ದಿನದ ಸುದ್ದಿ
ರಾಜ್ಯದೆಲ್ಲೆಡೆ ಈದ್ ಮಿಲಾದ್ ಹಬ್ಬದ ಸಂಭ್ರಮ
ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.
ಮುಸ್ಲಿಮರ ಪವಿತ್ರ ಈದ್ ಮಿಲಾದ್ ಅನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿ, ಸಡಗರಗಳಿಂದ ಆಚರಿಸಲಾಗುತ್ತಿದೆ. ಪ್ರವಾದಿ ಮಹಮದ್ ಪೈಗಂಬರ್ ಜನ್ಮ ದಿನಾಚರಣೆಯ ಅಂಗವಾಗಿ ವಿವಿಧ ಮಸೀದಿಗಳಲ್ಲಿ ಮೌಲೀದ್ ಪಾರಾಯಣ ನಡೆಯಿತು. ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯಗಳನ್ನು ಕೋರುವ ಮೂಲಕ ಸಂಭ್ರಮಿಸಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭ್ರಮದಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಿದರು. ಸಮುದಾಯದ ಒಂದು ಪಂಗಡದವರು ತಾವು ಸಾಕಿರುವ ಬಸವಗಳನ್ನು ಸಿಂಗರಿಸಿ ಮೆರವಣಿಗೆ ನಡೆಸಿದರು. ಕೋಲಾರ ಜಿಲ್ಲೆಯಾದ್ಯಂತ ಪ್ರೀತಿ, ಸಹೋದರತ್ವ ಭಾವನೆಯನ್ನು ಬೆಸೆಯುವ ಪ್ರವಾದಿ ಮೊಹಮ್ಮದ್ ಅವರ ಜನ್ಮ ದಿನದ ಅಂಗವಾಗಿ ಈದ್ ಮಿಲಾದ್ ಹಬ್ಬ ಶಾಂತಿಯುತವಾಗಿ ನಡೆಯಿತು.
ಕೋಲಾರ ನಗರದ ಕ್ಲಾಕ್ ಟವರ್ ನಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿ ಕೋಲಾರ – ಬೆಂಗಳೂರು ರಸ್ತೆಯಲ್ಲಿರುವ ಈದ್ಗಾ ಮೈದಾನ ಮತ್ತು ಸಂಗೊಂಡಹಳ್ಳಿ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ನಡೆಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243