ಬಹಿರಂಗ
ಬೀದರ್ ದೇಶದ್ರೋಹ ಪ್ರಕರಣದ ಸುತ್ತ ಮುತ್ತ
- ಕುಮಾರ ಬುರಡಿಕಟ್ಟಿ
ಬೀದರ್ನ ಶಾಹೀನ್ ಶಾಲೆಯ ಮೇಲೆ ಹಾಗೂ ಮೈಸೂರಿನ ವಿದ್ಯಾರ್ಥಿನಿಯ ಮೇಲೆ ಹಾಕಲಾದ ದೇಶದ್ರೋಹ ಪ್ರಕರಣಗಳು ಸಧ್ಯಕ್ಕೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ ಹೇಗೆ ದುರ್ಬಳಕೆಯಾಗುತ್ತಿದೆ ಎಂಬುದಕ್ಕೆ ಇತ್ತೀಚಿನ ಜೀವಂತ ಪ್ರತಿಮೆಗಳಾಗಿ ನಿಂತಿವೆ.
ಬೀದರ್ ಪ್ರಕರಣವನ್ನು ತುಸು ಹತ್ತಿರದಿಂದಲೇ ನೋಡುತ್ತಾ ವರದಿ ಮಾಡುತ್ತಿರುವುದರಿಂದ ಹಾಗೂ ನಿನ್ನೆ (ಸೋಮವಾರ) ಬೀದರ್ಗೆ ಹೋಗಿ ಇಡೀ ದಿನ ಆ ಪ್ರಕರಣದ ಬಲಿಪಶುಗಳನ್ನು ಮಾತಾಡಿಸಿದ ನಂತರ ನನಗೆ ಕಂಡ ಒಂದಿಷ್ಟು ಬಿಡಿಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವೆ.
ಕಳೆದ ಜನವರಿ 21ರಂದು ಬೀದರ್ನ ಪ್ರತಿಷ್ಠಿತ ಶಾಹೀನ್ ಸ್ಕೂಲಿನಲ್ಲಿ ವಾರ್ಷಿಕೋತ್ಸವ ಸಮಾರಂಭವಿತ್ತು. ವಿದ್ಯಾರ್ಥಿಗಳು ವಿಭಿನ್ನ ರೀತಿಯ, ಸೃಜನಶೀಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಅಂತಹ ಕಾರ್ಯಕ್ರಮಗಳಲ್ಲಿ ಆರನೇ ತರಗತಿಯ ಮಕ್ಕಳು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಕುರಿತು ಪ್ರದರ್ಶಿಸಿದ ಕಿರುನಾಟಕ ಕೂಡ ಒಂದು.
ಈ ನಾಟಕದಲ್ಲಿ ಕೆಲವು ಪಾತ್ರಗಳು ಎನ್ಆರ್ಸಿ ಕುರಿತು ಚರ್ಚೆ ಮಾಡುತ್ತವೆ. “ಸತ್ತು ಗೋರಿಯಲ್ಲಿರುವ ನನ್ನ ಅಜ್ಜ, ಮುತ್ತಜ್ಜನ ದಾಖಲೆಗಳನ್ನು ಕೇಳಿದರೆ ನಾನೆಲ್ಲಿಂದ ತಂದುಕೊಡಲಿ?” “ಏನೇ ಆದ್ರೂ ನಾನಂತೂ ನನ್ನ ಪೌರತ್ವ ಸಾಬೀತು ಪಡಿಸಲು ದಾಖಲೆ ಕೊಡಲ್ಲ”, “ನನ್ನ ದಾಖಲೆಗಳನ್ನು ಕೇಳಲು ಬಂದರೆ ಚಪ್ಪಲಿಯಿಂದ ಹೊಡೆಯುತ್ತೇನೆ” ಎಂಬಿತ್ಯಾದಿ ಮಾತುಗಳನ್ನು ಒಂದೊಂದು ಪಾತ್ರ ಆಡುತ್ತದೆ. ಈ ಕೊನೆಯ ಡೈಲಾಗನ್ನು ಹೇಳಿದ್ದು ಆಯೇಷಾ (ಹೆಸರನ್ನು ಬದಲಾಯಿಸಲಾಗಿದೆ) ಎಂಬ ಹನ್ನೊಂದು ವರ್ಷದ ಹುಡುಗಿ.
ಸೂಕ್ಷ್ಮವಾಗಿ ನೋಡಿದರೆ ಇದೊಂದು ವಿಡಂಬನಾತ್ಮಕ ನಾಟಕ. ಚಪ್ಪಲಿಯಿಂದ ಹೊಡೆಯುತ್ತೇನೆ ಎಂಬುದು ಉರ್ದು/ ಹಿಂದಿ ಭಾಷೆಯಲ್ಲಿ ಜನಸಾಮಾನ್ಯರು ಬಹಳ ಸಲೀಸಾಗಿ, ಮಾಮೂಲಿಯಾಗಿ ಸಣ್ಣಪುಟ್ಟ ವಿಷಯಕ್ಕೆಲ್ಲಾ ಆಡುವ ಮಾತು (ಜ್ಯೂತೆ ಸೆ ಮಾರುಂಗ). ಅದರೆ ಇಲ್ಲಿ ಆ ಡೈಲಾಗೇ ಬಹಳ ಜನರಿಗೆ ಮುಳುವಾಗಿ ಪರಿಣಮಿಸಿದೆ.
ಈ ನಾಟಕದ ವೀಡಿಯೋ ತುಣುಕೊಂದನ್ನು ಮೊಹಮ್ಮದ್ ಯೂಸೂಫ್ ಎಂಬ ಸ್ಥಳೀಯ ಉರ್ದು ಪತ್ರಿಕೆಯ ವರದಿಗಾರನೊಬ್ಬ ಫೇಸ್ಬುಕ್ಕಿನಲ್ಲಿ ಪೋಸ್ಟ್ ಮಾಡುತ್ತಾನೆ. ಇದು ನೀಲೇಶ್ ರಕ್ಷ್ಯಾಳ್ ಎಂಬ ಬಲಪಂಥೀಯ ವ್ಯಕ್ತಿಯೊಬ್ಬನ ಗಮನಕ್ಕೆ ಬರುತ್ತದೆ. ಆತ ಈ ನಾಟಕದಲ್ಲಿರುವ ಸಂಭಾಷಣೆಗಳು, ಅದರಲ್ಲೂ ವಿಶೇಷವಾಗಿ “ಚಪ್ಪಲಿಯಿಂದ ಹೊಡೆಯುತ್ತೇನೆ” ಎನ್ನುವ ಡೈಲಾಗು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮಾಡಿದ ಅವಮಾನ ಎಂಬುದಾಗಿ ಹಾಗೂ ಅದೊಂದು ದೇಶದ್ರೋಹದ ಕೃತ್ಯ ಎಂಬುದಾಗಿ ಆರೋಪಿಸಿ ಈ ನಾಟಕ ಪ್ರದರ್ಶನ ಮಾಡಿದ ಶಾಹೀನ್ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೀದರ್ನ ನ್ಯೂಟೌನ್ ಪೊಲೀಸ್ ಸ್ಟೇಷನ್ನಿನಲ್ಲಿ ಜನವರಿ 26ರಂದು ದೂರು ದಾಖಲಿಸುತ್ತಾನೆ.
ಇದನ್ನು ಆಧರಿಸಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿಭಂಗ ಮಾಡುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 124ಎ (ದೇಶದ್ರೋಹ) ಮತ್ತು ಇತರ ಸೆಕ್ಷನ್ನುಗಳ ಅಡಿಯಲ್ಲಿ ಶಾಹಿನ್ ಸಂಸ್ಥೆಯ ಅಧ್ಯಕ್ಷ, ಆಡಳಿತ ಮಂಡಳಿ ಮತ್ತು ಮೊಹಮ್ಮದ್ ಯೂಸೂಫ್ ಮೇಲೆ ಪ್ರಕರಣ ದಾಖಲಿಸುತ್ತಾರೆ.
ಮರುದಿನದಿಂದಲೇ ಪೊಲೀಸರು ಶಾಲೆಗೆ ಬಂದು ಪ್ರಕರಣದ ವಿಚಾರಣೆ ಶುರು ಮಾಡುತ್ತಾರೆ. ಶಾಲೆಯ ಸಿಸಿಟೀವಿ ಕ್ಯಾಮೆರಾದ ದೃಶ್ಯಗಳನ್ನು ವಶಪಡಿಸಿಕೊಳ್ಳುತ್ತಾರೆ. ಶಾಲೆಯ ಶಿಕ್ಷಕರು ಮತ್ತು ಇತರ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸುತ್ತಾರೆ.
ಮರುದಿನ, ಅಂದರೆ ಜನವರಿ 28ನೇ ತಾರೀಖು ಡಿವೈಎಸ್ಪಿ ಬಸವೇಶ್ವರ ಹೀರಾ ನೇತೃತ್ವದಲ್ಲಿ ಸಮವಸ್ತ್ರದಲ್ಲೇ ಬರುವ ಪೊಲೀಸರು ಸುಮಾರು 46 ಮಕ್ಕಳನ್ನು ವಿಚಾರಣೆಗೊಳಪಡಿಸುತ್ತಾರೆ. ಮಕ್ಕಳನ್ನು ವಿಚಾರಣೆಗೆ ಒಳಪಡಿಸುವಾಗ ಪೊಲೀಸರು ಸಮವಸ್ತ್ರದಲ್ಲಿರಬಾರದು ಹಾಗೂ ಮಕ್ಕಳ ಹಿತರಕ್ಷಣಾ ಸಮಿತಿಯ ಸದಸ್ಯರು ಜೊತೆಯಲ್ಲಿರಬೇಕು ಎಂಬ ಕನಿಷ್ಠ ಜ್ಞಾನವನ್ನೂ ಹೊಂದಿರದ ಬೀದರ್ ಪೊಲೀಸರು ಈ ಬಾಲನ್ಯಾಯ ನಿಯಮಗಳನ್ನು ಗಾಳಿಗೆ ತೂರುತ್ತಾರೆ.
ಸಮವಸ್ತ್ರಧಾರಿ ಪೊಲೀಸರು ಪುಟ್ಟ ಪುಟ್ಟ ಮಕ್ಕಳನ್ನು ವಿಚಾರಣೆಗೊಳಪಡಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಾದ್ಯಂತ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಬೀದರ್ ಪೊಲೀಸರು ಮರುದಿನ ಶಾಲೆಗೆ ಸಿವಿಲ್ ಡ್ರೆಸ್ಸಿನಲ್ಲಿ ಬರುತ್ತಾರೆ. ಆದರೆ ಆವತ್ತು ಯಾವ ಮಕ್ಕಳನ್ನೂ ವಿಚಾರಣೆಗೆ ಒಡಪಡಿಸದೇ ಕೇವಲ ಸಿಬ್ಬಂದಿಯನ್ನು ವಿಚಾರಣೆ ಮಾಡಿ ಹಿಂತಿರುಗುತ್ತಾರೆ.
ಅದರ ಮರುದಿನ, ಅಂದರೆ, ಜನವರಿ 29ರಂದು ಮತ್ತೆ ಸಿವಿಲ್ ಡ್ರೆಸ್ಸಿನಲ್ಲಿ ಬರುವ ಪೊಲೀಸರು ತಮ್ಮೊಂದಿಗೆ ಮಕ್ಕಳ ಹಿತರಕ್ಷಣಾ ಸಮಿತಿಯ ಇಬ್ಬರು ಮಹಿಳಾ ಸದಸ್ಯರನ್ನು ಕರೆದುಕೊಂಡು ಬಂದಿರುತ್ತಾರೆ. ಈ ಬಾರಿ ಅವರು ಮತ್ತೆ ಮಕ್ಕಳನ್ನು ವಿಚಾರಣೆಗೆ ಒಳಪಡಿಸುತ್ತಾರೆ. ಈ ಬಾರಿ ಅವರು ಸುಮಾರು ಮೂರು ತಾಸು ವಿಚಾರಣೆ ಮಾಡುತ್ತಾರೆ.
ಪ್ರತೀ ವಿಚಾರಣೆಯ ಸಮಯದಲ್ಲೂ ನಾಟಕದಲ್ಲಿ “ಚಪ್ಪಲಿಯಿಂದ ಹೊಡೆಯುತ್ತೇನೆ” ಎಂಬ ಡೈಲಾಗ್ ಹೇಳಿದ ಆರನೆಯ ತರಗತಿಯ ಆಯೇಶಾಳನ್ನೇ ತೀವ್ರವಾಗಿ ವಿಚಾರಣೆ ಮಾಡುತ್ತಾರೆ. ವಿಚಾರಣೆಯ ಸಮಯದಲ್ಲಿ ಆ ಹುಡುಗಿ ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ಆ ಡೈಲಾಗನ್ನು ತನ್ನ ತಾಯಿ ಹೇಳಿಕೊಟ್ಟಿರುವುದಾಗಿ ಹೇಳುತ್ತಾಳೆ.
ಅದನ್ನೇ ಆಧಾರವಾಗಿಟ್ಟುಕೊಂಡ ಪೊಲೀಸರು ಮಾರನೆಯ ದಿನ, ಅಂದರೆ ಜನವರಿ 30ರಂದು ಮತ್ತೆ ಶಾಲೆಗೆ ಬಂದು ಸಿಬ್ಬಂದಿಯನ್ನು ವಿಚಾರಣೆ ಮಾಡುತ್ತಾರೆ. ಈ ಸಮಯದಲ್ಲಿ ಆ ನಾಟಕ ಪ್ರದರ್ಶನದ ಉಸ್ತುವಾರಿ ವಹಿಸಿದ್ದು ಶಾಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಎಂಬುದನ್ನು ಕಂಡುಕೊಳ್ಳುತ್ತಾರೆ.
ಆಯೇಶಾಳ ಹೇಳಿಕೆ ಆಧಾರದಲ್ಲಿ ಆಕೆಯ ತಾಯಿ ನಜ್ಬುನ್ನೀಸಾಳನ್ನು ಹಾಗೂ ಶಾಲೆಯ ಸಿಬ್ಬಂದಿಯ ಹೇಳಿಕೆಯ ಆಧಾರದಲ್ಲಿ ನಾಟಕದ ಉಸ್ತುವಾರಿ ನೋಡಿಕೊಂಡಿದ್ದ ಮುಖ್ಯಶಿಕ್ಷಕಿ ಫರಿದಾ ಬೇಗಂ ಅವರನ್ನು ಸುಮಾರು ಮಧ್ಯಾಹ್ನ 4 ಗಂಟೆಯ ಹೊತ್ತಿಗೆ ಬಂಧಿಸಿ ಕರೆದೊಯ್ಯುತ್ತಾರೆ.
ಮಾರನೆಯ ದಿನ, ಅಂದರೆ ಜನವರಿ 31ನೇ ತಾರೀಖಿನಂದು ಮತ್ತೆ ಶಾಲೆಗೆ ಬರುವ ಪೊಲೀಸರು ಕೆಲವು ಮಕ್ಕಳ ಪಟ್ಟಿಯನ್ನು ಕೊಟ್ಟು ಅವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬರುವಂತೆ ಒತ್ತಾಯಿಸುತ್ತಾರೆ. ಆದರೆ ಅದಕ್ಕೆ ಶಾಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತೌಸೀಫ್ ಮಡಿಕೇರಿ ಖಂಡಿತ ಒಪ್ಪುವುದಿಲ್ಲ. ಅಷ್ಟೊತ್ತಿಗಾಗಲೇ ಬೀದರ್ ದೇಶದ್ರೋಹದ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿರುತ್ತದೆ.
ಪೊಲೀಸರು ಸಮವಸ್ತ್ರದಲ್ಲೇ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ್ದಕ್ಕೆ ತೀವ್ರ ವೀರೋಧ ವ್ಯಕ್ತವಾಗಿದ್ದು ಮಾತ್ರವಲ್ಲದೇ ರಾಷ್ಟ್ರೀಯ ಮತ್ತು ರಾಜ್ಯ ಮಾನವ/ಮಕ್ಕಳ ಹಕ್ಕುಗಳ ಸಂಸ್ಥೆಗಳು ಶಾಲೆಯನ್ನು, ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿರುತ್ತವೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಪೊಲೀಸ್ ಠಾಣೆಗೆ ಕಳಿಸಿಕೊಡಲು ಶಾಲೆಯ ಆಡಳಿತ ಮಂಡಳಿ ಸುತಾರಾಂ ಒಪ್ಪುವುದಿಲ್ಲ. ಈ ವಿಷಯದಲ್ಲಿ ಪೊಲೀಸರಿಗೂ ಮತ್ತು ಶಾಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತೌಸಿಫ್ ಮಡಿಕೇರಿ ನಡುವೆ ಸಣ್ಣದೊಂದು ಮಾತಿನ ಚಕಮಕಿಯೂ ನಡೆಯುತ್ತದೆ.
ಬಾಲ ನ್ಯಾಯ ವ್ಯವಸ್ಥೆಯ ಬಗ್ಗೆ ತನಗೆ ಪಾಠ ಮಾಡಬೇಡ ಎಂದು ವಿಚಾರಣಾಧಿಕಾರಿ ಡಿವೈಎಸ್ಪಿ ಬಸವೇಶ್ವರ ಹೀರಾ ಅವರು ತೌಸಿಫ್ ಮಡಿಕೇರಿಗೆ ಧಮಕಿಯನ್ನೂ ಹಾಕುತ್ತಾರೆ. ಇಷ್ಟೆಲ್ಲಾ ಆದರೂ ಮಕ್ಕಳನ್ನು ಪೊಲೀಸ್ ಸ್ಟೇಷನ್ನಿಗೆ ಕಳಿಸಿಕೊಡಲು ಶಾಲೆಯ ಆಡಳಿತ ಮಂಡಳಿ ಒಪ್ಪದಿದ್ದುದರಿಂದ ಅನಿವಾರ್ಯವಾಗಿ ಶಾಲೆಯಲ್ಲೇ ವಿಚಾರಣೆ ಮಾಡುತ್ತಾರೆ.
ನಂತರ ಫೆಬ್ರವರಿ 1, 3 ಮತ್ತು 4ನೇ ತಾರೀಖಿನಂದು ಮತ್ತೆ ಮತ್ತೆ ಶಾಲೆಗೆ ಬಂದು ವಿದ್ಯಾರ್ಥಿಗಳನ್ನು ವಿಚಾರಣೆ ಮಾಡುತ್ತಾರೆ. ಹೀಗೆ, ಪೊಲೀಸರು ಒಟ್ಟು ಐದು ಬಾರಿ ಮಕ್ಕಳನ್ನು ವಿಚಾರಣೆಗೆ ಒಳಪಡಿಸುತ್ತಾರೆ. ವಿಚಾರಣೆಗೆ ಒಳಗಾದ ಒಟ್ಟು ಮಕ್ಕಳ ಸಂಖ್ಯೆ ಸುಮಾರು 80. ನಾಟಕದಲ್ಲಿ ಪಾತ್ರಗಳನ್ನು ಮಾಡಿದ ಮಕ್ಕಳನ್ನಂತೂ ಪೊಲೀಸರು ಪದೇಪದೇ ವಿಚಾರಣೆಗೆ ಒಳಪಡಿಸಿದರೆ ಉಳಿದ ಮಕ್ಕಳನ್ನು ಒಂದೆರಡು ಬಾರಿ ಮಾತ್ರ ವಿಚಾರಣೆ ಮಾಡುತ್ತಾರೆ.
ಈ ನಾಟಕದ ಸ್ಕ್ರಿಪ್ಟ್ ಬರೆದದ್ದು ಯಾರು? ಈ ನಾಟಕದ ಡೈಲಾಗ್ ಯಾರು ಹೇಳಿಕೊಟ್ಟರು? ಪ್ರಧಾನಮಂತ್ರಿ ಮುಸ್ಲೀಂ ಆಗಿದ್ರೆ ಹೀಗೆ ಚಪ್ಪಲಿಯಿಂದ ಹೊಡೆಯುತ್ತೇನೆ ಅಂತಿದ್ತಾ? ನಾಟಕದ ರಿಹರ್ಸಲ್ ಎಲ್ಲಿ ಮಾಡಿದ್ರಿ? ನೋಡೋದಕ್ಕೆ ತಂದೆತಾಯಿ ಬಂದಿದ್ರಾ? ಎಂಬಿತ್ಯಾದಿ ಪ್ರಶ್ನೆಗಳನ್ನೇ ಪ್ರತೀದಿನ ಕೇಳುತ್ತಿದ್ದರು. ಸಿಸಿಟೀವಿ ಕ್ಯಾಮೆರಾದ ಕವರೇಜ್ ಇಲ್ಲದ ಶಾಲಾ ಕಟ್ಟಡದ ಮೂಲೆಯ ಕೋಣೆಯೊಂದನ್ನು ಅವರು ವಿಚಾರಣೆಗಾಗಿ ಆಯ್ಕೆ ಮಾಡಿಕೊಂಡಿದ್ದರು. ಫೆಬ್ರುವರಿ 4ನೇ ತಾರೀಖಿನ ನಂತರ ಪೊಲೀಸರು ಮತ್ತೆ ಶಾಲೆಯ ಕಡೆ ಬಂದಿಲ್ಲವಂತೆ.
ಈ ಇಡೀ ಪ್ರಕರಣದಲ್ಲಿ ಅತಿ ಹೆಚ್ಚು ನೋವು ಅನುಭವಿಸಿದವರು ಮತ್ತು ಈಗಲೂ ಅನುಭವಿಸುತ್ತಿರುವವರು ಎಂದರೆ ನಜ್ಬುನ್ನಿಸಾ ಮತ್ತು ಅವಳ ಮಗಳು ಆಯೇಶಾ. ನಜ್ಬುನ್ನಿಸಾ ಬೀದರಿನಿಂದ ಸುಮಾರು ನಲ್ವತ್ತು ಕಿ.ಮೀ. ದೂರದಲ್ಲಿರುವ ಹಳ್ಳಿಕೇಡ್ ಗ್ರಾಮದವಳು. ಸುಮಾರು 27 ವರ್ಷ ಇರಬಹುದು. ಮಗಳು ಆಯೇಶಾಳಿಗೆ ಸುಮಾರು 11 ವರ್ಷ ಇರಬಹುದು. ಸುಮಾರು ಏಳು ವರ್ಷಗಳ ಹಿಂದೆಯೇ ಅವಳ ಗಂಡ ಕ್ಯಾನ್ಸರಿನಿಂದ ಬಳಲಿ ಅಸುನೀಗಿದ್ದಾನೆ. ಅಂದಿನಿಂದಲೂ ನಜ್ಬುನ್ನೀಸಾಳೇ ತನ್ನ ಮತ್ತು ತನ್ನ ಮಗಳ ಹೊಟ್ಟೆಪಾಡನ್ನು ನೋಡಿಕೊಳ್ಳುತ್ತಿರುವುದು.
ಶಾಹೀನ್ ಸಂಸ್ಥೆಯು ಹಳ್ಳಿಕೇಡದಲ್ಲೂ ಒಂದು ಪ್ರಾಥಮಿಕ ಶಾಲೆಯನ್ನು ನಡೆಸುತ್ತಿದೆ. ಅಲ್ಲಿ ಶಿಕ್ಷಕಿಯೊಬ್ಬಳ ಮಗಳು ಮುಂದೆ ಬೀದರಿಗೆ ಬಂದು ಶಾಹೀನ್ ಸಂಸ್ಥೆಯ ಹೈಸ್ಕೂಲಿನಲ್ಲಿ, ಪಿಯೂಸಿ ಕಾಲೇಜಿನಲ್ಲಿ ಓದಿ ಸರ್ಕಾರಿ ಕೋಟದಡಿಯಲ್ಲಿ ಉಚಿತ ಮೆಡಿಕಲ್ ಸೀಟು ಪಡೆದಿರುತ್ತಾಳೆ. ಇಂತಹ ಒಂದೆರಡು ಉದಾಹರಣೆಗಳು ನಜ್ಬುನ್ನೀಸಾಳಲ್ಲೂ ತನ್ನ ಮಗಳ ಬಗ್ಗೆ ಆಸೆ, ಆಕಾಂಕ್ಷೆಗಳನ್ನು ಹುಟ್ಟಿಸಿರುತ್ತವೆ. ಆಯೇಶಾಳನ್ನೂ ಬೀದರಿನ ಶಾಹೀನ್ ಶಾಲೆಗೆ ಸೇರಿಸಿದರೆ ಅವಳೂ ಡಾಕ್ಟರ್ ಅಥವಾ ಎಂಜಿನೀಯರ್ ಆಗಬಹುದು ಎಂಬ ಕನಸುಗಳು ಆಕೆಯಲ್ಲಿ ಮೊಳೆಯುತ್ತವೆ. ಈ ಕನಸುಗಳೇ ಅವಳನ್ನು ಮಗಳ ಜೊತೆ ಹಳ್ಳಿಕೇಡ್ ತೊರೆದು ಬೀದರಿಗೆ ಬರುವುದಕ್ಕೆ ಪ್ರೇರೇಪಿಸುತ್ತವೆ.
ಈಗ್ಗೆ ನಾಲ್ಕೈದು ತಿಂಗಳ ಹಿಂದಷ್ಟೇ ಕಣ್ಣತುಂಬಾ ಕನಸು ಕಟ್ಟಿಕೊಂಡು ಆಯೇಶಾ ಜೊತೆ ಬೀದರಿಗೆ ಬಂದಿದ್ದ ನಜ್ಬುನ್ನಿಸಾ ಬೀದರಿನ ದುಡಿಯುವ ಜನ ವಾಸಿಸುವ ಏರಿಯಾದಲ್ಲಿ ಒಂದು ಸಣ್ಣ ರೂಮನ್ನು ಬಾಡಿಗೆಗೆ ಪಡೆದು ನೆಲೆಸುತ್ತಾಳೆ. ತಾನು ಅವರಿವರ ಮನೆಯಲ್ಲಿ ಮನೆಗೆಲಸ ಮಾಡಿಕೊಂಡಿದ್ದು ಮಗಳನ್ನು ತನ್ನ ಆಸೆಯಂತೆಯೇ ಶಾಹೀನ್ ಶಾಲೆಗೆ ಸೇರಿಸುತ್ತಾಳೆ.
ಅಸಲಿಗೆ ಶಾಹಿನ್ ಶಾಲೆ ಮುಸ್ಲಿಂ ಸಮುದಾಯದ ಶಾಲೆ ಎಂದೇ ಪರಿಚಿತವಾಗಿದ್ದರೂ ಇಲ್ಲಿ ಶೇಕಡ 50ರಷ್ಟು ಮುಸ್ಲೀಮೇತರ ಮಕ್ಕಳು ಕಲಿಯುತ್ತಿದ್ದಾರೆ. ಹಿಂದೂ, ಸಿಖ್, ಕ್ರಿಶ್ಚಿಯನ್, ಮುಸ್ಲಿಂ – ಎಲ್ಲಾ ಧರ್ಮದ ಬಡ ಮಕ್ಕಳಿಗೆ ಇಲ್ಲಿ ಪ್ರವೇಶ ಸಿಗುತ್ತದೆ. ಇದು ಒಳ್ಳೆಯ ಹೆಸರು ಮಾಡಿರುವ ಸಂಸ್ಥೆ. ದೇಶಾದ್ಯಂತ ಸುಮಾರು 40 ಕಡೆ ಈ ಸಂಸ್ಥೆಯ ಶಾಲೆಗಳಿವೆ. ಬೀದರ್ ಶಾಲೆಯೊಂದರಿಂದಲೇ ಕಳೆದ ವರ್ಷ 327 ವಿದ್ಯಾರ್ಥಿಗಳು ನೀಟ್ ಮೂಲಕ ಸರ್ಕಾರಿ ಕೋಟಾದಲ್ಲಿ ಉಚಿತ ಮೆಡಿಕಲ್ ಸೀಟುಗಳನ್ನು ಪಡೆದಿದ್ದಾರೆ.
ಇಂತಹ ಶಾಲೆಗೆ ಮಗಳನ್ನು ಸೇರಿಸಿ ಇನ್ನೂ ನಾಲ್ಕು ತಿಂಗಳು ತುಂಬುವ ಮೊದಲೇ ನಜ್ಬುನ್ನೀಸಾ ದೇಶದ್ರೋಹದ ಆರೋಪ ಹೊತ್ತು, ಆಯೇಶಾಳನ್ನು ಅನಾಥಳನ್ನಾಗಿ ಮಾಡಿ ಜೈಲು ಸೇರಬೇಕಾಗಿ ಬಂದಿದೆ. ಅತ್ತ ಆಕೆ ಜೈಲು ಸೇರಿದ ನಂತರ ಪಕ್ಕದ ಮನೆಯ ಮೊಹ್ಮದ್ ಹಫೀಜುದ್ದೀನ್ ಕುಟುಂಬ ಆಯೇಶಾಳನ್ನು ತಮ್ಮ ಹತ್ತಿರ ಇಟ್ಟುಕೊಂಡು ಸುಮಾರು 8-10 ದಿನ ಆರೈಕೆ ಮಾಡಿದೆ. ನಂತರ ಮಕ್ಕಳ ಹಿತರಕ್ಷಣಾ ಸಮಿತಿಯ ಸಲಹೆಯ ಮೇರೆಗೆ ಆಕೆಯನ್ನು ಶಾಹೀನ್ ಸಂಸ್ಥೆ ನಡೆಸುವ ಹಾಸ್ಟೆಲ್ ಒಂದಕ್ಕೆ ವರ್ಗಾಯಿಸಿ ಅಲ್ಲಿನ ವಾರ್ಡನ್ ಜೊತೆ ಇರುವುದಕ್ಕೆ ಕಳಿಸಲಾಗಿದೆ.
“ಆಯೇಶಾ ಬಹಳ ಲವಲವಿಕೆಯ ಹುಡುಗಿಯಾಗಿದ್ದಳು. ಪದೇ ಪದೇ ಪೊಲೀಸರ ವಿಚಾರಣೆ, ಅವಳ ಅಮ್ಮಿಯ ಬಂಧನ ಅವಳ ಮನಸ್ಸಿನ ಮೇಲೆ ದೊಡ್ಡ ಆಘಾತ ಉಂಟು ಮಾಡಿದೆ. ತಾಯಿಯ ಬಂಧನದ ನಂತರ ಯಾವಗಲೂ ಬಹಳ ಸಪ್ಪೆಯಾಗಿರುತ್ತಿದ್ದಳು. ಮಧ್ಯರಾತ್ರಿ ದಿಢೀರನ್ ಎದ್ದು ಅಳುತ್ತಿದ್ದಳು. ಕೆಟ್ಟ ಕನಸು ಕಂಡು ಥಟ್ಟನೇ ಚೀರುತ್ತಿದ್ದಳು. ಸಮಾಧಾನಿಸಿ ಮಲಗಿಸುತ್ತಿದ್ದೆವು. ಒಮ್ಮೆ ಮಧ್ಯರಾತ್ರಿ ಆಸ್ಪತ್ರೆಗೂ ಕರೆದುಕೊಂಡು ಹೋಗಿದ್ದೆವು.
ಅಪ್ಪ ತೀರಿಕೊಂಡಿದ್ದಾರೆ, ಅಮ್ಮ ಜೈಲು ಸೇರಿದ್ದಾರೆ. ನೆರೆಹೊರೆಯವರಾಗಿ ನಾವು ಇಷ್ಟಾದರೂ ಮಾಡಬೇಕಲ್ಲವೆ?” ಎಂದು ಮೊಹ್ಮದ್ ಹಫೀಜುದ್ದೀನ್ ಹೇಳಿದರು. ಬೀದರಿನ ದರ್ಜಿ ಗಲ್ಲಿಯಲ್ಲಿ ಅವರು ಬಟ್ಟೆ ಅಂಗಡಿ ಇಟ್ಟುಕೊಂಡಿದ್ದಾರೆ. ಆಯೇಶಾ ಮತ್ತು ನಜ್ಬುನ್ನಿಸಾ ವಾಸಿಸುತ್ತಿದ್ದ ಮನೆಯನ್ನು ತೋರಿಸಿ ಎಂದು ಸ್ವಲ್ಪ ಒತ್ತಾಯ ಮಾಡಿದ ಮೇಲೆ ಅವರು ಅಂಗಡಿಯನ್ನು ಬೇರೆಯವರಿಗೆ ಒಪ್ಪಿಸಿ ಬೈಕಿನಲ್ಲಿ ಕರೆದುಕೊಂಡು ಹೋಗಿ ತೋರಿಸಿದರು. ನಾನು ಮನೆಯದೊಂದು ಫೋಟೋ ತೆಗೆದುಕೊಂಡೆ.
“ಆಯೇಶಾ ಬಹಳ ಹಸನ್ಮುಖಿ ಹುಡುಗಿ. ಅಮ್ಮಿ ನಜ್ಬುನ್ನಿಸಾ ಬಂಧನವಾದ ಮೇಲೆ ಅವಳು ಮುಖ ಪೂರ್ಣವಾಗಿ ಬಾಡಿಬಿಟ್ಟಿದೆ. ನಗು ಮುಖದಿಂದ ಮರೆಯಾಗಿಬಿಟ್ಟಿದೆ. ಯಾವಾಗಲೂ ಖಿನ್ನತೆಯಲ್ಲಿ ಇರುತ್ತಾಳೆ. ಅಮ್ಮಿಯ ಬಂಧನವಾದ ಮೇಲೂ ಸ್ವಲ್ಪ ದಿನ ಆಯೇಶಾ ಶಾಲೆಗೆ ಬರುತ್ತಿದ್ದಳು. ಶಾಲೆಯ ಆವರಣದಲ್ಲಿ ದಿನಾಲೂ ನನ್ನನ್ನು ಕಂಡ ತಕ್ಷಣ ಅಳುತ್ತಾ ಓಡಿ ಬಂದು ತಬ್ಬಿಕೊಂಡುಬಿಡುತ್ತಿದ್ದಳು.
ಆಕೆ ದಿನಾಲು ಕೇಳುವ ಮೊದಲ ಪ್ರಶ್ನೆ ಎಂದರೆ ‘ಅಮ್ಮಿ ಯಾವಾಗ ಬರ್ತಾಳೆ’ ಅಂತ. ನಾನು ಆವಾಗ ಬರ್ತಾಳೆ, ಈವಾಗ ಬರ್ತಾಳೆ ಅಂತ ಹೇಳುತ್ತಾ ಹೇಗೋ ಸಮಾಧಾನ ಮಾಡ್ತಿದ್ದೆ. ‘ನಾನು ಮಾಡಿದ ತಪ್ಪಿಗೆ ಅಮ್ಮಿನ ಯಾಕೆ ಕರ್ಕೊಂಡು ಹೋಗಿದ್ದಾರೆ’ ಅಂತ ಮತ್ತೆ ಮತ್ತೆ ಕೇಳುತ್ತಿದ್ದಳು. ಈಗ ಕೆಲವು ದಿನಗಳಿಂದ ಆಕೆ ಶಾಲೆಗೂ ಬಂದಿಲ್ಲ. ಇವತ್ತಿನಿಂದ ಪರೀಕ್ಷೆಗಳು ಶುರುವಾಗಿವೆ. ಆಕೆ ಪರೀಕ್ಷೆಯನ್ನೂ ಬರೆಯುತ್ತಿಲ್ಲ. ದಯವಿಟ್ಟು ಏನಾದ್ರೂ ಮಾಡಿ ನಜ್ಬುನ್ನಿಸಾಳ ಬಿಡುಗಡೆಗೆ ಸಹಾಯ ಮಾಡಿ. ನಮಗೂ ಆಯೇಶಾಳ ಸ್ಥಿತಿಯನ್ನು ನೋಡೋಕೆ ಆಗ್ತಿಲ್ಲ,” ಎಂದು ಆಯೇಶಾಳ ಕ್ಲಾಸ್ ಟೀಚರ್ ಆಸ್ಮಾ ತರನ್ನುಮ್ ಹೇಳಿದ್ರು.
ಸೀದಾ ಜೈಲಿಗೆ ಹೋಗಿ ನಜ್ಬುನ್ನೀಸಾಳನ್ನೂ ಮಾತಾಡಿಸಿದೆ. “ನಾನೇನೂ ಆಯೇಶಾಳಿಗೆ ಇಂತಹ ಡೈಲಾಗನ್ನೇ ಹೇಳು ಅಂತ ಏನೂ ಹೇಳಿಕೊಟ್ಟಿರಲಿಲ್ಲ. ಜ್ಯೂತೆಸೆ ಮಾರುಂಗಿ ಎಂಬುದು ನಾವು ಆಡುಭಾಷೆಯಲ್ಲಿ, ಸಣ್ಣಪುಟ್ಟ ವಿಷಯಗಳಿಗೂ ಬಳಸುತ್ತೇವೆ. ನಾನು ಎಂದಾದರೂ ಆ ರೀತಿ ಬೈದಿದ್ದನ್ನು ನೋಡಿ ಆಯೇಶಾ ಅದನ್ನು ನಾಟಕದಲ್ಲಿ ಬಳಸಿರಬಹುದು ಅನ್ನಿಸುತ್ತದೆ. ಅದನ್ನೇ ಇಷ್ಟೊಂದು ರಾದ್ಧಾಂತ ಮಾಡೋ ಅವಶ್ಯಕತೆ ಇತ್ತಾ? ಆಯೇಶಾಳ ಓದು, ಭವಿಷ್ಯದ ಬಗ್ಗೆ ಏನೇನೋ ಕನಸು ಕಟ್ಟಿಕೊಂಡು ಬಂದಿದ್ದೆವು. ಬಂದ ನಾಲ್ಕೇ ತಿಂಗಳಲ್ಲಿ ಹೀಗೆಲ್ಲಾ ಆಗಿಹೋಯ್ತು. ನಂಗೆ ಆಯೇಶಾಳದ್ದೇ ಚಿಂತೆ. ಹೇಗಿದ್ದಾಳೋ, ಏನು ಮಾಡುತ್ತಿದ್ದಾಳೋ… ಸಬ್ ಅಲ್ಲಾ ಕಿ ಮರ್ಜಿ…” ಅಂತ ಹೇಳಿದಳು.
ಶಾಹಿನ್ ಶಾಲೆಯಲ್ಲಿ ಪದೇ ಪದೇ ಪೊಲೀಸರ ವಿಚಾರಣೆಗೆ ಒಳಗಾದ ಇಬ್ಬರು ವಿದ್ಯಾರ್ಥಿಗಳನ್ನೂ ಮಾತಾಡಿಸಿದೆ. ಅದರಲ್ಲಿ ಉತ್ತರ ಪ್ರದೇಶ ಮೂಲದ, ವಯಸ್ಸಿನಲ್ಲಿ ಸ್ವಲ್ಪ ದೊಡ್ಡವನಾದ ಒಬ್ಬ ವಿದ್ಯಾರ್ಥಿ ಮಾತ್ರ ‘ನನಗೆ ಪೊಲೀಸರ ವಿಚಾರಣೆಯಿಂದ ಹೆದರಿಕೆ ಆಗಲಿಲ್ಲ’ ಎಂದ. ಇನ್ನೊಬ್ಬ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿ, ವಯಸ್ಸಿನಲ್ಲಿ ಸ್ವಲ್ಪ ಸಣ್ಣವನು ಮಾತ್ರ ಬಹಳ ಹೆದರಿದ್ದಾಗಿ ಹೇಳಿದ.
“ಪೊಲೀಸರು ಎದೆಯ ಮೇಲೆಯೇ ನುಗ್ಗಿದಂತೆ ಬರುವ ರೀತಿ, ಅವರು ಪ್ರಶ್ನೆ ಕೇಳುವ ಶೈಲಿ, ನಮ್ಮನ್ನು ದಿಟ್ಟಿಸಿ ನೋಡುವ ರೀತಿ – ಎಲ್ಲವೂ ಭಯ ಹುಟ್ಟಿಸುತ್ತಿದ್ದವು. ಎರಡು ದಿನ ಬಹಳ ಹೆದರಿಕೆಯಾಗಿತ್ತು. ನಂತರ ಮೇಸ್ಟ್ರು ಸ್ವಲ್ಪ ಧೈರ್ಯ ಹೇಳಿದ ಮೇಲೆ ಸ್ವಲ್ಪ ಧೈರ್ಯ ಬಂತು,” ಎಂದು ಹೇಳಿದ ಆ ಪುಟ್ಟ ಬಾಲಕ.
“ಪ್ರಧಾನಮಂತ್ರಿ ನರೇಂದ್ರ ಮೋದಿಗೆ ವಿರೋಧ ಪಕ್ಷದ ನಾಯಕರು ಪಾರ್ಲಿಮೆಂಟಿನಲ್ಲೇ ಚೋರ್ (ಕಳ್ಳ) ಅಂತ ಕರೀತಾರೆ. ಕೆಲವು ಟೀವಿ ಚಾನೆಲ್ಲುಗಳ ಕಾರ್ಯಕ್ರಮಗಳಂತೂ ಮೋದಿಯನ್ನೂ ಒಳಗೊಂಡಂತೆ ಎಲ್ಲಾ ರಾಜಕೀಯ ನಾಯಕರನ್ನು ಎಷ್ಟೊಂದು ಅವಮಾನ, ಅಪಹಾಸ್ಯ ಮಾಡುತ್ತವೆ. ಅವುಗಳಿಗೆಲ್ಲಾ ಹೋಲಿಸಿದರೆ ನಮ್ಮ ಮಕ್ಕಳು ಒಂದು ವಿಡಂಬನಾತ್ಮಕ ನಾಟಕದಲ್ಲಿ ಆಡಿರುವ ಮಾತುಗಳು ಏನೂ ಅಲ್ಲ.
ಆದರೂ ನಮ್ಮ ಸಂಸ್ಥೆಯ ಮೇಲೆ ದೇಶದ್ರೋಹದಂತ ಗಂಭೀರ ಪ್ರಕರಣ ದಾಖಲಿಸಲಾಗಿದೆ. ಒಂದು ಮಾನನಷ್ಟ ಮೊಕದ್ದಮೆ ದಾಖಲಿಸಲೂ ಯೋಗ್ಯವಲ್ಲದ ಡೈಲಾಗುಗಳು ಅವು. ಕಾರ್ಯಾಂಗ ವಿಫಲವಾದಾಗ ಇಂತಹ ಅವಘಡಗಳು ನಡೆಯುತ್ತವೆ. ಪೊಲೀಸರಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ ಅಂತ ಕಾಣುತ್ತೆ. ಅದಕ್ಕೆ ಇಂತಹ ಚಿಕ್ಕಪುಟ್ಟ ವಿಷಯವನ್ನು ಇಷ್ಟೊಂದು ದೊಡ್ಡ ರಾದ್ಧಾಂತ ಮಾಡುತ್ತಿದ್ದಾರೆ,” ಎನ್ನುತ್ತಾರೆ ಶಾಹೀನ್ ಸಂಸ್ಥೆಯ ತೌಸೀಫ್ ಮಡಿಕೇರಿ.
ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಏನು ಹೇಳ್ತಾರೆ ಕೇಳೋಣ ಅಂತ ಎಸ್ಪಿ ಆಫೀಸಿಗೆ ಹೋದೆ. ಈ ಪ್ರಕರಣ ದಾಖಲಾದಾಗ ಎಸ್ಪಿಯಾಗಿ ಇದ್ದವರು ಶ್ರೀಧರ್. ಈಗ ಅವರು ವರ್ಗಾವಣೆಯಾಗಿ ಹೋಗಿ ನಾಗೇಶ್ ಡಿ.ಎಲ್. ಎಂಬುವವರು ಆ ಸ್ಥಾನಕ್ಕೆ ಬಂದಿದ್ದಾರೆ. ಇದು ಎಸ್ಪಿಯಾಗಿ ಅವರಿಗೆ ಮೊದಲ ಪೋಸ್ಟಿಂಗ್ ಅನ್ನಿಸುತ್ತದೆ.
ಅವರನ್ನು ಭೇಟಿಯಾಗಿ ಇಂತಹದ್ದೊಂದು ವಿಡಂಬನಾ ನಾಟಕದಲ್ಲಿ ಮಕ್ಕಳು ಆಡಿರುವ ಡೈಲಾಲ್ ಅನ್ನು ಮುಂದಿಟ್ಟುಕೊಂಡು ದೇಶದ್ರೋಹ ಪ್ರಕರಣ ದಾಖಲಿಸುವ ಅಗತ್ಯವಿತ್ತಾ? ನಾಟಕದಲ್ಲಿನ ಮಕ್ಕಳ ಡೈಲಾಗುಗಳು ನಿಜಕ್ಕೂ ದೇಶದ್ರೋಹಕ್ಕೆ ಸಮ ಅನ್ನಿಸುತ್ತಾ? ಪ್ರಕರಣ ದಾಖಲಾದ ಮೇಲೆ ಶಾಲೆಗೆ ಹೋಗಿ ಐದು ಬಾರಿ ಮಕ್ಕಳನ್ನು ವಿಚಾರಣೆ ಮಾಡುವ ಅಗತ್ಯವಿತ್ತಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದೆ.
ಅದು ನಿಜಕ್ಕೂ ದೇಶದ್ರೋಹವಾಗುತ್ತಾ ಇಲ್ಲವಾ ಎಂಬುದರ ಬಗ್ಗೆ ಅವರೇನೂ ಹೆಚ್ಚು ಮಾತಾಡಲಿಲ್ಲ. ವಿಚಾರಣೆಯಲ್ಲಿ ನೋಡೋಣ ಏನು ಬರುತ್ತೋ ಅಂತ ಅಂದರು. ಆದರೆ, ಶಾಲೆಗೆ ಹೋಗಿ ವಿಚಾರಣೆ ಮಾಡಿದ್ದರ ಬಗ್ಗೆ ಮಾತಾಡಿ ಅಷ್ಟು ಸಲ ಶಾಲೆಗೆ ಹೋಗಿ ವಿಚಾರಣೆ ಮಾಡುವ ಅಗತ್ಯವಿರಲಿಲ್ಲ ಎನ್ನುವ ಮೂಲಕ ಅಷ್ಟರ ಮಟ್ಟಿಗೆ ಪ್ರಾಮಾಣಿಕತೆಯನ್ನು ತೋರಿದರು.
“ವೈಯಕ್ತಿಕವಾಗಿ ನನಗನ್ನಿಸುವುದೇನೆಂದರೆ ಪದೇ ಪದೇ ಶಾಲೆಗೆ ಹೋಗಿ ವಿಚಾರಣೆ ನಡೆಸುವ ಅಗತ್ಯ ಇರಲಿಲ್ಲ. ಪ್ರಾಯಶಃ ವಿಚಾರಣಾಧಿಕಾರಿಗೆ ಒಮ್ಮೆ ಹೋದಾಗಲೇ ಎಲ್ಲಾ ಮಕ್ಕಳು ವಿಚಾರಣೆಗೆ ಸಿಕ್ಕಿರಲಿಕ್ಕಿಲ್ಲ ಅಥವಾ ಎಲ್ಲರನ್ನೂ ಒಂದೇ ದಿನ ವಿಚಾರಣೆ ಮಾಡುವುದಕ್ಕೆ ಆಗಿರಲಿಕ್ಕಿಲ್ಲ. ಹಾಗಾಗಿ ಮತ್ತೆ ಮತ್ತೆ ಹೋಗಬೇಕಾಗಿ ಬಂದಿರಬಹುದು. ಒಂದೇ ಮಗುವನ್ನು ಹಲವು ಬಾರಿ ವಿಚಾರಣೆ ನಡೆಸಿದ್ದು ಬಳಹ ಕಡಿಮೆ ಪ್ರತೀ ದಿನ ಬೇರೆ ಬೇರೆ ಮಕ್ಕಳನ್ನು ವಿಚಾರಣೆ ಮಾಡಲಾಗಿದೆ,” ಎಂದರು.
ಆಯೇಶಾಳನ್ನು ಭೇಟಿಯಾಗುವುದಕ್ಕೆ ಅವಕಾಶ ಇರಲಿಲ್ಲ. ಮಾಧ್ಯಮದವರು, ಇನ್ನಿತರ ಸಂಘಸಂಸ್ಥೆಗಳು ಮತ್ತು ಹೊರಗಿನವರು ಯಾರೂ ಆಕೆಯನ್ನು ಭೇಟಿಯಾಗುವುದಕ್ಕೆ ಅವಕಾಶ ಕೊಡಬಾರಂದೆಂದು ಮಕ್ಕಳ ಹಿತರಕ್ಷಣಾ ಸಮಿತಿ ಶಾಲೆಗೆ ತಿಳಿಸಿದೆ. ಹಾಗಾಗಿ, ಆಯೇಶಾ ಭೇಟಿ ಸಾಧ್ಯವಾಗಲಿಲ್ಲ.
ಆದರೆ, ಫೋನಿನಲ್ಲಿ ಸಿಕ್ಕಳು. ಅವಳ ತಾಯಿಯನ್ನು ನ್ಯಾಯಾಲಯದಲ್ಲಿ ಭೇಟಿಯಾಗಿದ್ದನ್ನು ಮತ್ತೆ ಜೈಲಿಗೆ ಹೋಗಿ ಭೇಟಿಯಾಗಲಿರುವುದನ್ನು ಹೇಳಿದೆ. ನಾನೂ ಭೇಟಿಯಾಗಬೇಕು ಎಂದಳು. ಅಮ್ಮನನ್ನು ನೋಡಬೇಕು ಎಂದಳು. ಏನು ಹೇಳಬೇಕು ಎಂಬುದು ತಿಳಿದಯದೇ ನನಗೆ ತೋಚಿದ ರೀತಿಯಲ್ಲಿ ಒಂದಿಷ್ಟು ಸಮಾಧಾನ ಮಾಡಿ ಫೋನ್ ಕಟ್ ಮಾಡಿದೆ.
ಅಂದಹಾಗೆ, ಬಂಧಿತರಾಗಿರುವ ನಜ್ಬುನ್ನಿಸಾ ಮತ್ತು ಫರೀದಾ ಬೇಗಂ ಅವರಿಗೆ ಮಧ್ಯಂತರ ಜಾಮೀನು ಕೊಡಬೇಕೆಂದು ಸಲ್ಲಿಸಿರುವ ಅರ್ಜಿ ಹಾಗೂ ಶಾಹೀನ್ ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ಖದೀರ್ ಮತ್ತು ಇತರ ಐವರು ಮ್ಯಾನೇಜ್ಮೆಂಟ್ ಸದಸ್ಯರನ್ನು ಬಂಧಿಸಬಾರದು ಎಂದು ಸಲ್ಲಿಸಿರುವ ನಿರೀಕ್ಷಣಾ ಜಾಮೀನಿನ ಅರ್ಜಿ ನ್ಯಾಯಾಲಯದ ಮುಂದೆ ಇಂದು ವಿಚಾರಣೆಗೆ ಬರುತ್ತಿವೆ. ಬೀದರ್ ರಾಜದ್ರೋಹ ಪ್ರಕರಣದ ಬಲಿಪಶುಗಳಿಗೆ ಒಳ್ಳೆಯದಾಗಲಿ ಎಂದು ನೀವೂ ಹಾರೈಸಿ.
(ಈ ಕುರಿತು ದಿ ಹಿಂದೂ ಪತ್ರಿಯಲ್ಲಿ ನನ್ನದೊಂದು ವರದಿ ಇದೆ. ಆಸಕ್ತರು ಓದಿಕೊಳ್ಳಬಹುದು – ಕುಮಾರ ಬುರಡಿಕಟ್ಟಿ )
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243



