ಬಹಿರಂಗ
ದುಸ್ತರ ಬದುಕು ದುರ್ಭರ ಹಾದಿಯಲ್ಲಿ ಹೊಸ ಸಂವತ್ಸರದ ಸಂಭ್ರಮ
ಶ್ರಮಜೀವಿಗಳ ಬದುಕನ್ನು ಕರಾಳ ಕೂಪಕ್ಕೆ ತಳ್ಳುತ್ತಿರುವ ದುಷ್ಟ ವ್ಯವಸ್ಥೆಯಲ್ಲಿ ಎಂತಹ ಸಂಭ್ರಮ ?
- ನಾ ದಿವಾಕರ
ಭಾರತದ ಪರಂಪರೆಯಲ್ಲಿ ನವ ಸಂವತ್ಸರದ ಆರಂಭವಾಗುವುದು ಯುಗಾದಿಯೊಂದಿಗೆ. ಇಂದು ದೇಶಾದ್ಯಂತ ಹಿಂದೂಗಳು ಸಂಭ್ರಮದಿಂದ ಯುಗಾದಿ ಹಬ್ಬವನ್ನು ಆಚರಿಸುತ್ತಾ, ನವ ಸಂವತ್ಸರವನ್ನು ಸ್ವಾಗತಿಸುತ್ತಾರೆ. ಹಬ್ಬ ಎಂಬ ಪರಿಕಲ್ಪನೆಯೇ ಜನಸಂಸ್ಕೃತಿಯ ಒಡಲಿನಲ್ಲಿ ಮೂಡಿರುವ ಒಂದು ವಿದ್ಯಮಾನ.
ಸಾರ್ವತ್ರಿಕವಾಗಿ ಒಂದು ಜನ ಸಮುದಾಯ ತನ್ನೊಳಗಿನ ಎಲ್ಲ ವೈರುಧ್ಯಗಳನ್ನೂ ಮರೆತು, ತನ್ನ ಆಂತರ್ಯದೊಳಗೆ ಅಡಗಿರಬಹುದಾದ ಎಲ್ಲ ಕಲ್ಮಶಗಳನ್ನೂ ತೊಡೆದುಹಾಕಿ, ಸಮಸ್ತ ಮಾನವ ಕೋಟಿ ಒಂದೇ ಎಂಬ ಭಾವನಾತ್ಮಕ ಸಂದೇಶದೊಡನೆ ಸಾರ್ವಜನಿಕವಾಗಿ ಆಚರಿಸುವುದು ಯಾವುದೇ ಹಬ್ಬದ ವಿಶೇಷ. ವೈದಿಕಶಾಹಿಯ ಸ್ವಾಧೀನಕ್ಕೊಳಪಟ್ಟು ಭಾರತದ ಅನೇಕಾನೇಕ ಹಬ್ಬದ ಆಚರಣೆಗಳು ತಮ್ಮ ಮೂಲ ಅರ್ಥವನ್ನು ಕಳೆದುಕೊಂಡಿರುವ ಈ ಸಂದರ್ಭದಲ್ಲೇ ಭಾರತ ಮತ್ತೊಂದು ಯುಗಾದಿಯನ್ನು ಆಚರಿಸುತ್ತಿದೆ.
ಹಬ್ಬದ ಪರಿಕಲ್ಪನೆಯೇ ಸಾಪೇಕ್ಷವಾದುದು. ಹಬ್ಬದ ಆಚರಣೆಯೂ ಸಹ ಸಾಮಾಜಿಕ ಶ್ರೇಣೀಕರಣಕ್ಕೆ ಅನುಗುಣವಾಗಿಯೇ ನಡೆಯುತ್ತದೆ. ತನ್ನ ನಿತ್ಯ ಬದುಕಿನ ಬವಣೆಗಳನ್ನೇ ನೀಗಿಸಲು ಸಾಧ್ಯವಾಗದ ಒಂದು ದುಡಿಮೆಯ ಜೀವಕ್ಕೆ ಹಬ್ಬ ಎನ್ನುವುದು ವಿಶೇಷ ಎನಿಸುವುದಿಲ್ಲ.
ಹಸಿರು ತೋರಣ, ಸುಂದರ ರಂಗೋಲಿ, ಬಾಳೆಲೆಯ ಊಟ ಈ ಸಂಭ್ರಮಗಳು ಸಮಾಜದ ಮೇಲ್ ಸ್ತರದ ಸಮುದಾಯಗಳಿಗೆ ಲಭ್ಯವಾಗುವ ಸವಲತ್ತುಗಳಷ್ಟೇ. ಆದರೂ ಕಡುಬಡತನ ಎದುರಿಸುವ ಕುಟುಂಬಗಳೂ ಹಬ್ಬವನ್ನು ತಮ್ಮದೇ ಆದ ರೀತಿಯಲ್ಲಿ ಆಚರಿಸುತ್ತವೆ. ಹೊಸ ವರ್ಷವನ್ನು ಸ್ವಾಗತಿಸುವ ಯುಗಾದಿ ಈ ಬಡಜನತೆಯ ಪಾಲಿಗೆ ಹೊಸತನ್ನೇನೂ ತರುವುದಿಲ್ಲ. ಹಾಗೆಯೇ ಗತಿಸಿದ ವರುಷದ ಸಂಕಷ್ಟಗಳ ನಿವಾರಣೆಯೂ ಆಗುವುದಿಲ್ಲ.
ತಮ್ಮ ಜೀವನೋಪಾಯದ ಮಾರ್ಗಗಳು ಕಠಿಣವಾಗುತ್ತಿರುವುದನ್ನು ಮೌನಸಮ್ಮತಿಯೊಂದಿಗೆ ಎದುರಿಸುತ್ತಲೇ, ಶ್ರಮ ಶೋಷಣೆಯ ಮೂಲ, ಸ್ವರೂಪ ಮತ್ತು ಕಾರಣಗಳನ್ನು ಅರಿಯದ ಶ್ರಮಜೀವಿಗಳು ಶೊಷಕ ಸಮಾಜದ ಪರಿಚಾರಕರೊಡನೆ ಮುಖಾಮುಖಿಯಾಗುತ್ತಾ ಬದುಕು ಸವೆಸುತ್ತಾರೆ. “ ಸಮಸ್ತ ಜನಕೋಟಿಗೂ ಯುಗಾದಿಯ ಶುಭಾಶಯಗಳು ” ಎಂದು ಸಾರ್ವಜನಿಕವಾಗಿ ಕೋರುವ ಪ್ರತಿಯೊಂದು ಮನಸಿಗೂ ಹೊಳೆಯಬೇಕಾದ ಒಂದು ವಾಸ್ತವ ಎಂದರೆ, ಈ ಸಮಸ್ತ ಜನಕೋಟಿಯಲ್ಲಿ ಬಹುಪಾಲು ಜನರಿಗೆ ಬದುಕು ಹಸನಾಗಿರುವುದಿಲ್ಲ. ಅವರ ಭೂತ ಮತ್ತು ವರ್ತಮಾನದಂತೆಯೇ ಭವಿಷ್ಯವೂ ಅದೇ ಶೋಷಕ ಸಮಾಜದ ಕ್ರೂರ ವ್ಯವಸ್ಥೆಗೆ ಬಲಿಯಾಗಿ ಕರಾಳ ದಿನಗಳನ್ನು ಎದುರಿಸುತ್ತಿರುತ್ತದೆ.
ಹೊಸ ವರ್ಷದ ಆಗಮನವನ್ನು ಸ್ವಾಗತಿಸುವ ಮುನ್ನ, ನಮ್ಮ ಸುತ್ತಲಿನ ಮಾನವ ಸಮಾಜ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಒಮ್ಮೆ ಗಮನಿಸಿದಾಗ, ನಮಗೆ ಎಂತಹ ಹೊಸ ವರ್ಷದ ಅವಶ್ಯಕತೆ ಇದೆ ಎನ್ನುವುದೂ ಮನದಟ್ಟಾಗುತ್ತದೆ. ಜಾತಿ, ಮತ, ಧರ್ಮ,ಪಂಥ, ಲಿಂಗ ಹೀಗೆ ಅಸ್ಮಿತೆಗಳ ಚೌಕಟ್ಟುಗಳಲ್ಲಿ ಜನಸಾಮಾನ್ಯರನ್ನು ಬಂಧಿಸಿಟ್ಟು, ತನ್ನ ಬೆವರಿನ ದುಡಿಮೆಯಿಂದಲೇ ಅನ್ನ ಉಣ್ಣುವ ಶ್ರಮಜೀವಿಯ ಊಟದ ತಟ್ಟೆಯಲ್ಲೂ ತಾರತಮ್ಯದ ವಿಷಬೀಜಗಳನ್ನು ಉಣಬಡಿಸುವ ಒಂದು ವಿಕೃತ ಸಾಂಸ್ಕೃತಿಕ ವಿದ್ಯಮಾನವನ್ನು ನಾವು ಕಾಣುತ್ತಿದ್ದೇವೆ. ಪ್ರೀತಿ, ಆದರ, ವಾತ್ಸಲ್ಯ, ಸೋದರತ್ವ ಮತ್ತು ಮಾನವ ಪ್ರೀತಿಯನ್ನು ಪೋಷಿಸಬೇಕಾದ ಸಾಂಸ್ಥಿಕ ವೇದಿಕೆಗಳು, ಜನಸಾಮಾನ್ಯರ ನಡುವೆ ದ್ವೇಷ, ಮತ್ಸರ, ಅಸೂಯೆ ಮತ್ತು ತಾರತಮ್ಯದ ವಿಷಬೀಜಗಳನ್ನು ಬಿತ್ತುತ್ತಿರುವುದನ್ನು ನೋಡುತ್ತಿದ್ದೇವೆ.
ಶ್ರಮಿಕರ ಬದುಕನ್ನು ಹೊರಗಿಟ್ಟು ಮಾನವ ಸಮಾಜ ಯಾವುದೇ ಸಂದರ್ಭವನ್ನೂ ಸಂಭ್ರಮಿಸಲಾಗುವುದಿಲ್ಲ. ಯುಗಾದಿಯ ಹೊಸವರ್ಷಾಚರಣೆಯನ್ನೂ ಸಹ. ಇಂದು ದೇಶದ ರಾಷ್ಟ್ರಪತಿ, ಪ್ರಧಾನಿಯಿಂದ ಹಿಡಿದು ಗ್ರಾಮಪಂಚಾಯತ್ ಸದಸ್ಯನವರೆಗೂ ಎಲ್ಲ ಹಂತದ ಜನಪ್ರತಿನಿಧಿಗಳೂ ಜನತೆಗೆ ಹೊಸ ವರ್ಷಾಚರಣೆಯ ಶುಭಾಶಯಗಳನ್ನು ಕೋರುತ್ತಾರೆ.
ಈ ಯಾಂತ್ರಿಕ ಸಂದೇಶಗಳು ಕೋಟ್ಯಂತರ ಜನರನ್ನು ತಲುಪುತ್ತವೆ. ಮನುಜ ಸಮಾಜವನ್ನು ಒಂದುಗೂಡಿಸಲು ನೆರವಾಗುವ ಈ ಸಂದೇಶಗಳು ಭಾವನಾತ್ಮಕ ದೃಷ್ಟಿಯಿಂದ ಅಪ್ಯಾಯಮಾನವೆನಿಸಿದರೂ, ಶ್ರೇಣೀಕೃತ ಜಾತಿ ವ್ಯವಸ್ಥೆ ಮತ್ತು ಅನ್ಯ ಮತ ದ್ವೇಷದ ಆಂತರಿಕ ಬೇಗುದಿಯು ಇಡೀ ಸಮಾಜವನ್ನು ಒಳಗಿನಿಂದಲೇ ಕ್ಯಾನ್ಸರ್ ರೋಗದಂತೆ ಹರಡಿ ಶಿಥಿಲಗೊಳಿಸುತ್ತಿರುವುದನ್ನು ಗಮನಿಸಿದಾಗ, ಈ ಸಂದೇಶಗಳು ನಾಟಕೀಯ ಎನಿಸಿಬಿಡುತ್ತವೆ.
75 ವರ್ಷಗಳ ಸ್ವತಂತ್ರ ಆಳ್ವಿಕೆಯ ನಂತರ ಪ್ರಪ್ರಥಮ ಬಾರಿಗೆ ಭಾರತದಲ್ಲಿ ಜನಸಾಮಾನ್ಯರು ನಿತ್ಯ ಸೇವಿಸುವ ಆಹಾರ ಮತ್ತು ಬಳಸುವ ವಸ್ತುಗಳು, ಸಾಂಸ್ಥಿಕವಾಗಿ ನಿರ್ದೇಶಿಸಲ್ಪಡುತ್ತಿವೆ. ಯಾರು ಏನನ್ನು ತಿನ್ನಬೇಕು, ಯಾವ ಆಹಾರವನ್ನು ತ್ಯಜಿಸಬೇಕು, ಯಾವುದನ್ನು ತಿರಸ್ಕರಿಸಬೇಕು, ಯಾರಿಂದ ಪಡೆಯಬೇಕು, ಯಾರಿಗೆ ನೀಡಬೇಕು, ತಿನ್ನುವ ಆಹಾರದಲ್ಲಿ ಏನಿರಬೇಕು-ಏನಿರಬಾರದು, ಯಾವ ಸಮಯದಲ್ಲಿ ಏನು ತಿನ್ನಬೇಕು, ಹೀಗೆ ಮನುಷ್ಯ ತನ್ನ ಸಹಜ ಬದುಕಿನಲ್ಲಿ ತನ್ನದೇ ಆದ ವ್ಯಕ್ತಿಗತ ಸ್ವಾತಂತ್ರ್ಯದೊಂದಿಗೆ ಅನುಸರಿಸಬೇಕಾದ ಆಹಾರ ಪದ್ಧತಿ ಇಂದು ನಿರ್ದೇಶಿತವಾಗುತ್ತಿದೆ.
ಧಾರ್ಮಿಕ ಗ್ರಂಥಗಳಿಂದ ನಿರ್ದೇಶಿತರಾಗಿ ತಮ್ಮ ಬದುಕನ್ನು ರೂಪಿಸಿಕೊಂಡಿರುವ ಮತನಿಷ್ಠರೂ ಸಹ ಈಗ ನೂತನ ಧಾರ್ಮಿಕ ವ್ಯಾಖ್ಯಾನಕಾರರ ನಿರ್ದೇಶನಗಳಿಗೆ ಮಾನ್ಯತೆ ನೀಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ.
ಆಹಾರ ಮನುಷ್ಯನ ಸ್ವಾಭಾವಿಕ ಹಕ್ಕು. ಅದನ್ನು ಸಾಂವಿಧಾನಿಕ ಹಕ್ಕು ಎಂದು ಭಾವಿಸಬೇಕಿಲ್ಲ. ಮನುಷ್ಯ ತಾನು ಬೆಳೆದ ಪರಿಸರದಲ್ಲಿ ರೂಢಿಸಿಕೊಂಡು ಬಂದ ಆಹಾರ ಪದ್ಧತಿಯನ್ನೇ ಜೀವನದುದ್ದಕ್ಕೂ ಅನುಸರಿಸುವುದು ನೈಸರ್ಗಿಕವಾಗಿ ಸಹಜ ಪ್ರಕ್ರಿಯೆ. ಈ ಆಹಾರ ಪದ್ಧತಿಗಳು ಜಾತಿ-ಮತಗಳ ಚೌಕಟ್ಟಿನಲ್ಲಿ ತಮ್ಮದೇ ಆದ ವಿಶಿಷ್ಟ ಸ್ವರೂಪವನ್ನು ಪಡೆದುಕೊಂಡಿದ್ದರೆ ಅದು ಸಾಮುದಾಯಿಕ ಪ್ರಶ್ನೆಯಾಗುತ್ತದೆ.
ಒಂದು ನಿರ್ದಿಷ್ಟ ಜಾತಿ ಅಥವಾ ಮತದ ಚೌಕಟ್ಟಿನಲ್ಲೂ ಆಹಾರ ಸೇವನೆ ಎನ್ನುವುದು ವ್ಯಕ್ತಿಗತ ಆಯ್ಕೆಯಾಗಿಯೇ ಉಳಿಯುತ್ತದೆ. ಈ ನೈಸರ್ಗಿಕ ಹಕ್ಕನ್ನು ಭಾರತದ ಸಂವಿಧಾನ ಕಾಪಾಡುತ್ತದೆ. ಇಂದು ಈ ಸಾಂವಿಧಾನಿಕ ಮಾನ್ಯತೆ ಮತ್ತು ನೈಸರ್ಗಿಕ ಹಕ್ಕು ಎರಡೂ ಸಹ ಸಾಂಸ್ಕೃತಿಕ ಕಾವಲುಪಡೆಗಳಿಂದ ದಾಳಿಗೊಳಗಾಗುತ್ತಿದೆ.
ಜನಸಾಮಾನ್ಯರು ಎಂತಹ ಆಹಾರ ಸೇವಿಸಬೇಕು ಎನ್ನುವುದಕ್ಕಿಂತಲೂ ಇಂದು ಚರ್ಚೆಗೊಳಗಾಗಬೇಕಿರುವುದು, ಎಷ್ಟು ಜನರು ತಮಗೆ ಬೇಕೆನಿಸಿದ ಆಹಾರವನ್ನು ಸೇವಿಸುವ ಶಕ್ತಿ ಹೊಂದಿದ್ದಾರೆ ಎಂಬ ಪ್ರಶ್ನೆ. ಏಕೆಂದರೆ ಭಾರತದ ಅರ್ಥವ್ಯವಸ್ಥೆ ಬಡಜನತೆಯ ಪಾಲಿಗೆ, ಶ್ರಮಜೀವಿಗಳ ಪಾಲಿಗೆ ಕರಾಳ ದಿನಗಳನ್ನು ರೂಪಿಸುತ್ತಿದೆ.
ಈ ಸಂದರ್ಭದಲ್ಲಿ, ತನ್ನ ಆಹಾರಕ್ಕಾಗಿ ಮನುಷ್ಯ ಕೊಲ್ಲುವ ಪ್ರಾಣಿಯಲ್ಲಿ ರಕ್ತದಂಶ ಇರಬೇಕೋ ಬೇಡವೋ ಎಂಬ ಪ್ರಶ್ನೆಗಿಂತಲೂ ನಮ್ಮನ್ನು ಕಾಡಬೇಕಿರುವುದು ದೇಶದ ಬಹುಸಂಖ್ಯೆಯ ಜನತೆಗೆ ತಮಗೆ ಅಗತ್ಯವಿರುವಷ್ಟು ಮಾಂಸಾಹಾರವನ್ನೋ, ಸಸ್ಯಾಹಾರವನ್ನೋ ಕೊಳ್ಳುವ ಸಾಮರ್ಥ್ಯ ಉಳಿದಿದೆಯೇ ಎಂಬ ಪ್ರಶ್ನೆ.
ಯೂನಿಸೆಫ್ನ ಒಂದು ವರದಿಯ ಪ್ರಕಾರ ಭಾರತದಲ್ಲಿ ಕುಂಠಿತ ಬೆಳವಣಿಗೆಯ ಮಕ್ಕಳ ಸಂಖ್ಯೆ ನಾಲ್ಕು ಕೋಟಿಗೂ ಮೀರಿದೆ. ಐದು ವರ್ಷಕ್ಕೆ ಮುನ್ನವೇ ಸಾವನ್ನಪ್ಪುವ ಮಕ್ಕಳಲ್ಲಿ ಶೇ 69ರಷ್ಟು ಮಕ್ಕಳು ಅಪೌಷ್ಟಿಕತೆಯಿಂದಲೇ ಸಾಯುತ್ತಿದ್ದಾರೆ. ಒಕ್ಕೂಟ ಸರ್ಕಾರದ ಅಧಿಕೃತ ಮಾಹಿತಿಯ ಅನುಸಾರವೇ ಭಾರತದಲ್ಲಿ 33 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ.
ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತ 107 ರಾಷ್ಟ್ರಗಳ ಪೈಕಿ 94ನೆಯ ಸ್ಥಾನದಲ್ಲಿದೆ. ಇವೆಲ್ಲವನ್ನೂ ಕಲ್ಪಿತ ಅಥವಾ ಸೃಷ್ಟಿಸಲ್ಪಟ್ಟ ಅಂಕಿಅಂಶಗಳೆಂದು ಸರ್ಕಾರಗಳು ಅಲ್ಲಗಳೆದರೂ, ಏರುತ್ತಿರುವ ಆಹಾರ ಪದಾರ್ಥಗಳ ಬೆಲೆಗಳು, ನಗರಗಳಲ್ಲಿ ಹೆಚ್ಚುತ್ತಿರುವ ಕೊಳೆಗೇರಿಗಳು, ತಮ್ಮ ನಾಳಿನ ಬದುಕಿಗಾಗಿ ಹೋರಾಡುತ್ತಿರುವ ವಲಸೆ ಕಾರ್ಮಿಕರು, ಬಡತನದ ಬರ್ಬರತೆಯನ್ನು ಢಾಳಾಗಿ ಪ್ರದರ್ಶಿಸುತ್ತವೆ.
ನಿಕೃಷ್ಟ ಜೀವನ ನಡೆಸುತ್ತಿರಬಹುದಾದ ಈ ಶ್ರಮಜೀವಿ ವರ್ಗಗಳಿಗೆ ಹಲಾಲ್ ಮತ್ತು ಜಟ್ಕಾ ವಿವಾದಗಳು ಅಪ್ರಸ್ತುತವಾಗಿಬಿಡುತ್ತವೆ. ಏರುತ್ತಿರುವ ಆಹಾರ ಪದಾರ್ಥಗಳ ಬೆಲೆಗಳಿಂದ ತತ್ತರಿಸುತ್ತಿರುವ ಶ್ರಮಜೀವಿ ವರ್ಗಗಳಿಗೆ, ಅನೌಪಚಾರಿಕ ಕ್ಷೇತ್ರದ ದಿನಗೂಲಿ ನೌಕರರಿಗೆ ತಾವು ತಿನ್ನುವ ಆಹಾರದಲ್ಲಿ ಪೌಷ್ಟಿಕಾಂಶ ಎಷ್ಟಿದೆ ಎಂಬ ಚಿಂತೆ ಇರುವುದಿಲ್ಲ.
ಅಥವಾ ಅದರಲ್ಲಿ ರಕ್ತದಂಶ ಇದೆಯೋ ಇಲ್ಲವೋ ಎಂಬ ಜಿಜ್ಞಾಸೆಯೂ ಇರುವುದಿಲ್ಲ. ಸಸ್ಯಾಹಾರಿಗಳಾದರೂ ತಮ್ಮ ಆಹಾರದಲ್ಲಿ ಕಬ್ಬಿಣಾಂಶ ಎಷ್ಟಿದೆ ಎಂಬ ಪರಿವೆ ಇರುವುದಿಲ್ಲ. ದೇಶದ ಸುಭದ್ರ ಬುನಾದಿಗೆ ತಮ್ಮ ಬೆವರು ಸುರಿಸಿ ದುಡಿಯುವ ಈ ಶ್ರಮಜೀವಿ ವರ್ಗಗಳು ತಮ್ಮ ಜಾತಿ-ಮತ-ಧರ್ಮದ ಅಸ್ಮಿತೆಗಳನ್ನು ಮೀರಿ ಜೀವನ ಸವೆಸುತ್ತಿರುತ್ತಾರೆ.
ಈ ವರ್ಗದ ಜನತೆಗೆ, ಆಹಾರ ವಂಚಿತರಿಗೆ, ಅವಕಾಶವಂಚಿತರಿಗೆ, ಸೌಲಭ್ಯವಂಚಿತರಿಗೆ ಮತ್ತು ಹಕ್ಕು ವಂಚಿತ ಜನಸಮುದಾಯಗಳಿಗೆ “ ಹೊಸ ವರ್ಷಾಚರಣೆ ”ಯ ಸಂದೇಶವನ್ನು ನೀಡುವ ಮುನ್ನ ಉಳ್ಳವರ ಮನಸ್ಸಿನಲ್ಲಿ ಕೊಂಚಮಟ್ಟಿಗಾದರೂ ಪಾಪಪ್ರಜ್ಞೆ ಮೂಡಬೇಕಲ್ಲವೇ ? ಶೇ 50ರಷ್ಟು ಅಪರಾಧದ ಹಿನ್ನೆಲೆಯುಳ್ಳವರನ್ನು, ಶೇ 90ರಷ್ಟು ಕೋಟ್ಯಧಿಪತಿಗಳನ್ನು ಶಾಸನಸಭೆಗಳಿಗೆ ಆಯ್ಕೆ ಮಾಡಿ ಕಳುಹಿಸುವ ಸಾರ್ವಭೌಮ ಜನತೆಗೆ ತಮ್ಮ ಆಹಾರ ಸ್ವಾತಂತ್ರ್ಯವನ್ನೂ ನಿರಾಕರಿಸಲಾಗುತ್ತಿರುವ ಹೊತ್ತಿನಲ್ಲಿ, ಆಳುವ ಸರ್ಕಾರಗಳು ಸೌಹಾರ್ದತೆ ಮತ್ತು ಸಾಂತ್ವನದ ಸಂದೇಶವನ್ನು ನೀಡುವುದು ಹೇಗೆ ಸಾಧ್ಯವಾದೀತು ?
ಈ ನಡುವೆಯೇ ಹಬ್ಬವನ್ನು ಜನತೆಗಿಂತಲೂ ಹೆಚ್ಚಾಗಿ ಸಂಭ್ರಮಿಸುವ ಮಾರುಕಟ್ಟೆ ತನ್ನ ಬಾಹುಗಳನ್ನು ಎಲ್ಲ ದಿಕ್ಕುಗಳಲ್ಲೂ ಚಾಚುತ್ತಾ, ಜನರ ಬಳಿ ಉಳಿದಿರಬಹುದಾದ ಅಲ್ಪಸ್ವಲ್ಪ ಸಂಪನ್ಮೂಲಗಳನ್ನೂ ದೋಚಲು ಯೋಚಿಸುತ್ತಿರುತ್ತದೆ. ಈ ಮಾರುಕಟ್ಟೆಯನ್ನು ಪೋಷಿಸುವ ಸಲುವಾಗಿಯೇ ಮಾಧ್ಯಮಗಳು, ಅಧಿಕಾರ ರಾಜಕಾರಣದ ಪ್ರತಿನಿಧಿಗಳು ಒಂದು ಆಕರ್ಷಕ ಜಗತ್ತನ್ನು ಸೃಷ್ಟಿಸಲು ಯತ್ನಿಸುತ್ತಿರುತ್ತಾರೆ.
ಹಬ್ಬದ ದಿನದ ಮಾರುಕಟ್ಟೆಯ ಚಿತ್ರಣವನ್ನೇ ಜನಸಾಮಾನ್ಯರ ಬದುಕಿನ ಹಿತ ಗಳಿಗೆ ಎಂದು ಬಿಂಬಿಸುವ ಮೂಲಕ ಒಂದು ಕಲ್ಪಿತ ಸುಖಿ ಸಮಾಜವನ್ನು ನಾವು ಆನಂದಿಸುತ್ತಿದ್ದೇವೆ. ಆದರೆ ಜನದಟ್ಟಣೆಯ ಮಾರುಕಟ್ಟೆಯ ನಡುವೆಯೂ ಹಸಿದ ಹೊಟ್ಟೆಗಳು ಹೇರಳವಾಗಿರುತ್ತವೆ, ನೊಂದ ಜೀವಗಳು ಅಪಾರ ಸಂಖ್ಯೆಯಲ್ಲಿರುತ್ತವೆ, ಬೆಂದ ಉದರಗಳು ಬೇಕಾದಷ್ಟಿರುತ್ತವೆ.
ಈ ಜೀವಗಳ ಒಡಲಿಗೆ ಬೆಂಕಿ ಇಡಲೆಂದೇ ಮತಾಂಧ ಶಕ್ತಿಗಳು ವ್ಯಾಪಾರ ವಹಿವಾಟುಗಳಲ್ಲೂ ಮತೀಯ ಅಸ್ಮಿತೆಗಳ ಗೋಡೆಗಳನ್ನು ನಿರ್ಮಿಸುವ ಮೂಲಕ, ಆಹಾರ ಪದ್ಧತಿಯ ಮೇಲೆ ದಾಳಿ ನಡೆಸುತ್ತಿವೆ. ದ್ವೇಷ, ಅಸೂಯೆ, ಮತ್ಸರ ಮತ್ತು ತಾರತಮ್ಯಗಳ ಹೊಸ ಆಯಾಮಗಳನ್ನು ಶೋಧಿಸುತ್ತಲೇ ಶ್ರಮಜೀವಿಗಳ ಜಗತ್ತನ್ನು ಅಡ್ಡಡ್ಡಲಾಗಿ ಸೀಳುವ ಅಮಾನುಷ ಪ್ರಯತ್ನಗಳ ನಡುವೆಯೇ ಭಾರತ ಮತ್ತೊಂದು ಯುಗಾದಿಯನ್ನು ಸಂಭ್ರಮಿಸುತ್ತಿದೆ.
ಈ ಸಂಭ್ರಮಾಚರಣೆ ಸಾತ್ವಿಕ ನೆಲೆಯಲ್ಲಿ ಅರ್ಥಪೂರ್ಣವಾಗಿ ಕಂಡರೂ ತಾತ್ವಿಕ ನೆಲೆಯಲ್ಲಿ ಚಿಂತನಾರ್ಹವೆನಿಸುವುದಿಲ್ಲವೇ ? ಈ ಆತ್ಮಾವಲೋಕನದೊಂದಿಗೇ ಯುಗಾದಿಯನ್ನು ಸ್ವಾಗತಿಸೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
- ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
- ಇಂಡಿಯಾ ಗೇಟ್ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
- NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
- “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.
CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
http://Visit : www.suddidina.com
ಇಂಡಿಯಾ ಗೇಟ್ನಿಂದ ಮೆರವಣಿಗೆ
ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.
‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’
ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.
“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.
“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ”
|
ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ
ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.
ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.
ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

ದಿನದ ಸುದ್ದಿ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್
-
658 OMR ಕಾರ್ಬನ್ ಶೀಟ್ಗಳು FSLಗೆ
-
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ
-
₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ
-
ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ
ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
http://Visit : www.suddidina.com
329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?
ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.
ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
IAS ಅಧಿಕಾರಿಯತ್ತ ತನಿಖೆಯ ಚಿತ್ತ
ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.
ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.
ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ
ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.
ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.
KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.
ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

ದಿನದ ಸುದ್ದಿ
₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ
- 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ
ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.
http://Visit : www.suddidina.com
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:
ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.
ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.
https://x.com/BDAOfficialGok/status/2092121239175512436?s=20
ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:
ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.
ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ
ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.
ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ23 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ23 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ1 day agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ23 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!







