ದಿನದ ಸುದ್ದಿ
ಸುಳ್ಳಿನ ಸರದಾರರ ನಡುವೆ ಒಂದು ಡ್ರೋನ್ ವಿಹಾರ
- ನಾ ದಿವಾಕರ
“ ಸತ್ಯಮೇವ ಜಯತೇ ” ಈ ಘೋಷಣೆಯೇ ಭಾರತೀಯರಿಗೆ ಮೈ ನವಿರೇಳುವಂತೆ ಮಾಡುತ್ತದೆ. ಈ ಎರಡು ಪದಗಳಲ್ಲಿ ಅಂತಹ ಮಾಂತ್ರಿಕ ಶಕ್ತಿ ಇದೆ. ಸಾಮಾನ್ಯವಾಗಿ ಜನರಲ್ಲಿ ಇಂತಹ ಒಂದು ವಿಶ್ವಾಸ ಇದ್ದೇ ಇರುತ್ತದೆ. ನ್ಯಾಯ ಎಂದೂ ಸೋಲುವುದಿಲ್ಲ, ಸತ್ಯ ಎಂದಿಗೂ ಸೋಲುವುದಿಲ್ಲ ಹೀಗೆ.
ನಮ್ಮ ಚಲನಚಿತ್ರಗಳಲ್ಲೂ ನಾಯಕ ಶಿಖಾಮಣಿಗಳು ಇದನ್ನೇ ಘೋಷಿಸುತ್ತಾ ಬಂದಿದ್ದಾರೆ. ಸತ್ಯ ಮತ್ತು ನ್ಯಾಯ ಎರಡೂ ಪದಗಳ ಸೋಂಕು ಸಹ ಇಲ್ಲದ ರಾಜಕೀಯ ವಲಯದಲ್ಲೂ ಇದು ಕೇಳಿಬರುತ್ತದೆ. ಏಕೆಂದರೆ ಸತ್ಯ ಎನ್ನುವ ಒಂದು ಸಾಪೇಕ್ಷ ಪದ ಸಾರ್ವತ್ರೀಕರಣಗೊಂಡು ಸ್ವೀಕೃತವಾಗಿಬಿಟ್ಟಿದೆ.
ಹುದುಗಿ ಹೋದ ಸತ್ಯಗಳ ನಡುವೆಯೇ ನಾವು “ ವಸುದೈವ ಕುಟುಂಬಕಂ ” ಎಂಬ ಮತ್ತೊಂದು ಪ್ರಾಚೀನ ಘೋಷವಾಕ್ಯವನ್ನು ಬಳಸುತ್ತಾ ಬಂದಿದ್ದೇವೆ. ಶತಮಾನಗಳ ಕಾಲ ನಾವೇ ನಿರ್ಮಿಸಿಕೊಂಡಿರುವ ನಾಲ್ಕು ಗೋಡೆಗಳ ನಡುವೆಯೇ “ ಅನ್ಯರನ್ನು ” ಗುರುತಿಸಿ ಪ್ರತ್ಯೇಕಗೊಳಿಸಿ ಕ್ವಾರಂಟೈನ್ ಮಾಡುವ ಸಂಸ್ಕøತಿಯನ್ನು ಪೋಷಿಸಿಕೊಂಡು ಬಂದಿದ್ದರೂ, ನಾವು ಇಡೀ ಜಗತ್ತೇ ಒಂದು ಕುಟುಂಬದಂತೆ ಎಂದು ಹೇಳುತ್ತಾ ಬಂದಿದ್ದೇವೆ. ಅದನ್ನೇ ನಂಬುತ್ತಲೂ ಬಂದಿದ್ದೇವೆ. ಈ ಕುಟುಂಬದ ಒಳಗೇ ನಡೆಯುವ ಅತ್ಯಾಚಾರ, ಕೊಲೆ, ದಬ್ಬಾಳಿಕೆ ದೌರ್ಜನ್ಯಗಳ ನಡುವೆಯೂ ಆಗೊಮ್ಮೆ ಈಗೊಮ್ಮೆ “ ಸತ್ಯಮೇವ ಜಯತೇ ” ಎಂದು ಅರಚುತ್ತಾ ಸಮಾಧಾನದಿಂದಿರುತ್ತೇವೆ.
ಕಳೆದ ಕೆಲವು ವರ್ಷಗಳಿಂದ ರಾಜಕೀಯ ವಲಯದಲ್ಲಿ ವಿವಿಧ ದೇವರುಗಳ ಮೇಲೆ ಆಣೆ ಪ್ರಮಾಣ ಮಾಡಿ ತಮ್ಮ ಸತ್ಯ ಸಂಧತೆಯನ್ನು ಸಾಬೀತುಪಡಿಸುವ ರಾಜಕೀಯ ನಾಯಕರುಗಳ ಸಂಖ್ಯೆ ಹೆಚ್ಚಾಗುತ್ತಿದೆ. ತಾನು ಹೇಳಿದ್ದೇ ಸತ್ಯ ಎಂದು ವಾದಿಸುವ ಪ್ರತಿಯೊಬ್ಬ ಸುಳ್ಳುಗಾರನೂ ಹೀಗೆ ಆಣೆ ಪ್ರಮಾಣ ಮಾಡಬಹುದು ಏಕೆಂದರೆ ಅಲ್ಲಿ ಮೂಲತಃ ಸತ್ಯದ ಸಮಾಧಿಯಾಗಿಬಿಟ್ಟಿರುತ್ತದೆ.
ಇತ್ತೀಚಿನ ದಿನಗಳಲ್ಲಿ “ ಸತ್ಯಮೇವ ಜಯತೇ” ಘೋಷವಾಕ್ಯದ ತವರು ಮನೆ ಎನ್ನಬಹುದಾದ ನ್ಯಾಯಾಂಗದ ಆವರಣದಲ್ಲೂ ಈ ವಿದ್ಯಮಾನವನ್ನು ಕಾಣುತ್ತಿದ್ದೇವೆ. ಚಾರಿತ್ರಿಕ ಸತ್ಯಗಳನ್ನೂ ಮಿಥ್ಯೆ ಎಂದು ವಾದಿಸುವ ಒಂದು ಬೃಹತ್ ಬೌದ್ಧಿಕ ಸೇನೆಯನ್ನೇ ಸಿದ್ಧಪಡಿಸಿರುವ ಭಾರತದ ಆಳುವ ವರ್ಗಗಳು ಮಿಥ್ಯೆಗೂ ನಿಲುಕದ ಅವಾಸ್ತವಿಕ ವಿದ್ಯಮಾನಗಳನ್ನು ಸತ್ಯದ ಚೌಕಟ್ಟಿನಲ್ಲಿ ಬಂಧಿಸುತ್ತಿವೆ. ಕೆಲವೊಮ್ಮೆ ನ್ಯಾಯಾಂಗವೂ ಇದಕ್ಕೆ ಅವಕಾಶ ನೀಡುತ್ತಿದೆ.
ಕನ್ನಡದ ಸುದ್ದಿಮನೆಗಳಿಗೆ ಈಗ ಇಂತಹ ಒಂದು ಸತ್ಯ ಮತ್ತು ಸುಳ್ಳಿನ ನಡುವಿನ ಕಲಹ ಮಾರುಕಟ್ಟೆಯ ವಸ್ತುವಾಗಿದೆ. ಡ್ರೋನ್ ಪ್ರತಾಪ್ ಎಂದೇ ಹೆಸರಾಗಿರುವ ಒಬ್ಬ ಹುಡುಗನ ವೈಜ್ಞಾನಿಕ ಎನ್ನಲಾಗುವ ಸಾಧನೆ ಮತ್ತು ಸಾಹಸಗಾಥೆಗಳಿಗೆ ಎರಡು ವರ್ಷಗಳ ಹಿಂದೆಯೇ ಅನಗತ್ಯ ಪ್ರಚಾರ ನೀಡಿ, ಅವನನ್ನು ಜನಪ್ರಿಯತೆಯ ಉತ್ತುಂಗಕ್ಕೇರಿಸಿದ ಸುದ್ದಿಮನೆಗಳು ಈಗ ಅವನ ಡ್ರೋನ್ ಹರಿಕಥೆಯನ್ನು ಪೊಳ್ಳು ಎಂದು ಬಯಲು ಮಾಡಲು ಸಜ್ಜಾಗಿದ್ದು, ಹಂತಹಂತವಾಗಿ ಕಂದಕಕ್ಕೆ ತಳ್ಳುತ್ತಿವೆ. ಪ್ರತಾಪ್ ಡ್ರೋನ್ ಅವಿಷ್ಕಾರ ಮಾಡಿಲ್ಲ, ತನ್ನದೇ ಆದ ಬೌದ್ಧಿಕ ಸಾಮಥ್ರ್ಯ ಬಳಸಿ ಡ್ರೋನ್ ತಯಾರಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾನೆ.
ಎರಡು ವರ್ಷಗಳ ಹಿಂದೆ ಅವನ ಪ್ರತಿಪಾದನೆಯ ಸತ್ಯಾಸತ್ಯತೆಗಳನ್ನೂ ತಿಳಿಯದೆ, ಯಾವುದೇ ಪರಿಶೀಲನೆ ನಡೆಸದೆ, ವಿಜ್ಞಾನ ಸಂಸ್ಥೆಗಳ ದೃಢೀಕರಣ ಪಡೆಯದೆ ಆ ಹುಡುಗನನ್ನು 21ನೆಯ ಶತಮಾನದ ವಿಜ್ಞಾನಿಯಂತೆ ಬಿಂಬಿಸುವ ಅವಶ್ಯಕತೆ ಮಾಧ್ಯಮಗಳಿಗೆ ಇರಲಿಲ್ಲ. ಏಕೆಂದರೆ ಡ್ರೋನ್ ಪ್ರತಾಪ್ ವಿಜ್ಞಾನಿ ಅಲ್ಲ. ಸಂಶೋಧನಾ ವಿದ್ಯಾರ್ಥಿಯೂ ಅಲ್ಲ. ಅವನು ಸಂಶೋಧನೆ ಮಾಡಿದ್ದೇ ಆದಲ್ಲಿ ವಿಜ್ಞಾನ ಸಂಸ್ಥೆಗಳಿಂದ ಪ್ರಮಾಣ ಪತ್ರ ಇರಬೇಕು. ಅವಿಷ್ಕಾರ ಮಾಡಿದ್ದೇ ಆದಲ್ಲಿ ಅಂತರರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳ ದೃಢೀಕರಣ ಇರಬೇಕು. ಸ್ಥಳೀಯ ವಿಜ್ಞಾನಿಗಳ ಪ್ರಮಾಣೀಕರಣ ಇರಬೇಕು. ಇದಾವುದೂ ಇಲ್ಲದೆಯೇ ಪ್ರತಾಪನ ಪ್ರತಾಪವನ್ನು ಕೊಂಡಾಡಿ ಮೆರೆಸಿದ ನಾಯಕರ ದಂಡೇ ನಮ್ಮ ನಡುವೆ ಇದೆ.
ಎಲ್ಲವನ್ನೂ ಸುದ್ದಿಮನೆಯಲ್ಲೇ ಉತ್ಪಾದಿಸುವ ಒಂದು ಕೆಟ್ಟ ಸಂಪ್ರದಾಯ ನಮ್ಮ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಇರುವುದರಿಂದ ಇದಾವುದೂ ಇಲ್ಲದೆಯೇ ಅರಳುವ ಮೊಗ್ಗುಗಳನ್ನು ಹಿಸುಕಿಹಾಕಲಾಗುತ್ತಿದೆ. ಗಾಯಕ ಹನುಮ ಹೀಗೆಯೇ ಸುದ್ದಿಮನೆಗಳ ಒರಳಲ್ಲಿ ರುಬ್ಬಿಸಿಕೊಂಡು ಹೈರಾಣಾಗುತ್ತಿದ್ದಾನೆ. ಈಗ ಡ್ರೋನ್ ಪ್ರತಾಪ್.
ಈ ಹುಡುಗ ಏನೋ ಒಂದು ಸಾಧನೆ ಮಾಡಿರುವುದಾಗಿ ಸಾಬೀತಾದರೆ ಸಂತೋಷ, ಇಲ್ಲವಾದರೆ ಅವನ ಅನಗತ್ಯ ಸಾಹಸ ಮತ್ತು ಸುಳ್ಳುಗಳ ಸರಪಣಿಗೆ ಕಡಿವಾಣ ಹಾಕಲು ಕಾಯ್ದೆ ಕಾನೂನುಗಳಿವೆ. ಏನೇ ಆದರೂ ಇದು ನಮ್ಮ ಸುತ್ತಲಿನ ಸಮಾಜವನ್ನು ಬಾಧಿಸುವ ವಿಚಾರವಲ್ಲ. ವ್ಯಕ್ತಿ ಕೇಂದ್ರಿತ ಪ್ರಹಸನವಾಗಿಯೇ ಉಳಿದುಬಿಡುತ್ತದೆ. ಕೆಲವು ವರ್ಷಗಳ ಹಿಂದೆ ನೀರಿನಿಂದ ಪೆಟ್ರೋಲ್ ಉತ್ಪಾದಿಸುವ ಒಬ್ಬ ಹುಡುಗನ ಬಗ್ಗೆ ಇದೇ ರೀತಿಯ ಸಮರೋತ್ಸಾಹ ಕಂಡುಬಂದಿದ್ದನ್ನು ಸ್ಮರಿಸಬಹುದು.
ಇಲ್ಲಿ ಪ್ರಶ್ನೆ ಇರುವುದು ನಮ್ಮ ಆದ್ಯತೆಗಳ ಬಗ್ಗೆ. ಮತ್ತು ಪ್ರಶ್ನಿಸಲೇಬೇಕು ಎನ್ನುವ ಇಚ್ಛಾಶಕ್ತಿ ನಮ್ಮ ಸುದ್ದಿಮನೆಗಳಿಗೆ ಇದ್ದರೆ, ನಾವು ಪ್ರಶ್ನಿಸಬಹುದಾದ ಸುಳ್ಳುಗಳ ಬಗ್ಗೆ. ಚಕ್ರವರ್ತಿ ಸೂಲಿಬೆಲೆಯಂತಹ ಸುಳ್ಳಿನ ಕಾರ್ಖಾನೆಗಳನ್ನೂ ಪಕ್ಕಕ್ಕಿಡೋಣ. ಏಕೆಂದರೆ ಇವರ ಸುಳ್ಳುಗಳು ಒಂದು ರಾಜಕೀಯ ಕಾರ್ಯಸೂಚಿಯ ಭಾಗ. ಇಂಥವರನ್ನು ರೂಪಿಸುವುದೇ ಸುಳ್ಳನ್ನು ಸತ್ಯ ಎಂದು ನಿರೂಪಿಸಲು.
ಜನಸಾಮಾನ್ಯರ ನಡುವೆ ನೈಜ ಇತಿಹಾಸವನ್ನು ಮರೆಮಾಚಿ ಮಿಥ್ಯೆಯನ್ನು ಸತ್ಯ ಎಂದು ಬಿಂಬಿಸಲು. ಇವೆಲ್ಲಾ ವ್ಯವಸ್ಥಿತವಾಗಿ ಬಿತ್ತಲಾಗುವ ಬೀಜಗಳು. ಇತಿಹಾಸವನ್ನು ಬುಡಮೇಲು ಮಾಡಲು ಇಂತಹ ಸುಳ್ಳುಗಳನ್ನು ಅಸ್ತ್ರದಂತೆ ಬಳಸುವ ಪ್ರವೃತ್ತಿಗೆ ದೀರ್ಘ ಇತಿಹಾಸವೇ ಇದೆ. ಜರ್ಮನಿಯ ಹಿಟ್ಲರ್ ಈ ತಂತ್ರವನ್ನು ಅನುಸರಿಸಿಯೇ ಜಗತ್ತಿನ ಸರ್ವನಾಶಕ್ಕೆ ಮುಂದಾಗಿದ್ದ. ಈ ಗೋಬೆಲ್ಸ್ ತಂತ್ರ ಇಂದಿಗೂ ಜಾರಿಯಲ್ಲಿದೆ.
ಕೋವಿದ್ 19 ಪಿಡುಗು ಸೃಷ್ಟಿಸಿರುವ ಬಿಕ್ಕಟ್ಟಿನ ನಡುವೆ ನಮ್ಮ, ಅಂದರೆ ನಾಗರಿಕ ಸಮಾಜದ ಆದ್ಯತೆ ಈ ಪಿಡುಗಿನ ಸುತ್ತ ಹಬ್ಬಿದ, ಹಬ್ಬಿರುವ, ಹಬ್ಬುತ್ತಲೇ ಇರುವ ಸುಳ್ಳುಗಳನ್ನು ಬಯಲು ಮಾಡುವುದಾಗಿರಬೇಕು. ಪ್ರಜಾತಂತ್ರ ವ್ಯವಸ್ಥೆಯ ಮತ್ತು ನಾಗರಿಕ ಸಮಾಜದ ಸಾಕ್ಷಿ ಪ್ರಜ್ಞೆಯಂತೆ ಕಾರ್ಯ ನಿರ್ವಹಿಸಬೇಕಾದ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು, ಸುದ್ದಿಮನೆಗಳು ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಸತ್ಯಮೇವ ಜಯತೇ ಘೋಷಣೆಯನ್ನು ತಮ್ಮ ಮೂಲಮಂತ್ರದಂತೆ ಬಳಸಬೇಕಿತ್ತು. ದುರಂತ ಎಂದರೆ ಸುಳ್ಳಿನ ಸರದಾರರ ನಿಯಂತ್ರಣದಲ್ಲಿರುವ ಮಾಧ್ಯಮಗಳು, ಸುದ್ದಿಮನೆಗಳು ತಮ್ಮ ಹೊಣೆಗಾರಿಕೆ ಮತ್ತು ನೈತಿಕ ಕರ್ತವ್ಯ, ಆದ್ಯತೆಗಳನ್ನು ಮರೆತಿವೆ.
ಈ ಹಿಂದೆ ಜಗತ್ತು ಎದುರಿಸಿದ ಅತ್ಯಂತ ಕಠಿಣ ಬಿಕ್ಕಟ್ಟುಗಳನ್ನು ಗಮನಿಸಿದಾಗ ಆರೋಗ್ಯ ಸಮಸ್ಯೆಗಳಾದ ಎಬೊಲಾರ್, ಹೆಚ್ಐವಿ-ಏಡ್ಸ್ ಮತ್ತು ನೈಸರ್ಗಿಕ ವಿಕೋಪಗಳಾದ ಬರಗಾಲ, ಕ್ಷಾಮ ಎದುರಾದಾಗಲೆಲ್ಲಾ ಮಾಧ್ಯಮಗಳ ಪಾತ್ರ ನಿರ್ಣಾಯಕವಾಗಿದ್ದುದನ್ನು ಸ್ಮರಿಸಬೇಕು. 1943ರ ಬಂಗಾಲದ ಭೀಕರ ಕ್ಷಾಮದ ಸಂದರ್ಭದಲ್ಲಿ ಪ್ರಜಾತಂತ್ರದ ಕಾವಲುಗಾರರು ಎಂದೇ ಪರಿಗಣಿಸಲಾಗುವ ಸ್ವತಂತ್ರ ಮಾಧ್ಯಮಗಳು, ನ್ಯಾಯಾಂಗ ಮತ್ತು ಸಾಮಾಜಿಕ ಆಂದೊಲನಗಳು ಸಕ್ರಿಯವಾಗಿದ್ದುದನ್ನು ಇತಿಹಾಸದಲ್ಲಿ ಗಮನಿಸಬಹುದು. ಇದೇ ತತ್ವವನ್ನು ಖ್ಯಾತ ಅರ್ಥಶಾಸ್ತ್ರಜ್ಞ ಅಮಾತ್ರ್ಯ ಸೆನ್ ಸಹ ಪ್ರತಿಪಾದಿಸುತ್ತಾರೆ. ಆದರೆ ಇಂದು ಮಾಧ್ಯಮಗಳು ಅಧಿಕಾರಸ್ಥರ ತುತ್ತೂರಿಗಳಂತೆ ಕಾರ್ಯ ನಿರ್ವಹಿಸುತ್ತಿವೆ.
ಡ್ರೋನ್ ಪ್ರತಾಪನ ಸುಳ್ಳುಗಳನ್ನು ಬೆನ್ನಟ್ಟುವುದರ ಬದಲು ನಮ್ಮ ಸುದ್ದಿಮನೆಗಳು ತಾವೇ ಸೃಷ್ಟಿಸಿದ ಸುಳ್ಳುಗಳನ್ನು ಬೆನ್ನಟ್ಟಿದರೆ ಕೊರೋನಾ ಬಿಕ್ಕಟ್ಟಿನ ಉಲ್ಬಣಕ್ಕೆ ಮೂಲ ಕಾರಣಗಳು ದೊರೆಯುತ್ತವೆ. ಎರಡು ತಿಂಗಳ ಕಾಲ ನಮ್ಮ ಸುತ್ತಲಿನ ಪ್ರಾಥಮಿಕ ಆರೋಗ್ಯ ವ್ಯವಸ್ಥೆಯ ಅವ್ಯವಸ್ಥೆಗಳ ಬಗ್ಗೆ ಸೊಲ್ಲೆತ್ತದೆ, ಆಳುವ ವರ್ಗಗಳನ್ನು ಸಂತೃಪ್ತಿಪಡಿಸುವುದರಲ್ಲಿ ತೊಡಗಿದ್ದ ಸುದ್ದಿಮನೆಗಳಿಗೆ ಈಗ ಜ್ಞಾನೋದಯವಾದಂತಿದೆ.
ಆದರೆ ಆಸ್ಪತ್ರೆ, ಹಾಸಿಗೆಗಳು, ಔಷಧಿ, ವೈದ್ಯರು ಈ ಎಲ್ಲ ಕೊರತೆಗಳು ಲಾಕ್ ಡೌನ್ ಸಡಿಲಿಕೆಯ ನಂತರ ಸೃಷ್ಟಿಯಾದದ್ದಲ್ಲ ಅಲ್ಲವೇ ? ಪಾದರಾಯನ ಪುರದ ಧೂಳಿನಲ್ಲಿ, ತಬ್ಲೀಗಿಗಳ ಛಾಯೆಯಲ್ಲಿ, ಜಮಾತಿಗಳ ಆವರಣದಲ್ಲಿ, ಹೊಂಗಸಂದ್ರದ ಅಂಗಳದಲ್ಲಿ, ವಲಸೆ ಬಾಂಬುಗಳ ಸಂಗ್ರಹಾಲಯಗಳಲ್ಲಿ ತಮ್ಮ ಪ್ರಜ್ಞೆಯನ್ನೇ ಒತ್ತೆ ಇಟ್ಟು ಕರ್ತವ್ಯಪ್ರಜ್ಞೆಯನ್ನೇ ಮರೆತ ಸುದ್ದಿಮನೆಗಳಿಗೆ ಡ್ರೋನ್ ಪ್ರತಾಪನ ಸುಳ್ಳು ನಿತ್ಯ ಸುದ್ದಿಯಂತೆ , ರೋಚಕವಾಗಿ ಕಾಣುವುದು ದುರಂತ.
ಕಳೆದ ಆರು ವರ್ಷಗಳ ರಾಜಕೀಯ ಬೆಳವಣಿಗೆಗಳಲ್ಲಿ ಕಂಡಿರುವ ಸುಳ್ಳುಗಳನ್ನು ಪೋಣಿಸುತ್ತಾ ಹೋದರೆ ಇಡೀ ದೇಶವನ್ನು ಒಮ್ಮೆ ಸುತ್ತುಹಾಕಬಹುದು. ಆದರೆ ಈ ಸುಳ್ಳುಗಳನ್ನು ಪ್ರಶ್ನಿಸುವ ನೈತಿಕತೆಯನ್ನು ಮಾಧ್ಯಮ ಲೋಕ ಕಳೆದುಕೊಂಡಿದೆ. ಸ್ವಿಸ್ ಬ್ಯಾಂಕಿನಲ್ಲಿರುವ ಅಕ್ರಮ ಹಣವನ್ನು ನೂರು ದಿನದೊಳಗೆ ಭಾರತಕ್ಕೆ ತರುವ ಒಂದು ಭರವಸೆ ಭ್ರಷ್ಟಾಚಾರ ವಿರೋಧಿ ಆಂದೋಲನದ ರಣಕಹಳೆಯಂತೆ ಕಂಡಿತ್ತು.
ಭಾರತದ ಕಾರ್ಪೋರೇಟ್ ವಲಯದ ಈ ಅಕ್ರಮ ಸಂಪತ್ತು ಇಂದಿಗೂ ಸುಭದ್ರವಾಗಿದೆ. ನೋಟು ರದ್ದತಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೊಸೆದ ಸುಳ್ಳುಗಳಿಗೆ ತಮ್ಮದೇ ಆದ ವ್ಯಾಖ್ಯಾನ ನೀಡುತ್ತಾ , ದೇಶದ ಆರ್ಥಿಕತೆ ಅಧೋಗತಿಗಿಳಿಯುತ್ತಿದ್ದರೂ ಗಮನಿಸದೆ ಹೋದ ಸುದ್ದಿಮನೆಗಳಿಗೆ, ಡ್ರೋನ್ ಪ್ರತಾಪ್ ಏಕೆ ಮಹಾ ಸುಳ್ಳನಂತೆ ಕಾಣಬೇಕು ?
ನೋಟು ರದ್ದತಿಯಿಂದ ದೇಶದಲ್ಲಿ ಕಪ್ಪುಹಣ ಇಲ್ಲವಾಗುತ್ತದೆ, ನಕಲಿ ನೋಟುಗಳ ದಂಧೆ ಸಂಪೂರ್ಣ ನಾಶವಾಗುತ್ತದೆ, ನಕ್ಸಲ್ ಚಟುವಟಿಕೆಗೆ ಅಕ್ರಮ ಹಣ ಪೂರೈಕೆ ಸ್ಥಗಿತಗೊಳ್ಳುತ್ತದೆ, ಭಯೋತ್ಪಾದನೆ ನಿಯಂತ್ರಣಕ್ಕೆ ಬರುತ್ತದೆ ಹೀಗೆ ಹತ್ತು ಹಲವಾರು ಸುಳ್ಳು ಆಶ್ವಾಸನೆಗಳನ್ನು ನೀಡಿ ದೇಶದ ಆರ್ಥಿಕತೆಯನ್ನು ಅಧೋಗತಿಗೆ ತಂದಿಟ್ಟ ಸರ್ಕಾರದ ಎಲ್ಲ ಸುಳ್ಳುಗಳೂ ಸುದ್ದಿಮನೆಗಳಿಗೆ ಸಂಭಾವ್ಯ ದಿಗ್ವಿಜಯದ ಸಂಕೇತದಂತೆ ಕಂಡಿದ್ದವು.
ಈ ಪೊಳ್ಳು ಭರವಸೆಗಳನ್ನು ಬಯಲು ಮಾಡುವ ನೈತಿಕತೆಯನ್ನೂ ಕಳೆದುಕೊಂಡಿದ್ದ ಮಾಧ್ಯಮಗಳು, ಇದರ ವಿರುದ್ಧ ಮಾತನಾಡಿದವರನ್ನು ದೇಶದ್ರೋಹಿಗಳಂತೆ ಬಿಂಬಿಸಿದ್ದವು. ನೋಟು ರದ್ದತಿಯ ಹಿಂದಿನ ತಾತ್ವಿಕ ನೆಲೆಗಳನ್ನು ಪ್ರಶ್ನಿಸಿದ ಖ್ಯಾತ ಅರ್ಥಶಾಸ್ತ್ರಜ್ಞರು, ಸುಳ್ಳಿನ ಸರದಾರರ ನಡುವೆ ನಿರ್ಲಕ್ಷ್ಯಕ್ಕೊಳಗಾದರು, ಮಾಧ್ಯಮಗಳ ಕೃಪೆಯಿಂದ.
ಅಧಿಕಾರದ ಗದ್ದುಗೆ ಹಿಡಿಯಲು ರಾಜಕೀಯ ನಾಯಕರು ಸುಳ್ಳಿನ ಸರಮಾಲೆಯನ್ನು ಪೋಣಿಸುವುದು ಹೊಸತೇನಲ್ಲ, ಆದರೆ ಹಿಂದೆಲ್ಲಾ ಮಾಧ್ಯಮಗಳು ಈ ಸುಳ್ಳುಗಳನ್ನು ಭೇದಿಸಿ ಜನತೆಯ ಮುಂದೆ ಸತ್ಯಾಂಶವನ್ನು ಮಂಡಿಸುತ್ತಿದ್ದವು. ಆದರೆ 21ನೆಯ ಶತಮಾನದ ಮಾಧ್ಯಮಗಳು ಜನಸಾಮಾನ್ಯರಿಂದ ಸತ್ಯಾಂಶವನ್ನು ಮರೆಮಾಚಿ, ಆಳುವ ವರ್ಗಗಳ ಸುಳ್ಳುಗಳನ್ನು ಮೆರೆಸುತ್ತಿವೆ. ಕಳೆದ ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಬಲಿಯಾದ 59 ಯೋಧರ ಹತ್ಯೆಗೆ ಕಾರಣವೇನು ? ಈ ದಾಳಿಯ ರೂವಾರಿಗಳು ಯಾರು ? ಪ್ರತೀಕಾರದ ಕ್ರಮವಾಗಿ ಭಾರತ ಬಾಲಕೋಟ್ನಲ್ಲಿ ನಡೆಸಿದ ದಾಳಿಯಲ್ಲಿ ಮೃತಪಟ್ಟವರೆಷ್ಟು ? ಇದರ ಸತ್ಯಾಸತ್ಯತೆಗಳೇನು ?
ಈ ಪ್ರಶ್ನೆಗಳಿಗೆ ಉತ್ತರ ಶೋಧಿಸುವುದು ಸುದ್ದಿಮನೆಗಳ ನೈತಿಕ ಜವಾಬ್ದಾರಿಯಲ್ಲವೇ ? ಸರ್ಕಾರ ಸುಳ್ಳು ಹೇಳುತ್ತಿಲ್ಲ ಎಂದಾದರೆ ಸತ್ಯಾಂಶವೇನು ? ಸತ್ಯಾಂಶ ಹೊರಬರುವವರೆಗೂ ಯಾವುದೇ ವಿದ್ಯಮಾನವಾದರೂ ಅರ್ಧಸತ್ಯವಾಗಿಯೇ ಉಳಿಯುತ್ತದೆ ಅಲ್ಲವೇ ? ಇದನ್ನು ಪ್ರಶ್ನಿಸುವ ವ್ಯವಧಾನವನ್ನೇ ಕಳೆದುಕೊಂಡಿರುವ ಮಾಧ್ಯಮಗಳಿಗೆ, ಸುದ್ದಿಮನೆಗಳಿಗೆ ಡ್ರೋನ್ ಪ್ರತಾಪ್ ಎಂಬ ಹುಡುಗನನ್ನು ಗಂಟೆಗಟ್ಟಲೆ ಪ್ರಶ್ನಿಸುವ ನೈತಿಕ ಹಕ್ಕು ಇದೆಯೇ ? ದೇಶಭಕ್ತಿ-ದೇಶದ್ರೋಹದ ಸಮೂಹ ಸನ್ನಿ ಸೃಷ್ಟಿಯಾಗುವುದೇ ಸತ್ಯದ ಸಮಾಧಿಯ ಮೇಲೆ, ಸುಳ್ಳಿನ ಬೇಲಿಗಳ ಒಳಗೆ ಎನ್ನುವ ಸತ್ಯ ಸುದ್ದಿಮನೆಗಳಿಗೆ ತಿಳಿದಿಲ್ಲವೇ ?
ರಾಜಕಾರಣ ಒತ್ತಟ್ಟಿಗಿರಲಿ, ಕಳೆದ ಮೂರು ದಶಕಗಳಲ್ಲಿ ವಿದ್ಯುನ್ಮಾನ ಮಾಧ್ಯಮ ಒಂದು ಸ್ಪಷ್ಟ ನೆಲೆ ಪಡೆದುಕೊಂಡ ನಂತರ ಎಷ್ಟು ಸುಳ್ಳುಗಳನ್ನು ಬಯಲಿಗೆಳೆದಿವೆ. ತಮ್ಮ ಸಿದ್ಧಿ ಸಮಾಧಿ ಯೋಗದ ಮೂಲಕ 2010ರ ವೇಳೆಗೆ ಇಡೀ ವಿಶ್ವವನ್ನೇ ರೋಗಮುಕ್ತವನ್ನಾಗಿ ಮಾಡುವ ತ್ರಿಬಲ್ ಶ್ರೀ ರವಿಶಂಕರ್ ಹಲವರ ಪಾಲಿಗೆ ಸೀದಾ ಸಮಾಧಿ ಯೋಗ ದಯಪಾಲಿಸಿದ್ದರಲ್ಲವೇ ? ತಮ್ಮ ರೀಕೀ ಚಿಕಿತ್ಸೆಯ ಮೂಲಕ ಸರ್ವ ರೋಗಗಳನ್ನೂ ಗುಣಪಡಿಸುವ ಸುಳ್ಳು ಆಶ್ವಾಸನೆ ನೀಡಿದ್ದರಲ್ಲವೇ ? ಬಾಬಾ ರಾಮ್ದೇವ್ ಇದೇ ರೀತಿಯ ಸುಳ್ಳು ಪ್ರಚಾರ ಗಿಟ್ಟಿಸಿ ಕೆಲವೇ ವರ್ಷಗಳಲ್ಲಿ ಕೋಟ್ಯಧಿಪತಿಯಾಗಲಿಲ್ಲವೇ ? ಇಂತಹ ಢೋಂಗಿಗಳ ಎಷ್ಟು ಸುಳ್ಳುಗಳನ್ನು ಸುದ್ದಿಮನೆಗಳು ಬಯಲಿಗೆಳೆದಿವೆ ?
ಬದಲಾಗಿ ಇಂದು ಪ್ರತಿನಿತ್ಯ ಮುಂಜಾನೆ ಸುಳ್ಳಿನ ಸಾಮ್ರಾಜ್ಯಕ್ಕೆ ಅಡಿಪಾಯ ಹಾಕುವುದರಲ್ಲಿ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸುದ್ದಿಮನೆಗಳು ನಿರತರಾಗಿವೆ. ಅಸಂಖ್ಯಾತ ಗುರೂಜಿಗಳು, ಜ್ಯೋತಿಷಿಗಳು, ಹರ್ಬಲ್ ಔಷಧಿಗಳ ತಯಾರಕರು, ಅಧ್ಯಾತ್ಮ ಗುರುಗಳು ತಮ್ಮ ಸುಳ್ಳು ಭರವಸೆಗಳ ಮೂಲಕ ಜನರ ದಿಕ್ಕು ತಪ್ಪಿಸುತ್ತಿರುವುದನ್ನು ನೋಡುತ್ತಲೇ ಇದ್ದೇವೆ. ಕೊರೋನಾ ಮೇ 15ಕ್ಕೆ ಅಂತ್ಯವಾಗುತ್ತದೆ ಎಂದು ಜಗತ್ತಿಗೇ ತಿಳಿಯುವಂತೆ ಸಾರಿ ಸಾರಿ ಹೇಳಿದ ವಿನಯ್ ಕುಮಾರ್ ಎಂಬ ಢೋಂಗಿ ಜ್ಯೋತಿಷಿ ಮತ್ತು ಒಬ್ಬ ಯಕಶ್ಚಿತ್ ಬಾಲಕ ಸುದ್ದಿಮನೆಗಳಲ್ಲಿ ರಾರಾಜಿಸಿಬಿಟ್ಟರಲ್ಲವೇ ? ಇಂದಿಗೂ ಸಹ ಕೊರೋನಾ ಹೋಗಲಾಡಿಸುವ ಸಂಜೀವಿನಿಗಳ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಲೇ ಇವೆ.
ಮತ್ತೊಂದೆಡೆ ಚೀನಾ ಕುರಿತ ಸುಳ್ಳು ಸುದ್ದಿಗಳೂ ಪ್ರಸಾರವಾಗುತ್ತಲೇ ಇವೆ. ಗಡಿ ಪ್ರದೇಶದಲ್ಲಿ ಸಂಘರ್ಷ ಕೊನೆಯಾಗುತ್ತಿದೆ. ಮಾತುಕತೆಗಳ ಮೂಲಕ ಶಾಂತಿ ಕಾಪಾಡಲಾಗುತ್ತಿದೆ. ಪರಸ್ಪರ ಒಪ್ಪಿಗೆಯ ಮೇಲೆ ಉಭಯ ದೇಶಗಳ ಸೇನೆಗಳು ಹಿಂದೆ ಸರಿಯುತ್ತಿವೆ. ಆದರೂ ನಮ್ಮ ಸುದ್ದಿಮನೆಗಳಲ್ಲಿ ಪ್ರಧಾನಿ ಮೋದಿ ಚೀನಾವನ್ನು ಉಡೀಸ್, ಮಟಾಷ್, ಖಲಾಸ್ ಮಾಡುತ್ತಲೇ ಇದ್ದಾರೆ. ಗಡಿಯಲ್ಲಿನ ವಾಸ್ತವ ಸುದ್ದಿಗಳನ್ನು ಬಿತ್ತರಿಸಲೂ ಸಾಧ್ಯವಾಗದ ಸುದ್ದಿಮನೆಗಳು ಸುಳ್ಳುಗಳನ್ನು ಪ್ರಸಾರ ಮಾಡುವುದರ ಮೂಲಕ ಒಂದೆಡೆ ಸ್ವಾಮಿನಿಷ್ಠೆಯನ್ನು ಮೆರೆಯುವ ಸುದ್ದಿಮನೆಗಳು ಮತ್ತೊಂದೆಡೆ ಮಾರುಕಟ್ಟೆಗೂ ಸ್ಪಂದಿಸುತ್ತಿವೆ, ಟಿ ಆರ್ ಪಿಯನ್ನೂ ಹೆಚ್ಚಿಸಿಕೊಳ್ಳುತ್ತಿವೆ.
ಕೋವಿದ್ 19 ಬಿಕ್ಕಟ್ಟಿನ ನಡುವೆ ರಾಜ್ಯ ಸರ್ಕಾರ, ಸಚಿವರು, ಅಧಿಕಾರಶಾಹಿ ಹೇಳುತ್ತಿರುವ ಸುಳ್ಳುಗಳ ಬಗ್ಗೆ ಸೊಲ್ಲೆತ್ತದ ಮಾಧ್ಯಮಗಳಿಗೆ ಒಂದು ಡ್ರೋನ್ ತಯಾರಿಸಿದ್ದಾಗಿ ಸುಳ್ಳು ಹೇಳಿರುವ ಡ್ರೋನ್ ಪ್ರತಾಪ್ ಮಹಾ ದ್ರೋಹಿಯಂತೆ ಕಾಣುತ್ತಿರುವುದು, ಮಾಧ್ಯಮ ಲೋಕದ ನೈತಿಕ ಅಧಃಪತನಕ್ಕೆ ಕನ್ನಡಿ ಹಿಡಿದಂತಿದೆ. ಡ್ರೋನ್ ಪ್ರತಾಪ್ ಸುಳ್ಳು ಹೇಳಿದ್ದರೆ ಶಿಕ್ಷಿಸಲು ಕಾಯ್ದೆ ಕಾನೂನು ಇದೆ. ಈ ಒಂದು ಸುಳ್ಳಿನಿಂದ ಆ ಹುಡುಗನ ವೈಯಕ್ತಿಕ ಪ್ರತಿಷ್ಠೆಗೆ ಧಕ್ಕೆ ಉಂಟಾಗಬಹುದಷ್ಟೇ. ಆದರೆ ಸರ್ಕಾರಗಳು, ಸಚಿವರು ಹೇಳುತ್ತಿರುವ ಸುಳ್ಳುಗಳಿಗೆ ಸಾವಿರಾರು ಜನರು ಬಲಿಯಾಗುತ್ತಿದ್ದಾರೆ. ಇದು ಸುದ್ದಿಮನೆಗಳಿಗೆ ಕಾಣುತ್ತಿಲ್ಲ. ಆದರೂ ಸತ್ಯಮೇವ ಜಯತೇ ಮಂತ್ರವನ್ನು ಮರೆತಿಲ್ಲ.
ಕೋವಿದ್ 19 ಬಿಕ್ಕಟ್ಟಿನ ನಡುವೆಯೂ ದೇಶದಲ್ಲಿ ಆಳುವ ವರ್ಗಗಳು ಸತ್ಯದ ಸಮಾಧಿಯನ್ನು ನಿರ್ಮಿಸಿ ಸುಳ್ಳಿನ ಸಾಮ್ರಾಜ್ಯವನ್ನು ಕಟ್ಟುತ್ತಿದ್ದಾರೆ. ಈ ಸುಳ್ಳುಗಳನ್ನು ಜನತೆಯ ಮುಂದಿಡುವುದು, ಸತ್ಯಾಂಶವನ್ನು ಬಿಂಬಿಸುವುದು ಸುದ್ದಿಮನೆಗಳ ಆದ್ಯತೆಯಾಗಬೇಕು. ಡ್ರೋನ್ ಪ್ರತಾಪ್ ಸಮಾಜ ಘಾತುಕನಲ್ಲ. ಪ್ರಶಸ್ತಿ, ಸಮ್ಮಾನದ ಮಾಯಾಜಿಂಕೆಯನ್ನು ಹಿಂಬಾಲಿಸಿ ಹೋದ ಪ್ರತಾಪ ಸಮಾಜದ ದೃಷ್ಟಿಯಲ್ಲಿ ಸಣ್ಣ ಅಪರಾಧಿಯಷ್ಟೆ. ಇವನನ್ನು ಸ್ಟುಡಿಯೋದಲ್ಲಿ ಗಂಟೆಗಳ ಕಾಲ ಕೂರಿಸಿ ಚಿತ್ರಹಿಂಸೆ ನೀಡುವ ಬದಲು, ಅಧಿಕಾರ ಕೇಂದ್ರಗಳಲ್ಲಿದ್ದುಕೊಂಡು ತಮ್ಮ ಸುಳ್ಳಿನ ಸಾಮ್ರಾಜ್ಯವನ್ನು ವಿಸ್ತರಿಸುತ್ತಿರುವ ಸುಳ್ಳಿನ ಸರದಾರರನ್ನು ಪ್ರಶ್ನಿಸುವ ವಿವೇಚನೆ, ವಿವೇಕ ಮತ್ತು ಬದ್ಧತೆ ಸುದ್ದಿಮನೆಗಳಿಗೆ ಇದ್ದರೆ ಸಾರ್ಥಕವಾದೀತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.
ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.
ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ2 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

