ದಿನದ ಸುದ್ದಿ
ಮಾವು ಮತ್ತು ಗೇರು ಬೆಳೆಗಾರರಿಗೆ ಅಗತ್ಯ ಸಲಹೆಗಳು
ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ತೋಟಗಾರಿಕೆ ಇಲಾಖೆಯು ಮಾವಿನಲ್ಲಿ ಜಿಗಿಹುಳುಗಳು ಮತ್ತು ಗೇರು ಬೆಳೆಯಲ್ಲಿ ಟೀ ಸೊಳ್ಳೆ ಕೀಟಗಳ ಭಾದೆಗಳನ್ನು ತಡೆಗಟ್ಟಲು ಸೂಕ್ತ ಮುನ್ನೆಚರಿಕೆ ಕ್ರಮಗಳನ್ನು ವಹಿಸುವಂತೆ ರೈತರಿಗೆ ಸೂಚನೆ ನೀಡಿದೆ.
ಮಾವಿನಲ್ಲಿ ಜಿಗಿಹುಳುಗಳು ಮತ್ತು ಗೇರು ಬೆಳೆಯಲ್ಲಿ ಟೀ ಸೊಳ್ಳೆ ಕೀಟಗಳು ಮೃದು ಭಾಗಗಳಾದ ಚಿಗುರು ಮತ್ತು ಹೂ ಗೊಂಚಲುಗಳನ್ನು ಚೂಪಾದ ಕೊಂಬಿನಿದ ಚುಚ್ಚಿ ರಸ ಹೀರುವುದರಿಂದ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ 25 ರಿಂದ 75 ರಷ್ಟು ಫಸಲು ನಷ್ಟವಾಗುವುದು. ಆದ್ದರಿಂದ ರೈತರು ಈ ಹಂತದಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರಿಂದ ಮುಂದೆ ಆಗಬಹುದಾದ ಹಾನಿಗಳನ್ನು ತಡೆಗಟ್ಟಬಹುದು ಎಂದು ತೋಟಗಾರಿಕಾ ಉಪನಿರ್ದೇಶಕರು ತಿಳಿಸಿರುತ್ತಾರೆ.
ಮಾವು ಮತ್ತು ಗೇರು ಗಿಡಗಳಲ್ಲಿ ಕಂಡುಬರುವ ಒಣಗಿದ ರೆಂಬೆ ಕೊಂಬೆಗಳನ್ನು ಕತ್ತರಿಸಿ ತೆಗೆಯಬೇಕು. ಕತ್ತರಿಸಿದ ಗಿಡದ ಭಾಗಕ್ಕೆ ಬೋರ್ಡೋ ಅಥವಾ ಕಾಪರ್ ಆಕ್ಸಿ ಕ್ಲೋರೈಡ್ ದ್ರಾವಣ ಹಚ್ಚಬೇಕು. ಬುಡದ ಸುತ್ತಲೂ ಉಳುಮೆ ಮಾಡಿ, ಮಣ್ಣನ್ನು ಸಡಿಲಗೊಳಿಸಬೇಕು. ಗೇರು ಬೆಳೆಗೆ ಇಂದಿನಿಂದ ನೀರಾವರಿ ಪ್ರಾರಂಭಿಸಿಸಬಹುದು. ಆದರೆ ಮಾವಿನ ಬೆಳೆಗೆ ಸಣ್ಣ ಮಿಡಿಗಾಯಿ ಬರುವ ಹಂತದವರೆಗೂ ನೀರಾವರಿ ಪ್ರಾರಂಭಿಸಬಾರದು.
ಮಾವಿನಲ್ಲಿ ಹೂ ಮೊಗ್ಗು ಹೊರಟ ನಂತರ ಹೂ ಮೊಗ್ಗು ಮತ್ತು ಚಿಗುರು ತಿನ್ನುವ ಕೀಟಗಳ ನಿಯಂತ್ರಣಕ್ಕೆ ಡೈಮಿಥೋಯೇಟ್ 1.7 ಮಿಲೀ. ಅಥವಾ ಕ್ಲೋರೋಪೈರಿಫಸ್ 2 ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಇದರ ಜೊತೆಗೆ ಐ.ಐ.ಹೆಚ್.ಆರ್ ಮ್ಯಾಂಗೋ ಸ್ಪೆಷಲ್ 5 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.
ಜಿಗಿ ಹುಳು ಮತ್ತು ಬೂದಿ ರೋಗದ ನಿಯಂತ್ರಣಕ್ಕೆ ಡೆಕಾಮೆಥ್ರಿನ್ 1 ಮಿ.ಲೀ. ಆಥವಾ ಇಮಿಡಾಕ್ಲೋಪ್ರಿಡ್ 3 ಮಿ.ಲೀ. ಅಥವಾ 0.5 ಮಿ.ಲೀ ಸೈಪರ್ ಮೆಥ್ರಿನ್ ಇವುಗಳಲ್ಲಿ ಯಾವುದಾದರೂ ಒಂದು ಕೀಟನಾಶಕದ ಜೊತೆಗೆ ಕಾರ್ಬೆಂಡೆಜಿಯಂ 1 ಗ್ರಾಂ ಅಥವಾ ಮ್ಯಾಂಕೊಜೆಬ್ 2 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ 25-30 ದಿನಗಳಿಗೊಮ್ಮೆ ಅವಶ್ಯಕತೆಗನುಗಣವಾಗಿ ಸಿಂಪಡಿಬೇಕು.
ಗೋಡಂಬಿ ಬೆಳೆಯಲ್ಲಿ ಟೀ ಸೊಳ್ಳೆ ಮತ್ತು ಚಿಗುರು ತಿನ್ನುವ ಕೀಟಗಳ ನಿಯಂತ್ರಣಕ್ಕೆ ಡೈಮಿಥೋಯೇಟ್ 1.75 ಮಿ.ಲೀ ಅಥವಾ ಲ್ಯಾಂಬ್ಡಸೈಲೋಥ್ರಿನ್ 1 ಮಿ.ಲೀ. ಆಥವಾ ಕ್ಲೋರೋಪೈರಿಪಾಸ್ 50 ಇ.ಸಿ. 1.5 ಮಿ .ಲೀ ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಡಿಸಬೇಕು.
ರೈತರು ಈ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದರಿಂದ ಮಾವು ಮತ್ತು ಗೇರು ಬೆಳೆಗಳ ಉತ್ತಮ ನಿರ್ವಹಣೆ ಮಾಡಬಹುದಾಗಿರುತ್ತದೆ.
ವಿಷೇಶ ಸೂಚನೆ
ಔಷಧ ಸಿಂಪರಣೆಯನ್ನು ಹೂ ಬಿಡುವ ಮೊದಲು ಹಾಗೂ ಕಾಯಿ ಕಟ್ಟಿದ ಸಮಯದಲ್ಲಿ ಮಾಡಬೇಕು. ಯಾವುದೇ ಕಾರಣಕ್ಕೂ ಹೂ ಬಿಟ್ಟ ಸಮಯದಲ್ಲಿ ಸಿಂಪರಣೆ ಮಾಡಬಾರದು, ಗಿಡಗಳು ಹೂ ಬಿಟ್ಟ ಸಮಯದಲ್ಲಿ ಸಿಂಪರಣೆ ಮಾಡುವುದರಿಂದ ಪರಾಗಸ್ಪರ್ಶ ಕ್ರಿಯೆಗೆಂದು ಬರುವ ಜೇನುನೊಣಗಳಿಗೆ ಹಾನಿಯುಂಟಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243