ದಿನದ ಸುದ್ದಿ
ಇ-ಸಂಜೀವಿನಿ ಪ್ರಚಾರಕ್ಕಾಗಿ ಹೆಚ್ಚು ಒತ್ತು, ಕೋವಿಡ್ ಕೇರ್ ಸೆಂಟರ್ಗಳ ಸ್ಥಗಿತಕ್ಕೆ ಜಿಲ್ಲಾಧಿಕಾರಿ ಸೂಚನೆ
ಸುದ್ದಿದಿನ,ದಾವಣಗೆರೆ : ಕೋವಿಡ್ ಸೋಂಕಿಗೆ ಒಳಗಾದ ರೋಗಿಗಳಿಗೆ ವೈದ್ಯಕೀಯ ನೆರವು ನೀಡುವ ಸಲುವಾಗಿ ಜಿಲ್ಲೆಯಾದ್ಯಂತ ತೆರೆಯಲಾಗಿದ್ದ ಕೋವಿಡ್ ಕೇರ್ಸೆಂಟರ್ಗಳನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಬುಧುವಾರದಂದು ಏರ್ಪಡಿಸಿದ್ದ ಕೋವಿಡ್ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತಾನಾಡಿದ ಅವರು ಜಿಲ್ಲೆಯಲ್ಲಿ ಸದ್ಯ 616 ಸಕ್ರಿಯ ಕೊರೊನಾ ಪಾಸಿಟಿವ್ ಪ್ರಕರಣಗಳಿದ್ದು, ಅವುಗಳಲ್ಲಿ 131 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 417 ಜನ ಹೋಂ ಐಸೋಲೇಷನ್ನಲ್ಲಿ ಇದ್ದು ಸದ್ಯ ಯಾವುದೇ ಕೊರೊನಾ ಪೀಡಿತರು ಈ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಇಲ್ಲದ ಕಾರಣ ಅವುಗಳನ್ನು ಸ್ಥಗಿತಗೊಳಿಸಬೇಕು. ಹಾಗೂ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿವಿಧ ಇಲಾಖಾ ಸಿಬ್ಬಂದಿಗಳನ್ನು ವಾಪಾಸ್ ಮಾತೃ ಇಲಾಖೆಗೆ ಕಳುಹಿಸಿಕೊಡುವಂತೆ ತಿಳಿಸಿದರು.
ಮುಂದಿನ ಚಳಿಗಾಲದ ದಿನಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುವ ಸುಳಿವಿದ್ದು ತಕ್ಷಣಕ್ಕೆ ಕೈಗೊಳ್ಳಬೇಕಾದ ಎಲ್ಲಾ ಸಿದ್ದತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಹಾಗಾಗಿ ಮತ್ತೆ ಅಗತ್ಯ ಬಿದ್ದರೆ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದೆಂದೆರು.
ಎಲ್ಲಾ ಆಸ್ಪತ್ರೆ, ನರ್ಸಿಂಗ್ ಹೋಂಗಳು ತಮ್ಮಲ್ಲಿಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಬೇಕು. ಒಂದು ವೇಳೆ ಟೆಸ್ಟ್ ಮಾಡಿಸಿಕೊಳ್ಳಲು ನಿರಾಕರಿಸಿದವರಿಗೆ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಇ-ಸಂಜೀವಿನಿಗೆ ಒತ್ತು
ವಿವಿಧ ಖಾಯಿಲೆಗಳಿಂದ ಬಳಲುತ್ತಿರುವ ಇ-ಸಂಜೀವಿನಿ ಆ್ಯಪ್ ಬಳಸುವ ಮೂಲಕ ಮನೆಯಿಂದಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬಹುದು.
ಆಸ್ಪತ್ರೆಗೆ ತೆರಳಬೇಕಾದ ಪ್ರಕರಣ ಹೊರತುಪಡಿಸಿ ಸಣ್ಣ ಪುಟ್ಟ ಖಾಯಿಲೆಯವರು ವಿಡಿಯೋ ಕಾಲ್ ಮುಖಾಂತರ ಇ-ಪ್ರಿಸ್ಕ್ರಿಪ್ಶಂನ್ ಪಡೆಯಬಹುದು ಇದನ್ನೇ ಹೆಚ್ಚು ಹೆಚ್ಚು ಪ್ರಚುರಪಡಿಸಬೇಕು ಎಂದು ಆರೋಗ್ಯಾಧಿಕಾರಿಗಳು ಸೂಚನೆ ನೀಡಿದರು.
ಡಿಎಲ್ಓ ಡಾ.ಮುರುಳೀಧರ್ ಮಾತನಾಡಿ, ಈಗಾಗಲೇ ಇ-ಸಂಜೀವಿನಿಯಡಿ 282 ಜನ ಪ್ರಯೋಜನ ಪಡೆದಿದ್ದಾರೆ. 150 ಜನರ ಕನ್ಸಲ್ಟೇಷನ್ ಆಗಿದೆ.
ಜನಕಒಂದು ವೇಳೆ ತಮ್ಮ ಬಳಿ ಆಂಡ್ರಾಯ್ಡ್ ಮೊಬೈಲ್ ಫೋನ್ ಇಲ್ಲದವರು ಸಮೀಪದ ಎ.ಎನ್.ಎಮ್ ರವರನ್ನು ಸಂಪರ್ಕಿಸಬಹುದು. ಅವರು ನೆರವು ನೀಡುತ್ತಾರೆ.
ಜಿಲ್ಲೆಯಲ್ಲಿ 260 ಎ.ಎನ್.ಎಮ್ಗಳು ಕಾರ್ಯನಿರ್ವಹಿಸುತ್ತಿದ್ದು ಅವರ ಮುಖಾಂತರ ಈ ಕಾರ್ಯಕ್ರಮದ ಪ್ರಚಾರಕ್ಕೆ ಒತ್ತುನೀಡಲಾಗುವುದು ಎಂದರು.
ಸಾಮಾಜಿಕ ಅಂತರ ಪಾಲಿಸದಿದ್ದರೆ ಕ್ರಮ
ಎಲ್ಲಾ ರೀತಿಯ ವ್ಯಾಪಾರ ವಹಿವಾಟು ನಡೆಸುವ ಸಂಸ್ಥೆಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಸಾಕಷ್ಟು ಅರಿವು ಮೂಡಿಸಲಾಗಿದೆ ಮುಂದಿನ ದಿನಗಳಲ್ಲಿ ಹೆಚ್ಚು ಜನ ಜಂಗುಳಿ ನಡುವೆ ವ್ಯಾಪಾರ ನಡೆಸುವುದು ಕಂಡುಬಂದರೆ 2 ಬಾರಿ ನೋಟಿಸ್ ನೀಡಿ 3ನೇಬಾರಿ ಅಂಗಡಿಗಳನ್ನು ನಿರ್ದಾಕ್ಷಣ್ಯವಾಗಿ ಮುಚ್ಚಿಸಲಾಗುವುದು.
ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಸಾಮಾಜಿಕ ಅಂತರ, ಮಾಸ್ಕ ಬಳಕೆ ಬಗ್ಗೆ ಪ್ರತಿನಿತ್ಯ ವರದಿ ನೀಡಬೇಕು. ಎಲ್ಲಿಯಾದರೂ ಅಂತರ ಕಾಯ್ದುಕೊಳ್ಳದ, ಮಾಸ್ಕ ಧರಿಸಿದ ಸನ್ನಿವೇಶ ಕಂಡುಬಂದರೆ ಅಧಿಕಾರಿಗಳನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243