ದಿನದ ಸುದ್ದಿ

ಚುನಾವಣಾ ಬಿಗಿ ಬಂದೋಬಸ್ತ್ | ಮತಗಟ್ಟೆ, ಸಿಬ್ಬಂದಿ, ಚೆಕ್ ಪೋಸ್ಟ್ ಗಳಿಷ್ಟು..!

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಮುಕ್ತ ಮತ್ತು ನ್ಯಾಯ ಸಮ್ಮತ ಮತದಾನಕ್ಕಾಗಿ ವ್ಯಾಪಕ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ 304 ಡಿವೈಎಸ್‌ಪಿಗಳು ಸೇರಿದಂತೆ 84 ಸಾವಿರದ 119 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅವಶ್ಯಕತೆಗೆ ಅನುಗುಣವಾಗಿ ಅಧಿಕಾರಿ/ಸಿಬ್ಬಂದಿಗಳ ಕೊರತೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಹೊರ ರಾಜ್ಯಗಳಿಂದ ಸುಮಾರು 8.500 ಪೊಲೀಸ್ ಅಧಿಕಾರಿ/ಸಿಬ್ಬಂದಿ ಹಾಗೂ ಗೃಹ ರಕ್ಷಕ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕಾಗಿ ಪಡೆಯಲಾಗಿದೆ. 650 ಸಿಎಪಿಎಫ್ ಕಂಪನಿಗಳ ಜೊತೆಗೆ ರಾಜ್ಯ ಸಶಸ್ತ್ರ ಮೀಸಲು ಪಡೆಯನ್ನು ಸಹ ನಿಯೋಜಿಸಲಾಗಿದೆ. ಮತದಾನ ದಿನದಂದು 1 ಲಕ್ಷದ 56 ಸಾವಿರ ಪೊಲೀಸರನ್ನು ಬಂದೋಬಸ್ತ್‌ಗಾಗಿ ಬಳಸಿಕೊಳ್ಳಲಾಗುತ್ತಿದೆ.

ಒಟ್ಟು ಮತಗಟ್ಟೆಗಳು

ರಾಜ್ಯದಲ್ಲಿ ಒಟ್ಟು 18 ಸಾವಿರದ 282ಮತಗಟ್ಟೆಗಳಿದ್ದು, ಅದರಲ್ಲಿ 11 ಸಾವಿರದ 417ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಅನುಗುಣವಾಗಿ ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚುವರಿಯಾಗಿ ಸಿಎಪಿಎಫ್ ಕಂಪನಿಗಳನ್ನು ನಿಯೋಜಿಸಲಾಗಿದೆ.

ಚೆಕ್ ಪೊಸ್ಟ್

ಮತದಾನ ದಿನದಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಮತ್ತು ಚುನಾವಣಾ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ 700 ಕ್ಕೂ ಹೆಚ್ಚು ವಿಚಕ್ಷಣಾ ದಳಗಳನ್ನು ನೇಮಿಸಲಾಗಿದೆ. ಸೂಕ್ಷ್ಮ ಪ್ರದೇಶಗಳನ್ನೊಳಗೊಂಡಂತೆ ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲಾ ಗಡಿಭಾಗದಲ್ಲಿ ಸುಮಾರು 700 ಕ್ಕೂ ಹೆಚ್ಚು ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ.

ವಾರೆಂಟ್

ಕಳೆದ 6 ತಿಂಗಳಿನಿಂದ ಜಾರಿ ಆಗದೆ ಇರುವ 5.500 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿ ಮಾಡಲಾಗಿದೆ. ಕಳೆದ 3 ತಿಂಗಳಲ್ಲಿ ಒಟ್ಟು 24 ಸಾವಿರದ 959ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 30 ಸಾವಿರದ 418 ಭದ್ರತಾ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವುಗಳಲ್ಲಿ ಸನ್ನಡತೆ ಆಧಾರದ ಮೇಲೆ 53 ಸಾವಿರದ 406ವ್ಯಕ್ತಿಗಳನ್ನು ಬಾಂಡ್ ಒವರ್ ಮಾಡಲಾಗಿದೆ.

ಪ್ರಕರಣ

ಚುನಾವಣೆಯಲ್ಲಿ ಕಾನೂನು ಸುವ್ಯವಸ್ಥೆಗೆ ತೊಡಕಾಗದಂತೆ ಶಾಂತಿಯುತವಾದ ಮತದಾನ ನಡೆಯಲು ಒಟ್ಟು 714 ವ್ಯಕ್ತಿಗಳ ವಿರುದ್ಧ ಗಡಿಪಾರು ಕಾಯ್ದೆಯಡಿ ಕಾನೂನು ಕ್ರಮ ಕೈಗೊಂಡಿದ್ದು, ಶಾಂತಿಯುತ ಮತದಾನಕ್ಕಾಗಿ 68 ಹವ್ಯಾಸಿ ಅಪರಾಧಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕ ನೆರೆಹೊರೆಯ ರಾಜ್ಯಗಳ ಗಡಿಭಾಗಗಳಲ್ಲಿ, ಶಾಂತಿ, ಸೌಹಾರ್ದತೆಯ ಕಾಪಾಡುವ ನಿಟ್ಟಿನಲ್ಲಿ ವಿವಿಧ ಹಂತದ ಅಧಿಕಾರಿಗಳಾದ ಐಜಿಪಿ, ಎಸ್‌ಪಿ, ಡಿಸಿ ಹಾಗೂ ಇತರೆ ಅಧಿಕಾರಿಗಳ ನೇತೃತ್ವದಲ್ಲಿ ಅಂತರ್ ರಾಜ್ಯ ಗಡಿಭಾಗದ ಜಿಲ್ಲೆಯ ಅಧಿಕಾರಿಗಳೊಂದಿಗೆ 50 ಕ್ಕೂ ಹೆಚ್ಚು ಸಮನ್ವಯ ಸಭೆಗಳನ್ನು ನಡೆಸಿದ್ದು, ಚುನಾವಣೆಯಲ್ಲಿ ನೆರೆ ರಾಜ್ಯಗಳಿಂದ ಅನಧಿಕೃತ ಹಣ, ಮದ್ಯ, ಉಚಿತ ಹಾಗೂ ಇತರೆ ವಸ್ತುಗಳು ಮತ್ತು ರೌಡಿ ಆಸಾಮಿಗಳು, ಸಮಾಜಘಾತುಕ ವ್ಯಕ್ತಿಗಳ ಚಲನವಲನದ ಬಗ್ಗೆ ಸೂಕ್ತ ನಿಗಾ ವಹಿಸುವ ಸಲುವಾಗಿ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ನಿಗಾವಹಿಸಲಾಗಿದೆ.

ನಿಯೋಜನೆ

ಚುನಾವಣಾ ಕರ್ತವ್ಯಕ್ಕಾಗಿ ನೇಮಿಸಲಾದ ಒಟ್ಟು 650 ಸಿಎಪಿಎಫ್ ಕಂಪನಿಗಳಲ್ಲಿ 101 ಸಿಆರ್.ಪಿ.ಎಫ್, 108 ಬಿಎಸ್‌ಎಫ್, 75 ಸಿಐಎಸ್‌ಎಫ್, 70 ಐಟಿಬಿಪಿ, 75 ಎಸ್‌ಎಸ್‌ಬಿ, 35 ಆರ್‍ಪಿಎಫ್ ಮತ್ತು 186ಎಸ್‌ಎಪಿ ಕಂಪನಿಗಳಿದ್ದು, ಅವುಗಳನ್ನು ಸೂಕ್ಷ್ಮ ವಿಧಾನಸಭಾ ಕ್ಷೇತ್ರಗಳ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ನಿಯೋಜಿಸಲಾಗಿದೆ.

ರಾಜಕೀಯ ಮತ್ತು ವೆಚ್ಚ ನಿರ್ವಹಣೆಯಲ್ಲಿ ಸೂಕ್ಷ್ಮವಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ರೂಟ್ ಮಾರ್ಚ್ ಮಾಡಿಸುವ ಮೂಲಕ ಕಾನೂನು ಸುವ್ಯವಸ್ಥೆ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಹಾಗೂ ಎಫ್‌ಎಸ್‌ಟಿ, ಎಸ್‌ಎಸ್‌ಟಿ, ಇವಿಎಂ ರಕ್ಷಣೆ, ಸೂಕ್ಷ್ಮ ಮತಗಟ್ಟೆಗಳನ್ನು ಹೊಂದಿರುವ ಕ್ಲಸ್ಟರ್ ಮತಗಟ್ಟೆಗಳಲ್ಲಿ ಈ ಕಂಪನಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ.

ಚುನಾವಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಶಾಂತಿಯುತ ಮತದಾನಕ್ಕಾಗಿ 650ಸಿಎಪಿಎಫ್ ಕಂಪನಿಗಳ ಜೊತೆಗೆ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 224 ಕೆ.ಎಸ್.ಆರ್.ಪಿ ತುಕಡಿಗಳ ಪಹರೆ ಹಾಕಲಾಗಿದೆ. ಹೆಚ್ಚುವರಿಯಾಗಿ ಜಿಲ್ಲಾ ನಗರ ಸಶಸ್ತ್ರ ಪಡೆಗಳನ್ನು ಸೇರಿ ಮತದಾನ ದಿನದಂದು ಒಟ್ಟಾರೆಯಾಗಿ 890 ಸ್ಟ್ರೈಕಿಂಗ್ ಪಾರ್ಟಿಗಳು ಚುನಾವಣಾ ಬಂದೋಬಸ್ತ್ ಕಾರ್ಯವನ್ನು ನಿರ್ವಹಿಸಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version