ದಿನದ ಸುದ್ದಿ

ಖಾಲಿ ಇರುವ 990 ಇಂಜಿನಿಯರ್‌ ಹುದ್ದೆಗಳಿಗೆ ಹೊರಗುತ್ತಿಗೆ ನೇಮಕ : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

Published

on

ಸುದ್ದಿದಿನ,ಧಾರವಾಡ: ಲೋಕೋಪಯೋಗಿ ಇಲಾಖೆಯಲ್ಲಿ ಕಿರಿಯ ಇಂಜಿನೀಯರ್‍ಗಳು ಹಾಗೂ ಸಹಾಯಕ ಇಂಜಿನೀಯರ್‍ಗಳ ಬಡ್ತಿ, ನಿವೃತ್ತಿ ಮತ್ತಿತರ ಕಾರಣಗಳಿಂದ ಸುಮಾರು 990 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ತಾತ್ಕಾಲಿಕವಾಗಿ ಡಿಪ್ಲೋಮಾ ಮತ್ತು ಬಿಇ ಪದವಿ ಪಡೆದಿರುವ ಅರ್ಹ ಯುವಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರಾದ ಗೋವಿಂದ ಕಾರಜೋಳ ಅವರು ಹೇಳಿದರು.

ನಗರದ ಸರ್ಕಿಟ್ ಹೌಸ್‍ನಲ್ಲಿ ಮಂಗಳವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನೀಯರ್‍ಗಳ ಕೊರತೆಯನ್ನು ತುರ್ತಾಗಿ ಸರಿದೂಗಿಸಲು ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಡಿಪ್ಲೋಮಾ ಮತ್ತು ಪದವೀಧರ ಇಂಜಿನೀಯರ್‍ಗಳನ್ನು ನೇಮಿಸಿಕೊಳ್ಳಲು ಇಂದು ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಲಾಗಿದೆ. ಸರ್ಕಾರದ ಅಧಿಕೃತ ಮಾನವ ಸಂಪನ್ಮೂಲ ಏಜೆನ್ಸಿಗಳಿಗೆ ಆಧ್ಯತೆ ನೀಡಲಾಗುವುದು. ಈ ಕ್ರಮದಿಂದ ಸ್ಥಳೀಯ ಯುವಕರು ಹಾಗೂ ಅರ್ಹ ಪದವಿಧರ ಇಂಜಿನೀಯರ್‍ಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಇಲಾಖೆಯ ಕಾರ್ಯಚಟುವಟಿಕೆಗಳಿಗೆ ಸಹಾಯವಾಗಲಿದೆ ಎಂದರು.

ರಾಜ್ಯದಲ್ಲಿ ಕಳೆದ 2019-20ನೇ ಸಾಲಿನಲ್ಲಿ 7 ಸಾವಿರ ಕೋಟಿ ರೂ. ಹಾಗೂ ಪ್ರಸಕ್ತ 2020-21ನೇ ಸಾಲಿನಲ್ಲಿ ಜುಲೈನಿಂದ ಅಕ್ಟೋಬರ್ ಅವಧಿಯಲ್ಲಿ ಸುಮಾರು 3,500 ಕೋಟಿ ರೂ. ಮೌಲ್ಯದ ರಸ್ತೆ, ಸೇತುವೆ, ಕಟ್ಟಡಗಳು ಪ್ರವಾಹದಿಂದ ಹಾನಿಗೀಡಾಗಿವೆ. ಲೋಕೋಪಯೋಗಿ ಇಲಾಖೆ ಅಷ್ಟೇ ಅಲ್ಲದೆ ಒಟ್ಟಾರೆಯಾಗಿ 2019-20ನೇ ಸಾಲಿನಲ್ಲಿ ರಾಜ್ಯದಲ್ಲಿ 35 ಸಾವಿರ ಕೋಟಿ ರೂ. ಹಾಗೂ 2020-21ನೇ ಸಾಲಿನಲ್ಲಿ ಸುಮಾರು 25 ಸಾವಿರ ಕೋಟಿ ರೂ. ಮೌಲ್ಯದ ಮನೆ, ರಸ್ತೆ, ಸೇತುವೆ, ನೀರಾವರಿ ಕಾಲುವೆ, ಅಚ್ಟುಕಟ್ಟು ರಸ್ತೆ, ಸಾರ್ವಜನಿಕ ಆಸ್ತಿ ಪಾಸ್ತಿ, ಬೆಳೆಗಳು ಸೇರಿ ಈವರೆಗೆ ಸುಮಾರು 60 ಸಾವಿರ ಕೋಟಿ ರೂ. ಹಾನಿಯಾಗಿದೆ.

ಪರಿಹಾರ ಕಾರ್ಯ ನಿರಂತರವಾಗಿ ನಡೆದಿದೆ. ಕಳೆದ ವರ್ಷ ರಸ್ತೆಗಳ ತಾತ್ಕಾಲಿಕ ದುರಸ್ತಿಗೆ 750 ಕೋಟಿ ರೂ. ಹಾಗೂ ಈ ವರ್ಷ ಈಗಾಗಲೇ 600 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ರಸ್ತೆ ನಿರ್ವಹಣೆ, ಗುಂಡಿ ತುಂಬುವ ಕಾಮಗಾರಿಗಳು ನಡೆಯುತ್ತಿವೆ. 7348 ಕಿ.ಮೀ. ಜಿಲ್ಲಾ ಮುಖ್ಯರಸ್ತೆಯ ತಗ್ಗು ಗುಂಡಿ ಮುಚ್ಚುವ ಕಾರ್ಯದಲ್ಲಿ ಶೇ.70 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಇರುವ ಕಾಮಗಾರಿಗಳನ್ನು ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. 3890 ಕಿ.ಮೀ. ರಾಜ್ಯ ಹೆದ್ದಾರಿ ತಗ್ಗು ಗುಂಡಿ ತುಂಬುವ ಕಾಮಗಾರಿಯಲ್ಲಿ ಶೇ.77 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

2019-20ನೇ ಸಾಲಿನಲ್ಲಿ 202.24 ಕೋಟಿ ರೂ. ವೆಚ್ಚದಲ್ಲಿ ವಿವಿಧ 835 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳಲ್ಲಿ 831 ಕಾಮಗಾರಿಗಳು ಪೂರ್ಣಗೊಂಡಿವೆ. 162.23 ಕೋಟಿ ರೂ.ಖರ್ಚು ಮಾಡಲಾಗಿದೆ. 2020-21 ನೇ ಸಾಲಿನಲ್ಲಿ ಒಟ್ಟು 2733 ಕಿ.ಮೀ. ರಸ್ತೆ 466 ಕಲ್ವರ್ಟ ಹಾಗೂ ಸೇತುವೆಗಳು ಹಾನಿಗೀಡಾಗಿ ಸುಮಾರು 2514 ಕೋಟಿ ರೂ. ನಷ್ಟವಾಗಿದೆ. ಪ್ರಸ್ತುತ ತುರ್ತು ದುರಸ್ತಿಗಾಗಿ 254 ಕೋಟಿ ರೂ.ಗಳನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ.

ಈ ಅನುದಾನದಲ್ಲಿ 472ಕಿ.ಮೀ. ರಸ್ತೆ ಹಾಗೂ 163 ಸೇತುವೆ, ಕಟ್ಟಡ, ಸಿ.ಡಿ. ಗಳನ್ನು ಆಧ್ಯತೆ ಮೇಲೆ ನಿರ್ಮಿಸಲಾಗುತ್ತಿದೆ. 2020-21ನೇ ಸಾಲಿನಲ್ಲಿ ಉತ್ತರ ವಲಯದ 1939.67 ಕಿ.ಮೀ. ಉದ್ದದ 76 ಜಿಲ್ಲಾ ಮುಖ್ಯ ರಸ್ತೆಗಳನ್ನು ರಾಜ್ಯ ಹೆದ್ದಾರಿಗಳನ್ನಾಗಿ ಹಾಗೂ 4303.07 ಕಿ.ಮೀ. ಉದ್ದದ 471 ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯರಸ್ತೆಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಇದರಿಂದ ಸರಾಸರಿ ರಾಜ್ಯ ಹೆದ್ದಾರಿ ಶೇ.28.65 ಹಾಗೂ ಜಿಲ್ಲಾ ಮುಖ್ಯರಸ್ತೆ ಶೇ.31.89 ರಷ್ಟು ಹೆಚ್ಚಳವಾಗಿದೆ. ಲೋಕೋಪಯೋಗಿ ಇಲಾಖೆಯ ಉತ್ತರ ವಲಯದ ವ್ಯಾಪ್ತಿಯಲ್ಲಿ ಬರುವ

ಕೆಎಸ್‍ಟಿಡಿಸಿಗೆ ನಿರೀಕ್ಷಣಾ ಮಂದಿರಗಳ ನಿರ್ವಹಣೆ : ಲೋಕೋಪಯೋಗಿ ಇಲಾಖೆಯ ಉತ್ತರ ವಲಯದ ವ್ಯಾಪ್ತಿಯಲ್ಲಿ ಬರುವ ಬಾದಾಮಿ ಗೆಸ್ಟ್‍ಹೌಸ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಹುಬ್ಬಳ್ಳಿಯ ಹಳೇಯ ನಿರೀಕ್ಷಣಾ ಮಂದಿರಗಳು, ಜೋಗ, ಕಣಕುಂಬಿ, ಸವದತ್ತಿ, ಉಳವಿ, ಕ್ಯಾಸೆಲ್‍ರಾಕ್‍ನಲ್ಲಿರುವ ಒಟ್ಟು 11 ನಿರೀಕ್ಷಣಾ ಮಂದಿರಗಳ ಪ್ರವಾಸಿ ಸ್ಥಳದಲ್ಲಿದ್ದು, ಇವುಗಳ ನಿರ್ವಹಣೆ ಹಾಗೂ ಉಸ್ತುವಾರಿಯನ್ನು ಪ್ರಾಯೋಗಿಕವಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‍ಟಿಡಿಸಿ) ಕ್ಕೆ ವಹಿಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ವಿಜಯಪುರದ ವಿಮಾನ ನಿಲ್ದಾಣಕ್ಕೆ ಭೂಮಿ ಪೂಜೆ : ವಿಜಯಪುರ ನಗರದ ಹೊರ ವಲಯದಲ್ಲಿ ಸುಮಾರು 220 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿಮಾನನಿಲ್ದಾಣ ಕಾಮಗಾರಿಗೆ ಗ್ರಾ.ಪಂ. ಚುನಾವಣೆ ನೀತಿ ಸಂಹಿತೆ ಮುಕ್ತಾಯವಾದ ಕೂಡಲೇ ಭೂಮಿಪೂಜೆ ನೆರವೇರಿಸಲಾಗುವುದು. ಈ ವಿಮಾನ ನಿಲ್ದಾಣ ಅಭಿವೃದ್ಧಿಯಿಂದ ಉತ್ತರ ಕರ್ನಾಟಕದ ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಹಾಗೂ ವಿಜಯಪುರ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಉಪಮುಖ್ಯಮಂತ್ರಿಗಳು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಲೋಕೋಪಯೋಗಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಗುರುಪ್ರಸಾದ, ಉತ್ತರ ವಲಯದ ಮುಖ್ಯ ಇಂಜಿನೀಯರ್ ಶಂಕರಗೌಡ ಪಾಟೀಲ, ಧಾರವಾಡ ವಿಭಾಗದ ಅಧೀಕ್ಷಕ ಇಂಜಿನೀಯರ್ ಶಿವಾನಂದ ನಾಯಕ್, ಕಾರ್ಯನಿರ್ವಾಹಕ ಇಂಜಿನೀಯರ್ ಎಸ್.ಬಿ. ಚೌಡಣ್ಣವರ ಮತ್ತಿತರರು ಉಪಸ್ಥಿತರಿದ್ದರು.

ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ: ಧಾರವಾಡದಲ್ಲಿ ಇಂದು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರಾದ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ಇಂದು ಲೋಕೋಪಯೋಗಿ ಮುಖ್ಯ ಅಭಿಯಂತರರ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ. ಗುರುಪ್ರಸಾದ, ಮುಖ್ಯ ಅಭಿಯಂತರ ಶಂಕರಗೌಡ ಪಾಟೀಲ, ಅಧೀಕ್ಷಕ ಇಂಜಿನಿಯರ್ ಶಿವಾನಂದ ನಾಯ್ಕ, ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಬಿ. ಚೌಡಣ್ಣವರ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version