ಸಿನಿ ಸುದ್ದಿ
EXCLUSIVE INTERVIEW | ‘ಶಬ್ಧ ಗಾರುಡಿಗ ಟಗರು ಮಾಸ್ತಿ’ ಮನದಾಳ
” ಚಿಟ್ಟೆ…ಅಂಕಲ್ ನಾ ಹೊಡಿತೀನಿ…ಹೇ ಬಿಡು ಸುಬ್ಬಿ…ಬೆಳಗ್ಗೆ ಹಾಲು ತುಪ್ಪ ಬಿಡೋದ್ರೊಳಗೆ ಅಂಕಲ್ ನಾ ಹೊಡಿತೀನಿ; ಅಂಕಲ್ ನಾ ಹೊಡಿತೀನಿ”. ” ನಿಂದು ಒಂದ್ ಜನ್ಮ, ನಿಮ್ಗೂ ಒಂದ್ ಜನ್ಮದಿನ ಬೇರೆ ಕೇಡು”. ” ಮೀಸೆ, ಗಡ್ಡ, ಬಿಟ್ಟೋರ್ನೆಲ್ಲ ಗಂಡ್ಸು ಅನ್ನೋದಾದ್ರೆ ಕರಡಿ ಎಲ್ಲಕ್ಕಿಂತ ದೊಡ್ ಗಂಡ್ಸು”. ” ನಾವು ಮ್ಯಾಚ್ನಲ್ಲಿ ಸೋಲಲ್ಲ, ಅಕಸ್ಮಾತ್ ಸೋತ್ರೂ..ಮ್ಯಾನ್ ಆಫ್ ದಿ ಮ್ಯಾಚ್ ನಮ್ದೆ”. ಸುಕ್ಕಾ ಸೂರಿಯವರ ‘ಟಗರು’ ಸಿನೆಮಾದ ಇಂಥ ಸಂಭಾಷಣೆಯ ಜಂಗಮ ಭಾವ, ನೋಡುಗನ ಎದೆಯಲ್ಲಿ ಸ್ಥಾವರಗೊಳ್ಳುವಂತೆ ಮಾಡಿ, ತಮ್ಮ ರೋಚಕ, ರಂಜನೀಯ, ಕಿಲಾಡಿತನದ ಮಾತುಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದಾರೆ ಸಂಭಾಷಣಾಕಾರ ಮಂಜು ಮಾಸ್ತಿ. ಇವರು ಮಾಸ್ತಿ ಎಂತಲೇ ಚಂದನವನದಲ್ಲಿ ಚಿರಪರಿಚಿತ.
‘ಶಬ್ದದೊಳಗೆ ನಿಶ್ಯಬ್ದ ; ನಿಶ್ಯಬ್ದದೊಳಗೆ ಶಬ್ದ’ ಹುಡುಕುತ್ತಾ..ಕತೆಗಾರನಾಗಿ, ಸಂಭಾಷಣಾಕಾರನಾಗಿ, ನಟನಾಗಿ, ಒಬ್ಬ ಒಳ್ಳೆಯ ಓದುಗನಾಗಿ ಎಲ್ಲರ ಚಿತ್ತ ತನ್ನತ್ತ ಹೇಗೆ ಸೆಳೆಯ ಬೇಕು ಎಂಬ ಚಾಲಾಕಿತನದ ಶಬ್ದಮಾಂತ್ರಿಕ ಮಾಸ್ತಿ ಅವರು, ನಿಜಕ್ಕೂ ಒಬ್ಬ ಬರಹಗಾರ ತಮ್ಮ ಬರವಣಿಗೆಯನ್ನ ಪಾಲಿಶ್ ಮಾಡಿಕೊಳ್ಳ ಬೇಕಾದಾಗ, ತಾನು ಬದುಕುತ್ತಿರುವ ಸಮಾಜದೊಟ್ಟಿಗೆ ಹೇಗೆಲ್ಲಾ ಸಂಪರ್ಕವಿಟ್ಟುಕೊಳ್ಳಬೇಕು, ದೈನಂದಿನ ಜೀವನದ ಸಂಗತಿಗಳನ್ನು ತನ್ನ ಕುತೂಹಲದ ಕಣ್ಣಿನ್ನಿಂದ ಹೇಗೆಲ್ಲಾ ನೋಡ ಬಹುದು ಎಂಬುದಕ್ಕೆ ಟಗರು ಸಿನೆಮಾದ ಸಂಭಾಷಣೆಯೇ ಸಾಕ್ಷಿ. ಶಬ್ದಗಾರುಡಿಗ ನಂತೆ ಕಾಣುವ ಈ ಮಾಸ್ತಿ ನಿಜಕ್ಕೂ ಕನ್ನಡದ ಆಸ್ತಿಯೇ. ಏಕೆಂದರೆ ಇವರೊಳಗಿರುವ ಒಬ್ಬ ಸಹೃದಯನೇ ಇವರನ್ನ ಬೆಳೆಸಿದೆ, ಮುಂದೆಯೂ ಬೆಳೆಸುತ್ತದೆ ಎಂಬುದು ನಮ್ಮ ಮನದ ಸೂಕ್ಷ ಗ್ರಹಿಸಿದ್ದು. ಇಂತಹ ಒಬ್ಬ ‘ಸೂಕ್ಷ್ಮಜ್ಞ’ನೊಂದಿಗೆ ಸುದ್ದಿದಿನ ತನ್ನ ಮಾತು-ಕತೆಯಲ್ಲಿ ಮಾತನಾಡಿಸಿದಾಗ ಅವರು ಎದೆ ತುಂಬಿ ಮಾತನಾಡಿದ್ದಾರೆ. ಅದರ ಅಕ್ಷರ ರೂಪ ಇಲ್ಲಿದೆ.
ಟಗರು ಮಾಸ್ತಿ ಮನದಾಳ
ಬಾಲ್ಯದಿಂದಲೂ ಸಾಹಿತ್ಯದ ಓದು, ಬರವಣಿಗೆಯಲ್ಲಿ ತೊಡಗಿಸಿಕೊಂಡು,ಬರವಣಿಗೆಯಲ್ಲಿಯೇ ಬದುಕು ಕಾಣಬೇಕು ಎಂಬ ಕನಸಿದ್ದರೂ ಅದು ಅಸಾಧ್ಯವೇನೋ ಎಂಬ ಅಪನಂಬಿಕೆ ನನ್ನನ್ನು ಕಾಡಿದ್ದು ಸತ್ಯ. ಆದರೆ ಸಿನೆಮಾರಂಗಕ್ಕೆ ಬಂದಮೇಲೆ ಬರಹಗಾರನಿಗಿರುವ ಶಕ್ತಿ ಎಂಥದ್ದು ಅನ್ನೋದು ನನಗೆ ಮನವರಿಕೆಯಾಗಿದೆ. ಅದರಲ್ಲೂ ಸೂರಿ ಸರ್ ‘ಟಗರು’ ಸಿನೆಮಾ ನನ್ನನ್ನು ಈ ಮಟ್ಟಿಗೆ ಗುರುತಿಸುವಂತೆ ಮಾಡಿದ ಮೇಲಂತೂ ಬರವಣಿಗೆಯೇ ನನ್ನ ಜೀವಾಳ,ಜೀವನ ಆಗಿಬಿಟ್ಟಿದೆ.
ಅಂದಹಾಗೆ ನಾನು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕೆ.ಉಪ್ಪಾರಹಳ್ಳಿ ಎಂಬ ಗ್ರಾಮದವನು. ನಮ್ಮದು ಮಿಡಲ್ ಕ್ಲಾಸ್ ಫ್ಯಾಮಿಲಿ. ತುಂಬಾ ಕಷ್ಟಗಳ ಜೊತೆಗೆ ಬೆಳೆದವನು. ಆ ಕಷ್ಟಗಳನ್ನೇ ನನ್ನ ಜೀವನೋತ್ಸಾಹವಾಗಿ ಪ್ರೀತಿಯಿಂದ ಬದುಕುತ್ತಾ ಬಂದೆ. ನನ್ನ ಕಡು ಕಷ್ಟಗಳೇ ನನ್ನ ಒಬ್ಬ ಬರಹಗಾರನಾಗಿ ಮಾಡಿದವು ಅಂದ್ರೆ ತಪ್ಪಾಗಲಾರದು. ನನ್ನ ಆ ದಿನಗಳ ‘ನೆನಪಿನ ಬುತ್ತಿ’ ಯನ್ನೇ ಬರವಣಿಯ ಮೂಲವಾಗಿಸಿಕೊಂಡು ಬರೆಯಲು ಹೊರಟೆ. ಪ್ರೈಮರಿ ಶಾಲೆಯಿಂದಲೂ ನಾನು ಬಾಲಮಿತ್ರ, ಚಂದಮಾಮ, ಕಾಮಿಕ್ಸ್ ಬುಕ್, ಜನಪದ ಕತೆಗಳು, ಪಂಚತಂತ್ರ ಕತೆಗಳನ್ನು ನಾನು ಅಚ್ಚುಕಟ್ಟಾಗಿ ಓದಿಕೊಂಡು ಬಂದೆ. ಆ ಕತೆಗಳ ಮೂಲ ಆಶಯ ‘ನೀತಿ’ ಹೇಳುವುದೇ ಆಗಿದ್ದರಿಂದ ಅವು ನನ್ನನ್ನು ಆವಾಹಿಸಿಕೊಂಡು ಬಿಟ್ಟವು. ಹಾಗೇ ಶಾಲೆಯಲ್ಲಿ ಮೇಷ್ಟ್ರುಗಳು ಹೇಳುತ್ತಿದ್ದ ಕತೆಗಳು ನನ್ನನ್ನ ತುಂಬಾ ಕಾಡಿದವು. ನಮ್ಮ ಮೇಷ್ಟುಗಳು ತುಂಬಾ ವಿಶಿಷ್ಟವಾಗಿ ಕತೆಹೇಳುವ ಪರಿಯೇ ನನ್ನ ಕುತೂಹಲವನ್ನು ಕೆರಳಿಸುತ್ತಿದ್ದವು.ನಾನು ಕತೆಗಳನ್ನು ಮಂತ್ರ ಮುಗ್ಧನಾಗಿ ಕೇಳುತ್ತಿದ್ದೆ.
ನಮ್ಮ ಮನೆಯಲ್ಲಿ ಆಗಾಗ ನಮಗೆ ಕಾಸುಕೊಟ್ಟು ಟೆಂಟ್ ಗಳಲ್ಲಿ ಸಿನೆಮಾ ನೋಡಲು ಕಳುಹಿಸುತ್ತಿದ್ದರು. ಟೆಂಟ್ ಒಳಗೆ ಕೂತು ನೋಡುವ ಸಿನೆಮಾಗಳು ನನಗೆ ಮಾಯಾಲೋಕದಂತೆ ಭಾಸವಾಗುತ್ತಿತ್ತು. ಸಿನೆಮಾ ನೋಡಿ ಬಂದಾಗಿನ ಖುಷಿ ಹೇಳಲು ನನಗೆ ಪದಗಳೇ ಸಾಲುತ್ತಿರಲಿಲ್ಲ. ಅಷ್ಟೊಂದು ಆಳವಾಗಿ ಇಳಿದು ಹೋಗಿಬಿಡ್ತಾಇದ್ದೆ ಸಿನೆಮಾಗಳನ್ನ ನೋಡಿ. ಈಗ ವಿದೇಶಕ್ಕೆ ಹೋಗಿಬಂದಾಗ ಆಗುವಂತಹ ಖುಷಿ , ಆಗ ಸಿನೆಮಾ ನೋಡಿದಾಗ ಆಗ್ತಾ ಇತ್ತು. ಸಿನೆಮಾ ಪರದೆಯೊಳಗೆ ಕಾಣುವ ದೃಶ್ಯಗಳು ನನ್ನನ್ನ ಮೈಮರೆಸುತ್ತಿದ್ದವು. ಆಗ ಅಂಥಹ ಸಿನೆಮಾಗಳು ಬರ್ತಾ ಇದ್ವು ಬಿಡಿ (ಈಗಲೂ ಬರ್ತಾ ಇದಾವೆ) . ಹೀಗೆ ಸಿನೆಮಾಗಳು ನನ್ನ ಕಾಡಿದ್ದರಿಂದ ಸಿನೆಮಾವನ್ನ ಆರಾಧಿಸುತ್ತಾ ಬಂದೆ. ಕೆಲವು ನನ್ನ ಸ್ನೇಹಿತರು ಸಿನೆಮಾ ನೋಡಿ ಬಂದು ಅಭಿನಯದ ಮೂಲಕ ರೋಚಕವಾಗಿ ಸಿನೆಮಾ ಕತೆ ಹೇಳ್ತಾ ಇದ್ರು, ಅವರು ಹೇಳೋ ಕತೆಗಳನ್ನ ತದೇಕ ಚಿತ್ತದಿಂದ ಕೇಳ್ತಾ, ನೋಡ್ತಾ ಇದ್ದೆ. ಈ ಸಂಗತಿಗಳೂ ಕೂಡಾ ನನ್ನ ಸಿನೆಮಾ ಮೇಲಿನ ಪ್ರೀತಿಯನ್ನ ಹೆಚ್ಚಿಸ್ತಾ ಬಂದ್ವು. ಜೊತೆಗೆ ಅಪರೂಪಕ್ಕೊಮ್ಮೆ ನನಗೆ ಮನೇಲಿ ಹೊಸ ಪುಸ್ತಕ ಕೊಡಿಸ್ತಾ ಇದ್ರು, ನಾನು ಆ ಪುಸ್ತಕದ ಪುಟಗಳನ್ನ ತಿರುವಿಹಾಕಿ ಹಾಳೆಗಳ ವಾಸನೆಯನ್ನ ಗ್ರಹಿಸ್ತಾ ಇದ್ದೆ. ಬಹುಶಃ ಹಾಳೆಗಳ ಅಕ್ಷರದ ಇಂಕು ಹಾಗೂ ಹಾಳೆಗಳ ಪರಿಮಳವೇ ಕತೆಗಳನ್ನ ಓದಿ ಆಸ್ವಾದಿಸುವ ಹುಚ್ಚು ಬಿಡಿಸಿ ಬಿಟ್ಟವು. ಒಟ್ಟಾರೆ ಕನ್ನಡ ಮೀಡಿಯಂ, ಸರ್ಕಾರಿ ಶಾಲೆಗಳೇ ನನ್ನ ಬರವಣಿಗೆಯ ಶಕ್ತಿ ಎಂದರೆ ಅತಿಶಯೋಕ್ತಿಯಾಗಲಾರದು.
ನಮ್ಮ ಊರಿಗೆ ತೆಲುಗು ಭಾಷೆಯ ಪ್ರಭಾವ ಹೆಚ್ಚು, ನಾನು ಅದರ ಪ್ರಭಾವಕ್ಕೆ ಬಲಿಯಾಗಲಿಲ್ಲ. ತೆಲುಗು ಸಿನೆಮಾಗಳು ತುಂಬಾ ಪ್ರದರ್ಶನ ಕಾಣ್ತಾಇದ್ವು ಆಗ. ತೆಲುಗಿನ ಹಲವು ಸಿನೆಮಾಗಳು ಕ್ರೈಂ ಮತ್ತು ಸೆಕ್ಸ್ ಅನ್ನ ವೈಭವೀಕರಿಸಿ ಸಹಜತೆಯೇ ಕಾಣೆಯಾಗಿದ್ದುದರಿಂದ ನಾನು ಅಂಥಹ ಸಿನೆಮಾಗಳನ್ನು ವಿರೋಧಿಸುತ್ತಾ ಬಂದೆ. ತೆಲುಗಿನ ಅಂತಹ ಸಿನೆಮಾಗಳು ಕನ್ನಡ ಸಿನೆಮಾಗಳ ಮೇಲೂ ಪ್ರಭಾವ ಬೀರಿದವು. ಆದರೆ ಅವ್ಯಾವೂ ಅಷ್ಟು ಹಿಟ್ ಆಗಲಿಲ್ಲ, ಜನರು ಅಂಥಹ ಸಿನೆಮಾಗಳನ್ನ ತಿರಸ್ಕರಿಸಿದ್ರೂ ಕೂಡಾ. ಏಕಂದ್ರೆ ಅವು ನಮ್ಮ ಕನ್ನಡದ ನೆಲಕ್ಕೆ ಒಗ್ಗುವಂತವಲ್ಲ. ನಮ್ಮ ನೆಲದಗುಣವಿರುವ ಕನ್ನಡ ಸಿನೆಮಾಗಳು ಅಮ್ಮ ಮಾಡಿದ ಅಡುಗೆ ತರ, ತುಂಬಾ ರುಚಿ ಹಾಗೂ ದೇಹಕ್ಕೆ ಒಳ್ಳೆಯದು.ಹಾಗಾಗಿ ಕನ್ನಡ ಸಿನೆಮಾರಂಗಕ್ಕೆ ಹೇಗಾದ್ರೂ ಬರಬೇಕು ಅನ್ನೋತುಡಿತ ನನ್ನಲ್ಲಿ ಹೆಚ್ಚಾಗ್ತಾ ಬಂತು. ನನಗೆ ಸಿನೆಮಾದ ಹಿನ್ನೆಲೆಯಿಲ್ಲದಿದ್ದರೂ ನನಗೆ ಸಿನೆಮಾ ಮೇಲಿರುವ ಪ್ರೀತಿಯೇ ನನ್ನ ಸಿನೆಮಾ ಹಿನ್ನೆಲೆ.
ನನ್ನ ಸಿನೆಮಾ ಎಂಟ್ರಿ
ಸಿನೆಮಾದಲ್ಲಿ ಹೇಗಾದರೂ ಕೆಲಸ ಮಾಡ್ಬೇಕು ಅನ್ನೋ ಹಂಬಲದಿಂದ ತುಂಬಾ ಸೈಕಲ್ ಹೊಡೆದೆ. ಆದ್ರೆ ಯಾವ ಅವಕಾಶಗಳೂ ನನಗೆ ದಕ್ಕಲಿಲ್ಲ. ಆದ್ರೆ ಒಮ್ಮೆ ನಮ್ಮ ಮನೆಯ ಹತ್ತಿರದಲ್ಲಿ ತುಷಾರ್ ರಂಗನಾಥ್ (ಗುಲಾಮ, ಕಂಠೀರವ ಸಿನೆಮಾ ನಿರ್ದೇಶಕ) ಸಿನೆಮಾದಲ್ಲಿ ಕೆಲಸ ಮಾಡ್ತಾರೆ ಅಂತ ಗೊತ್ತಿತ್ತು. ಅವರನ್ನ ಹೇಗೋ ಕಷ್ಟಪಟ್ಟು ಪರಿಚಯ ಮಾಡ್ಕೊಂಡೆ. ಈ ಸಮಯದಲ್ಲಿ ಅವರು ಸಾಧುಕೂಕಿಲಾ ನಿರ್ದೇಶನದ, ದರ್ಶನ್ ಅಭಿನಯದ ‘ಸುಂಟರಗಾಳಿ’ ಸಿನೆಮಾಗೆ ಸಹ ನಿರ್ದೇಶಕ ನಾಗಿ ಕೆಲಸ ಮಾಡ್ತಿದ್ರು. ಈ ಸಿನೆಮಾ ‘ಚಿತ್ರಕತೆ’ ಯ ಬಗ್ಗೆ ಚರ್ಚೆ ಮಾಡೋದಿಕ್ಕಾಗಿ ನನ್ನ ಕರ್ಕೊಂಡ್ ಹೋದ್ರು. ಸುಂಟರಗಾಳಿ ಸಿನೆಮಾದಲ್ಲಿ ದರ್ಶನ್ ಅವರು ಹೇಗೆ ಎಂಟ್ರಿ ಆಗ್ಬೇಕು ಅನ್ನೋ ದೃಶ್ಯದ ಬಗ್ಗೆ ಚರ್ಚೆ ನಡೀತಾ ಇತ್ತು, ಆಗ ನನಗೆ ತೋಚಿದ, ಪಕ್ಕಾ ಮಾಸ್ ಆಗಿ ಇರೋ ಒಂದ್ ದೃಶ್ಯಾನ ವಿವರಿಸ್ತಾ ಹೋದೇ, ಆಗ ಎಲ್ರೂ ಖುಷಿಯಿಂದ ಒಪ್ಪೊಂಡ್ರು. ಅವತ್ತೇ ನನ್ನ ಸಿನೆಮಾದ ಎಂಟ್ರಿಯೂ ಆಗೋಯ್ತು. ತುಂಬಾನೆ ಖುಷಿಕೊಡೋ ಸಂಗತಿ ನನಗದು.
ಸೂರಿ – ಭಟ್ಟರ ಸಹವಾಸ
ಸುಂಟರಗಾಳಿ ಸಿನೆಮಾಗೆ ಸೂರಿ ಸರ್ ಕೂಡ ಸಹ ನಿರ್ದೇಶಕರಾಗಿ ಕೆಲಸ ಮಾಡ್ತಿದ್ರು. ತುಷಾರ್ ರಂಗನಾಥ್ ಕಡೆಯಿಂದ ಅವರ ಪರಿಚಯವಾಯ್ತು. ನಂತರ ಅದೇ ಸಮಯದಲ್ಲಿ ಸೂರಿ ಸರ್ ಹಾಗೂ ಯೋಗರಾಜ್ ಭಟ್ ಸರ್ ಬಿ.ಸುರೇಶ್ ಅವರ ನಿರ್ದೇಶನದ ‘ಸಾಧನೆ’ ಎಂಬ ಧಾರಾವಾಹಿಯಲ್ಲಿ ಕೆಲಸ ಮಾಡ್ತಿದ್ರು. ಸಾಧನೆ ಧಾರಾವಾಹಿಯ ಸೆಟ್ ಗೆ ನನ್ನನ್ನೂ ಕೂಡ ಕರೆದುಕೊಂಡು ಹೋಗ್ತಾದ್ರು ತುಷಾರ್ ರಂಗನಾಥ್. ಆಗ ಅವರ ಜೊತೆ ಸಿನೆಮಾಗೆ ಸಂಭಂದಿಸಿದ ವಿಷಯಗಳನ್ನ ಚರ್ಚೆ ಮಾಡ್ತಾ ಅವರೊಳಗೆ ನನ್ನೊಬ್ಬನನ್ನಾಗಿ ಮಾಡ್ಕೊಂಡ್ರು ಸೂರಿ ಸರ್ ಹಾಗೂ ಭಟ್ ಸರ್. ಹಾಗೇ ಇನ್ನೊಂದ್ ವಿಷಯ ಹೇಳಲೇ ಬೇಕು ನಾನು. ಮುಂಗಾರು ಮಳೆ ಸಿನೆಮಾ ಮಾಡಿ ಭಟ್ ಸರ್ ಒಂದ್ ಟ್ರೆಂಡ್ ಸೆಟ್ ಮಾಡಿದ್ರು,ಹಾಗೆ ಸಿನೆಮಾ ಒಳ್ಳೆಯ ಲಾಭವನ್ನ ನಿರ್ಮಾಪಕರಿಗೆ ತಂದು ಕೊಡ್ತು. ಆಗ ಇನ್ಫೋಸಿಸ್ ನ ನಾರಾಯಾಣ ಮೂರ್ತಿಯವರು ಭಟ್ ಸರ್ ಅವರನ್ನ ಕರೆಸಿ ಹೇಳಿದ್ರಂತೆ, ” ಕನ್ನಡದಲ್ಲಿ ಇಂತಹ ಒಂದು ಒಳ್ಳೆಯ ಸಿನೆಮಾ ಕೋಟಿಗಟ್ಟಲೆ ಹಣ ಮಾಡೋದು ಅಂದ್ರೆ ಸುಮ್ನೆ ಮಾತಲ್ಲ, ನಾವು ಏನೆಲ್ಲಾ ಮಾಡ್ತೀವಿ, ಅದ್ರೆ ಒಂದ್ ಸಿನೆಮಾ ಮಾಡಿ ನೀವು ಎಲ್ಲರೀತಿಯಿಂದಲೂ ಯಶಸ್ಸುಗಳಿಸಿದರ ಬಗ್ಗೆ ತುಂಬಾ ಹೆಮ್ಮೆಯಿಂದ ಹೇಳಿದ್ರಂತೆ, ಅಂತಹ ಭಟ್ ಸರ್ ಗೆ ನಾನು ಕತೆ ಹೇಳಿದ್ದು ತುಂಬಾ ಖುಷಿಕೊಡ್ತು. ಅದೇ ಕನ್ನಡಕ್ಕಿರುವ ತಾಕತ್ತು ಅಂತಾನೂ ನಂಗೆ ಅರಿವಾಯ್ತು.
ಕತೆಗಾರನಾಗಿ
ನಾನು ಒಂದಷ್ಟು ಕತೆಗಳನ್ನ ಬರೆದೆ. ಅದರಲ್ಲಿ ಬಾಲ್ ಪೆನ್ ಅನ್ನೋ ಕತೆಯನ್ನ ಪತ್ರಕರ್ತ ರವಿಬೆಳೆಗೆರೆಯವರು ಕೇಳಿ ತುಂಬಾ ಇಷ್ಟ ಪಟ್ರು. ನಂತರ ಅವರ ಮಗಳು, ನಟ ಶ್ರೀನಗರ ಕಿಟ್ಟಿ ಅವರ ಪತ್ನಿ ಭಾವನಾ ಬೆಳಗೆರೆಯವರು ನಿರ್ಮಾಣ ಮಾಡಿದ್ರು. ಸಿನೆಮಾಗೆ ಒಳ್ಳೆಯ ಹೆಸರೂ ಬಂತು. ಹಾಗೆ ತುಂಬಾ ಕತೆಗಳನ್ನ ಬರೆದೆ. ಸಿನೆಮಾಗೆ ಆಗದೇ ಇರೋ ಕತೆಗಳು ಇವೆ. ಅವನ್ನೆಲ್ಲಾ ಸೇರಿಸಿ ಒಂದು ಪುಸ್ತಕ ಮಾಡುವ ಯೋಚನೆಯೂ ಇದೆ. ಸಿನೆಮಾ ಬರವಣಿಗೆಯಲ್ಲಿ ಸಧ್ಯಕ್ಕೆ ಹೆಚ್ಚು ತೊಡಗಿಸಿಕೊಂಡಿರೋದ್ರಿಂದ ಪುಸ್ತಕ ಬರೋದು ಸ್ವಲ್ಪ ತಡವಾಗಬಹುದು.
ಸಂಭಾಷಣಾಕಾರನಾಗಿ
ಸೂರಿ ಸರ್ ನಿರ್ದೇಶನದ ಜಂಗ್ಲಿ, ಜಾಕಿ, ಕೆಂಡಸಂಪಿಗೆ ಸಿನೆಮಾಗಳ ಕತೆ, ಚಿತ್ರಕತೆ ಸಂಭಾಷಣೆಯ ಚರ್ಚೆಗಳಲ್ಲಿ ನನ್ನನ್ನೂ ತೊಡಗಿಸಿಕೊಂಡರು. ನಂತರ ಕಡ್ಡಿ ಪುಡಿ ಸಿನೆಮಾಗೆ ನಾನು ಮತ್ತು ಸೂರಿ ಸರ್ ಸಂಭಾಷಣೆ ಬರೆದ್ವಿ. ಕಡ್ಡಿಪುಡಿ ಸಿನೆಮಾದಲ್ಲಿನ ಸಂಭಾಷಣೆ ಸೂರಿ ಸರ್ ಕೈಚಳಕವೇ ಹೆಚ್ಚು, ಆದ್ರೂ ನನಗೂ ಕ್ರೆಡಿಟ್ ಕೊಟ್ರು ಸೂರಿ ಸರ್. ನಂತರ, ಕಾಲೇಜ್ ಕುಮಾರ್ ಎಂಬ ಸಿನೆಮಾಗೆ ಸಂಭಾಷಣೆ ಬರೆದೆ. ನಂತರ ‘ಟಗರು’ ಸಿನೆಮಾಗೆ ಸಂಭಾಷಣೆ ಬರೆಯುವ ಜವಾಬ್ದಾರಿಯನ್ನ ಕೊಟ್ರು ಸೂರಿ ಸರ್. ಅವರು ನನ್ನ ಮೇಲಿಟ್ಟು ಹೊರಿಸಿದ ಜವಾಬ್ದಾರಿಯನ್ನ ಸ್ಬಲ್ಪ ಮಟ್ಟಿಗೆ ನಿಭಾಯಿಸಿದ್ದೇನೆ ಅನ್ಸುತ್ತೆ. ಯಾಕಂದ್ರೆ ಸೂರಿ ಸರ್ ನನ್ನಿಂದ ಅಷ್ಟು ಕೆಲಸ ತೆಗೆಸಿದ್ರು ಅಂತ ಹೇಳೋಕೆ ನಂಗೆ ಹೆಮ್ಮೆ ಆಗುತ್ತೆ. ಹಾಗೇ ಸೂರಿ ಸರ್ ಮುಂದಿನ ಸಿನೆಮಾ ,’ಪಾಪ್ ಕಾರ್ನ್ ಮಂಕಿ ಟೈಗರ್’ ಸಿನೆಮಾಗೆ ಸಂಭಾಷಣೆ ಬರೆಯೋಕೆ ಮತ್ತೆ ಅವಕಾಶ ಮಾಡಿಕೊಟ್ಟಿದ್ದಾರೆ. ಟಗರು ಸಿನೆಮಾ ನೋಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗುತ್ತಿರುವ ‘ಭೈರವ ಗೀತಾ’ ಸಿನೆಮಾಗೆ ಸಂಭಾಷಣೆ (ಕನ್ನಡ ಅವತರಿಣಿಕೆಗೆ) ಬರಯೋದಿಕ್ಕೆ ಅವಕಾಶ ಸಿಕ್ಕಿದೆ. ಅವಕಾಶ ಸಿಕ್ಕಿದ್ದರಲ್ಲಿ ನಟ ಧನಂಜಯ್ ಪಾತ್ರವೂ ದೊಡ್ಡದಿದೆ. ಧನಂಜಯ್ ಗೆ ಒಂದು ಸಲಾಮ್ ಹೇಳಲು ಈ ಸಮಯದಲ್ಲಿ ಇಷ್ಟ ಪಡ್ತೇನೆ. ಇತ್ತೀಚಿಗೆ ಬಿಡುಗಡೆಯಾದ ‘ ಕಟ್ಟುಕತೆ’ ಸಿನೆಮಾಗೂ ಸಂಭಾಷಣೆ ಬರೆದಿದ್ದೇನೆ. ಹಾಗೆ ನೀನಾಸಂ ಸತೀಶ್ ಅಭಿನಯದ ಅಯ್ಯೋಗ್ಯ ಸಿನೆಮಾ, ದುನಿಯಾ ವಿಜಯ್ ಅವರ ಕುಸ್ತಿ, ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ತಂಗಿ ಮಗನ ‘ಅಖಿಲ್’ ಎಂಬ ಸಿನೆಮಾಕ್ಕೆ ಸಂಭಾಷಣೆ ಬರೆದಿದ್ದೇನೆ. ಸಿನೆಮಾ ನಿರ್ದೇಶನ ಮಾಡೋ ಆಸೆ ಇದೆ ಬರವಣಿಗೆಯ ಒತ್ತಡದಲ್ಲಿ ಅದು ಸಾಧ್ಯ ಆಗ್ತಾ ಇಲ್ಲ. ಮುಂದೊಂದು ದಿನ ನಿರ್ದೇಶಕನಾಗಿ ನಿಮ್ಮ ಮುಂದೆ ಬರ್ತೇನೆ.
ನಟನಾಗಿ
ನಾನು ಕೆಲಸ ಮಾಡಿರೋ ಸಿನೆಮಾಗಳಲ್ಲೇ ಚಿಕ್ಕ- ಪುಟ್ಟ ಪಾತ್ರಗಳನ್ನ ಮಾಡ್ತಾ ಬಂದಿದೀನಿ. ಕಡ್ಡಿಪುಡಿ, ಕೆಂಡಸಂಪಿಗೆ, ಹಾಗೇ ಯೋಗರಾಜ್ ಭಟ್ ನಿರ್ದೇಶನ ‘ಪಂಚತಂತ್ರ’ ಸಿನೆಮಾದಲ್ಲೂ ಅಭಿನಯಿಸಿದ್ದೇನೆ.
ನನ್ನಿಷ್ಟದ ಸಿನೆಮಾ-ನಿರ್ದೇಶಕ-ಸಂಭಾಷಣಾಕಾರ
ನನಗೆ ವೈಯಕ್ತಿಕವಾಗಿ ಇಷ್ಟವಾಗುವ ಸಿನೆಮಾಗಳು ತುಂಬಾ ಇದಾವೆ. ಅದ್ರಲ್ಲಿ ಇತ್ತೀಚೆಗೆ ಕೆಲವು ವರ್ಷಗಳ ಹಿಂದೆ ತೆರೆಕಂಡು ಜನಮಾನಸದಲ್ಲಿ ಉಳಿದ, ಎದ್ದೇಳು ಮಂಜುನಾಥ ಹಾಗೂ ತಿಥಿ ಸಿನೆಮಾ. ನನಗೆ ಕೆಲಸ ಕಲಿಸಿಕೊಟ್ಟ ಸೂರಿ ಸರ್ ಹಾಗೂ ಯೋಗರಾಜ್ ಭಟ್ ಸರ್, ಅವರಿಬ್ಬರೂ ನನ್ನ ಗುರು ಸಮಾನರು. ಸೂರಿ ಸರ್ ಇಂದ ಶಿಸ್ತು, ಭಟ್ ಸರ್ ಇಂದ ಶ್ರದ್ಧೆ ಕಲಿತೆ. ಹಾಗೇ ತೆಲುಗು ಸಿನೆಮಾ ಸಂಭಾಷಣಾಕಾರರಾದ ತ್ರಿವಿಕ್ರಮ್ ಶ್ರೀನಿವಾಸ್ ಮತ್ತು ಕನ್ನಡದಲ್ಲಿ ಪ್ರಶಾಂತ್ ರಾಜಪ್ಪ ನನಗೆ ತುಂಬಾ ಕಾಡಿರೋ ಸಂಭಾಷಣಾಕಾರರು.
ಕನ್ನಡದಲ್ಲಿ ತುಂಬಾ ಒಳ್ಳೆಯ ಕತೆಗಳು ಇದಾವೆ. ಕತೆಗಾರರೂ ಇದ್ದಾರೆ. ಅವರನ್ನ ಗುರುತಿಸಿ ಒಂದು ಅವಕಾಶಮಾಡಿಕೊಟ್ಟರೆ ನಮ್ಮ ಕನ್ನಡ ಸಿನೆಮಾರಂಗ ಇನ್ನೂ ಎತ್ತರಕ್ಕೆ ಬೆಳೆಯುವುದರಲ್ಲಿ ಸಂಶಯವೇ ಇಲ್ಲ.
ಕನ್ನಡವೇ ಸತ್ಯ ; ಕನ್ನಡವೇ ನಿತ್ಯ
ಇಂತಿ ನಿಮ್ಮ ಮಾಸ್ತಿ

ಸಿನಿ ಸುದ್ದಿ
ಅಭಿಮಾನಿಗಳ ಸಂಭ್ರಮದಿಂದ ದೂರ ಕಿಚ್ಚನ ಬರ್ತ್ಡೇ; 53ನೇ ವಸಂತದಲ್ಲಿ ಸುದೀಪ್ ಸಿನಿಮಾ ಸರ್ಪ್ರೈಸ್ಗೆ ಕೌಂಟ್ಡೌನ್!
ಸುದ್ದಿದಿನ,ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಇಂದು, ಸೆಪ್ಟೆಂಬರ್ 2, ವಿಶೇಷ ದಿನ. 53ನೇ ವಸಂತಕ್ಕೆ ಕಾಲಿಡುತ್ತಿರುವ ಸುದೀಪ್, ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಸೆ.2ರಂದು ಮನೆ ಬಳಿ ಅಭಿಮಾನಿಗಳು ಯಾರೂ ಬರಬಾರದು ಎಂದು ಸುದೀಪ್ ಈಗಾಗಲೇ ಮನವಿ ಮಾಡಿದ್ದರು. ಹೀಗಾಗಿ ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದ ಕಿಚ್ಚನ ಬರ್ತ್ಡೇ ಈ ಬಾರಿ ವಿಭಿನ್ನವಾಗಿದೆ.
ಆದರೆ, ಅಭಿಮಾನಿಗಳಿಗೆ ನಿರಾಸೆಯಾಗದಂತೆ ಸಿನಿಮಾ ವಿಚಾರದಲ್ಲಿ ಭರ್ಜರಿ ಸರ್ಪ್ರೈಸ್ ಸಿಗುವ ನಿರೀಕ್ಷೆ ಮೂಡಿದೆ. ಹುಟ್ಟುಹಬ್ಬದ ಸಂದರ್ಭದಲ್ಲೇ ಕಿಚ್ಚನ ಮುಂಬರುವ ಸಿನಿಮಾಗಳ ಕುರಿತು ಮಹತ್ವದ ಅಪ್ಡೇಟ್ಗಳು ಹೊರಬರುವ ಸಾಧ್ಯತೆ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
http://Visit : www.suddidina.com
53ನೇ ವಸಂತ, 30 ವರ್ಷದ ಸಿನಿ ಪಯಣ
ಕಿಚ್ಚ ಸುದೀಪ್ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು ಮತ್ತು ತಮಿಳು ಚಿತ್ರರಂಗದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು, 1997ರಲ್ಲಿ ಬಿಡುಗಡೆಯಾದ ‘ತಾಯವ್ವ’ ಚಿತ್ರದ ಮೂಲಕ ಸಿನಿಮಾ ಪಯಣ ಆರಂಭಿಸಿದ್ದರು. ಇದೀಗ ಚಿತ್ರರಂಗದಲ್ಲಿ ಮೂರು ದಶಕಗಳ ಪಯಣ ಪೂರ್ಣಗೊಳಿಸಿರುವುದು ಈ ಹುಟ್ಟುಹಬ್ಬದ ಮತ್ತೊಂದು ವಿಶೇಷ.
ನಟನೆಯ ಜೊತೆಗೆ ನಿರ್ದೇಶನ, ನಿರ್ಮಾಣ ಹಾಗೂ ಕಿರುತೆರೆಯಲ್ಲಿಯೂ ಸುದೀಪ್ ತಮ್ಮದೇ ಗುರುತು ಮೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕರಾಗಿ ಸತತವಾಗಿ ಮುಂದುವರಿದಿರುವುದು ಅವರ ಜನಪ್ರಿಯತೆಗೆ ಮತ್ತೊಂದು ಸಾಕ್ಷಿಯಾಗಿದೆ.
View this post on Instagram
‘ಬಿಲ್ಲ ರಂಗ ಭಾಷಾ’ ಮೇಲೆ ಹೆಚ್ಚಿದ ನಿರೀಕ್ಷೆ
‘ವಿಕ್ರಾಂತ್ ರೋಣ’ ಬಳಿಕ ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಸುದೀಪ್ ಮತ್ತೊಮ್ಮೆ ‘ಬಿಲ್ಲ ರಂಗ ಭಾಷಾ’ ಮೂಲಕ ಒಂದಾಗಿದ್ದಾರೆ. ಈಗಾಗಲೇ ಚಿತ್ರದ ಲುಕ್ ಅಭಿಮಾನಿಗಳ ಗಮನ ಸೆಳೆದಿದ್ದು, ಮಾಸ್ ಅವತಾರದಲ್ಲಿ ಕಿಚ್ಚ ಕಾಣಿಸಿಕೊಂಡಿರುವುದು ನಿರೀಕ್ಷೆ ಹೆಚ್ಚಿಸಿದೆ.
ಚಿತ್ರದ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಕೂಡ ಉತ್ಸಾಹ ವ್ಯಕ್ತಪಡಿಸಿದ್ದು, ಸುದೀಪ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಸಿನಿಮಾಗೆ ಸಂಬಂಧಿಸಿದ ಹೊಸ ಅಪ್ಡೇಟ್ ಸಿಗುವ ಸಾಧ್ಯತೆ ಇದೆ. ಸಿನಿಮಾ 2027ರಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ.
4 ಸಿನಿಮಾಗಳ ಸದ್ದು?
2024ರಲ್ಲಿ ‘ಮ್ಯಾಕ್ಸ್’ ಬಿಡುಗಡೆಯಾದ ಬಳಿಕ ಸುದೀಪ್ ಅವರ ಹೊಸ ಸಿನಿಮಾ ತೆರೆಗೆ ಬಂದಿಲ್ಲ. ಇದೀಗ ಒಂದೇ ಬಾರಿ ನಾಲ್ಕು ಸಿನಿಮಾಗಳ ಕುರಿತಂತೆ ಘೋಷಣೆ ಅಥವಾ ಅಪ್ಡೇಟ್ ಸಿಗಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಈ ಮೂಲಕ ಬರ್ತ್ಡೇ ಸಂಭ್ರಮದಿಂದ ದೂರವಿದ್ದರೂ, ಸಿನಿಮಾ ಸುದ್ದಿಗಳ ಮೂಲಕ ಕಿಚ್ಚ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರಲಿದ್ದಾರೆ.
ಸೆ.6ಕ್ಕೆ ಮತ್ತೆ ಟಿವಿ ಪರದೆ ಮೇಲೆ ಕಿಚ್ಚ
ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಕಿಚ್ಚನ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ ಗ್ರ್ಯಾಂಡ್ ಪ್ರೀಮಿಯರ್ ಸೆಪ್ಟೆಂಬರ್ 6ರಂದು ನಡೆಯಲಿದ್ದು, ಮತ್ತೊಮ್ಮೆ ಸುದೀಪ್ ನಿರೂಪಕರಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಹೀಗಾಗಿ 53ನೇ ಹುಟ್ಟುಹಬ್ಬ, 30 ವರ್ಷದ ಸಿನಿ ಪಯಣ, ಹೊಸ ಸಿನಿಮಾಗಳ ನಿರೀಕ್ಷೆ ಹಾಗೂ ‘ಬಿಗ್ ಬಾಸ್’ ಎಂಟ್ರಿ—ಈ ಬಾರಿ ಕಿಚ್ಚನ ಬರ್ತ್ಡೇಗೆ ವಿಶೇಷ ಅರ್ಥ ಸಿಕ್ಕಿದೆ.

ದಿನದ ಸುದ್ದಿ
Bigg Boss Kannada 13: ಹೊಸ ಥೀಮ್, ಹೊಸ ಸ್ಪರ್ಧಿಗಳು, 24×7 ಲೈವ್; ಕಿಚ್ಚ ಸುದೀಪ್ ಸಾರಥ್ಯದ ಬಿಗ್ಬಾಸ್ ಕನ್ನಡ 13ರ ವಿಶೇಷತೆಗಳೇನು?
ಸುದ್ದಿದಿನ,ಬೆಂಗಳೂರು: ಅಂತೂ ಇಂತೂ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ **‘ಬಿಗ್ಬಾಸ್ ಕನ್ನಡ ಸೀಸನ್ 13’**ಗೆ ಅಧಿಕೃತ ಚಾಲನೆ ಸಿಗುವ ಸಮಯ ಬಂದಿದೆ. ಈಗಾಗಲೇ ‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಕುತೂಹಲ ಹೆಚ್ಚಿಸಿರುವ ಕಾರ್ಯಕ್ರಮದ ಟಿವಿ ಸೀಸನ್ ಸೆಪ್ಟೆಂಬರ್ 6ರಿಂದ ಆರಂಭವಾಗಲಿದೆ. ಹೊಸ ಸೀಸನ್ನಲ್ಲಿ ಮನೆ, ಥೀಮ್, ಸ್ಪರ್ಧಿಗಳ ಆಯ್ಕೆ ಹಾಗೂ ವೀಕ್ಷಣಾ ಅನುಭವದಲ್ಲೂ ಹಲವು ವಿಶೇಷತೆಗಳನ್ನು ಪರಿಚಯಿಸಲಾಗುತ್ತಿದೆ.
ಕಳೆದ 12 ಸೀಸನ್ಗಳಂತೆ ಈ ಬಾರಿಯೂ ಕಿಚ್ಚ ಸುದೀಪ್ ಕಾರ್ಯಕ್ರಮದ ನಿರೂಪಕರಾಗಿ ಮುಂದುವರಿಯಲಿದ್ದಾರೆ. ಸತತ 13 ಸೀಸನ್ಗಳನ್ನು ನಿರೂಪಣೆ ಮಾಡುತ್ತಿರುವುದು ಬಿಗ್ಬಾಸ್ ಇತಿಹಾಸದಲ್ಲೇ ಗಮನಾರ್ಹ ದಾಖಲೆಯಾಗಿದೆ.
ಹೈಲೈಟ್ಸ್: ಸೆಪ್ಟೆಂಬರ್ 6ರಿಂದ ಬಿಗ್ಬಾಸ್ ಹವಾ |
|
http://Visit : www.suddidina.com
ಈ ಬಾರಿ ‘Flight’ ಥೀಮ್ ಏಕೆ ವಿಶೇಷ?
ಕಳೆದ ಸೀಸನ್ನಲ್ಲಿ ವೀಕ್ಷಕರು ಅರಮನೆ ಮಾದರಿಯ ಬಿಗ್ಬಾಸ್ ಮನೆಯನ್ನು ಕಂಡಿದ್ದರು. ಆದರೆ ಈ ಬಾರಿ ಇಡೀ ಕಾರ್ಯಕ್ರಮದ ಕಲ್ಪನೆಯೇ ಬದಲಾಗಿದೆ. ‘Flight’ ಥೀಮ್ ಆಧಾರಿತವಾಗಿ ಸೀಸನ್ 13 ರೂಪಿಸಲಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋದಲ್ಲೂ ಇದರ ಝಲಕ್ ಕಾಣಿಸಿಕೊಂಡಿದೆ.
ವಿಶೇಷವೆಂದರೆ ಫ್ಲೈಟ್ ಥೀಮ್ ಕೇವಲ ಪ್ರೋಮೋಗೆ ಸೀಮಿತವಾಗಿಲ್ಲ. ಬಿಗ್ಬಾಸ್ ಮನೆಯ ವಿನ್ಯಾಸದಲ್ಲೂ ಇದೇ ಪರಿಕಲ್ಪನೆಯನ್ನು ಬಳಸಲಾಗಿದೆ. ಹೀಗಾಗಿ ಈ ಬಾರಿ ಮನೆ ಹೇಗೆ ಕಾಣಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಸೆಲೆಬ್ರಿಟಿಗಳ ಜತೆಗೆ ಕಾಮನ್ ಮ್ಯಾನ್ ಎಂಟ್ರಿ
ಬಿಗ್ಬಾಸ್ ಕನ್ನಡದ ಪ್ರತಿ ಸೀಸನ್ನಲ್ಲೂ ಸ್ಪರ್ಧಿಗಳ ಆಯ್ಕೆ ಪ್ರಮುಖ ಆಕರ್ಷಣೆಯಾಗಿರುತ್ತದೆ. ಈ ಬಾರಿ ಸೆಲೆಬ್ರಿಟಿಗಳ ಜತೆಗೆ ಸಾಮಾನ್ಯ ಜನರಿಗೂ ಅವಕಾಶ ಕಲ್ಪಿಸಲಾಗುತ್ತಿದೆ.
‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಆಯ್ಕೆಯಾಗುವ ಮೂವರು ಸಾಮಾನ್ಯ ಸ್ಪರ್ಧಿಗಳು ಸೀಸನ್ 13ರ ಮನೆಗೆ ಪ್ರವೇಶಿಸಲಿದ್ದಾರೆ. ಇದರಿಂದ ಮನೆಯಲ್ಲಿ ವಿಭಿನ್ನ ಹಿನ್ನೆಲೆಯ ವ್ಯಕ್ತಿಗಳ ನಡುವಿನ ಸಂವಹನ, ಅಭಿಪ್ರಾಯ ಭೇದ ಹಾಗೂ ಹೊಸ ರೀತಿಯ ಸ್ಪರ್ಧೆ ಮೂಡುವ ನಿರೀಕ್ಷೆಯಿದೆ.
ಮನೆಯ ಪ್ರತಿಕ್ಷಣವೂ 24×7 ಲೈವ್
ಈ ಬಾರಿ ವೀಕ್ಷಕರಿಗೆ ಮತ್ತೊಂದು ದೊಡ್ಡ ಸೌಲಭ್ಯ ಸಿಗಲಿದೆ. ಟಿವಿ ಎಪಿಸೋಡ್ಗಳಿಗೆ ಮಾತ್ರ ಸೀಮಿತವಾಗದೆ, ಜಿಯೋಹಾಟ್ಸ್ಟಾರ್ನಲ್ಲಿ ಬಿಗ್ಬಾಸ್ ಮನೆಯ 24×7 ಲೈವ್ ವೀಕ್ಷಣೆ ಲಭ್ಯವಿರಲಿದೆ.
ಅಂದರೆ ದಿನದ ಎಪಿಸೋಡ್ನಲ್ಲಿ ಪ್ರಸಾರವಾಗದ ಮನೆಯೊಳಗಿನ ಹಲವು ಬೆಳವಣಿಗೆಗಳನ್ನೂ ವೀಕ್ಷಕರು ಗಮನಿಸಬಹುದು. ಸ್ಪರ್ಧಿಗಳ ನಡುವಿನ ಮಾತುಕತೆ, ಚಟುವಟಿಕೆಗಳು ಹಾಗೂ ಅನಿರೀಕ್ಷಿತ ಘಟನೆಗಳನ್ನು ಇನ್ನಷ್ಟು ಹತ್ತಿರದಿಂದ ನೋಡುವ ಅವಕಾಶ ಸಿಗಲಿದೆ.
ಪ್ರಸಾರದ ಸಮಯವೂ ಫಿಕ್ಸ್
ಸೆಪ್ಟೆಂಬರ್ 6ರಂದು ಸಂಜೆ 7 ಗಂಟೆಗೆ ಗ್ರ್ಯಾಂಡ್ ಪ್ರೀಮಿಯರ್ ಪ್ರಸಾರವಾಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಹೊಸ ಸಂಚಿಕೆಗಳು ಪ್ರಸಾರವಾಗಲಿವೆ.
ಇನ್ನು ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ನಡೆಸಿಕೊಡುವ ಶನಿವಾರ ಮತ್ತು ಭಾನುವಾರದ ವಿಶೇಷ ಸಂಚಿಕೆಗಳು ರಾತ್ರಿ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿವೆ.
ಬಿಗ್ಬಾಸ್ ಪ್ರಯಾಣ ಯಾವ ದಿಕ್ಕಿಗೆ?
ಫ್ಲೈಟ್ ಥೀಮ್, ಹೊಸ ಮುಖಗಳು, ಸಾಮಾನ್ಯ ಸ್ಪರ್ಧಿಗಳ ಪ್ರವೇಶ ಮತ್ತು 24×7 ಲೈವ್ ವೀಕ್ಷಣೆಯೊಂದಿಗೆ ಸೀಸನ್ 13 ಕುತೂಹಲ ಮೂಡಿಸಿದೆ. ಈ ‘ಫ್ಲೈಟ್’ನಲ್ಲಿ ಯಾರು ಟೇಕಾಫ್ ಆಗುತ್ತಾರೆ, ಯಾರು ಮಧ್ಯದಲ್ಲೇ ಎಲಿಮಿನೇಟ್ ಆಗುತ್ತಾರೆ ಮತ್ತು ಕೊನೆಯವರೆಗೂ ಯಾರು ಪ್ರಯಾಣ ಮುಂದುವರಿಸುತ್ತಾರೆ ಎಂಬುದೇ ಮುಂದಿನ ದಿನಗಳ ಪ್ರಮುಖ ಪ್ರಶ್ನೆ.

ದಿನದ ಸುದ್ದಿ
Bigg Boss Agniparikshé: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಿಂದ ಕುಮಾರಿ ಎಕ್ಸಿಟ್; ಆಟ ಮುಗಿದರೂ ಭವಿಷ್ಯಕ್ಕೆ ಸಿಕ್ಕಿತು ದೊಡ್ಡ ಗಿಫ್ಟ್
ಸುದ್ದಿದಿನ,ಬೆಂಗಳೂರು: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ರಿಯಾಲಿಟಿ ಶೋನಲ್ಲಿ ತಮ್ಮ ಸರಳತೆ, ಮುಗ್ಧತೆ ಹಾಗೂ ಸಹಜ ವರ್ತನೆಯಿಂದ ವೀಕ್ಷಕರ ಗಮನ ಸೆಳೆದಿದ್ದ ನಂಜನಗೂಡಿನ ಕುಮಾರಿ ಇದೀಗ ಅನಾರೋಗ್ಯದ ಕಾರಣದಿಂದ ಕಾರ್ಯಕ್ರಮದಿಂದ ಅರ್ಧಕ್ಕೆ ನಿರ್ಗಮಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರಿ, ವೈದ್ಯರ ಸಲಹೆಯಂತೆ ಆಟವನ್ನು ಮುಂದುವರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶೋನಿಂದ ಹೊರಬಂದಿದ್ದಾರೆ.
ಕಳೆದ ಕೆಲವು ಸಂಚಿಕೆಗಳಲ್ಲಿ ಕುಮಾರಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ವೀಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಅವರು ಯಾಕೆ ಕಾರ್ಯಕ್ರಮದಲ್ಲಿ ಕಾಣಿಸುತ್ತಿಲ್ಲ ಎಂಬ ಪ್ರಶ್ನೆಯೂ ಚರ್ಚೆಗೆ ಬಂದಿತ್ತು. ಇದೇ ಸಂದರ್ಭದಲ್ಲಿ ಮತ್ತೊಬ್ಬ ಸ್ಪರ್ಧಿ ಪೂರ್ಣಿಮಾ, ತಮ್ಮನ್ನು ಕಳುಹಿಸಿ ಕುಮಾರಿಯನ್ನು ಕರೆತರಲಾಗುತ್ತಿದೆ ಎಂದು ಆರೋಪಿಸಿದ್ದರು. ಇದೀಗ ಕುಮಾರಿ ಶೋನಿಂದ ದೂರ ಉಳಿದಿರುವ ನಿಜವಾದ ಕಾರಣ ಅನಾರೋಗ್ಯ ಎಂಬುದು ಸ್ಪಷ್ಟವಾಗಿದೆ.
http://Visit : www.suddidina.com
ಆಟ ಅರ್ಧಕ್ಕೆ ನಿಂತರೂ ಸಿಕ್ಕಿತು ₹5 ಲಕ್ಷ!
ಕುಮಾರಿಯ ಬಿಗ್ ಬಾಸ್ ಪಯಣ ಅರ್ಧಕ್ಕೆ ಅಂತ್ಯಗೊಂಡಿದ್ದರೂ, ಕಾರ್ಯಕ್ರಮದ ವೇದಿಕೆ ಅವರಿಗೆ ನಿರೀಕ್ಷೆಗೂ ಮೀರಿದ ನೆರವು ನೀಡಿದೆ. ಕಾರ್ಯಕ್ರಮದ ಪ್ರಾಯೋಜಕರಾದ ಇಕೋ ಪ್ಲ್ಯಾನೆಟ್ ಎಲಿವೇಟರ್ ಸಂಸ್ಥೆ ಕುಮಾರಿಗೆ ಬರೋಬ್ಬರಿ ₹5 ಲಕ್ಷ ನಗದು ನೆರವು ನೀಡಿದೆ.
ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಕುಮಾರಿಗೆ ಈ ಹಣ ದೊಡ್ಡ ಆರ್ಥಿಕ ಆಸರೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಕುಟುಂಬದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಚಿಕಿತ್ಸೆಗೆ ಈ ಹಣ ನೆರವಾಗಬಹುದು ಎಂಬ ನಿರೀಕ್ಷೆಯೂ ಇದೆ.
ಶಿಕ್ಷಣದ ಬಳಿಕ ಉದ್ಯೋಗಕ್ಕೂ ಭರವಸೆ
₹5 ಲಕ್ಷ ನೆರವಿನ ಜತೆಗೆ ಕುಮಾರಿಗೆ ಮತ್ತೊಂದು ಮಹತ್ವದ ಅವಕಾಶವನ್ನು ಸಂಸ್ಥೆ ಘೋಷಿಸಿದೆ. ಅವರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ ಬಳಿಕ ಕರ್ನಾಟಕದಲ್ಲಿರುವ ಸಂಸ್ಥೆಯ ಯಾವುದೇ ಶಾಖೆಯಲ್ಲಿ ಅಥವಾ ದುಬೈನಲ್ಲಿರುವ ಶಾಖೆಯಲ್ಲಿ ಉದ್ಯೋಗ ಪಡೆಯುವ ಅವಕಾಶ ನೀಡಲಾಗಿದೆ.
ಇದು ಕುಮಾರಿಯ ಭವಿಷ್ಯಕ್ಕೆ ಹೊಸ ದಿಕ್ಕು ನೀಡುವ ಘೋಷಣೆಯಾಗಿದೆ. ರಿಯಾಲಿಟಿ ಶೋನಿಂದ ಸಿಕ್ಕ ಜನಪ್ರಿಯತೆಯ ಜತೆಗೆ ಇದೀಗ ಶಿಕ್ಷಣ ಮತ್ತು ಉದ್ಯೋಗದ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆ ಇಡುವ ಅವಕಾಶವೂ ದೊರೆತಿದೆ.
ಭಾವುಕ ವಿದಾಯ, ಹೊಸ ಬದುಕಿನ ಭರವಸೆ
ಹಳ್ಳಿಯಿಂದ ಬಂದ ಕುಮಾರಿಗೆ ಬೆಂಗಳೂರನ್ನು ನೋಡುವ ಅವಕಾಶದಿಂದ ಹಿಡಿದು ದೊಡ್ಡ ರಿಯಾಲಿಟಿ ಶೋ ವೇದಿಕೆಯಲ್ಲಿ ಸ್ಪರ್ಧಿಸುವವರೆಗೆ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಹಲವು ಹೊಸ ಅನುಭವಗಳನ್ನು ನೀಡಿದೆ. ಶೋನಿಂದ ನಿರ್ಗಮಿಸುವ ಸಂದರ್ಭದಲ್ಲಿ ಕುಮಾರಿ ಸೇರಿದಂತೆ ಇತರ ಸ್ಪರ್ಧಿಗಳು ಭಾವುಕರಾದರು.
ಸ್ಪರ್ಧೆಯಲ್ಲಿ ಮುಂದುವರಿಯಲು ಸಾಧ್ಯವಾಗದ ನೋವಿನ ನಡುವೆಯೂ, ಇಷ್ಟು ದೊಡ್ಡ ವೇದಿಕೆಯಲ್ಲಿ ಅವಕಾಶ ಸಿಕ್ಕಿದ್ದಕ್ಕೆ ಕುಮಾರಿ ಸಂತಸ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯದಿಂದಾಗಿ ಅವರ ಆಟ ಅಂತ್ಯಗೊಂಡಿದ್ದರೂ, ₹5 ಲಕ್ಷ ನೆರವು ಮತ್ತು ಭವಿಷ್ಯದ ಉದ್ಯೋಗದ ಭರವಸೆ ಕುಮಾರಿಯ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ಕಾರಣವಾಗುವ ಸಾಧ್ಯತೆಯಿದೆ.
ಹೀಗಾಗಿ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ಕುಮಾರಿಯ ಆಟ ಅರ್ಧಕ್ಕೆ ನಿಂತಿದ್ದರೂ, ಕಾರ್ಯಕ್ರಮದ ವೇದಿಕೆಯಿಂದ ಸಿಕ್ಕ ಬೆಂಬಲ ಅವರ ಮುಂದಿನ ಬದುಕಿಗೆ ಮಹತ್ವದ ತಿರುವು ನೀಡಿದೆ.

-
ದಿನದ ಸುದ್ದಿ2 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ2 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ2 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ2 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ2 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ2 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ2 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್






