ದಿನದ ಸುದ್ದಿ
ಆರ್ಥಿಕ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಸರಕಾರದ ನೆರವು ; ನೈಜ ಫಲಾನುಭವಿಗಳಿಗೆ ಪರಿಹಾರಧನ ಸದುಪಯೋಗವಾಗಲಿ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ: ಕೋವಿಡ್ 2ನೇ ಅಲೆಯ ಲಾಕ್ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿವಿಧ ವಲಯದ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2 ಸಾವಿರ ರೂ. ಆರ್ಥಿಕ ನೆರವು ಘೋಷಿಸಿದ್ದು ನೆರವು ಪಡೆಯಲು ಕಾರ್ಮಿಕ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಸಂಕಷ್ಟದಲ್ಲಿರುವ ನೈಜ ಫಲಾನುಭವಿಗಳು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರ ನೀಡುವ ಕುರಿತು ಪೂರ್ವಪರಿಶೀಲನಾ ಸಭೆಯಲ್ಲಿ ವಿವಿಧ ಅಸಂಘಟಿತ ವಲಯದ ಪದಾಧಿಕಾರಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ ಅಗಸರು, ಕ್ಷೌರಿಕರು, ಟೈಲರ್ಗಳು, ಹಮಾಲಿಗಳು, ಚಿಂದಿ ಆಯುವವರು, ಕುಂಬಾರರು, ಭಟ್ಟಿಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್ ಗಳು, ಕಮ್ಮಾರರು ಹಾಗೂ ಗೃಹ ಕಾರ್ಮಿಕರು ಈ 11 ವಲಯದ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಯೋಜನೆಯ ಮೂಲಕ ಒಂದು ಬಾರಿ ಪರಿಹಾರವಾಗಿ 2 ಸಾವಿರ ರೂ. ಗಳ ಆರ್ಥಿಕ ನೆರವನ್ನು ನೀಡಲಾಗುತ್ತದೆ ಎಂದರು.
2020 ನೇ ಸಾಲಿನ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಆರ್ಥಿಕ ನೆರವು ಪಡೆದ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಸಾಲಿನಲ್ಲಿ ನೆರವು ಪಡೆಯದ ಕುಟುಂಬದ ಓರ್ವ ಕಾರ್ಮಿಕ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ನೀಡಲು ಹಾಗೂ ಸಲ್ಲಿಸಲು ನಗರದಲ್ಲಿ ಪ್ರತ್ಯೇಕವಾಗಿ ವಿಶೇಷ ಕೌಂಟರ್ ಸ್ಥಾಪಿಸಬೇಕು ಹಾಗೂ ಅಗತ್ಯ ಸಿಬ್ಬಂದಿಗಳನ್ನು ಇದಕ್ಕಾಗಿಯೇ ನೇಮಿಸಿ, ಜನರಿಗೆ ತೊಂದರೆಯಾಗದಂತೆ ಉದ್ಯೋಗ ಪ್ರಮಾಣ ಪತ್ರ ಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.
ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ.ಪಿ.ಮುದಜ್ಜಿ ಪ್ರತಿಕ್ರಿಯಿಸಿ, ನಗರದಲ್ಲಿ ಈಗಾಗಲೇ ಒಟ್ಟು ಮೂರು ಕಡೆ ವಿಶೇಷವಾಗಿ ಕೌಂಟರ್ ಸ್ಥಾಪಿಸಲಾಗಿದೆ. ರಾಜೀವ್ ಗಾಂಧಿ ನಗರ, ಮಹಾನಗರಪಾಲಿಕೆ ಕಾರ್ಯಲಯ ಹಾಗೂ ಶಾಮನೂರು ರಸ್ತೆಯಲ್ಲಿರುವ ಆಶ್ರಯ ರಸ್ತೆ ಪಕ್ಕದಲ್ಲಿ ಒಂದು ಕಚೇರಿಯನ್ನು ತೆರೆದಿದ್ದು ಈ ಮೂರು ಕಡೆ ಉದ್ಯೋಗ ಪ್ರಮಾಣ ಪತ್ರ ನೀಡಲಾಗುತ್ತಿದೆ. ಹಾಗೂ ಪ್ರತಿ ಕಚೇರಿಗೂ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಮಾತನಾಡಿ, ಈ ಮೂರು ವಿಶೇಷ ಕಾರ್ಯಾಲಯದ ಮುಂದೆ ಜನರಿಗೆ ತಿಳಿಯುವಂತೆ ಫ್ಲೆಕ್ಸ್ ಪ್ರದರ್ಶನ ಫಲಕ ಹಾಕಬೇಕು. ಮಹಾನಗರಪಾಲಿಕೆ ಕಾರ್ಯಾಲಯದಲ್ಲಿ ಸಿಬ್ಬಂದಿಗಳನ್ನು ನೇಮಿಸಬೇಕು. ಸಂಬಂಧಿಸಿದ ಎಲ್ಲ ಅಧಿಕಾರಿಗಳು ಒಂದು ಸಮಯವನ್ನು ನಿಗದಿಪಡಿಸಿಕೊಂಡು ಆ ನಿರ್ದಿಷ್ಟ ಸಮಯದಲ್ಲಿ ಸ್ಥಳದಲ್ಲಿ ಹಾಜರಿದ್ದು, ಅರ್ಜಿದಾರರಿಗೆ ಉದ್ಯೋಗ ಪ್ರಮಾಣ ಪತ್ರ ನೀಡಬೇಕು. ಜನರನ್ನು ವಿನಾಕಾರಣ ಸುಮ್ಮನೆ ಕಾಯಿಸುವುದಾಗಲೀ, ಅನಗತ್ಯವಾಗಿ ಕಚೇರಿಗೆ ಅಲೆದಾಡುವ ರೀತಿ ಮಾಡಬಾರದು. ವಿಶೇಷ ಅಭಿಯಾನದ ರೀತಿಯಲ್ಲಿ ಈ ಕೆಲಸ ಆಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಟ್ಟಡ ಕಾರ್ಮಿಕರಿಗೆ ಈ ಯೋಜನೆಯಡಿ ಅವಕಾಶ ಇರುವುದಿಲ್ಲ. ಅವರಿಗಾಗಿ ಪ್ರತ್ಯೇಕ ಯೋಜನೆ ಇದ್ದು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ವೃತ್ತಿಯಲ್ಲಿ ತೊಡಗಿದಲ್ಲಿ ಒಬ್ಬರು ಮಾತ್ರ ಪರಿಹಾರ ಪಡೆಯಲು ಅರ್ಹರಿರುತ್ತಾರೆ. ಹಾಗೂ ಒಬ್ಬ ವ್ಯಕ್ತಿ ಅಗಸರು ಎಂದು ಅರ್ಜಿ ಸಲ್ಲಿಸಿ ತದನಂತರ ಅಕ್ಕಸಾಲಿಗ, ಹಮಾಲಿ ಎಂದೋ ಅರ್ಜಿ ಸಲ್ಲಿಸಲು ಬರುವುದಿಲ್ಲ. ಒಂದು ಬಿಪಿಎಲ್ ಕಾರ್ಡ್ ಗೆ ಒಬ್ಬರಿಗೆ ಮಾತ್ರ ಅವಕಾಶ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್ ಮಾತನಾಡಿ, ಜಿಲ್ಲೆಯಲ್ಲಿ ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಲ್ಲಿ ಜೂ.08 ರವರೆಗೆ 7306 ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಂಡಿದ್ದು ಅವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಅವರ ಖಾತೆಗೆ ನೇರವಾಗಿ ಪರಿಹಾರವನ್ನು ಜಮಾ ಮಾಡಲಾಗುತ್ತದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಜೂ.13 ರವರೆಗೆ 6452 ಅರ್ಜಿಗಳು ಸ್ವೀಕೃತಗೊಂಡಿರುತ್ತವೆ. 406 ಅರ್ಜಿಗಳಿಗೆ ಅನುಮೋದನೆ ನೀಡಲಾಗಿದೆ ಮತ್ತು 35 ಅರ್ಜಿಗಳನ್ನು ವಿವಿಧ ಕಾರಣಗಳಿಗೆ ತಿರಸ್ಕರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಯೋಜನೆಯಡಿ ಸರ್ಕಾರದ ನೆರವನ್ನು ಅರ್ಹರು ಮಾತ್ರ ಪಡೆದುಕೊಳ್ಳಬೇಕು. ಸುಳ್ಳು ಮಾಹಿತಿ ಅಥವಾ ದಾಖಲೆ ನೀಡಿ, ಯೋಜನೆ ದುರುಪಯೋಗ ಪಡಿಸಿಕೊಳ್ಳುವವರು ದಾಖಲೆ ಸಮೇತ ಸಿಕ್ಕಿಬಿದ್ದರೆ ಅಂತಹವರ ವಿರುದ್ಧÉ ಯಾವುದೇ ಮುಲಾಜಿಲ್ಲದೆ ಕ್ರಿಮಿನಲ್ ಕೇಸ್ ದಾಖಲಿಸಿ ಕಾಯ್ದೆ ಐಪಿಸಿ 420 ರಡಿ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಅರ್ಜಿ ಸಲ್ಲಿಕೆಗೆ ಷರತ್ತುಗಳು
ಪರವಾನಿಗೆ ಪಡೆದಿರುವ ಸಂಸ್ಥೆಯಲ್ಲಿ 4 ಕ್ಕಿಂತ ಹೆಚ್ಚು ಕಾರ್ಮಿಕರು, ಪರವಾನಿಗೆಯನ್ನು ಪಡೆಯದೆ ಇರುವ ಸಂಸ್ಥೆಯಲ್ಲಿ 2ಕ್ಕಿಂತ ಹೆಚ್ಚು ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಅರ್ಜಿ ಸಲ್ಲಿಸಿದ್ದಲ್ಲಿ ತಪಾಸಣೆ ಕಡ್ಡಾಯವಾಗಿರುತ್ತದೆ. ಬೇರೆ ರಾಜ್ಯದ ಕಾರ್ಮಿಕರು ಸಹ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ. ಆದರೆ, ಅಂತಹ ಫಲಾನುಭವಿ ಕಾರ್ಮಿಕರು ಕರ್ನಾಟಕ ಸರ್ಕಾರವು ನೀಡುವ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು. ಕುಟುಂಬದ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರ ವಯೋಮಿತಿಯನ್ನು 18-65 ವರ್ಷಕ್ಕೆ ಸೀಮಿತಗೊಳಿಸಲಾಗಿದೆ. ಈ ಯೋಜನೆಯ ಸೌಲಭ್ಯವನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಅರ್ಜಿ ಸಲ್ಲಿಸುವ ಕಾರ್ಮಿಕರು ವೃತ್ತಿ ನಿರ್ವಹಿಸುತ್ತಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಉದ್ಯೋಗ ಪ್ರಮಾಣ ಪತ್ರ ಪಡೆದಿರಬೇಕು.
ಉದ್ಯೋಗ ಧೃಡೀಕರಣ ನೀಡುವ ಅಧಿಕಾರಿಗಳು
ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರ ಸಭೆ, ಪುರ ಸಭೆ, ಪಟ್ಟಣ ಪಂಚಾಯ್ತಿಯ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ತಾಲ್ಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯ ತಹಸಿಲ್ದಾರರು, ಉಪ ತಹಸಿಲ್ದಾರರು, ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಹಮಾಲಿ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರು ಮೇಲ್ಕಂಡ ಅಧಿಕಾರಿಗಳು ಅಥವಾ ತಾವು ಕೆಲಸ ನಿರ್ವಹಿಸುತ್ತಿರುವ ಇಲಾಖೆ, ಮಂಡಳಿ, ನಿಗಮದ ಅಧಿಕೃತ ಅಧಿಕಾರಿಗಳು, ಯಾವುದೇ ಇಲಾಖೆಯ ಪತ್ರಾಂಕಿತ ಅಧಿಕಾರಿಗಳಿಂದ ಉದ್ಯೋಗ ಪತ್ರ ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ
ಅರ್ಹ ಫಲಾನುಭವಿ ಕಾರ್ಮಿಕರು ಸೇವಾಸಿಂಧು ಪೋರ್ಟಲ್ನಲ್ಲಿ ಮಾತ್ರ ಅಗತ್ಯ ಮಾಹಿತಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ನಿಗಧಿ ಪಡಿಸಿದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡುವುದು. ಆಧಾರ್ ಕಾರ್ಡ್, ವಿಳಾಸ ದೃಢಿಕರಣ, ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ, ಬಿಪಿಎಲ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಖಾತೆಯ ವಿವರ, ಸ್ವಯಂ ಘೋಷಣೆ, ಅರ್ಜಿದಾರರ ವೃತ್ತಿಯ ಕುರಿತು ಉದ್ಯೋಗ ಪ್ರಮಾಣ ಪತ್ರಗಳನ್ನು ಸೇವಾ ಸಿಂಧು ಪೋರ್ಟಲ್ನಲ್ಲಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ.ವಿಜಯ ಮಹಾಂತೇಶ ದಾನಮ್ಮನವರ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ.ಪಿ.ಮುದಜ್ಜಿ, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕಿ ನಜ್ಮ.ಜಿ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮಾ.ಜಿ., ನಗರಸಭೆ ಪೌರಾಯುಕ್ತೆ ಲಕ್ಷ್ಮೀ.ಎಸ್., ಎಪಿಎಂಸಿ ಕಾರ್ಯದರ್ಶಿ ಕೆ.ಸಿ.ದೊರೆಸ್ವಾಮಿ, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಜೆ.ಪ್ರಭು ಸೇರಿದಂತೆ ವಿವಿಧ ವಲಯದ ಅಸಂಘಟಿತ ಕಾರ್ಮಿಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.
ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ18 hours agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ17 hours agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

