Connect with us

ದಿನದ ಸುದ್ದಿ

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ, ಸೋಲಾರ ವಿದ್ಯುತ್ ಉತ್ಪಾದನೆಗೆ ಒತ್ತು; ಇಂಧನ ಸಚಿವ ಕೆ.ಜೆ.ಜಾರ್ಜ್

Published

on

ಸುದ್ದಿದಿನ,ದಾವಣಗೆರೆ:ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವೇ ಸ್ಥಳಗಳಲ್ಲಿ ಮಾತ್ರ ನಿರ್ವಹಣೆಗಾಗಿ ಕಡಿತ ಮಾಡಲಾಗುತ್ತದೆ. ಆದರೆ ಸರ್ಕಾರದ ಬದ್ದತೆಯಂತೆ ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ, ಆದರೆ ಲೋಡ್‍ಶೆಡ್ಡಿಂಗ್ ಜಾರಿಯಲ್ಲಿರುವುದಿಲ್ಲ ಎಂದರು.

ರಾಜ್ಯದಲ್ಲಿ ಪ್ರತಿನಿತ್ಯ 18500 ಮೆಗಾವ್ಯಾಟ್ ಬೇಡಿಕೆ ಇದ್ದು ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದರಿಂದ ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವಿದ್ಯುತ್ ಬ್ಯಾಂಕಿಂಗ್ ಮಾಡಿಕೊಂಡು ಜೂನ್‍ನಿಂದ ಆ ರಾಜ್ಯಗಳಿಗೆ ಕರ್ನಾಟಕದಿಂದ ವಿದ್ಯುತ್ ನೀಡಿ ಬೇಸಿಗೆಯಲ್ಲಿ ಅಲ್ಲಿಂದ ಗ್ರಿಡ್ ಮೂಲಕ ವಿದ್ಯುತ್ ಪಡೆಯಲು ಉದ್ದೇಶಿಸಲಾಗಿದೆ. ಗುಣಮಟ್ಟದ ವೋಲ್ಟೇಜ್‍ಗಾಗಿ ಅಗತ್ಯವಿರುವ ಕಡೆ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

3 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ

ಕುಸುಮ್-ಸಿ ಯೋಜನೆಯ ಮೂಲಕ ಮುಂದಿನ ಒಂದೂವರೆ ವರ್ಷದಲ್ಲಿ ಸೋಲಾರ್‍ನಿಂದದದದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಈಗಾಗಲೇ ಕುಸುಮ್ ಯೋಜನೆಯಡಿ ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿದ್ದು ಸೋಲಾರ್ ಪ್ಯಾನಲ್ ಅಳವಡಿಕೆ, ವಿದ್ಯುತ್ ಉತ್ಪಾದನೆ ಹಂತ, ಭೂಮಿ ಸಮತಟ್ಟು ಮಾಡುವ ಕೆಲಸ ಪ್ರಗತಿಯಲ್ಲಿದ್ದು ಬರುವ ಏಪ್ರಿಲ್‍ನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಗ್ರಿಡ್‍ಗೆ ಕಳುಹಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

3000 ಪವರ್ ಮ್ಯಾನ್ ನೇಮಕ

ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇನ್ನಷ್ಟು ಗುಣಮಟ್ಟವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಇದರಲ್ಲಿ 1;5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಿ ಅಂತಿಮವಾಗಿ ಅತ್ಯಂತ ಪಾರದರ್ಶಕವಾಗಿ ಮೀಸಲಾತಿ ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕಾತಿ ನಡೆಯಲಿದೆ. ಆದರೆ ಯಾವುದೇ ಮಧ್ಯವರ್ತಿಗಳ ಬಳಿ ಹಣಕೊಟ್ಟು ಕಳೆದುಕೊಳ್ಳಬೇಡಿ, ಯಾರಾದರೂ ಆಮಿಷವೊಡ್ಡಿದಲ್ಲಿ ಇಲಾಖೆ ಗಮನಕ್ಕೆ ತರಬೇಕೆಂದು ತಿಳಿಸಿದರು.

ಎಸ್ಕಾಂಗಳು ನಷ್ಟದಲ್ಲಿಲ್ಲ

ಇಂಧನ ಇಲಾಖೆಯಲ್ಲಿನ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ, ಆದರೆ ಸರ್ಕಾರದಿಂದ ಸಾಕಷ್ಟು ಹಣ ಬರಬೇಕಾಗಿದೆ. ಸ್ಥಳೀಯ ಸಂಸ್ಥೆಗಳು ಸೇರಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ಕಂಪನಿಗಳಿಗೆ ಬರಬೇಕಾದ ಹಣ ಬಾಕಿ ಇದೆ. ಗ್ರಾಮ ಪಂಚಾಯಿತಿಗಳು ಸ್ವಂತವಾಗಿ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳುವ ಯೋಜನೆ ಇದ್ದು ದಾವಣಗೆರೆ ಜಿಲ್ಲೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಲು ಉದ್ದೇಶಿಸಿ ಇದನ್ನು ಪೈಲೆಟ್ ಕಾರ್ಯಕ್ರಮವಾಗಿ ರೂಪಿಸಲಾಗುತ್ತದೆ. ಪಂಚಾಯಿತಿಗಳು ಕುಡಿಯುವ ನೀರು ಪೂರೈಕೆ, ಬೀದಿದೀಪಗಳಿಗೆ ಅಗತ್ಯವಿರುವ ವಿದ್ಯುತ್‍ನ್ನು ಉತ್ಪಾದನೆ ಮಾಡಿಕೊಂಡು ಸ್ವಾವಲಂಬಿಯಾಗಬೇಕು. ಇದಕ್ಕಾಗಿ 400 ಎಕರೆ ಜಾಗವನ್ನು ಗುರುತಿಸಿ ಸೋಲಾರ್ ಪ್ಯಾನಲ್ ಅಳವಡಿಸಿ ಗ್ರಿಡ್‍ಗೆ ವಿದ್ಯುತ್ ನೀಡಿ ಅಷ್ಟೆ ವಿದ್ಯುತ್‍ನ್ನು ವಾಪಸ್ ನೀಡಲಾಗುತ್ತದೆ. ಇದರಿಂದ ವಿದ್ಯುತ್ ಉಳಿತಾಯವಾಗಲಿದೆ ಮತ್ತು ಪಂಚಾಯಿತಿಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದರು.

ವಿದ್ಯುತ್ ದರ ಪರಿಷ್ಕರಣೆ ಕೆಇಆರ್‍ಸಿಗೆ

ಎಲ್ಲಾ ಎಸ್ಕಾಂಗಳ ವಿದ್ಯುತ್ ದರ ಏರಿಕೆಯ ನಿರ್ಧಾರವನ್ನು ಕೆಇಆರ್‍ಸಿ ಮಾಡಲಿದೆ. ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆಯುವ ಮೂಲಕ ದರ ಏರಿಕೆ ನಿರ್ಣಯಗಳನ್ನು ಕೆಇಆರ್‍ಸಿ ನಿರ್ಧರಿಸಲಿದೆ. ಯಾರದೂ ಕೂಡ ಹಸ್ತಕ್ಷೇಪ ಇರುವುದಿಲ್ಲ, ಕಳೆದ ವರ್ಷ ಯಾವುದೇ ವಿದ್ಯುತ್ ದರ ಏರಿಕೆ ಮಾಡಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಗೃಹಜ್ಯೋತಿ

ಸರ್ಕಾರದ ಗ್ಯಾರಂಟಿ ಯೋಜನೆಗಳೊಂದಾದ ಗೃಹಜ್ಯೋತಿ ಯೋಜನೆ ಎಲ್ಲಾ ವರ್ಗದ ಜನರಿಗೂ ಅನ್ವಯಿಸಲಿದ್ದು 200 ಯುನಿಟ್ ವರೆಗೆ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ನೀಡಲಾಗುತ್ತದೆ. ಇದನ್ನು ಅವರು ವರ್ಷದಲ್ಲಿ ಉಪಯೋಗಿಸುವ ಯುನಿಟ್‍ಗಳನ್ನಾಧರಿಸಿ ಹೆಚ್ಚುವರಿಯಾಗಿ ಶೇ 10 ರಷ್ಟು ಸೇರಿಸಿ ಬಳಕೆಯ ಯುನಿಟ್ ನಿಗದಿಯಾಗುತ್ತದೆ. ಆದರೆ 200 ಯುನಿಟ್ ನಂತರ 1 ಯುನಿಟ್ ಹೆಚ್ಚಾದರೂ ವಿದ್ಯುತ್ ದರದಂತೆ ಬಿಲ್ ಪಾವತಿಸಬೇಕಾಗುತ್ತದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ನೊಂದಣಿಯಾದ 433897 ಆರ್.ಆರ್.ಸಂಖ್ಯೆಗಳಿದ್ದು ವಿದ್ಯುತ್ ಸಂಪರ್ಕ ಪಡೆದ ಸ್ಥಾವರಗಳಲ್ಲಿ ಶೇ 88.93 ರಷ್ಟು ಗೃಹಜ್ಯೋತಿಯಲ್ಲಿವೆ. ಈ ಸ್ಥಾವರಗಳಿಗೆ 2023 ರ ಆಗಸ್ಟ್ ನಿಂದ 2024 ರ ಡಿಸೆಂಬರ್ ಅಂತ್ಯದವರೆಗೆ 309 ಕೋಟಿಯಷ್ಟು ಹಣವನ್ನು ಗ್ರಾಹಕರಿಗೆ ಸಬ್ಸಿಡಿ ನೀಡಿದ್ದು ಸರ್ಕಾರ ಇದನ್ನು ಭರಿಸಿದೆ ಎಂದರು.

ರೈತರಿಗೆ 7 ಗಂಟೆ ವಿದ್ಯುತ್

ರೈತರ ಕೃಷಿ ಪಂಪ್ ಸೆಟ್‍ಗಳಿಗೆ ದಿನದಲ್ಲಿ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ದಾವಣಗೆರೆ ಜಿಲ್ಲೆ ಆನಗೋಡು, ಮಾಯಕೊಂಡ ಭಾಗದಲ್ಲಿ 3 ಅಥವಾ 4 ಗಂಟೆಗಳ ಕಾಲ ಮಾತ್ರ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ನೀಡಲಾಗುತ್ತದೆ ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿದಾಗ ಎಲ್ಲಾ ರೈತರಿಗೂ ದಿನದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸರ್ಕಾರದ ನೀತಿಯಾಗಿದ್ದು ಅದರಂತೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು. ಓವರ್ ಲೋಡಿಂಗ್ ಆದರೆ ಅದನ್ನು ಬೇರೆಡೆ ವರ್ಗಾಯಿಸಿ 7 ಗಂಟೆ ಕೃಷಿ ಪಂಪ್‍ಸೆಟ್‍ಗೆ ವಿದ್ಯುತ್ ನೀಡಲೇಬೇಕೆಂದು ಸೂಚನೆ ನೀಡಿದರು.

ಪಂಪ್‍ಸೆಟ್‍ಗಳಿಗೆ ಶೀಘ್ರ ಸಂಪರ್ಕಕ್ಕೆ ಕ್ರಮ

ರೈತರ ಕೃಷಿ ಪಂಪ್‍ಸೆಟ್‍ಗಳಿಗೆ 2004 ರಿಂದಲೂ ಅಕ್ರಮ-ಸಕ್ರಮ ಎಂಬ ಕಾರ್ಯಕ್ರಮದಡಿ ಅನಧಿಕೃತ ಸಂಪರ್ಕವನ್ನು ಸಕ್ರಮ ಮಾಡುತ್ತಾ ಬರಲಾಗಿದೆ. ಇದರಡಿ ಮೂಲಭೂತ ಸೌಕರ್ಯದಡಿ ಮಾರ್ಗ, ಟಿಸಿ ಅಳವಡಿಕೆ ಮಾಡಲಾಗಿದೆ. ಬಾಕಿ ಇರುವ 4946 ಪಂಪ್‍ಸೆಟ್‍ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್ ಕರೆಯಲಾಗಿದೆ. ರೈತರು ಸ್ವಂತವಾಗಿ ಮೂಲಭೂತ ಸೌಕರ್ಯ ಮಾಡಿಕೊಂಡು ಕೃಷಿ ಪಂಪ್‍ಸೆಟ್‍ಗಳಿಗೆ ತಕ್ಷಣವೇ ಸಂಪರ್ಕ ಪಡೆಯಲು ಹಾಗೂ ಇಲಾಖೆಯಿಂದ ಮೂಲಭೂತ ಸೌಕರ್ಯಕ್ಕಾಗಿ ಸರತಿಯಲ್ಲಿ ಕಾಯುವ ಎರಡು ಅವಕಾಶಗಳನ್ನು ಮಾಡಿಕೊಟ್ಟಲ್ಲಿ ಸ್ವಂತವಾಗಿ ಮಾಡಿಕೊಳ್ಳುವ ರೈತರಿಗೆ ಅನುಕೂಲವಾಗುತ್ತದೆ ಎಂಬ ಚಿಂತನೆ ಮಾಡಲಾಗಿದೆ ಎಂದರು.

ಕಸುಮ್-ಬಿ

ಕುಸುಮ್ ಬಿ ಯೋಜನೆಯಡಿ ರೈತರ ಪಂಪ್‍ಸೆಟ್‍ಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿದೆ. 7.5 ಹೆಚ್‍ಪಿ ವರೆಗೆ ಅವಕಾಶ ಇದ್ದು ರೈತರು ಶೇ 20 ರಷ್ಟು ವಂತಿಗೆಯನ್ನು ಕಟ್ಟಬೇಕು. ಕೇಂದ್ರ ಶೇ 30 ಹಾಗೂ ರಾಜ್ಯ ಶೇ 50 ರಷ್ಟು ಸಹಾಯಧನ ಘಟಕ ವೆಚ್ಚಕ್ಕೆ ನೀಡಲಿದೆ. ಮತ್ತು ಕುಸುಮ್-ಸಿ ಯೋಜನೆಯಡಿ ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಗ್ರಿಡ್‍ಗೆ ಪೂರೈಕೆ ಮಾಡುವುದಾಗಿದೆ. ರೈತರು ಸೋಲಾರ್ ಪಂಪ್‍ಸೆಟ್ ಅಳವಡಿಕೆಗೆ ಮುಂದೆ ಬಂದಲ್ಲಿ ಹೆಚ್ಚು ಅನುಕೂಲವಾಗಲಿದೆ ಎಂದರು.

ಸಭೆಯಲ್ಲಿ ಶಾಸಕರಾದ ಕೆ.ಎಸ್.ಬಸವಂತಪ್ಪ, ಲತಾ ಮಲ್ಲಿಕಾರ್ಜುನ್, ಬಿ.ದೇವೇಂದ್ರಪ್ಪ, ಕೆಪಿಟಿಸಿಎಲ್ ಎಂಡಿ ಪಂಕಜ್‍ಕುಮಾರ್ ಪಾಂಡೆ, ಬೆಸ್ಕಾಂ ಎಂಡಿ ಡಾ; ಶಿವಶಂಕರ್ ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಪಾಟೀಲ್ ಹಾಗೂ ಬೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending