Connect with us

ಅಂಕಣ

ಸಿದ್ಧಾಂತ ಮತ್ತು ಪತ್ರಿಕೋದ್ಯಮ

Published

on

  • ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್

ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು. ಅವರು ಪತ್ರಿಕೋದ್ಯಮದ ನ್ಯೂಟ್ರಾಲಿಟಿ ಕುರಿತು ಮಾತಾಡುತ್ತಾ, ʼನಾವು ಪತ್ರಕರ್ತರು ನಿಮ್ಮ ರೀತಿ ಯೋಚನೆ ಮಾಡೋದಕ್ಕೆ ಆಗಲ್ಲ. ನಾವು ಯಾವತ್ತೂ ಯಾವುದೇ ಸಿದ್ಧಾಂತಕ್ಕೆ ವಾಲಿಕೊಳ್ಳದೇ ತಟಸ್ಥತೆ ಕಾಪಾಡಬೇಕಾಗುತ್ತದೆʼ ಎಂದು ಹೇಳಿದರು. ʼಅವರ ಜೊತೆ ನಾನು ವಾದಿಸಿದೆ.

ಸರ್, ಸುಳ್ಳನ್ನೇ ಬಂಡವಾಳ ಮಾಡಿಕೊಂಡ ಸಿದ್ಧಾಂತಗಳು ರಾರಾಜಿಸುವಾಗ ಸತ್ಯವನ್ನು ಹುಡುಕಲು ಸಹ ಸಿದ್ಧಾಂತದ ಸಹಾಯ ಬೇಕಾಗುತ್ತದೆ. ಯಾವ ವ್ಯಕ್ತಿಯೂ ಸಿದ್ಧಾಂತದ ಹೊರಗಾಗಿ ಇರಲು ಸಾಧ್ಯವಿಲ್ಲ. ನನಗೆ ಸಿದ್ದಾಂತವೇ ಇಲ್ಲ ಎನ್ನುವ ವ್ಯಕ್ತಿಯನ್ನು ಕೂಡಾ ಅವನಿಗೆ ತಿಳಿದೋ ತಿಳಿಯದೆಯೋ ಒಂದಲ್ಲಾ ಒಂದು ಸಿದ್ದಾಂತ ಇಲ್ಲವೇ ಹಲವು ಸಿದ್ಧಾಂತಗಳು ನಿರ್ದೇಶಿಸುತ್ತಿರುತ್ತವಲ್ಲ.. ʼ ಎಂದ ನನ್ನ ಮಾತಿಗೆ ನಮಗೆ ಪತ್ರಕರ್ತರಿಗೆ ಹಾಗೆ ಯೋಚಿಸಲು ಬರುವುದಿಲ್ಲ. ನೀವು ಎಡ ಪಂಥ ಅಂತೀರಿ, ಅವರು ಬಲಪಂಥ ಅಂತಾರೆ, ನಾವು ಇವೆರಡರ ನಡುವೆ ಸತ್ಯ ಹುಡುಕ್ತೀವಿʼ ಎಂದೆಲ್ಲಾ ಹೇಳಿದರು. ಕೊನೆಗೆ ಯಾರೂ ರಾಜಿಯಾಗಲಿಲ್ಲ.

ಇದಾಗಿ ಹದಿನೈದು ವರ್ಷಗಳ ನಂತರ, 2019ರಲ್ಲಿ ಅದೇ ಪತ್ರಕರ್ತ ಸ್ನೇಹಿತರು ನಮ್ಮ ಜೊತೆ ಕೆಲಸ ಮಾಡುತ್ತಿದ್ದರು. ಅವರು ನರೇಂದ್ರ ಮೋದಿ ಸರ್ಕಾರದ ಆರ್ಥಿಕ ವಂಚನೆಗಳನ್ನು ಅದ್ಭುತ ರೀತಿಯಲ್ಲಿ ಅಂಕಿಅಂಶಗಳ ಸಮೇತ ಬಯಲು ಮಾಡುತ್ತಿದ್ದುದು ಕಂಡು ನನಗೆ ಅಚ್ಚರಿ ಮತ್ತು ಸಂತೋಷವಾಗಿತ್ತು. ಅಂದು ಅವರು ನಿಜಕ್ಕೂ ಸತ್ಯದ ಪರವಾಗಿದ್ದರು. ಆದರೆ ಅವರ ಬರೆಹಗಳನ್ನು ಯಾರಾದರೂ ಬಲಪಂಥೀಯರು ಓದಿದರೆ ಅವರಿಗೆ ಖಂಡಿತಾ ಇವರು ʼಎಡಪಂಥೀಯ ಸಿದ್ಧಾಂತಿʼ, ʼನಗರ ನಕ್ಸಲ್ʼ ಎಂದೆಲ್ಲಾ ಸುಲಭವಾಗಿ ಹಣೆಪಟ್ಟಿ ಕಟ್ಟಬಹುದಿತ್ತು. ಆದರೆ ಆ ಪತ್ರಕರ್ತ ಸ್ನೇಹಿತರು ನಿಜಕ್ಕೂ ಈ ದೇಶದ ಭವಿಷ್ಯದ ಬಗ್ಗೆ ತುಂಬಾ ಆತಂಕಗೊಂಡು, ಕಾಳಜಿಯಿಂದ ಕೆಲಸ ಮಾಡುತ್ತಿದ್ದರು. ಕೊನೆಗೆ ಅವರಿಗೂ ಸಹ ಅವರು ಹಿಂದೆ ಹೇಳಿದ್ದ ರೀತಿಯಲ್ಲಿ ತಟಸ್ಥವಾಗಿ ಪತ್ರಿಕೋದ್ಯಮ ನಡೆಸುವುದು ಸಾಧ್ಯವಿಲ್ಲ ಎಂಬ ಅರಿವಾಗಿರಬಹುದು ಎಂದುಕೊಂಡೆ. ಹೌದು ಪತ್ರಕತ್ರರಾದವರು ಮಾಡಲು ಇರುವ ಬಹಳ ಕೆಲಸಗಳ ನಡುವೆಯೂ ಅವರು ಅದ್ಯತೆಯನ್ನು ಗುರುತಿಸಿಕೊಂಡಿದ್ದರು.

ಪತ್ರಿಕೋದ್ಯಮದ ಬಗ್ಗೆ ಮಾತಾಡುವಾಗ ನಾವು ಒಂದು ಪ್ರಾಥಮಿಕ ಸಂಗತಿಯನ್ನು ತಿಳಿದುಕೊಳ್ಳಬೇಕು. ನಮ್ಮ ದೇಶದಲ್ಲಿ ಪತ್ರಿಕೋದ್ಯಮ ಆರಂಭವಾದ ಸಂದರ್ಭದಲ್ಲಿ ಯಾವೆಲ್ಲಾ ಭಾರತೀಯರು ಪತ್ರಿಕೆಗಳನ್ನು ಹೊರತರುತ್ತಿದ್ದರೋ ಅವರೆಲ್ಲರೂ ಕಟು ಸಿದ್ಧಾಂತಿಗಳಾಗಿದ್ದರು. ಸಾಮ್ರಾಜ್ಯವಾದದ ವಿರುದ್ಧದ ಸಿದ್ದಾಂತ ಅವರೆಲ್ಲರನ್ನು ಮುನ್ನಡೆಸುತ್ತಿತ್ತು. ಬಹುತೇಕ ಅವರೆಲ್ಲರೂ ಸ್ವಾತಂತ್ರ್ಯ ಹೋರಾಟಗಾರರು ಇಲ್ಲವೇ ಸ್ವಾಭಿಮಾನ ಚಳವಳಿಯ ಹೋರಾಟಗಾರರು, ನಾಯಕರು ಆಗಿದ್ದರು. ಅಂತಹ ಸ್ಪಷ್ಟ ಸೈದ್ಧಾಂತಿಕ ಬುನಾದಿಯಿಟ್ಟುಕೊಂಡು ಅವರೆಲ್ಲಾ ಬ್ರಿಟಿಷರ ವಿರುದ್ಧ ಪತ್ರಿಕೋದ್ಯಮ ನಡೆಸದಿದ್ದರೆ ಈ ದೇಶದ ಪತ್ರಿಕೋದ್ಯಮದ ಇತಿಹಾಸ ಅತ್ಯಂತ ಟೊಳ್ಳಾದ, ಬೂಸಾ ಇತಿಹಾಸವಾಗುತ್ತಿತ್ತು.

ಕೆಲ ಬ್ರಿಟಿಷ್ ಪತ್ರಕರ್ತರು ಹೇಗೆ ಬ್ರಿಟಿಷ್ ಅಧಿಕಾರಿಗಳ ಬೆಡ್ ರೂಮ್ ಸ್ಟೋರಿಗಳನ್ನು ಚಪ್ಪರಿಸಿಕೊಂಡು ಅದನ್ನೇ ಪತ್ರಿಕೋದ್ಯಮ ಎಂದು ಬೀಗುತ್ತಿದ್ದರೋ ಅಷ್ಟರಲ್ಲೇ ಭಾರತೀಯ ಪತ್ರಿಕೋದ್ಯಮ ಉಳಿದುಬಿಡುತ್ತಿತ್ತು. ಆದರೆ ಹೀಗೆ ಆಗಲು ಬಿಡದೇ ಉದಾತ್ತ ಧ್ಯೇಯಗಳ ಮೂಲಕ ದೇಶದ ಪತ್ರಿಕೋದ್ಯಮ ಬೆಳೆಸಿದ 19ನೆಯ ಶತಮಾನದ ಅಂತಹ ಧೀಮಂತ ಪತ್ರಕರ್ತರು ಹಲವರು. ಸುರೇಂದ್ರ ನಾಥ್ ಬ್ಯಾನರ್ಜಿ (ಬೆಂಗಾಲಿ ಪತ್ರಿಕೆ- 1879) ಪತ್ರಕರ್ತರಾಗಿ ಕೆಲಸ ಮಾಡುತ್ತಲೇ ಸತ್ಯ ಹೇಳಿದ ಕಾರಣಕ್ಕೆ ಬ್ರಿಟಿಷ್ ಸರ್ಕಾರ ಅವರನ್ನು ವರ್ನಾಕ್ಯುಲರ್ ಪ್ರೆಸ್ ಕಾಯ್ದೆಯ ಅಡಿ ಜೈಲಿಗಟ್ಟಿತ್ತು. ಸಂವಾದ ಕೌಮುದಿ ಎಂಬ ಪತ್ರಿಕೆ ನಡೆಸುತ್ತಿದ್ದ ರಾಜಾರಾಮ ಮೋಹನ್ ರಾಯ್ ಒಬ್ಬ ಸ್ಪಷ್ಟ ವಿಚಾರವಾದಿಯಾಗಿದ್ದರು.

ಅವರು ಈ ದೇಶದ ಅನಿಷ್ಟಗಳ ಕುರಿತೇ ತಮ್ಮ ಪತ್ರಿಕೆಯಲ್ಲಿ ಬರೆಯುತ್ತಾ ಹೋದರು. ಇದೇ ಕೆಲಸವನ್ನು ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ ಆರಂಭಿಸಿದ ಜಂಬೇಕರ್ ಮಾಡಿದರು, ಅವರು ತಮ್ಮ ದರ್ಪಣ್ ಪತ್ರಿಕೆಯ ಮೂಲಕ ಸಾಮಾಜಿಕ ಅನಿಷ್ಟಗಳು ಕುರಿತು ಜಾಗೃತಿ ಮೂಡಿಸಿದರು- ಇವರನ್ನು ಮರಾಠಿ ಪತ್ರಿಕೋದ್ಯಮದ ಪಿತಾಮಹ ಎಂದು ಕರೆಯಲಾಗುತ್ತದೆ. ಬಂಗಾಳದಲ್ಲಿ ಹರೀಶ್ಚಂದ್ರ ರಾಯ್ ಎಂಬುವವರು ಬಂಗದರ್ಶನ್ ಎಂಬ ಪತ್ರಿಕೆ ತಂದರು; ಗುಜರಾತಿಯಲ್ಲಿ ʼಬಾಂಬೆ ಸಮಾಚಾರ್ʼ ಪತ್ರಿಕೆ ಆರಂಭಿಸಿದ ಫರ್ದುನ್ಜಿ ಮರ್ಜ್ ಬಾನ್ ಎಂಬುವವರು ಸಹ ಪತ್ರಿಕೆಯ ಮೂಲಕ ಸಮಾಜ ಸುಧಾರಣೆಗೆ ಒತ್ತು ಕೊಟ್ಟರು. ಇನ್ನು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಬಾಲಗಂಗಾಧರ ತಿಲಕ್ ಕೇಸರಿ ಮತ್ತು ಮರಾಟಾ ಪತ್ರಿಕೆ ಹೊರಡಿಸುತ್ತಿದ್ದರು, ಗಾಂದೀಜಿಯವರು ಆಫ್ರಿಕಾದಲ್ಲಿದ್ದಾಗಲೇ ಇಂಡಿಯನ್ ಒಪಿನಿಯನ್ ಪತ್ರಿಕೆ ನಡೆಸುತ್ತಿದ್ದರೆ, ಭಾರತಕ್ಕೆ ಬಂದ ಮೇಲೆ ಯಂಗ್ ಇಂಡಿಯಾ ಮತ್ತು ಹರಿಜನ್ ಎಂಬ ಪತ್ರಿಕೆಗಳನ್ನು ಹೊರತಂದರು,

ಸುಭಾಷ್ ಚಂದ್ರ ಬೋಸ್ ಅವರು ಸ್ವರಾಜ್ ಪತ್ರಿಕೆಯ ಸಂಪಾದಕರಾಗಿದ್ದರು, ಲಾಲಾ ಲಜಪತ್ ರಾಯ್ ಅವರು ದ ಟ್ರಿಬ್ಯೂನ್ ಎಂಬ ಇಂಗ್ಲಿಷ್ ಪತ್ರಿಕೆ ತಂದರು, ಜೊತೆಗೆ ವಂದೆ ಮಾತರಂ ಎಂಬ ಉರ್ದು ಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು- ಇವುಗಳ ಮೂಲಕ ಸ್ವದೇಶಿ ಚಿಂತನೆಯನ್ನು ಅಥವಾ ಸಿದ್ಧಾಂತವನ್ನು ಪ್ರಚುರಪಡಿಸಿದರು, ಹೋಂರೂಲ್ ಚಳವಳಿಯ ಮುಂದಾಳು ಅನಿಬೆಸೆಂಟ್ ಅವರು ನ್ಯೂ ಇಂಡಿಯಾ ಪತ್ರಿಕೆ ತಂದರು, ಇನ್ನು ಮದನ್ ಮೋಹನ್ ಮಾಳವೀಯ ಅವರು ಮೋತಿಲಾಲ್ ನೆಹರೂ ಜೊತೆ ಸೇರಿಕೊಂಡು ದ ಲೀಡರ್ ಎಂಬ ಪತ್ರಿಕೆ ತಂದರೆ, ನಂತರ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯನ್ನೂ ಪುನರುಜ್ಜೀವಗೊಳಿಸಿದರು. ಇನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ʼಅಸ್ಪೃಶ್ಯರಿಗೆ ಈ ದೇಶದಲ್ಲಿ ಪತ್ರಿಕೆಯಿಲ್ಲʼ ಎಂದು ಘೋಷಿಸಿ ಮೊದಲಿಗೆ ಶಾಹು ಮಹಾರಾಜರ ಬೆಂಬಲದಿಂದ ಮೂಕನಾಯಕ ಪತ್ರಿಕೆ (1920) ತಂದರು; ನಂತರ ಬಹಿಷ್ಕೃತ ಭಾರತ (1927), ನಂತರ ಸಮತಾ (1928), ನಂತರ ಜನತಾ (1930) ಹಾಗೂ ಪ್ರಬುದ್ಧ ಭಾರತ (1956) ಪತ್ರಿಕೆಗಳನ್ನು ಹೊರಡಿಸಿ ನಿರಂತರವಾಗಿ ಅವುಗಳಲ್ಲಿ ಬರೆಯುತ್ತಾ ತಾವೊಬ್ಬ ಧೀಮಂತ ಪತ್ರಕರ್ತ ಎಂಬುದನ್ನೂ ನಿರೂಪಿಸಿದ್ದರು.

ಇವರನ್ನೆಲ್ಲಾ ಹೊರಗಿಟ್ಟು ಕೇವಲ ಬ್ರಿಟಿಷರು ತಂದ ಬೆಂಗಾಲ್ ಗೆಜೆಟ್ ನಂತವುಗಳನ್ನು ಮಾತ್ರವೇ ಭಾರತದ ಪತ್ರಿಕೋದ್ಯಮದ ಇತಿಹಾಸ ಎಂದು ಹೇಳಲು ಬರುತ್ತದೆಯೇ? ಈ ದೇಶದ ಪತ್ರಿಕೋದ್ಯಮದ ಇತಿಹಾಸದ ಸೈದ್ಧಾಂತಿಕ ಅಡಿಪಾಯ ಅತ್ಯಂತ ಭದ್ರವಾಗಿತ್ತು ಎಂಬುದಕ್ಕೆ ಇವೆಲ್ಲಾ ಸಾಕ್ಷಿಯಲ್ಲವೆ? ಅಲ್ಲಿ ಎಡಬಿಡಂಗಿತನಕ್ಕೆ, ಸೊ ಕಾಲ್ಡ್ ತಟಸ್ಥತೆಗೆ ಯಾವುದೇ ಅವಕಾಶವಿರಲಿಲ್ಲ. ಈ ದೇಶವನ್ನು ಕಾಡುತ್ತಿದ್ದ ಸಾಮ್ರಾಜ್ಯಶಾಹಿ ಮತ್ತು ಬ್ರಾಹ್ಮಣಶಾಹಿ ಶಕ್ತಿಗಳನ್ನು ನೇರವಾಗಿ ಎದುರಿಸಿಯೇ ಭಾರತದ ಪತ್ರಿಕೋದ್ಯಮ ನಡೆದುಕೊಂಡುಬಂದಿದೆ ಎಂಬುದಕ್ಕೆ ಮೇಲಿನ ಉದಾಹರಣೆಗಳೇ ಸಾಕ್ಷಿ.

ಸ್ವಾತಂತ್ರ್ಯಾನಂತರದಲ್ಲಿ, ನಮ್ಮ ಕರ್ನಾಟಕದಲ್ಲೇ ನಾವು ಯಾರನ್ನೆಲ್ಲಾ ಇಂದು ಧೀಮಂತ ಪತ್ರಕರ್ತರೆಂದು ಪರಿಗಣಿಸಿದ್ದೇವೆಯೋ, ಯಾರನ್ನೆಲ್ಲಾ ಆದರ್ಶ ಎಂದು ನೋಡುತ್ತೇವೆಯೋ ಅವರೆಲ್ಲರೂ ಅತ್ಯಂತ ಸ್ಪಷ್ಟ ಮತ್ತು ದೃಢವಾದ ಸಿದ್ಧಾಂತಿಗಳೇ ಆಗಿದ್ದರು ಎಂಬುದನ್ನು ಮರೆಯಬಾರದು. ಕರ್ನಾಟಕದ ಪತ್ರಿಕೋದ್ಯಮಕ್ಕೇ ಹೊಸ ಮೆರಗು ತಂದು ಸಂಚಲನ ಮೂಡಿಸಿದ ಪಿ. ಲಂಕೇಶ್ ಅವರು ಕಡಿಮೆ ಸಿದ್ಧಾಂತಿಯೇ? ಸ್ಪಷ್ಟ ಸೈದ್ಧಾಂತಿಕ ತಳಹದಿಯ ಪತ್ರಿಕೋದ್ಯಮವೇ ಅವರ ಆಕ್ಟಿವಿಸಂ ಆಗಿತ್ತು ಮಾತ್ರವಲ್ಲ ಪತ್ರಿಕೋದ್ಯಮದ ಮೂಲಕ ಸಾಮಾಜಿಕ ರಾಜಕೀಯ ಬದಲಾವಣೆಯನ್ನೂ ಮಾಡಲು ಸಾಧ್ಯ ಎಂದು ಪಿ ಲಂಕೇಶ್ ಒಂದು ಮಾದರಿಯನ್ನೇ ಸೃಷ್ಟಿಸಿದರು. ಅದು ಸಾಧ್ಯವಾಗಿದ್ದೇ ಅವರ ಕಟಿಬದ್ಧ ಸೈದ್ಧಾಂತಿಕ ನಿಲುವಿನಿಂದ.

ನಾಡು ಕಂಡ ಮತ್ತೊಬ್ಬ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿ ಕೂಡಾ ಗಟ್ಟಿ ತಾತ್ವಿಕ ನಿಲುವುಗಳ ಮೂಲಕ ನಾಡಿನ ಜನರನ್ನು ತಲುಪಿದರು. ಇನ್ನು 70-80ರ ದಶಕಗಳಲ್ಲಿ ಭಾರತೀಯ ಪತ್ರಿಕೋದ್ಯಮದ ಧೀಮಂತ ಪರಂಪರೆಯಲ್ಲಿ ಸಾಗಿದ ಹಲವಾರು ಕನ್ನಡ ಪತ್ರಿಕೆಗಳಿದ್ದವು- ಸುದ್ದಿ ಸಂಗಾತಿ, ಶೂದ್ರ, ಪಂಚಮ, ಸಮುದಾಯ, ಸಂಕ್ರಮಣ ಮುಂತಾದ ನಿಯತಕಾಲಿಕೆಗಳು ಕನ್ನಡಿಗರ ಅರಿವಿನ ವಿಸ್ತರಣೆಯಲ್ಲಿ ಕಡಿಮೆ ಕೆಲಸ ಮಾಡಿವೆಯೇ? ಹಾಗಾದರೆ ಇವೆಲ್ಲವೂ ಖಚಿತ ಸೈದ್ದಾಂತಿಕತೆಯಿಂದಲೇ ನಡೆಯಲಿಲ್ಲವೇ?

ಇನ್ನು ಕಳೆದ ಕೆಲವು ದಶಕಗಳಲ್ಲಿ, ಅಗ್ನಿ, ಹಾಯ್ ಬೆಂಗಳೂರು, ಗೌರಿ ಲಂಕೇಶ್ ವಾರಪತ್ರಿಗಳೂ ತಮ್ಮ ಛಾಪು ಮೂಡಿಸಿದವು. ಪಿ ಲಂಕೇಶರ ಸ್ಪೂರ್ತಿಯಲ್ಲೇ ದೊಡ್ಡ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ಅನಾವರಣಗೊಳಿಸಿದವು. ಇದ್ದುದರಲ್ಲಿ ರವಿ ಬೆಳಗರೆ ಎಡಬಿಡಂಗಿಯಾಗಿ ಕ್ರೈಂ, ಸೆಕ್ಸ್ ಗಳನ್ನ ಅಸ್ತ್ರವಾಗಿಸಿಕೊಂಡು ಟ್ಯಾಬ್ಲಾಯ್ಡ್ ಪತ್ರಿಕೋದ್ಯಮವನ್ನು ಹಳ್ಳ ಹಿಡಿಸಿದರೂ ಹಾಯ್ ಬೆಂಗಳೂರು ಸಹ ಅನೇಕ ಬ್ರಷ್ಟಾಚಾರ ಹಗರಣಗಳನ್ನು ಬಯಲು ಮಾಡಿದ್ದು ಸತ್ಯ.

ಯಾವನ್ನು ನಾವು ದಿನಪತ್ರಿಕೆಗಳು ಅಥವಾ ವೃತ್ತ ಪತ್ರಿಕೆಗಳು ಎನ್ನುತ್ತೇವೆಯೋ ಇವುಗಳ ಆದ್ಯತೆ ದಿನನಿತ್ಯದ ಸುದ್ದಿಗಳನ್ನು ಜನರಿಗೆ ತಲುಪುವುದು ಮಾತ್ರವಾಗಿದ್ದ ಕಾರಣ ಬಹಳ ಪತ್ರಿಕೆಗಳಲ್ಲಿ ಸೈದ್ಧಾಂತಿಕತೆ ದೊಡ್ಡ ವಿಷಯವಾಗಲಿಲ್ಲ. ಆದರೆ ಅಂತಹ ಕಡೆಗಳಲ್ಲಿ ಸಹ ದೊಡ್ಡ ದೊಡ್ಡ ಸಿದ್ಧಾಂತಿಗಳು ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದ್ದರು ಮತ್ತು ತಮ್ಮ ಖಚಿತ ಅಭಿಪ್ರಾಯಗಳನ್ನು ಆ ವೇದಿಕೆಗಳ ಮೂಲಕ ಜನರಿಗೆ ತಲುಪಿಸುತ್ತಾ ಬಂದಿದ್ದರೆಂಬುದನ್ನು ನಾವು ಮರೆಯಕೂಡದು.

ಈಗ ಹೇಳಿ, ನಮ್ಮ ಪತ್ರಿಕೋದ್ಯಮಕ್ಕೆ ಸಿದ್ಧಾಂತ ಬೇಡವೆ, ಪತ್ರಕರ್ತರಾಗಿರುವವರು ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬಾರದೆ? ಆಕ್ಟಿವಿಸ್ಟುಗಳು ಪತ್ರಕರ್ತರಾಗುವುದು ಅಪರಾಧವೆ? ಪತ್ರಿಕೋದ್ಯಮ ಆಕ್ಟಿವಿಸಂಗೆ ಪೂರಕವಾಗಿರಬಾರದೆ? ಇಂದು ಬ್ರಾಹ್ಮಣ್ಯದ ದಿಗ್ವಿಜಯ ಮತ್ತೊಮ್ಮೆ ನಿಜವಾಗುವ ಕರಾಳ ಛಾಯೆ ಇಡೀ ದೇಶವನ್ನು ಆವರಿಸಿಕೊಂಡಿರುವಾಗ, ಬಾಬಾಸಾಹೇಬರು ಎಚ್ಚರಿಸಿದ್ದ ಆ ʼಪ್ರತಿಕ್ರಾಂತಿʼ ತನ್ನ ಕಬಂಧಬಾಹುಗಳನ್ನು ಚಾಚಿಕೊಂಡ ಎಲ್ಲವನ್ನೂ ನೊಣೆಯುತ್ತಿರುವಾಗ, ಅಪರಾಧವೇ ಅಧಿಕಾರವಾಗಿ ದೇಶದ ಪ್ರಮುಖ ಸಂಸ್ಥೆಗಳೆಲ್ಲವನ್ನೂ ನುಂಗಿ ನೀರುಕುಡಿದು ತಮ್ಮ ಅಂಕೆಯಲ್ಲಿ ತಂದುಕೊಂಡು ಇಡೀ ದೇಶದ ಜನರಿಗೆ ಕರಾಳತೆ ದರ್ಶನ ಮಾಡುತ್ತಾ ಭ್ರಷ್ಟಾಚಾರದ ವ್ಯಾಖ್ಯಾನವನ್ನೇ ತಿರುಗುಮರುಗು ಮಾಡುತ್ತಿರುವಾಗ ಸೊ ಕಾಲ್ಡ್ ತಟಸ್ಥತೆಯ ಬದನೇಕಾಯಿಯನ್ನು ನೆಚ್ಚಿಕೊಳ್ಳದೇ ನಿರ್ಧಾರಿತ ಜನಾಂದೋಲನಗಳಿಗೆ ಪೂರಕವಾಗಿ ಪತ್ರಿಕೋದ್ಯಮ ಮತ್ತು ಪತ್ರಕರ್ತರಾದವರು ಜೊತೆಗೂಡುವುದು ಬೇಡವೇ?

‘ಬೇಡ’ ಎಂಬ ಅಭಿಪ್ರಾಯ ನಿಮ್ಮದಾಗಿದ್ದರೆ ನಿಮ್ಮ ಬಳಿ ಹೇಳಲು ನನಗೆ ಏನೂ ಉಳಿದಿಲ್ಲ. ನೀವು ನಿಮ್ಮದೇ ಸುಖಾಸನದಲ್ಲಿ ನೆಮ್ಮದಿಯಾಗಿ ಪವಡಿಸಬಹುದು, ನನಗೇನೂ ಅಭ್ಯಂತರವಿಲ್ಲ. (ಬರಹ- ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending