ರಾಜಕೀಯ
ಚುನಾವಣಾ ರಾಜಕಾರಣ : ಆಶಾದಾಯಕ ಅವಕಾಶಗಳು
ದೇಶ ಮತ್ತೊಂದು ಮಹಾಚುನಾವಣೆಯ ಹೊಸಿಲಲ್ಲಿದೆ. ಯಾರು ಅಧಿಕಾರ ಅಲಂಕರಿಸಬಹುದು ಎಂಬ ಸಹಜ ಕುತೂಹಲ ಎಲ್ಲೆಡೆಯಲ್ಲಿಯೂ ಇದೆ. ಇದಕ್ಕೆ ಪ್ರತಿಯಾಗಿ ರಾಜಕೀಯ ಅಖಾಡ ಸನ್ನದ್ಧವಾಗಿದೆ. ಲೋಕಸಭೆ ಚುನಾವಣೆ ಎಂದಾಕ್ಷಣ ಮುಂದಿನ ನಾಯಕ ಯಾರು ಎಂಬ ನಿರೀಕ್ಷೆ ಸಹಜವಾಗಿಯೇ ಗರಿಗೆದರುತ್ತದೆ. ಈ ಕುತೂಹಲಕ್ಕನುಗುಣವಾದ ನಿರೀಕ್ಷೆಯನ್ನು ಭಾರತದ ರಾಜಕಾರಣ ಹೇಗೆ ಈಡೇರಿಸುತ್ತದೆ ಎನ್ನುವುದರ ಮೇಲೆ ಭವಿಷ್ಯದ ಹೆಜ್ಜೆಗಳು ನಿರ್ಣಯಿಸಲ್ಪಡುತ್ತವೆ. ಜನಮನ್ನಣೆಯ ಗೆಲುವು ದಕ್ಕಿಸಿಕೊಳ್ಳಲು ರಾಜಕಾರಣಕ್ಕೆ ಎರಡು ಬಗೆಯ ಅವಕಾಶಗಳಿರುತ್ತವೆ. ಸಕಾರಾತ್ಮಕ ಆಲೋಚನೆಗಳ ಬಲದಲ್ಲಿ ದಾರ್ಶನಿಕ ನಾಯಕತ್ವ ಸಾಬೀತುಪಡಿಸುವ ಬದ್ಧತೆಯ ನಡೆಯೊಂದಿಗೆ ಮೊದಲ ಅವಕಾಶದ ಸಾಧ್ಯತೆ ಇರುತ್ತದೆ. ಇಡೀ ದೇಶವನ್ನು ಹಿಂದಕ್ಕೆಳೆಸುವ ಸಂಕುಚಿತ ಕಾರ್ಯಸೂಚಿಯೊಂದಿಗೆ ಜನರ ಜಡತೆಯನ್ನು ಮತ್ತಷ್ಟು ಸ್ಥಾಯಿಗೊಳಿಸುವ ಪ್ರಯತ್ನಗಳೊಂದಿಗಿನ ಅವಕಾಶ ಮತ್ತೊಂದು. ಭಾರತದ ರಾಜಕಾರಣವು ಇಂಥ ಸೀಮಿತ ದೃಷ್ಟಿಕೋನದ ಅವಕಾಶವಾದಿ ತಂತ್ರಗಾರಿಕೆಯನ್ನೇ ನೆಚ್ಚಿಕೊಂಡು ಸಾಗುತ್ತಿದೆ ಎಂಬುದಕ್ಕೆ ಹಲವು ನಿದರ್ಶನಗಳು ಇತಿಹಾಸದ ಪುಟಗಳಲ್ಲಿ ಲಭ್ಯವಾಗುತ್ತವೆ. ಸ್ವಾತಂತ್ರ್ಯೋತ್ತರ ಅವಧಿ, ಜಾಗತೀಕರಣದ ತದನಂತರದ ಕಾಲಘಟ್ಟ ಮತ್ತು ಹೊಸ ಶತಮಾನದ ಸ್ಥಿತ್ಯಂತರಗಳ ಅವಧಿಯನ್ನು ದೃಷ್ಟಿಯಲ್ಲಿರಿಸಿಕೊಂಡು ಈ ಚರ್ಚೆಯನ್ನು ವಿಸ್ತರಿಸಬಹುದು.
ಜಡತೆಯಿಂದ ಗೆಲುವಿನ ಲಾಭ!
ಅಧಿಕಾರಕ್ಕ ಬಂದ ಕ್ಷಣದಿಂದಲೇ ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಪ್ರದರ್ಶಿತವಾಗುವ ಎಚ್ಚರದ ರಾಜಕೀಯ ನಡೆ ಇಲ್ಲಿಯ ಸಾಮಾನ್ಯ ಗುಣಲಕ್ಷಣ. ಇದಕ್ಕೆ ಹೊಸ ಬಗೆಯ ತೀವ್ರತೆ ಸಿಕ್ಕಿದ್ದು ಹಿಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ. ಆಗಿನ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಘಟನಾವಳಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಭಾರತೀಯ ರಾಜಕಾರಣ ಚಾಣಾಕ್ಷ ತಂತ್ರಗಾರಿಕೆಯ ತೀವ್ರತರ ತಿರುವಿನ ಘಟ್ಟ ತಲುಪಿದ್ದು ಸ್ಪಷ್ಟವಾಗುತ್ತದೆ. ಅಧಿಕಾರ ಪಡೆಯುವ ಏಕೈಕ ಕಾರ್ಯಸೂಚಿಯನ್ನಷ್ಟೇ ನೆಚ್ಚಿಕೊಂಡು ರಾಜಕೀಯ ಪಕ್ಷಗಳು ಕಾರ್ಯೋನ್ಮುಖವಾಗುವುದು, ಅದಕ್ಕಾಗಿ ಚಾಣಾಕ್ಷ ತಂತ್ರಗಾರಿಕೆಯ ನೆರವು ಪಡೆಯುವುದು, ಆ ಮೂಲಕ ಗೆಲುವು ಸಾಧ್ಯವಾಗಿಸಿಕೊಳ್ಳುವುದು – ಇವೆಲ್ಲವೂ ಗೊತ್ತಿರುವ ಸಂಗತಿಗಳೇ. ಆದರೆ, 2014ರ ಚುನಾವಣೆಯು ಈ ದೇಶದಲ್ಲಿ ಸ್ಥಾವರವಾಗಿ ಉಳಿದುಕೊಂಡಿದ್ದ ಜಡತೆಯ ನಿರ್ಲಿಪ್ತ ಮನಸ್ಥಿತಿಯನ್ನು ಬೇರೊಂದು ರೀತಿಯಲ್ಲಿ ಬಳಸಿಕೊಂಡು ಗೆಲುವು ತಂದುಕೊಳ್ಳುವ ಅವಕಾಶವನ್ನು ದಯಪಾಲಿಸಿತು. ಇದನ್ನು ಅತ್ಯಂತ ಚಾಣಾಕ್ಷಯುತವಾಗಿ ಬಳಸಿಕೊಂಡವರು ಗೆಲುವಿನ ನಗೆ ಬೀರಿದರು.
ಹಳೆ ಆಲದ ಮರಕ್ಕೆ ಜೋತುಬೀಳುವಿಕೆ
ಹಿಂದೆ ಬಹಳ ವರ್ಷಗಳ ಕಾಲ ಆಡಳಿತ ಚುಕ್ಕಾಣಿ ಹಿಡಿದಿದ್ದವರು ಅನುಸರಿಸಿದ ಹಾದಿಯನ್ನೇ ಬೇರೊಂದು ಬಗೆಯಲ್ಲಿ ಮಾದರಿಯಾಗಿಸಿಕೊಂಡ ಕಾರಣಕ್ಕಾಗಿಯೇ ಆ ಗೆಲುವು ಸಾಧಿಸಲು ಸಾಧ್ಯವಾಯಿತು. ಹಿಂದಿನವರದ್ದು ಹಳೆಯ ಆಲದ ಮರಕ್ಕೆ ಜೋತುಬೀಳುವ ಪ್ರವೃತ್ತಿಯ ರಾಜಕಾರಣವೇ ಆಗಿತ್ತು. ಹಳೆಯ ಸಾಧನೆಯನ್ನು ನೆನಪಿಸಿಕೊಂಡು ಮತ್ತೆ ಮತ್ತೆ ಅದರ ಜಪಗೈದು ಜನರನ್ನು ಸೆಳೆದುಕೊಳ್ಳುವ ತಂತ್ರಗಾರಿಕೆಯ ಕಡೆಗೇ ಅದರ ಆದ್ಯತೆ ಇತ್ತು. ಗೆಲುವು ಸಾಧಿಸುವ ಹುಮ್ಮಸ್ಸಿನೊಂದಿಗೆ ಚುನಾವಣಾ ಅಖಾಡಕ್ಕಿಳಿದಿದ್ದವರು ಹಳೆಯದ್ದರ ಆಧಾರದಲ್ಲಿ ಹೊಸದೊಂದು ರಾಜಕೀಯ ಸಂಸ್ಕøತಿಯನ್ನು ರೂಪಿಸುವ ಹೊಣೆಗಾರಿಕೆ ನಿರ್ವಹಿಸುವ ಅವಕಾಶವನ್ನು ಉದ್ದೇಶಪೂರ್ವಕವಾಗಿ ಬಿಟ್ಟುಕೊಟ್ಟರು. ಹೀಗಾಗಿ ‘ಹಳೆಯ ಬೇರು, ಹೊಸ ಚಿಗುರು’ ಎಂಬ ಪ್ರಯೋಗಶೀಲ ದೃಷ್ಟಿಕೋನ ಸೋಲನ್ನು ಅನುಭವಿಸಿತು. ಹಳೆಯ ಬೇರುಗಳೊಂದಿಗೆ ನಂಟು ಉಳಿಸಿಕೊಂಡು ಹೊಸದಾದ ಹೆಜ್ಜೆಗಳೊಂದಿಗೆ ಬದಲಾವಣೆಯ ಅಲೆಯನ್ನು ಮೂಡಿಸುವುದರ ಕಡೆಗಿನ ವ್ಯಾಪಕ ಸಾಧ್ಯತೆಗಳು ಮೊಟಕುಗೊಂಡವು.
ನಕಾರಾತ್ಮಕತೆಯ ಪುನರಾವರ್ತನೆ
ಪ್ರಶ್ನಿಸುವ ತಾರ್ಕಿಕತೆಯನ್ನು ಚಾಣಾಕ್ಷಯುತವಾಗಿ ಹತ್ತಿಕ್ಕುವ ಆಡಳಿತಾರೂಢ ಪ್ರಾಬಲ್ಯವು ಸ್ವಾತಂತ್ರ್ಯೋತ್ತರ ರಾಜಕೀಯ ವಲಯದ ಮೊದಲ ಆದ್ಯತೆಯಾಗಿ ಪ್ರಾಮುಖ್ಯತೆ ಪಡೆದುಕೊಂಡಿತು. ಇದನ್ನು ಹಿನ್ನೆಲೆಗೆ ಸರಿಸುವ ಪರ್ಯಾಯ ರಾಜಕಾರಣದ ತಾತ್ವಿಕ ಮಾದರಿಗಳು ವಿವಿಧ ದಶಕಗಳಲ್ಲಿ ಕಾಣಿಸಿಕೊಂಡರೂ ಜನಜನಿತವಾದ ರಾಜಕೀಯ ಪಕ್ಷಗಳ ಮುಂಚೂಣಿ ನಾಯಕರ ವ್ಯಕ್ತಿಗತ ಪ್ರತಿಷ್ಠೆ ಮತ್ತು ಆರಾಧನಾ ಮನೋಭಾವಕ್ಕೇ ಹೆಚ್ಚಿನ ಆದ್ಯತೆ ಸಿಕ್ಕಿತು. ಇದು ಐದು ವರ್ಷಗಳ ಅಧಿಕಾರಾವಧಿಯ ಪ್ರತಿ ಹಂತದಲ್ಲೂ ನುಸುಳಿಕೊಳ್ಳತೊಡಗಿತು. ಈಗ ಅದೇ ನಕಾರಾತ್ಮಕತೆ ಬೇರೆ ರೀತಿಯಲ್ಲಿ ಪುನರಾವರ್ತಿತವಾಗಿದೆ.
ವೈರುಧ್ಯದ ರಾಜಕೀಯ ನಡೆ
ಚುನಾವಣಾ ರಾಜಕಾರಣವು ಸಂಕುಚಿತ ಅಜೆಂಡಾ ಆಧಾರದಲ್ಲಿ ಅಭಿವ್ಯಕ್ತವಾದರೆ ಏನೇನಾಗುತ್ತದೆ ಎನ್ನುವುದನ್ನು ಸ್ವಾತಂತ್ರ್ಯೋತ್ತರ ಭಾರತದ ರಾಜಕೀಯ ಚರಿತ್ರೆಯ ಮೂಲಕ ತಿಳಿದುಕೊಳ್ಳಬಹುದು. ಇದರ ಅಧ್ಯಯನ ಮತ್ತು ಸೂಕ್ಷ್ಮ ಅವಲೋಕನದಿಂದ ಇಲ್ಲಿಯ ವೈರುಧ್ಯಗಳು ಸ್ಪಷ್ಟವಾಗಿ ಗೋಚರಿಸುತ್ತವೆ. ಜೀವಪರ ಸಂವೇದನೆಯ ಮೌಲಿಕ ಆಲೋಚನೆ ಮತ್ತು ವಾದಗಳನ್ನು ಮುನ್ನೆಲೆಗೆ ತಂದು ಅದಕ್ಕನುಗುಣವಾದ ಸರ್ಕಾರ ಅಸ್ತಿತ್ವಕ್ಕೆ ಬರಬೇಕು ಎಂಬ ಪ್ರತಿಪಾದನೆಯ ನೆರವಿನೊಂದಿಗೆ ಅಧಿಕಾರಕ್ಕೆ ಬಂದವರು ಮತ್ತು ಉದಾತ್ತವಾದ ಧಾರ್ಮಿಕ ಅಂಶಗಳನ್ನು ಸಂಕುಚಿತಗೊಳಿಸಿ ಸಂಘರ್ಷ ಮೂಡಿಸಿ ಅಧಿಕಾರಕ್ಕೆ ಹತ್ತಿರಾಗುವ ಜಾಯಮಾನದ ರಾಜಕೀಯ ವರ್ತನೆಗಳವರ ದಿಗ್ವಿಜಯದ ಜೊತೆಗೆ ಇಂಥ ವೈರುಧ್ಯಗಳಿವೆ. ಎರಡೂ ವಲಯಗಳು ಅಧಿಕಾರರೂಢ ಮತ್ತು ವಿರೋಧ ಪಕ್ಷ ಎಂಬ ನೆಲೆಗಳಲ್ಲಿ ವಿಂಗಡಣೆಯಾಗಿ ವಾದಗಳನ್ನು ಮುಂದಿಡುತ್ತಾ ಜನಬೆಂಬಲ ಗಿಟ್ಟಿಸಿಕೊಳ್ಳುವ ಪ್ರಯತ್ನದಲ್ಲಿ ಯಶಸ್ಸು ಕಂಡಿವೆ.
ಒಮ್ಮೆ ಅವರಿಗೆ, ಮತ್ತೊಮ್ಮೆ ಇವರಿಗೆ ಎನ್ನುವ ಹಾಗೆ ಅಧಿಕಾರದ ಅವಕಾಶ ಪ್ರಾಪ್ತವಾಗಿದೆ. ಆದರೆ, ಅಧಿಕಾರಕ್ಕೆ ಬಂದ ಮೇಲೆ ಈ ಎರಡೂ ವಲಯಗಳ ರಾಜಕೀಯ ನಡೆ ಯಾವ ಬಗೆಯ ಉದಾತ್ತತೆಯೊಂದಿಗಿತ್ತು ಎಂಬುದನ್ನು ಪರಿಶೀಲಿಸಿದರೆ ಇಡೀ ಭಾರತದ ರಾಜಕಾರಣದ ಬಹುದೊಡ್ಡ ಮಿತಿಗಳು ಎದ್ದುಕಾಣುತ್ತವೆ. ಅಧಿಕಾರಕ್ಕೆ ಬರುವವರೆಗೆ ಪ್ರತಿಪಾದಿಸಿದ ವಿಶಾಲವಾದ ಮೌಲಿಕ ಆಲೋಚನೆಗಳನ್ನೇ ಅಧಿಕಾರಕ್ಕೆ ಬಂದ ನಂತರ ಮರೆಯುವ ಜಾಣ್ಮೆಯನ್ನು ಸ್ಥಾಯಿಯಾಗಿಸಿಕೊಂಡ ಪಕ್ಷ ರಾಜಕಾರಣವೊಂದರ ವಿಕಲಾಂಗ ಲಕ್ಷಣವು ಪಕ್ಷಾತೀತ ನೆಲೆಯಲ್ಲಿ ಸರ್ವವ್ಯಾಪಿಯಾಯಿತು. ಇಂಥ ದ್ವಂದ್ವವನ್ನು ಪ್ರಶ್ನಿಸುತ್ತಲೇ ಧರ್ಮಕ್ಕೆ ಸಂಬಂಧಿಸಿದ ಸೂಕ್ಷ್ಮ ಸಂಗತಿಗಳನ್ನು ರಾಜಕೀಯ ಲಾಭದ ಆಕಾಂಕ್ಷೆಯಲ್ಲಿ ತಪ್ಪಾಗಿ ವಿಶ್ಲೇಷಿಸಿ ಅಧಿಕಾರಕ್ಕೇರಿದವರೂ ಮತ್ತದೇ ಹಾದಿ ಹಿಡಿದರು. ಹೀಗಾಗಿಯೇ ರಾಜಕೀಯ ಪಕ್ಷಗಳ ಕೆಳಹಂತದ ಯುವ ಕಾರ್ಯಕರ್ತರಿಗೆ ಉದಾತ್ತವಾದ ನಾಯಕತ್ವದ ಮಾದರಿಯೇ ಇಲ್ಲದಂತಾಯಿತು.
ಬಹುಮತ ಪ್ರಾಶಸ್ತ್ಯದ ಮತ್ತೊಂದು ಮುಖ
ಈ ಹಂತದಲ್ಲಿಯೇ ಪ್ರಶ್ನಿಸುವ ಧ್ವನಿಗಳೊಂದಿಗೆ ಇರುವವರನ್ನೇ ದ್ವಂದ್ವಕ್ಕೆ ಸಿಲುಕಿಸುವ ವಿತಂಡವಾದಿ ದೃಷ್ಟಿಕೋನಗಳು ಕಳೆದ 2014 ಚುನಾವಣೆಯ ಸಂದರ್ಭದಲ್ಲಿ ವೈಭವೀಕೃತವಾದವು. ಇವರನ್ನು ಪ್ರಶ್ನೆ ಮಾಡುತ್ತೀರಿ. ಮತ್ತಿನ್ಯಾರನ್ನು ಆಯ್ಕೆ ಮಾಡುತ್ತೀರಿ? ಇಷ್ಟು ವರ್ಷಗಳ ಕಾಲ ಆಳಿದವರು ಏನು ಸಾಧಿಸಿದರು? ಎಂಬ ಮರುಪ್ರಶ್ನೆ ಎಸೆದು ಚರ್ಚೆ ಒಳಗೊಳ್ಳಬಹುದಾದ ವಿಶಾಲ ಆವರಣವನ್ನೇ ಒಡೆದುಬಿಡುವ ಪ್ರವೃತ್ತಿ ಮುಂದುವರೆಯಿತು. ಇದೇ ಪ್ರವೃತ್ತಿಯನ್ನೇ ಮುಖ್ಯವಾಗಿಸಿಕೊಂಡು ಸಾಮಾಜಿಕ ಜಾಲತಾಣಗಳನ್ನು ಪಕ್ಷದ ಪರವಾದ ಅಲೆ ಮೂಡಿಸುವ ಉದ್ದೇಶಕ್ಕೆ ಬಳಸಿಕೊಳ್ಳುವ ರಹಸ್ಯ ಕಾರ್ಯಸೂಚಿ ಯಶಸ್ಸು ಕಂಡಿತು. ಹಿಂದಿನವರ ಮೌನಕ್ಕಿಂತ ಈಗಿನವರ ಮಾತು ಹೆಚ್ಚು ಆಪ್ತ ಎಂಬ ಕಾರಣಕ್ಕಾಗಿ ಮತನೀಡುವ ಅಪೇಕ್ಷೆ ಸಾಮೂಹಿಕವಾಗಿ ಅಭಿವ್ಯಕ್ತವಾಯಿತು. ಸಮಸ್ಯೆಗಳನ್ನು ಅಸಹಾಯಕ ಮೌನ ಮತ್ತು ದಿವ್ಯ ನಿರ್ಲಿಪ್ತತೆಯೊಂದಿಗೆ ನಿರ್ಲಕ್ಷಿಸಿದವರಿಗಿಂತಲೂ ಅವೇ ಸಮಸ್ಯೆಗಳಿಗೆ ಪರಿಹಾರ ಸಾಧ್ಯ ಎಂಬುದನ್ನು ಭಾಷಿಕ ಪ್ರೌಢಿಮೆಯಲ್ಲಿ ಮನಗಾಣಿಸಿದವರು ಮುಖ್ಯ ಎಂಬ ಭಾವನೆಯೇ ಸಾರ್ವತ್ರಿಕವಾಗಿ ಹೊಸಬರಿಗೆ ಭಾರೀ ಬಹುಮತದ ಪ್ರಾಶಸ್ತ್ಯ ದೊರಕಿ ಅಧಿಕಾರದ ಅವಕಾಶ ಲಭ್ಯವಾಯಿತು.
ದಿಕ್ಕುತಪ್ಪಿಸುವ ಹುನ್ನಾರಗಳು
ಈಗ 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ಇದೇ ಬಗೆಯ ಇತಿಹಾಸ ಪುನರಾವರ್ತಿತಗೊಳ್ಳುವ ಎಲ್ಲ ವಿದ್ಯಮಾನಗಳಿಗೆ ನಾವೀಗ ಸಾಕ್ಷಿಯಾಗುತ್ತಲೇ ಇದ್ದೇವೆ. ಒಂದು ದೇಶದ ವಿರುದ್ಧ ಯುದ್ಧ ಆಗಬೇಕು ಎಂಬ ಅಗ್ರೆಸ್ಸಿವ್ ಪ್ರತಿಪಾದನೆಯು ಪೀಳಿಗೆಯೊಂದರ ರಾಜಕೀಯ ಆದ್ಯತೆಯನ್ನೇ ಸಂಕುಚಿತಗೊಳಿಸಿ ಬಹುಮತ ಗಿಟ್ಟಿಸಿಕೊಳ್ಳುವ ಮಟ್ಟಿಗೆ ಪ್ರಭಾವೀ ಎಂಬುದನ್ನು ಸಾಬೀತುಪಡಿಸುವ ನಿದರ್ಶನಗಳು ಕಣ್ಣಮುಂದೆಯೇ ಇವೆ. ಸುಳ್ಳುಗಳ ತರಹೇವಾರಿ ವಿವರಗಳು ಬಗೆಬಗೆಯ ಬಣ್ಣಗಳನ್ನು ಪಡೆದು ಜನರ ನಿರ್ಧಾರಾತ್ಮಕ ಶಕ್ತಿಯ ಮೇಲೆ ಪ್ರಭಾವ ಬೀರುತ್ತಿರುವ ವಾಸ್ತವವನ್ನು ಅಷ್ಟು ಸುಲಭವಾಗಿ ನಿರಾಕರಿಸುವಂತಿಲ್ಲ. ರಾಜಕಾರಣಿಗಳ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗಲಂತೂ ಭಾರತೀಯ ಪ್ರಜಾಪ್ರಭುತ್ವದ ದಿಕ್ಕುತಪ್ಪಿಸುವ ಹುನ್ನಾರಗಳು ಯಾವ ಸ್ವರೂಪದ್ದವು ಎಂಬುದು ಸ್ಪಷ್ಟವಾಗುತ್ತದೆ. ಇಡೀ ದೇಶದಲ್ಲಿ ಆಗಬೇಕಿದ್ದ ಚರ್ಚೆಗಳ ಬದಲು ಅನಗತ್ಯ ವಿವರಗಳೇ ಪ್ರಾಮುಖ್ಯತೆ ಪಡೆದುಕೊಂಡು ಯಾರಿಗೆ ಲಾಭವಾಗುತ್ತದೆ ಎಂಬ ಸೂಕ್ಷ್ಮತೆ ಗೊತ್ತಾಗುತ್ತದೆ.
ಪ್ರಚೋದನಾತ್ಮಕ ಒಮ್ಮತದ ಉತ್ಪನ್ನ
ವಿಧವೆ ಎಂಬ ಕಾರಣಕ್ಕಾಗಿ ಮಹಿಳೆಯ ರಾಜಕೀಯ ಪ್ರವೇಶಕ್ಕೆ ವ್ಯಕ್ತವಾಗುವ ಪ್ರತಿರೋಧ, ರಾಜಕೀಯ ನಾಯಕಿಯ ತಂದೆ ಯಾರೆಂಬುದೇ ಗೊತ್ತಿಲ್ಲ ಎಂಬುದನ್ನೇ ಚಿತ್ರಿಸಿ ಇಂಥವರ ಆಯ್ಕೆ ಸಮರ್ಥನೀಯವಲ್ಲ ಎಂಬ ವಾದ, ಸಂಘರ್ಷವನ್ನು ಸಮರ್ಥಿಸುವ ನುಡಿಗಳನ್ನಾಡಿದಾಗಲೇ ಪರವಾದ ಅಲೆಯನ್ನು ಸೃಷ್ಟಿಸಿಕೊಳ್ಳಬಹುದೆಂಬ ತಪ್ಪುಕಲ್ಪನೆ, ಜನಪ್ರಿಯ ತಾರೆಯನ್ನು ರಾಜಕೀಯಕ್ಕೆ ಕರೆತಂದು ಜನರನ್ನು ಸೆಳೆದುಕೊಳ್ಳುವ ಪ್ರಯತ್ನ, ಸುದ್ದಿಮಾಧ್ಯಮಗಳನ್ನು ಕೊಂಡುಕೊಂಡು ತಮ್ಮ ಮೂಗಿನ ನೇರಕ್ಕೆ ಬಳಸಿಕೊಳ್ಳುವ ಚಾಣಾಕ್ಷತೆ, ಹಿಂದೆಂದಿಗಿಂತಲೂ ಹೆಚ್ಚು ವಿಸ್ತಾರವಾದ ಸುದ್ದಿಮಾಧ್ಯಮ ಮುಖ್ಯಸ್ಥರು ಮತ್ತು ರಾಜಕೀಯ ಪಕ್ಷಗಳ ನಡುವಿನ ಅಸಂವಿಧಾನಿಕ ನಂಟು, ಅದರ ವಿಸ್ತರಣೆ ಎಂಬಂತೆ ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಬರೀ ವಿವಾದಕ್ಕೆಳೆಸುವ ಮಾತುಗಳ ಸುತ್ತಲೇ ಗಿರಕಿ ಹೊಡೆಯುತ್ತಿರುವ ಸುದ್ದಿಮಾಧ್ಯಮ ಪ್ರಜ್ಞೆ – ಇವೆಲ್ಲವೂ ಸದ್ಯದ ಚುನಾವಣಾ ರಾಜಕಾರಣದ ಒಳಸುಳಿಗಳನ್ನು ಅರ್ಥೈಸಿಕೊಳ್ಳುವುದಕ್ಕೆ ಸಹಾಯಕವಾಗುತ್ತವೆ. ಭಾವನೆಗಳನ್ನು ಪ್ರಚೋದಿಸಿ ಒಮ್ಮತವನ್ನು ಉತ್ಪಾದಿಸಿಕೊಳ್ಳುವ ತಂತ್ರಗಾರಿಕೆಯು ಭಾರತದಲ್ಲಿ ಅತ್ಯಂತ ಜಾಗರೂಕತೆಯಿಂದ ಪ್ರಯೋಗಿಸಲ್ಪಡುತ್ತಿರುವುದಕ್ಕೆ ಸಾಕ್ಷ್ಯ ಒದಗಿಸುತ್ತವೆ.
ಭಾವನಾತ್ಮಕ ಪ್ರಚೋದನೆಯ ನೆರವಿನೊಂದಿಗೆ ಪೂರಕವಾದ ಒಮ್ಮತವನ್ನು ಸೃಷ್ಟಿಸಿಕೊಳ್ಳುವ ತಂತ್ರಗಾರಿಕೆಯು ಭಾರತೀಯ ರಾಜಕಾರಣಕ್ಕೆ ಹೊಸದೇನೂ ಅಲ್ಲ. ಅಸಮಾನತೆಯ ಕಾರಣಕ್ಕಾಗಿಯೇ ಭಾರತದಲ್ಲಿ ಬೇರೂರಿರುವ ತಾರತಮ್ಯದ ದೃಷ್ಟಿಕೋನಗಳನ್ನು ಒಡೆದುಹಾಕುವ ಅಪ್ಪಟ ವೈಚಾರಿಕ ಆಂದೋಲನಗಳು ನಡೆದರೂ ತಾರ್ಕಿಕ ಅಂತ್ಯ ಕಂಡುಕೊಳ್ಳುವವರೆಗೆ ಅವುಗಳ ಚಲನೆ ನಿರಂತರವಾಗುಳಿಯಲಿಲ್ಲ. ಇಂಥ ವೈಚಾರಿಕ ಆಂದೋಲನಗಳನ್ನು ರಾಜಕೀಯ ಅಸ್ಮಿತೆಯ ಸಶಕ್ತತೆಗೆ ಬಳಸಿಕೊಳ್ಳುವ ಜಾಣ್ಮೆಯ ರಾಜಕಾರಣದ ಬದಲು ಅವುಗಳನ್ನು ಭಾವುಕ ನೆಲೆಯಲ್ಲಿ ಗ್ರಹಿಸುವ ಒತ್ತಡ ಸೃಷ್ಟಿಸಿ ಪ್ರಬಲರು ಮತ್ತು ದುರ್ಬಲರ ನಡುವಿನ ಕಂದರ ಹೆಚ್ಚಿಸುವ ಪ್ರಯತ್ನಗಳಾದವು. ಈ ಹಂತದಲ್ಲಿ ಭಿನ್ನಾಭಿಪ್ರಾಯಗಳುಂಟಾದವು. ಗುಂಪುಗಳಾದವು.
ಹೀಗೆ ವೈಚಾರಿಕ ಆಂದೋಲನಗಳನ್ನು ಕಟ್ಟಬೇಕಾದ ವಲಯವೇ ಒಡೆದುಹೋಯಿತು.
ಸಮಸ್ಯೆಯ ಮೂಲಪತ್ತೆಯ ಅನಿವಾರ್ಯತೆ
ಅವುಗಳು ಎತ್ತಿದ ಪ್ರಶ್ನೆಗಳನ್ನೇ ಮುಂದಿಟ್ಟು ಚುನಾವಣೆಗಳನ್ನು ಎದುರಿಸಿದ ಪಕ್ಷ ರಾಜಕಾರಣವು ಅಧಿಕಾರ ಪಡೆಯುವಲ್ಲಿ ಯಶಸ್ಸು ಸಾಧಿಸಿತು. ಅಧಿಕಾರ ಪಡೆದ ನಂತರ ಈ ವೈಚಾರಿಕ ಆಂದೋಲನ ಎತ್ತಿದ್ದ ಪ್ರಶ್ನೆಗಳ ಹಿಂದಿದ್ದ ಸಂಕಟಗಳನ್ನು ಪರಿಹರಿಸುವುದರ ಕಡೆಗೆ ರಚನಾತ್ಮಕ ಪ್ರಯತ್ನವನ್ನು ನಡೆಸಲೇ ಇಲ್ಲ. ಅಷ್ಟೇ ಅಲ್ಲ, ಭಾವುಕ ವ್ಯಾಪ್ತಿಯಲ್ಲಿ ಅಗ್ರಸ್ಥಾನ ಪಡೆದು ಚರ್ಚೆಗೊಳಗಾಗುವ ದೇವರು, ಧರ್ಮಕ್ಕೆ ಸಂಬಂಧಿಸಿದ ಚರ್ಚೆಯನ್ನು ವಿವೇಚನೆ ಎತ್ತರಿಸುವ ಸಂವಾದ ರೂಪಿಸುವ ಆಡಳಿತಾತ್ಮಕ ಹೊಣೆಗಾರಿಕೆಗಳನ್ನೂ ನಿಭಾಯಿಸಲಿಲ್ಲ. ಈ ಸ್ಪೇಸ್ಅನ್ನು ಮೂಲಭೂತವಾದಿ ದೃಷ್ಟಿಕೋನದ ರಾಜಕಾರಣ ಸಕಾಲಿಕವಾಗಿ ಬಳಸಿಕೊಂಡು ಅಧಿಕಾರದ ನಿರ್ಣಾಯಕ ಆವರಣವನ್ನು ಪ್ರವೇಶಿಸುವ ಪ್ರಯತ್ನದಲ್ಲಿ ಯಶಸ್ಸು ಕಂಡಿತು. ಸಮಸ್ಯೆಯ ಈ ಮೂಲವನ್ನು ಗೊತ್ತುಮಾಡಿಕೊಳ್ಳದೇ ನಾವು ಸದ್ಯದಲ್ಲಿ ಇದಕ್ಕಿಂದ ಭಿನ್ನವಾದ ಹೊಸದೊಂದು ಪರ್ಯಾಯ ರಾಜಕಾರಣದ ಆಕೃತಿಗಳನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.
ಅಪೂರ್ವ ಅವಕಾಶ ಬಿಟ್ಟುಕೊಡುವ ಚಾಳಿ
ಈಗ ಸುದ್ದಿಮಾಧ್ಯಮಗಳು ಅತ್ಯುತ್ಸಾಹದಲ್ಲಿ ಇಂತಿಷ್ಟು ಹೊಸ ಮತದಾರರು ಈ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧರಿಸಲಿದ್ದಾರೆ ಎಂದು ಬಿಂಬಿಸುತ್ತಿವೆ. ಹೀಗೆ ಬಿಂಬಿಸುತ್ತಲೇ ಯುವಶಕ್ತಿ ಯಾರ ಪರ ನಿಲ್ಲಬೇಕು ಎಂಬರ್ಥದ ವಿಶ್ಲೇಷಣೆಗಳನ್ನು ಪರೋಕ್ಷವಾಗಿ ಮುಂದಿಡುತ್ತಿವೆ. ಸೈನಿಕರ ಮೇಲೆ ದಾಳಿ ನಡೆದಾಗ ಯುದ್ಧದ ಮೂಲಕವೇ ಪರಿಹಾರ ಸಾಧ್ಯ ಎಂಬ ಬಿಂಬಗಳನ್ನು ಕಟ್ಟಿಕೊಟ್ಟು ಒಂದು ನಿರ್ದಿಷ್ಟ ರಾಜಕೀಯ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ನೆರೆಯ ರಾಷ್ಟ್ರಕ್ಕೆ ಬುದ್ಧಿ ಕಲಿಸಬಹುದು ಎಂಬ ಪರೋಕ್ಷ ಸಂದೇಶವನ್ನು ರವಾನಿಸುತ್ತಿವೆ. ಇನ್ನೂ ಕೆಲವು ಮಾಧ್ಯಮಗಳು ಮುಖ್ಯವಾಗಿ ಉಗ್ರರ ವಿರುದ್ಧದ ರಚನಾತ್ಮಕ ಕಾರ್ಯಾಚರಣೆ ಮತ್ತು ಪಾಕಿಸ್ತಾನದೊಂದಿಗಿನ ಸೌಹಾರ್ದಯುತ ಮಾತುಕತೆಯ ಹಾದಿ ಅನುಸರಣೆಯ ಅಗತ್ಯತೆಯನ್ನು ಪ್ರತಿಪಾದಿಸುತ್ತಿವೆ. ಈ ಚರ್ಚೆಯ ಲಾಭವನ್ನು ಪಡೆಯುವ ಹವಣಿಕೆಯನ್ನು ಪಕ್ಷಗಳು ತೋರುತ್ತಿವೆ. ಇವೆಲ್ಲದ್ದರ ಮಧ್ಯೆ ಚುನಾವಣಾ ಅಖಾಡದಲ್ಲಿ ಪ್ರಜಾಪ್ರಭುತ್ವವಾದಿ ರಾಷ್ಟ್ರವೊಂದು ಮುಂಚೂಣಿಗೆ ತಂದುಕೊಳ್ಳಲೇಬೇಕಾದ ಸಂಗತಿಗಳು ಪ್ರಾತಿನಿಧ್ಯವನ್ನೇ ಪಡೆಯುತ್ತಿಲ್ಲ. ಇಂಥ ಅಪೂರ್ವ ಅವಕಾಶವನ್ನು ರಾಜಕೀಯ ಪಕ್ಷಗಳು ಉದ್ದೇಶಪೂರ್ವಕವಾಗಿ ಬಿಟ್ಟುಕೊಡುತ್ತಿವೆ.
ಸವಾಲುಗಳ ನಿರ್ವಹಣೆಯ ಚಾಣಾಕ್ಷತೆಯ ಅಗತ್ಯತೆ
ಸಮಸ್ಯೆಗಳ ಪ್ರಮಾಣ ವ್ಯಾಪಕವಾಗಿದ್ದಾಗ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಸವಾಲಿನ ನಿರ್ವಹಣೆಯ ಚಾಕಚಕ್ಯತೆ ಪ್ರದರ್ಶಿಸಬೇಕಾಗುತ್ತದೆ. ಇಂಥ ಚಾಕಚಕ್ಯತೆಯೊಂದಿಗಿನ ನಿರ್ವಹಣೆಯ ಸವಾಲನ್ನು ಅತ್ಯಂತ ಶ್ರದ್ಧೆಯಿಂದ ಭಾರತೀಯ ರಾಜಕಾರಣ ಸ್ವೀಕರಿಸಲಿಲ್ಲ. ಸ್ವೀಕರಿಸುವುದನ್ನು ಪ್ರಾಥಮಿಕ ಆದ್ಯತೆಯ ಭಾಗವನ್ನಾಗಿ ಪರಿಗಣಿಸಲಿಲ್ಲ. ಬದಲಾಗಿ ಅದು ಜನರ ದೌರ್ಬಲ್ಯಗಳನ್ನೇ ಬಂಡವಾಳವಾಗಿಸಿಕೊಂಡು ಅದರ ಮೇಲೆ ಮತದ ಫಸಲು ಪಡೆಯುವ ಆಸೆಗಳನ್ನು ಈಡೇರಿಸುವುದರ ಕಡೆಗೆ ಹುಮ್ಮಸ್ಸನ್ನು ಮೀಸಲಾಗಿರಿಸಿಕೊಂಡಿತು. ಸಮಾಜವಾದಿ, ಜಾತ್ಯಾತೀತತೆ, ಬಂಡಾಯ ಮನೋಧರ್ಮದ ಚಳುವಳಿಗಳಿಂದ ಹೊಸ ಅಲೆ ಸೃಷ್ಟಿಸುವ ಪ್ರಯತ್ನಗಳಾದವು. ಆದರೆ ಅವುಗಳ ಪ್ರಭಾವವನ್ನು ವಿಸ್ತರಿಸುವುದಕ್ಕೆ ಇಲ್ಲಿಯ ರಾಜಕಾರಣ ಅವಕಾಶ ನೀಡಲಿಲ್ಲ. ಅವುಗಳನ್ನು ಸದೆಬಡೆಯುವ ಪ್ರತಿತಂತ್ರಗಳನ್ನು ಹೆಣೆದು ಸಾಂಪ್ರದಾಯಿಕ ಜಡತೆಯೊಂದಿಗಿನ ಜನರ ಮನೋಧರ್ಮದ ಮಿತಿಗಳನ್ನೇ ತನ್ನ ಗೆಲುವಿನ ತಂತ್ರಗಳಿಗಾಗಿ ಬಳಸಿಕೊಂಡಿತು. ಇದರ ಕಾರಣಕ್ಕಾಗಿಯೇ ಈಗ ಹೊಸ ವಿತಂಡವಾದಿ ದೃಷ್ಟಿಕೋನಗಳು ಜನಪ್ರಿಯ ಎಂಬ ಭಾವ ಮೂಡಿಸಲಾಗುತ್ತಿದೆ.
ಉಜ್ವಲ ಭವಿಷ್ಯದ ಸಾಧ್ಯತೆಗಳು
ಬುದ್ಧಿ ಮತ್ತು ಜೀವ – ಇವೆರಡೂ ಅಸಂಗತ ಎಂಬ ವೈರುಧ್ಯದ ನಿಲುವುಗಳು ಪ್ರಾಮುಖ್ಯತೆ ಪಡೆಯುತ್ತಿವೆ. ಬುದ್ಧಿಜೀವದ ವಿವೇಚನಾಪೂರ್ಣ ಅಸ್ತಿತ್ವ ಅಪಾಯಕಾರಿ ಎಂದು ನಂಬಿಸಲಾಗುತ್ತಿದೆ. ಆದರೆ, ವಾಸ್ತವದಲ್ಲಿ ಬುದ್ಧಿಜೀವವು ಧರ್ಮಾಧಾರಿತ ಭಾರತೀಯ ಸಾಮಾಜಿಕತೆಯನ್ನು ಭಿನ್ನವಾಗಿ ಮರುರೂಪಿಸುವುದಕ್ಕೆ ಅತ್ಯಾವಶಕ ಎಂಬ ತಾತ್ವಿಕತೆಯನ್ನು ರಾಜಕಾರಣ ಅರ್ಥೈಸಿಕೊಳ್ಳುತ್ತಿಲ್ಲ. ಧರ್ಮ, ದೇವರು, ಸಮಾಜ, ರಾಜಕಾರಣ, ಆರ್ಥಿಕತೆ – ಇವೆಲ್ಲವನ್ನೂ ಬುದ್ಧಿಜೀವದ ಜೀವಂತಿಕೆಯ ಬೆಂಬಲದೊಂದಿಗೆ ವಿವೇಕಪೂರ್ಣ ಪ್ರಜ್ಞೆಯೊಂದಿಗೆ ಅರ್ಥೈಸಿಕೊಳ್ಳಬೇಕು ಎಂಬ ಸ್ವಯಂಸಂವಿಧಾನವು ರೂಪುಗೊಳ್ಳಬೇಕಾಗಿದೆ. ಅದಕ್ಕಾಗಿ ರಾಜಕಾರಣವು ದಾರ್ಶನಿಕ ನಾಯಕತ್ವದ ಸತ್ವದೊಂದಿಗೆ ಗುರುತಿಸಿಕೊಳ್ಳಬೇಕು. ಇಂಥ ಸತ್ವವನ್ನು ಮುನ್ನೆಲೆಗೆ ತರುವುದಕ್ಕೆ ಚುನಾವಣೆಯ ಅಖಾಡವನ್ನು ಪೂರಕವಾಗಿಸಿಕೊಳ್ಳಬೇಕು. ಅಂಥ ಹೆಜ್ಜೆಗಳೊಂದಿಗೇ ಭಾರತದ ಉಜ್ವಲ ಭವಿಷ್ಯ ಅಡಗಿದೆ ಎಂಬುದನ್ನು ಬಹುಬೇಗ ಗೊತ್ತುಮಾಡಿಕೊಳ್ಳಬೇಕು.
-ಡಾ.ಎನ್.ಕೆ.ಪದ್ಮನಾಭ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
‘ಮತದಾರ ದೇವರು’ ಎಂದ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೇರು ನಟ ಡಾ.ರಾಜ್ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು”. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ ಎಂದರು.
ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.
ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.
ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.
ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.
ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.
ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್.
ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ
ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ.
ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.
ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸುವ ವ್ಯರ್ಥಪ್ರಯತ್ನವನ್ನು ನಾನು ಮಾಡುವುದಿಲ್ಲ. ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.
ಜಾತಿ, ದುಡ್ಡು ಮತ್ತು ತೋಳ್ಬಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.
ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.
ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.
ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.
ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.
ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.
ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.
ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.
ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.
ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.
ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.. ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗ್ರಾಮ ಆಡಳಿತಾಧಿಕಾರಿ ಕೋಸಗಿ ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹುಲಿಕಟ್ಟೆ ಸರ್ಕಲ್ ವ್ಯಾಪ್ತಿಯ ಹಾರಕನಾಳು, ಹುಲಿಕಟ್ಟೆ, ಚನ್ನಳ್ಳಿ ತಾಂಡ, ಈಶಾಪುರ, ಹಾರಕನಾಳು ಸಣ್ಣತಾಂಡ, ಹಾರಕನಾಳು ದೊಡ್ಡತಾಂಡ, ಕನ್ನಾಯಕನಹಳ್ಳಿ ಸೇರಿ ಒಟ್ಟು 07 ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೋಸಗಿ ಸುರೇಶ ಎಂಬುವವರು ರೈತರೊಂದಿಗೆ ಒಪ್ಪಂದ ಮಾಡಿಕೊಂಡು, ಪ್ರತಿ ವರ್ಷ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಬೆಳೆಗಳಿಗೆ ತಾವೇ ಎಲ್ಲಾ ರೈತರ ಜಮೀನಿಗೆ ಬೆಳೆ ವಿಮೆ ಹಣ ಪಾವತಿಸುವ ಮೂಲಕ ನಿರಂತರವಾಗಿ 3 ವರ್ಷಗಳಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿಗಳನ್ನು ವಂಚಿಸುತ್ತ ಬಂದಿರುವ ಮಾಹಿತಿಯು ಸಾಕಷ್ಟು ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ. ಈ ಬಗ್ಗೆ ರೈತರು ಸಾಕಷ್ಟು ಪ್ರತಿಭಟನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೂ ದೂರು ನೀಡಿರುತ್ತಾರೆ.
ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯಲ್ಲಿನ ಭ್ರಷ್ಟಚಾರದ ಪ್ರಮುಖ ರೂವಾರಿಯಾದ ಕೋಸಗಿ ಸುರೇಶ ಎಂಬುವವರು ತಾವು ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಗುಂಡಗತ್ತಿ ಸರ್ಕಲ್ ವ್ಯಾಪ್ತಿಯ ಬಹು ಗ್ರಾಮಗಳಲ್ಲಿಯೂ ಫಸಲ್ ಭೀಮಾ ಯೋಜನೆಯಲ್ಲಿ (ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ) ಸಾಕಷ್ಟು ಅವ್ಯವಹಾರ ನಡೆಸುತ್ತ ಬಂದಿರುತ್ತಾರೆ ಎಂಬ ಅಧಿಕೃತ ಮಾಹಿತಿ ಇರುತ್ತದೆ. ಇವರು ತಾವು ಕೆಲಸ ಮಾಡಿದ ಎಲ್ಲಾ ಸ್ಥಳಗಳಲ್ಲಿಯೂ ಸಾಕಷ್ಟು ಅವ್ಯವಹಾರದಲ್ಲಿ ಭಾಗಿಯಾಗಿದ್ದು, ಸಾಕಷ್ಟು ರೈತರಿಗೆ ಸರ್ಕಾರಿ ಯೋಜನೆಗಳನ್ನು ಮಾಡಿಸಿಕೊಡುವುದಾಗಿ ಕೋಟ್ಯಾಂತರ ರೂಪಾಯಿ ಲಂಚ ಪಡೆದಿರುತ್ತಾರೆ. ಹಾಗೆಯೇ ಬಡವರು, ಅಸಹಾಯಕರ ಜಮೀನುಗಳನ್ನು ಪ್ರಬಲರ ಹೆಸರಿಗೆ ವರ್ಗಾಹಿಸುವ ನೀಚ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ.
ಬಡವರ ಜಮೀನುಗಳನ್ನು ಪ್ರಬಲರ ಹೆಸರಿಗೆ ಮಾಡಿದ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದು ನಂತರ ಮೂಲ ಖಾತೆದಾರರಿಗೆ ವರ್ಗಾವಣೆಯಾಗಿರುವ ಸಾಕಷ್ಟು ನಿದರ್ಶನಗಳಿಗೆ. ಆದರೆ ಯಾವುದೇ ಒಂದು ಪ್ರಕರಣದಲ್ಲಿಯೂ ಈ ಅಧಿಕಾರಿಗೆ ಶಿಕ್ಷೆಯಾಗದಂತೆ ಹಿರಿಯ ಅಧಿಕಾರಿಗಳರಿವರನ್ನು ಕಾಪಾಡಿಕೊಂಡು ಬಂದಿರುತ್ತಾರೆ. ಈ ಕಾರಣಕ್ಕಾಗಿಯೇ ಫಸಲ್ ಭೀಮಾ ಯೋಜನೆಯಂತಹ ದೊಡ್ಡ ಮಟ್ಟದ ಹಗರಣಕ್ಕೂ ಮುಂದಾಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಫಸಲ್ ಭೀಮಾ ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿರುವ ಹಾರಕನಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಎಂ.ಶಿವಣ್ಣ, ಕಂದಾಯ ನಿರೀಕ್ಷಕ ಶ್ರೀ ರಾಘವೇಂದ್ರ, ಹರಪನಹಳ್ಳಿ ತಾಲ್ಲೂಕು ಉಪ ತಹಶೀಲ್ದಾರರಾದ ಶ್ರೀಮತಿ ಕವಿತಾ, ತಹಶೀಲ್ದಾರರಾದ ಶ್ರೀ ಬಿ.ವಿ. ಗಿರೀಶ್ಬಾಬು, ಉಪವಿಭಾಗಾಧಿಕಾರಿಯಾದ ಶ್ರೀ ಸುರೇಶ್ಕುಮಾರ್ ಟಿ, ಹರಪನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ವೈ.ಹೆಚ್. ಚಂದ್ರಶೇಖರ್, ವಿಜಯನಗರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕವಿತಾ ಮನ್ನಿಕೇರಿ ಇವರುಗಳ ವಿರುದ್ಧ ದೂರು ದಾಖಲಿಸಿ, ಈ ಎಲ್ಲಾ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ ಎಂಬುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು ಮೇ 29 ಮತ್ತು 30 ರಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಂಗಸಂಸ್ಥೆಯಾಗಿರುವ ಈ ಕಾಲೇಜಿನ ಉದ್ಘಾಟನಾ ಸಮಾರಂಭವು ಮೇ 29 ರ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಆರಂಭವಾಗಲಿದ್ದು, ದೇಶ ಹಾಗೂ ರಾಜ್ಯದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಸಿ. ಪಿ. ರಾಧಾಕೃಷ್ಣನ್, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿ.ಟಿ.ಯು. ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ , ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಮಂಡಳಿ (FTE&M) ಅಧ್ಯಕ್ಷರಾದ ಪ್ರೊ. ಟಿ. ಜಿ. ಸಿತಾರಾಮ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ವಿ.ಟಿ.ಯು ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ರಿಜಿಸ್ಟ್ರಾರ್ ಡಾ. ಪ್ರಸಾದ್ ಬಿ ರಾಂಪುರೆ , ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಉಜ್ವಲ್ ಯು.ಜೆ , ಹಣಕಾಸು ಅಧಿಕಾರಿ ಡಾ. ಪ್ರಶಾಂತ್ ನಾಯಕ್ , ಯು.ಬಿ.ಡಿ.ಟಿ.ಇ ಪ್ರಾಂಶುಪಾಲರಾದ ಡಾ. ಡಿ. ಪಿ. ನಾಗರಾಜಪ್ಪ ಮತ್ತು ವಿವಿ ಪದಾಧಿಕಾರಿಗಳು ಕಾರ್ಯಕ್ರಮದ ಆತಿಥ್ಯ ವಹಿಸಲಿದ್ದಾರೆ.
ವಿಶೇಷ ಅತಿಥಿಗಳಾಗಿ ಶಾಸಕರುಗಳಾದ ಶಾಂತನಗೌಡ ಡಿ.ಜಿ., ಬಿ. ದೇವೇಂದ್ರಪ್ಪ, ಬಿ. ಪಿ. ಹರೀಶ್, ಶ್ರೀ ಬಸವರಾಜು ವಿ. ಶಿವಗಂಗಾ, ಕೆ. ಎಸ್. ಬಸವಂತಪ್ಪ, ಸಮರ್ಥ್ ಶಾಮನೂರು, ವಿಧಾನಪರಿಷತ್ ಸದಸ್ಯರುಗಳಾದ ಎಸ್.ಎಲ್. ಭೋಜೆಗೌಡ, ಡಿ.ಎಸ್.ಅರುಣ್, ಡಾ. ಧನಂಜಯ್ ಸರ್ಜಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಹಾಗೂ ಚಳ್ಳಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಲೇಜಿನ ಹಳೆಯ ವಿದ್ಯಾರ್ಥಿ ಟಿ. ರಘುಮೂರ್ತಿ , ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಕಾಲೇಜಿನ ಹಳೆಯ ವಿದ್ಯಾರ್ಥಿ ಜನಾರ್ಧನ ಸ್ವಾ̧ಮಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
-
ದಿನದ ಸುದ್ದಿ5 days agoದಾವಣಗೆರೆ | ಇಂದು ಕರೆಂಟ್ ಇರಲ್ಲ
-
ದಿನದ ಸುದ್ದಿ2 days ago‘ಮತದಾರ ದೇವರು’ ಎಂದ ಸಿದ್ದರಾಮಯ್ಯ



