Connect with us

ದಿನದ ಸುದ್ದಿ

ಕೈಗಾರಿಕೆಗಳಿಗಿಂತಲೂ ವಾಹನಗಳಿಂದಾಗುವ ಪರಿಸರ ಮಾಲಿನ್ಯವೇ ಹೆಚ್ಚು : ಪರಿಸರ ಅಧಿಕಾರಿ ಕೊಟ್ರೇಶ್

Published

on

ಸುದ್ದಿದಿನ,ದಾವಣಗೆರೆ: ದೇಶದಲ್ಲಿ ಕೈಗಾರಿಕೆಗಳಿಂದ ಉಂಟಾಗುವ ಪರಿಸರ ಮಾಲಿನ್ಯದ ಪ್ರಮಾಣಕ್ಕಿಂತಲೂ ವಾಹನಗಳು ಹೊರಸೂಸುವ ವಿಷಾನಿಲದಿಂದಲೇ ಹೆಚ್ಚು ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಜಿಲ್ಲಾ ಪರಿಸರ ಅಧಿಕಾರಿ ಕೊಟ್ರೇಶ್ ಅವರು ಹೇಳಿದರು.

ಸಾರಿಗೆ ಇಲಾಖೆ ವತಿಯಿಂದ ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ‘ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ’ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ದೇಶದಲ್ಲಿ ಆಗುತ್ತಿರುವ ಪರಿಸರ ಮಾಲಿನ್ಯದ ಶೇ. 65 ರಷ್ಟು ವಾಹನಗಳಿಂದಲೇ ಆಗುತ್ತಿದೆ. ಅಂದರೆ ಕೈಗಾರಿಕೆಗಳಿಂದ ಆಗುತ್ತಿರುವ ಪರಿಸರ ಮಾಲಿನ್ಯದ ಪ್ರಮಾಣಕ್ಕಿಂತಲೂ ವಾಹನಗಳಿಂದ ಆಗುತ್ತಿರುವ ಮಾಲಿನ್ಯ ಹೆಚ್ಚಿನ ಪ್ರಮಾಣದ್ದಾಗಿದೆ. ವಾಹನಗಳನ್ನು ಖರೀದಿಸುವವರು, ಕಾಲ ಕಾಲಕ್ಕೆ ಆಯಿಲ್ ಬದಲಾವಣೆ, ಸರ್ವೀಸಿಂಗ್ ಮಾಡಿಸುವಲ್ಲಿ ನಿರ್ಲಕ್ಷ್ಯ ತೋರುತ್ತಾರೆ. ಹೀಗಾಗಿ ಅಂತಹ ವಾಹನಗಳಿಂದ ಹೆಚ್ಚು ಹೊಗೆ ಹೊರಸೂಸಿ ಪರಿಸರ ಮಾಲಿನ್ಯವಾಗುತ್ತಿದೆ.

ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದ್ದರೂ, ಸಾರ್ವಜನಿಕರಿಂದ ಇನ್ನೂ ಪ್ಲಾಸ್ಟಿಕ್ ವಸ್ತು ಹಾಗೂ ಸಾಮಗ್ರಿಗಳ ಬಳಕೆ ನಿಂತಿಲ್ಲ. ಸಾರ್ವಜನಿಕರು ತಮ್ಮ ಜವಾಬ್ದಾರಿಯನ್ನರಿತು ನಡೆದುಕೊಳ್ಳದೇ ಹೋದಲ್ಲಿ ಪರಿಸರ ಮಾಲಿನ್ಯ ತಡೆಗಟ್ಟುವುದು ಕಷ್ಟಕರ ಎಂದು ಕೊಟ್ರೇಶ್ ಆತಂಕ ವ್ಯಕ್ತಪಡಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಕೆ. ಮಲ್ಲಾಡ ಮಾತನಾಡಿ, ಪ್ರತಿವರ್ಷ ನವೆಂಬರ್ ತಿಂಗಳಲ್ಲಿ ಮಾಲಿನ್ಯ ನಿಯಂತ್ರಣ ಮಾಸಾಚರಣೆ ಆಚರಿಸಲಾಗುತ್ತಿದೆ. ಈ ವರ್ಷ ‘ಮಾಲಿನ್ಯದಿಂದ ಮರಣ, ಮಾಡೋಣ ನಿಯಂತ್ರಣ’ ಎಂಬ ಘೋಷಾವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ದೇಶದ ಆರ್ಥಿಕತೆ ಸಾರಿಗೆ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದೆ.

ಹೀಗಾಗಿ ಸಾರಿಗೆ ವ್ಯವಸ್ಥೆ ಸದೃಢವಾಗಿದ್ದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ. ಕೋವಿಡ್ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡಿದ ಕಾರಣದಿಂದಾಗಿ ಸಮೂಹ ಸಾರಿಗೆ ವ್ಯವಸ್ಥೆ ಕುಸಿದಿದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಸಮೂಹ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವ ಅಗತ್ಯವಿದೆ.

ಕೊರೋನಾ ಕಾರಣದಿಂದಾಗಿ ಕಳೆದ ವರ್ಷಕ್ಕಿಂತಲೂ ಈ ವರ್ಷ ವಾಹನಗಳ ನೊಂದಣಿ ಹೆಚ್ಚಾಗಿದೆ. ಹೀಗಾಗಿ ವೈಯಕ್ತಿಕ ವಾಹನಗಳ ಓಡಾಟ ಹೆಚ್ಚಿರುವ ಕಾರಣದಿಂದ ವಾಯುಮಾಲಿನ್ಯವೂ ಹೆಚ್ಚಾಗಿದ್ದು, ಸಮಾಜದಲ್ಲಿ ಕಾಲ್ನಡಿಗೆ, ಸೈಕಲ್ ಬಳಕೆಗೆ ಉತ್ತೇಜನ ನೀಡುವಂತಾಗಬೇಕು. ಪ್ರತಿಯೊಬ್ಬರೂ ತಮ್ಮ ವಾಹನಗಳನ್ನು ಕಾಲಕಾಲಕ್ಕೆ ಸರ್ವೀಸಿಂಗ್ ಮಾಡಿಸಿಕೊಂಡು, ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಪ್ರತಿ ಆರು ತಿಂಗಳಿಗೊಮ್ಮೆ ವಾಹನದ ಎಮಿಷನ್ ಟೆಸ್ಟ್ ಮಾಡಿಸುವುದು ಕಡ್ಡಾಯವಾಗಿದ್ದು, ಇದರ ದಾಖಲೆಯನ್ನು ತಪ್ಪದೆ ಇಟ್ಟುಕೊಳ್ಳಬೇಕು, ತಪ್ಪಿದಲ್ಲಿ 1000 ರೂ. ದಂಡ ತೆರಬೇಕಾಗುತ್ತದೆ ಎಂದರು.

ಜಿಲ್ಲಾ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸೈಯದ್ ಸೈಫುಲ್ಲಾ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಹೆಚ್ಚಿನ ಹಾನಿಯಾಗುತ್ತಿದ್ದು, ಇದರ ತಯಾರಿಕೆಯನ್ನು ಸರ್ಕಾರ ನಿಷೇಧಿಸಬೇಕು. ಪರಿಸರ ಮಾಲಿನ್ಯ ತಡೆಗಟ್ಟಲೆಂದೇ ಸರ್ಕಾರ ಇಂಧನ ಹಾಗೂ ವಾಹನದ ಇಂಜಿನ್ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಂಡಿದ್ದು, ಇದೀಗ ಪರಿಸರ ಮಾಲಿನ್ಯ ಕಡಿಮೆಗೊಳಿಸುವ ಬಿಎಸ್-6 ಮಾದರಿಯ ವಾಹನಗಳ ತಯಾರಿಕೆಯಾಗುತ್ತಿದೆ.

ಸರಕು ಸಾಗಾಣಿಕೆ ವಾಹನಗಳು ನಿಗದಿತ ಪ್ರಮಾಣಕ್ಕಿಂತಲೂ ಅಧಿಕ ಭಾರ ಹೊತ್ತು ಸಂಚರಿಸಿದರೆ, ವಾಹನದ ಇಂಜಿನ್ ಮೇಲೆ ಹೆಚ್ಚಿನ ಒತ್ತಡವುಂಟಾಗಿ ವಾಹನ ಹೆಚ್ಚು ಹೆಚ್ಚು ಹೊಗೆ ಹೊರಸೂಸುತ್ತದೆ. ಇದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ. ಅಧಿಕಾರಿಗಳು ಇದನ್ನು ತಡೆಗಟ್ಟಬೇಕು. ಕೋವಿಡ್ ತಡೆಗೆ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಮಾಸ್ಕ್ ಬಳಕೆಯಿಂದ ಶ್ವಾಸಕೋಶದ ತೊಂದರೆ ಕಡಿಮೆಯಾಗಿದೆ. ಕೋವಿಡ್ ಇರಲಿ, ಇಲ್ಲದಿರಲಿ ಎಲ್ಲರೂ ಮಾಸ್ಕ್ ಧರಿಸುವುದನ್ನು ಮುಂದುವರೆಸಿದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳಿಗೆ ಕಡಿವಾಣ ಹಾಕಬಹುದು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಿರಿಯ ಮೋಟಾರು ವಾಹನ ನಿರೀಕ್ಷಕ ಪ್ರಮುದೇಶ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ತುಕಾರಾಂರಾವ್ ಬಿ.ವಿ., ಪ್ರಾದೇಶಿಕ ಸಾರಿಗೆ ಕಚೇರಿಯ ಅಧೀಕ್ಷಕ ಶಶಿಧರ್, ವಾಸುದೇವ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಹಮ್ಮಿಕೊಳ್ಳಲಾಗಿರುವ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಯ ಅಂಗವಾಗಿ ಪ್ರತಿನಿತ್ಯ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದ್ದು, ನ. 30 ಕ್ಕೆ ಮಾಸಾಚರಣೆಯ ಸಮಾರೋಪ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending