Connect with us

ದಿನದ ಸುದ್ದಿ

ದಾವಣಗೆರೆ ದುಗ್ಗಮ್ಮನ ದೇವಸ್ಥಾನದ ಬಳಿ ಸ್ಪೋಟಕ ಪತ್ತೆ ; ಪ್ರಕರಣ ದಾಖಲು : ಎಸ್ ಪಿ ಹನುಮಂತರಾಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ : ಪಿಪಿಟಿ ಪ್ರದರ್ಶನದ ಮೂಲಕ ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರಿಗೆ ಎಕ್ಸ್‍ಪ್ಲೋಸಿವ್ ಕಾಯ್ದೆ, ಸಬ್ಸ್‍ಟೆನ್ಸ್ ಕಾಯ್ದೆ ಹಾಗೂ ಎಕ್ಸ್‍ಪ್ಲೋಸಿವ್ ರೂಲ್ಸ್ 2008 ರ ಬಗ್ಗೆ ವಿವರವಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ತಿಳಿಸಿದರು.

ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿ ಕಲ್ಲುಗಣಿ ಸುರಕ್ಷತೆ ಮತ್ತು ಅನಧಿಕೃತ ಗಣಿಗಾರಿಕೆ ತಡೆ ಮಾಸಿಕ ಸಪ್ತಾಹದ ಅಂಗವಾಗಿ ಬುಧವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆ ವತಿಯಿಂದ ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಮಾಲೀಕರು ಕಡ್ಡಾಯವಾಗಿ ಅನುಸರಿಸಬೇಕಾದ ಸುರಕ್ಷತಾ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದ ಅವರು ಶಿವಮೊಗ್ಗದ ಹುಣಸೋಡಿನಲ್ಲಿ ಸ್ಫೋಟ ಸಂಭವಿಸಲು ಕಾರಣ ಇದ್ಯಾವ ನಿಯಮಗಳನ್ನು ಪಾಲಿಸದೇ ಇರುವುದಾಗಿದ್ದು, ಸ್ಪೋಟಕಗಳ ಬಳಕೆಯಲ್ಲಿ ನಿರ್ಲಕ್ಷ್ಯದಿಂದಾಗಿ ಸಾವುನೋವಿಗೆ ಕಾರಣವಾಗಿದ್ದು, ಈ ಪ್ರಕರಣದ ಕುರಿತು ತನಿಖೆ ಜಾರಿಯಲ್ಲಿದೆ ಎಂದರು.

ದಾವಣಗೆರೆ ನಗರದಲ್ಲಿಯೇ ದುಗ್ಗಮ್ಮನ ಜಾತ್ರೆ ತರುವಾಯ ದೇವಸ್ಥಾನದ ಸುಮಾರು 300 ಮೀಟರ್ ಅಂತರದಲ್ಲಿ ಹಂಚಿನ ಗೋದಾಮುವೊಂದರಲ್ಲಿ ದೊಡ್ಡ ಪ್ರಮಾಣದ ಸ್ಪೋಟಕವನ್ನು ಸಂಗ್ರಹಿಸಿರುವುದನ್ನು ಪತ್ತೆ ಹಚ್ಚಿ ಸೀಜ್ ಮಾಡಿ ಪ್ರಕರಣ ದಾಖಲಿಸಲಾಗಿದೆ. ಹಾಗೂ ಆಜಾದ್ ನಗರದ ಕಟ್ಟಡದ ಬೇಸ್‍ಮೆಂಟ್‍ನಲ್ಲಿ ಸಂಗ್ರಹಿಸಿಡಲಾಗಿದ್ದ ಸ್ಪೋಟಕವನ್ನು ಸೀಜ್ ಮಾಡಿ ಸಂಬಂಧಿಸಿದವರನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಲೈಸೆನ್ಸ್‍ನ್ನು ಕೂಡ ನಿಯಮಾನುಸಾರ ನಿಲಂಬನೆಯಲ್ಲಿಡಲಾಗಿದೆ.

ಕಾಡಜ್ಜಿ ಬಳಿ ಕೂಡ ಸ್ಪೋಟಕ ಸೀಜ್ ಮಾಡಿ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ ಎಂದ ಅವರು ಸ್ಪೋಟಕಗಳ ಬಗ್ಗೆ ಅತಿ ಜಾಗರೂಕರಾಗಿ ನಿಯಮ ಪಾಲಿಸದಿದ್ದರೆ ಅವಘಡಕ್ಕೆ ಕಾರಣರಾಗುತ್ತೀರೆಂದು ಎಚ್ಚರಿಕೆ ನೀಡಿದರು.

ರೈತ ಮುಖಂಡರಾದ ಬಲ್ಲೂರು ರವಿಕುಮಾರ್ ಮಾತನಾಡಿ ಕ್ರಷರ್‍ಗಳಿಂದ ಬರುವ ಗಾಡಿಗಳು ಅತೀ ತೂಕ ಹೊತ್ತು ಓಡಾಡುತ್ತಿದ್ದು, ಇದರಿಂದ ಗ್ರಾಮೀಣ ರಸ್ತೆಗಳು ಹಾಳಾಗುತ್ತಿವೆ. ಈ ಬಗ್ಗೆ ಕ್ರಮ ವಹಿಸುವಂತೆ ಮನವಿ ಮಾಡಿದರು.

ಎಸ್‍ಪಿಯವರು ಪ್ರತಿಕ್ರಿಯಿಸಿ, ಗುತ್ತಿಗೆದಾರರು ವಾಹನಗಳು ಭಾರ ಹೊರುವ ಕುರಿತಂತೆ ಆರ್ ಟಿ ಒ ಕಚೇರಿಯಿಂದ ನೀಡುವ ಪರ್‍ಮಿಟ್ ಹೊಂದಿರಬೇಕು. ಸಾಗಣಿಕೆಯ ವಾಹನದಲ್ಲಿ ಹೆಚ್ಚುವರಿ ಭಾರವನ್ನು ಹೇರುವಂತಿಲ್ಲ. ಈ ರೀತಿ ಮಾಡಿದರೆ ರಸ್ತೆ, ಪಾದಚಾರಿಗಳು, ವಾಹನ ಚಾಲಕರು ಸೇರಿದಂತೆ ಎಲ್ಲರಿಗೆ ತೊಂದರೆಯಾಗುವ ಕಾರಣ ಹೆಚ್ಚುವರಿ ಲೋಡ್ ಹಾಕಬಾರದು ಎಂದರು.


ಗಣಿ ಮಾಡುವ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಕೆ ಕಡ್ಡಾಯ. ಗಣಿಗಾರಿಕೆ ಪ್ರದೇಶದ ಪ್ರವೇಶ, ನಿರ್ಗಮನ, ಗಣಿ ಸ್ಥಳ, ಸ್ಟೋರೇಜ್ ಪ್ರದೇಶಗಳಲ್ಲಿ ಸಿಸಿ ಟಿವಿ ಅಳವಡಿಸಬೇಕು. ಸಿಸಿಟಿವಿ ಅಳವಡಿಕೆಯಿಂದ ಸ್ಥಳದಲ್ಲಿ ಏನಾದರೂ ದುರ್ಘಟನೆಗಳು ಸಂಭವಿಸಿದರೆ ಪೊಲೀಸರಿಗೆ ತನಿಖೆ ನಡೆಸಲು ಅನುಕೂಲ. ಕರ್ನಾಟಕ ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಅನ್ವಯ ಎಲ್ಲೆಡೆ ಸಿಸಿಟಿವಿ ಅಳವಡಿಸಬೇಕು. ಸಿಸಿಟಿವಿಯ ಸಹಾಯದಿಂದ ನಡೆದ ಘಟನೆಗಳ ಬಗ್ಗೆ ಸಂರ್ಪೂಣವಾದ ಮಾಹಿತಿ ಹಾಗೂ ತನಿಖೆಗೆ ಬೇಕಾದ ಮೂಲಗಳನ್ನು ಪಡೆಯಬಹುದು. ಕೇವಲ ಕ್ವಾರಿಯಲ್ಲಿ ಮಾತ್ರವಲ್ಲದೇ, ಆಫೀಸ್, ಮನೆ, ದೇವಸ್ಥಾನಗಳಲ್ಲಿಯೂ ಕೂಡ ಸಿಸಿಟಿವಿಯನ್ನು ಅಳವಡಿಸಿಕೊಳ್ಳಬೇಕು.”

| ಹನುಮಂತರಾಯ, ಎಸ್‍ಪಿ


ಜಿಲ್ಲೆಯಲ್ಲಿ ಬ್ಲಾಸ್ಟಿಂಗ್ ಲೈಸೆನ್ಸ್ ಪಡೆದ 10 ಕ್ವಾರಿಗಳಿಗೆ ಇದುವರೆಗೆ ಕ್ವಾರಿಗಳಲ್ಲಿ ಸ್ಪೋಟಕ್ಕೆ ಮುನ್ನ ಪೊಲೀಸ್ ಮತ್ತು ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆಯೇ ಎಂದು ಎಸ್‍ಪಿಯವರು ಪ್ರಶ್ನಿಸಿ, ಅಧಿಕಾರಿಗಳನ್ನೂ ವಿಚಾರಿಸಿದರು. ಮಾಲೀಕರು ಈ ಬಗ್ಗೆ ತಮಗೆ ತಿಳಿದಿರಲಿಲ್ಲ ಎಂದು ಉತ್ತರಿಸಿದಾಗ, ನಿಮಗೆ ಎಲ್ಲ ತಿಳಿದಿದೆ. ಆದರೂ ಮನಸ್ಸಿಗೆ ಬಂದ ಹಾಗೆ ಮಾಡ್ತಿದ್ದೀರಿ. ಆದ ಕಾರಣ ನಿಮ್ಮ ಲೈಸೆನ್ಸ್‍ನ್ನು ಏಕೆ ರದ್ದುಪಡಿಸಬಾರದೆಂದು ನೋಟಿಸ್ ನೀಡಲಾಗುವುದು ಎಂದರು.

ಸದ್ಯಕ್ಕೆ ಲೈಸೆನ್ಸ್ ಇಲ್ಲದವರ ಚಟುವಟಿಕೆಯನ್ನು ಗಣಿ ಇಲಾಖೆಯಿಂದ ನಿಲ್ಲಿಸಲಾಗಿದ್ದು, ಲೈಸೆನ್ಸ್ ಪಡೆದ ನಂತರವೇ ತಮ್ಮ ಚಟುವಟಿಕೆ ಆರಂಭಿಸಬೇಕು. ಲೈಸೆನ್ಸ್ ಪಡೆಯಲು ಅಗತ್ಯವಾದ ಎನ್‍ಓಸಿ ಯನ್ನು ಎಸ್‍ಪಿ ಮತ್ತು ಡಿಸಿ ಕಚೇರಿಯಿಂದ ವಿಳಂಬವಿಲ್ಲದೇ ತಕ್ಷಣ ನೀಡಲಾಗುವುದು.

ಹಾಗೂ ಗಣಿ ಇಲಾಖೆ ಲೈಸೆನ್ಸ್ ಪಡೆಯುವ ಕುರಿತು ಮಾರ್ಗದರ್ಶನ ಮಾಡುವುದು. ಮಾಲೀಕರೆಲ್ಲ ಸೇರಿ ಒಂದು ವಾಟ್ಸಾಪ್ ಗ್ರೂಪ್ ಮಾಡಿಕೊಂಡು ಮಾಹಿತಿ ಹಂಚಿಕೆ ಮತ್ತು ಇತರೆ ಸಹಕಾರ ಪಡೆದುಕೊಳ್ಳಬೇಕು. ಪೊಲೀಸ್ ಇಲಾಖೆ ಸಂಪರ್ಕದಲ್ಲಿದ್ದು ನಿಯಮಗಳನ್ನು ಅನುಸರಿಸಬೇಕು ಎಂದರು.

ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಅವಘಡ ಎಲ್ಲಿಯಾದರೂ ಸಂಭವಿಸಬಹುದು. ಶಿವಮೊಗ್ಗದ ಹುಣಸೋಡಿನಲ್ಲಿ ನಡೆದ ಸ್ಫೋಟಕ ಅವಘಡದಲ್ಲಿ ಎಕ್ಸ್‍ಪ್ಲೋಸಿವ್ ರೂಲ್ಸ್ ಹಾಗೂ ಎಕ್ಸ್‍ಪ್ಲೋಸಿವ್ ಕಾಯ್ದೆಯ ನಿಯಮಾವಳಿಗಳನ್ನು ಎಲ್ಲೂ ಅನುಸರಿಸಿಲ್ಲ.

ಎಲ್ಲ ನಿಯಮಾವಳಿ ಗಾಳಿಗೆ ತೂರಿದ ಕಾರಣ ಆ ದುರಂತ ಸಂಭವಿಸಿದ್ದು, ಸ್ಪೋಟಕ ತುಂಬಿದ ವಾಹನಗಳು ಚಿತ್ರದುರ್ಗ-ದಾವಣಗೆರೆ ಮೂಲಕ ಹೆಬ್ಬಾಳು ಟೋಲ್‍ನಲ್ಲಿ ಹಾದು ಹೋಗಿವೆ. ಸ್ಪೋಟಕ ವಾಹನಗಳ ನಡುವಿನ ಅಂತರ ಕೂಡ ನಿರ್ವಹಿಸಲಾಗಿಲ್ಲ. ಜೊತೆ ಜೊತೆಗೇ ತೆರಳಿವೆ. ಅಕಸ್ಮಾತ್ ಇಲ್ಲಿ ಸ್ಪೋಟ ಆಗಿದ್ದರೂ ಯತೇಚ್ಚವಾಗಿ ಹಾನಿಯಾಗುತ್ತಿತ್ತು.

ಆದ ಕಾರಣ ಯಾವುದೇ ಕ್ವಾರಿ ಮಾಲೀಕರು ಅಧಿಕೃತವಾಗಿ ಲೈಸೆನ್ಸ್ ಪಡೆದು, ಕಾಯ್ದೆಯಲ್ಲಿನ ಎಲ್ಲ ನಿಯಮಾವಳಿಗಳನ್ನು ಅನುಸರಿಸಿ ತಮ್ಮ ಚಟುವಟಿಕೆ ನಡೆಸಬೇಕು. ಲೈಸೆನ್ಸ್ ಪಡೆದ ಮಾಲೀಕರು ಸ್ಫೋಟಕ್ಕೂ ಮುನ್ನ ಸ್ಥಳೀಯ ಪೊಲೀಸ್ ಠಾಣೆಗೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಗಮನಕ್ಕೆ ತರಬೇಕು. ಪೊಲೀಸರ ಸಮ್ಮುಖದಲ್ಲಿ ಸ್ಪೋಟ ನಡೆಯಬೇಕು ಎಂದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೋದಂಡರಾಮಯ್ಯ ಮಾತನಾಡಿ, ಈಗಾಗಲೇ ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಎರಡು ಬಾರಿ ಕ್ವಾರಿ ಮತ್ತು ಕ್ರಷರ್‍ಗಳಿಗೆ ತೆರಳಿ ಪರಿಶೀಲನೆ ನಡೆಸಿ ವರದಿ ತಯಾರಿಸಲಾಗಿದೆ. ಕೆಲಸ ಮಾಡದೇ ಇರುವ ಐಡಲ್ ಕ್ವಾರಿಗಳಿಗೆ 30 ದಿನಗಳ ನೋಟಿಸ್ ನೋಡಿ ಅವಕಾಶ ನೀಡಲಾಗುವುದು.

ಆದಾಗ್ಯೂ ಅವರು ಕ್ವಾರಿ ಕಾರ್ಯಾರಂಭಿಸದಿದ್ದರೆ ಕಲ್ಲುಗಣಿ ಗುತ್ತಿಗೆಯನ್ನು ರದ್ದುಪಡಿಸಲಾಗುವುದು. ಕಲ್ಲುಗಣಿ ಸುರಕ್ಷತೆ ಮತ್ತು ಅನಧಿಕೃತ ಗಣಿಗಾರಿಕೆ ತಡೆ ಮಾಸಿಕ ಸಪ್ತಾಹದ ಅಂಗವಾಗಿ ನಮ್ಮ ಭೂವಿಜ್ಞಾನಿಗಳು ಮತ್ತು ಸಿಬ್ಬಂದಿ ಪ್ರತಿದಿನ ಕ್ವಾರಿಗಳಿಗೆ ತೆರಳಿ ಕಲ್ಲುಗಣಿ ಸುರಕ್ಷತೆ, ಗಡಿ ಪ್ರಾಂತ್ಯ, ತಡೆಗೋಡೆ ನಿರ್ಮಾಣ ಸೇರಿದಂತೆ ಇನ್ನಿತರೆ ನಿಯಮಾವಳಿಗಳ ಬಗ್ಗೆ ಮನವರಿಕೆ ಮಾಡಲಾಗುತ್ತಿದೆ ಎಂದರು.

ಸಭೆಯಲ್ಲಿ ದಾವಣಗೆರೆ ಉಪವಿಭಾಗಾರಿ ಮಮತಾ ಹೊಸಗೌಡರ್, ತಾಲ್ಲೂಕುಗಳ ತಹಶೀಲ್ದಾರರು, ಡಿವೈಎಸ್‍ಪಿಗಳು, ಸಿಪಿಐ ಮತ್ತು ಇತರೆ ಸಿಬ್ಬಂದಿ ಹಾಗೂ ಕ್ರಷರ್ ಮತ್ತು ಕ್ವಾರಿಗಳ ಮಾಲೀಕರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending