Connect with us

ರಾಜಕೀಯ

ಚುನಾವಣಾ ರಾಜಕಾರಣ : ಆಶಾದಾಯಕ ಅವಕಾಶಗಳು

Published

on

Photo courtesy : LAW.COM

ದೇಶ ಮತ್ತೊಂದು ಮಹಾಚುನಾವಣೆಯ ಹೊಸಿಲಲ್ಲಿದೆ. ಯಾರು ಅಧಿಕಾರ ಅಲಂಕರಿಸಬಹುದು ಎಂಬ ಸಹಜ ಕುತೂಹಲ ಎಲ್ಲೆಡೆಯಲ್ಲಿಯೂ ಇದೆ. ಇದಕ್ಕೆ ಪ್ರತಿಯಾಗಿ ರಾಜಕೀಯ ಅಖಾಡ ಸನ್ನದ್ಧವಾಗಿದೆ. ಲೋಕಸಭೆ ಚುನಾವಣೆ ಎಂದಾಕ್ಷಣ ಮುಂದಿನ ನಾಯಕ ಯಾರು ಎಂಬ ನಿರೀಕ್ಷೆ ಸಹಜವಾಗಿಯೇ ಗರಿಗೆದರುತ್ತದೆ. ಈ ಕುತೂಹಲಕ್ಕನುಗುಣವಾದ ನಿರೀಕ್ಷೆಯನ್ನು ಭಾರತದ ರಾಜಕಾರಣ ಹೇಗೆ ಈಡೇರಿಸುತ್ತದೆ ಎನ್ನುವುದರ ಮೇಲೆ ಭವಿಷ್ಯದ ಹೆಜ್ಜೆಗಳು ನಿರ್ಣಯಿಸಲ್ಪಡುತ್ತವೆ. ಜನಮನ್ನಣೆಯ ಗೆಲುವು ದಕ್ಕಿಸಿಕೊಳ್ಳಲು ರಾಜಕಾರಣಕ್ಕೆ ಎರಡು ಬಗೆಯ ಅವಕಾಶಗಳಿರುತ್ತವೆ. ಸಕಾರಾತ್ಮಕ ಆಲೋಚನೆಗಳ ಬಲದಲ್ಲಿ ದಾರ್ಶನಿಕ ನಾಯಕತ್ವ ಸಾಬೀತುಪಡಿಸುವ ಬದ್ಧತೆಯ ನಡೆಯೊಂದಿಗೆ ಮೊದಲ ಅವಕಾಶದ ಸಾಧ್ಯತೆ ಇರುತ್ತದೆ. ಇಡೀ ದೇಶವನ್ನು ಹಿಂದಕ್ಕೆಳೆಸುವ ಸಂಕುಚಿತ ಕಾರ್ಯಸೂಚಿಯೊಂದಿಗೆ ಜನರ ಜಡತೆಯನ್ನು ಮತ್ತಷ್ಟು ಸ್ಥಾಯಿಗೊಳಿಸುವ ಪ್ರಯತ್ನಗಳೊಂದಿಗಿನ ಅವಕಾಶ ಮತ್ತೊಂದು. ಭಾರತದ ರಾಜಕಾರಣವು ಇಂಥ ಸೀಮಿತ ದೃಷ್ಟಿಕೋನದ ಅವಕಾಶವಾದಿ ತಂತ್ರಗಾರಿಕೆಯನ್ನೇ ನೆಚ್ಚಿಕೊಂಡು ಸಾಗುತ್ತಿದೆ ಎಂಬುದಕ್ಕೆ ಹಲವು ನಿದರ್ಶನಗಳು ಇತಿಹಾಸದ ಪುಟಗಳಲ್ಲಿ ಲಭ್ಯವಾಗುತ್ತವೆ. ಸ್ವಾತಂತ್ರ್ಯೋತ್ತರ ಅವಧಿ, ಜಾಗತೀಕರಣದ ತದನಂತರದ ಕಾಲಘಟ್ಟ ಮತ್ತು ಹೊಸ ಶತಮಾನದ ಸ್ಥಿತ್ಯಂತರಗಳ ಅವಧಿಯನ್ನು ದೃಷ್ಟಿಯಲ್ಲಿರಿಸಿಕೊಂಡು ಈ ಚರ್ಚೆಯನ್ನು ವಿಸ್ತರಿಸಬಹುದು.

ಜಡತೆಯಿಂದ ಗೆಲುವಿನ ಲಾಭ!

ಅಧಿಕಾರಕ್ಕ ಬಂದ ಕ್ಷಣದಿಂದಲೇ ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಪ್ರದರ್ಶಿತವಾಗುವ ಎಚ್ಚರದ ರಾಜಕೀಯ ನಡೆ ಇಲ್ಲಿಯ ಸಾಮಾನ್ಯ ಗುಣಲಕ್ಷಣ. ಇದಕ್ಕೆ ಹೊಸ ಬಗೆಯ ತೀವ್ರತೆ ಸಿಕ್ಕಿದ್ದು ಹಿಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ. ಆಗಿನ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಘಟನಾವಳಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಭಾರತೀಯ ರಾಜಕಾರಣ ಚಾಣಾಕ್ಷ ತಂತ್ರಗಾರಿಕೆಯ ತೀವ್ರತರ ತಿರುವಿನ ಘಟ್ಟ ತಲುಪಿದ್ದು ಸ್ಪಷ್ಟವಾಗುತ್ತದೆ. ಅಧಿಕಾರ ಪಡೆಯುವ ಏಕೈಕ ಕಾರ್ಯಸೂಚಿಯನ್ನಷ್ಟೇ ನೆಚ್ಚಿಕೊಂಡು ರಾಜಕೀಯ ಪಕ್ಷಗಳು ಕಾರ್ಯೋನ್ಮುಖವಾಗುವುದು, ಅದಕ್ಕಾಗಿ ಚಾಣಾಕ್ಷ ತಂತ್ರಗಾರಿಕೆಯ ನೆರವು ಪಡೆಯುವುದು, ಆ ಮೂಲಕ ಗೆಲುವು ಸಾಧ್ಯವಾಗಿಸಿಕೊಳ್ಳುವುದು – ಇವೆಲ್ಲವೂ ಗೊತ್ತಿರುವ ಸಂಗತಿಗಳೇ. ಆದರೆ, 2014ರ ಚುನಾವಣೆಯು ಈ ದೇಶದಲ್ಲಿ ಸ್ಥಾವರವಾಗಿ ಉಳಿದುಕೊಂಡಿದ್ದ ಜಡತೆಯ ನಿರ್ಲಿಪ್ತ ಮನಸ್ಥಿತಿಯನ್ನು ಬೇರೊಂದು ರೀತಿಯಲ್ಲಿ ಬಳಸಿಕೊಂಡು ಗೆಲುವು ತಂದುಕೊಳ್ಳುವ ಅವಕಾಶವನ್ನು ದಯಪಾಲಿಸಿತು. ಇದನ್ನು ಅತ್ಯಂತ ಚಾಣಾಕ್ಷಯುತವಾಗಿ ಬಳಸಿಕೊಂಡವರು ಗೆಲುವಿನ ನಗೆ ಬೀರಿದರು.

ಹಳೆ ಆಲದ ಮರಕ್ಕೆ ಜೋತುಬೀಳುವಿಕೆ

ಹಿಂದೆ ಬಹಳ ವರ್ಷಗಳ ಕಾಲ ಆಡಳಿತ ಚುಕ್ಕಾಣಿ ಹಿಡಿದಿದ್ದವರು ಅನುಸರಿಸಿದ ಹಾದಿಯನ್ನೇ ಬೇರೊಂದು ಬಗೆಯಲ್ಲಿ ಮಾದರಿಯಾಗಿಸಿಕೊಂಡ ಕಾರಣಕ್ಕಾಗಿಯೇ ಆ ಗೆಲುವು ಸಾಧಿಸಲು ಸಾಧ್ಯವಾಯಿತು. ಹಿಂದಿನವರದ್ದು ಹಳೆಯ ಆಲದ ಮರಕ್ಕೆ ಜೋತುಬೀಳುವ ಪ್ರವೃತ್ತಿಯ ರಾಜಕಾರಣವೇ ಆಗಿತ್ತು. ಹಳೆಯ ಸಾಧನೆಯನ್ನು ನೆನಪಿಸಿಕೊಂಡು ಮತ್ತೆ ಮತ್ತೆ ಅದರ ಜಪಗೈದು ಜನರನ್ನು ಸೆಳೆದುಕೊಳ್ಳುವ ತಂತ್ರಗಾರಿಕೆಯ ಕಡೆಗೇ ಅದರ ಆದ್ಯತೆ ಇತ್ತು. ಗೆಲುವು ಸಾಧಿಸುವ ಹುಮ್ಮಸ್ಸಿನೊಂದಿಗೆ ಚುನಾವಣಾ ಅಖಾಡಕ್ಕಿಳಿದಿದ್ದವರು ಹಳೆಯದ್ದರ ಆಧಾರದಲ್ಲಿ ಹೊಸದೊಂದು ರಾಜಕೀಯ ಸಂಸ್ಕøತಿಯನ್ನು ರೂಪಿಸುವ ಹೊಣೆಗಾರಿಕೆ ನಿರ್ವಹಿಸುವ ಅವಕಾಶವನ್ನು ಉದ್ದೇಶಪೂರ್ವಕವಾಗಿ ಬಿಟ್ಟುಕೊಟ್ಟರು. ಹೀಗಾಗಿ ‘ಹಳೆಯ ಬೇರು, ಹೊಸ ಚಿಗುರು’ ಎಂಬ ಪ್ರಯೋಗಶೀಲ ದೃಷ್ಟಿಕೋನ ಸೋಲನ್ನು ಅನುಭವಿಸಿತು. ಹಳೆಯ ಬೇರುಗಳೊಂದಿಗೆ ನಂಟು ಉಳಿಸಿಕೊಂಡು ಹೊಸದಾದ ಹೆಜ್ಜೆಗಳೊಂದಿಗೆ ಬದಲಾವಣೆಯ ಅಲೆಯನ್ನು ಮೂಡಿಸುವುದರ ಕಡೆಗಿನ ವ್ಯಾಪಕ ಸಾಧ್ಯತೆಗಳು ಮೊಟಕುಗೊಂಡವು.

ನಕಾರಾತ್ಮಕತೆಯ ಪುನರಾವರ್ತನೆ

ಪ್ರಶ್ನಿಸುವ ತಾರ್ಕಿಕತೆಯನ್ನು ಚಾಣಾಕ್ಷಯುತವಾಗಿ ಹತ್ತಿಕ್ಕುವ ಆಡಳಿತಾರೂಢ ಪ್ರಾಬಲ್ಯವು ಸ್ವಾತಂತ್ರ್ಯೋತ್ತರ ರಾಜಕೀಯ ವಲಯದ ಮೊದಲ ಆದ್ಯತೆಯಾಗಿ ಪ್ರಾಮುಖ್ಯತೆ ಪಡೆದುಕೊಂಡಿತು. ಇದನ್ನು ಹಿನ್ನೆಲೆಗೆ ಸರಿಸುವ ಪರ್ಯಾಯ ರಾಜಕಾರಣದ ತಾತ್ವಿಕ ಮಾದರಿಗಳು ವಿವಿಧ ದಶಕಗಳಲ್ಲಿ ಕಾಣಿಸಿಕೊಂಡರೂ ಜನಜನಿತವಾದ ರಾಜಕೀಯ ಪಕ್ಷಗಳ ಮುಂಚೂಣಿ ನಾಯಕರ ವ್ಯಕ್ತಿಗತ ಪ್ರತಿಷ್ಠೆ ಮತ್ತು ಆರಾಧನಾ ಮನೋಭಾವಕ್ಕೇ ಹೆಚ್ಚಿನ ಆದ್ಯತೆ ಸಿಕ್ಕಿತು. ಇದು ಐದು ವರ್ಷಗಳ ಅಧಿಕಾರಾವಧಿಯ ಪ್ರತಿ ಹಂತದಲ್ಲೂ ನುಸುಳಿಕೊಳ್ಳತೊಡಗಿತು. ಈಗ ಅದೇ ನಕಾರಾತ್ಮಕತೆ ಬೇರೆ ರೀತಿಯಲ್ಲಿ ಪುನರಾವರ್ತಿತವಾಗಿದೆ.

ವೈರುಧ್ಯದ ರಾಜಕೀಯ ನಡೆ

ಚುನಾವಣಾ ರಾಜಕಾರಣವು ಸಂಕುಚಿತ ಅಜೆಂಡಾ ಆಧಾರದಲ್ಲಿ ಅಭಿವ್ಯಕ್ತವಾದರೆ ಏನೇನಾಗುತ್ತದೆ ಎನ್ನುವುದನ್ನು ಸ್ವಾತಂತ್ರ್ಯೋತ್ತರ ಭಾರತದ ರಾಜಕೀಯ ಚರಿತ್ರೆಯ ಮೂಲಕ ತಿಳಿದುಕೊಳ್ಳಬಹುದು. ಇದರ ಅಧ್ಯಯನ ಮತ್ತು ಸೂಕ್ಷ್ಮ ಅವಲೋಕನದಿಂದ ಇಲ್ಲಿಯ ವೈರುಧ್ಯಗಳು ಸ್ಪಷ್ಟವಾಗಿ ಗೋಚರಿಸುತ್ತವೆ. ಜೀವಪರ ಸಂವೇದನೆಯ ಮೌಲಿಕ ಆಲೋಚನೆ ಮತ್ತು ವಾದಗಳನ್ನು ಮುನ್ನೆಲೆಗೆ ತಂದು ಅದಕ್ಕನುಗುಣವಾದ ಸರ್ಕಾರ ಅಸ್ತಿತ್ವಕ್ಕೆ ಬರಬೇಕು ಎಂಬ ಪ್ರತಿಪಾದನೆಯ ನೆರವಿನೊಂದಿಗೆ ಅಧಿಕಾರಕ್ಕೆ ಬಂದವರು ಮತ್ತು ಉದಾತ್ತವಾದ ಧಾರ್ಮಿಕ ಅಂಶಗಳನ್ನು ಸಂಕುಚಿತಗೊಳಿಸಿ ಸಂಘರ್ಷ ಮೂಡಿಸಿ ಅಧಿಕಾರಕ್ಕೆ ಹತ್ತಿರಾಗುವ ಜಾಯಮಾನದ ರಾಜಕೀಯ ವರ್ತನೆಗಳವರ ದಿಗ್ವಿಜಯದ ಜೊತೆಗೆ ಇಂಥ ವೈರುಧ್ಯಗಳಿವೆ. ಎರಡೂ ವಲಯಗಳು ಅಧಿಕಾರರೂಢ ಮತ್ತು ವಿರೋಧ ಪಕ್ಷ ಎಂಬ ನೆಲೆಗಳಲ್ಲಿ ವಿಂಗಡಣೆಯಾಗಿ ವಾದಗಳನ್ನು ಮುಂದಿಡುತ್ತಾ ಜನಬೆಂಬಲ ಗಿಟ್ಟಿಸಿಕೊಳ್ಳುವ ಪ್ರಯತ್ನದಲ್ಲಿ ಯಶಸ್ಸು ಕಂಡಿವೆ.

Rajadharma a column by Dr.N k padmanabh

ಒಮ್ಮೆ ಅವರಿಗೆ, ಮತ್ತೊಮ್ಮೆ ಇವರಿಗೆ ಎನ್ನುವ ಹಾಗೆ ಅಧಿಕಾರದ ಅವಕಾಶ ಪ್ರಾಪ್ತವಾಗಿದೆ. ಆದರೆ, ಅಧಿಕಾರಕ್ಕೆ ಬಂದ ಮೇಲೆ ಈ ಎರಡೂ ವಲಯಗಳ ರಾಜಕೀಯ ನಡೆ ಯಾವ ಬಗೆಯ ಉದಾತ್ತತೆಯೊಂದಿಗಿತ್ತು ಎಂಬುದನ್ನು ಪರಿಶೀಲಿಸಿದರೆ ಇಡೀ ಭಾರತದ ರಾಜಕಾರಣದ ಬಹುದೊಡ್ಡ ಮಿತಿಗಳು ಎದ್ದುಕಾಣುತ್ತವೆ. ಅಧಿಕಾರಕ್ಕೆ ಬರುವವರೆಗೆ ಪ್ರತಿಪಾದಿಸಿದ ವಿಶಾಲವಾದ ಮೌಲಿಕ ಆಲೋಚನೆಗಳನ್ನೇ ಅಧಿಕಾರಕ್ಕೆ ಬಂದ ನಂತರ ಮರೆಯುವ ಜಾಣ್ಮೆಯನ್ನು ಸ್ಥಾಯಿಯಾಗಿಸಿಕೊಂಡ ಪಕ್ಷ ರಾಜಕಾರಣವೊಂದರ ವಿಕಲಾಂಗ ಲಕ್ಷಣವು ಪಕ್ಷಾತೀತ ನೆಲೆಯಲ್ಲಿ ಸರ್ವವ್ಯಾಪಿಯಾಯಿತು. ಇಂಥ ದ್ವಂದ್ವವನ್ನು ಪ್ರಶ್ನಿಸುತ್ತಲೇ ಧರ್ಮಕ್ಕೆ ಸಂಬಂಧಿಸಿದ ಸೂಕ್ಷ್ಮ ಸಂಗತಿಗಳನ್ನು ರಾಜಕೀಯ ಲಾಭದ ಆಕಾಂಕ್ಷೆಯಲ್ಲಿ ತಪ್ಪಾಗಿ ವಿಶ್ಲೇಷಿಸಿ ಅಧಿಕಾರಕ್ಕೇರಿದವರೂ ಮತ್ತದೇ ಹಾದಿ ಹಿಡಿದರು. ಹೀಗಾಗಿಯೇ ರಾಜಕೀಯ ಪಕ್ಷಗಳ ಕೆಳಹಂತದ ಯುವ ಕಾರ್ಯಕರ್ತರಿಗೆ ಉದಾತ್ತವಾದ ನಾಯಕತ್ವದ ಮಾದರಿಯೇ ಇಲ್ಲದಂತಾಯಿತು.

ಬಹುಮತ ಪ್ರಾಶಸ್ತ್ಯದ ಮತ್ತೊಂದು ಮುಖ

ಈ ಹಂತದಲ್ಲಿಯೇ ಪ್ರಶ್ನಿಸುವ ಧ್ವನಿಗಳೊಂದಿಗೆ ಇರುವವರನ್ನೇ ದ್ವಂದ್ವಕ್ಕೆ ಸಿಲುಕಿಸುವ ವಿತಂಡವಾದಿ ದೃಷ್ಟಿಕೋನಗಳು ಕಳೆದ 2014 ಚುನಾವಣೆಯ ಸಂದರ್ಭದಲ್ಲಿ ವೈಭವೀಕೃತವಾದವು. ಇವರನ್ನು ಪ್ರಶ್ನೆ ಮಾಡುತ್ತೀರಿ. ಮತ್ತಿನ್ಯಾರನ್ನು ಆಯ್ಕೆ ಮಾಡುತ್ತೀರಿ? ಇಷ್ಟು ವರ್ಷಗಳ ಕಾಲ ಆಳಿದವರು ಏನು ಸಾಧಿಸಿದರು? ಎಂಬ ಮರುಪ್ರಶ್ನೆ ಎಸೆದು ಚರ್ಚೆ ಒಳಗೊಳ್ಳಬಹುದಾದ ವಿಶಾಲ ಆವರಣವನ್ನೇ ಒಡೆದುಬಿಡುವ ಪ್ರವೃತ್ತಿ ಮುಂದುವರೆಯಿತು. ಇದೇ ಪ್ರವೃತ್ತಿಯನ್ನೇ ಮುಖ್ಯವಾಗಿಸಿಕೊಂಡು ಸಾಮಾಜಿಕ ಜಾಲತಾಣಗಳನ್ನು ಪಕ್ಷದ ಪರವಾದ ಅಲೆ ಮೂಡಿಸುವ ಉದ್ದೇಶಕ್ಕೆ ಬಳಸಿಕೊಳ್ಳುವ ರಹಸ್ಯ ಕಾರ್ಯಸೂಚಿ ಯಶಸ್ಸು ಕಂಡಿತು. ಹಿಂದಿನವರ ಮೌನಕ್ಕಿಂತ ಈಗಿನವರ ಮಾತು ಹೆಚ್ಚು ಆಪ್ತ ಎಂಬ ಕಾರಣಕ್ಕಾಗಿ ಮತನೀಡುವ ಅಪೇಕ್ಷೆ ಸಾಮೂಹಿಕವಾಗಿ ಅಭಿವ್ಯಕ್ತವಾಯಿತು. ಸಮಸ್ಯೆಗಳನ್ನು ಅಸಹಾಯಕ ಮೌನ ಮತ್ತು ದಿವ್ಯ ನಿರ್ಲಿಪ್ತತೆಯೊಂದಿಗೆ ನಿರ್ಲಕ್ಷಿಸಿದವರಿಗಿಂತಲೂ ಅವೇ ಸಮಸ್ಯೆಗಳಿಗೆ ಪರಿಹಾರ ಸಾಧ್ಯ ಎಂಬುದನ್ನು ಭಾಷಿಕ ಪ್ರೌಢಿಮೆಯಲ್ಲಿ ಮನಗಾಣಿಸಿದವರು ಮುಖ್ಯ ಎಂಬ ಭಾವನೆಯೇ ಸಾರ್ವತ್ರಿಕವಾಗಿ ಹೊಸಬರಿಗೆ ಭಾರೀ ಬಹುಮತದ ಪ್ರಾಶಸ್ತ್ಯ ದೊರಕಿ ಅಧಿಕಾರದ ಅವಕಾಶ ಲಭ್ಯವಾಯಿತು.

ದಿಕ್ಕುತಪ್ಪಿಸುವ ಹುನ್ನಾರಗಳು

ಈಗ 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ಇದೇ ಬಗೆಯ ಇತಿಹಾಸ ಪುನರಾವರ್ತಿತಗೊಳ್ಳುವ ಎಲ್ಲ ವಿದ್ಯಮಾನಗಳಿಗೆ ನಾವೀಗ ಸಾಕ್ಷಿಯಾಗುತ್ತಲೇ ಇದ್ದೇವೆ. ಒಂದು ದೇಶದ ವಿರುದ್ಧ ಯುದ್ಧ ಆಗಬೇಕು ಎಂಬ ಅಗ್ರೆಸ್ಸಿವ್ ಪ್ರತಿಪಾದನೆಯು ಪೀಳಿಗೆಯೊಂದರ ರಾಜಕೀಯ ಆದ್ಯತೆಯನ್ನೇ ಸಂಕುಚಿತಗೊಳಿಸಿ ಬಹುಮತ ಗಿಟ್ಟಿಸಿಕೊಳ್ಳುವ ಮಟ್ಟಿಗೆ ಪ್ರಭಾವೀ ಎಂಬುದನ್ನು ಸಾಬೀತುಪಡಿಸುವ ನಿದರ್ಶನಗಳು ಕಣ್ಣಮುಂದೆಯೇ ಇವೆ. ಸುಳ್ಳುಗಳ ತರಹೇವಾರಿ ವಿವರಗಳು ಬಗೆಬಗೆಯ ಬಣ್ಣಗಳನ್ನು ಪಡೆದು ಜನರ ನಿರ್ಧಾರಾತ್ಮಕ ಶಕ್ತಿಯ ಮೇಲೆ ಪ್ರಭಾವ ಬೀರುತ್ತಿರುವ ವಾಸ್ತವವನ್ನು ಅಷ್ಟು ಸುಲಭವಾಗಿ ನಿರಾಕರಿಸುವಂತಿಲ್ಲ. ರಾಜಕಾರಣಿಗಳ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗಲಂತೂ ಭಾರತೀಯ ಪ್ರಜಾಪ್ರಭುತ್ವದ ದಿಕ್ಕುತಪ್ಪಿಸುವ ಹುನ್ನಾರಗಳು ಯಾವ ಸ್ವರೂಪದ್ದವು ಎಂಬುದು ಸ್ಪಷ್ಟವಾಗುತ್ತದೆ. ಇಡೀ ದೇಶದಲ್ಲಿ ಆಗಬೇಕಿದ್ದ ಚರ್ಚೆಗಳ ಬದಲು ಅನಗತ್ಯ ವಿವರಗಳೇ ಪ್ರಾಮುಖ್ಯತೆ ಪಡೆದುಕೊಂಡು ಯಾರಿಗೆ ಲಾಭವಾಗುತ್ತದೆ ಎಂಬ ಸೂಕ್ಷ್ಮತೆ ಗೊತ್ತಾಗುತ್ತದೆ.

ಪ್ರಚೋದನಾತ್ಮಕ ಒಮ್ಮತದ ಉತ್ಪನ್ನ

ವಿಧವೆ ಎಂಬ ಕಾರಣಕ್ಕಾಗಿ ಮಹಿಳೆಯ ರಾಜಕೀಯ ಪ್ರವೇಶಕ್ಕೆ ವ್ಯಕ್ತವಾಗುವ ಪ್ರತಿರೋಧ, ರಾಜಕೀಯ ನಾಯಕಿಯ ತಂದೆ ಯಾರೆಂಬುದೇ ಗೊತ್ತಿಲ್ಲ ಎಂಬುದನ್ನೇ ಚಿತ್ರಿಸಿ ಇಂಥವರ ಆಯ್ಕೆ ಸಮರ್ಥನೀಯವಲ್ಲ ಎಂಬ ವಾದ, ಸಂಘರ್ಷವನ್ನು ಸಮರ್ಥಿಸುವ ನುಡಿಗಳನ್ನಾಡಿದಾಗಲೇ ಪರವಾದ ಅಲೆಯನ್ನು ಸೃಷ್ಟಿಸಿಕೊಳ್ಳಬಹುದೆಂಬ ತಪ್ಪುಕಲ್ಪನೆ, ಜನಪ್ರಿಯ ತಾರೆಯನ್ನು ರಾಜಕೀಯಕ್ಕೆ ಕರೆತಂದು ಜನರನ್ನು ಸೆಳೆದುಕೊಳ್ಳುವ ಪ್ರಯತ್ನ, ಸುದ್ದಿಮಾಧ್ಯಮಗಳನ್ನು ಕೊಂಡುಕೊಂಡು ತಮ್ಮ ಮೂಗಿನ ನೇರಕ್ಕೆ ಬಳಸಿಕೊಳ್ಳುವ ಚಾಣಾಕ್ಷತೆ, ಹಿಂದೆಂದಿಗಿಂತಲೂ ಹೆಚ್ಚು ವಿಸ್ತಾರವಾದ ಸುದ್ದಿಮಾಧ್ಯಮ ಮುಖ್ಯಸ್ಥರು ಮತ್ತು ರಾಜಕೀಯ ಪಕ್ಷಗಳ ನಡುವಿನ ಅಸಂವಿಧಾನಿಕ ನಂಟು, ಅದರ ವಿಸ್ತರಣೆ ಎಂಬಂತೆ ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಬರೀ ವಿವಾದಕ್ಕೆಳೆಸುವ ಮಾತುಗಳ ಸುತ್ತಲೇ ಗಿರಕಿ ಹೊಡೆಯುತ್ತಿರುವ ಸುದ್ದಿಮಾಧ್ಯಮ ಪ್ರಜ್ಞೆ – ಇವೆಲ್ಲವೂ ಸದ್ಯದ ಚುನಾವಣಾ ರಾಜಕಾರಣದ ಒಳಸುಳಿಗಳನ್ನು ಅರ್ಥೈಸಿಕೊಳ್ಳುವುದಕ್ಕೆ ಸಹಾಯಕವಾಗುತ್ತವೆ. ಭಾವನೆಗಳನ್ನು ಪ್ರಚೋದಿಸಿ ಒಮ್ಮತವನ್ನು ಉತ್ಪಾದಿಸಿಕೊಳ್ಳುವ ತಂತ್ರಗಾರಿಕೆಯು ಭಾರತದಲ್ಲಿ ಅತ್ಯಂತ ಜಾಗರೂಕತೆಯಿಂದ ಪ್ರಯೋಗಿಸಲ್ಪಡುತ್ತಿರುವುದಕ್ಕೆ ಸಾಕ್ಷ್ಯ ಒದಗಿಸುತ್ತವೆ.

ಭಾವನಾತ್ಮಕ ಪ್ರಚೋದನೆಯ ನೆರವಿನೊಂದಿಗೆ ಪೂರಕವಾದ ಒಮ್ಮತವನ್ನು ಸೃಷ್ಟಿಸಿಕೊಳ್ಳುವ ತಂತ್ರಗಾರಿಕೆಯು ಭಾರತೀಯ ರಾಜಕಾರಣಕ್ಕೆ ಹೊಸದೇನೂ ಅಲ್ಲ. ಅಸಮಾನತೆಯ ಕಾರಣಕ್ಕಾಗಿಯೇ ಭಾರತದಲ್ಲಿ ಬೇರೂರಿರುವ ತಾರತಮ್ಯದ ದೃಷ್ಟಿಕೋನಗಳನ್ನು ಒಡೆದುಹಾಕುವ ಅಪ್ಪಟ ವೈಚಾರಿಕ ಆಂದೋಲನಗಳು ನಡೆದರೂ ತಾರ್ಕಿಕ ಅಂತ್ಯ ಕಂಡುಕೊಳ್ಳುವವರೆಗೆ ಅವುಗಳ ಚಲನೆ ನಿರಂತರವಾಗುಳಿಯಲಿಲ್ಲ. ಇಂಥ ವೈಚಾರಿಕ ಆಂದೋಲನಗಳನ್ನು ರಾಜಕೀಯ ಅಸ್ಮಿತೆಯ ಸಶಕ್ತತೆಗೆ ಬಳಸಿಕೊಳ್ಳುವ ಜಾಣ್ಮೆಯ ರಾಜಕಾರಣದ ಬದಲು ಅವುಗಳನ್ನು ಭಾವುಕ ನೆಲೆಯಲ್ಲಿ ಗ್ರಹಿಸುವ ಒತ್ತಡ ಸೃಷ್ಟಿಸಿ ಪ್ರಬಲರು ಮತ್ತು ದುರ್ಬಲರ ನಡುವಿನ ಕಂದರ ಹೆಚ್ಚಿಸುವ ಪ್ರಯತ್ನಗಳಾದವು. ಈ ಹಂತದಲ್ಲಿ ಭಿನ್ನಾಭಿಪ್ರಾಯಗಳುಂಟಾದವು. ಗುಂಪುಗಳಾದವು.

ಹೀಗೆ ವೈಚಾರಿಕ ಆಂದೋಲನಗಳನ್ನು ಕಟ್ಟಬೇಕಾದ ವಲಯವೇ ಒಡೆದುಹೋಯಿತು.
ಸಮಸ್ಯೆಯ ಮೂಲಪತ್ತೆಯ ಅನಿವಾರ್ಯತೆ
ಅವುಗಳು ಎತ್ತಿದ ಪ್ರಶ್ನೆಗಳನ್ನೇ ಮುಂದಿಟ್ಟು ಚುನಾವಣೆಗಳನ್ನು ಎದುರಿಸಿದ ಪಕ್ಷ ರಾಜಕಾರಣವು ಅಧಿಕಾರ ಪಡೆಯುವಲ್ಲಿ ಯಶಸ್ಸು ಸಾಧಿಸಿತು. ಅಧಿಕಾರ ಪಡೆದ ನಂತರ ಈ ವೈಚಾರಿಕ ಆಂದೋಲನ ಎತ್ತಿದ್ದ ಪ್ರಶ್ನೆಗಳ ಹಿಂದಿದ್ದ ಸಂಕಟಗಳನ್ನು ಪರಿಹರಿಸುವುದರ ಕಡೆಗೆ ರಚನಾತ್ಮಕ ಪ್ರಯತ್ನವನ್ನು ನಡೆಸಲೇ ಇಲ್ಲ. ಅಷ್ಟೇ ಅಲ್ಲ, ಭಾವುಕ ವ್ಯಾಪ್ತಿಯಲ್ಲಿ ಅಗ್ರಸ್ಥಾನ ಪಡೆದು ಚರ್ಚೆಗೊಳಗಾಗುವ ದೇವರು, ಧರ್ಮಕ್ಕೆ ಸಂಬಂಧಿಸಿದ ಚರ್ಚೆಯನ್ನು ವಿವೇಚನೆ ಎತ್ತರಿಸುವ ಸಂವಾದ ರೂಪಿಸುವ ಆಡಳಿತಾತ್ಮಕ ಹೊಣೆಗಾರಿಕೆಗಳನ್ನೂ ನಿಭಾಯಿಸಲಿಲ್ಲ. ಈ ಸ್ಪೇಸ್‍ಅನ್ನು ಮೂಲಭೂತವಾದಿ ದೃಷ್ಟಿಕೋನದ ರಾಜಕಾರಣ ಸಕಾಲಿಕವಾಗಿ ಬಳಸಿಕೊಂಡು ಅಧಿಕಾರದ ನಿರ್ಣಾಯಕ ಆವರಣವನ್ನು ಪ್ರವೇಶಿಸುವ ಪ್ರಯತ್ನದಲ್ಲಿ ಯಶಸ್ಸು ಕಂಡಿತು. ಸಮಸ್ಯೆಯ ಈ ಮೂಲವನ್ನು ಗೊತ್ತುಮಾಡಿಕೊಳ್ಳದೇ ನಾವು ಸದ್ಯದಲ್ಲಿ ಇದಕ್ಕಿಂದ ಭಿನ್ನವಾದ ಹೊಸದೊಂದು ಪರ್ಯಾಯ ರಾಜಕಾರಣದ ಆಕೃತಿಗಳನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.

ಅಪೂರ್ವ ಅವಕಾಶ ಬಿಟ್ಟುಕೊಡುವ ಚಾಳಿ

ಈಗ ಸುದ್ದಿಮಾಧ್ಯಮಗಳು ಅತ್ಯುತ್ಸಾಹದಲ್ಲಿ ಇಂತಿಷ್ಟು ಹೊಸ ಮತದಾರರು ಈ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧರಿಸಲಿದ್ದಾರೆ ಎಂದು ಬಿಂಬಿಸುತ್ತಿವೆ. ಹೀಗೆ ಬಿಂಬಿಸುತ್ತಲೇ ಯುವಶಕ್ತಿ ಯಾರ ಪರ ನಿಲ್ಲಬೇಕು ಎಂಬರ್ಥದ ವಿಶ್ಲೇಷಣೆಗಳನ್ನು ಪರೋಕ್ಷವಾಗಿ ಮುಂದಿಡುತ್ತಿವೆ. ಸೈನಿಕರ ಮೇಲೆ ದಾಳಿ ನಡೆದಾಗ ಯುದ್ಧದ ಮೂಲಕವೇ ಪರಿಹಾರ ಸಾಧ್ಯ ಎಂಬ ಬಿಂಬಗಳನ್ನು ಕಟ್ಟಿಕೊಟ್ಟು ಒಂದು ನಿರ್ದಿಷ್ಟ ರಾಜಕೀಯ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ನೆರೆಯ ರಾಷ್ಟ್ರಕ್ಕೆ ಬುದ್ಧಿ ಕಲಿಸಬಹುದು ಎಂಬ ಪರೋಕ್ಷ ಸಂದೇಶವನ್ನು ರವಾನಿಸುತ್ತಿವೆ. ಇನ್ನೂ ಕೆಲವು ಮಾಧ್ಯಮಗಳು ಮುಖ್ಯವಾಗಿ ಉಗ್ರರ ವಿರುದ್ಧದ ರಚನಾತ್ಮಕ ಕಾರ್ಯಾಚರಣೆ ಮತ್ತು ಪಾಕಿಸ್ತಾನದೊಂದಿಗಿನ ಸೌಹಾರ್ದಯುತ ಮಾತುಕತೆಯ ಹಾದಿ ಅನುಸರಣೆಯ ಅಗತ್ಯತೆಯನ್ನು ಪ್ರತಿಪಾದಿಸುತ್ತಿವೆ. ಈ ಚರ್ಚೆಯ ಲಾಭವನ್ನು ಪಡೆಯುವ ಹವಣಿಕೆಯನ್ನು ಪಕ್ಷಗಳು ತೋರುತ್ತಿವೆ. ಇವೆಲ್ಲದ್ದರ ಮಧ್ಯೆ ಚುನಾವಣಾ ಅಖಾಡದಲ್ಲಿ ಪ್ರಜಾಪ್ರಭುತ್ವವಾದಿ ರಾಷ್ಟ್ರವೊಂದು ಮುಂಚೂಣಿಗೆ ತಂದುಕೊಳ್ಳಲೇಬೇಕಾದ ಸಂಗತಿಗಳು ಪ್ರಾತಿನಿಧ್ಯವನ್ನೇ ಪಡೆಯುತ್ತಿಲ್ಲ. ಇಂಥ ಅಪೂರ್ವ ಅವಕಾಶವನ್ನು ರಾಜಕೀಯ ಪಕ್ಷಗಳು ಉದ್ದೇಶಪೂರ್ವಕವಾಗಿ ಬಿಟ್ಟುಕೊಡುತ್ತಿವೆ.

ಸವಾಲುಗಳ ನಿರ್ವಹಣೆಯ ಚಾಣಾಕ್ಷತೆಯ ಅಗತ್ಯತೆ

ಸಮಸ್ಯೆಗಳ ಪ್ರಮಾಣ ವ್ಯಾಪಕವಾಗಿದ್ದಾಗ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಸವಾಲಿನ ನಿರ್ವಹಣೆಯ ಚಾಕಚಕ್ಯತೆ ಪ್ರದರ್ಶಿಸಬೇಕಾಗುತ್ತದೆ. ಇಂಥ ಚಾಕಚಕ್ಯತೆಯೊಂದಿಗಿನ ನಿರ್ವಹಣೆಯ ಸವಾಲನ್ನು ಅತ್ಯಂತ ಶ್ರದ್ಧೆಯಿಂದ ಭಾರತೀಯ ರಾಜಕಾರಣ ಸ್ವೀಕರಿಸಲಿಲ್ಲ. ಸ್ವೀಕರಿಸುವುದನ್ನು ಪ್ರಾಥಮಿಕ ಆದ್ಯತೆಯ ಭಾಗವನ್ನಾಗಿ ಪರಿಗಣಿಸಲಿಲ್ಲ. ಬದಲಾಗಿ ಅದು ಜನರ ದೌರ್ಬಲ್ಯಗಳನ್ನೇ ಬಂಡವಾಳವಾಗಿಸಿಕೊಂಡು ಅದರ ಮೇಲೆ ಮತದ ಫಸಲು ಪಡೆಯುವ ಆಸೆಗಳನ್ನು ಈಡೇರಿಸುವುದರ ಕಡೆಗೆ ಹುಮ್ಮಸ್ಸನ್ನು ಮೀಸಲಾಗಿರಿಸಿಕೊಂಡಿತು. ಸಮಾಜವಾದಿ, ಜಾತ್ಯಾತೀತತೆ, ಬಂಡಾಯ ಮನೋಧರ್ಮದ ಚಳುವಳಿಗಳಿಂದ ಹೊಸ ಅಲೆ ಸೃಷ್ಟಿಸುವ ಪ್ರಯತ್ನಗಳಾದವು. ಆದರೆ ಅವುಗಳ ಪ್ರಭಾವವನ್ನು ವಿಸ್ತರಿಸುವುದಕ್ಕೆ ಇಲ್ಲಿಯ ರಾಜಕಾರಣ ಅವಕಾಶ ನೀಡಲಿಲ್ಲ. ಅವುಗಳನ್ನು ಸದೆಬಡೆಯುವ ಪ್ರತಿತಂತ್ರಗಳನ್ನು ಹೆಣೆದು ಸಾಂಪ್ರದಾಯಿಕ ಜಡತೆಯೊಂದಿಗಿನ ಜನರ ಮನೋಧರ್ಮದ ಮಿತಿಗಳನ್ನೇ ತನ್ನ ಗೆಲುವಿನ ತಂತ್ರಗಳಿಗಾಗಿ ಬಳಸಿಕೊಂಡಿತು. ಇದರ ಕಾರಣಕ್ಕಾಗಿಯೇ ಈಗ ಹೊಸ ವಿತಂಡವಾದಿ ದೃಷ್ಟಿಕೋನಗಳು ಜನಪ್ರಿಯ ಎಂಬ ಭಾವ ಮೂಡಿಸಲಾಗುತ್ತಿದೆ.

ಉಜ್ವಲ ಭವಿಷ್ಯದ ಸಾಧ್ಯತೆಗಳು

ಬುದ್ಧಿ ಮತ್ತು ಜೀವ – ಇವೆರಡೂ ಅಸಂಗತ ಎಂಬ ವೈರುಧ್ಯದ ನಿಲುವುಗಳು ಪ್ರಾಮುಖ್ಯತೆ ಪಡೆಯುತ್ತಿವೆ. ಬುದ್ಧಿಜೀವದ ವಿವೇಚನಾಪೂರ್ಣ ಅಸ್ತಿತ್ವ ಅಪಾಯಕಾರಿ ಎಂದು ನಂಬಿಸಲಾಗುತ್ತಿದೆ. ಆದರೆ, ವಾಸ್ತವದಲ್ಲಿ ಬುದ್ಧಿಜೀವವು ಧರ್ಮಾಧಾರಿತ ಭಾರತೀಯ ಸಾಮಾಜಿಕತೆಯನ್ನು ಭಿನ್ನವಾಗಿ ಮರುರೂಪಿಸುವುದಕ್ಕೆ ಅತ್ಯಾವಶಕ ಎಂಬ ತಾತ್ವಿಕತೆಯನ್ನು ರಾಜಕಾರಣ ಅರ್ಥೈಸಿಕೊಳ್ಳುತ್ತಿಲ್ಲ. ಧರ್ಮ, ದೇವರು, ಸಮಾಜ, ರಾಜಕಾರಣ, ಆರ್ಥಿಕತೆ – ಇವೆಲ್ಲವನ್ನೂ ಬುದ್ಧಿಜೀವದ ಜೀವಂತಿಕೆಯ ಬೆಂಬಲದೊಂದಿಗೆ ವಿವೇಕಪೂರ್ಣ ಪ್ರಜ್ಞೆಯೊಂದಿಗೆ ಅರ್ಥೈಸಿಕೊಳ್ಳಬೇಕು ಎಂಬ ಸ್ವಯಂಸಂವಿಧಾನವು ರೂಪುಗೊಳ್ಳಬೇಕಾಗಿದೆ. ಅದಕ್ಕಾಗಿ ರಾಜಕಾರಣವು ದಾರ್ಶನಿಕ ನಾಯಕತ್ವದ ಸತ್ವದೊಂದಿಗೆ ಗುರುತಿಸಿಕೊಳ್ಳಬೇಕು. ಇಂಥ ಸತ್ವವನ್ನು ಮುನ್ನೆಲೆಗೆ ತರುವುದಕ್ಕೆ ಚುನಾವಣೆಯ ಅಖಾಡವನ್ನು ಪೂರಕವಾಗಿಸಿಕೊಳ್ಳಬೇಕು. ಅಂಥ ಹೆಜ್ಜೆಗಳೊಂದಿಗೇ ಭಾರತದ ಉಜ್ವಲ ಭವಿಷ್ಯ ಅಡಗಿದೆ ಎಂಬುದನ್ನು ಬಹುಬೇಗ ಗೊತ್ತುಮಾಡಿಕೊಳ್ಳಬೇಕು.

-ಡಾ.ಎನ್.ಕೆ.ಪದ್ಮನಾಭ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು

Published

on

ಮೇಲ್ಭದ್ರ ನೀರಿಗಾಗಿ ದಾವಣಗೆರೆ ಬಂದ್‌: ಗುಟ್ಕಾ–ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ, ನಗರದಲ್ಲಿ ಪ್ರತಿಭಟನೆ ಕಾವು

ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಗರದ ವಿವಿಧ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮೇಲ್ಭದ್ರ ಯೋಜನೆಯ ನೀರು ದಾವಣಗೆರೆ ಭಾಗದ ರೈತರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ನೀರಿನ ಲಭ್ಯತೆ ಕೃಷಿ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ನೀರು ಬಿಡುಗಡೆ ವಿಚಾರದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಬೇಕು ಎಂಬ ಆಗ್ರಹವೂ ಕೇಳಿಬಂತು.

http://Visit : www.suddidina.com

davangere-bandh-upper-bhadra-water-release-gutka-pan-masala-ban-protest-renukacharya

ಗುಟ್ಕಾ, ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ

ಬಂದ್‌ನ ಮತ್ತೊಂದು ಪ್ರಮುಖ ಬೇಡಿಕೆ ಗುಟ್ಕಾ ಹಾಗೂ ಪಾನ್‌ ಮಸಾಲಾ ನಿಷೇಧಕ್ಕೆ ಸಂಬಂಧಿಸಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಇಂತಹ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ.

ಈ ಎರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಬೆಂಬಲ ನೀಡುವಂತೆ ವ್ಯಾಪಾರಸ್ಥರು, ವಿದ್ಯಾರ್ಥಿಗಳು, ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿದ್ದು, ಬಂದ್‌ಗೆ ಬೆಂಬಲ ಪಡೆಯಲು ಸಂಘಟಕರು ಕರೆ ನೀಡಿದ್ದಾರೆ.

https://x.com/ians_india/status/2094602342230528256

ಟೈರ್‌ಗೆ ಬೆಂಕಿ; ಪೊಲೀಸರ ಮಧ್ಯಪ್ರವೇಶ

ಪ್ರತಿಭಟನೆಯ ವೇಳೆ ನಗರದ ಹಲವು ವೃತ್ತಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಲಾಯಿತು. ಇದರಿಂದ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.

ಸಾರ್ವಜನಿಕ ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪರಿಸ್ಥಿತಿಯನ್ನು ಗಮನಿಸಲಾಗಿದ್ದು, ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಪ್ರಯತ್ನ ನಡೆದಿದೆ.

ಬಂದ್‌ಗೆ ವ್ಯಾಪಾರಸ್ಥರ ಬೆಂಬಲ?

ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಆದರೆ ಬಂದ್‌ಗೆ ವಿವಿಧ ವರ್ಗಗಳಿಂದ ಎಷ್ಟರ ಮಟ್ಟಿಗೆ ಬೆಂಬಲ ದೊರೆಯಲಿದೆ ಎಂಬುದು ದಿನದ ಬೆಳವಣಿಗೆಗಳಿಂದ ಸ್ಪಷ್ಟವಾಗಲಿದೆ.

ಮೇಲ್ಭದ್ರ ನೀರಿನ ವಿಚಾರ ದಾವಣಗೆರೆ ಜಿಲ್ಲೆಯ ರೈತರ ಪಾಲಿಗೆ ದೀರ್ಘಕಾಲದ ಪ್ರಮುಖ ವಿಷಯವಾಗಿದ್ದು, ಇದೀಗ ಈ ಬೇಡಿಕೆ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದೆ. ಇದರ ಜತೆಗೆ ಗುಟ್ಕಾ ಮತ್ತು ಪಾನ್‌ ಮಸಾಲಾ ನಿಷೇಧದ ಬೇಡಿಕೆಯನ್ನೂ ಮುನ್ನೆಲೆಗೆ ತರುವ ಮೂಲಕ ಬಿಜೆಪಿ ರೈತ ಮೋರ್ಚಾ ಹೋರಾಟಕ್ಕೆ ವ್ಯಾಪಕ ಸ್ವರೂಪ ನೀಡಲು ಮುಂದಾಗಿದೆ.

ಒಟ್ಟಿನಲ್ಲಿ, ಮೇಲ್ಭದ್ರ ನೀರು ಬಿಡುಗಡೆ ಮತ್ತು ಗುಟ್ಕಾ–ಪಾನ್‌ ಮಸಾಲಾ ನಿಷೇಧ ಎಂಬ ಎರಡು ಪ್ರಮುಖ ಬೇಡಿಕೆಗಳೊಂದಿಗೆ ದಾವಣಗೆರೆಯಲ್ಲಿ ಬಂದ್‌ ಹಾಗೂ ಪ್ರತಿಭಟನೆ ಕಾವು ಪಡೆದಿದ್ದು, ಸರಕಾರದ ಮುಂದಿನ ಪ್ರತಿಕ್ರಿಯೆ ಇದೀಗ ಕುತೂಹಲ ಮೂಡಿಸಿದೆ.

Continue Reading

ದಿನದ ಸುದ್ದಿ

ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ

Published

on

Prajaseva Abhiyana: ಇನ್ಮುಂದೆ ಕಚೇರಿಗೆ ಅಲೆದಾಟ ಬೇಡ; ಜನರ ಮನೆ ಬಾಗಿಲಿಗೇ ಸರ್ಕಾರ, ಸೆ.5ರಿಂದ ‘ಪ್ರಜಾಸೇವಾ’ಗೆ ಚಾಲನೆ!

ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.

ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.

ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ

  • ಸೆಪ್ಟೆಂಬರ್ 5ರಿಂದ ಕೂಡ್ಲಿಗಿಯಲ್ಲಿ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ
  • ಪ್ರತಿ ಶನಿವಾರ ತಾಲ್ಲೂಕು/ಹೋಬಳಿ ಮಟ್ಟದಲ್ಲಿ ಜನಸಂಪರ್ಕ ಸಭೆ
  • ಬುಧವಾರ ತಾಲ್ಲೂಕು, ಉಪವಿಭಾಗ ಮತ್ತು ಜಿಲ್ಲಾ ಮಟ್ಟದಲ್ಲಿ ಮೂರು ಹಂತದ ಪರಿಶೀಲನೆ
  • ಗ್ರಾಮ ಒನ್ ಕೇಂದ್ರ ಹಾಗೂ ಸಭಾ ಸ್ಥಳದಲ್ಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ವ್ಯವಸ್ಥೆ
  • 1902 ಸಹಾಯವಾಣಿ ಮತ್ತು IPGRS ಮೂಲಕ ಕುಂದುಕೊರತೆ ದಾಖಲಿಸುವ ಅವಕಾಶ

http://Visit : www.suddidina.com

ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ

ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.

ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.

ಗ್ರಾಮ ಒನ್‌ನಲ್ಲೇ ಅರ್ಜಿ ಸಲ್ಲಿಕೆ

ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.

ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.

ಬುಧವಾರ ಮೂರು ಹಂತದ ಪರಿಶೀಲನೆ

ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.

ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.

ಸ್ಥಳದಲ್ಲೇ ಮಂಜೂರಾತಿ, ಆನ್‌ಲೈನ್‌ನಲ್ಲಿ ಸ್ಥಿತಿ

ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.

ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.

ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ

ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

Continue Reading

ದಿನದ ಸುದ್ದಿ

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

Published

on

kalaburagi-municipal-corporation-mayor-deputy-mayor-election-congress-win
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.

ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ

ಈ ಚುನಾವಣೆಯಲ್ಲಿ 21ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.

ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.

ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು

20ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.

ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ

ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.

ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.

ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Continue Reading
Advertisement

Title

ದಿನದ ಸುದ್ದಿ17 hours ago

ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್‌ ಖರೀದಿಗೂ ಎದುರಾಗುತ್ತಿದೆ ಒತ್ತಡ

ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ...

ದಿನದ ಸುದ್ದಿ17 hours ago

ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!

ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ...

ಸಿನಿ ಸುದ್ದಿ18 hours ago

ಅಭಿಮಾನಿಗಳ ಸಂಭ್ರಮದಿಂದ ದೂರ ಕಿಚ್ಚನ ಬರ್ತ್‌ಡೇ; 53ನೇ ವಸಂತದಲ್ಲಿ ಸುದೀಪ್‌ ಸಿನಿಮಾ ಸರ್ಪ್ರೈಸ್‌ಗೆ ಕೌಂಟ್‌ಡೌನ್!

ಸುದ್ದಿದಿನ,ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೆ ಇಂದು, ಸೆಪ್ಟೆಂಬರ್‌ 2, ವಿಶೇಷ ದಿನ. 53ನೇ ವಸಂತಕ್ಕೆ ಕಾಲಿಡುತ್ತಿರುವ ಸುದೀಪ್‌, ಈ ಬಾರಿ ತಮ್ಮ...

ದಿನದ ಸುದ್ದಿ18 hours ago

ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ

ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ...

ನಿತ್ಯ ಭವಿಷ್ಯ18 hours ago

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ...

ದಿನದ ಸುದ್ದಿ2 days ago

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ: 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ

ಸುದ್ದಿದಿನ,ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವಿ ಹಾಗೂ ಪಿಯುಸಿ-ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಅವಕಾಶ ಕಲ್ಪಿಸಲು ಸಜ್ಜಾಗಿದೆ. ವಿವಿಧ ಇಲಾಖೆಗಳಲ್ಲಿನ...

ದಿನದ ಸುದ್ದಿ2 days ago

ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು

ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ....

ದಿನದ ಸುದ್ದಿ2 days ago

ಅಪೌಷ್ಟಿಕತೆ ನಿವಾರಣೆಗೆ ಹೊಸ ಹೆಜ್ಜೆ; ಶಾಲೆ ಮುಗಿಯುವ ಮುನ್ನ ಮಕ್ಕಳಿಗೆ ಪೌಷ್ಟಿಕ ತಿನಿಸು

ಸುದ್ದಿದಿನ,ಹೂವಿನಹಡಗಲಿ: ಗಣಿ ಚಟುವಟಿಕೆಗಳಿಂದ ಬಾಧಿತ ಪ್ರದೇಶಗಳ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆ ಸುಧಾರಣೆಗೆ ಕರ್ನಾಟಕ ಗಣಿ ಮತ್ತು ಪರಿಸರ ಪುನಸ್ಥಾಪನೆ ನಿಗಮ (ಕೆಎಂಆರ್‌ಸಿಇ) ಹೊಸ ಹೆಜ್ಜೆ ಇಟ್ಟಿದೆ....

ಕ್ರೀಡೆ2 days ago

ಕಲ್ಲು-ಮುಳ್ಳಿನ ದಾರಿಯಲ್ಲೂ ನಿಲ್ಲದ ಹೆಜ್ಜೆ; ತಾಯಿಯ ಛಲಕ್ಕೆ ಮ್ಯಾರಥಾನ್‌ನಲ್ಲಿ ಪ್ರಥಮ ಸ್ಥಾನ

ಸುದ್ದಿದಿನ,ಮುಂಬಯಿ: ಬದುಕಿನಲ್ಲಿ ಎದುರಾಗುವ ಸಂಕಷ್ಟಗಳು ಕೆಲವೊಮ್ಮೆ ಮನುಷ್ಯನನ್ನು ಕುಗ್ಗಿಸುತ್ತವೆ. ಆದರೆ ತಾಯಿಯೊಬ್ಬಳಿಗೆ ಮಕ್ಕಳ ಭವಿಷ್ಯದ ಕನಸು ದೊಡ್ಡದಾಗಿದ್ದರೆ, ಆಕೆಯ ಮುಂದೆ ನೋವು, ಬಡತನ, ಅಡೆತಡೆ ಯಾವುದೂ ನಿಲ್ಲುವುದಿಲ್ಲ....

ದಿನದ ಸುದ್ದಿ2 days ago

ಮೈಸೂರು ದಸರಾದಲ್ಲಿ ಕಂಬಳದ ಕಳೆ: ಕೋಣಗಳ ಓಟಕ್ಕೆ ಭರದ ಸಿದ್ಧತೆ, ಪರಿಸರ ವಿವಾದವೂ ತೀವ್ರ

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಾಂಸ್ಕೃತಿಕ ವೈವಿಧ್ಯಕ್ಕೆ ಈ ಬಾರಿ ಕರಾವಳಿಯ ಕಂಬಳ ಮತ್ತೊಂದು ಆಯಾಮ ನೀಡಲಿದೆ. ಸಾತಗಳ್ಳಿಯ 25 ಎಕರೆ ಪ್ರದೇಶದಲ್ಲಿ ಕಂಬಳ ಆಯೋಜನೆಗೆ ಸಿದ್ಧತೆಗಳು...

Trending