ಅಂಕಣ
ಸಿದ್ಧಾಂತ ಮತ್ತು ಪತ್ರಿಕೋದ್ಯಮ
- ಹರ್ಷಕುಮಾರ್ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್
ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು. ಅವರು ಪತ್ರಿಕೋದ್ಯಮದ ನ್ಯೂಟ್ರಾಲಿಟಿ ಕುರಿತು ಮಾತಾಡುತ್ತಾ, ʼನಾವು ಪತ್ರಕರ್ತರು ನಿಮ್ಮ ರೀತಿ ಯೋಚನೆ ಮಾಡೋದಕ್ಕೆ ಆಗಲ್ಲ. ನಾವು ಯಾವತ್ತೂ ಯಾವುದೇ ಸಿದ್ಧಾಂತಕ್ಕೆ ವಾಲಿಕೊಳ್ಳದೇ ತಟಸ್ಥತೆ ಕಾಪಾಡಬೇಕಾಗುತ್ತದೆʼ ಎಂದು ಹೇಳಿದರು. ʼಅವರ ಜೊತೆ ನಾನು ವಾದಿಸಿದೆ.
ಸರ್, ಸುಳ್ಳನ್ನೇ ಬಂಡವಾಳ ಮಾಡಿಕೊಂಡ ಸಿದ್ಧಾಂತಗಳು ರಾರಾಜಿಸುವಾಗ ಸತ್ಯವನ್ನು ಹುಡುಕಲು ಸಹ ಸಿದ್ಧಾಂತದ ಸಹಾಯ ಬೇಕಾಗುತ್ತದೆ. ಯಾವ ವ್ಯಕ್ತಿಯೂ ಸಿದ್ಧಾಂತದ ಹೊರಗಾಗಿ ಇರಲು ಸಾಧ್ಯವಿಲ್ಲ. ನನಗೆ ಸಿದ್ದಾಂತವೇ ಇಲ್ಲ ಎನ್ನುವ ವ್ಯಕ್ತಿಯನ್ನು ಕೂಡಾ ಅವನಿಗೆ ತಿಳಿದೋ ತಿಳಿಯದೆಯೋ ಒಂದಲ್ಲಾ ಒಂದು ಸಿದ್ದಾಂತ ಇಲ್ಲವೇ ಹಲವು ಸಿದ್ಧಾಂತಗಳು ನಿರ್ದೇಶಿಸುತ್ತಿರುತ್ತವಲ್ಲ.. ʼ ಎಂದ ನನ್ನ ಮಾತಿಗೆ ನಮಗೆ ಪತ್ರಕರ್ತರಿಗೆ ಹಾಗೆ ಯೋಚಿಸಲು ಬರುವುದಿಲ್ಲ. ನೀವು ಎಡ ಪಂಥ ಅಂತೀರಿ, ಅವರು ಬಲಪಂಥ ಅಂತಾರೆ, ನಾವು ಇವೆರಡರ ನಡುವೆ ಸತ್ಯ ಹುಡುಕ್ತೀವಿʼ ಎಂದೆಲ್ಲಾ ಹೇಳಿದರು. ಕೊನೆಗೆ ಯಾರೂ ರಾಜಿಯಾಗಲಿಲ್ಲ.
ಇದಾಗಿ ಹದಿನೈದು ವರ್ಷಗಳ ನಂತರ, 2019ರಲ್ಲಿ ಅದೇ ಪತ್ರಕರ್ತ ಸ್ನೇಹಿತರು ನಮ್ಮ ಜೊತೆ ಕೆಲಸ ಮಾಡುತ್ತಿದ್ದರು. ಅವರು ನರೇಂದ್ರ ಮೋದಿ ಸರ್ಕಾರದ ಆರ್ಥಿಕ ವಂಚನೆಗಳನ್ನು ಅದ್ಭುತ ರೀತಿಯಲ್ಲಿ ಅಂಕಿಅಂಶಗಳ ಸಮೇತ ಬಯಲು ಮಾಡುತ್ತಿದ್ದುದು ಕಂಡು ನನಗೆ ಅಚ್ಚರಿ ಮತ್ತು ಸಂತೋಷವಾಗಿತ್ತು. ಅಂದು ಅವರು ನಿಜಕ್ಕೂ ಸತ್ಯದ ಪರವಾಗಿದ್ದರು. ಆದರೆ ಅವರ ಬರೆಹಗಳನ್ನು ಯಾರಾದರೂ ಬಲಪಂಥೀಯರು ಓದಿದರೆ ಅವರಿಗೆ ಖಂಡಿತಾ ಇವರು ʼಎಡಪಂಥೀಯ ಸಿದ್ಧಾಂತಿʼ, ʼನಗರ ನಕ್ಸಲ್ʼ ಎಂದೆಲ್ಲಾ ಸುಲಭವಾಗಿ ಹಣೆಪಟ್ಟಿ ಕಟ್ಟಬಹುದಿತ್ತು. ಆದರೆ ಆ ಪತ್ರಕರ್ತ ಸ್ನೇಹಿತರು ನಿಜಕ್ಕೂ ಈ ದೇಶದ ಭವಿಷ್ಯದ ಬಗ್ಗೆ ತುಂಬಾ ಆತಂಕಗೊಂಡು, ಕಾಳಜಿಯಿಂದ ಕೆಲಸ ಮಾಡುತ್ತಿದ್ದರು. ಕೊನೆಗೆ ಅವರಿಗೂ ಸಹ ಅವರು ಹಿಂದೆ ಹೇಳಿದ್ದ ರೀತಿಯಲ್ಲಿ ತಟಸ್ಥವಾಗಿ ಪತ್ರಿಕೋದ್ಯಮ ನಡೆಸುವುದು ಸಾಧ್ಯವಿಲ್ಲ ಎಂಬ ಅರಿವಾಗಿರಬಹುದು ಎಂದುಕೊಂಡೆ. ಹೌದು ಪತ್ರಕತ್ರರಾದವರು ಮಾಡಲು ಇರುವ ಬಹಳ ಕೆಲಸಗಳ ನಡುವೆಯೂ ಅವರು ಅದ್ಯತೆಯನ್ನು ಗುರುತಿಸಿಕೊಂಡಿದ್ದರು.
ಪತ್ರಿಕೋದ್ಯಮದ ಬಗ್ಗೆ ಮಾತಾಡುವಾಗ ನಾವು ಒಂದು ಪ್ರಾಥಮಿಕ ಸಂಗತಿಯನ್ನು ತಿಳಿದುಕೊಳ್ಳಬೇಕು. ನಮ್ಮ ದೇಶದಲ್ಲಿ ಪತ್ರಿಕೋದ್ಯಮ ಆರಂಭವಾದ ಸಂದರ್ಭದಲ್ಲಿ ಯಾವೆಲ್ಲಾ ಭಾರತೀಯರು ಪತ್ರಿಕೆಗಳನ್ನು ಹೊರತರುತ್ತಿದ್ದರೋ ಅವರೆಲ್ಲರೂ ಕಟು ಸಿದ್ಧಾಂತಿಗಳಾಗಿದ್ದರು. ಸಾಮ್ರಾಜ್ಯವಾದದ ವಿರುದ್ಧದ ಸಿದ್ದಾಂತ ಅವರೆಲ್ಲರನ್ನು ಮುನ್ನಡೆಸುತ್ತಿತ್ತು. ಬಹುತೇಕ ಅವರೆಲ್ಲರೂ ಸ್ವಾತಂತ್ರ್ಯ ಹೋರಾಟಗಾರರು ಇಲ್ಲವೇ ಸ್ವಾಭಿಮಾನ ಚಳವಳಿಯ ಹೋರಾಟಗಾರರು, ನಾಯಕರು ಆಗಿದ್ದರು. ಅಂತಹ ಸ್ಪಷ್ಟ ಸೈದ್ಧಾಂತಿಕ ಬುನಾದಿಯಿಟ್ಟುಕೊಂಡು ಅವರೆಲ್ಲಾ ಬ್ರಿಟಿಷರ ವಿರುದ್ಧ ಪತ್ರಿಕೋದ್ಯಮ ನಡೆಸದಿದ್ದರೆ ಈ ದೇಶದ ಪತ್ರಿಕೋದ್ಯಮದ ಇತಿಹಾಸ ಅತ್ಯಂತ ಟೊಳ್ಳಾದ, ಬೂಸಾ ಇತಿಹಾಸವಾಗುತ್ತಿತ್ತು.
ಕೆಲ ಬ್ರಿಟಿಷ್ ಪತ್ರಕರ್ತರು ಹೇಗೆ ಬ್ರಿಟಿಷ್ ಅಧಿಕಾರಿಗಳ ಬೆಡ್ ರೂಮ್ ಸ್ಟೋರಿಗಳನ್ನು ಚಪ್ಪರಿಸಿಕೊಂಡು ಅದನ್ನೇ ಪತ್ರಿಕೋದ್ಯಮ ಎಂದು ಬೀಗುತ್ತಿದ್ದರೋ ಅಷ್ಟರಲ್ಲೇ ಭಾರತೀಯ ಪತ್ರಿಕೋದ್ಯಮ ಉಳಿದುಬಿಡುತ್ತಿತ್ತು. ಆದರೆ ಹೀಗೆ ಆಗಲು ಬಿಡದೇ ಉದಾತ್ತ ಧ್ಯೇಯಗಳ ಮೂಲಕ ದೇಶದ ಪತ್ರಿಕೋದ್ಯಮ ಬೆಳೆಸಿದ 19ನೆಯ ಶತಮಾನದ ಅಂತಹ ಧೀಮಂತ ಪತ್ರಕರ್ತರು ಹಲವರು. ಸುರೇಂದ್ರ ನಾಥ್ ಬ್ಯಾನರ್ಜಿ (ಬೆಂಗಾಲಿ ಪತ್ರಿಕೆ- 1879) ಪತ್ರಕರ್ತರಾಗಿ ಕೆಲಸ ಮಾಡುತ್ತಲೇ ಸತ್ಯ ಹೇಳಿದ ಕಾರಣಕ್ಕೆ ಬ್ರಿಟಿಷ್ ಸರ್ಕಾರ ಅವರನ್ನು ವರ್ನಾಕ್ಯುಲರ್ ಪ್ರೆಸ್ ಕಾಯ್ದೆಯ ಅಡಿ ಜೈಲಿಗಟ್ಟಿತ್ತು. ಸಂವಾದ ಕೌಮುದಿ ಎಂಬ ಪತ್ರಿಕೆ ನಡೆಸುತ್ತಿದ್ದ ರಾಜಾರಾಮ ಮೋಹನ್ ರಾಯ್ ಒಬ್ಬ ಸ್ಪಷ್ಟ ವಿಚಾರವಾದಿಯಾಗಿದ್ದರು.
ಅವರು ಈ ದೇಶದ ಅನಿಷ್ಟಗಳ ಕುರಿತೇ ತಮ್ಮ ಪತ್ರಿಕೆಯಲ್ಲಿ ಬರೆಯುತ್ತಾ ಹೋದರು. ಇದೇ ಕೆಲಸವನ್ನು ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ ಆರಂಭಿಸಿದ ಜಂಬೇಕರ್ ಮಾಡಿದರು, ಅವರು ತಮ್ಮ ದರ್ಪಣ್ ಪತ್ರಿಕೆಯ ಮೂಲಕ ಸಾಮಾಜಿಕ ಅನಿಷ್ಟಗಳು ಕುರಿತು ಜಾಗೃತಿ ಮೂಡಿಸಿದರು- ಇವರನ್ನು ಮರಾಠಿ ಪತ್ರಿಕೋದ್ಯಮದ ಪಿತಾಮಹ ಎಂದು ಕರೆಯಲಾಗುತ್ತದೆ. ಬಂಗಾಳದಲ್ಲಿ ಹರೀಶ್ಚಂದ್ರ ರಾಯ್ ಎಂಬುವವರು ಬಂಗದರ್ಶನ್ ಎಂಬ ಪತ್ರಿಕೆ ತಂದರು; ಗುಜರಾತಿಯಲ್ಲಿ ʼಬಾಂಬೆ ಸಮಾಚಾರ್ʼ ಪತ್ರಿಕೆ ಆರಂಭಿಸಿದ ಫರ್ದುನ್ಜಿ ಮರ್ಜ್ ಬಾನ್ ಎಂಬುವವರು ಸಹ ಪತ್ರಿಕೆಯ ಮೂಲಕ ಸಮಾಜ ಸುಧಾರಣೆಗೆ ಒತ್ತು ಕೊಟ್ಟರು. ಇನ್ನು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಬಾಲಗಂಗಾಧರ ತಿಲಕ್ ಕೇಸರಿ ಮತ್ತು ಮರಾಟಾ ಪತ್ರಿಕೆ ಹೊರಡಿಸುತ್ತಿದ್ದರು, ಗಾಂದೀಜಿಯವರು ಆಫ್ರಿಕಾದಲ್ಲಿದ್ದಾಗಲೇ ಇಂಡಿಯನ್ ಒಪಿನಿಯನ್ ಪತ್ರಿಕೆ ನಡೆಸುತ್ತಿದ್ದರೆ, ಭಾರತಕ್ಕೆ ಬಂದ ಮೇಲೆ ಯಂಗ್ ಇಂಡಿಯಾ ಮತ್ತು ಹರಿಜನ್ ಎಂಬ ಪತ್ರಿಕೆಗಳನ್ನು ಹೊರತಂದರು,
ಸುಭಾಷ್ ಚಂದ್ರ ಬೋಸ್ ಅವರು ಸ್ವರಾಜ್ ಪತ್ರಿಕೆಯ ಸಂಪಾದಕರಾಗಿದ್ದರು, ಲಾಲಾ ಲಜಪತ್ ರಾಯ್ ಅವರು ದ ಟ್ರಿಬ್ಯೂನ್ ಎಂಬ ಇಂಗ್ಲಿಷ್ ಪತ್ರಿಕೆ ತಂದರು, ಜೊತೆಗೆ ವಂದೆ ಮಾತರಂ ಎಂಬ ಉರ್ದು ಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು- ಇವುಗಳ ಮೂಲಕ ಸ್ವದೇಶಿ ಚಿಂತನೆಯನ್ನು ಅಥವಾ ಸಿದ್ಧಾಂತವನ್ನು ಪ್ರಚುರಪಡಿಸಿದರು, ಹೋಂರೂಲ್ ಚಳವಳಿಯ ಮುಂದಾಳು ಅನಿಬೆಸೆಂಟ್ ಅವರು ನ್ಯೂ ಇಂಡಿಯಾ ಪತ್ರಿಕೆ ತಂದರು, ಇನ್ನು ಮದನ್ ಮೋಹನ್ ಮಾಳವೀಯ ಅವರು ಮೋತಿಲಾಲ್ ನೆಹರೂ ಜೊತೆ ಸೇರಿಕೊಂಡು ದ ಲೀಡರ್ ಎಂಬ ಪತ್ರಿಕೆ ತಂದರೆ, ನಂತರ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯನ್ನೂ ಪುನರುಜ್ಜೀವಗೊಳಿಸಿದರು. ಇನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ʼಅಸ್ಪೃಶ್ಯರಿಗೆ ಈ ದೇಶದಲ್ಲಿ ಪತ್ರಿಕೆಯಿಲ್ಲʼ ಎಂದು ಘೋಷಿಸಿ ಮೊದಲಿಗೆ ಶಾಹು ಮಹಾರಾಜರ ಬೆಂಬಲದಿಂದ ಮೂಕನಾಯಕ ಪತ್ರಿಕೆ (1920) ತಂದರು; ನಂತರ ಬಹಿಷ್ಕೃತ ಭಾರತ (1927), ನಂತರ ಸಮತಾ (1928), ನಂತರ ಜನತಾ (1930) ಹಾಗೂ ಪ್ರಬುದ್ಧ ಭಾರತ (1956) ಪತ್ರಿಕೆಗಳನ್ನು ಹೊರಡಿಸಿ ನಿರಂತರವಾಗಿ ಅವುಗಳಲ್ಲಿ ಬರೆಯುತ್ತಾ ತಾವೊಬ್ಬ ಧೀಮಂತ ಪತ್ರಕರ್ತ ಎಂಬುದನ್ನೂ ನಿರೂಪಿಸಿದ್ದರು.
ಇವರನ್ನೆಲ್ಲಾ ಹೊರಗಿಟ್ಟು ಕೇವಲ ಬ್ರಿಟಿಷರು ತಂದ ಬೆಂಗಾಲ್ ಗೆಜೆಟ್ ನಂತವುಗಳನ್ನು ಮಾತ್ರವೇ ಭಾರತದ ಪತ್ರಿಕೋದ್ಯಮದ ಇತಿಹಾಸ ಎಂದು ಹೇಳಲು ಬರುತ್ತದೆಯೇ? ಈ ದೇಶದ ಪತ್ರಿಕೋದ್ಯಮದ ಇತಿಹಾಸದ ಸೈದ್ಧಾಂತಿಕ ಅಡಿಪಾಯ ಅತ್ಯಂತ ಭದ್ರವಾಗಿತ್ತು ಎಂಬುದಕ್ಕೆ ಇವೆಲ್ಲಾ ಸಾಕ್ಷಿಯಲ್ಲವೆ? ಅಲ್ಲಿ ಎಡಬಿಡಂಗಿತನಕ್ಕೆ, ಸೊ ಕಾಲ್ಡ್ ತಟಸ್ಥತೆಗೆ ಯಾವುದೇ ಅವಕಾಶವಿರಲಿಲ್ಲ. ಈ ದೇಶವನ್ನು ಕಾಡುತ್ತಿದ್ದ ಸಾಮ್ರಾಜ್ಯಶಾಹಿ ಮತ್ತು ಬ್ರಾಹ್ಮಣಶಾಹಿ ಶಕ್ತಿಗಳನ್ನು ನೇರವಾಗಿ ಎದುರಿಸಿಯೇ ಭಾರತದ ಪತ್ರಿಕೋದ್ಯಮ ನಡೆದುಕೊಂಡುಬಂದಿದೆ ಎಂಬುದಕ್ಕೆ ಮೇಲಿನ ಉದಾಹರಣೆಗಳೇ ಸಾಕ್ಷಿ.
ಸ್ವಾತಂತ್ರ್ಯಾನಂತರದಲ್ಲಿ, ನಮ್ಮ ಕರ್ನಾಟಕದಲ್ಲೇ ನಾವು ಯಾರನ್ನೆಲ್ಲಾ ಇಂದು ಧೀಮಂತ ಪತ್ರಕರ್ತರೆಂದು ಪರಿಗಣಿಸಿದ್ದೇವೆಯೋ, ಯಾರನ್ನೆಲ್ಲಾ ಆದರ್ಶ ಎಂದು ನೋಡುತ್ತೇವೆಯೋ ಅವರೆಲ್ಲರೂ ಅತ್ಯಂತ ಸ್ಪಷ್ಟ ಮತ್ತು ದೃಢವಾದ ಸಿದ್ಧಾಂತಿಗಳೇ ಆಗಿದ್ದರು ಎಂಬುದನ್ನು ಮರೆಯಬಾರದು. ಕರ್ನಾಟಕದ ಪತ್ರಿಕೋದ್ಯಮಕ್ಕೇ ಹೊಸ ಮೆರಗು ತಂದು ಸಂಚಲನ ಮೂಡಿಸಿದ ಪಿ. ಲಂಕೇಶ್ ಅವರು ಕಡಿಮೆ ಸಿದ್ಧಾಂತಿಯೇ? ಸ್ಪಷ್ಟ ಸೈದ್ಧಾಂತಿಕ ತಳಹದಿಯ ಪತ್ರಿಕೋದ್ಯಮವೇ ಅವರ ಆಕ್ಟಿವಿಸಂ ಆಗಿತ್ತು ಮಾತ್ರವಲ್ಲ ಪತ್ರಿಕೋದ್ಯಮದ ಮೂಲಕ ಸಾಮಾಜಿಕ ರಾಜಕೀಯ ಬದಲಾವಣೆಯನ್ನೂ ಮಾಡಲು ಸಾಧ್ಯ ಎಂದು ಪಿ ಲಂಕೇಶ್ ಒಂದು ಮಾದರಿಯನ್ನೇ ಸೃಷ್ಟಿಸಿದರು. ಅದು ಸಾಧ್ಯವಾಗಿದ್ದೇ ಅವರ ಕಟಿಬದ್ಧ ಸೈದ್ಧಾಂತಿಕ ನಿಲುವಿನಿಂದ.
ನಾಡು ಕಂಡ ಮತ್ತೊಬ್ಬ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿ ಕೂಡಾ ಗಟ್ಟಿ ತಾತ್ವಿಕ ನಿಲುವುಗಳ ಮೂಲಕ ನಾಡಿನ ಜನರನ್ನು ತಲುಪಿದರು. ಇನ್ನು 70-80ರ ದಶಕಗಳಲ್ಲಿ ಭಾರತೀಯ ಪತ್ರಿಕೋದ್ಯಮದ ಧೀಮಂತ ಪರಂಪರೆಯಲ್ಲಿ ಸಾಗಿದ ಹಲವಾರು ಕನ್ನಡ ಪತ್ರಿಕೆಗಳಿದ್ದವು- ಸುದ್ದಿ ಸಂಗಾತಿ, ಶೂದ್ರ, ಪಂಚಮ, ಸಮುದಾಯ, ಸಂಕ್ರಮಣ ಮುಂತಾದ ನಿಯತಕಾಲಿಕೆಗಳು ಕನ್ನಡಿಗರ ಅರಿವಿನ ವಿಸ್ತರಣೆಯಲ್ಲಿ ಕಡಿಮೆ ಕೆಲಸ ಮಾಡಿವೆಯೇ? ಹಾಗಾದರೆ ಇವೆಲ್ಲವೂ ಖಚಿತ ಸೈದ್ದಾಂತಿಕತೆಯಿಂದಲೇ ನಡೆಯಲಿಲ್ಲವೇ?
ಇನ್ನು ಕಳೆದ ಕೆಲವು ದಶಕಗಳಲ್ಲಿ, ಅಗ್ನಿ, ಹಾಯ್ ಬೆಂಗಳೂರು, ಗೌರಿ ಲಂಕೇಶ್ ವಾರಪತ್ರಿಗಳೂ ತಮ್ಮ ಛಾಪು ಮೂಡಿಸಿದವು. ಪಿ ಲಂಕೇಶರ ಸ್ಪೂರ್ತಿಯಲ್ಲೇ ದೊಡ್ಡ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ಅನಾವರಣಗೊಳಿಸಿದವು. ಇದ್ದುದರಲ್ಲಿ ರವಿ ಬೆಳಗರೆ ಎಡಬಿಡಂಗಿಯಾಗಿ ಕ್ರೈಂ, ಸೆಕ್ಸ್ ಗಳನ್ನ ಅಸ್ತ್ರವಾಗಿಸಿಕೊಂಡು ಟ್ಯಾಬ್ಲಾಯ್ಡ್ ಪತ್ರಿಕೋದ್ಯಮವನ್ನು ಹಳ್ಳ ಹಿಡಿಸಿದರೂ ಹಾಯ್ ಬೆಂಗಳೂರು ಸಹ ಅನೇಕ ಬ್ರಷ್ಟಾಚಾರ ಹಗರಣಗಳನ್ನು ಬಯಲು ಮಾಡಿದ್ದು ಸತ್ಯ.
ಯಾವನ್ನು ನಾವು ದಿನಪತ್ರಿಕೆಗಳು ಅಥವಾ ವೃತ್ತ ಪತ್ರಿಕೆಗಳು ಎನ್ನುತ್ತೇವೆಯೋ ಇವುಗಳ ಆದ್ಯತೆ ದಿನನಿತ್ಯದ ಸುದ್ದಿಗಳನ್ನು ಜನರಿಗೆ ತಲುಪುವುದು ಮಾತ್ರವಾಗಿದ್ದ ಕಾರಣ ಬಹಳ ಪತ್ರಿಕೆಗಳಲ್ಲಿ ಸೈದ್ಧಾಂತಿಕತೆ ದೊಡ್ಡ ವಿಷಯವಾಗಲಿಲ್ಲ. ಆದರೆ ಅಂತಹ ಕಡೆಗಳಲ್ಲಿ ಸಹ ದೊಡ್ಡ ದೊಡ್ಡ ಸಿದ್ಧಾಂತಿಗಳು ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದ್ದರು ಮತ್ತು ತಮ್ಮ ಖಚಿತ ಅಭಿಪ್ರಾಯಗಳನ್ನು ಆ ವೇದಿಕೆಗಳ ಮೂಲಕ ಜನರಿಗೆ ತಲುಪಿಸುತ್ತಾ ಬಂದಿದ್ದರೆಂಬುದನ್ನು ನಾವು ಮರೆಯಕೂಡದು.
ಈಗ ಹೇಳಿ, ನಮ್ಮ ಪತ್ರಿಕೋದ್ಯಮಕ್ಕೆ ಸಿದ್ಧಾಂತ ಬೇಡವೆ, ಪತ್ರಕರ್ತರಾಗಿರುವವರು ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬಾರದೆ? ಆಕ್ಟಿವಿಸ್ಟುಗಳು ಪತ್ರಕರ್ತರಾಗುವುದು ಅಪರಾಧವೆ? ಪತ್ರಿಕೋದ್ಯಮ ಆಕ್ಟಿವಿಸಂಗೆ ಪೂರಕವಾಗಿರಬಾರದೆ? ಇಂದು ಬ್ರಾಹ್ಮಣ್ಯದ ದಿಗ್ವಿಜಯ ಮತ್ತೊಮ್ಮೆ ನಿಜವಾಗುವ ಕರಾಳ ಛಾಯೆ ಇಡೀ ದೇಶವನ್ನು ಆವರಿಸಿಕೊಂಡಿರುವಾಗ, ಬಾಬಾಸಾಹೇಬರು ಎಚ್ಚರಿಸಿದ್ದ ಆ ʼಪ್ರತಿಕ್ರಾಂತಿʼ ತನ್ನ ಕಬಂಧಬಾಹುಗಳನ್ನು ಚಾಚಿಕೊಂಡ ಎಲ್ಲವನ್ನೂ ನೊಣೆಯುತ್ತಿರುವಾಗ, ಅಪರಾಧವೇ ಅಧಿಕಾರವಾಗಿ ದೇಶದ ಪ್ರಮುಖ ಸಂಸ್ಥೆಗಳೆಲ್ಲವನ್ನೂ ನುಂಗಿ ನೀರುಕುಡಿದು ತಮ್ಮ ಅಂಕೆಯಲ್ಲಿ ತಂದುಕೊಂಡು ಇಡೀ ದೇಶದ ಜನರಿಗೆ ಕರಾಳತೆ ದರ್ಶನ ಮಾಡುತ್ತಾ ಭ್ರಷ್ಟಾಚಾರದ ವ್ಯಾಖ್ಯಾನವನ್ನೇ ತಿರುಗುಮರುಗು ಮಾಡುತ್ತಿರುವಾಗ ಸೊ ಕಾಲ್ಡ್ ತಟಸ್ಥತೆಯ ಬದನೇಕಾಯಿಯನ್ನು ನೆಚ್ಚಿಕೊಳ್ಳದೇ ನಿರ್ಧಾರಿತ ಜನಾಂದೋಲನಗಳಿಗೆ ಪೂರಕವಾಗಿ ಪತ್ರಿಕೋದ್ಯಮ ಮತ್ತು ಪತ್ರಕರ್ತರಾದವರು ಜೊತೆಗೂಡುವುದು ಬೇಡವೇ?
‘ಬೇಡ’ ಎಂಬ ಅಭಿಪ್ರಾಯ ನಿಮ್ಮದಾಗಿದ್ದರೆ ನಿಮ್ಮ ಬಳಿ ಹೇಳಲು ನನಗೆ ಏನೂ ಉಳಿದಿಲ್ಲ. ನೀವು ನಿಮ್ಮದೇ ಸುಖಾಸನದಲ್ಲಿ ನೆಮ್ಮದಿಯಾಗಿ ಪವಡಿಸಬಹುದು, ನನಗೇನೂ ಅಭ್ಯಂತರವಿಲ್ಲ. (ಬರಹ- ಹರ್ಷಕುಮಾರ್ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
ವಿದ್ಯಾನಾಯ್ಕ್ ಅರೇಹಳ್ಳಿ
ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.
ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.
ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.
ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.
ನಾಯಕ ನಟನಾಗಿ ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.
ಇನ್ನು 2022ರಲ್ಲಿ ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪರಿಶ್ರಮ ಮತ್ತು ಫಿಟ್ನೆಸ್
ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.
ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್
ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ
ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.
ಬಂಜಾರ ಹವೇಲಿಯ ಹರಿಕಾರ
ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.
ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.
ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ


