ನೆಲದನಿ
ನುಡಿಯ ಒಡಲು – 18 | ಇಂಗ್ಲಿಶ್ ಮಾಧ್ಯಮ ಎಂಬ ಕಣ್ಕಟ್ಟು
- ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಇಂಗ್ಲಿಶ್ ಮಾಧ್ಯಮದಲ್ಲಿ ಶಿಕ್ಷಣ ಯಾಕಾಗಿ? ಯಾರಿಗಾಗಿ ಬೇಕು? ಎನ್ನುವ ಪ್ರಶ್ನೆಗಳನ್ನು ಎದುರುಗೊಳ್ಳದೇ, ಮಾಧ್ಯಮದ ಸುತ್ತಲೂ ನೆಲೆಗೊಂಡಿರುವ ಅಪಕಲ್ಪನೆಗಳನ್ನು ಪರಿಹರಿಸಿಕೊಳ್ಳುವುದು ಕಷ್ಟ. ಶಿಕ್ಷಣದ ಬಗೆಗಿನ ತಾತ್ವಿಕ ಇಲ್ಲವೇ ಪ್ರಾಯೋಗಿಕ ತಿಳಿವು ರಾಜಕೀಯ ಪ್ರೇರಿತವಾದರೆ, ಶೈಕ್ಷಣಿಕವಾಗಿ ಇದು ಕರ್ಯಸಾಧುವಾದ ನಿಲುವಾಗಲಾರದು. ಭಾಷೆಯೊಂದು ಅತ್ಯಂತ ಗಂಭೀರವಾದ ಗ್ರಹಿಕೆ. ಭಾಷೆಯನ್ನು ಕುರಿತ ನಮ್ಮ ತಿಳುವಳಿಕೆ ವೈಜ್ಞಾನಿಕವಾಗಿಲ್ಲ.
ಹಾಗಾಗಿ ಶಿಕ್ಷಣ ಮತ್ತು ಭಾಷೆಯ ಸಂಬಂಧವನ್ನು ಅರಿಯುವಲ್ಲಿ ನಾವು ಸೋತಿದ್ದೇವೆ. ಆದ್ದರಿಂದ ಇಂಗ್ಲಿಶು ಮಾಧ್ಯಮ ಹಾಗೂ ಇಂಗ್ಲಿಶು ಕಲಿಕೆ ನಮಗೆ ಯಾಕೆ ಮುಖ್ಯ? ಕಲಿಕೆಯೆಂದರೇನು? ಕಲಿಕೆಯ ವಿಧಾನ, ಪಠ್ಯಕ್ರಮ ಹಾಗೂ ಮೂಲಭೂತ ಸೌರ್ಯಗಳು ಹೇಗಿರಬೇಕು? ಎಂಬೆಲ್ಲ ಪ್ರಾಥಮಿಕ ಅನುಭವವು ನಮಗಿಲ್ಲ ಕೇವಲ ಇಂಗ್ಲಿಶು ಮೂಲಕ ಕಲಿಕೆಯನ್ನು ಶುರು ಮಾಡಿದರೆ, ಇವತ್ತು ನಾವು ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಹಾಗೂ ಔದ್ಯೋಗಿಕ ಬಿಕ್ಕಟ್ಟುಗಳಿಗೆ ಪರಿಹಾರಗಳು ದೊರೆಯುತ್ತವೆ ಎನ್ನುವ ಮೂಢನಂಬಿಕೆಯಲ್ಲಿದ್ದೇವೆ.
ನಮ್ಮ ಬದುಕಿನಲ್ಲಿ ಸಮಾನತೆಯನ್ನು ಸಾಧಿಸಲು, ಸಾಮಾಜಿಕ ಕಳಂಕಗಳಾದ ಅಸ್ಪೃಶ್ಯತೆ, ಜಾತೀಯತೆಯನ್ನು ಮೀರುವ ವಾತಾವರಣ ಇಂಗ್ಲಿಶು ಕಲಿಯುವುದರ ಮೂಲಕ ತನ್ನಷ್ಟಕ್ಕೆ ಸೃಷ್ಟಿಯಾಗುತ್ತದೆ ಎಂಬಂತಹ ತಪ್ಪು ನಂಬಿಕೆಯೂ ಇವತ್ತು ನಮ್ಮನ್ನು ಆವರಿಸಿಕೊಂಡಿದೆ.
ಭಾರತದಲ್ಲಿ ಇಂಗ್ಲಿಶು ಶಿಕ್ಷಣವನ್ನು ಆರಂಭಿಸುವುದರ ಹಿಂದಿನ ಉದ್ದೇಶವನ್ನು ಮೆಕಾಲೆ ತನ್ನ ಮಿನಿಟಿನಲ್ಲಿ ನಿಚ್ಚಳವಾಗಿಯೇ ಉಚ್ಚರಿಸಿದ್ದಾನೆ. ಅದೇನೆಂದರೆ, ‘ಭಾರತೀಯರು ರಕ್ತ, ಮಾಂಸ, ಮೈಬಣ್ಣದಲ್ಲಿ ಮಾತ್ರ. ಅವರ ಅಭಿಪ್ರಾಯಗಳು, ಆಲೋಚನಾಕ್ರಮಗಳು, ನೈತಿಕತೆ ಹಾಗೂ ಬೌದ್ಧಿಕ ಚಟುವಟಿಕೆಗಳು ಇಂಗ್ಲಿಶು ಆಗಿರಬೇಕು’ ಬ್ರಿಟಿಶರಿಗೆ ಅಡಿಯಾಳಾಗಿ ನಾವು ಕೆಲಸ ಮಾಡಬೇಕು ಎಂಬ ಮೆಕಾಲೆ ಮಾತಿನ ಈ ಒಳ ಉದ್ದೇಶವನ್ನು ಇಂದಿಗೂ ನಮ್ಮಿಂದ ಅರಿತುಕೊಳ್ಳಲು ಸಾಧ್ಯವಾಗಲಿಲ್ಲ.
ಪರಿಣಾಮವಾಗಿ ಬಂಡವಾಳಶಾಹಿ, ಬಹುರಾಷ್ಟ್ರೀಯ ಕಂಪನಿಗಳ ಬೆಳವಣಿಗೆಗೆ ದುಡಿಯುವ ಮಾನವ ಸೇವಾ ಸಂಪನ್ಮೂಲವನ್ನು ಇಂಗ್ಲಿಶಿನ ಮೂಲಕ ವಸಾಹತುಶಾಹಿ ಪ್ರಾಬಲ್ಯಕ್ಕೆ ಈಡಾದ ದೇಶಗಳಲ್ಲಿ ರೂಪಿಸಲಾಗುತ್ತದೆ. ಇದನ್ನೇ ನಾವು ನಮ್ಮ ಸಾಂಸ್ಕೃತಿಕ, ಆರ್ಥಿಕ ಹಾಗೂ ರಾಜಕೀಯ ವಿಮೋಚನೆಯ ದಾರಿಯೆಂದು ಮತ್ತು ಅಲಕ್ಷಿತ ಸಮೂಹಗಳ ಸಮಗ್ರ ಸಬಲೀಕರಣಗೊಳ್ಳುವ ಬಗೆಯೆಂದು ತೀರ್ಮಾನಿಸಿದ್ದೇವೆ.
ಹೊಸ ಸ್ವರೂಪದ ಆರ್ಥಿಕ, ಸಾಂಸ್ಕೃತಿಕ, ರಾಜಕೀಯ ಶೋಷಣೆಯ ಅಸ್ತ್ರವಾಗಿ ಇಂಗ್ಲಿಶು ತಲೆಯೆತ್ತಿದ್ದನ್ನು ಮರೆತು, ಅದರ ಬೆನ್ನುಹತ್ತಿ ಹೋಗುತ್ತಿರುವುದನ್ನು ಕಂಡು, ಪ್ರಭುತ್ವ ತನ್ನ ರಾಜಕೀಯ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ಧಾವಂತದಲ್ಲಿದೆ. ಇಂಗ್ಲಿಶು ಒಂದು ಉದ್ಯಮೆಯಾಗಿ ಸೃಷ್ಟಿಯಾಗಿದ್ದರ ಪರಿಣಾಮವಾಗಿ, ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಇಂಗ್ಲಿಶು ಮಾಧ್ಯಮದ ಮೂಲಕ ತಮ್ಮ ವ್ಯಾಪಾರವನ್ನು ನಡೆಸುತ್ತಿವೆ.
ಇಂಗ್ಲಿಶು ಮಾಧ್ಯಮದಿಂದ ಮಕ್ಕಳ ತಿಳಿವು ವಿಸ್ತಾರಗೊಳ್ಳುತ್ತದೆ, ವಿಶ್ವದಾದ್ಯಂತ ಲೀಲಾಜಾಲವಾಗಿ ಓಡಾಡುವ ಸಾಮರ್ಥ್ಯವನ್ನು ಇವರು ಪಡೆದುಕೊಳ್ಳುತ್ತಾರೆ ಅನ್ನುವುದು ತಪ್ಪು ಲೆಕ್ಕಾಚಾರವಾಗಿದೆ.
ಹೊಸ ಆರ್ಥಿಕ ನೀತಿಗಳಿಗೂ, ಜಾಗತೀಕರಣಕ್ಕೂ, ಉದ್ಯೋಗವಕಾಶಗಳಿಗೂ ಮತ್ತು ಇಂಗ್ಲಿಶು ಭಾಷೆಗೂ ಪರಸ್ಪರ ಸಂಬAಧವನ್ನು ಕಲ್ಪಿಸಲಾಗಿದೆ. ಒಟ್ಟಾರೆ ಲೋಕದ ಕಲ್ಯಾಣಕ್ಕೆ ಇಂಗ್ಲಿಶು ಭಾಷೆಯೇ ಕಾರಣ ಎಂಬ ಹುಸಿನಂಬಿಕೆ ನಮ್ಮ ಇವತ್ತಿನ ಶೈಕ್ಷಣಿಕ ಅವಘಡಗಳಿಗೆ ಪ್ರೇರಣೆಯಾಗಿದೆ. ಕಲಿಕೆ ಮತ್ತು ಬೋಧನೆ ಸೃಜನಶೀಲ ಕ್ರಿಯೆಯೇ ಹೊರತು ಅದೊಂದು ಕೇವಲ ಅನುಕರಣಾ ಪ್ರಕ್ರಿಯೆಯಲ್ಲ.
ಈ ವಾಸ್ತವವನ್ನು ಮನಗಾಣಲು ಇವತ್ತಿಗೂ ನಮಗೆ ಯಾಕೆ ಸಾಧ್ಯವಾಗಿಲ್ಲ? ಈಗಾಗಲೇ ನಮಗೆ ಚಿರಪರಿಚಿತವಾಗಿರುವ ಭಾಷೆಗಳ ಮೂಲಕ ಪಡೆಯುವ ಶಿಕ್ಷಣ ಸೃಜನಶೀಲವೂ, ಪ್ರಾಯೋಗಿಕವೂ ಆಗಿರುವುದಕ್ಕೆ ಸಾಧ್ಯವಿದೆ. ಹೌದು ತಾಯ್ನುಡಿ ಇಲ್ಲವೇ ಪರಿಸರದ ಭಾಷೆಯಲ್ಲಿ ಕಲಿಯಬೇಕು ಎನ್ನುವುದಕ್ಕೆ ಏನಾದರೂ ವೈಜ್ಞಾನಿಕ ಕಾರಣಗಳಿವೇ? ಎಂಬ ಪ್ರಶ್ನೆ ಇಲ್ಲಿ ತಲೆಯೆತ್ತಬಹುದು.
ಮಗು ಶಾಲೆಗೆ ಹೋಗುವಷ್ಟೊತ್ತಿಗೆ ತನ್ನ ತಾಯ್ನುಡಿ ಇಲ್ಲವೇ ಪರಿಸರದ ನುಡಿಯಲ್ಲಿ ಕಸುವನ್ನು ಪಡೆದಿರುತ್ತದೆ. ಯಾವುದೇ ನುಡಿಯನ್ನು ಪಡೆದುಕೊಳ್ಳುವ ಮಾನಸಿಕ ಕಸುವು ಮಗುವಿನಲ್ಲಿ ಅಂತಸ್ಥವಾಗಿರುತ್ತದೆ. ಆದರೆ ಆ ಕಸುವು ಒಂದು ನುಡಿಯಾಗಿ ಒಡಮೂಡಿ ಅಭಿವ್ಯಕ್ತಿಗೊಳ್ಳಲು ನುಡಿ ಸಾಮಾಗ್ರಿಗಳು ಮಗುವಿನ ಪರಿಸರದಲ್ಲಿಯೇ ಯಥೇಚ್ಛವಾಗಿ ಲಭಿಸಬೇಕು.
ಅಂದರೆ ಮಗುವಿನ ಮನೆ, ಬೀದಿ, ಸರ್ವಜನಿಕ ವಲಯಗಳಲ್ಲಿ ಆಯಾ ನುಡಿಯನ್ನು ಪಡೆಯುವುದಕ್ಕೆ ಬೇಕಾದ ವಿಪುಲವಾದ ನುಡಿ ಕಣಜ ದೊರೆಯತ್ತದೆ. ಆದರೆ ಇಂಗ್ಲಿಶು ನುಡಿ ಕಲಿಕೆಗೆ ಬೇಕಾದ ಇಂತಹ ವಾತಾವರಣ ಸಹಜವಾಗಿಯೇ ಒದಗಿಬರುವುದಿಲ್ಲ.
ಪ್ರಾಥಮಿಕ ಶಿಕ್ಷಣವನ್ನು ಪಡೆಯಲು ಇಂಗ್ಲಿಶು ದಾರಿಯಾಗದೇ ಕೇವಲ ಗೋಡೆಯಾಗುವ ಅಪಾಯವೂ ಇದೆ.
ಹಾಗಾಗಿಯೇ ಯುನಿಸ್ಕೋ ಸಂಸ್ಥೆಯ ವರದಿ ಪ್ರಕಾರ ಮಕ್ಕಳ ಶಿಕ್ಷಣವನ್ನು ನುಡಿ ೧ (ಎಲ್೧)ರಲ್ಲಿ ಕೊಡುವುದು ಸೂಕ್ತ. ಶಾಲೆಗೆ ಬರುವ ಮೊದಲೇ ಮಕ್ಕಳು ತಮ್ಮ ತಾಯ್ನುಡಿ/ಪರಿಸರದ (ನುಡಿ೧) ನುಡಿಯಲ್ಲಿ ಕಸುವನ್ನು ಪಡೆದುಕೊಂಡು ಕಲಿಕೆಯ ಪ್ರಕ್ರಿಯೆಗೆ ಸಜ್ಜಾಗಿರುತ್ತಾರೆ. ಇಂಗ್ಲಿಶು ನುಡಿ೨ರಲ್ಲಿ (ಎಲ್೨) ಕಲಿಕೆ ಹಾಗೂ ವಿಷಯ ಗ್ರಹಿಕೆಗೆ ಪೂರಕವಾದ ಎರಡೂ ಬಗೆಯ ಭಾಷಿಕ ವಾತಾವರಣ ಏಕಕಾಲಕ್ಕೆ ಮಗುವಿಗೆ ಲಭಿಸುವುದು ಅಸಾಧ್ಯ.
ಹಾಗೂ ಇಂತಹ ಹೊರಗಿನ ನುಡಿಯ ಮೂಲಕ ಕಲಿಕೆಯನ್ನು ಶುರುಮಾಡಿದರೆ, ಸರಿಯಾದ ಪಠ್ಯಕ್ರಮದ ಕೊರತೆ, ಸರಿಯಾದ ತರಬೇತಿಯಿಲ್ಲದ ಶಿಕ್ಷಕರು ಹಾಗೂ ಸುಸಜ್ಜಿತ ಮೂಲಭೂತ ಸೌರ್ಯಗಳ ಅಭಾವವಿರುವ ಸನ್ನಿವೇಶದಲ್ಲಿ ಇಂಗ್ಲಿಶು ಮಾಧ್ಯಮದಲ್ಲಿ ಶಿಕ್ಷಣ ಪಡೆಯುವುದೆಂದರೆ ಕೇವಲ ಅನುಕರಣೆಯಾಗುತ್ತದೆ. ಸಹಜವಾಗಿ ಸಂವಹನ ಮಾಡಲು ಅಸಮರ್ಥವಾಗಿದ್ದರೆ, ವಿಷಯವನ್ನು ಗ್ರಹಿಸುವ, ಯೋಚಿಸುವ ಇಲ್ಲವೇ ವಿಶ್ಲೇಷಿಸುವ ಮಾನಸಿಕ ಕಸುವನ್ನು ಮಕ್ಕಳಲ್ಲಿ ಸಜ್ಜುಗೊಳಿಸಲು ಸಾಧ್ಯವಿಲ್ಲ.
ನುಡಿ ಕೌಶಲವಾಗಿ (ಸ್ಕಿಲ್), ಕಸುವಾಗಿ (ಕಂಪಿಟೆನ್ಸ್) ಹಾಗೂ ಗ್ರಹಿಕೆಯಾಗಿ (ಕಂಪ್ರಹೆನ್ಸನ್) ರೂಪುಗೊಂಡಾಗ ಕಲಿಕೆಯೆಂಬುದು ಅರ್ಥಪೂರ್ಣ. ಇದು ಇಂಗ್ಲಿಶಿನ ಮೂಲಕ ಸಾಧ್ಯವೇ ಇಲ್ಲವೆಂದಲ್ಲ. ಆದರೆ ಈ ಅರ್ಥಪೂರ್ಣ ಕಲಿಕೆಗೆ ಬೇಕಾದ ಇಂಗ್ಲಿಶು ವಾತಾವರಣ ಮಕ್ಕಳಿಗಿಲ್ಲಿ ಸಿಗುವುದಿಲ್ಲ.
ಇಂಗ್ಲಿಶು ನುಡಿಯ ಬಗೆಗಿನ ಹಂಬಲಕ್ಕೆ ಕಾರಣಗಳನ್ನು ಹಲವು ಬಗೆಯಲ್ಲಿ ಗುರುತಿಸಬಹುದು; ಇಂಗ್ಲಿಶು ಕಲಿಕೆ ಈ ಲೋಕದ ಬಗೆಗಿನ ನಮ್ಮ ಅರಿವನ್ನು ವಿಸ್ತರಿಸುತ್ತದೆ. ಇದು ಕೇವಲ ಭಾಷೆಯಲ್ಲ ಇದೊಂದು ಗ್ರಹಿಕೆ. ಇಂಗ್ಲಿಶನ್ನು ಮಾತ್ನಾಡುವ ಜನರ ಸಾಮರ್ಥ್ಯವನ್ನು ತಾನು ಸೃಷ್ಟಿಸುವ ಉದ್ಯೋಗಾವಕಾಶದಿಂದ ಅದನ್ನು ಇಮ್ಮಡಿಗೊಳಿಸುತ್ತದೆ.
ಭಾಷೆಯನ್ನು ತಿಳಿದುಕೊಳ್ಳುವುದು ಅತ್ಯಂತ ಆಸಕ್ತಿದಾಯಕ ಸಂಗತಿ. ಯಾವುದೇ ನುಡಿಯ ಜೊತೆಗಿನ ನಂಟಸ್ತಿಕೆ ನಮ್ಮ ಭಾವಪ್ರಪಂಚವನ್ನು ವಿಸ್ತರಿಸುವ ಬಗೆಯಾಗಿದೆ. ಈ ಮಾತು ಎಲ್ಲ ನುಡಿಗಳಿಗೂ ಸಲ್ಲುತ್ತದೆ. ಜಗತ್ತಿನ ಯಾವುದೇ ಮೂಲೆಗೆ ಹೋದರೂ, ಇಂಗ್ಲಿಶು ಮಾತ್ನಾಡುವ ವ್ಯಕ್ತಿಗಳನ್ನು ಕಾಣುತ್ತೇವೆ. ಇಂಗ್ಲಿಶನ್ನು ಒಂದು ಅಧಿಕೃತ ಭಾಷೆಯನ್ನಾಗಿ ಮಾತ್ನಾಡುವ ಯುಕೆ, ಆಸ್ಟ್ರೇಲಿಯಾ, ಅಮೇರಿಕಾ, ಕೆನಡಾ, ಐರ್ಲ್ಯಾಂಡ್, ನ್ಯೂಜಿಲ್ಯಾಂಡ್, ಕೆರಿಬಿಯನ್ ದೇಶಗಳಲ್ಲಿಯೇ ನಾನ್ನೂರು ಮಿಲಿಯನ್ ಸ್ಥಳೀಯ ಭಾಷಿಕರನ್ನು ಗುರುತಿಸುತ್ತೇವೆ.
ಸರಳವಾಗಿ ಹೇಳಬೇಕೆಂದರೆ, ಇಂಗ್ಲಿಶು ಒಂದು ಅಂತರರಾಷ್ಟ್ರೀಯ ಭಾಷೆ. ಈ ಲೋಕದ ಪ್ರಮುಖ ಭಾಷೆಯನ್ನಾಗಿ ಇದನ್ನು ಮಾನ್ಯಮಾಡಲಾಗಿದೆ. ಜಗತ್ತಿನ ಕಾಲುಭಾದಷ್ಟು ಜನರು ಇಂಗ್ಲಿಶು ಒಂದನ್ನೇ ಮಾತ್ನಾಡುತ್ತಾರೆ ಎಂಬಂಶವನ್ನು ಅಂಕಿ-ಅಂಶಗಳು ಹೇಳುತ್ತವೆ. 1.6 ಶತಕೋಟಿ ಜನರು ಕೇವಲ ಶೇಕ್ಸಫಿಯರ್ನ ಮೂಲಕ ಇಂಗ್ಲಿಶನ್ನು ಅರ್ಥಮಾಡಿಕೊಳ್ಳುತ್ತಾರೆ.
ಇಂಗ್ಲಿಶು ಚಲನಚಿತ್ರಗಳನ್ನು ನಿರ್ಮಿಸುವ ಹಾಲಿವುಡ್ ಜಗತ್ತಿನ ದೊಡ್ಡ ಚಲನಚಿತ್ರೋದ್ಯಮವನ್ನು ಹೊಂದಿದೆ. ದಿಟ, ಚೀನಿಯನ್ನು ತಾಯ್ನುಡಿಯನ್ನಾಗಿ ಮಾತ್ನಾಡುವ 3 ಶತಕೋಟಿ ಜನರು ಜಗತ್ತಿನಾದ್ಯಂತ ಹರಡಿಕೊಂಡಿದ್ದಾರೆ. ಇವರಿಗೆ ಹೊರತಾಗಿ ಚೀನಿಯನ್ನು ಬೇರೆಯವರು ಯಾರೂ ಮಾತ್ನಾಡುವುದಿಲ್ಲ ಹಾಗೂ ಕಲಿಯುವ ಆಸಕ್ತಿಯನ್ನೂ ಹೊಂದಿಲ್ಲ. ಅಂತರರಾಷ್ಟ್ರೀಯ ವ್ಯಾಪಾರ ಒಪ್ಪಂದಗಳು ಇಂಗ್ಲಿಶನಲ್ಲಿಯೇ ನಡೆಯುತ್ತವೆ. ಇಂತಹ ವ್ಯವಹಾರಗಳಲ್ಲಿ ವ್ಯಾಪಕವಾಗಿ ಇಂಗ್ಲಿಶು ಮಾತ್ರ ಬಳಕೆಯಾಗುತ್ತದೆ.
ಜಗತ್ತಿನ ಶ್ರೇಷ್ಠ ವಿಶ್ವವಿದ್ಯಾಲಯಗಳಲ್ಲಿ ವಿಶೇಷ ಅಧ್ಯಯನಶಿಸ್ತುಗಳ ಶಿಕ್ಷಣವೂ ಇಂಗ್ಲಿಶಿನಲ್ಲಿಯೇ ನಡೆಯುತ್ತದೆ. ಇಂಗ್ಲಿಶು ಮಾತ್ನಾಡುವ ದೇಶಗಳಲ್ಲಿ ಇಂತಹ ಅವಕಾಶಗಳು ಇನ್ನಷ್ಟು ವ್ಯಾಪಕವಾಗಿ ದೊರೆಯುತ್ತವೆ. ಈ ಎಲ್ಲ ಕಾರಣಗಳಿಗಾಗಿ ಇಂಗ್ಲಿಶಿನ ಬೇಡಿಕೆ ವ್ಯಾಪಕವಾಗಿ ಹರಡಿಕೊಂಡಿದೆ. ಇದೆಲ್ಲದಕ್ಕಿಂತ ಮುಖ್ಯ ಮಾತೇನೆಂದರೆ, ಶಿಕ್ಷಣವು ನಮ್ಮ ಬದುಕುಗಳಿಗೆ ಅತೀ ಮುಖ್ಯ. ಆದರೆ ನಮ್ಮ ಬದುಕಿನ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸುವುದಕ್ಕೆ ಇಂಗ್ಲಿಶಿನಿಂದ ಮಾತ್ರ ಸಾಧ್ಯವೆಂಬ ಕಣ್ಕಟ್ಟು ನಮ್ಮನ್ನು ಆವರಿಸಿಕೊಂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕವಿತೆ | ನೆನಪು
- ರುದ್ರಪ್ಪ ಹನಗವಾಡಿ
ಅಪ್ಪನನ್ನು ಒಪ್ಪ ಮಾಡಿ
ವರ್ಷಗಳೇ ಕಳೆದವು ಮುವ್ವತ್ತೇಳು
ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ
ಅರಸರ ಮೀಸಲಾತಿ
ಬಸವಲಿಂಗಪ್ಪನವರ ಬೂಸಾ ಖ್ಯಾತಿ
ಮಲ ಹೊತ್ತು
ಮಲಗಿದ್ದ ಕಾಲಕ್ಕೆ
ಚುರುಕು ಮುಟ್ಟಿಸಿದ ಕಾಲ
ಹರೆಯದ ನನಗೆ
ಕಾಲೇಜ ಮೇಷ್ಟರ ಕೆಲಸ
ಸೂಟು ಬೂಟಿನ ವೇಷ
ಆ ಮೇಲೆ ಅಮಲದಾರಿಕೆ
ಎಲ್ಲ ನಡೆದಾಗಲೇ ಅವ್ವನನ್ನು
ಆಸ್ಪತ್ರೆಗೆ ಸೇರಿಸಿದ್ದು
ಕಾಲ ಕಳೆದು ಕೊಂಡು
ಕೋಲ ಹಿಡಿದದ್ದು
ನಿನ್ನೆ ಮೊನ್ನೆಯಂತೆ
ಬಾಲ್ಯವಿನ್ನು ಉಂಟೆಂಬಂತೆ
ಭಾವಿಸುವಾಗಲೇ ಅವ್ವನ ಸಾವು
ಅದರೊಟ್ಟಿಗೆ ಕಾಯದಾಯಾಸ ತೀರಿಸಲು
ಬಂದರೆ ಬೆಂಗಳೂರಿಗೆ
ರೌಡಿಗಳ ಕಾಟ
ಅಂಬೇಡ್ಕರ್ ಪಟದ ಕೆಳಗೆ
ದೌರ್ಜನ್ಯದ ದಂಡು
ಅಮಾಯಕರಿಗೆ ಗುಂಡು
ಕಂಡುಂಡ ಹಾದಿಯ ಗುಡಿಸಲುಗಳಲ್ಲೀಗ
ಮುಗಿಲು ಮುಟ್ಟೋ ಮಹಲುಗಳು
ಅಂತಲ್ಲಿ
ದೇಶ ವಿದೇಶಗಳ
ಅಹವಾಲುಗಳು
ಅವಿವೇಕಗಳು
ನೋಡ ನೋಡುತ್ತಿದ್ದಂತೆ
ಉಸಿರು ಬಿಗಿಹಿಡಿದ ಜನರ ಒಳಗೆ
ಒಳಪದರಗಳೊಳಗೆ ಕನಸ ಬಿತ್ತಿ
ಹಸಿರ ಹೊನ್ನು ಬಾಚಲು ಹವಣಿಸಿದ
ಬಿಳಿ ಜನರ ಆಟ
ಅರ್ಥವಾಗುವುದೇ ಎಲ್ಲ
ಗೋಣ ನೀಡುವರೆ
ಹೂತಿಟ್ಟ ಗೂಟಕ್ಕೆ ?
( ಚಿಂತಕ ರುದ್ರಪ್ಪ ಹನಗವಾಡಿ ಅವರ ‘ಊರು – ಬಳಗ’ ಕವನ ಸಂಕಲನದಿಂದ ‘ ನೆನಪು ‘ ಕವಿತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕೃತಿಯನ್ನು ಫ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ 2013 ರಲ್ಲಿ ಪ್ರಕಿಸಿದೆ.)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ; ಒಂದು ಚಿಂತನೆ
- ಮಹಾಂತೇಶ್.ಬಿ.ನಿಟ್ಟೂರು, ದಾವಣಗೆರೆ
ನಿಜ ಶರಣ ಶ್ರೀ ಅಂಬಿಗರ ಚೌಡಯ್ಯನವರ ಜೀವಿತ ಕಾಲ 12 ನೇ ಶತಮಾನದ ಬಸವಾದಿ ಶರಣರ ಕಾಲದಲ್ಲೇ ಇತ್ತು ಎಂಬುದು ಇತಿಹಾಸಕಾರರ ಸಂಶೋಧನೆಯಿಂದ ತಿಳಿದು ಬರುತ್ತದೆ. ಅವರ ಹುಟ್ಟೂರು ಹಾವೇರಿ ಜಿಲ್ಲೆಯ ಆಗಿನ ಶಿವಪುರ, ಈಗಿನ ಚೌಡಯ್ಯದಾನಪುರ. ಅವರ ತಂದೆಯ ಹೆಸರು ಶ್ರೀ ವಿರೂಪಾಕ್ಷ, ತಾಯಿಯ ಹೆಸರು ಪಂಪಾಂಭಿಕೆ, ಹೆಂಡತಿಯ ಹೆಸರು ಸುಲೋಚನಾ ಹಾಗೂ ಮಗನ ಹೆಸರು ಪುರವಂತ.
ಅಂಬಿಗ ವೃತ್ತಿಯ ಚೌಡಯ್ಯನವರು ಅಲ್ಲಮ ಪ್ರಭು ಮತ್ತು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಇದ್ದ ಒಬ್ಬ ಕ್ರಾಂತಿಕಾರಿ, ದಿಟ್ಟ, ನೇರ, ನಿಷ್ಠುರ ನುಡಿಯ ವಚನಕಾರ. ಕಲ್ಯಾಣ ಕ್ರಾಂತಿಯ ನಂತರ ಇವರು ತಮ್ಮ ವಚನಗಳ ಗಂಟನ್ನು ಹೊತ್ತು ಉಳವಿಗೆ ನಂತರ ತಮ್ಮ ಗ್ರಾಮವಾದ ತುಂಗಭದ್ರಾ ನದಿಯ ದಡದ ಮೇಲಿರುವ ಶಿವಪುರಕ್ಕೆ ಬಂದು ದೋಣಿ ನಡೆಸುವ ವೃತ್ತಿಯಲ್ಲಿ ನಿರತರಾಗಿ ವಚನ ರಚನೆ ಮಾಡಿರುವುದು ತಿಳಿದು ಬರುತ್ತದೆ.
ಚೌಡಯ್ಯನವರು ತಮ್ಮ ಜೀವಿತಾವಧಿಯಲ್ಲಿ ಅನೇಕ ಪವಾಡಗಳನ್ನು ಮಾಡಿರುತ್ತಾರೆ. ಗಿಡಮೂಲಿಕೆ ಔಷಧಿಗಳಿಂದ ಕ್ಷಯ ರೋಗ, ಕುಷ್ಠರೋಗ ಗುಣಪಡಿಸುವುದು, ಹಾವು ಕಚ್ಚಿದವರನ್ನು
ಬದುಕಿಸುವುದು ಇತ್ಯಾದಿ..
ಒಮ್ಮೆ ಗುತ್ತಲದ ಅರಸನು ಬೇಟೆಗಾಗಿ ಈ ಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ, ಆತನ ಸೇನಾಧಿಪತಿಯು ಹಾವು ಕಚ್ಚಿ ಮೃತಪಟ್ಟನು. ಇದರಿಂದಾಗಿ ಅರಸನಿಗೆ ಅತೀವ ದುಃಖವುಂಟಾಗಿ ರೋಧಿಸತೊಡಗಿದನು. ಆಗ ಆತನ ಸೈನಿಕನೊಬ್ಬನು ಶ್ರೀ ಚೌಡಯ್ಯನವರ ಪವಾಡಗಳ ಬಗ್ಗೆ ವಿವರಿಸಿ ಹೇಳಲಾಗಿ, ಅರಸನು ತನ್ನ ಮೃತ ಸೇನಾಧಿಪತಿಯ ಶರೀರವನ್ನು ಚೌಡಯ್ಯನವರಲ್ಲಿಗೆ ತಂದು ಆತನನ್ನು ಬದುಕಿಸುವಂತೆ ಕೇಳಿಕೊಂಡರು, ಆಗ ಚೌಡಯ್ಯನವರು ಸೇನಾಧಿಪತಿಯನ್ನು ಬದುಕಿಸುತ್ತಾರೆ. ಇದರಿಂದ ಸಂತುಷ್ಟನಾದ ಅರಸನು ಶಿವಪುರದ ಸುತ್ತಲಿನ ಪೂರ್ವ – ಪಶ್ಚಿಮಕ್ಕೆ 14 ಮೈಲು ಹಾಗೂ ಉತ್ತರ – ದಕ್ಷಿಣಕ್ಕೆ 7 ಮೈಲು ಸುತ್ತಳತೆಯ ಭೂಮಿಯನ್ನು ಚೌಡಯ್ಯನವರಿಗೆ ದಾನವಾಗಿ ನೀಡಿದನು.
ಆದರೆ ಚೌಡಯ್ಯನರು ವೈರಾಗ್ಯಶಾಲಿಯು, ಲೌಕಿಕದಲ್ಲಿ ನಿರಾಸಕ್ತಿ ಹೊಂದಿದವರು ಆಗಿದ್ದರಿಂದ, ಅರಸನು ಕೊಡಮಾಡಿದ್ದ ಸಂಪೂರ್ಣ ಜಮೀನನ್ನು ತನ್ನ ಗುರುಗಳಾದ ಶ್ರೀ ಶಿವದೇವರಿಗೆ ದಾನವಾಗಿ ನೀಡಿದರು ಎಂಬ ಉಲ್ಲೇಖವಿದೆ. ಅಂದಿನಿಂದ ಶಿವಪುರ ಗ್ರಾಮಕ್ಕೆ ‘ಚೌಡಯ್ಯದಾನಪುರ’ ಎಂದು ಹೆಸರು ಬರುತ್ತದೆ. ಮುಂದೆ ಚೌಡಯ್ಯನರು ಅಲ್ಲಿ ದೇಹ ತ್ಯಾಗ ಮಾಡಿದ್ದರಿಂದ ತುಂಗಭದ್ರಾ ನದಿಯ ದಡದಲ್ಲಿ ಈಗಲೂ ಚೌಡಯ್ಯನವರ ಸಮಾಧಿ ಗದ್ದುಗೆ ಇದೆ.
ಭ್ರಮಾಲೋಕದಲ್ಲಿ ವಿಹರಿಸುತ್ತಾ ಕುಳಿತ, ಆಡಂಬರದಲ್ಲಿ ಅಡ್ಡಾದಿಡ್ಡಿ ಅಡ್ಡಾಡುವ ಮಂದಿಯ ಕಪಾಳಕ್ಕೆ ಹೊಡೆದು ಎಚ್ಚರಿಸುವಂತಿವೆ ಚೌಡಯ್ಯನವರ ವಚನಗಳು. ಧಾರ್ಮಿಕ ಮೂಢನಂಬಿಕೆ ಬಿತ್ತುವವರಿಗೆ, ಸ್ವಾರ್ಥಿಗಳಾಗಿ ಬದುಕುವವರಿಗೆ, ಮುಖವಾಡ ಹಾಕಿ ಮಂಕು ಬೂದಿ ಎರಚುವವರಿಗೆ ಸಿಂಹ ಸ್ವಪ್ನದಂತೆ ಬೆಚ್ಚಿ ಬೀಳಿಸುತ್ತವೆ ನಿಜ ಶರಣ ಅಂಬಿಗರ ಚೌಡಯ್ಯನವರ ವಚನಗಳು. ಇದಕ್ಕೆ ತಾತ್ಪೂರ್ತಿಕವಾಗಿ ಕೆಲವು ವಚನಗಳು ಈ ಕೆಳಗಿನಂತಿವೆ;
“ಅಂಬಿಗ ಅಂಬಿಗ ಎಂದು ಕುಂದ ನುಡಿಯದಿರು/ನಂಬಿದರೆ ಒಂದೇ ಹುಟ್ಟಲಿ/ಕಡೆಯ ಹಾಯಿಸುವೆನೆಂದಾತನಂಬಿಗರ/ಚೌಡಯ್ಯ ನಿಜಶರಣನು”
ಈ ಮೇಲಿನ ವಚನ ಶ್ರೀ ಅಂಬಿಗರ ಚೌಡಯ್ಯನವರ ಸ್ವಾಭಿಮಾನ, ಧೈರ್ಯ, ನೇರ, ನಿರ್ಭಿಡೆಯ ವ್ಯಕ್ತಿತ್ವದ ಪ್ರತೀಕವಾಗಿದೆ.
ಹನ್ನೆರಡನೇ ಶತಮಾನದ ಸಂದರ್ಭದಲ್ಲಿ ಜಾತಿ ಮತ್ತು ವರ್ಗ ವ್ಯವಸ್ಥೆ ಎಷ್ಟರಮಟ್ಟಿಗಿತ್ತು ಎಂಬುದನ್ನು ಈ ವಚನ ಸೂಚಿಸುತ್ತದೆ. ಅಂತಹ ವಿಚಿತ್ರ, ವಿಕ್ಷಿಪ್ತ ಸನ್ನಿವೇಶದಲ್ಲಿ ಬಸವಾದಿ ಶರಣರು ಜಾತೀಯತೆ, ವರ್ಗ – ವರ್ಣ ವ್ಯವಸ್ಥೆಯ ವಿರುದ್ಧ ಬೃಹತ್ ಚಳುವಳಿಯನ್ನು ಕೈಗೊಂಡಾಗ ಅಂಬಿಗರ ಚೌಡಯ್ಯನವರ ಸತ್ಯನಿಷ್ಠೆ, ಪ್ರಾಮಾಣಿಕತೆಯ ವಚನಗಳು ಪ್ರಖರವಾಗಿ ಕಾಣಿಸುತ್ತವೆ. ಕೆಲವು ಢೋಂಗಿ ಭಕ್ತರಿಗೆ, ಕಪಟ ಸನ್ಯಾಸಿಗಳಿಗೆ ತನ್ನ ಖಾರವಾದ ವಚನಗಳ ಮೂಲಕ ಚುರುಕು ಮುಟ್ಟಿಸುತ್ತಾರೆ.
ಆಡಂಬರ ಮತ್ತು ದುರಾಸೆಯ ಜನರ ಮನಸ್ಥಿತಿ ಕಂಡು ಕೆಂಡಾಮಂಡಲವಾಗಿ ಪ್ರಸ್ತುತ ಪಡಿಸಿದ ಒಂದು ವಚನ ಇಂತಿದೆ;
“ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಕಾಳೋಗರನ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹಾರುವ ಪಕ್ಷಿಯನು/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೆಬ್ಬುಲಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೊಯ್ವ ಹೆಮ್ಮಾರಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಬರುವ ಉರಿ ಬಾಣವನು/ಇಂತೆಲ್ಲವನು ಒಂದೇ ಮಂತ್ರದಲ್ಲಿ ನಿಲ್ಲಿಸಬಹುದು;/ಲೋಭವೆಂಬ ಗ್ರಹಣ ಹಿಡಿದವರ ಏತರಿಂದಲೂ/ನಿಲ್ಲಿಸಲಾಗದು/ಈ ಲೋಭಕ್ಕೆ ದಾರಿದ್ರ್ಯವೇ ಔಷಧವು;/ಹೇಳಿದರೆ ಕೇಳರು, ತಾವು ತಿಳಿಯರು/ಶಾಸ್ತ್ರವ ನೋಡರು, ಭಕ್ತಿಯ ಹಿಡಿಯರು/ಇಂತಹ ಗೊಡ್ಡು ಮೂಳ ಹೊಲೆಯರಿಗೆ/ಕರ್ಮವೆಂಬ ಶರದ್ಧಿಯಲ್ಲಿ ಬಿದ್ದು ಹೊರಳಾಡುವುದೇ/ಸತ್ಯವೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು”
ಸಂಸಾರದ ಜಂಜಾಟದಲ್ಲಿ ಬಿದ್ದು ಒದ್ದಾಡುತ್ತಾ ಶಿವನನ್ನು ಮರೆತು ಹತ್ತು ಹಲವು ಚಿಂತೆಯಲ್ಲಿ ಮುಳುಗಿರುವ ಶವ ಮುಖದ ಜನರ ಸ್ಥಿತಿ-ಗತಿಯನ್ನು ಅರ್ಥಗರ್ಭಿತವಾಗಿ ಸಾದರಪಡಿಸುವ ಒಂದು ವಚನ ಇಂತಿದೆ;
“ಬಡತನಕೆ ಉಂಬುವ ಚಿಂತೆ/ಉಣಲಾದಡೆ ಉಡುವ ಚಿಂತೆ/ಉಡಲಾದಡೆ ಇಡುವ ಚಿಂತೆ/ಇಡಲಾದಡೆ ಹೆಂಡಿರ ಚಿಂತೆ/ಹೆಂಡಿರಾದರೆ ಮಕ್ಕಳ ಚಿಂತೆ/ಮಕ್ಕಳಾದಡೆ ಬದುಕಿನ ಚಿಂತೆ/ಬದುಕಾದಡೆ ಕೇಡಿನ ಚಿಂತೆ/ಕೇಡಾದಡೆ ಮರಣದ ಚಿಂತೆ/ಇಂತೀ ಹಲವು ಚಿಂತೆಯಲ್ಲಿಪ್ಪವರ ಕಂಡೆನು/ಶಿವನ ಚಿಂತೆಯಲ್ಲಿದ್ದಾತರೊಬ್ಬರನೂ ಕಾಣೆನೆಂದಾತ/ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು!”
ಸಮಯದ ಸದ್ಬಳಕೆ ಮಾಡಿಕೊಂಡು ಕಾಯಕ ಮಾಡುತ್ತಾ ಶಿವಭಕ್ತರಾಗಿ, ಜೀವನ ಪಾವನವಾಗಿಸುವಂತೆ ಕರೆ ನೀಡುವ ಒಂದು ವಚನ ಇಂತಿದೆ;
“ಗಾಳಿ ಬಿಟ್ಟಾಗ ತೂರಿಕೊಳ್ಳಿರಯ್ಯ/ಗಾಳಿ ನಿಮ್ಮ ಅಧೀನವಲ್ಲ ಕಂಡಯ್ಯ/ನಾಳೆ ತೂರಿಹೆನೆಂದಡಿಲ್ಲ ಕಂಡಯ್ಯ/ಶಿವಶರಣೆ ಎಂಬುದೊಂದು ಗಾಳಿ ಬಿಟ್ಟಲ್ಲಿ/ಬೇಗ ತೂರೆಂದನಂಬಿಗರ ಚೌಡಯ್ಯ”
ಕಾವಿ ಬಟ್ಟೆ ತೊಟ್ಟು, ಭಿಕ್ಷೆಗಾಗಿ ಜೋಳಿಗೆ ಹಾಕಿದವರೆಲ್ಲರೂ ಜಂಗಮರು, ಗುರುಗಳಾಗಲಾರರು ಎಂಬುದನ್ನು ವಿಡಂಬಿಸುವ ಒಂದು ವಚನ ಇಂತಿದೆ;
“ಕಂಥೆ ತೊಟ್ಟವ ಗುರುವಲ್ಲ/ಕಾವಿ ಹೊದ್ದವ ಜಂಗಮನಲ್ಲ/ಶೀಲ ಕಟ್ಟಿದವ ಶಿವಭಕ್ತನಲ್ಲ/ನೀರು ತೀರ್ಥವಲ್ಲ/ಕೂಳು ಪ್ರಸಾದವಲ್ಲ/ಹೌದೆಂಬವನ ಬಾಯ ಮೇಲೆ/ಅರ್ಧ ಮಣದ ಪಾದರಕ್ಷೆಯ ತೆಗೆದುಕೊಂಡು/ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ/ಟೊಕ ಟೊಕನೆ ಹೊಡೆ ಎಂದಾತ/ನಮ್ಮ ಅಂಬಿಗರ ಚೌಡಯ್ಯ”
ಹೀಗೆ ಬಸವಾದಿ ಶರಣರ ಸಮಾಜ ಸುಧಾರಣಾ ಚಳವಳಿಯಲ್ಲಿ ತಮ್ಮ ಅಮೂಲ್ಯ ಸೇವೆಯನ್ನು ಮುಡುಪಾಗಿಟ್ಟ ಶ್ರೀ ಅಂಬಿಗರ ಚೌಡಯ್ಯನವರು ತಮ್ಮ ಬದುಕಿನ ನೀತಿಯಿಂದ, ನಿಷ್ಠೆಯಿಂದ, ತೀಕ್ಷ್ಣ ಖಂಡನೆಯ ಬಂಡಾಯ ವಚನಗಳಿಂದ ಗಮನ ಸೆಳೆದು, ಅವರು ರಚಿಸಿದ ವಚನಗಳಿಗೆ ತಮ್ಮ ಹೆಸರನ್ನೇ ಅಂಕಿತವನ್ನಾಗಿಟ್ಟಿರುವದು ವಿಶೇಷವಾಗಿದೆ. ಸಮಾಜದ ಕೊಳೆಯನ್ನು ತೊಳೆಯುವ ನಿಟ್ಟಿನಲ್ಲಿ ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ಎದ್ದು ಕಾಣುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ
ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.
ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.
ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.
ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.
ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.
ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.
ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.
ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.
ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.
ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.
ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ್ಮಿಕ ಜಗತ್ತಿನಲ್ಲಿ ಸರ್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಕವಿತೆ | ನೆನಪು