ಬಹಿರಂಗ
ದುಸ್ತರ ಬದುಕು ದುರ್ಭರ ಹಾದಿಯಲ್ಲಿ ಹೊಸ ಸಂವತ್ಸರದ ಸಂಭ್ರಮ
ಶ್ರಮಜೀವಿಗಳ ಬದುಕನ್ನು ಕರಾಳ ಕೂಪಕ್ಕೆ ತಳ್ಳುತ್ತಿರುವ ದುಷ್ಟ ವ್ಯವಸ್ಥೆಯಲ್ಲಿ ಎಂತಹ ಸಂಭ್ರಮ ?
- ನಾ ದಿವಾಕರ
ಭಾರತದ ಪರಂಪರೆಯಲ್ಲಿ ನವ ಸಂವತ್ಸರದ ಆರಂಭವಾಗುವುದು ಯುಗಾದಿಯೊಂದಿಗೆ. ಇಂದು ದೇಶಾದ್ಯಂತ ಹಿಂದೂಗಳು ಸಂಭ್ರಮದಿಂದ ಯುಗಾದಿ ಹಬ್ಬವನ್ನು ಆಚರಿಸುತ್ತಾ, ನವ ಸಂವತ್ಸರವನ್ನು ಸ್ವಾಗತಿಸುತ್ತಾರೆ. ಹಬ್ಬ ಎಂಬ ಪರಿಕಲ್ಪನೆಯೇ ಜನಸಂಸ್ಕೃತಿಯ ಒಡಲಿನಲ್ಲಿ ಮೂಡಿರುವ ಒಂದು ವಿದ್ಯಮಾನ.
ಸಾರ್ವತ್ರಿಕವಾಗಿ ಒಂದು ಜನ ಸಮುದಾಯ ತನ್ನೊಳಗಿನ ಎಲ್ಲ ವೈರುಧ್ಯಗಳನ್ನೂ ಮರೆತು, ತನ್ನ ಆಂತರ್ಯದೊಳಗೆ ಅಡಗಿರಬಹುದಾದ ಎಲ್ಲ ಕಲ್ಮಶಗಳನ್ನೂ ತೊಡೆದುಹಾಕಿ, ಸಮಸ್ತ ಮಾನವ ಕೋಟಿ ಒಂದೇ ಎಂಬ ಭಾವನಾತ್ಮಕ ಸಂದೇಶದೊಡನೆ ಸಾರ್ವಜನಿಕವಾಗಿ ಆಚರಿಸುವುದು ಯಾವುದೇ ಹಬ್ಬದ ವಿಶೇಷ. ವೈದಿಕಶಾಹಿಯ ಸ್ವಾಧೀನಕ್ಕೊಳಪಟ್ಟು ಭಾರತದ ಅನೇಕಾನೇಕ ಹಬ್ಬದ ಆಚರಣೆಗಳು ತಮ್ಮ ಮೂಲ ಅರ್ಥವನ್ನು ಕಳೆದುಕೊಂಡಿರುವ ಈ ಸಂದರ್ಭದಲ್ಲೇ ಭಾರತ ಮತ್ತೊಂದು ಯುಗಾದಿಯನ್ನು ಆಚರಿಸುತ್ತಿದೆ.
ಹಬ್ಬದ ಪರಿಕಲ್ಪನೆಯೇ ಸಾಪೇಕ್ಷವಾದುದು. ಹಬ್ಬದ ಆಚರಣೆಯೂ ಸಹ ಸಾಮಾಜಿಕ ಶ್ರೇಣೀಕರಣಕ್ಕೆ ಅನುಗುಣವಾಗಿಯೇ ನಡೆಯುತ್ತದೆ. ತನ್ನ ನಿತ್ಯ ಬದುಕಿನ ಬವಣೆಗಳನ್ನೇ ನೀಗಿಸಲು ಸಾಧ್ಯವಾಗದ ಒಂದು ದುಡಿಮೆಯ ಜೀವಕ್ಕೆ ಹಬ್ಬ ಎನ್ನುವುದು ವಿಶೇಷ ಎನಿಸುವುದಿಲ್ಲ.
ಹಸಿರು ತೋರಣ, ಸುಂದರ ರಂಗೋಲಿ, ಬಾಳೆಲೆಯ ಊಟ ಈ ಸಂಭ್ರಮಗಳು ಸಮಾಜದ ಮೇಲ್ ಸ್ತರದ ಸಮುದಾಯಗಳಿಗೆ ಲಭ್ಯವಾಗುವ ಸವಲತ್ತುಗಳಷ್ಟೇ. ಆದರೂ ಕಡುಬಡತನ ಎದುರಿಸುವ ಕುಟುಂಬಗಳೂ ಹಬ್ಬವನ್ನು ತಮ್ಮದೇ ಆದ ರೀತಿಯಲ್ಲಿ ಆಚರಿಸುತ್ತವೆ. ಹೊಸ ವರ್ಷವನ್ನು ಸ್ವಾಗತಿಸುವ ಯುಗಾದಿ ಈ ಬಡಜನತೆಯ ಪಾಲಿಗೆ ಹೊಸತನ್ನೇನೂ ತರುವುದಿಲ್ಲ. ಹಾಗೆಯೇ ಗತಿಸಿದ ವರುಷದ ಸಂಕಷ್ಟಗಳ ನಿವಾರಣೆಯೂ ಆಗುವುದಿಲ್ಲ.
ತಮ್ಮ ಜೀವನೋಪಾಯದ ಮಾರ್ಗಗಳು ಕಠಿಣವಾಗುತ್ತಿರುವುದನ್ನು ಮೌನಸಮ್ಮತಿಯೊಂದಿಗೆ ಎದುರಿಸುತ್ತಲೇ, ಶ್ರಮ ಶೋಷಣೆಯ ಮೂಲ, ಸ್ವರೂಪ ಮತ್ತು ಕಾರಣಗಳನ್ನು ಅರಿಯದ ಶ್ರಮಜೀವಿಗಳು ಶೊಷಕ ಸಮಾಜದ ಪರಿಚಾರಕರೊಡನೆ ಮುಖಾಮುಖಿಯಾಗುತ್ತಾ ಬದುಕು ಸವೆಸುತ್ತಾರೆ. “ ಸಮಸ್ತ ಜನಕೋಟಿಗೂ ಯುಗಾದಿಯ ಶುಭಾಶಯಗಳು ” ಎಂದು ಸಾರ್ವಜನಿಕವಾಗಿ ಕೋರುವ ಪ್ರತಿಯೊಂದು ಮನಸಿಗೂ ಹೊಳೆಯಬೇಕಾದ ಒಂದು ವಾಸ್ತವ ಎಂದರೆ, ಈ ಸಮಸ್ತ ಜನಕೋಟಿಯಲ್ಲಿ ಬಹುಪಾಲು ಜನರಿಗೆ ಬದುಕು ಹಸನಾಗಿರುವುದಿಲ್ಲ. ಅವರ ಭೂತ ಮತ್ತು ವರ್ತಮಾನದಂತೆಯೇ ಭವಿಷ್ಯವೂ ಅದೇ ಶೋಷಕ ಸಮಾಜದ ಕ್ರೂರ ವ್ಯವಸ್ಥೆಗೆ ಬಲಿಯಾಗಿ ಕರಾಳ ದಿನಗಳನ್ನು ಎದುರಿಸುತ್ತಿರುತ್ತದೆ.
ಹೊಸ ವರ್ಷದ ಆಗಮನವನ್ನು ಸ್ವಾಗತಿಸುವ ಮುನ್ನ, ನಮ್ಮ ಸುತ್ತಲಿನ ಮಾನವ ಸಮಾಜ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಒಮ್ಮೆ ಗಮನಿಸಿದಾಗ, ನಮಗೆ ಎಂತಹ ಹೊಸ ವರ್ಷದ ಅವಶ್ಯಕತೆ ಇದೆ ಎನ್ನುವುದೂ ಮನದಟ್ಟಾಗುತ್ತದೆ. ಜಾತಿ, ಮತ, ಧರ್ಮ,ಪಂಥ, ಲಿಂಗ ಹೀಗೆ ಅಸ್ಮಿತೆಗಳ ಚೌಕಟ್ಟುಗಳಲ್ಲಿ ಜನಸಾಮಾನ್ಯರನ್ನು ಬಂಧಿಸಿಟ್ಟು, ತನ್ನ ಬೆವರಿನ ದುಡಿಮೆಯಿಂದಲೇ ಅನ್ನ ಉಣ್ಣುವ ಶ್ರಮಜೀವಿಯ ಊಟದ ತಟ್ಟೆಯಲ್ಲೂ ತಾರತಮ್ಯದ ವಿಷಬೀಜಗಳನ್ನು ಉಣಬಡಿಸುವ ಒಂದು ವಿಕೃತ ಸಾಂಸ್ಕೃತಿಕ ವಿದ್ಯಮಾನವನ್ನು ನಾವು ಕಾಣುತ್ತಿದ್ದೇವೆ. ಪ್ರೀತಿ, ಆದರ, ವಾತ್ಸಲ್ಯ, ಸೋದರತ್ವ ಮತ್ತು ಮಾನವ ಪ್ರೀತಿಯನ್ನು ಪೋಷಿಸಬೇಕಾದ ಸಾಂಸ್ಥಿಕ ವೇದಿಕೆಗಳು, ಜನಸಾಮಾನ್ಯರ ನಡುವೆ ದ್ವೇಷ, ಮತ್ಸರ, ಅಸೂಯೆ ಮತ್ತು ತಾರತಮ್ಯದ ವಿಷಬೀಜಗಳನ್ನು ಬಿತ್ತುತ್ತಿರುವುದನ್ನು ನೋಡುತ್ತಿದ್ದೇವೆ.
ಶ್ರಮಿಕರ ಬದುಕನ್ನು ಹೊರಗಿಟ್ಟು ಮಾನವ ಸಮಾಜ ಯಾವುದೇ ಸಂದರ್ಭವನ್ನೂ ಸಂಭ್ರಮಿಸಲಾಗುವುದಿಲ್ಲ. ಯುಗಾದಿಯ ಹೊಸವರ್ಷಾಚರಣೆಯನ್ನೂ ಸಹ. ಇಂದು ದೇಶದ ರಾಷ್ಟ್ರಪತಿ, ಪ್ರಧಾನಿಯಿಂದ ಹಿಡಿದು ಗ್ರಾಮಪಂಚಾಯತ್ ಸದಸ್ಯನವರೆಗೂ ಎಲ್ಲ ಹಂತದ ಜನಪ್ರತಿನಿಧಿಗಳೂ ಜನತೆಗೆ ಹೊಸ ವರ್ಷಾಚರಣೆಯ ಶುಭಾಶಯಗಳನ್ನು ಕೋರುತ್ತಾರೆ.
ಈ ಯಾಂತ್ರಿಕ ಸಂದೇಶಗಳು ಕೋಟ್ಯಂತರ ಜನರನ್ನು ತಲುಪುತ್ತವೆ. ಮನುಜ ಸಮಾಜವನ್ನು ಒಂದುಗೂಡಿಸಲು ನೆರವಾಗುವ ಈ ಸಂದೇಶಗಳು ಭಾವನಾತ್ಮಕ ದೃಷ್ಟಿಯಿಂದ ಅಪ್ಯಾಯಮಾನವೆನಿಸಿದರೂ, ಶ್ರೇಣೀಕೃತ ಜಾತಿ ವ್ಯವಸ್ಥೆ ಮತ್ತು ಅನ್ಯ ಮತ ದ್ವೇಷದ ಆಂತರಿಕ ಬೇಗುದಿಯು ಇಡೀ ಸಮಾಜವನ್ನು ಒಳಗಿನಿಂದಲೇ ಕ್ಯಾನ್ಸರ್ ರೋಗದಂತೆ ಹರಡಿ ಶಿಥಿಲಗೊಳಿಸುತ್ತಿರುವುದನ್ನು ಗಮನಿಸಿದಾಗ, ಈ ಸಂದೇಶಗಳು ನಾಟಕೀಯ ಎನಿಸಿಬಿಡುತ್ತವೆ.
75 ವರ್ಷಗಳ ಸ್ವತಂತ್ರ ಆಳ್ವಿಕೆಯ ನಂತರ ಪ್ರಪ್ರಥಮ ಬಾರಿಗೆ ಭಾರತದಲ್ಲಿ ಜನಸಾಮಾನ್ಯರು ನಿತ್ಯ ಸೇವಿಸುವ ಆಹಾರ ಮತ್ತು ಬಳಸುವ ವಸ್ತುಗಳು, ಸಾಂಸ್ಥಿಕವಾಗಿ ನಿರ್ದೇಶಿಸಲ್ಪಡುತ್ತಿವೆ. ಯಾರು ಏನನ್ನು ತಿನ್ನಬೇಕು, ಯಾವ ಆಹಾರವನ್ನು ತ್ಯಜಿಸಬೇಕು, ಯಾವುದನ್ನು ತಿರಸ್ಕರಿಸಬೇಕು, ಯಾರಿಂದ ಪಡೆಯಬೇಕು, ಯಾರಿಗೆ ನೀಡಬೇಕು, ತಿನ್ನುವ ಆಹಾರದಲ್ಲಿ ಏನಿರಬೇಕು-ಏನಿರಬಾರದು, ಯಾವ ಸಮಯದಲ್ಲಿ ಏನು ತಿನ್ನಬೇಕು, ಹೀಗೆ ಮನುಷ್ಯ ತನ್ನ ಸಹಜ ಬದುಕಿನಲ್ಲಿ ತನ್ನದೇ ಆದ ವ್ಯಕ್ತಿಗತ ಸ್ವಾತಂತ್ರ್ಯದೊಂದಿಗೆ ಅನುಸರಿಸಬೇಕಾದ ಆಹಾರ ಪದ್ಧತಿ ಇಂದು ನಿರ್ದೇಶಿತವಾಗುತ್ತಿದೆ.
ಧಾರ್ಮಿಕ ಗ್ರಂಥಗಳಿಂದ ನಿರ್ದೇಶಿತರಾಗಿ ತಮ್ಮ ಬದುಕನ್ನು ರೂಪಿಸಿಕೊಂಡಿರುವ ಮತನಿಷ್ಠರೂ ಸಹ ಈಗ ನೂತನ ಧಾರ್ಮಿಕ ವ್ಯಾಖ್ಯಾನಕಾರರ ನಿರ್ದೇಶನಗಳಿಗೆ ಮಾನ್ಯತೆ ನೀಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ.
ಆಹಾರ ಮನುಷ್ಯನ ಸ್ವಾಭಾವಿಕ ಹಕ್ಕು. ಅದನ್ನು ಸಾಂವಿಧಾನಿಕ ಹಕ್ಕು ಎಂದು ಭಾವಿಸಬೇಕಿಲ್ಲ. ಮನುಷ್ಯ ತಾನು ಬೆಳೆದ ಪರಿಸರದಲ್ಲಿ ರೂಢಿಸಿಕೊಂಡು ಬಂದ ಆಹಾರ ಪದ್ಧತಿಯನ್ನೇ ಜೀವನದುದ್ದಕ್ಕೂ ಅನುಸರಿಸುವುದು ನೈಸರ್ಗಿಕವಾಗಿ ಸಹಜ ಪ್ರಕ್ರಿಯೆ. ಈ ಆಹಾರ ಪದ್ಧತಿಗಳು ಜಾತಿ-ಮತಗಳ ಚೌಕಟ್ಟಿನಲ್ಲಿ ತಮ್ಮದೇ ಆದ ವಿಶಿಷ್ಟ ಸ್ವರೂಪವನ್ನು ಪಡೆದುಕೊಂಡಿದ್ದರೆ ಅದು ಸಾಮುದಾಯಿಕ ಪ್ರಶ್ನೆಯಾಗುತ್ತದೆ.
ಒಂದು ನಿರ್ದಿಷ್ಟ ಜಾತಿ ಅಥವಾ ಮತದ ಚೌಕಟ್ಟಿನಲ್ಲೂ ಆಹಾರ ಸೇವನೆ ಎನ್ನುವುದು ವ್ಯಕ್ತಿಗತ ಆಯ್ಕೆಯಾಗಿಯೇ ಉಳಿಯುತ್ತದೆ. ಈ ನೈಸರ್ಗಿಕ ಹಕ್ಕನ್ನು ಭಾರತದ ಸಂವಿಧಾನ ಕಾಪಾಡುತ್ತದೆ. ಇಂದು ಈ ಸಾಂವಿಧಾನಿಕ ಮಾನ್ಯತೆ ಮತ್ತು ನೈಸರ್ಗಿಕ ಹಕ್ಕು ಎರಡೂ ಸಹ ಸಾಂಸ್ಕೃತಿಕ ಕಾವಲುಪಡೆಗಳಿಂದ ದಾಳಿಗೊಳಗಾಗುತ್ತಿದೆ.
ಜನಸಾಮಾನ್ಯರು ಎಂತಹ ಆಹಾರ ಸೇವಿಸಬೇಕು ಎನ್ನುವುದಕ್ಕಿಂತಲೂ ಇಂದು ಚರ್ಚೆಗೊಳಗಾಗಬೇಕಿರುವುದು, ಎಷ್ಟು ಜನರು ತಮಗೆ ಬೇಕೆನಿಸಿದ ಆಹಾರವನ್ನು ಸೇವಿಸುವ ಶಕ್ತಿ ಹೊಂದಿದ್ದಾರೆ ಎಂಬ ಪ್ರಶ್ನೆ. ಏಕೆಂದರೆ ಭಾರತದ ಅರ್ಥವ್ಯವಸ್ಥೆ ಬಡಜನತೆಯ ಪಾಲಿಗೆ, ಶ್ರಮಜೀವಿಗಳ ಪಾಲಿಗೆ ಕರಾಳ ದಿನಗಳನ್ನು ರೂಪಿಸುತ್ತಿದೆ.
ಈ ಸಂದರ್ಭದಲ್ಲಿ, ತನ್ನ ಆಹಾರಕ್ಕಾಗಿ ಮನುಷ್ಯ ಕೊಲ್ಲುವ ಪ್ರಾಣಿಯಲ್ಲಿ ರಕ್ತದಂಶ ಇರಬೇಕೋ ಬೇಡವೋ ಎಂಬ ಪ್ರಶ್ನೆಗಿಂತಲೂ ನಮ್ಮನ್ನು ಕಾಡಬೇಕಿರುವುದು ದೇಶದ ಬಹುಸಂಖ್ಯೆಯ ಜನತೆಗೆ ತಮಗೆ ಅಗತ್ಯವಿರುವಷ್ಟು ಮಾಂಸಾಹಾರವನ್ನೋ, ಸಸ್ಯಾಹಾರವನ್ನೋ ಕೊಳ್ಳುವ ಸಾಮರ್ಥ್ಯ ಉಳಿದಿದೆಯೇ ಎಂಬ ಪ್ರಶ್ನೆ.
ಯೂನಿಸೆಫ್ನ ಒಂದು ವರದಿಯ ಪ್ರಕಾರ ಭಾರತದಲ್ಲಿ ಕುಂಠಿತ ಬೆಳವಣಿಗೆಯ ಮಕ್ಕಳ ಸಂಖ್ಯೆ ನಾಲ್ಕು ಕೋಟಿಗೂ ಮೀರಿದೆ. ಐದು ವರ್ಷಕ್ಕೆ ಮುನ್ನವೇ ಸಾವನ್ನಪ್ಪುವ ಮಕ್ಕಳಲ್ಲಿ ಶೇ 69ರಷ್ಟು ಮಕ್ಕಳು ಅಪೌಷ್ಟಿಕತೆಯಿಂದಲೇ ಸಾಯುತ್ತಿದ್ದಾರೆ. ಒಕ್ಕೂಟ ಸರ್ಕಾರದ ಅಧಿಕೃತ ಮಾಹಿತಿಯ ಅನುಸಾರವೇ ಭಾರತದಲ್ಲಿ 33 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ.
ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತ 107 ರಾಷ್ಟ್ರಗಳ ಪೈಕಿ 94ನೆಯ ಸ್ಥಾನದಲ್ಲಿದೆ. ಇವೆಲ್ಲವನ್ನೂ ಕಲ್ಪಿತ ಅಥವಾ ಸೃಷ್ಟಿಸಲ್ಪಟ್ಟ ಅಂಕಿಅಂಶಗಳೆಂದು ಸರ್ಕಾರಗಳು ಅಲ್ಲಗಳೆದರೂ, ಏರುತ್ತಿರುವ ಆಹಾರ ಪದಾರ್ಥಗಳ ಬೆಲೆಗಳು, ನಗರಗಳಲ್ಲಿ ಹೆಚ್ಚುತ್ತಿರುವ ಕೊಳೆಗೇರಿಗಳು, ತಮ್ಮ ನಾಳಿನ ಬದುಕಿಗಾಗಿ ಹೋರಾಡುತ್ತಿರುವ ವಲಸೆ ಕಾರ್ಮಿಕರು, ಬಡತನದ ಬರ್ಬರತೆಯನ್ನು ಢಾಳಾಗಿ ಪ್ರದರ್ಶಿಸುತ್ತವೆ.
ನಿಕೃಷ್ಟ ಜೀವನ ನಡೆಸುತ್ತಿರಬಹುದಾದ ಈ ಶ್ರಮಜೀವಿ ವರ್ಗಗಳಿಗೆ ಹಲಾಲ್ ಮತ್ತು ಜಟ್ಕಾ ವಿವಾದಗಳು ಅಪ್ರಸ್ತುತವಾಗಿಬಿಡುತ್ತವೆ. ಏರುತ್ತಿರುವ ಆಹಾರ ಪದಾರ್ಥಗಳ ಬೆಲೆಗಳಿಂದ ತತ್ತರಿಸುತ್ತಿರುವ ಶ್ರಮಜೀವಿ ವರ್ಗಗಳಿಗೆ, ಅನೌಪಚಾರಿಕ ಕ್ಷೇತ್ರದ ದಿನಗೂಲಿ ನೌಕರರಿಗೆ ತಾವು ತಿನ್ನುವ ಆಹಾರದಲ್ಲಿ ಪೌಷ್ಟಿಕಾಂಶ ಎಷ್ಟಿದೆ ಎಂಬ ಚಿಂತೆ ಇರುವುದಿಲ್ಲ.
ಅಥವಾ ಅದರಲ್ಲಿ ರಕ್ತದಂಶ ಇದೆಯೋ ಇಲ್ಲವೋ ಎಂಬ ಜಿಜ್ಞಾಸೆಯೂ ಇರುವುದಿಲ್ಲ. ಸಸ್ಯಾಹಾರಿಗಳಾದರೂ ತಮ್ಮ ಆಹಾರದಲ್ಲಿ ಕಬ್ಬಿಣಾಂಶ ಎಷ್ಟಿದೆ ಎಂಬ ಪರಿವೆ ಇರುವುದಿಲ್ಲ. ದೇಶದ ಸುಭದ್ರ ಬುನಾದಿಗೆ ತಮ್ಮ ಬೆವರು ಸುರಿಸಿ ದುಡಿಯುವ ಈ ಶ್ರಮಜೀವಿ ವರ್ಗಗಳು ತಮ್ಮ ಜಾತಿ-ಮತ-ಧರ್ಮದ ಅಸ್ಮಿತೆಗಳನ್ನು ಮೀರಿ ಜೀವನ ಸವೆಸುತ್ತಿರುತ್ತಾರೆ.
ಈ ವರ್ಗದ ಜನತೆಗೆ, ಆಹಾರ ವಂಚಿತರಿಗೆ, ಅವಕಾಶವಂಚಿತರಿಗೆ, ಸೌಲಭ್ಯವಂಚಿತರಿಗೆ ಮತ್ತು ಹಕ್ಕು ವಂಚಿತ ಜನಸಮುದಾಯಗಳಿಗೆ “ ಹೊಸ ವರ್ಷಾಚರಣೆ ”ಯ ಸಂದೇಶವನ್ನು ನೀಡುವ ಮುನ್ನ ಉಳ್ಳವರ ಮನಸ್ಸಿನಲ್ಲಿ ಕೊಂಚಮಟ್ಟಿಗಾದರೂ ಪಾಪಪ್ರಜ್ಞೆ ಮೂಡಬೇಕಲ್ಲವೇ ? ಶೇ 50ರಷ್ಟು ಅಪರಾಧದ ಹಿನ್ನೆಲೆಯುಳ್ಳವರನ್ನು, ಶೇ 90ರಷ್ಟು ಕೋಟ್ಯಧಿಪತಿಗಳನ್ನು ಶಾಸನಸಭೆಗಳಿಗೆ ಆಯ್ಕೆ ಮಾಡಿ ಕಳುಹಿಸುವ ಸಾರ್ವಭೌಮ ಜನತೆಗೆ ತಮ್ಮ ಆಹಾರ ಸ್ವಾತಂತ್ರ್ಯವನ್ನೂ ನಿರಾಕರಿಸಲಾಗುತ್ತಿರುವ ಹೊತ್ತಿನಲ್ಲಿ, ಆಳುವ ಸರ್ಕಾರಗಳು ಸೌಹಾರ್ದತೆ ಮತ್ತು ಸಾಂತ್ವನದ ಸಂದೇಶವನ್ನು ನೀಡುವುದು ಹೇಗೆ ಸಾಧ್ಯವಾದೀತು ?
ಈ ನಡುವೆಯೇ ಹಬ್ಬವನ್ನು ಜನತೆಗಿಂತಲೂ ಹೆಚ್ಚಾಗಿ ಸಂಭ್ರಮಿಸುವ ಮಾರುಕಟ್ಟೆ ತನ್ನ ಬಾಹುಗಳನ್ನು ಎಲ್ಲ ದಿಕ್ಕುಗಳಲ್ಲೂ ಚಾಚುತ್ತಾ, ಜನರ ಬಳಿ ಉಳಿದಿರಬಹುದಾದ ಅಲ್ಪಸ್ವಲ್ಪ ಸಂಪನ್ಮೂಲಗಳನ್ನೂ ದೋಚಲು ಯೋಚಿಸುತ್ತಿರುತ್ತದೆ. ಈ ಮಾರುಕಟ್ಟೆಯನ್ನು ಪೋಷಿಸುವ ಸಲುವಾಗಿಯೇ ಮಾಧ್ಯಮಗಳು, ಅಧಿಕಾರ ರಾಜಕಾರಣದ ಪ್ರತಿನಿಧಿಗಳು ಒಂದು ಆಕರ್ಷಕ ಜಗತ್ತನ್ನು ಸೃಷ್ಟಿಸಲು ಯತ್ನಿಸುತ್ತಿರುತ್ತಾರೆ.
ಹಬ್ಬದ ದಿನದ ಮಾರುಕಟ್ಟೆಯ ಚಿತ್ರಣವನ್ನೇ ಜನಸಾಮಾನ್ಯರ ಬದುಕಿನ ಹಿತ ಗಳಿಗೆ ಎಂದು ಬಿಂಬಿಸುವ ಮೂಲಕ ಒಂದು ಕಲ್ಪಿತ ಸುಖಿ ಸಮಾಜವನ್ನು ನಾವು ಆನಂದಿಸುತ್ತಿದ್ದೇವೆ. ಆದರೆ ಜನದಟ್ಟಣೆಯ ಮಾರುಕಟ್ಟೆಯ ನಡುವೆಯೂ ಹಸಿದ ಹೊಟ್ಟೆಗಳು ಹೇರಳವಾಗಿರುತ್ತವೆ, ನೊಂದ ಜೀವಗಳು ಅಪಾರ ಸಂಖ್ಯೆಯಲ್ಲಿರುತ್ತವೆ, ಬೆಂದ ಉದರಗಳು ಬೇಕಾದಷ್ಟಿರುತ್ತವೆ.
ಈ ಜೀವಗಳ ಒಡಲಿಗೆ ಬೆಂಕಿ ಇಡಲೆಂದೇ ಮತಾಂಧ ಶಕ್ತಿಗಳು ವ್ಯಾಪಾರ ವಹಿವಾಟುಗಳಲ್ಲೂ ಮತೀಯ ಅಸ್ಮಿತೆಗಳ ಗೋಡೆಗಳನ್ನು ನಿರ್ಮಿಸುವ ಮೂಲಕ, ಆಹಾರ ಪದ್ಧತಿಯ ಮೇಲೆ ದಾಳಿ ನಡೆಸುತ್ತಿವೆ. ದ್ವೇಷ, ಅಸೂಯೆ, ಮತ್ಸರ ಮತ್ತು ತಾರತಮ್ಯಗಳ ಹೊಸ ಆಯಾಮಗಳನ್ನು ಶೋಧಿಸುತ್ತಲೇ ಶ್ರಮಜೀವಿಗಳ ಜಗತ್ತನ್ನು ಅಡ್ಡಡ್ಡಲಾಗಿ ಸೀಳುವ ಅಮಾನುಷ ಪ್ರಯತ್ನಗಳ ನಡುವೆಯೇ ಭಾರತ ಮತ್ತೊಂದು ಯುಗಾದಿಯನ್ನು ಸಂಭ್ರಮಿಸುತ್ತಿದೆ.
ಈ ಸಂಭ್ರಮಾಚರಣೆ ಸಾತ್ವಿಕ ನೆಲೆಯಲ್ಲಿ ಅರ್ಥಪೂರ್ಣವಾಗಿ ಕಂಡರೂ ತಾತ್ವಿಕ ನೆಲೆಯಲ್ಲಿ ಚಿಂತನಾರ್ಹವೆನಿಸುವುದಿಲ್ಲವೇ ? ಈ ಆತ್ಮಾವಲೋಕನದೊಂದಿಗೇ ಯುಗಾದಿಯನ್ನು ಸ್ವಾಗತಿಸೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?
- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ
- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!
- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು