Connect with us

ದಿನದ ಸುದ್ದಿ

‘ನಡುಪಂಥ’ ಎನ್ನುವ ಗುಳ್ಳೇನರಿ ಸಿದ್ದಾಂತ | ಭಾಗ – 1

Published

on

  • ಲೋಕೇಶ್ ಪೂಜಾರಿ, ಬೆಂಗಳೂರು

ಸ್ವಾರ್ಥಸಾಧನೆಯನ್ನು ಚೊಕ್ಕವಾಗಿ ಮಾಡಿ,ಮಾನವೀಯ ಮೌಲ್ಯಗಳನ್ನು ಅಡಿಗೆ ಹಾಕುವವರು ನಡುಪಂಥೀಯರು. ಅವರು ದೋಣಿಯ ನಡುವಲ್ಲಿ ಕೂತಿರುತ್ತಾರೆ.ಎತ್ತ ವಾಲಿದರೂ ಜಾರಿಬೀಳುವುದಿಲ್ಲ.

ಅವರನ್ನು ಗುರುತಿಸುವುದು ಸುಲಭ. ಅವರು ಮಹಾತ್ಮ ಗಾಂಧಿಯವರ ಪೋಟೋ ಹಾಕಿಕೊಂಡು,ಗೋಡ್ಸೆಯನ್ನೂ ಸಮರ್ಥಿಸುತ್ತಾರೆ.ಹಾಗೇ ಮುಂದುವರೆದು ಒಂದು ದಿನ ಕಾಡುಗಳ್ಳ ವೀರಪ್ಪನ್ ನನ್ನು ವಾಲ್ಮೀಕಿಗೂ ಹೋಲಿಸಬಹುದು. ಅದರಿಂದ ಅವರಿಗೆ ಲಾಭ ಇರಬೇಕು ಅಷ್ಟೇ .

ಒಬ್ಬ ಬರೆಯುವ ಬರಹಗಳು ಯುವಜನರಿಗೆ ತಪ್ಪು ಸಂದೇಶ ಕೊಡುತ್ತವೆ ಎಂದು ಯಾರಾದರೂ ಹೇಳಿದಾಗ.. ,ನಾನು ಬರೆಯುವುದು ಸಮಾಜ ಪರಿವರ್ತನೆ ಗೆ ಅಲ್ಲ ಎನ್ನುವಂತಹ ಭೈರಪ್ಪ ಪ್ರೇರಿತ ಉತ್ತರ ಕೊಡುವವರು ಬಹಳ ಜನ ಇದ್ದಾರೆ .
ನಮ್ಮ ಬರವಣಿಗೆಯಿಂದ ಹುಡುಗರು ಹಾಳಾದರೆ ಅದು ಸಮಾಜದ ತಪ್ಪು ಅಥವಾ ರಾಜಕೀಯ ದ ತಪ್ಪು ಎಂದು ತಿಪ್ಪೆ ಸಾರಿಸುವ ಅಂತವರ ಬಳಿ ವಾದ ಮಾಡುವುದು ಕಷ್ಟ.

ಓದು ಮತ್ತು ವಯಸ್ಸಿಗೆ ಬಹಳ ಸಂಬಂಧ ಇದೆ.
ಎಳವೆಯಲ್ಲಿ ಇಷ್ಟ ಪಟ್ಟು ಚಂದಮಾಮ ಓದುತ್ತಿದ್ದವರು ಹೈಸ್ಕೂಲ್ ಸೇರಿದ ಬಳಿಕ ಯೆಂಡಮೂರಿ ವೀರೇಂದ್ರನಾಥರ ಪುಸ್ತಕ ಓದುತ್ತಾರೆ. ಅವರು ಎಷ್ಟು ಯೆಂಡಮೂರಿಯ ಬರಹಗಳನ್ನು ಇಷ್ಟ ಪಡುತ್ತಾರೆಂದರೆ ,ಪ್ರತೀ ಕಾದಂಬರಿನೂ ಹುಡುಕಿ ಹುಡುಕಿ ಓದುತ್ತಾರೆ.
ಆದರೆ‌ ಆ ಸೆಳೆತ ಪಿಯುಸಿ ಮುಗಿದು ಡಿಗ್ರಿ ಓದುವ ತನಕ ಮಾತ್ರ .

ಹದಿನಾರರಿಂದ ಇಪ್ಪತ್ತರ ವಯಸ್ಸಿನ ಹೆಚ್ಚಿನವರು ಯೆಂಡಮೂರಿಯ ಬರಹಗಳನ್ನು ಇಷ್ಟ ಪಡುತ್ತಾರೆ. ಬಳಿಕ ಅವರಿಗೆ ತೇಜಸ್ವಿ ,ಕಾರಂತ ,ಬೈರಪ್ಪ ಇಷ್ಟವಾಗಲು ಶುರುವಾಗುತ್ತದೆ. ತಮ್ಮ ಆಯುಷ್ಯದಲ್ಲಿ ಬಹು ಭಾಗ ಇನ್ನೂ ಕಳೆಯಬೇಕಾಗಿರುವ ಯುವ ಜನರ ಓದುವ ರುಚಿ ಮತ್ತು ಬಹುಭಾಗದ ಆಯುಷ್ಯ ಕಳೆದು ಕೊಂಡು ಜೀವನಾನುಭವ ಪಡೆದು ಕೊಂಡಿರುವವರ ಓದುವ ರುಚಿ ಬೇರೆ ಬೇರೆ ಇರುತ್ತದೆ.

ಹದಿ ಹರೆಯದ ಮನಸ್ಸಿಗೆ ತಿರುಚಿದ ಇತಿಹಾಸ ಓದಲು ಕೊಡಬಾರದು‌. ಪ್ರತಿಯೊಂದಕ್ಕೂ ಪುರಾಣದ ಉದಾಹರಣೆ ಕೊಡಬಾರದು. ಬಹಳಷ್ಟು ನಾಗರೀಕತೆಗಳ ಹುಟ್ಟನ್ನು ಕಂಡ ಸನಾತನ ಭಾರತದಲ್ಲಿ ಲೆಕ್ಕವಿಲ್ಲದಷ್ಟು ಪುರಾಣಕತೆಗಳಿವೆ.

ಪತಿಯೊಂದಕ್ಕೂ ಪುರಾಣಕತೆಗಳನ್ನು ಉದಾಹರಣೆ ಕೊಡಬಹುದು. ” ಕಣ್ಣಾ ಮುಚ್ಚೇ , ಕಾಡೇ ಗೂಡೇ… ಉದ್ದಿನ ಮೂಟೆ ಉರುಳೇ ಹೋಯ್ತು'” ಅನ್ನುವುದನ್ನೂ ರಾಮಾಯಣ ಕ್ಕೆ ಲಿಂಕ್ ಮಾಡಿ,
ಧಶರಥ ಕಣ್ಣುಮುಚ್ಚಲಾಗಿ ,ರಾಮನಿಗೆ ಕಾಡೇ ಮನೆಯಾಗಿ ,ಉದ್ದಿನ ಮೂಟೆಯಂತಹಾ ರಾವಣ ಉರುಳೇ ಹೋದ ” ಎಂದು ಬರೆದು ಬಿಡಬಹುದು.

ಆದರೆ ಅದು ವಿತಂಡವಾದ ಅನ್ನಿಸಿಕೊಳ್ಳುತ್ತದೆಯೇ ಹೊರತು ವಾದ ಅಲ್ಲ. ಹಾಗೆ ವಾದ ಮಾಡುವವರು ತಾವು ತುಂಬಾ ಓದಿದ್ದೇವೆ. ತಾವು ಇತಿಹಾಸ ಶಾಸ್ತ್ರ ಜ್ಞರು ಮನಃಶಾಸ್ತ್ರರು ಎಂದೆಲ್ಲಾ ಇಷ್ಟುದ್ದ ಹೇಳಿಕೊಳ್ಳುತ್ತಾರೆ. ಓದಿದವರೆಲ್ಲಾ ಮಹಾ ಮಾನವತಾವಾದಿಗಳಾಗಿರುತ್ತಾರೆ ಎಂದು ಕೊಳ್ಳುವುದೂ ತಪ್ಪು. ಒಸಾಮಾ ಬಿನ್ ಲಾದೆನ್ ಕೂಡಾ ತುಂಬಾ ಓದಿದ್ದ ಇಂಜಿನಿಯರ್ ಆಗಿದ್ದ.

ಒಂದು ಕಡೆ ಮಹಾತ್ಮಾ ಗಾಂಧಿ ಬಗ್ಗೆ ಬರೆಯುತ್ತಾ ,ಇನ್ನೊಂದು ಕಡೆ ಗೋಡ್ಸೆಯನ್ನು ದಾರಿತಪ್ಪಿದ ದೇಶಭಕ್ತ ಎಂದು ಬಲವಾಗಿ ಬಿಂಬಿಸುವವರು ಸಮಾಜಕ್ಕೆ ಯಾವ ಸಂದೇಶ ನೀಡುತ್ತಾರೆ? ಗೋಡ್ಸೆಗೆ ಗಾಂಧಿ ನ ಕೊಲ್ಲಲು ಕಾರಣ ಇತ್ತು . ಹಾಗೆಯೇ ಗೌರಿ ಲಂಕೇಶ್ ,ಪನ್ಸಾರೆ ,ಕಲಬುರ್ಗಿ ಹಂತಕರಿಗೂ ಕಾರಣ ಇತ್ತು.

ಇಂತಹದೇ ಕಾರಣ ಇತ್ತು ಎಂದು ಸಮರ್ಥನೆ ಇಳಿಯುವವರು, ಅಂತಹಾ ಸಮರ್ಥನೆಗಳನ್ನು ಮನಸ್ಸಿಗೆ ತುಂಬಿಕೊಂಡು ಕೊಲೆಗಾರರಾಗುವ ಸಮೂಹವನ್ನೂ ಹುಟ್ಟುಹಾಕುತ್ತಿದ್ದೇವೆ ಎಂದು ಯಾಕೆ ಯೋಚಿಸುತ್ತಿಲ್ಲ. ಅವರ ಯೋಚನೆ ನಡುಪಂಥೀಯ ಇರಬಹುದು ,ಆದರೆ ಅವರುಗಳು ಸೈತಾನಿಯೇ ಹೊರತು ಸನಾತನಿ ಖಂಡಿತಾ ಅಲ್ಲ.

ಬಹಳಷ್ಟು ಜನರ ಪ್ರೊಪೈಲ್ ನಲ್ಲಿ ಗಾಂಧಿ ಪೋಟೋ ಇರುತ್ತದೆ. ಆ ತರಹ ಇಟ್ಟುಕೊಂಡವರಲ್ಲಿ ಎರಡು ವಿಧ,
ಒಂದೇ ಅವರು ಪಕ್ಕಾಗಾಂಧಿವಾದಿಯಾಗಿರುತ್ತಾರೆ .
ಅಥವಾ ಅವರ ಮನಸ್ಸು ತುಂಬಾ ಗೋಡ್ಸೆ ತುಂಬಿರುತ್ತಾನೆ.

ನಮ್ಮೂರಿನ ಕೆಲವರು ಬಿಲ್ಲವ ರಾಜಕಾರಣಿ ಅಥವಾ ಮುಖಂಡನ ಬಗ್ಗೆ ಸಿಕ್ಕಾಪಟ್ಟೆ ತಕರಾರು ಮಾಡಿ ಪೋಸ್ಟ್ ಹಾಕಿದ ಬಳಿಕ ಶ್ರೀ ನಾರಾಯಣ ಗುರುಗಳ ಪೋಟೋ ಪ್ರೊಫೈಲ್ ಗೆ ಹಾಕಿಕೊಳ್ಳುತ್ತಾರೆ. ಶ್ರೀ ನಾರಾಯಣ ಗುರುಗಳು ಒಂದು ಜಾತಿಯ ಗುರು ಅಲ್ಲ ,ಅವರು ವಿಶ್ವಗುರು ಅಂತಾ ಅವರಿಗೂ ಗೊತ್ತು. ಅದರೂ ಯಾವುದೋ ಒಂದು social chemistry ಚೆನ್ನಾಗಿ ಕೆಲಸ ಮಾಡುತ್ತದೆ ಎಂಬುದು ಅವರ ನರಿಬುದ್ದಿಗೆ ಚೆನ್ನಾಗಿ ಹೊಳೆದಿರುತ್ತದೆ.ಕಾಣದ ಕೈಗಳ ಪ್ರತಿರೋದವನ್ನು ಕಡಿಮೆ ಮಾಡುವ ನರಿಬುದ್ದಿ ಅದು.

ಎಷ್ಟೋ ಜನ ಮೀಸಲಾತಿಯನ್ನು ವಿರೋಧಿಸುವುದರಿಂದ ಹಿಡಿದು ಜಾತಿವಾದವನ್ನು ಪುರಸ್ಕರಿಸುವಷ್ಟು ಮನುವಾದೀ ಮನಸ್ಸು ಹೊಂದಿರುವವರೂ ಅಂಬೇಡ್ಕರ್ ರಂತಹಾ ಮಾನವತಾವಾದಿಯ ಪೋಟೋ ಹಾಕಿಕೊಂಡಿರುತ್ತಾರೆ.

ಯಾರ ಪ್ರೊಫೈಲ್ ನಲ್ಲಿ ಯಾವ ಪೋಟೋ ಇರುತ್ತದೆ ಎನ್ನುವುದರಿಂದ ಅವರ ಸ್ವಭಾವ ಗುಣಲಕ್ಷಣಗಳನ್ನು ಅರಿಯಲು ಸಾದ್ಯವಿಲ್ಲ. ನಡುಪಂಥೀಯ ಗುಳ್ಳೆನರಿಗಳ ಬಗ್ಗೆ ದಿನಕ್ಕೊಂದು ಪೋಸ್ಟ್ ಹಾಕಿದರೂ ವರ್ಷ ಕಳೆದರೂ ಮುಗಿಯದಷ್ಟು ಇದೆ. ಆದರೂ ನೂರು ಎಪಿಸೋಡ್ ಗಳ ಒಳಗೇ ಮುಗಿಸಲು ನೋಡುತ್ತೇನೆ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ನಿಯಮಬಾಹಿರವಾಗಿ ಖರೀದಿ ಪ್ರಕ್ರಿಯೆಗೆ ಮುಂದಾಗಿ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿರುವ ಪ್ರಾಂಶುಪಾಲರಾದ ಡಾ. ಗಣಪತಿ ಕೆ. ಲಮಾಣಿ ಇವರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇವರಿಂದ ಅರೇ ಸರ್ಕಾರಿ ಖಾತೆಯ ಅನುದಾನದ ಬಳಕೆಯ ಅಧಿಕೃತ ದಾಖಲೆಗಳನ್ನು ಪಡೆದು, ಪರಿಶೀಲನೆ ಮಾಡಿದಾಗ ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ಮಾಡಿರುವುದು ಮಾತ್ರವಲ್ಲದೆ, ವೆಂಕಟೇಶ್ ಟ್ರೇರ‍್ಸ್, ಕುಕನೂರು ಮತ್ತು ವೆಂಕಟೇಶ್ ಟ್ರೇರ‍್ಸ್, ತಳಕಲ್ಲ ಎಂಬ ಒಂದೇ ಹೆಸರಿನ ಏಜೆನ್ಸಿಯ ಮೂಲಕ ಎರಡು ಸ್ಥಳಗಳ ಹೆಸರಿನಲ್ಲಿ ನಕಲಿ ಜಿ.ಎಸ್.ಟಿ ಬಿಲ್ಲುಗಳನ್ನು ಸೃಷ್ಟಿಸಿಕೊಂಡು ಲಕ್ಷಾಂತರ ರೂಪಾಯಿ ಅನುದಾನವನ್ನು ವಂಚನೆ ಮಾಡಿರುವುದು ಕಂಡುಬದಿರುತ್ತದೆ.

ಪ್ರಾಂಶುಪಾಲರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. 3 ತಿಂಗಳು ಕಳೆದರೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಯಾವುದೇ ಪ್ರತ್ಯುತ್ತರ ನೀಡದ ಕಾರಣ, ನಕಲಿ ಜಿ.ಎಸ್.ಟಿ ಮೂಲಕ ಹಣ ವಂಚಿಸಿರುವ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಗೆ ದೂರು ನೀಡಿ, ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿಂದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ.

ತರಬೇತಿಯು ಫೆಬ್ರವರಿ 16 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿಯನ್ನು ಸಲ್ಲಿಸಬಹುದು. 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9481506564, 9740982585, 9380162042, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending