Connect with us

ದಿನದ ಸುದ್ದಿ

‘ನಡುಪಂಥ’ ಎನ್ನುವ ಗುಳ್ಳೇನರಿ ಸಿದ್ದಾಂತ | ಭಾಗ – 1

Published

on

  • ಲೋಕೇಶ್ ಪೂಜಾರಿ, ಬೆಂಗಳೂರು

ಸ್ವಾರ್ಥಸಾಧನೆಯನ್ನು ಚೊಕ್ಕವಾಗಿ ಮಾಡಿ,ಮಾನವೀಯ ಮೌಲ್ಯಗಳನ್ನು ಅಡಿಗೆ ಹಾಕುವವರು ನಡುಪಂಥೀಯರು. ಅವರು ದೋಣಿಯ ನಡುವಲ್ಲಿ ಕೂತಿರುತ್ತಾರೆ.ಎತ್ತ ವಾಲಿದರೂ ಜಾರಿಬೀಳುವುದಿಲ್ಲ.

ಅವರನ್ನು ಗುರುತಿಸುವುದು ಸುಲಭ. ಅವರು ಮಹಾತ್ಮ ಗಾಂಧಿಯವರ ಪೋಟೋ ಹಾಕಿಕೊಂಡು,ಗೋಡ್ಸೆಯನ್ನೂ ಸಮರ್ಥಿಸುತ್ತಾರೆ.ಹಾಗೇ ಮುಂದುವರೆದು ಒಂದು ದಿನ ಕಾಡುಗಳ್ಳ ವೀರಪ್ಪನ್ ನನ್ನು ವಾಲ್ಮೀಕಿಗೂ ಹೋಲಿಸಬಹುದು. ಅದರಿಂದ ಅವರಿಗೆ ಲಾಭ ಇರಬೇಕು ಅಷ್ಟೇ .

ಒಬ್ಬ ಬರೆಯುವ ಬರಹಗಳು ಯುವಜನರಿಗೆ ತಪ್ಪು ಸಂದೇಶ ಕೊಡುತ್ತವೆ ಎಂದು ಯಾರಾದರೂ ಹೇಳಿದಾಗ.. ,ನಾನು ಬರೆಯುವುದು ಸಮಾಜ ಪರಿವರ್ತನೆ ಗೆ ಅಲ್ಲ ಎನ್ನುವಂತಹ ಭೈರಪ್ಪ ಪ್ರೇರಿತ ಉತ್ತರ ಕೊಡುವವರು ಬಹಳ ಜನ ಇದ್ದಾರೆ .
ನಮ್ಮ ಬರವಣಿಗೆಯಿಂದ ಹುಡುಗರು ಹಾಳಾದರೆ ಅದು ಸಮಾಜದ ತಪ್ಪು ಅಥವಾ ರಾಜಕೀಯ ದ ತಪ್ಪು ಎಂದು ತಿಪ್ಪೆ ಸಾರಿಸುವ ಅಂತವರ ಬಳಿ ವಾದ ಮಾಡುವುದು ಕಷ್ಟ.

ಓದು ಮತ್ತು ವಯಸ್ಸಿಗೆ ಬಹಳ ಸಂಬಂಧ ಇದೆ.
ಎಳವೆಯಲ್ಲಿ ಇಷ್ಟ ಪಟ್ಟು ಚಂದಮಾಮ ಓದುತ್ತಿದ್ದವರು ಹೈಸ್ಕೂಲ್ ಸೇರಿದ ಬಳಿಕ ಯೆಂಡಮೂರಿ ವೀರೇಂದ್ರನಾಥರ ಪುಸ್ತಕ ಓದುತ್ತಾರೆ. ಅವರು ಎಷ್ಟು ಯೆಂಡಮೂರಿಯ ಬರಹಗಳನ್ನು ಇಷ್ಟ ಪಡುತ್ತಾರೆಂದರೆ ,ಪ್ರತೀ ಕಾದಂಬರಿನೂ ಹುಡುಕಿ ಹುಡುಕಿ ಓದುತ್ತಾರೆ.
ಆದರೆ‌ ಆ ಸೆಳೆತ ಪಿಯುಸಿ ಮುಗಿದು ಡಿಗ್ರಿ ಓದುವ ತನಕ ಮಾತ್ರ .

ಹದಿನಾರರಿಂದ ಇಪ್ಪತ್ತರ ವಯಸ್ಸಿನ ಹೆಚ್ಚಿನವರು ಯೆಂಡಮೂರಿಯ ಬರಹಗಳನ್ನು ಇಷ್ಟ ಪಡುತ್ತಾರೆ. ಬಳಿಕ ಅವರಿಗೆ ತೇಜಸ್ವಿ ,ಕಾರಂತ ,ಬೈರಪ್ಪ ಇಷ್ಟವಾಗಲು ಶುರುವಾಗುತ್ತದೆ. ತಮ್ಮ ಆಯುಷ್ಯದಲ್ಲಿ ಬಹು ಭಾಗ ಇನ್ನೂ ಕಳೆಯಬೇಕಾಗಿರುವ ಯುವ ಜನರ ಓದುವ ರುಚಿ ಮತ್ತು ಬಹುಭಾಗದ ಆಯುಷ್ಯ ಕಳೆದು ಕೊಂಡು ಜೀವನಾನುಭವ ಪಡೆದು ಕೊಂಡಿರುವವರ ಓದುವ ರುಚಿ ಬೇರೆ ಬೇರೆ ಇರುತ್ತದೆ.

ಹದಿ ಹರೆಯದ ಮನಸ್ಸಿಗೆ ತಿರುಚಿದ ಇತಿಹಾಸ ಓದಲು ಕೊಡಬಾರದು‌. ಪ್ರತಿಯೊಂದಕ್ಕೂ ಪುರಾಣದ ಉದಾಹರಣೆ ಕೊಡಬಾರದು. ಬಹಳಷ್ಟು ನಾಗರೀಕತೆಗಳ ಹುಟ್ಟನ್ನು ಕಂಡ ಸನಾತನ ಭಾರತದಲ್ಲಿ ಲೆಕ್ಕವಿಲ್ಲದಷ್ಟು ಪುರಾಣಕತೆಗಳಿವೆ.

ಪತಿಯೊಂದಕ್ಕೂ ಪುರಾಣಕತೆಗಳನ್ನು ಉದಾಹರಣೆ ಕೊಡಬಹುದು. ” ಕಣ್ಣಾ ಮುಚ್ಚೇ , ಕಾಡೇ ಗೂಡೇ… ಉದ್ದಿನ ಮೂಟೆ ಉರುಳೇ ಹೋಯ್ತು'” ಅನ್ನುವುದನ್ನೂ ರಾಮಾಯಣ ಕ್ಕೆ ಲಿಂಕ್ ಮಾಡಿ,
ಧಶರಥ ಕಣ್ಣುಮುಚ್ಚಲಾಗಿ ,ರಾಮನಿಗೆ ಕಾಡೇ ಮನೆಯಾಗಿ ,ಉದ್ದಿನ ಮೂಟೆಯಂತಹಾ ರಾವಣ ಉರುಳೇ ಹೋದ ” ಎಂದು ಬರೆದು ಬಿಡಬಹುದು.

ಆದರೆ ಅದು ವಿತಂಡವಾದ ಅನ್ನಿಸಿಕೊಳ್ಳುತ್ತದೆಯೇ ಹೊರತು ವಾದ ಅಲ್ಲ. ಹಾಗೆ ವಾದ ಮಾಡುವವರು ತಾವು ತುಂಬಾ ಓದಿದ್ದೇವೆ. ತಾವು ಇತಿಹಾಸ ಶಾಸ್ತ್ರ ಜ್ಞರು ಮನಃಶಾಸ್ತ್ರರು ಎಂದೆಲ್ಲಾ ಇಷ್ಟುದ್ದ ಹೇಳಿಕೊಳ್ಳುತ್ತಾರೆ. ಓದಿದವರೆಲ್ಲಾ ಮಹಾ ಮಾನವತಾವಾದಿಗಳಾಗಿರುತ್ತಾರೆ ಎಂದು ಕೊಳ್ಳುವುದೂ ತಪ್ಪು. ಒಸಾಮಾ ಬಿನ್ ಲಾದೆನ್ ಕೂಡಾ ತುಂಬಾ ಓದಿದ್ದ ಇಂಜಿನಿಯರ್ ಆಗಿದ್ದ.

ಒಂದು ಕಡೆ ಮಹಾತ್ಮಾ ಗಾಂಧಿ ಬಗ್ಗೆ ಬರೆಯುತ್ತಾ ,ಇನ್ನೊಂದು ಕಡೆ ಗೋಡ್ಸೆಯನ್ನು ದಾರಿತಪ್ಪಿದ ದೇಶಭಕ್ತ ಎಂದು ಬಲವಾಗಿ ಬಿಂಬಿಸುವವರು ಸಮಾಜಕ್ಕೆ ಯಾವ ಸಂದೇಶ ನೀಡುತ್ತಾರೆ? ಗೋಡ್ಸೆಗೆ ಗಾಂಧಿ ನ ಕೊಲ್ಲಲು ಕಾರಣ ಇತ್ತು . ಹಾಗೆಯೇ ಗೌರಿ ಲಂಕೇಶ್ ,ಪನ್ಸಾರೆ ,ಕಲಬುರ್ಗಿ ಹಂತಕರಿಗೂ ಕಾರಣ ಇತ್ತು.

ಇಂತಹದೇ ಕಾರಣ ಇತ್ತು ಎಂದು ಸಮರ್ಥನೆ ಇಳಿಯುವವರು, ಅಂತಹಾ ಸಮರ್ಥನೆಗಳನ್ನು ಮನಸ್ಸಿಗೆ ತುಂಬಿಕೊಂಡು ಕೊಲೆಗಾರರಾಗುವ ಸಮೂಹವನ್ನೂ ಹುಟ್ಟುಹಾಕುತ್ತಿದ್ದೇವೆ ಎಂದು ಯಾಕೆ ಯೋಚಿಸುತ್ತಿಲ್ಲ. ಅವರ ಯೋಚನೆ ನಡುಪಂಥೀಯ ಇರಬಹುದು ,ಆದರೆ ಅವರುಗಳು ಸೈತಾನಿಯೇ ಹೊರತು ಸನಾತನಿ ಖಂಡಿತಾ ಅಲ್ಲ.

ಬಹಳಷ್ಟು ಜನರ ಪ್ರೊಪೈಲ್ ನಲ್ಲಿ ಗಾಂಧಿ ಪೋಟೋ ಇರುತ್ತದೆ. ಆ ತರಹ ಇಟ್ಟುಕೊಂಡವರಲ್ಲಿ ಎರಡು ವಿಧ,
ಒಂದೇ ಅವರು ಪಕ್ಕಾಗಾಂಧಿವಾದಿಯಾಗಿರುತ್ತಾರೆ .
ಅಥವಾ ಅವರ ಮನಸ್ಸು ತುಂಬಾ ಗೋಡ್ಸೆ ತುಂಬಿರುತ್ತಾನೆ.

ನಮ್ಮೂರಿನ ಕೆಲವರು ಬಿಲ್ಲವ ರಾಜಕಾರಣಿ ಅಥವಾ ಮುಖಂಡನ ಬಗ್ಗೆ ಸಿಕ್ಕಾಪಟ್ಟೆ ತಕರಾರು ಮಾಡಿ ಪೋಸ್ಟ್ ಹಾಕಿದ ಬಳಿಕ ಶ್ರೀ ನಾರಾಯಣ ಗುರುಗಳ ಪೋಟೋ ಪ್ರೊಫೈಲ್ ಗೆ ಹಾಕಿಕೊಳ್ಳುತ್ತಾರೆ. ಶ್ರೀ ನಾರಾಯಣ ಗುರುಗಳು ಒಂದು ಜಾತಿಯ ಗುರು ಅಲ್ಲ ,ಅವರು ವಿಶ್ವಗುರು ಅಂತಾ ಅವರಿಗೂ ಗೊತ್ತು. ಅದರೂ ಯಾವುದೋ ಒಂದು social chemistry ಚೆನ್ನಾಗಿ ಕೆಲಸ ಮಾಡುತ್ತದೆ ಎಂಬುದು ಅವರ ನರಿಬುದ್ದಿಗೆ ಚೆನ್ನಾಗಿ ಹೊಳೆದಿರುತ್ತದೆ.ಕಾಣದ ಕೈಗಳ ಪ್ರತಿರೋದವನ್ನು ಕಡಿಮೆ ಮಾಡುವ ನರಿಬುದ್ದಿ ಅದು.

ಎಷ್ಟೋ ಜನ ಮೀಸಲಾತಿಯನ್ನು ವಿರೋಧಿಸುವುದರಿಂದ ಹಿಡಿದು ಜಾತಿವಾದವನ್ನು ಪುರಸ್ಕರಿಸುವಷ್ಟು ಮನುವಾದೀ ಮನಸ್ಸು ಹೊಂದಿರುವವರೂ ಅಂಬೇಡ್ಕರ್ ರಂತಹಾ ಮಾನವತಾವಾದಿಯ ಪೋಟೋ ಹಾಕಿಕೊಂಡಿರುತ್ತಾರೆ.

ಯಾರ ಪ್ರೊಫೈಲ್ ನಲ್ಲಿ ಯಾವ ಪೋಟೋ ಇರುತ್ತದೆ ಎನ್ನುವುದರಿಂದ ಅವರ ಸ್ವಭಾವ ಗುಣಲಕ್ಷಣಗಳನ್ನು ಅರಿಯಲು ಸಾದ್ಯವಿಲ್ಲ. ನಡುಪಂಥೀಯ ಗುಳ್ಳೆನರಿಗಳ ಬಗ್ಗೆ ದಿನಕ್ಕೊಂದು ಪೋಸ್ಟ್ ಹಾಕಿದರೂ ವರ್ಷ ಕಳೆದರೂ ಮುಗಿಯದಷ್ಟು ಇದೆ. ಆದರೂ ನೂರು ಎಪಿಸೋಡ್ ಗಳ ಒಳಗೇ ಮುಗಿಸಲು ನೋಡುತ್ತೇನೆ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending