ದಿನದ ಸುದ್ದಿ
ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಿತು.
http://Visit : www.suddidina.com
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಭಾಗವಹಿಸಿದ್ದರು.
ಸಭೆಯಲ್ಲಿ ಮಾತನಾಡಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದ್ದು, ದಾವಣಗೆರೆ ಜಿಲ್ಲೆಯಲ್ಲೂ ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದು ತಿಳಿಸಿದರು. ಚನ್ನಗಿರಿ, ಹೊನ್ನಾಳಿ ಮತ್ತು ಜಗಳೂರು ಭಾಗದಲ್ಲಿ ಮೇವಿನ ಕೊರತೆ ಕಾಣಿಸಿಕೊಂಡಿದ್ದು, ಅಡಿಕೆ, ತೆಂಗು ಮತ್ತು ಬಾಳೆ ಸೇರಿದಂತೆ ತೋಟಗಾರಿಕೆ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಸಭೆಯ ಗಮನಕ್ಕೆ ತಂದರು.
ತೋಟಗಾರಿಕೆ ಬೆಳೆಗಳಿಗೆ ಆಗಿರುವ ಹಾನಿಯನ್ನು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ಬೆಳೆ ವಿಮೆ ಮತ್ತು ವಿಶೇಷ ಪರಿಹಾರ ಪ್ಯಾಕೇಜ್ ನೀಡಬೇಕು ಮತ್ತು ಹನಿ ನೀರಾವರಿಗೆ ಹೆಚ್ಚಿನ ಸಹಾಯಧನ ನೀಡಬೇಕು ಎಂದು ಅವರು ಸಭೆಯಲ್ಲಿ ಒತ್ತಾಯಿಸಿದರು. ಅಂತರ್ಜಲ ಮಟ್ಟ ಕುಸಿಯಲು ಕಾರಣಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅಧ್ಯಯನ ನಡೆಸಿ ಅಕ್ರಮ ಕೊಳವೆಬಾವಿ ಕೊರೆಯುವುದನ್ನು ನಿಯಂತ್ರಿಸಬೇಕು ಮತ್ತು ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಜೊತೆಗೆ ಕೆರೆಗಳಿಗೆ ನೀರು ತುಂಬಿಸುವ, ಗೋಶಾಲೆಗಳನ್ನು ತೆರೆಯುವ ಮತ್ತು ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ಹೆಚ್ಚಿಸುವ ಕುರಿತು ತುರ್ತು ಕ್ರಿಯಾ ಯೋಜನೆ ರೂಪಿಸಬೇಕು ಎಂದು ಮನವಿ ಮಾಡಿದರು.
ಬರ ಪೀಡಿತ ಪ್ರದೇಶಗಳನ್ನು ಗುರುತಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಸ್ಥಳೀಯ ಆಡಳಿತ ಹಾಗೂ ಎಲ್ಲ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ದಿನದ ಸುದ್ದಿ
ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್ಗಳಾದ ಓಲಾ, ಉಬರ್, ರ್ಯಾಪಿಡೋ ನಂತಹ ಆ್ಯಪ್ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
http://Visit : www.suddidina.com
ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.
ನಮ್ಮ ಬಿಎಂಟಿಸಿ 2.0′ ಆ್ಯಪ್ನಲ್ಲಿ ಏನಿದೆ ಹೊಸತು?
ಖಾಸಗಿ ಆ್ಯಪ್ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್ನಲ್ಲಿ ಬಿಎಂಟಿಸಿ ನೆಟ್ವರ್ಕ್ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್ಗಳು ಸೇರಿದಂತೆ ಒಟ್ಟು 6,938 ಬಸ್ಗಳಿವೆ. ಪ್ರತಿದಿನ ಸರಾಸರಿ 6,200 ಬಸ್ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.
ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ:
ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
200 ಹೊಸ ಮಿನಿ ಬಸ್ಗಳ ಖರೀದಿ:
ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.
ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:
ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್ಗಳ ಪೈಕಿ 200 ಮಿನಿ ಎಸಿ ಇ-ಬಸ್ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

ದಿನದ ಸುದ್ದಿ
ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡುವುದು ಪ್ರತಿಯೊಬ್ಬ ನಾಗರಿಕ ಹಾಗೂ ಜವಾಬ್ದಾರಿಯುತ ಸಮಾಜದ ಕರ್ತವ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ತಿಳಿಸಿದರು.
http://Visit : www.suddidina.com
ತಾಲ್ಲೂಕು ನಿವೃತ್ತ ನೌಕರರ ಸಂಘ ಹಾಗೂ ಚಿತ್ರದುರ್ಗ ತಾಲ್ಲೂಕು ನಿವೃತ್ತ ನೌಕರರ ಮನರಂಜನಾ ಮತ್ತು ಸಾಂಸ್ಕೃತಿಕ ಸಂಘದವತಿಯಿಂದ ನಗರದ ಮಾಳಪ್ಪನಹಟ್ಟಿ ರಸ್ತೆಯಲ್ಲಿನ ತೀಕ್ಷ್ಣ ಅಂಧ ಮಕ್ಕಳ ಪುನಶ್ಚೇತನ ವಸತಿಯುತ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಸಂಗೀತ ವಾಧೋಪಕರಣಗಳ ಕೂಡುಗೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಸಂಗೀತ ಶಿಕ್ಷಣ ನೀಡಿ ಅವರ ಬದುಕಿಗೆ ಬೆಳಕಾಗುವ ಉದ್ದೇಶದಿಂದ ವಾದ್ಯೋಪಕರಣಗಳನ್ನು ವಿತರಿಸಲಾಗುತ್ತಿದೆ. ನೌಕರಿಯಿಂದ ನಿವೃತ್ತರಾದ ನಂತರ ಕೇವಲ ವೈಯಕ್ತಿಕ ಜೀವನಕ್ಕೆ ಸೀಮಿತವಾಗದೆ, ಸಂಘಟಿತರಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ನಿವೃತ್ತ ನೌಕರರ ಸಂಘದ ಶ್ರಮವನ್ನು ಕೆ.ಎಸ್.ನವೀನ್ ಮುಕ್ತಕಂಠದಿಂದ ಶ್ಲಾಘಿಸಿದರು.
ಅಂಧರಾಗಿದ್ದರೂ ತಮ್ಮ ಅಸಾಧಾರಣ ಗಾಯನ ಹಾಗೂ ಸಂಗೀತ ಸಾಧನೆಯಿಂದ ಜಗತ್ತಿಗೇ ಮಾದರಿಯಾದ ಪಂಡಿತ ಪುಟ್ಟರಾಜ ಗವಾಯಿಗಳ ಉದಾಹರಣೆಯನ್ನು ನೀಡಿದ ಕಲೆ ಎಂಬುದು ಯಾರದ್ದೂ ವೈಯಕ್ತಿಕ ಸ್ವತ್ತಲ್ಲ. ಇಂದು ಮಕ್ಕಳಿಗೆ ನೀಡಲಾಗುತ್ತಿರುವ ಹಾರ್ಮೋನಿಯಂ, ತಬಲಾ ಹಾಗೂ ಕೀಬೋರ್ಡ್ಗಳಂತಹ ವಾದ್ಯೋಪಕರಣಗಳ ಮೂಲಕ ಸೂಕ್ತ ತರಬೇತಿ ನೀಡಿದರೆ, ಈ ಮಕ್ಕಳೂ ಸಹ ಭವಿಷ್ಯದಲ್ಲಿ ಉನ್ನತ ಮಟ್ಟದ ಸಂಗೀತಗಾರರಾಗಿ ಜಿಲ್ಲೆ, ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಕೀರ್ತಿ ತರಬಲ್ಲರು ಎಂದು ವಿಶ್ವಾಸ ವ್ಯಕ್ತಪಡಿಸಿ ಈ ಮಕ್ಕಳಿಗೆ ಪ್ರತಿದಿನ ನಿಯಮಿತವಾಗಿ ಸಂಗೀತ ಶಿಕ್ಷಕರ ಮೂಲಕ 2 ರಿಂದ 3 ಗಂಟೆಗಳ ಕಾಲ ತರಬೇತಿ ನೀಡಿ, ಅವರಲ್ಲಿರುವ ಪ್ರತಿಭೆಯನ್ನು ಹೊರತರಬೇಕು ಎಂದು ಸಂಸ್ಥೆಯ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು.
ವಿಶೇಷ ಚೇತನ ಮಕ್ಕಳನ್ನು ಭಿಕ್ಷಾಟನೆ ಅಥವಾ ಸಮಾಜದ ಕೀಳರಿಮೆಯಿಂದ ದೂರವಿಟ್ಟು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ಇಂತಹ ಕಾರ್ಯಕ್ರಮಗಳ ಮುಖ್ಯ ಉದ್ದೇಶವಾಗಿದೆ. ತಾಲೂಕು ನಿವೃತ್ತ ನೌಕರರ ಸಂಘ ಹಾಗೂ ಪುನಶ್ಚೇತನ ಸಂಸ್ಥೆಯ ಈ ಮಾನವೀಯ ಕಳಕಳಿಯ ಕಾರ್ಯವು ಸಮಾಜಕ್ಕೆ ಮಾದರಿಯಾಗಿದೆ ಎಂದ ಅವರು ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡುವುದು ಪ್ರತಿಯೊಬ್ಬ ನಾಗರಿಕ ಹಾಗೂ ಜವಾಬ್ದಾರಿಯುತ ಸಮಾಜದ ಕರ್ತವ್ಯವಾಗಿದೆ ಎಂದು ಕೆ.ಎಸ್.ನವೀನ್ ತಿಳಿಸಿದರು.
ಚಿತ್ರದುರ್ಗ ತಾಲ್ಲೂಕು ನಿವೃತ್ತ ನೌಕರರ ಸಂಘ ಹಾಗೂ ಚಿತ್ರದುರ್ಗ ತಾಲ್ಲೂಕು ನಿವೃತ್ತ ನೌಕರರ ಮನರಂಜನಾ ಮತ್ತು ಸಾಂಸ್ಕೃತಿಕ ಸಂಘದವ ಅಧ್ಯಕ್ಷರಾದ ಬಿ.ಕೆ.ಹನುಮಂತಪ್ಪ ಮಾತನಾಡಿ, ಸಂಘದ ನಿವೃತ್ತ ನೌಕರರು ಕೇವಲ ದಿನನಿತ್ಯದ ಚಟುವಟಿಕೆಗಳಿಗೆ ಸೀಮಿತವಾಗದೆ ಇಂತಹ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಪ್ರಶಂಸನೀಯ. ತಾಲೂಕಿನ ನಿವೃತ್ತ ನೌಕರರ ಸಂಘವು ಹಮ್ಮಿಕೊಳ್ಳುತ್ತಿರುವ ಉತ್ತಮ ಕಾರ್ಯ ಯೋಜನೆಗಳಿಗೆ ಸಾರ್ವಜನಿಕರಿಂದ ಉತ್ತಮ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿ ಈ ಹಿಂದೆ ಗೋನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರಾಶ್ರಿತರಿಗೆ ವೈದ್ಯಕೀಯ ಕಿಟ್ಗಳನ್ನು ವಿತರಿಸಲಾಗಿತ್ತು. ಅದೇ ರೀತಿಯಲ್ಲಿ ಈ ಶಾಲೆಯ ಮಕ್ಕಳಿಗೆ ಶಾಶ್ವತವಾಗಿ ಉಪಯೋಗವಾಗಲಿ ಎಂಬ ಉದ್ದೇಶದಿಂದ ಸಂಗೀತೋಪಕರಣಗಳ ಪರಿಕರಗಳನ್ನು ವಿತರಿಸಲಾಗಿದೆ ಎಂದರು.
ವಿಶೇಷ ಚೇತನ ಮಕ್ಕಳ ಶ್ರೇಯೋಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಸಹಕರಿಸಬೇಕು ಪ್ರಸ್ತುತ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಅವರ ಕುಟುಂಬದವರಿಗೆ ಸಂಘದ ವತಿಯಿಂದ ಸಂಪೂರ್ಣ ಸಹಕಾರ ಹಾಗೂ ಬೆಂಬಲ ನೀಡಲಾಗುವುದು ಎಂದು ಭರವಸೆ ನೀಡಿ ನಿವೃತ್ತ ನೌಕರರ ಸಂಘವು ಮುಂದೆಯೂ ಇಂತಹ ಹಲವಾರು ನಿಸ್ವಾರ್ಥ ಸಾಮಾಜಿಕ ಸೇವೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲಿದೆ ಎಂದು ಹನುಮಂತಪ್ಪ ತಿಳಿಸಿದರು.
ಕಾರ್ಯಕ್ರಮದಲ್ಲಿ ತೀಕ್ಷ್ಣ ಅಂಧ ಮಕ್ಕಳ ಪುನಶ್ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಕೆ.ಎಸ್.ಕೌಶಲ್ಯ ಕಾರ್ಯದರ್ಶಿ ಕೆ.ಎಸ್.ಕಾರ್ತಿಕ್, ಚಿತ್ರದುರ್ಗ ತಾಲ್ಲೂಕು ನಿವೃತ್ತ ನೌಕರರ ಮನರಂಜನಾ ಮತ್ತು ಸಾಂಸ್ಕೃತಿಕ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಪರಮೇಶ್ವರಪ್ಪ ಉಪಾಧ್ಯಕ್ಷರಾದ ಪಿ.ಎಸ್.ಶಿವಕುಮಾರ್, ಸಹ ಕಾರ್ಯದರ್ಶಿ ಎ.ಜಿ.ದೇವೇಂದ್ರಪ್ಪ, ಖಂಜಾಚಿ ಎಸ್.ಹಾಲಾನಾಯ್ಕ್, ನಿರ್ದೆಶಕರಾದ ಇ.ನಾಗರಾಜ್, ಟಿ.ಉಮಾಶಂಕರ್, ಚಿತ್ರದುರ್ಗ ತಾಲ್ಲೂಕು ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷರಾದ ಮಾದಯ್ಯ, ಶ್ರೀಮತಿ ಪ್ರೇಮಾರಾಜಾರಾಮ್, ಖಂಜಾಚಿ ಚಿನ್ನಪ್ಪ ಕೃಷ್ಣಮೂರ್ತಿ, ಜಿ.ವಿ.ನಾಗರಾಜ್, ಕೆ.ನಾಗರಾಜ್ ಸಲಹಾ ಸಮಿತಿ ಸದಸ್ಯರಾದ ವಿ.ಬಿ.ತಿಮ್ಮಾರೆಡ್ಡಿ, ಬಿಎಸ್.ಚಂದ್ರಶೇಖರಪ್ಪ, ಎಂ.ಶ್ರೀನಿವಾಸ್ ಮೂರ್ತಿ, ಕೆ.ರವಿಶಂಕರ್ ಭಾಗವಹಿಸಿದ್ದರು.

ದಿನದ ಸುದ್ದಿ
ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಈ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು.
http://Visit : www.suddidina.com
ಭದ್ರಾ ಮೇಲ್ದಂಡೆ ಯೋಜನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಶೇಷ ಕಾಳಜಿ ವಹಿಸಿದ್ದು, ಚಿತ್ರದುರ್ಗ ಜಿಲ್ಲೆಗೆ ಭದ್ರಾ ನೀರು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ಹಾಗೂ ಮಾರ್ಗದರ್ಶನ ನೀಡುತ್ತಿದ್ದಾರೆ. ಹಲವು ವರ್ಷಗಳಿಂದ ಭದ್ರಾ ನೀರಿಗಾಗಿ ಕಾಯುತ್ತಿದ್ದ ಜಿಲ್ಲೆಯ ರೈತರಿಗೆ ನೀರು ಹರಿದುಬಂದಿರುವುದು ಸಂತಸದ ಸಂಗತಿಯಾಗಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ಜಿಲ್ಲೆಯ ನೀರಾವರಿ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭವಾಗುವ ನಿರೀಕ್ಷೆ ಇದೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದು ಹಾಗೂ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಪ್ರಮುಖವಾಗಿದೆ. ಚಿತ್ರದುರ್ಗ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ಕೃಷಿ ಚಟುವಟಿಕೆಗಳು ಮಳೆಯನ್ನೇ ಅವಲಂಬಿಸಿವೆ. ಇಂತಹ ಸಂದರ್ಭದಲ್ಲಿ ಭದ್ರಾ ನೀರು ಜಿಲ್ಲೆಯ ಕೆರೆಗಳಿಗೆ ಲಭ್ಯವಾದರೆ ರೈತರಿಗೆ ಸ್ಥಿರವಾದ ನೀರಿನ ಮೂಲ ದೊರೆಯುವಂತಾಗಲಿದೆ ಎಂದರು.
ಕೆರೆಗಳಿಗೆ ನೀರು ಹರಿದುಬಂದಾಗ ಕೇವಲ ಕೆರೆಗಳೇ ತುಂಬುವುದಲ್ಲದೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂತರ್ಜಲ ಮರುಪೂರಣಕ್ಕೂ ಸಹಕಾರಿಯಾಗಲಿದೆ. ಇದರಿಂದ ಕೊಳವೆಬಾವಿ ಹಾಗೂ ತೆರೆದ ಬಾವಿಗಳಲ್ಲಿ ನೀರಿನ ಲಭ್ಯತೆ ಹೆಚ್ಚುವ ಸಾಧ್ಯತೆ ಇದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ನೀರಾವರಿ ವಿಸ್ತರಣೆಯಾದರೆ ರೈತರು ವಿವಿಧ ಬೆಳೆಗಳನ್ನು ಬೆಳೆಯಲು ಅವಕಾಶ ದೊರೆಯುವುದರ ಜೊತೆಗೆ ಕೃಷಿ ಆಧಾರಿತ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ಸಿಗಲಿದೆ ಎಂದು ಅವರು ಹೇಳಿದರು.
ರೈತರ ಬಹುದಿನಗಳ ನಿರೀಕ್ಷೆಗೆ ಸ್ಪಂದನೆ
ಭದ್ರಾ ಮೇಲ್ದಂಡೆ ಯೋಜನೆಗಾಗಿ ಜಿಲ್ಲೆಯ ರೈತರು ಹಾಗೂ ವಿವಿಧ ಸಂಘಟನೆಗಳು ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿವೆ. ನೀರಿನ ಸಮಸ್ಯೆಯಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಈ ಯೋಜನೆ ಆಶಾಕಿರಣವಾಗಿದೆ. ಯೋಜನೆಯ ನೀರು ನಿಗದಿತ ಪ್ರದೇಶಗಳಿಗೆ ಸಮರ್ಪಕವಾಗಿ ತಲುಪುವಂತೆ ಕಾಮಗಾರಿಗಳ ಪ್ರಗತಿ, ಕಾಲುವೆ ವ್ಯವಸ್ಥೆ ಹಾಗೂ ನೀರು ಹಂಚಿಕೆ ವ್ಯವಸ್ಥೆಯ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು, ಚಿತ್ರದುರ್ಗ ಜಿಲ್ಲೆಯ ಕೃಷಿ ಅಭಿವೃದ್ಧಿಗೆ ನೀರಾವರಿ ಅತ್ಯಂತ ಪ್ರಮುಖವಾಗಿದೆ. ಮಳೆಯ ಅನಿಶ್ಚಿತತೆ ಹಾಗೂ ಬರಗಾಲದ ಪರಿಸ್ಥಿತಿಯಿಂದ ರೈತರು ಪದೇಪದೇ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಭದ್ರಾ ನೀರು ಲಭ್ಯವಾದಲ್ಲಿ ಕೃಷಿ ಉತ್ಪಾದಕತೆ ಹೆಚ್ಚುವುದರ ಜೊತೆಗೆ ರೈತರ ಆದಾಯವನ್ನೂ ಸುಧಾರಿಸಲು ಸಹಕಾರಿಯಾಗಲಿದೆ ಇಂದು ಅಭಿಪ್ರಾಯ ತಿಳಿಸಿದ್ದಾರೆ.
ಕುಡಿಯುವ ನೀರಿಗೂ ಅನುಕೂಲ
ಭದ್ರಾ ಮೇಲ್ದಂಡೆ ಯೋಜನೆಯಿಂದ ಕೆರೆಗಳು ಹಾಗೂ ಜಲಮೂಲಗಳಿಗೆ ನೀರು ಲಭ್ಯವಾದರೆ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಲ್ಲಿಯೂ ಪರೋಕ್ಷವಾಗಿ ಸಹಕಾರಿಯಾಗಲಿದೆ. ಬೇಸಿಗೆ ಸಂದರ್ಭದಲ್ಲಿ ನೀರಿನ ಮೂಲಗಳು ಬತ್ತಿಹೋಗುವುದರಿಂದ ಎದುರಾಗುವ ಸಮಸ್ಯೆಯನ್ನು ಕಡಿಮೆ ಮಾಡಲು ಜಲಮೂಲಗಳ ಸಂರಕ್ಷಣೆ ಹಾಗೂ ಅಂತರ್ಜಲ ಮಟ್ಟ ಸುಧಾರಣೆ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಯೋಜನೆಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ನೀರು ನಿಗದಿತ ಪ್ರದೇಶಗಳಿಗೆ ಸಮರ್ಪಕವಾಗಿ ತಲುಪುವಂತೆ ಸರ್ಕಾರ ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನೀರಿನ ಬಳಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಕೆರೆಗಳ ಸಂರಕ್ಷಣೆ ಹಾಗೂ ನೀರು ವ್ಯರ್ಥವಾಗದಂತೆ ಕ್ರಮವಹಿಸುವುದು ಕೂಡ ಅಷ್ಟೇ ಮುಖ್ಯವಾಗಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡು ಜಿಲ್ಲೆಯ ಕೆರೆಗಳಿಗೆ ಸಮರ್ಪಕವಾಗಿ ನೀರು ಲಭ್ಯವಾದರೆ ಚಿತ್ರದುರ್ಗ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಸಾಧ್ಯವಾಗಲಿದೆ. ರೈತರ ಬಹುದಿನಗಳ ನೀರಿನ ನಿರೀಕ್ಷೆ ಈಡೇರುವುದರ ಜೊತೆಗೆ ಮಧ್ಯ ಕರ್ನಾಟಕದ ಅಭಿವೃದ್ಧಿಗೂ ಯೋಜನೆ ಹೊಸ ವೇಗ ನೀಡಲಿದೆ. ಈ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಜನಪ್ರತಿನಿಧಿಗಳು, ಹೋರಾಟಗಾರರು ಸಂಘ ಸಂಸ್ಥೆಗಳು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದ್ದಾರೆ ಅದರ ಅನ್ವಯವಾಗಿ ಚಿತ್ರದುರ್ಗ ಜಿಲ್ಲೆಗೆ ಹರಿದು ಬಂದಿದ್ದಾಳೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದ್ದಾರೆ.

-
ದಿನದ ಸುದ್ದಿ8 hours agoಬೆಂಗಳೂರು ಇ-ಕಾಮರ್ಸ್ ಡಾರ್ಕ್ ಸ್ಟೋರ್ಗಳಲ್ಲಿ ಅವಧಿ ಮೀರಿದ ಆಹಾರ, ಔಷಧ ಪತ್ತೆ
-
ದಿನದ ಸುದ್ದಿ7 hours agoಮಧ್ಯಪ್ರಾಚ್ಯದಲ್ಲಿ ಏಳು ತಿಂಗಳಿನಿಂದ ಯುದ್ಧದ ಕಾರ್ಮೋಡ – ಇರಾನ್–ಅಮೆರಿಕ ಸಂಘರ್ಷ ತೀವ್ರ
-
ದಿನದ ಸುದ್ದಿ7 hours agoಸ್ಕ್ರೀನ್ ಬೆಳಕು, ಸಾಮಾಜಿಕ ಜಾಲತಾಣ – ನಿದ್ರೆಗೆ ಅಡ್ಡಿ, ಆರೋಗ್ಯಕ್ಕೆ ಹಾನಿ
-
ದಿನದ ಸುದ್ದಿ8 hours agoGold Rate Fall: 24 ಕ್ಯಾರೆಟ್ ಚಿನ್ನದ ದರ ₹104 ಇಳಿಕೆ, ಬೆಳ್ಳಿ ಗ್ರಾಂಗೆ ₹250 ಸ್ಥಿರ
-
ದಿನದ ಸುದ್ದಿ8 hours agoದಾವಣಗೆರೆ ನಗರಕ್ಕೆ ರಾಜ್ಯಮಟ್ಟದ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಪ್ರಶಸ್ತಿಯ ಗರಿ: ರೂ 25.00 ಲಕ್ಷ ನಗದು ಬಹುಮಾನ
-
ದಿನದ ಸುದ್ದಿ7 hours agoKPSCExam: ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ವೈದ್ಯರ ಕೊರತೆ – ತಕ್ಷಣ ನೇಮಕಾತಿ ಅಗತ್ಯ
-
ದಿನದ ಸುದ್ದಿ7 hours agoಬೆಂಗಳೂರು ಸೆಪ್ಟೆಂಬರ್ನಲ್ಲಿ 31.9 ಡಿ.ಸೆ. ದಾಖಲೆ – ಹವಾಮಾನ ಇಲಾಖೆ ಎಚ್ಚರಿಕೆ
-
ದಿನದ ಸುದ್ದಿ5 hours agoEV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ




