪಡೆದಿದ್ದಾರೆ.

ಇಂತಹ ಶಾಲೆಗೆ ಮಗಳನ್ನು ಸೇರಿಸಿ ಇನ್ನೂ ನಾಲ್ಕು ತಿಂಗಳು ತುಂಬುವ ಮೊದಲೇ ನಜ್ಬುನ್ನೀಸಾ ದೇಶದ್ರೋಹದ ಆರೋಪ ಹೊತ್ತು, ಆಯೇಶಾಳನ್ನು ಅನಾಥಳನ್ನಾಗಿ ಮಾಡಿ ಜೈಲು ಸೇರಬೇಕಾಗಿ ಬಂದಿದೆ. ಅತ್ತ ಆಕೆ ಜೈಲು ಸೇರಿದ ನಂತರ ಪಕ್ಕದ ಮನೆಯ ಮೊಹ್ಮದ್ ಹಫೀಜುದ್ದೀನ್ ಕುಟುಂಬ ಆಯೇಶಾಳನ್ನು ತಮ್ಮ ಹತ್ತಿರ ಇಟ್ಟುಕೊಂಡು ಸುಮಾರು 8-10 ದಿನ ಆರೈಕೆ ಮಾಡಿದೆ. ನಂತರ ಮಕ್ಕಳ ಹಿತರಕ್ಷಣಾ ಸಮಿತಿಯ ಸಲಹೆಯ ಮೇರೆಗೆ ಆಕೆಯನ್ನು ಶಾಹೀನ್ ಸಂಸ್ಥೆ ನಡೆಸುವ ಹಾಸ್ಟೆಲ್ ಒಂದಕ್ಕೆ ವರ್ಗಾಯಿಸಿ ಅಲ್ಲಿನ ವಾರ್ಡನ್ ಜೊತೆ ಇರುವುದಕ್ಕೆ ಕಳಿಸಲಾಗಿದೆ.

“ಆಯೇಶಾ ಬಹಳ ಲವಲವಿಕೆಯ ಹುಡುಗಿಯಾಗಿದ್ದಳು. ಪದೇ ಪದೇ ಪೊಲೀಸರ ವಿಚಾರಣೆ, ಅವಳ ಅಮ್ಮಿಯ ಬಂಧನ ಅವಳ ಮನಸ್ಸಿನ ಮೇಲೆ ದೊಡ್ಡ ಆಘಾತ ಉಂಟು ಮಾಡಿದೆ. ತಾಯಿಯ ಬಂಧನದ ನಂತರ ಯಾವಗಲೂ ಬಹಳ ಸಪ್ಪೆಯಾಗಿರುತ್ತಿದ್ದಳು. ಮಧ್ಯರಾತ್ರಿ ದಿಢೀರನ್ ಎದ್ದು ಅಳುತ್ತಿದ್ದಳು. ಕೆಟ್ಟ ಕನಸು ಕಂಡು ಥಟ್ಟನೇ ಚೀರುತ್ತಿದ್ದಳು. ಸಮಾಧಾನಿಸಿ ಮಲಗಿಸುತ್ತಿದ್ದೆವು. ಒಮ್ಮೆ ಮಧ್ಯರಾತ್ರಿ ಆಸ್ಪತ್ರೆಗೂ ಕರೆದುಕೊಂಡು ಹೋಗಿದ್ದೆವು.

ಅಪ್ಪ ತೀರಿಕೊಂಡಿದ್ದಾರೆ, ಅಮ್ಮ ಜೈಲು ಸೇರಿದ್ದಾರೆ. ನೆರೆಹೊರೆಯವರಾಗಿ ನಾವು ಇಷ್ಟಾದರೂ ಮಾಡಬೇಕಲ್ಲವೆ?” ಎಂದು ಮೊಹ್ಮದ್ ಹಫೀಜುದ್ದೀನ್ ಹೇಳಿದರು. ಬೀದರಿನ ದರ್ಜಿ ಗಲ್ಲಿಯಲ್ಲಿ ಅವರು ಬಟ್ಟೆ ಅಂಗಡಿ ಇಟ್ಟುಕೊಂಡಿದ್ದಾರೆ. ಆಯೇಶಾ ಮತ್ತು ನಜ್ಬುನ್ನಿಸಾ ವಾಸಿಸುತ್ತಿದ್ದ ಮನೆಯನ್ನು ತೋರಿಸಿ ಎಂದು ಸ್ವಲ್ಪ ಒತ್ತಾಯ ಮಾಡಿದ ಮೇಲೆ ಅವರು ಅಂಗಡಿಯನ್ನು ಬೇರೆಯವರಿಗೆ ಒಪ್ಪಿಸಿ ಬೈಕಿನಲ್ಲಿ ಕರೆದುಕೊಂಡು ಹೋಗಿ ತೋರಿಸಿದರು. ನಾನು ಮನೆಯದೊಂದು ಫೋಟೋ ತೆಗೆದುಕೊಂಡೆ.

“ಆಯೇಶಾ ಬಹಳ ಹಸನ್ಮುಖಿ ಹುಡುಗಿ. ಅಮ್ಮಿ ನಜ್ಬುನ್ನಿಸಾ ಬಂಧನವಾದ ಮೇಲೆ ಅವಳು ಮುಖ ಪೂರ್ಣವಾಗಿ ಬಾಡಿಬಿಟ್ಟಿದೆ. ನಗು ಮುಖದಿಂದ ಮರೆಯಾಗಿಬಿಟ್ಟಿದೆ. ಯಾವಾಗಲೂ ಖಿನ್ನತೆಯಲ್ಲಿ ಇರುತ್ತಾಳೆ. ಅಮ್ಮಿಯ ಬಂಧನವಾದ ಮೇಲೂ ಸ್ವಲ್ಪ ದಿನ ಆಯೇಶಾ ಶಾಲೆಗೆ ಬರುತ್ತಿದ್ದಳು. ಶಾಲೆಯ ಆವರಣದಲ್ಲಿ ದಿನಾಲೂ ನನ್ನನ್ನು ಕಂಡ ತಕ್ಷಣ ಅಳುತ್ತಾ ಓಡಿ ಬಂದು ತಬ್ಬಿಕೊಂಡುಬಿಡುತ್ತಿದ್ದಳು.

ಆಕೆ ದಿನಾಲು ಕೇಳುವ ಮೊದಲ ಪ್ರಶ್ನೆ ಎಂದರೆ ‘ಅಮ್ಮಿ ಯಾವಾಗ ಬರ್ತಾಳೆ’ ಅಂತ. ನಾನು ಆವಾಗ ಬರ್ತಾಳೆ, ಈವಾಗ ಬರ್ತಾಳೆ ಅಂತ ಹೇಳುತ್ತಾ ಹೇಗೋ ಸಮಾಧಾನ ಮಾಡ್ತಿದ್ದೆ. ‘ನಾನು ಮಾಡಿದ ತಪ್ಪಿಗೆ ಅಮ್ಮಿನ ಯಾಕೆ ಕರ್ಕೊಂಡು ಹೋಗಿದ್ದಾರೆ’ ಅಂತ ಮತ್ತೆ ಮತ್ತೆ ಕೇಳುತ್ತಿದ್ದಳು. ಈಗ ಕೆಲವು ದಿನಗಳಿಂದ ಆಕೆ ಶಾಲೆಗೂ ಬಂದಿಲ್ಲ. ಇವತ್ತಿನಿಂದ ಪರೀಕ್ಷೆಗಳು ಶುರುವಾಗಿವೆ. ಆಕೆ ಪರೀಕ್ಷೆಯನ್ನೂ ಬರೆಯುತ್ತಿಲ್ಲ. ದಯವಿಟ್ಟು ಏನಾದ್ರೂ ಮಾಡಿ ನಜ್ಬುನ್ನಿಸಾಳ ಬಿಡುಗಡೆಗೆ ಸಹಾಯ ಮಾಡಿ. ನಮಗೂ ಆಯೇಶಾಳ ಸ್ಥಿತಿಯನ್ನು ನೋಡೋಕೆ ಆಗ್ತಿಲ್ಲ,” ಎಂದು ಆಯೇಶಾಳ ಕ್ಲಾಸ್ ಟೀಚರ್ ಆಸ್ಮಾ ತರನ್ನುಮ್ ಹೇಳಿದ್ರು.

ಸೀದಾ ಜೈಲಿಗೆ ಹೋಗಿ ನಜ್ಬುನ್ನೀಸಾಳನ್ನೂ ಮಾತಾಡಿಸಿದೆ. “ನಾನೇನೂ ಆಯೇಶಾಳಿಗೆ ಇಂತಹ ಡೈಲಾಗನ್ನೇ ಹೇಳು ಅಂತ ಏನೂ ಹೇಳಿಕೊಟ್ಟಿರಲಿಲ್ಲ. ಜ್ಯೂತೆಸೆ ಮಾರುಂಗಿ ಎಂಬುದು ನಾವು ಆಡುಭಾಷೆಯಲ್ಲಿ, ಸಣ್ಣಪುಟ್ಟ ವಿಷಯಗಳಿಗೂ ಬಳಸುತ್ತೇವೆ. ನಾನು ಎಂದಾದರೂ ಆ ರೀತಿ ಬೈದಿದ್ದನ್ನು ನೋಡಿ ಆಯೇಶಾ ಅದನ್ನು ನಾಟಕದಲ್ಲಿ ಬಳಸಿರಬಹುದು ಅನ್ನಿಸುತ್ತದೆ. ಅದನ್ನೇ ಇಷ್ಟೊಂದು ರಾದ್ಧಾಂತ ಮಾಡೋ ಅವಶ್ಯಕತೆ ಇತ್ತಾ? ಆಯೇಶಾಳ ಓದು, ಭವಿಷ್ಯದ ಬಗ್ಗೆ ಏನೇನೋ ಕನಸು ಕಟ್ಟಿಕೊಂಡು ಬಂದಿದ್ದೆವು. ಬಂದ ನಾಲ್ಕೇ ತಿಂಗಳಲ್ಲಿ ಹೀಗೆಲ್ಲಾ ಆಗಿಹೋಯ್ತು. ನಂಗೆ ಆಯೇಶಾಳದ್ದೇ ಚಿಂತೆ. ಹೇಗಿದ್ದಾಳೋ, ಏನು ಮಾಡುತ್ತಿದ್ದಾಳೋ… ಸಬ್ ಅಲ್ಲಾ ಕಿ ಮರ್ಜಿ…” ಅಂತ ಹೇಳಿದಳು.

ಶಾಹಿನ್ ಶಾಲೆಯಲ್ಲಿ ಪದೇ ಪದೇ ಪೊಲೀಸರ ವಿಚಾರಣೆಗೆ ಒಳಗಾದ ಇಬ್ಬರು ವಿದ್ಯಾರ್ಥಿಗಳನ್ನೂ ಮಾತಾಡಿಸಿದೆ. ಅದರಲ್ಲಿ ಉತ್ತರ ಪ್ರದೇಶ ಮೂಲದ, ವಯಸ್ಸಿನಲ್ಲಿ ಸ್ವಲ್ಪ ದೊಡ್ಡವನಾದ ಒಬ್ಬ ವಿದ್ಯಾರ್ಥಿ ಮಾತ್ರ ‘ನನಗೆ ಪೊಲೀಸರ ವಿಚಾರಣೆಯಿಂದ ಹೆದರಿಕೆ ಆಗಲಿಲ್ಲ’ ಎಂದ. ಇನ್ನೊಬ್ಬ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿ, ವಯಸ್ಸಿನಲ್ಲಿ ಸ್ವಲ್ಪ ಸಣ್ಣವನು ಮಾತ್ರ ಬಹಳ ಹೆದರಿದ್ದಾಗಿ ಹೇಳಿದ.

“ಪೊಲೀಸರು ಎದೆಯ ಮೇಲೆಯೇ ನುಗ್ಗಿದಂತೆ ಬರುವ ರೀತಿ, ಅವರು ಪ್ರಶ್ನೆ ಕೇಳುವ ಶೈಲಿ, ನಮ್ಮನ್ನು ದಿಟ್ಟಿಸಿ ನೋಡುವ ರೀತಿ – ಎಲ್ಲವೂ ಭಯ ಹುಟ್ಟಿಸುತ್ತಿದ್ದವು. ಎರಡು ದಿನ ಬಹಳ ಹೆದರಿಕೆಯಾಗಿತ್ತು. ನಂತರ ಮೇಸ್ಟ್ರು ಸ್ವಲ್ಪ ಧೈರ್ಯ ಹೇಳಿದ ಮೇಲೆ ಸ್ವಲ್ಪ ಧೈರ್ಯ ಬಂತು,” ಎಂದು ಹೇಳಿದ ಆ ಪುಟ್ಟ ಬಾಲಕ.

“ಪ್ರಧಾನಮಂತ್ರಿ ನರೇಂದ್ರ ಮೋದಿಗೆ ವಿರೋಧ ಪಕ್ಷದ ನಾಯಕರು ಪಾರ್ಲಿಮೆಂಟಿನಲ್ಲೇ ಚೋರ್ (ಕಳ್ಳ) ಅಂತ ಕರೀತಾರೆ. ಕೆಲವು ಟೀವಿ ಚಾನೆಲ್ಲುಗಳ ಕಾರ್ಯಕ್ರಮಗಳಂತೂ ಮೋದಿಯನ್ನೂ ಒಳಗೊಂಡಂತೆ ಎಲ್ಲಾ ರಾಜಕೀಯ ನಾಯಕರನ್ನು ಎಷ್ಟೊಂದು ಅವಮಾನ, ಅಪಹಾಸ್ಯ ಮಾಡುತ್ತವೆ. ಅವುಗಳಿಗೆಲ್ಲಾ ಹೋಲಿಸಿದರೆ ನಮ್ಮ ಮಕ್ಕಳು ಒಂದು ವಿಡಂಬನಾತ್ಮಕ ನಾಟಕದಲ್ಲಿ ಆಡಿರುವ ಮಾತುಗಳು ಏನೂ ಅಲ್ಲ.

ಆದರೂ ನಮ್ಮ ಸಂಸ್ಥೆಯ ಮೇಲೆ ದೇಶದ್ರೋಹದಂತ ಗಂಭೀರ ಪ್ರಕರಣ ದಾಖಲಿಸಲಾಗಿದೆ. ಒಂದು ಮಾನನಷ್ಟ ಮೊಕದ್ದಮೆ ದಾಖಲಿಸಲೂ ಯೋಗ್ಯವಲ್ಲದ ಡೈಲಾಗುಗಳು ಅವು. ಕಾರ್ಯಾಂಗ ವಿಫಲವಾದಾಗ ಇಂತಹ ಅವಘಡಗಳು ನಡೆಯುತ್ತವೆ. ಪೊಲೀಸರಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ ಅಂತ ಕಾಣುತ್ತೆ. ಅದಕ್ಕೆ ಇಂತಹ ಚಿಕ್ಕಪುಟ್ಟ ವಿಷಯವನ್ನು ಇಷ್ಟೊಂದು ದೊಡ್ಡ ರಾದ್ಧಾಂತ ಮಾಡುತ್ತಿದ್ದಾರೆ,” ಎನ್ನುತ್ತಾರೆ ಶಾಹೀನ್ ಸಂಸ್ಥೆಯ ತೌಸೀಫ್ ಮಡಿಕೇರಿ.

ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಏನು ಹೇಳ್ತಾರೆ ಕೇಳೋಣ ಅಂತ ಎಸ್ಪಿ ಆಫೀಸಿಗೆ ಹೋದೆ. ಈ ಪ್ರಕರಣ ದಾಖಲಾದಾಗ ಎಸ್ಪಿಯಾಗಿ ಇದ್ದವರು ಶ್ರೀಧರ್. ಈಗ ಅವರು ವರ್ಗಾವಣೆಯಾಗಿ ಹೋಗಿ ನಾಗೇಶ್ ಡಿ.ಎಲ್. ಎಂಬುವವರು ಆ ಸ್ಥಾನಕ್ಕೆ ಬಂದಿದ್ದಾರೆ. ಇದು ಎಸ್ಪಿಯಾಗಿ ಅವರಿಗೆ ಮೊದಲ ಪೋಸ್ಟಿಂಗ್ ಅನ್ನಿಸುತ್ತದೆ.

ಅವರನ್ನು ಭೇಟಿಯಾಗಿ ಇಂತಹದ್ದೊಂದು ವಿಡಂಬನಾ ನಾಟಕದಲ್ಲಿ ಮಕ್ಕಳು ಆಡಿರುವ ಡೈಲಾಲ್ ಅನ್ನು ಮುಂದಿಟ್ಟುಕೊಂಡು ದೇಶದ್ರೋಹ ಪ್ರಕರಣ ದಾಖಲಿಸುವ ಅಗತ್ಯವಿತ್ತಾ? ನಾಟಕದಲ್ಲಿನ ಮಕ್ಕಳ ಡೈಲಾಗುಗಳು ನಿಜಕ್ಕೂ ದೇಶದ್ರೋಹಕ್ಕೆ ಸಮ ಅನ್ನಿಸುತ್ತಾ? ಪ್ರಕರಣ ದಾಖಲಾದ ಮೇಲೆ ಶಾಲೆಗೆ ಹೋಗಿ ಐದು ಬಾರಿ ಮಕ್ಕಳನ್ನು ವಿಚಾರಣೆ ಮಾಡುವ ಅಗತ್ಯವಿತ್ತಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದೆ.

ಅದು ನಿಜಕ್ಕೂ ದೇಶದ್ರೋಹವಾಗುತ್ತಾ ಇಲ್ಲವಾ ಎಂಬುದರ ಬಗ್ಗೆ ಅವರೇನೂ ಹೆಚ್ಚು ಮಾತಾಡಲಿಲ್ಲ. ವಿಚಾರಣೆಯಲ್ಲಿ ನೋಡೋಣ ಏನು ಬರುತ್ತೋ ಅಂತ ಅಂದರು. ಆದರೆ, ಶಾಲೆಗೆ ಹೋಗಿ ವಿಚಾರಣೆ ಮಾಡಿದ್ದರ ಬಗ್ಗೆ ಮಾತಾಡಿ ಅಷ್ಟು ಸಲ ಶಾಲೆಗೆ ಹೋಗಿ ವಿಚಾರಣೆ ಮಾಡುವ ಅಗತ್ಯವಿರಲಿಲ್ಲ ಎನ್ನುವ ಮೂಲಕ ಅಷ್ಟರ ಮಟ್ಟಿಗೆ ಪ್ರಾಮಾಣಿಕತೆಯನ್ನು ತೋರಿದರು.

“ವೈಯಕ್ತಿಕವಾಗಿ ನನಗನ್ನಿಸುವುದೇನೆಂದರೆ ಪದೇ ಪದೇ ಶಾಲೆಗೆ ಹೋಗಿ ವಿಚಾರಣೆ ನಡೆಸುವ ಅಗತ್ಯ ಇರಲಿಲ್ಲ. ಪ್ರಾಯಶಃ ವಿಚಾರಣಾಧಿಕಾರಿಗೆ ಒಮ್ಮೆ ಹೋದಾಗಲೇ ಎಲ್ಲಾ ಮಕ್ಕಳು ವಿಚಾರಣೆಗೆ ಸಿಕ್ಕಿರಲಿಕ್ಕಿಲ್ಲ ಅಥವಾ ಎಲ್ಲರನ್ನೂ ಒಂದೇ ದಿನ ವಿಚಾರಣೆ ಮಾಡುವುದಕ್ಕೆ ಆಗಿರಲಿಕ್ಕಿಲ್ಲ. ಹಾಗಾಗಿ ಮತ್ತೆ ಮತ್ತೆ ಹೋಗಬೇಕಾಗಿ ಬಂದಿರಬಹುದು. ಒಂದೇ ಮಗುವನ್ನು ಹಲವು ಬಾರಿ ವಿಚಾರಣೆ ನಡೆಸಿದ್ದು ಬಳಹ ಕಡಿಮೆ ಪ್ರತೀ ದಿನ ಬೇರೆ ಬೇರೆ ಮಕ್ಕಳನ್ನು ವಿಚಾರಣೆ ಮಾಡಲಾಗಿದೆ,” ಎಂದರು.

ಆಯೇಶಾಳನ್ನು ಭೇಟಿಯಾಗುವುದಕ್ಕೆ ಅವಕಾಶ ಇರಲಿಲ್ಲ. ಮಾಧ್ಯಮದವರು, ಇನ್ನಿತರ ಸಂಘಸಂಸ್ಥೆಗಳು ಮತ್ತು ಹೊರಗಿನವರು ಯಾರೂ ಆಕೆಯನ್ನು ಭೇಟಿಯಾಗುವುದಕ್ಕೆ ಅವಕಾಶ ಕೊಡಬಾರಂದೆಂದು ಮಕ್ಕಳ ಹಿತರಕ್ಷಣಾ ಸಮಿತಿ ಶಾಲೆಗೆ ತಿಳಿಸಿದೆ. ಹಾಗಾಗಿ, ಆಯೇಶಾ ಭೇಟಿ ಸಾಧ್ಯವಾಗಲಿಲ್ಲ.

ಆದರೆ, ಫೋನಿನಲ್ಲಿ ಸಿಕ್ಕಳು. ಅವಳ ತಾಯಿಯನ್ನು ನ್ಯಾಯಾಲಯದಲ್ಲಿ ಭೇಟಿಯಾಗಿದ್ದನ್ನು ಮತ್ತೆ ಜೈಲಿಗೆ ಹೋಗಿ ಭೇಟಿಯಾಗಲಿರುವುದನ್ನು ಹೇಳಿದೆ. ನಾನೂ ಭೇಟಿಯಾಗಬೇಕು ಎಂದಳು. ಅಮ್ಮನನ್ನು ನೋಡಬೇಕು ಎಂದಳು. ಏನು ಹೇಳಬೇಕು ಎಂಬುದು ತಿಳಿದಯದೇ ನನಗೆ ತೋಚಿದ ರೀತಿಯಲ್ಲಿ ಒಂದಿಷ್ಟು ಸಮಾಧಾನ ಮಾಡಿ ಫೋನ್ ಕಟ್ ಮಾಡಿದೆ.

ಅಂದಹಾಗೆ, ಬಂಧಿತರಾಗಿರುವ ನಜ್ಬುನ್ನಿಸಾ ಮತ್ತು ಫರೀದಾ ಬೇಗಂ ಅವರಿಗೆ ಮಧ್ಯಂತರ ಜಾಮೀನು ಕೊಡಬೇಕೆಂದು ಸಲ್ಲಿಸಿರುವ ಅರ್ಜಿ ಹಾಗೂ ಶಾಹೀನ್ ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ಖದೀರ್ ಮತ್ತು ಇತರ ಐವರು ಮ್ಯಾನೇಜ್ಮೆಂಟ್ ಸದಸ್ಯರನ್ನು ಬಂಧಿಸಬಾರದು ಎಂದು ಸಲ್ಲಿಸಿರುವ ನಿರೀಕ್ಷಣಾ ಜಾಮೀನಿನ ಅರ್ಜಿ ನ್ಯಾಯಾಲಯದ ಮುಂದೆ ಇಂದು ವಿಚಾರಣೆಗೆ ಬರುತ್ತಿವೆ. ಬೀದರ್ ರಾಜದ್ರೋಹ ಪ್ರಕರಣದ ಬಲಿಪಶುಗಳಿಗೆ ಒಳ್ಳೆಯದಾಗಲಿ ಎಂದು ನೀವೂ ಹಾರೈಸಿ.

(ಈ ಕುರಿತು ದಿ ಹಿಂದೂ ಪತ್ರಿಯಲ್ಲಿ ನನ್ನದೊಂದು ವರದಿ ಇದೆ. ಆಸಕ್ತರು ಓದಿಕೊಳ್ಳಬಹುದು – ಕುಮಾರ ಬುರಡಿಕಟ್ಟಿ )

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending