Connect with us

ರಾಜಕೀಯ

ಚುನಾವಣಾ ರಾಜಕಾರಣ : ಆಶಾದಾಯಕ ಅವಕಾಶಗಳು

Published

on

Photo courtesy : LAW.COM

ದೇಶ ಮತ್ತೊಂದು ಮಹಾಚುನಾವಣೆಯ ಹೊಸಿಲಲ್ಲಿದೆ. ಯಾರು ಅಧಿಕಾರ ಅಲಂಕರಿಸಬಹುದು ಎಂಬ ಸಹಜ ಕುತೂಹಲ ಎಲ್ಲೆಡೆಯಲ್ಲಿಯೂ ಇದೆ. ಇದಕ್ಕೆ ಪ್ರತಿಯಾಗಿ ರಾಜಕೀಯ ಅಖಾಡ ಸನ್ನದ್ಧವಾಗಿದೆ. ಲೋಕಸಭೆ ಚುನಾವಣೆ ಎಂದಾಕ್ಷಣ ಮುಂದಿನ ನಾಯಕ ಯಾರು ಎಂಬ ನಿರೀಕ್ಷೆ ಸಹಜವಾಗಿಯೇ ಗರಿಗೆದರುತ್ತದೆ. ಈ ಕುತೂಹಲಕ್ಕನುಗುಣವಾದ ನಿರೀಕ್ಷೆಯನ್ನು ಭಾರತದ ರಾಜಕಾರಣ ಹೇಗೆ ಈಡೇರಿಸುತ್ತದೆ ಎನ್ನುವುದರ ಮೇಲೆ ಭವಿಷ್ಯದ ಹೆಜ್ಜೆಗಳು ನಿರ್ಣಯಿಸಲ್ಪಡುತ್ತವೆ. ಜನಮನ್ನಣೆಯ ಗೆಲುವು ದಕ್ಕಿಸಿಕೊಳ್ಳಲು ರಾಜಕಾರಣಕ್ಕೆ ಎರಡು ಬಗೆಯ ಅವಕಾಶಗಳಿರುತ್ತವೆ. ಸಕಾರಾತ್ಮಕ ಆಲೋಚನೆಗಳ ಬಲದಲ್ಲಿ ದಾರ್ಶನಿಕ ನಾಯಕತ್ವ ಸಾಬೀತುಪಡಿಸುವ ಬದ್ಧತೆಯ ನಡೆಯೊಂದಿಗೆ ಮೊದಲ ಅವಕಾಶದ ಸಾಧ್ಯತೆ ಇರುತ್ತದೆ. ಇಡೀ ದೇಶವನ್ನು ಹಿಂದಕ್ಕೆಳೆಸುವ ಸಂಕುಚಿತ ಕಾರ್ಯಸೂಚಿಯೊಂದಿಗೆ ಜನರ ಜಡತೆಯನ್ನು ಮತ್ತಷ್ಟು ಸ್ಥಾಯಿಗೊಳಿಸುವ ಪ್ರಯತ್ನಗಳೊಂದಿಗಿನ ಅವಕಾಶ ಮತ್ತೊಂದು. ಭಾರತದ ರಾಜಕಾರಣವು ಇಂಥ ಸೀಮಿತ ದೃಷ್ಟಿಕೋನದ ಅವಕಾಶವಾದಿ ತಂತ್ರಗಾರಿಕೆಯನ್ನೇ ನೆಚ್ಚಿಕೊಂಡು ಸಾಗುತ್ತಿದೆ ಎಂಬುದಕ್ಕೆ ಹಲವು ನಿದರ್ಶನಗಳು ಇತಿಹಾಸದ ಪುಟಗಳಲ್ಲಿ ಲಭ್ಯವಾಗುತ್ತವೆ. ಸ್ವಾತಂತ್ರ್ಯೋತ್ತರ ಅವಧಿ, ಜಾಗತೀಕರಣದ ತದನಂತರದ ಕಾಲಘಟ್ಟ ಮತ್ತು ಹೊಸ ಶತಮಾನದ ಸ್ಥಿತ್ಯಂತರಗಳ ಅವಧಿಯನ್ನು ದೃಷ್ಟಿಯಲ್ಲಿರಿಸಿಕೊಂಡು ಈ ಚರ್ಚೆಯನ್ನು ವಿಸ್ತರಿಸಬಹುದು.

ಜಡತೆಯಿಂದ ಗೆಲುವಿನ ಲಾಭ!

ಅಧಿಕಾರಕ್ಕ ಬಂದ ಕ್ಷಣದಿಂದಲೇ ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಪ್ರದರ್ಶಿತವಾಗುವ ಎಚ್ಚರದ ರಾಜಕೀಯ ನಡೆ ಇಲ್ಲಿಯ ಸಾಮಾನ್ಯ ಗುಣಲಕ್ಷಣ. ಇದಕ್ಕೆ ಹೊಸ ಬಗೆಯ ತೀವ್ರತೆ ಸಿಕ್ಕಿದ್ದು ಹಿಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ. ಆಗಿನ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಘಟನಾವಳಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಭಾರತೀಯ ರಾಜಕಾರಣ ಚಾಣಾಕ್ಷ ತಂತ್ರಗಾರಿಕೆಯ ತೀವ್ರತರ ತಿರುವಿನ ಘಟ್ಟ ತಲುಪಿದ್ದು ಸ್ಪಷ್ಟವಾಗುತ್ತದೆ. ಅಧಿಕಾರ ಪಡೆಯುವ ಏಕೈಕ ಕಾರ್ಯಸೂಚಿಯನ್ನಷ್ಟೇ ನೆಚ್ಚಿಕೊಂಡು ರಾಜಕೀಯ ಪಕ್ಷಗಳು ಕಾರ್ಯೋನ್ಮುಖವಾಗುವುದು, ಅದಕ್ಕಾಗಿ ಚಾಣಾಕ್ಷ ತಂತ್ರಗಾರಿಕೆಯ ನೆರವು ಪಡೆಯುವುದು, ಆ ಮೂಲಕ ಗೆಲುವು ಸಾಧ್ಯವಾಗಿಸಿಕೊಳ್ಳುವುದು – ಇವೆಲ್ಲವೂ ಗೊತ್ತಿರುವ ಸಂಗತಿಗಳೇ. ಆದರೆ, 2014ರ ಚುನಾವಣೆಯು ಈ ದೇಶದಲ್ಲಿ ಸ್ಥಾವರವಾಗಿ ಉಳಿದುಕೊಂಡಿದ್ದ ಜಡತೆಯ ನಿರ್ಲಿಪ್ತ ಮನಸ್ಥಿತಿಯನ್ನು ಬೇರೊಂದು ರೀತಿಯಲ್ಲಿ ಬಳಸಿಕೊಂಡು ಗೆಲುವು ತಂದುಕೊಳ್ಳುವ ಅವಕಾಶವನ್ನು ದಯಪಾಲಿಸಿತು. ಇದನ್ನು ಅತ್ಯಂತ ಚಾಣಾಕ್ಷಯುತವಾಗಿ ಬಳಸಿಕೊಂಡವರು ಗೆಲುವಿನ ನಗೆ ಬೀರಿದರು.

ಹಳೆ ಆಲದ ಮರಕ್ಕೆ ಜೋತುಬೀಳುವಿಕೆ

ಹಿಂದೆ ಬಹಳ ವರ್ಷಗಳ ಕಾಲ ಆಡಳಿತ ಚುಕ್ಕಾಣಿ ಹಿಡಿದಿದ್ದವರು ಅನುಸರಿಸಿದ ಹಾದಿಯನ್ನೇ ಬೇರೊಂದು ಬಗೆಯಲ್ಲಿ ಮಾದರಿಯಾಗಿಸಿಕೊಂಡ ಕಾರಣಕ್ಕಾಗಿಯೇ ಆ ಗೆಲುವು ಸಾಧಿಸಲು ಸಾಧ್ಯವಾಯಿತು. ಹಿಂದಿನವರದ್ದು ಹಳೆಯ ಆಲದ ಮರಕ್ಕೆ ಜೋತುಬೀಳುವ ಪ್ರವೃತ್ತಿಯ ರಾಜಕಾರಣವೇ ಆಗಿತ್ತು. ಹಳೆಯ ಸಾಧನೆಯನ್ನು ನೆನಪಿಸಿಕೊಂಡು ಮತ್ತೆ ಮತ್ತೆ ಅದರ ಜಪಗೈದು ಜನರನ್ನು ಸೆಳೆದುಕೊಳ್ಳುವ ತಂತ್ರಗಾರಿಕೆಯ ಕಡೆಗೇ ಅದರ ಆದ್ಯತೆ ಇತ್ತು. ಗೆಲುವು ಸಾಧಿಸುವ ಹುಮ್ಮಸ್ಸಿನೊಂದಿಗೆ ಚುನಾವಣಾ ಅಖಾಡಕ್ಕಿಳಿದಿದ್ದವರು ಹಳೆಯದ್ದರ ಆಧಾರದಲ್ಲಿ ಹೊಸದೊಂದು ರಾಜಕೀಯ ಸಂಸ್ಕøತಿಯನ್ನು ರೂಪಿಸುವ ಹೊಣೆಗಾರಿಕೆ ನಿರ್ವಹಿಸುವ ಅವಕಾಶವನ್ನು ಉದ್ದೇಶಪೂರ್ವಕವಾಗಿ ಬಿಟ್ಟುಕೊಟ್ಟರು. ಹೀಗಾಗಿ ‘ಹಳೆಯ ಬೇರು, ಹೊಸ ಚಿಗುರು’ ಎಂಬ ಪ್ರಯೋಗಶೀಲ ದೃಷ್ಟಿಕೋನ ಸೋಲನ್ನು ಅನುಭವಿಸಿತು. ಹಳೆಯ ಬೇರುಗಳೊಂದಿಗೆ ನಂಟು ಉಳಿಸಿಕೊಂಡು ಹೊಸದಾದ ಹೆಜ್ಜೆಗಳೊಂದಿಗೆ ಬದಲಾವಣೆಯ ಅಲೆಯನ್ನು ಮೂಡಿಸುವುದರ ಕಡೆಗಿನ ವ್ಯಾಪಕ ಸಾಧ್ಯತೆಗಳು ಮೊಟಕುಗೊಂಡವು.

ನಕಾರಾತ್ಮಕತೆಯ ಪುನರಾವರ್ತನೆ

ಪ್ರಶ್ನಿಸುವ ತಾರ್ಕಿಕತೆಯನ್ನು ಚಾಣಾಕ್ಷಯುತವಾಗಿ ಹತ್ತಿಕ್ಕುವ ಆಡಳಿತಾರೂಢ ಪ್ರಾಬಲ್ಯವು ಸ್ವಾತಂತ್ರ್ಯೋತ್ತರ ರಾಜಕೀಯ ವಲಯದ ಮೊದಲ ಆದ್ಯತೆಯಾಗಿ ಪ್ರಾಮುಖ್ಯತೆ ಪಡೆದುಕೊಂಡಿತು. ಇದನ್ನು ಹಿನ್ನೆಲೆಗೆ ಸರಿಸುವ ಪರ್ಯಾಯ ರಾಜಕಾರಣದ ತಾತ್ವಿಕ ಮಾದರಿಗಳು ವಿವಿಧ ದಶಕಗಳಲ್ಲಿ ಕಾಣಿಸಿಕೊಂಡರೂ ಜನಜನಿತವಾದ ರಾಜಕೀಯ ಪಕ್ಷಗಳ ಮುಂಚೂಣಿ ನಾಯಕರ ವ್ಯಕ್ತಿಗತ ಪ್ರತಿಷ್ಠೆ ಮತ್ತು ಆರಾಧನಾ ಮನೋಭಾವಕ್ಕೇ ಹೆಚ್ಚಿನ ಆದ್ಯತೆ ಸಿಕ್ಕಿತು. ಇದು ಐದು ವರ್ಷಗಳ ಅಧಿಕಾರಾವಧಿಯ ಪ್ರತಿ ಹಂತದಲ್ಲೂ ನುಸುಳಿಕೊಳ್ಳತೊಡಗಿತು. ಈಗ ಅದೇ ನಕಾರಾತ್ಮಕತೆ ಬೇರೆ ರೀತಿಯಲ್ಲಿ ಪುನರಾವರ್ತಿತವಾಗಿದೆ.

ವೈರುಧ್ಯದ ರಾಜಕೀಯ ನಡೆ

ಚುನಾವಣಾ ರಾಜಕಾರಣವು ಸಂಕುಚಿತ ಅಜೆಂಡಾ ಆಧಾರದಲ್ಲಿ ಅಭಿವ್ಯಕ್ತವಾದರೆ ಏನೇನಾಗುತ್ತದೆ ಎನ್ನುವುದನ್ನು ಸ್ವಾತಂತ್ರ್ಯೋತ್ತರ ಭಾರತದ ರಾಜಕೀಯ ಚರಿತ್ರೆಯ ಮೂಲಕ ತಿಳಿದುಕೊಳ್ಳಬಹುದು. ಇದರ ಅಧ್ಯಯನ ಮತ್ತು ಸೂಕ್ಷ್ಮ ಅವಲೋಕನದಿಂದ ಇಲ್ಲಿಯ ವೈರುಧ್ಯಗಳು ಸ್ಪಷ್ಟವಾಗಿ ಗೋಚರಿಸುತ್ತವೆ. ಜೀವಪರ ಸಂವೇದನೆಯ ಮೌಲಿಕ ಆಲೋಚನೆ ಮತ್ತು ವಾದಗಳನ್ನು ಮುನ್ನೆಲೆಗೆ ತಂದು ಅದಕ್ಕನುಗುಣವಾದ ಸರ್ಕಾರ ಅಸ್ತಿತ್ವಕ್ಕೆ ಬರಬೇಕು ಎಂಬ ಪ್ರತಿಪಾದನೆಯ ನೆರವಿನೊಂದಿಗೆ ಅಧಿಕಾರಕ್ಕೆ ಬಂದವರು ಮತ್ತು ಉದಾತ್ತವಾದ ಧಾರ್ಮಿಕ ಅಂಶಗಳನ್ನು ಸಂಕುಚಿತಗೊಳಿಸಿ ಸಂಘರ್ಷ ಮೂಡಿಸಿ ಅಧಿಕಾರಕ್ಕೆ ಹತ್ತಿರಾಗುವ ಜಾಯಮಾನದ ರಾಜಕೀಯ ವರ್ತನೆಗಳವರ ದಿಗ್ವಿಜಯದ ಜೊತೆಗೆ ಇಂಥ ವೈರುಧ್ಯಗಳಿವೆ. ಎರಡೂ ವಲಯಗಳು ಅಧಿಕಾರರೂಢ ಮತ್ತು ವಿರೋಧ ಪಕ್ಷ ಎಂಬ ನೆಲೆಗಳಲ್ಲಿ ವಿಂಗಡಣೆಯಾಗಿ ವಾದಗಳನ್ನು ಮುಂದಿಡುತ್ತಾ ಜನಬೆಂಬಲ ಗಿಟ್ಟಿಸಿಕೊಳ್ಳುವ ಪ್ರಯತ್ನದಲ್ಲಿ ಯಶಸ್ಸು ಕಂಡಿವೆ.

Rajadharma a column by Dr.N k padmanabh

ಒಮ್ಮೆ ಅವರಿಗೆ, ಮತ್ತೊಮ್ಮೆ ಇವರಿಗೆ ಎನ್ನುವ ಹಾಗೆ ಅಧಿಕಾರದ ಅವಕಾಶ ಪ್ರಾಪ್ತವಾಗಿದೆ. ಆದರೆ, ಅಧಿಕಾರಕ್ಕೆ ಬಂದ ಮೇಲೆ ಈ ಎರಡೂ ವಲಯಗಳ ರಾಜಕೀಯ ನಡೆ ಯಾವ ಬಗೆಯ ಉದಾತ್ತತೆಯೊಂದಿಗಿತ್ತು ಎಂಬುದನ್ನು ಪರಿಶೀಲಿಸಿದರೆ ಇಡೀ ಭಾರತದ ರಾಜಕಾರಣದ ಬಹುದೊಡ್ಡ ಮಿತಿಗಳು ಎದ್ದುಕಾಣುತ್ತವೆ. ಅಧಿಕಾರಕ್ಕೆ ಬರುವವರೆಗೆ ಪ್ರತಿಪಾದಿಸಿದ ವಿಶಾಲವಾದ ಮೌಲಿಕ ಆಲೋಚನೆಗಳನ್ನೇ ಅಧಿಕಾರಕ್ಕೆ ಬಂದ ನಂತರ ಮರೆಯುವ ಜಾಣ್ಮೆಯನ್ನು ಸ್ಥಾಯಿಯಾಗಿಸಿಕೊಂಡ ಪಕ್ಷ ರಾಜಕಾರಣವೊಂದರ ವಿಕಲಾಂಗ ಲಕ್ಷಣವು ಪಕ್ಷಾತೀತ ನೆಲೆಯಲ್ಲಿ ಸರ್ವವ್ಯಾಪಿಯಾಯಿತು. ಇಂಥ ದ್ವಂದ್ವವನ್ನು ಪ್ರಶ್ನಿಸುತ್ತಲೇ ಧರ್ಮಕ್ಕೆ ಸಂಬಂಧಿಸಿದ ಸೂಕ್ಷ್ಮ ಸಂಗತಿಗಳನ್ನು ರಾಜಕೀಯ ಲಾಭದ ಆಕಾಂಕ್ಷೆಯಲ್ಲಿ ತಪ್ಪಾಗಿ ವಿಶ್ಲೇಷಿಸಿ ಅಧಿಕಾರಕ್ಕೇರಿದವರೂ ಮತ್ತದೇ ಹಾದಿ ಹಿಡಿದರು. ಹೀಗಾಗಿಯೇ ರಾಜಕೀಯ ಪಕ್ಷಗಳ ಕೆಳಹಂತದ ಯುವ ಕಾರ್ಯಕರ್ತರಿಗೆ ಉದಾತ್ತವಾದ ನಾಯಕತ್ವದ ಮಾದರಿಯೇ ಇಲ್ಲದಂತಾಯಿತು.

ಬಹುಮತ ಪ್ರಾಶಸ್ತ್ಯದ ಮತ್ತೊಂದು ಮುಖ

ಈ ಹಂತದಲ್ಲಿಯೇ ಪ್ರಶ್ನಿಸುವ ಧ್ವನಿಗಳೊಂದಿಗೆ ಇರುವವರನ್ನೇ ದ್ವಂದ್ವಕ್ಕೆ ಸಿಲುಕಿಸುವ ವಿತಂಡವಾದಿ ದೃಷ್ಟಿಕೋನಗಳು ಕಳೆದ 2014 ಚುನಾವಣೆಯ ಸಂದರ್ಭದಲ್ಲಿ ವೈಭವೀಕೃತವಾದವು. ಇವರನ್ನು ಪ್ರಶ್ನೆ ಮಾಡುತ್ತೀರಿ. ಮತ್ತಿನ್ಯಾರನ್ನು ಆಯ್ಕೆ ಮಾಡುತ್ತೀರಿ? ಇಷ್ಟು ವರ್ಷಗಳ ಕಾಲ ಆಳಿದವರು ಏನು ಸಾಧಿಸಿದರು? ಎಂಬ ಮರುಪ್ರಶ್ನೆ ಎಸೆದು ಚರ್ಚೆ ಒಳಗೊಳ್ಳಬಹುದಾದ ವಿಶಾಲ ಆವರಣವನ್ನೇ ಒಡೆದುಬಿಡುವ ಪ್ರವೃತ್ತಿ ಮುಂದುವರೆಯಿತು. ಇದೇ ಪ್ರವೃತ್ತಿಯನ್ನೇ ಮುಖ್ಯವಾಗಿಸಿಕೊಂಡು ಸಾಮಾಜಿಕ ಜಾಲತಾಣಗಳನ್ನು ಪಕ್ಷದ ಪರವಾದ ಅಲೆ ಮೂಡಿಸುವ ಉದ್ದೇಶಕ್ಕೆ ಬಳಸಿಕೊಳ್ಳುವ ರಹಸ್ಯ ಕಾರ್ಯಸೂಚಿ ಯಶಸ್ಸು ಕಂಡಿತು. ಹಿಂದಿನವರ ಮೌನಕ್ಕಿಂತ ಈಗಿನವರ ಮಾತು ಹೆಚ್ಚು ಆಪ್ತ ಎಂಬ ಕಾರಣಕ್ಕಾಗಿ ಮತನೀಡುವ ಅಪೇಕ್ಷೆ ಸಾಮೂಹಿಕವಾಗಿ ಅಭಿವ್ಯಕ್ತವಾಯಿತು. ಸಮಸ್ಯೆಗಳನ್ನು ಅಸಹಾಯಕ ಮೌನ ಮತ್ತು ದಿವ್ಯ ನಿರ್ಲಿಪ್ತತೆಯೊಂದಿಗೆ ನಿರ್ಲಕ್ಷಿಸಿದವರಿಗಿಂತಲೂ ಅವೇ ಸಮಸ್ಯೆಗಳಿಗೆ ಪರಿಹಾರ ಸಾಧ್ಯ ಎಂಬುದನ್ನು ಭಾಷಿಕ ಪ್ರೌಢಿಮೆಯಲ್ಲಿ ಮನಗಾಣಿಸಿದವರು ಮುಖ್ಯ ಎಂಬ ಭಾವನೆಯೇ ಸಾರ್ವತ್ರಿಕವಾಗಿ ಹೊಸಬರಿಗೆ ಭಾರೀ ಬಹುಮತದ ಪ್ರಾಶಸ್ತ್ಯ ದೊರಕಿ ಅಧಿಕಾರದ ಅವಕಾಶ ಲಭ್ಯವಾಯಿತು.

ದಿಕ್ಕುತಪ್ಪಿಸುವ ಹುನ್ನಾರಗಳು

ಈಗ 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ಇದೇ ಬಗೆಯ ಇತಿಹಾಸ ಪುನರಾವರ್ತಿತಗೊಳ್ಳುವ ಎಲ್ಲ ವಿದ್ಯಮಾನಗಳಿಗೆ ನಾವೀಗ ಸಾಕ್ಷಿಯಾಗುತ್ತಲೇ ಇದ್ದೇವೆ. ಒಂದು ದೇಶದ ವಿರುದ್ಧ ಯುದ್ಧ ಆಗಬೇಕು ಎಂಬ ಅಗ್ರೆಸ್ಸಿವ್ ಪ್ರತಿಪಾದನೆಯು ಪೀಳಿಗೆಯೊಂದರ ರಾಜಕೀಯ ಆದ್ಯತೆಯನ್ನೇ ಸಂಕುಚಿತಗೊಳಿಸಿ ಬಹುಮತ ಗಿಟ್ಟಿಸಿಕೊಳ್ಳುವ ಮಟ್ಟಿಗೆ ಪ್ರಭಾವೀ ಎಂಬುದನ್ನು ಸಾಬೀತುಪಡಿಸುವ ನಿದರ್ಶನಗಳು ಕಣ್ಣಮುಂದೆಯೇ ಇವೆ. ಸುಳ್ಳುಗಳ ತರಹೇವಾರಿ ವಿವರಗಳು ಬಗೆಬಗೆಯ ಬಣ್ಣಗಳನ್ನು ಪಡೆದು ಜನರ ನಿರ್ಧಾರಾತ್ಮಕ ಶಕ್ತಿಯ ಮೇಲೆ ಪ್ರಭಾವ ಬೀರುತ್ತಿರುವ ವಾಸ್ತವವನ್ನು ಅಷ್ಟು ಸುಲಭವಾಗಿ ನಿರಾಕರಿಸುವಂತಿಲ್ಲ. ರಾಜಕಾರಣಿಗಳ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗಲಂತೂ ಭಾರತೀಯ ಪ್ರಜಾಪ್ರಭುತ್ವದ ದಿಕ್ಕುತಪ್ಪಿಸುವ ಹುನ್ನಾರಗಳು ಯಾವ ಸ್ವರೂಪದ್ದವು ಎಂಬುದು ಸ್ಪಷ್ಟವಾಗುತ್ತದೆ. ಇಡೀ ದೇಶದಲ್ಲಿ ಆಗಬೇಕಿದ್ದ ಚರ್ಚೆಗಳ ಬದಲು ಅನಗತ್ಯ ವಿವರಗಳೇ ಪ್ರಾಮುಖ್ಯತೆ ಪಡೆದುಕೊಂಡು ಯಾರಿಗೆ ಲಾಭವಾಗುತ್ತದೆ ಎಂಬ ಸೂಕ್ಷ್ಮತೆ ಗೊತ್ತಾಗುತ್ತದೆ.

ಪ್ರಚೋದನಾತ್ಮಕ ಒಮ್ಮತದ ಉತ್ಪನ್ನ

ವಿಧವೆ ಎಂಬ ಕಾರಣಕ್ಕಾಗಿ ಮಹಿಳೆಯ ರಾಜಕೀಯ ಪ್ರವೇಶಕ್ಕೆ ವ್ಯಕ್ತವಾಗುವ ಪ್ರತಿರೋಧ, ರಾಜಕೀಯ ನಾಯಕಿಯ ತಂದೆ ಯಾರೆಂಬುದೇ ಗೊತ್ತಿಲ್ಲ ಎಂಬುದನ್ನೇ ಚಿತ್ರಿಸಿ ಇಂಥವರ ಆಯ್ಕೆ ಸಮರ್ಥನೀಯವಲ್ಲ ಎಂಬ ವಾದ, ಸಂಘರ್ಷವನ್ನು ಸಮರ್ಥಿಸುವ ನುಡಿಗಳನ್ನಾಡಿದಾಗಲೇ ಪರವಾದ ಅಲೆಯನ್ನು ಸೃಷ್ಟಿಸಿಕೊಳ್ಳಬಹುದೆಂಬ ತಪ್ಪುಕಲ್ಪನೆ, ಜನಪ್ರಿಯ ತಾರೆಯನ್ನು ರಾಜಕೀಯಕ್ಕೆ ಕರೆತಂದು ಜನರನ್ನು ಸೆಳೆದುಕೊಳ್ಳುವ ಪ್ರಯತ್ನ, ಸುದ್ದಿಮಾಧ್ಯಮಗಳನ್ನು ಕೊಂಡುಕೊಂಡು ತಮ್ಮ ಮೂಗಿನ ನೇರಕ್ಕೆ ಬಳಸಿಕೊಳ್ಳುವ ಚಾಣಾಕ್ಷತೆ, ಹಿಂದೆಂದಿಗಿಂತಲೂ ಹೆಚ್ಚು ವಿಸ್ತಾರವಾದ ಸುದ್ದಿಮಾಧ್ಯಮ ಮುಖ್ಯಸ್ಥರು ಮತ್ತು ರಾಜಕೀಯ ಪಕ್ಷಗಳ ನಡುವಿನ ಅಸಂವಿಧಾನಿಕ ನಂಟು, ಅದರ ವಿಸ್ತರಣೆ ಎಂಬಂತೆ ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಬರೀ ವಿವಾದಕ್ಕೆಳೆಸುವ ಮಾತುಗಳ ಸುತ್ತಲೇ ಗಿರಕಿ ಹೊಡೆಯುತ್ತಿರುವ ಸುದ್ದಿಮಾಧ್ಯಮ ಪ್ರಜ್ಞೆ – ಇವೆಲ್ಲವೂ ಸದ್ಯದ ಚುನಾವಣಾ ರಾಜಕಾರಣದ ಒಳಸುಳಿಗಳನ್ನು ಅರ್ಥೈಸಿಕೊಳ್ಳುವುದಕ್ಕೆ ಸಹಾಯಕವಾಗುತ್ತವೆ. ಭಾವನೆಗಳನ್ನು ಪ್ರಚೋದಿಸಿ ಒಮ್ಮತವನ್ನು ಉತ್ಪಾದಿಸಿಕೊಳ್ಳುವ ತಂತ್ರಗಾರಿಕೆಯು ಭಾರತದಲ್ಲಿ ಅತ್ಯಂತ ಜಾಗರೂಕತೆಯಿಂದ ಪ್ರಯೋಗಿಸಲ್ಪಡುತ್ತಿರುವುದಕ್ಕೆ ಸಾಕ್ಷ್ಯ ಒದಗಿಸುತ್ತವೆ.

ಭಾವನಾತ್ಮಕ ಪ್ರಚೋದನೆಯ ನೆರವಿನೊಂದಿಗೆ ಪೂರಕವಾದ ಒಮ್ಮತವನ್ನು ಸೃಷ್ಟಿಸಿಕೊಳ್ಳುವ ತಂತ್ರಗಾರಿಕೆಯು ಭಾರತೀಯ ರಾಜಕಾರಣಕ್ಕೆ ಹೊಸದೇನೂ ಅಲ್ಲ. ಅಸಮಾನತೆಯ ಕಾರಣಕ್ಕಾಗಿಯೇ ಭಾರತದಲ್ಲಿ ಬೇರೂರಿರುವ ತಾರತಮ್ಯದ ದೃಷ್ಟಿಕೋನಗಳನ್ನು ಒಡೆದುಹಾಕುವ ಅಪ್ಪಟ ವೈಚಾರಿಕ ಆಂದೋಲನಗಳು ನಡೆದರೂ ತಾರ್ಕಿಕ ಅಂತ್ಯ ಕಂಡುಕೊಳ್ಳುವವರೆಗೆ ಅವುಗಳ ಚಲನೆ ನಿರಂತರವಾಗುಳಿಯಲಿಲ್ಲ. ಇಂಥ ವೈಚಾರಿಕ ಆಂದೋಲನಗಳನ್ನು ರಾಜಕೀಯ ಅಸ್ಮಿತೆಯ ಸಶಕ್ತತೆಗೆ ಬಳಸಿಕೊಳ್ಳುವ ಜಾಣ್ಮೆಯ ರಾಜಕಾರಣದ ಬದಲು ಅವುಗಳನ್ನು ಭಾವುಕ ನೆಲೆಯಲ್ಲಿ ಗ್ರಹಿಸುವ ಒತ್ತಡ ಸೃಷ್ಟಿಸಿ ಪ್ರಬಲರು ಮತ್ತು ದುರ್ಬಲರ ನಡುವಿನ ಕಂದರ ಹೆಚ್ಚಿಸುವ ಪ್ರಯತ್ನಗಳಾದವು. ಈ ಹಂತದಲ್ಲಿ ಭಿನ್ನಾಭಿಪ್ರಾಯಗಳುಂಟಾದವು. ಗುಂಪುಗಳಾದವು.

ಹೀಗೆ ವೈಚಾರಿಕ ಆಂದೋಲನಗಳನ್ನು ಕಟ್ಟಬೇಕಾದ ವಲಯವೇ ಒಡೆದುಹೋಯಿತು.
ಸಮಸ್ಯೆಯ ಮೂಲಪತ್ತೆಯ ಅನಿವಾರ್ಯತೆ
ಅವುಗಳು ಎತ್ತಿದ ಪ್ರಶ್ನೆಗಳನ್ನೇ ಮುಂದಿಟ್ಟು ಚುನಾವಣೆಗಳನ್ನು ಎದುರಿಸಿದ ಪಕ್ಷ ರಾಜಕಾರಣವು ಅಧಿಕಾರ ಪಡೆಯುವಲ್ಲಿ ಯಶಸ್ಸು ಸಾಧಿಸಿತು. ಅಧಿಕಾರ ಪಡೆದ ನಂತರ ಈ ವೈಚಾರಿಕ ಆಂದೋಲನ ಎತ್ತಿದ್ದ ಪ್ರಶ್ನೆಗಳ ಹಿಂದಿದ್ದ ಸಂಕಟಗಳನ್ನು ಪರಿಹರಿಸುವುದರ ಕಡೆಗೆ ರಚನಾತ್ಮಕ ಪ್ರಯತ್ನವನ್ನು ನಡೆಸಲೇ ಇಲ್ಲ. ಅಷ್ಟೇ ಅಲ್ಲ, ಭಾವುಕ ವ್ಯಾಪ್ತಿಯಲ್ಲಿ ಅಗ್ರಸ್ಥಾನ ಪಡೆದು ಚರ್ಚೆಗೊಳಗಾಗುವ ದೇವರು, ಧರ್ಮಕ್ಕೆ ಸಂಬಂಧಿಸಿದ ಚರ್ಚೆಯನ್ನು ವಿವೇಚನೆ ಎತ್ತರಿಸುವ ಸಂವಾದ ರೂಪಿಸುವ ಆಡಳಿತಾತ್ಮಕ ಹೊಣೆಗಾರಿಕೆಗಳನ್ನೂ ನಿಭಾಯಿಸಲಿಲ್ಲ. ಈ ಸ್ಪೇಸ್‍ಅನ್ನು ಮೂಲಭೂತವಾದಿ ದೃಷ್ಟಿಕೋನದ ರಾಜಕಾರಣ ಸಕಾಲಿಕವಾಗಿ ಬಳಸಿಕೊಂಡು ಅಧಿಕಾರದ ನಿರ್ಣಾಯಕ ಆವರಣವನ್ನು ಪ್ರವೇಶಿಸುವ ಪ್ರಯತ್ನದಲ್ಲಿ ಯಶಸ್ಸು ಕಂಡಿತು. ಸಮಸ್ಯೆಯ ಈ ಮೂಲವನ್ನು ಗೊತ್ತುಮಾಡಿಕೊಳ್ಳದೇ ನಾವು ಸದ್ಯದಲ್ಲಿ ಇದಕ್ಕಿಂದ ಭಿನ್ನವಾದ ಹೊಸದೊಂದು ಪರ್ಯಾಯ ರಾಜಕಾರಣದ ಆಕೃತಿಗಳನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.

ಅಪೂರ್ವ ಅವಕಾಶ ಬಿಟ್ಟುಕೊಡುವ ಚಾಳಿ

ಈಗ ಸುದ್ದಿಮಾಧ್ಯಮಗಳು ಅತ್ಯುತ್ಸಾಹದಲ್ಲಿ ಇಂತಿಷ್ಟು ಹೊಸ ಮತದಾರರು ಈ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧರಿಸಲಿದ್ದಾರೆ ಎಂದು ಬಿಂಬಿಸುತ್ತಿವೆ. ಹೀಗೆ ಬಿಂಬಿಸುತ್ತಲೇ ಯುವಶಕ್ತಿ ಯಾರ ಪರ ನಿಲ್ಲಬೇಕು ಎಂಬರ್ಥದ ವಿಶ್ಲೇಷಣೆಗಳನ್ನು ಪರೋಕ್ಷವಾಗಿ ಮುಂದಿಡುತ್ತಿವೆ. ಸೈನಿಕರ ಮೇಲೆ ದಾಳಿ ನಡೆದಾಗ ಯುದ್ಧದ ಮೂಲಕವೇ ಪರಿಹಾರ ಸಾಧ್ಯ ಎಂಬ ಬಿಂಬಗಳನ್ನು ಕಟ್ಟಿಕೊಟ್ಟು ಒಂದು ನಿರ್ದಿಷ್ಟ ರಾಜಕೀಯ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ನೆರೆಯ ರಾಷ್ಟ್ರಕ್ಕೆ ಬುದ್ಧಿ ಕಲಿಸಬಹುದು ಎಂಬ ಪರೋಕ್ಷ ಸಂದೇಶವನ್ನು ರವಾನಿಸುತ್ತಿವೆ. ಇನ್ನೂ ಕೆಲವು ಮಾಧ್ಯಮಗಳು ಮುಖ್ಯವಾಗಿ ಉಗ್ರರ ವಿರುದ್ಧದ ರಚನಾತ್ಮಕ ಕಾರ್ಯಾಚರಣೆ ಮತ್ತು ಪಾಕಿಸ್ತಾನದೊಂದಿಗಿನ ಸೌಹಾರ್ದಯುತ ಮಾತುಕತೆಯ ಹಾದಿ ಅನುಸರಣೆಯ ಅಗತ್ಯತೆಯನ್ನು ಪ್ರತಿಪಾದಿಸುತ್ತಿವೆ. ಈ ಚರ್ಚೆಯ ಲಾಭವನ್ನು ಪಡೆಯುವ ಹವಣಿಕೆಯನ್ನು ಪಕ್ಷಗಳು ತೋರುತ್ತಿವೆ. ಇವೆಲ್ಲದ್ದರ ಮಧ್ಯೆ ಚುನಾವಣಾ ಅಖಾಡದಲ್ಲಿ ಪ್ರಜಾಪ್ರಭುತ್ವವಾದಿ ರಾಷ್ಟ್ರವೊಂದು ಮುಂಚೂಣಿಗೆ ತಂದುಕೊಳ್ಳಲೇಬೇಕಾದ ಸಂಗತಿಗಳು ಪ್ರಾತಿನಿಧ್ಯವನ್ನೇ ಪಡೆಯುತ್ತಿಲ್ಲ. ಇಂಥ ಅಪೂರ್ವ ಅವಕಾಶವನ್ನು ರಾಜಕೀಯ ಪಕ್ಷಗಳು ಉದ್ದೇಶಪೂರ್ವಕವಾಗಿ ಬಿಟ್ಟುಕೊಡುತ್ತಿವೆ.

ಸವಾಲುಗಳ ನಿರ್ವಹಣೆಯ ಚಾಣಾಕ್ಷತೆಯ ಅಗತ್ಯತೆ

ಸಮಸ್ಯೆಗಳ ಪ್ರಮಾಣ ವ್ಯಾಪಕವಾಗಿದ್ದಾಗ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಸವಾಲಿನ ನಿರ್ವಹಣೆಯ ಚಾಕಚಕ್ಯತೆ ಪ್ರದರ್ಶಿಸಬೇಕಾಗುತ್ತದೆ. ಇಂಥ ಚಾಕಚಕ್ಯತೆಯೊಂದಿಗಿನ ನಿರ್ವಹಣೆಯ ಸವಾಲನ್ನು ಅತ್ಯಂತ ಶ್ರದ್ಧೆಯಿಂದ ಭಾರತೀಯ ರಾಜಕಾರಣ ಸ್ವೀಕರಿಸಲಿಲ್ಲ. ಸ್ವೀಕರಿಸುವುದನ್ನು ಪ್ರಾಥಮಿಕ ಆದ್ಯತೆಯ ಭಾಗವನ್ನಾಗಿ ಪರಿಗಣಿಸಲಿಲ್ಲ. ಬದಲಾಗಿ ಅದು ಜನರ ದೌರ್ಬಲ್ಯಗಳನ್ನೇ ಬಂಡವಾಳವಾಗಿಸಿಕೊಂಡು ಅದರ ಮೇಲೆ ಮತದ ಫಸಲು ಪಡೆಯುವ ಆಸೆಗಳನ್ನು ಈಡೇರಿಸುವುದರ ಕಡೆಗೆ ಹುಮ್ಮಸ್ಸನ್ನು ಮೀಸಲಾಗಿರಿಸಿಕೊಂಡಿತು. ಸಮಾಜವಾದಿ, ಜಾತ್ಯಾತೀತತೆ, ಬಂಡಾಯ ಮನೋಧರ್ಮದ ಚಳುವಳಿಗಳಿಂದ ಹೊಸ ಅಲೆ ಸೃಷ್ಟಿಸುವ ಪ್ರಯತ್ನಗಳಾದವು. ಆದರೆ ಅವುಗಳ ಪ್ರಭಾವವನ್ನು ವಿಸ್ತರಿಸುವುದಕ್ಕೆ ಇಲ್ಲಿಯ ರಾಜಕಾರಣ ಅವಕಾಶ ನೀಡಲಿಲ್ಲ. ಅವುಗಳನ್ನು ಸದೆಬಡೆಯುವ ಪ್ರತಿತಂತ್ರಗಳನ್ನು ಹೆಣೆದು ಸಾಂಪ್ರದಾಯಿಕ ಜಡತೆಯೊಂದಿಗಿನ ಜನರ ಮನೋಧರ್ಮದ ಮಿತಿಗಳನ್ನೇ ತನ್ನ ಗೆಲುವಿನ ತಂತ್ರಗಳಿಗಾಗಿ ಬಳಸಿಕೊಂಡಿತು. ಇದರ ಕಾರಣಕ್ಕಾಗಿಯೇ ಈಗ ಹೊಸ ವಿತಂಡವಾದಿ ದೃಷ್ಟಿಕೋನಗಳು ಜನಪ್ರಿಯ ಎಂಬ ಭಾವ ಮೂಡಿಸಲಾಗುತ್ತಿದೆ.

ಉಜ್ವಲ ಭವಿಷ್ಯದ ಸಾಧ್ಯತೆಗಳು

ಬುದ್ಧಿ ಮತ್ತು ಜೀವ – ಇವೆರಡೂ ಅಸಂಗತ ಎಂಬ ವೈರುಧ್ಯದ ನಿಲುವುಗಳು ಪ್ರಾಮುಖ್ಯತೆ ಪಡೆಯುತ್ತಿವೆ. ಬುದ್ಧಿಜೀವದ ವಿವೇಚನಾಪೂರ್ಣ ಅಸ್ತಿತ್ವ ಅಪಾಯಕಾರಿ ಎಂದು ನಂಬಿಸಲಾಗುತ್ತಿದೆ. ಆದರೆ, ವಾಸ್ತವದಲ್ಲಿ ಬುದ್ಧಿಜೀವವು ಧರ್ಮಾಧಾರಿತ ಭಾರತೀಯ ಸಾಮಾಜಿಕತೆಯನ್ನು ಭಿನ್ನವಾಗಿ ಮರುರೂಪಿಸುವುದಕ್ಕೆ ಅತ್ಯಾವಶಕ ಎಂಬ ತಾತ್ವಿಕತೆಯನ್ನು ರಾಜಕಾರಣ ಅರ್ಥೈಸಿಕೊಳ್ಳುತ್ತಿಲ್ಲ. ಧರ್ಮ, ದೇವರು, ಸಮಾಜ, ರಾಜಕಾರಣ, ಆರ್ಥಿಕತೆ – ಇವೆಲ್ಲವನ್ನೂ ಬುದ್ಧಿಜೀವದ ಜೀವಂತಿಕೆಯ ಬೆಂಬಲದೊಂದಿಗೆ ವಿವೇಕಪೂರ್ಣ ಪ್ರಜ್ಞೆಯೊಂದಿಗೆ ಅರ್ಥೈಸಿಕೊಳ್ಳಬೇಕು ಎಂಬ ಸ್ವಯಂಸಂವಿಧಾನವು ರೂಪುಗೊಳ್ಳಬೇಕಾಗಿದೆ. ಅದಕ್ಕಾಗಿ ರಾಜಕಾರಣವು ದಾರ್ಶನಿಕ ನಾಯಕತ್ವದ ಸತ್ವದೊಂದಿಗೆ ಗುರುತಿಸಿಕೊಳ್ಳಬೇಕು. ಇಂಥ ಸತ್ವವನ್ನು ಮುನ್ನೆಲೆಗೆ ತರುವುದಕ್ಕೆ ಚುನಾವಣೆಯ ಅಖಾಡವನ್ನು ಪೂರಕವಾಗಿಸಿಕೊಳ್ಳಬೇಕು. ಅಂಥ ಹೆಜ್ಜೆಗಳೊಂದಿಗೇ ಭಾರತದ ಉಜ್ವಲ ಭವಿಷ್ಯ ಅಡಗಿದೆ ಎಂಬುದನ್ನು ಬಹುಬೇಗ ಗೊತ್ತುಮಾಡಿಕೊಳ್ಳಬೇಕು.

-ಡಾ.ಎನ್.ಕೆ.ಪದ್ಮನಾಭ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

Published

on

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ.

ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ8 hours ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 days ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ3 days ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ4 days ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ5 days ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ6 days ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ1 week ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ1 week ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ1 week ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ2 weeks ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

Trending