ದಿನದ ಸುದ್ದಿ
ಹೈನುಗಾರಿಕೆ ಉತ್ತೇಜನಕ್ಕೆ ಅಗತ್ಯ ಸಹಕಾರ : ಸಚಿವೆ ಶೋಭಾ ಕರಂದ್ಲಾಜೆ
ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಪಶು ಪೋಷಣೆ ಹಾಗೂ ಶರೀರ ಕ್ರಿಯೆ ವಿಜ್ಞಾನ ಸಂಸ್ಥೆಯಿಂದ ಬೆಂಗಳೂರಿನಲ್ಲಿ ನಿರ್ಮಿಸಲಾಗಿರುವ ವಿದ್ಯಾರ್ಥಿಗಳ ವಸತಿ ನಿಲಯ ಹಾಗೂ ಸಮುದಾಯ ಭವನವನ್ನು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ಲೋಕಾರ್ಪಣೆ ಮಾಡಿದರು.
ಕೃಷಿ ಸಂಶೋಧನೆ ಮತ್ತು ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ತ್ರಿಲೋಚನ್ ಮೊಹೊಪಾತ್ರ, ರಾಷ್ಟ್ರೀಯ ಪಶುಪೋಷಣೆ ಮತ್ತು ಶರೀರ ಕ್ರಿಯೆ ವಿಜ್ಞಾನ ಸಂಸ್ಥೆ ನಿರ್ದೇಶಕ ರಾಘವೇಂದ್ರ ಭಟ್ಟ ಮತ್ತಿತರರು ಉಪಸ್ಥಿತರಿದ್ದರು.
ಶೋಭಾ ಕರಂದ್ಲಾಜೆ ಮಾತನಾಡಿ, ಪಶುಸಂಗೋಪನೆ ಕೃಷಿಯ ಭಾಗವಾಗಿದ್ದು, ಹೈನುಗಾರಿಕೆ ಉತ್ತೇಜನಕ್ಕೆ ಅಗತ್ಯ ಸಹಕಾರವನ್ನು ಒದಗಿಸಲಾಗುತ್ತಿದೆ. ಕೃಷಿಯ ಮಾದರಿಯಲ್ಲೇ ಹೈನುಗಾರಿಕೆಗೂ ವಿವಿಧ ಸವಲತ್ತುಗಳನ್ನು ನೀಡಲಾಗಿದೆ. ರೈತರು ಕುರಿ, ಮೇಕೆ, ಕೋಳಿ ಸಾಕಾಣಿಕೆಯಂತಹ ಸಣ್ಣ ಉದ್ಯಮದಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸಬಲರಾಗಲು ಸರ್ಕಾರ ನೆರವು ನೀಡಲಿದೆ ಎಂದರು.
ಪ್ರಾಣಿಗಳ ಸುಸ್ಥಿರ ಬೆಳವಣಿಗೆ, ರೈತರ ಆರ್ಥಿಕ ಭದ್ರತೆ ಹಾಗೂ ಅಭಿವೃದ್ಧಿಯಲ್ಲಿ ವಿಜ್ಞಾನಿಗಳು, ವೈದ್ಯರು ಹಾಗೂ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243