ರಾಜಕೀಯ
ಚುನಾವಣಾ ರಾಜಕಾರಣ : ಆಶಾದಾಯಕ ಅವಕಾಶಗಳು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/03/Politics-suddidina-76.jpg&description=ಚುನಾವಣಾ ರಾಜಕಾರಣ : ಆಶಾದಾಯಕ ಅವಕಾಶಗಳು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/03/Politics-suddidina-76.jpg&description=ಚುನಾವಣಾ ರಾಜಕಾರಣ : ಆಶಾದಾಯಕ ಅವಕಾಶಗಳು', 'pinterestShare', 'width=750,height=350'); return false;" title="Pin This Post">
ದೇಶ ಮತ್ತೊಂದು ಮಹಾಚುನಾವಣೆಯ ಹೊಸಿಲಲ್ಲಿದೆ. ಯಾರು ಅಧಿಕಾರ ಅಲಂಕರಿಸಬಹುದು ಎಂಬ ಸಹಜ ಕುತೂಹಲ ಎಲ್ಲೆಡೆಯಲ್ಲಿಯೂ ಇದೆ. ಇದಕ್ಕೆ ಪ್ರತಿಯಾಗಿ ರಾಜಕೀಯ ಅಖಾಡ ಸನ್ನದ್ಧವಾಗಿದೆ. ಲೋಕಸಭೆ ಚುನಾವಣೆ ಎಂದಾಕ್ಷಣ ಮುಂದಿನ ನಾಯಕ ಯಾರು ಎಂಬ ನಿರೀಕ್ಷೆ ಸಹಜವಾಗಿಯೇ ಗರಿಗೆದರುತ್ತದೆ. ಈ ಕುತೂಹಲಕ್ಕನುಗುಣವಾದ ನಿರೀಕ್ಷೆಯನ್ನು ಭಾರತದ ರಾಜಕಾರಣ ಹೇಗೆ ಈಡೇರಿಸುತ್ತದೆ ಎನ್ನುವುದರ ಮೇಲೆ ಭವಿಷ್ಯದ ಹೆಜ್ಜೆಗಳು ನಿರ್ಣಯಿಸಲ್ಪಡುತ್ತವೆ. ಜನಮನ್ನಣೆಯ ಗೆಲುವು ದಕ್ಕಿಸಿಕೊಳ್ಳಲು ರಾಜಕಾರಣಕ್ಕೆ ಎರಡು ಬಗೆಯ ಅವಕಾಶಗಳಿರುತ್ತವೆ. ಸಕಾರಾತ್ಮಕ ಆಲೋಚನೆಗಳ ಬಲದಲ್ಲಿ ದಾರ್ಶನಿಕ ನಾಯಕತ್ವ ಸಾಬೀತುಪಡಿಸುವ ಬದ್ಧತೆಯ ನಡೆಯೊಂದಿಗೆ ಮೊದಲ ಅವಕಾಶದ ಸಾಧ್ಯತೆ ಇರುತ್ತದೆ. ಇಡೀ ದೇಶವನ್ನು ಹಿಂದಕ್ಕೆಳೆಸುವ ಸಂಕುಚಿತ ಕಾರ್ಯಸೂಚಿಯೊಂದಿಗೆ ಜನರ ಜಡತೆಯನ್ನು ಮತ್ತಷ್ಟು ಸ್ಥಾಯಿಗೊಳಿಸುವ ಪ್ರಯತ್ನಗಳೊಂದಿಗಿನ ಅವಕಾಶ ಮತ್ತೊಂದು. ಭಾರತದ ರಾಜಕಾರಣವು ಇಂಥ ಸೀಮಿತ ದೃಷ್ಟಿಕೋನದ ಅವಕಾಶವಾದಿ ತಂತ್ರಗಾರಿಕೆಯನ್ನೇ ನೆಚ್ಚಿಕೊಂಡು ಸಾಗುತ್ತಿದೆ ಎಂಬುದಕ್ಕೆ ಹಲವು ನಿದರ್ಶನಗಳು ಇತಿಹಾಸದ ಪುಟಗಳಲ್ಲಿ ಲಭ್ಯವಾಗುತ್ತವೆ. ಸ್ವಾತಂತ್ರ್ಯೋತ್ತರ ಅವಧಿ, ಜಾಗತೀಕರಣದ ತದನಂತರದ ಕಾಲಘಟ್ಟ ಮತ್ತು ಹೊಸ ಶತಮಾನದ ಸ್ಥಿತ್ಯಂತರಗಳ ಅವಧಿಯನ್ನು ದೃಷ್ಟಿಯಲ್ಲಿರಿಸಿಕೊಂಡು ಈ ಚರ್ಚೆಯನ್ನು ವಿಸ್ತರಿಸಬಹುದು.
ಜಡತೆಯಿಂದ ಗೆಲುವಿನ ಲಾಭ!
ಅಧಿಕಾರಕ್ಕ ಬಂದ ಕ್ಷಣದಿಂದಲೇ ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಪ್ರದರ್ಶಿತವಾಗುವ ಎಚ್ಚರದ ರಾಜಕೀಯ ನಡೆ ಇಲ್ಲಿಯ ಸಾಮಾನ್ಯ ಗುಣಲಕ್ಷಣ. ಇದಕ್ಕೆ ಹೊಸ ಬಗೆಯ ತೀವ್ರತೆ ಸಿಕ್ಕಿದ್ದು ಹಿಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ. ಆಗಿನ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಘಟನಾವಳಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಭಾರತೀಯ ರಾಜಕಾರಣ ಚಾಣಾಕ್ಷ ತಂತ್ರಗಾರಿಕೆಯ ತೀವ್ರತರ ತಿರುವಿನ ಘಟ್ಟ ತಲುಪಿದ್ದು ಸ್ಪಷ್ಟವಾಗುತ್ತದೆ. ಅಧಿಕಾರ ಪಡೆಯುವ ಏಕೈಕ ಕಾರ್ಯಸೂಚಿಯನ್ನಷ್ಟೇ ನೆಚ್ಚಿಕೊಂಡು ರಾಜಕೀಯ ಪಕ್ಷಗಳು ಕಾರ್ಯೋನ್ಮುಖವಾಗುವುದು, ಅದಕ್ಕಾಗಿ ಚಾಣಾಕ್ಷ ತಂತ್ರಗಾರಿಕೆಯ ನೆರವು ಪಡೆಯುವುದು, ಆ ಮೂಲಕ ಗೆಲುವು ಸಾಧ್ಯವಾಗಿಸಿಕೊಳ್ಳುವುದು – ಇವೆಲ್ಲವೂ ಗೊತ್ತಿರುವ ಸಂಗತಿಗಳೇ. ಆದರೆ, 2014ರ ಚುನಾವಣೆಯು ಈ ದೇಶದಲ್ಲಿ ಸ್ಥಾವರವಾಗಿ ಉಳಿದುಕೊಂಡಿದ್ದ ಜಡತೆಯ ನಿರ್ಲಿಪ್ತ ಮನಸ್ಥಿತಿಯನ್ನು ಬೇರೊಂದು ರೀತಿಯಲ್ಲಿ ಬಳಸಿಕೊಂಡು ಗೆಲುವು ತಂದುಕೊಳ್ಳುವ ಅವಕಾಶವನ್ನು ದಯಪಾಲಿಸಿತು. ಇದನ್ನು ಅತ್ಯಂತ ಚಾಣಾಕ್ಷಯುತವಾಗಿ ಬಳಸಿಕೊಂಡವರು ಗೆಲುವಿನ ನಗೆ ಬೀರಿದರು.
ಹಳೆ ಆಲದ ಮರಕ್ಕೆ ಜೋತುಬೀಳುವಿಕೆ
ಹಿಂದೆ ಬಹಳ ವರ್ಷಗಳ ಕಾಲ ಆಡಳಿತ ಚುಕ್ಕಾಣಿ ಹಿಡಿದಿದ್ದವರು ಅನುಸರಿಸಿದ ಹಾದಿಯನ್ನೇ ಬೇರೊಂದು ಬಗೆಯಲ್ಲಿ ಮಾದರಿಯಾಗಿಸಿಕೊಂಡ ಕಾರಣಕ್ಕಾಗಿಯೇ ಆ ಗೆಲುವು ಸಾಧಿಸಲು ಸಾಧ್ಯವಾಯಿತು. ಹಿಂದಿನವರದ್ದು ಹಳೆಯ ಆಲದ ಮರಕ್ಕೆ ಜೋತುಬೀಳುವ ಪ್ರವೃತ್ತಿಯ ರಾಜಕಾರಣವೇ ಆಗಿತ್ತು. ಹಳೆಯ ಸಾಧನೆಯನ್ನು ನೆನಪಿಸಿಕೊಂಡು ಮತ್ತೆ ಮತ್ತೆ ಅದರ ಜಪಗೈದು ಜನರನ್ನು ಸೆಳೆದುಕೊಳ್ಳುವ ತಂತ್ರಗಾರಿಕೆಯ ಕಡೆಗೇ ಅದರ ಆದ್ಯತೆ ಇತ್ತು. ಗೆಲುವು ಸಾಧಿಸುವ ಹುಮ್ಮಸ್ಸಿನೊಂದಿಗೆ ಚುನಾವಣಾ ಅಖಾಡಕ್ಕಿಳಿದಿದ್ದವರು ಹಳೆಯದ್ದರ ಆಧಾರದಲ್ಲಿ ಹೊಸದೊಂದು ರಾಜಕೀಯ ಸಂಸ್ಕøತಿಯನ್ನು ರೂಪಿಸುವ ಹೊಣೆಗಾರಿಕೆ ನಿರ್ವಹಿಸುವ ಅವಕಾಶವನ್ನು ಉದ್ದೇಶಪೂರ್ವಕವಾಗಿ ಬಿಟ್ಟುಕೊಟ್ಟರು. ಹೀಗಾಗಿ ‘ಹಳೆಯ ಬೇರು, ಹೊಸ ಚಿಗುರು’ ಎಂಬ ಪ್ರಯೋಗಶೀಲ ದೃಷ್ಟಿಕೋನ ಸೋಲನ್ನು ಅನುಭವಿಸಿತು. ಹಳೆಯ ಬೇರುಗಳೊಂದಿಗೆ ನಂಟು ಉಳಿಸಿಕೊಂಡು ಹೊಸದಾದ ಹೆಜ್ಜೆಗಳೊಂದಿಗೆ ಬದಲಾವಣೆಯ ಅಲೆಯನ್ನು ಮೂಡಿಸುವುದರ ಕಡೆಗಿನ ವ್ಯಾಪಕ ಸಾಧ್ಯತೆಗಳು ಮೊಟಕುಗೊಂಡವು.
ನಕಾರಾತ್ಮಕತೆಯ ಪುನರಾವರ್ತನೆ
ಪ್ರಶ್ನಿಸುವ ತಾರ್ಕಿಕತೆಯನ್ನು ಚಾಣಾಕ್ಷಯುತವಾಗಿ ಹತ್ತಿಕ್ಕುವ ಆಡಳಿತಾರೂಢ ಪ್ರಾಬಲ್ಯವು ಸ್ವಾತಂತ್ರ್ಯೋತ್ತರ ರಾಜಕೀಯ ವಲಯದ ಮೊದಲ ಆದ್ಯತೆಯಾಗಿ ಪ್ರಾಮುಖ್ಯತೆ ಪಡೆದುಕೊಂಡಿತು. ಇದನ್ನು ಹಿನ್ನೆಲೆಗೆ ಸರಿಸುವ ಪರ್ಯಾಯ ರಾಜಕಾರಣದ ತಾತ್ವಿಕ ಮಾದರಿಗಳು ವಿವಿಧ ದಶಕಗಳಲ್ಲಿ ಕಾಣಿಸಿಕೊಂಡರೂ ಜನಜನಿತವಾದ ರಾಜಕೀಯ ಪಕ್ಷಗಳ ಮುಂಚೂಣಿ ನಾಯಕರ ವ್ಯಕ್ತಿಗತ ಪ್ರತಿಷ್ಠೆ ಮತ್ತು ಆರಾಧನಾ ಮನೋಭಾವಕ್ಕೇ ಹೆಚ್ಚಿನ ಆದ್ಯತೆ ಸಿಕ್ಕಿತು. ಇದು ಐದು ವರ್ಷಗಳ ಅಧಿಕಾರಾವಧಿಯ ಪ್ರತಿ ಹಂತದಲ್ಲೂ ನುಸುಳಿಕೊಳ್ಳತೊಡಗಿತು. ಈಗ ಅದೇ ನಕಾರಾತ್ಮಕತೆ ಬೇರೆ ರೀತಿಯಲ್ಲಿ ಪುನರಾವರ್ತಿತವಾಗಿದೆ.
ವೈರುಧ್ಯದ ರಾಜಕೀಯ ನಡೆ
ಚುನಾವಣಾ ರಾಜಕಾರಣವು ಸಂಕುಚಿತ ಅಜೆಂಡಾ ಆಧಾರದಲ್ಲಿ ಅಭಿವ್ಯಕ್ತವಾದರೆ ಏನೇನಾಗುತ್ತದೆ ಎನ್ನುವುದನ್ನು ಸ್ವಾತಂತ್ರ್ಯೋತ್ತರ ಭಾರತದ ರಾಜಕೀಯ ಚರಿತ್ರೆಯ ಮೂಲಕ ತಿಳಿದುಕೊಳ್ಳಬಹುದು. ಇದರ ಅಧ್ಯಯನ ಮತ್ತು ಸೂಕ್ಷ್ಮ ಅವಲೋಕನದಿಂದ ಇಲ್ಲಿಯ ವೈರುಧ್ಯಗಳು ಸ್ಪಷ್ಟವಾಗಿ ಗೋಚರಿಸುತ್ತವೆ. ಜೀವಪರ ಸಂವೇದನೆಯ ಮೌಲಿಕ ಆಲೋಚನೆ ಮತ್ತು ವಾದಗಳನ್ನು ಮುನ್ನೆಲೆಗೆ ತಂದು ಅದಕ್ಕನುಗುಣವಾದ ಸರ್ಕಾರ ಅಸ್ತಿತ್ವಕ್ಕೆ ಬರಬೇಕು ಎಂಬ ಪ್ರತಿಪಾದನೆಯ ನೆರವಿನೊಂದಿಗೆ ಅಧಿಕಾರಕ್ಕೆ ಬಂದವರು ಮತ್ತು ಉದಾತ್ತವಾದ ಧಾರ್ಮಿಕ ಅಂಶಗಳನ್ನು ಸಂಕುಚಿತಗೊಳಿಸಿ ಸಂಘರ್ಷ ಮೂಡಿಸಿ ಅಧಿಕಾರಕ್ಕೆ ಹತ್ತಿರಾಗುವ ಜಾಯಮಾನದ ರಾಜಕೀಯ ವರ್ತನೆಗಳವರ ದಿಗ್ವಿಜಯದ ಜೊತೆಗೆ ಇಂಥ ವೈರುಧ್ಯಗಳಿವೆ. ಎರಡೂ ವಲಯಗಳು ಅಧಿಕಾರರೂಢ ಮತ್ತು ವಿರೋಧ ಪಕ್ಷ ಎಂಬ ನೆಲೆಗಳಲ್ಲಿ ವಿಂಗಡಣೆಯಾಗಿ ವಾದಗಳನ್ನು ಮುಂದಿಡುತ್ತಾ ಜನಬೆಂಬಲ ಗಿಟ್ಟಿಸಿಕೊಳ್ಳುವ ಪ್ರಯತ್ನದಲ್ಲಿ ಯಶಸ್ಸು ಕಂಡಿವೆ.
ಒಮ್ಮೆ ಅವರಿಗೆ, ಮತ್ತೊಮ್ಮೆ ಇವರಿಗೆ ಎನ್ನುವ ಹಾಗೆ ಅಧಿಕಾರದ ಅವಕಾಶ ಪ್ರಾಪ್ತವಾಗಿದೆ. ಆದರೆ, ಅಧಿಕಾರಕ್ಕೆ ಬಂದ ಮೇಲೆ ಈ ಎರಡೂ ವಲಯಗಳ ರಾಜಕೀಯ ನಡೆ ಯಾವ ಬಗೆಯ ಉದಾತ್ತತೆಯೊಂದಿಗಿತ್ತು ಎಂಬುದನ್ನು ಪರಿಶೀಲಿಸಿದರೆ ಇಡೀ ಭಾರತದ ರಾಜಕಾರಣದ ಬಹುದೊಡ್ಡ ಮಿತಿಗಳು ಎದ್ದುಕಾಣುತ್ತವೆ. ಅಧಿಕಾರಕ್ಕೆ ಬರುವವರೆಗೆ ಪ್ರತಿಪಾದಿಸಿದ ವಿಶಾಲವಾದ ಮೌಲಿಕ ಆಲೋಚನೆಗಳನ್ನೇ ಅಧಿಕಾರಕ್ಕೆ ಬಂದ ನಂತರ ಮರೆಯುವ ಜಾಣ್ಮೆಯನ್ನು ಸ್ಥಾಯಿಯಾಗಿಸಿಕೊಂಡ ಪಕ್ಷ ರಾಜಕಾರಣವೊಂದರ ವಿಕಲಾಂಗ ಲಕ್ಷಣವು ಪಕ್ಷಾತೀತ ನೆಲೆಯಲ್ಲಿ ಸರ್ವವ್ಯಾಪಿಯಾಯಿತು. ಇಂಥ ದ್ವಂದ್ವವನ್ನು ಪ್ರಶ್ನಿಸುತ್ತಲೇ ಧರ್ಮಕ್ಕೆ ಸಂಬಂಧಿಸಿದ ಸೂಕ್ಷ್ಮ ಸಂಗತಿಗಳನ್ನು ರಾಜಕೀಯ ಲಾಭದ ಆಕಾಂಕ್ಷೆಯಲ್ಲಿ ತಪ್ಪಾಗಿ ವಿಶ್ಲೇಷಿಸಿ ಅಧಿಕಾರಕ್ಕೇರಿದವರೂ ಮತ್ತದೇ ಹಾದಿ ಹಿಡಿದರು. ಹೀಗಾಗಿಯೇ ರಾಜಕೀಯ ಪಕ್ಷಗಳ ಕೆಳಹಂತದ ಯುವ ಕಾರ್ಯಕರ್ತರಿಗೆ ಉದಾತ್ತವಾದ ನಾಯಕತ್ವದ ಮಾದರಿಯೇ ಇಲ್ಲದಂತಾಯಿತು.
ಬಹುಮತ ಪ್ರಾಶಸ್ತ್ಯದ ಮತ್ತೊಂದು ಮುಖ
ಈ ಹಂತದಲ್ಲಿಯೇ ಪ್ರಶ್ನಿಸುವ ಧ್ವನಿಗಳೊಂದಿಗೆ ಇರುವವರನ್ನೇ ದ್ವಂದ್ವಕ್ಕೆ ಸಿಲುಕಿಸುವ ವಿತಂಡವಾದಿ ದೃಷ್ಟಿಕೋನಗಳು ಕಳೆದ 2014 ಚುನಾವಣೆಯ ಸಂದರ್ಭದಲ್ಲಿ ವೈಭವೀಕೃತವಾದವು. ಇವರನ್ನು ಪ್ರಶ್ನೆ ಮಾಡುತ್ತೀರಿ. ಮತ್ತಿನ್ಯಾರನ್ನು ಆಯ್ಕೆ ಮಾಡುತ್ತೀರಿ? ಇಷ್ಟು ವರ್ಷಗಳ ಕಾಲ ಆಳಿದವರು ಏನು ಸಾಧಿಸಿದರು? ಎಂಬ ಮರುಪ್ರಶ್ನೆ ಎಸೆದು ಚರ್ಚೆ ಒಳಗೊಳ್ಳಬಹುದಾದ ವಿಶಾಲ ಆವರಣವನ್ನೇ ಒಡೆದುಬಿಡುವ ಪ್ರವೃತ್ತಿ ಮುಂದುವರೆಯಿತು. ಇದೇ ಪ್ರವೃತ್ತಿಯನ್ನೇ ಮುಖ್ಯವಾಗಿಸಿಕೊಂಡು ಸಾಮಾಜಿಕ ಜಾಲತಾಣಗಳನ್ನು ಪಕ್ಷದ ಪರವಾದ ಅಲೆ ಮೂಡಿಸುವ ಉದ್ದೇಶಕ್ಕೆ ಬಳಸಿಕೊಳ್ಳುವ ರಹಸ್ಯ ಕಾರ್ಯಸೂಚಿ ಯಶಸ್ಸು ಕಂಡಿತು. ಹಿಂದಿನವರ ಮೌನಕ್ಕಿಂತ ಈಗಿನವರ ಮಾತು ಹೆಚ್ಚು ಆಪ್ತ ಎಂಬ ಕಾರಣಕ್ಕಾಗಿ ಮತನೀಡುವ ಅಪೇಕ್ಷೆ ಸಾಮೂಹಿಕವಾಗಿ ಅಭಿವ್ಯಕ್ತವಾಯಿತು. ಸಮಸ್ಯೆಗಳನ್ನು ಅಸಹಾಯಕ ಮೌನ ಮತ್ತು ದಿವ್ಯ ನಿರ್ಲಿಪ್ತತೆಯೊಂದಿಗೆ ನಿರ್ಲಕ್ಷಿಸಿದವರಿಗಿಂತಲೂ ಅವೇ ಸಮಸ್ಯೆಗಳಿಗೆ ಪರಿಹಾರ ಸಾಧ್ಯ ಎಂಬುದನ್ನು ಭಾಷಿಕ ಪ್ರೌಢಿಮೆಯಲ್ಲಿ ಮನಗಾಣಿಸಿದವರು ಮುಖ್ಯ ಎಂಬ ಭಾವನೆಯೇ ಸಾರ್ವತ್ರಿಕವಾಗಿ ಹೊಸಬರಿಗೆ ಭಾರೀ ಬಹುಮತದ ಪ್ರಾಶಸ್ತ್ಯ ದೊರಕಿ ಅಧಿಕಾರದ ಅವಕಾಶ ಲಭ್ಯವಾಯಿತು.
ದಿಕ್ಕುತಪ್ಪಿಸುವ ಹುನ್ನಾರಗಳು
ಈಗ 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ಇದೇ ಬಗೆಯ ಇತಿಹಾಸ ಪುನರಾವರ್ತಿತಗೊಳ್ಳುವ ಎಲ್ಲ ವಿದ್ಯಮಾನಗಳಿಗೆ ನಾವೀಗ ಸಾಕ್ಷಿಯಾಗುತ್ತಲೇ ಇದ್ದೇವೆ. ಒಂದು ದೇಶದ ವಿರುದ್ಧ ಯುದ್ಧ ಆಗಬೇಕು ಎಂಬ ಅಗ್ರೆಸ್ಸಿವ್ ಪ್ರತಿಪಾದನೆಯು ಪೀಳಿಗೆಯೊಂದರ ರಾಜಕೀಯ ಆದ್ಯತೆಯನ್ನೇ ಸಂಕುಚಿತಗೊಳಿಸಿ ಬಹುಮತ ಗಿಟ್ಟಿಸಿಕೊಳ್ಳುವ ಮಟ್ಟಿಗೆ ಪ್ರಭಾವೀ ಎಂಬುದನ್ನು ಸಾಬೀತುಪಡಿಸುವ ನಿದರ್ಶನಗಳು ಕಣ್ಣಮುಂದೆಯೇ ಇವೆ. ಸುಳ್ಳುಗಳ ತರಹೇವಾರಿ ವಿವರಗಳು ಬಗೆಬಗೆಯ ಬಣ್ಣಗಳನ್ನು ಪಡೆದು ಜನರ ನಿರ್ಧಾರಾತ್ಮಕ ಶಕ್ತಿಯ ಮೇಲೆ ಪ್ರಭಾವ ಬೀರುತ್ತಿರುವ ವಾಸ್ತವವನ್ನು ಅಷ್ಟು ಸುಲಭವಾಗಿ ನಿರಾಕರಿಸುವಂತಿಲ್ಲ. ರಾಜಕಾರಣಿಗಳ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗಲಂತೂ ಭಾರತೀಯ ಪ್ರಜಾಪ್ರಭುತ್ವದ ದಿಕ್ಕುತಪ್ಪಿಸುವ ಹುನ್ನಾರಗಳು ಯಾವ ಸ್ವರೂಪದ್ದವು ಎಂಬುದು ಸ್ಪಷ್ಟವಾಗುತ್ತದೆ. ಇಡೀ ದೇಶದಲ್ಲಿ ಆಗಬೇಕಿದ್ದ ಚರ್ಚೆಗಳ ಬದಲು ಅನಗತ್ಯ ವಿವರಗಳೇ ಪ್ರಾಮುಖ್ಯತೆ ಪಡೆದುಕೊಂಡು ಯಾರಿಗೆ ಲಾಭವಾಗುತ್ತದೆ ಎಂಬ ಸೂಕ್ಷ್ಮತೆ ಗೊತ್ತಾಗುತ್ತದೆ.
ಪ್ರಚೋದನಾತ್ಮಕ ಒಮ್ಮತದ ಉತ್ಪನ್ನ
ವಿಧವೆ ಎಂಬ ಕಾರಣಕ್ಕಾಗಿ ಮಹಿಳೆಯ ರಾಜಕೀಯ ಪ್ರವೇಶಕ್ಕೆ ವ್ಯಕ್ತವಾಗುವ ಪ್ರತಿರೋಧ, ರಾಜಕೀಯ ನಾಯಕಿಯ ತಂದೆ ಯಾರೆಂಬುದೇ ಗೊತ್ತಿಲ್ಲ ಎಂಬುದನ್ನೇ ಚಿತ್ರಿಸಿ ಇಂಥವರ ಆಯ್ಕೆ ಸಮರ್ಥನೀಯವಲ್ಲ ಎಂಬ ವಾದ, ಸಂಘರ್ಷವನ್ನು ಸಮರ್ಥಿಸುವ ನುಡಿಗಳನ್ನಾಡಿದಾಗಲೇ ಪರವಾದ ಅಲೆಯನ್ನು ಸೃಷ್ಟಿಸಿಕೊಳ್ಳಬಹುದೆಂಬ ತಪ್ಪುಕಲ್ಪನೆ, ಜನಪ್ರಿಯ ತಾರೆಯನ್ನು ರಾಜಕೀಯಕ್ಕೆ ಕರೆತಂದು ಜನರನ್ನು ಸೆಳೆದುಕೊಳ್ಳುವ ಪ್ರಯತ್ನ, ಸುದ್ದಿಮಾಧ್ಯಮಗಳನ್ನು ಕೊಂಡುಕೊಂಡು ತಮ್ಮ ಮೂಗಿನ ನೇರಕ್ಕೆ ಬಳಸಿಕೊಳ್ಳುವ ಚಾಣಾಕ್ಷತೆ, ಹಿಂದೆಂದಿಗಿಂತಲೂ ಹೆಚ್ಚು ವಿಸ್ತಾರವಾದ ಸುದ್ದಿಮಾಧ್ಯಮ ಮುಖ್ಯಸ್ಥರು ಮತ್ತು ರಾಜಕೀಯ ಪಕ್ಷಗಳ ನಡುವಿನ ಅಸಂವಿಧಾನಿಕ ನಂಟು, ಅದರ ವಿಸ್ತರಣೆ ಎಂಬಂತೆ ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಬರೀ ವಿವಾದಕ್ಕೆಳೆಸುವ ಮಾತುಗಳ ಸುತ್ತಲೇ ಗಿರಕಿ ಹೊಡೆಯುತ್ತಿರುವ ಸುದ್ದಿಮಾಧ್ಯಮ ಪ್ರಜ್ಞೆ – ಇವೆಲ್ಲವೂ ಸದ್ಯದ ಚುನಾವಣಾ ರಾಜಕಾರಣದ ಒಳಸುಳಿಗಳನ್ನು ಅರ್ಥೈಸಿಕೊಳ್ಳುವುದಕ್ಕೆ ಸಹಾಯಕವಾಗುತ್ತವೆ. ಭಾವನೆಗಳನ್ನು ಪ್ರಚೋದಿಸಿ ಒಮ್ಮತವನ್ನು ಉತ್ಪಾದಿಸಿಕೊಳ್ಳುವ ತಂತ್ರಗಾರಿಕೆಯು ಭಾರತದಲ್ಲಿ ಅತ್ಯಂತ ಜಾಗರೂಕತೆಯಿಂದ ಪ್ರಯೋಗಿಸಲ್ಪಡುತ್ತಿರುವುದಕ್ಕೆ ಸಾಕ್ಷ್ಯ ಒದಗಿಸುತ್ತವೆ.
ಭಾವನಾತ್ಮಕ ಪ್ರಚೋದನೆಯ ನೆರವಿನೊಂದಿಗೆ ಪೂರಕವಾದ ಒಮ್ಮತವನ್ನು ಸೃಷ್ಟಿಸಿಕೊಳ್ಳುವ ತಂತ್ರಗಾರಿಕೆಯು ಭಾರತೀಯ ರಾಜಕಾರಣಕ್ಕೆ ಹೊಸದೇನೂ ಅಲ್ಲ. ಅಸಮಾನತೆಯ ಕಾರಣಕ್ಕಾಗಿಯೇ ಭಾರತದಲ್ಲಿ ಬೇರೂರಿರುವ ತಾರತಮ್ಯದ ದೃಷ್ಟಿಕೋನಗಳನ್ನು ಒಡೆದುಹಾಕುವ ಅಪ್ಪಟ ವೈಚಾರಿಕ ಆಂದೋಲನಗಳು ನಡೆದರೂ ತಾರ್ಕಿಕ ಅಂತ್ಯ ಕಂಡುಕೊಳ್ಳುವವರೆಗೆ ಅವುಗಳ ಚಲನೆ ನಿರಂತರವಾಗುಳಿಯಲಿಲ್ಲ. ಇಂಥ ವೈಚಾರಿಕ ಆಂದೋಲನಗಳನ್ನು ರಾಜಕೀಯ ಅಸ್ಮಿತೆಯ ಸಶಕ್ತತೆಗೆ ಬಳಸಿಕೊಳ್ಳುವ ಜಾಣ್ಮೆಯ ರಾಜಕಾರಣದ ಬದಲು ಅವುಗಳನ್ನು ಭಾವುಕ ನೆಲೆಯಲ್ಲಿ ಗ್ರಹಿಸುವ ಒತ್ತಡ ಸೃಷ್ಟಿಸಿ ಪ್ರಬಲರು ಮತ್ತು ದುರ್ಬಲರ ನಡುವಿನ ಕಂದರ ಹೆಚ್ಚಿಸುವ ಪ್ರಯತ್ನಗಳಾದವು. ಈ ಹಂತದಲ್ಲಿ ಭಿನ್ನಾಭಿಪ್ರಾಯಗಳುಂಟಾದವು. ಗುಂಪುಗಳಾದವು.
ಹೀಗೆ ವೈಚಾರಿಕ ಆಂದೋಲನಗಳನ್ನು ಕಟ್ಟಬೇಕಾದ ವಲಯವೇ ಒಡೆದುಹೋಯಿತು.
ಸಮಸ್ಯೆಯ ಮೂಲಪತ್ತೆಯ ಅನಿವಾರ್ಯತೆ
ಅವುಗಳು ಎತ್ತಿದ ಪ್ರಶ್ನೆಗಳನ್ನೇ ಮುಂದಿಟ್ಟು ಚುನಾವಣೆಗಳನ್ನು ಎದುರಿಸಿದ ಪಕ್ಷ ರಾಜಕಾರಣವು ಅಧಿಕಾರ ಪಡೆಯುವಲ್ಲಿ ಯಶಸ್ಸು ಸಾಧಿಸಿತು. ಅಧಿಕಾರ ಪಡೆದ ನಂತರ ಈ ವೈಚಾರಿಕ ಆಂದೋಲನ ಎತ್ತಿದ್ದ ಪ್ರಶ್ನೆಗಳ ಹಿಂದಿದ್ದ ಸಂಕಟಗಳನ್ನು ಪರಿಹರಿಸುವುದರ ಕಡೆಗೆ ರಚನಾತ್ಮಕ ಪ್ರಯತ್ನವನ್ನು ನಡೆಸಲೇ ಇಲ್ಲ. ಅಷ್ಟೇ ಅಲ್ಲ, ಭಾವುಕ ವ್ಯಾಪ್ತಿಯಲ್ಲಿ ಅಗ್ರಸ್ಥಾನ ಪಡೆದು ಚರ್ಚೆಗೊಳಗಾಗುವ ದೇವರು, ಧರ್ಮಕ್ಕೆ ಸಂಬಂಧಿಸಿದ ಚರ್ಚೆಯನ್ನು ವಿವೇಚನೆ ಎತ್ತರಿಸುವ ಸಂವಾದ ರೂಪಿಸುವ ಆಡಳಿತಾತ್ಮಕ ಹೊಣೆಗಾರಿಕೆಗಳನ್ನೂ ನಿಭಾಯಿಸಲಿಲ್ಲ. ಈ ಸ್ಪೇಸ್ಅನ್ನು ಮೂಲಭೂತವಾದಿ ದೃಷ್ಟಿಕೋನದ ರಾಜಕಾರಣ ಸಕಾಲಿಕವಾಗಿ ಬಳಸಿಕೊಂಡು ಅಧಿಕಾರದ ನಿರ್ಣಾಯಕ ಆವರಣವನ್ನು ಪ್ರವೇಶಿಸುವ ಪ್ರಯತ್ನದಲ್ಲಿ ಯಶಸ್ಸು ಕಂಡಿತು. ಸಮಸ್ಯೆಯ ಈ ಮೂಲವನ್ನು ಗೊತ್ತುಮಾಡಿಕೊಳ್ಳದೇ ನಾವು ಸದ್ಯದಲ್ಲಿ ಇದಕ್ಕಿಂದ ಭಿನ್ನವಾದ ಹೊಸದೊಂದು ಪರ್ಯಾಯ ರಾಜಕಾರಣದ ಆಕೃತಿಗಳನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.
ಅಪೂರ್ವ ಅವಕಾಶ ಬಿಟ್ಟುಕೊಡುವ ಚಾಳಿ
ಈಗ ಸುದ್ದಿಮಾಧ್ಯಮಗಳು ಅತ್ಯುತ್ಸಾಹದಲ್ಲಿ ಇಂತಿಷ್ಟು ಹೊಸ ಮತದಾರರು ಈ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧರಿಸಲಿದ್ದಾರೆ ಎಂದು ಬಿಂಬಿಸುತ್ತಿವೆ. ಹೀಗೆ ಬಿಂಬಿಸುತ್ತಲೇ ಯುವಶಕ್ತಿ ಯಾರ ಪರ ನಿಲ್ಲಬೇಕು ಎಂಬರ್ಥದ ವಿಶ್ಲೇಷಣೆಗಳನ್ನು ಪರೋಕ್ಷವಾಗಿ ಮುಂದಿಡುತ್ತಿವೆ. ಸೈನಿಕರ ಮೇಲೆ ದಾಳಿ ನಡೆದಾಗ ಯುದ್ಧದ ಮೂಲಕವೇ ಪರಿಹಾರ ಸಾಧ್ಯ ಎಂಬ ಬಿಂಬಗಳನ್ನು ಕಟ್ಟಿಕೊಟ್ಟು ಒಂದು ನಿರ್ದಿಷ್ಟ ರಾಜಕೀಯ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ನೆರೆಯ ರಾಷ್ಟ್ರಕ್ಕೆ ಬುದ್ಧಿ ಕಲಿಸಬಹುದು ಎಂಬ ಪರೋಕ್ಷ ಸಂದೇಶವನ್ನು ರವಾನಿಸುತ್ತಿವೆ. ಇನ್ನೂ ಕೆಲವು ಮಾಧ್ಯಮಗಳು ಮುಖ್ಯವಾಗಿ ಉಗ್ರರ ವಿರುದ್ಧದ ರಚನಾತ್ಮಕ ಕಾರ್ಯಾಚರಣೆ ಮತ್ತು ಪಾಕಿಸ್ತಾನದೊಂದಿಗಿನ ಸೌಹಾರ್ದಯುತ ಮಾತುಕತೆಯ ಹಾದಿ ಅನುಸರಣೆಯ ಅಗತ್ಯತೆಯನ್ನು ಪ್ರತಿಪಾದಿಸುತ್ತಿವೆ. ಈ ಚರ್ಚೆಯ ಲಾಭವನ್ನು ಪಡೆಯುವ ಹವಣಿಕೆಯನ್ನು ಪಕ್ಷಗಳು ತೋರುತ್ತಿವೆ. ಇವೆಲ್ಲದ್ದರ ಮಧ್ಯೆ ಚುನಾವಣಾ ಅಖಾಡದಲ್ಲಿ ಪ್ರಜಾಪ್ರಭುತ್ವವಾದಿ ರಾಷ್ಟ್ರವೊಂದು ಮುಂಚೂಣಿಗೆ ತಂದುಕೊಳ್ಳಲೇಬೇಕಾದ ಸಂಗತಿಗಳು ಪ್ರಾತಿನಿಧ್ಯವನ್ನೇ ಪಡೆಯುತ್ತಿಲ್ಲ. ಇಂಥ ಅಪೂರ್ವ ಅವಕಾಶವನ್ನು ರಾಜಕೀಯ ಪಕ್ಷಗಳು ಉದ್ದೇಶಪೂರ್ವಕವಾಗಿ ಬಿಟ್ಟುಕೊಡುತ್ತಿವೆ.
ಸವಾಲುಗಳ ನಿರ್ವಹಣೆಯ ಚಾಣಾಕ್ಷತೆಯ ಅಗತ್ಯತೆ
ಸಮಸ್ಯೆಗಳ ಪ್ರಮಾಣ ವ್ಯಾಪಕವಾಗಿದ್ದಾಗ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಸವಾಲಿನ ನಿರ್ವಹಣೆಯ ಚಾಕಚಕ್ಯತೆ ಪ್ರದರ್ಶಿಸಬೇಕಾಗುತ್ತದೆ. ಇಂಥ ಚಾಕಚಕ್ಯತೆಯೊಂದಿಗಿನ ನಿರ್ವಹಣೆಯ ಸವಾಲನ್ನು ಅತ್ಯಂತ ಶ್ರದ್ಧೆಯಿಂದ ಭಾರತೀಯ ರಾಜಕಾರಣ ಸ್ವೀಕರಿಸಲಿಲ್ಲ. ಸ್ವೀಕರಿಸುವುದನ್ನು ಪ್ರಾಥಮಿಕ ಆದ್ಯತೆಯ ಭಾಗವನ್ನಾಗಿ ಪರಿಗಣಿಸಲಿಲ್ಲ. ಬದಲಾಗಿ ಅದು ಜನರ ದೌರ್ಬಲ್ಯಗಳನ್ನೇ ಬಂಡವಾಳವಾಗಿಸಿಕೊಂಡು ಅದರ ಮೇಲೆ ಮತದ ಫಸಲು ಪಡೆಯುವ ಆಸೆಗಳನ್ನು ಈಡೇರಿಸುವುದರ ಕಡೆಗೆ ಹುಮ್ಮಸ್ಸನ್ನು ಮೀಸಲಾಗಿರಿಸಿಕೊಂಡಿತು. ಸಮಾಜವಾದಿ, ಜಾತ್ಯಾತೀತತೆ, ಬಂಡಾಯ ಮನೋಧರ್ಮದ ಚಳುವಳಿಗಳಿಂದ ಹೊಸ ಅಲೆ ಸೃಷ್ಟಿಸುವ ಪ್ರಯತ್ನಗಳಾದವು. ಆದರೆ ಅವುಗಳ ಪ್ರಭಾವವನ್ನು ವಿಸ್ತರಿಸುವುದಕ್ಕೆ ಇಲ್ಲಿಯ ರಾಜಕಾರಣ ಅವಕಾಶ ನೀಡಲಿಲ್ಲ. ಅವುಗಳನ್ನು ಸದೆಬಡೆಯುವ ಪ್ರತಿತಂತ್ರಗಳನ್ನು ಹೆಣೆದು ಸಾಂಪ್ರದಾಯಿಕ ಜಡತೆಯೊಂದಿಗಿನ ಜನರ ಮನೋಧರ್ಮದ ಮಿತಿಗಳನ್ನೇ ತನ್ನ ಗೆಲುವಿನ ತಂತ್ರಗಳಿಗಾಗಿ ಬಳಸಿಕೊಂಡಿತು. ಇದರ ಕಾರಣಕ್ಕಾಗಿಯೇ ಈಗ ಹೊಸ ವಿತಂಡವಾದಿ ದೃಷ್ಟಿಕೋನಗಳು ಜನಪ್ರಿಯ ಎಂಬ ಭಾವ ಮೂಡಿಸಲಾಗುತ್ತಿದೆ.
ಉಜ್ವಲ ಭವಿಷ್ಯದ ಸಾಧ್ಯತೆಗಳು
ಬುದ್ಧಿ ಮತ್ತು ಜೀವ – ಇವೆರಡೂ ಅಸಂಗತ ಎಂಬ ವೈರುಧ್ಯದ ನಿಲುವುಗಳು ಪ್ರಾಮುಖ್ಯತೆ ಪಡೆಯುತ್ತಿವೆ. ಬುದ್ಧಿಜೀವದ ವಿವೇಚನಾಪೂರ್ಣ ಅಸ್ತಿತ್ವ ಅಪಾಯಕಾರಿ ಎಂದು ನಂಬಿಸಲಾಗುತ್ತಿದೆ. ಆದರೆ, ವಾಸ್ತವದಲ್ಲಿ ಬುದ್ಧಿಜೀವವು ಧರ್ಮಾಧಾರಿತ ಭಾರತೀಯ ಸಾಮಾಜಿಕತೆಯನ್ನು ಭಿನ್ನವಾಗಿ ಮರುರೂಪಿಸುವುದಕ್ಕೆ ಅತ್ಯಾವಶಕ ಎಂಬ ತಾತ್ವಿಕತೆಯನ್ನು ರಾಜಕಾರಣ ಅರ್ಥೈಸಿಕೊಳ್ಳುತ್ತಿಲ್ಲ. ಧರ್ಮ, ದೇವರು, ಸಮಾಜ, ರಾಜಕಾರಣ, ಆರ್ಥಿಕತೆ – ಇವೆಲ್ಲವನ್ನೂ ಬುದ್ಧಿಜೀವದ ಜೀವಂತಿಕೆಯ ಬೆಂಬಲದೊಂದಿಗೆ ವಿವೇಕಪೂರ್ಣ ಪ್ರಜ್ಞೆಯೊಂದಿಗೆ ಅರ್ಥೈಸಿಕೊಳ್ಳಬೇಕು ಎಂಬ ಸ್ವಯಂಸಂವಿಧಾನವು ರೂಪುಗೊಳ್ಳಬೇಕಾಗಿದೆ. ಅದಕ್ಕಾಗಿ ರಾಜಕಾರಣವು ದಾರ್ಶನಿಕ ನಾಯಕತ್ವದ ಸತ್ವದೊಂದಿಗೆ ಗುರುತಿಸಿಕೊಳ್ಳಬೇಕು. ಇಂಥ ಸತ್ವವನ್ನು ಮುನ್ನೆಲೆಗೆ ತರುವುದಕ್ಕೆ ಚುನಾವಣೆಯ ಅಖಾಡವನ್ನು ಪೂರಕವಾಗಿಸಿಕೊಳ್ಳಬೇಕು. ಅಂಥ ಹೆಜ್ಜೆಗಳೊಂದಿಗೇ ಭಾರತದ ಉಜ್ವಲ ಭವಿಷ್ಯ ಅಡಗಿದೆ ಎಂಬುದನ್ನು ಬಹುಬೇಗ ಗೊತ್ತುಮಾಡಿಕೊಳ್ಳಬೇಕು.
-ಡಾ.ಎನ್.ಕೆ.ಪದ್ಮನಾಭ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ5 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ5 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ7 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ7 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ2 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ


