Connect with us

ದಿನದ ಸುದ್ದಿ

ಪಾತಾಳ ಮುಟ್ಟಿರುವ ಆರ್ಥಿಕ ಸ್ಥಿತಿ ಮೇಲೆತ್ತುವ ಇಚ್ಛಾಶಕ್ತಿ ಕೇಂದ್ರ ವಿತ್ತ ಸಚಿವರಿಗಿಲ್ಲ : ಸಿದ್ದರಾಮಯ್ಯ

Published

on

ಸುದ್ದಿದಿನ,ಬೆಂಗಳೂರು : ಕಳೆದ ಬಾರಿಯ ಕೇಂದ್ರದ ಬಜೆಟ್ ಗಾತ್ರ ರೂ.27 ಲಕ್ಷ ಕೋಟಿಗಳಿತ್ತು, ಈ ಬಾರಿ ರೂ.30 ಲಕ್ಷದ 42 ಸಾವಿರ ಕೋಟಿಗೆ ಏರಿಕೆ ಕಂಡಿದೆ. ನೇರ ತೆರಿಗೆ ಸಂಗ್ರಹ ಕಡಿಮೆಯಾದ ಕಾರಣ ಕಳೆದ ಬಾರಿ ಸುಮಾರು ಎರಡು ಲಕ್ಷ ಕೋಟಿ ಹಣ ಕೊರತೆಯಾಗಿತ್ತು. ಕೇಲವ ರೂ.25 ಲಕ್ಷ ಕೋಟಿಗಳಷ್ಟು ಮಾತ್ರ ಖರ್ಚು ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರುು.

ಶನಿವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಮಂಡಿಸಿದ ಬಜೆಟ್ ಉದ್ದೇಶಿಸಿ ಮಾತನಾಡಿದ ಅವರು, ಎರಡನೇ ಬಾರಿ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದಾಗ ದೇಶದ ಆದಾಯವನ್ನು 5 ಟ್ರಿಲಿಯನ್ ಡಾಲರ್‌ಗೆ ಏರಿಸುವುದಾಗಿ ಭರವಸೆ ನೀಡಿದ್ದರು. ಇಂದು ದೇಶದ ಜಿಡಿಪಿ 2.5 ರಷ್ಟಿದೆ, ಈ ಪರಿಸ್ಥಿತಿಯಲ್ಲಿ ಮೋದಿಯವರ ಭರವಸೆ ಈಡೇರುವುದು ಕನಸಿನ ಮಾತು.

ಪ್ರಸಕ್ತ ಬಜೆಟ್‌ನಲ್ಲಿ ದೇಶದ ಜಿಡಿಪಿಯನ್ನು 6% ಗೆ ಏರಿಸುವ ಕುರಿತು ವ್ಯಾಖ್ಯಾನಿಸಲಾಗಿದ್ದರೂ, ಅದರ ಈಡೇರಿಕೆಗೆ ಬೇಕಾದಂತಹ ಪರಿಣಾಮಕಾರಿ ಕಾರ್ಯಸೂಚಿಗಳೇನು ಕಂಡುಬರುತ್ತಿಲ್ಲ. ಹಾಗಾಗಿ ಇದೂ ಕೂಡ ಭರವಸೆಯಾಗಿಯೇ ಉಳಿಯಲಿದೆ. ಪಾತಾಳ ಮುಟ್ಟಿರುವ ಆರ್ಥಿಕ ಸ್ಥಿತಿಯನ್ನು ಮೇಲೆತ್ತಲು ಬೇಕಾದ ಇಚ್ಛಾಶಕ್ತಿ ಕೇಂದ್ರ ವಿತ್ತ ಸಚಿವರಲ್ಲಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಣಕಾಸು ಸಚಿವರು ಕೃಷಿ ಕ್ಷೇತ್ರದ ಅಭಿವೃದ್ದಿಗೆ 16 ಅಂಶಗಳ ಕಾರ್ಯಕ್ರಮವನ್ನು ಘೋಷಿಸಿದ್ದಾರೆ. ಇದರಲ್ಲಿ 9 ಅಂಶಗಳು ರೈತರ ಜಮೀನನ್ನು ಖಾಸಗಿ ಕಂಪೆನಿಗಳ ಸುಪರ್ದಿಗೆ ಒಳಪಡಿಸುವಂತಿವೆ. ಉದಾಹರಣೆಗೆ ‘ಕೃಷಿ ಉಡಾನ್’ ಯೋಜನೆ ಸಣ್ಣಪುಟ್ಟ ರೈತರಿಗಿಂತ ಕಾರ್ಪೊರೇಟ್ ಕಂಪೆನಿಗಳಿಗೆ ಹೆಚ್ಚು ಲಾಭದಾಯಕವಾಗುವಂತಿದೆ. 16 ಅಂಶಗಳ ಕಾರ್ಯಕ್ರಮಗಳಲ್ಲಿ 9 ಅಂಶಗಳು ‘ಕಾರ್ಪೊರೇಟ್ ಫಾರ್ಮಿಂಗ್’ ಕಡೆಗೆ ಒತ್ತು ನೀಡುತ್ತಿವೆ. ಒಟ್ಟಾರೆ ಕೃಷಿಯನ್ನು ಖಾಸಗೀಕರಣಗೊಳಿಸುವ ಸರ್ಕಾರದ ಉದ್ದೇಶ ಇದರಿಂದ ಸ್ಪಷ್ಟವಾಗುತ್ತಿದೆ ಎಂದು ಕಿಡಿಕಾರಿದರು.

16 ಅಂಶಗಳ ಬಹುತೇಕ ಕಾರ್ಯಕ್ರಮಗಳು ಸಾಮಾನ್ಯ ರೈತರಿಗೆ ಸಂಬಂಧಿಸಿದ್ದಲ್ಲ. 162 MT ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್‌ಗಳ ಮ್ಯಾಪಿಂಗ್ ಮತ್ತು ಜಿಯೊಟ್ಯಾಗಿಂಗ್ ಇದರಿಂದ ಬಡರೈತನಿಗೆ ಏನು ಲಾಭ? ರೆಫ್ರಿಜರೇಟೇಡ್ ರೈಲುಗಳು, ಕೃಷಿ ಉಡಾನ್ ವಿಮಾನಗಳು ಯಾವ ರೈತರ ಅನುಕೂಲಕ್ಕಾಗಿ ತಿಳಿಯುತ್ತಿಲ್ಲ. 2022ರ ವೇಳೆಗೆ ದೇಶದ ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಪ್ರಧಾನಿ ಹೇಳಿದ್ದರು. ಕಳೆದ ಹಣಕಾಸು ವರ್ಷದಲ್ಲಿ ಕೃಷಿ ಕ್ಷೇತ್ರ ಶೇಕಡಾ 2.5ರಷ್ಟು ಬೆಳವಣಿಗೆ ಕಂಡಿದೆ. ರೈತರ ಆದಾಯ ದುಪ್ಪಟ್ಟು ಆಗಬೇಕಾದರೆ ಕೃಷಿ ಕ್ಷೇತ್ರ ಕನಿಷ್ಠ 10ರಿಂದ 15% ದರದಲ್ಲಿ ಬೆಳವಣಿಗೆ ಆಗಬೇಕು. ಸದ್ಯಕ್ಕೆ ಇದೂ ಕೂಡ ಅಸಾಧ್ಯದ ಮಾತು ಎಂದು ನುಡಿದರು.

ಕೇಂದ್ರ ಪ್ರಸ್ತಾಪಿಸಿರುವ 3 ಮಾದರಿ ಕಾಯ್ದೆಗಳಾದ ಭೂಮಿ ಗುತ್ತಿಗೆ ಕಾಯ್ದೆ, ಎಪಿಎಂಸಿ ಕಾಯ್ದೆಯಲ್ಲಿ ಅಮೂಲಾಗ್ರ ಬದಲಾವಣೆ ಮಾಡುವ ಹೊಸ ಮಾರ್ಕೆಟಿಂಗ್ ಕಾಯ್ದೆ ಮತ್ತು ಕಾಂಟ್ರಾಕ್ಟ್ ಫಾರ್ಮಿಂಗ್ (ಕಾರ್ಪೋರೇಟ್ ಫಾರ್ಮಿಂಗ್) ಕಾಯ್ದೆಗಳನ್ನು ರಾಜ್ಯ ಸರ್ಕಾರಗಳು ಒಪ್ಪಿಕೊಳ್ಳಲೇಬೇಕು ಎಂದು ಕೇಂದ್ರ ಹೇಳುತ್ತಿದೆ.

ಇದು ತುಂಬಾ ಅಪಾಯಕಾರಿ. ಇಡೀ ದೇಶದ ರೈತರು ಸಾಲದ ಬಲೆಯಲ್ಲಿ ಸಿಕ್ಕಿಹಾಕಿಕೊಂಡು ನರಳಾಡುತ್ತಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಬೇಕೆಂಬುದು ನಮ್ಮದು ಹಳೆಯ ಬೇಡಿಕೆ. ಕಳೆದ ಆರು ವರ್ಷಗಳಿಂದ ಇದನ್ನು ಕೇಳುತ್ತಾ ಬಂದಿದ್ದೇವೆ. ಈ ಬಜೆಟ್ ನಲ್ಲಿಯೂ ಆ ಬಗ್ಗೆ ಉತ್ತರ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಬಾರಿಯ ಬಜೆಟ್‌ನಲ್ಲಿ ಸಾರ್ವಜನಿಕ ವಲಯಗಳಿಗೆ ಒಟ್ಟು ಬಜೆಟ್ ಗಾತ್ರದ 0.90% ರಷ್ಟು ಅನುದಾನ ವಿನಿಯೋಗಿಸಲಾಗಿತ್ತು, ಈ ಬಾರಿ ಅದು 0.96% ಗೆ ಏರಿಕೆ ಕಂಡಿದೆ. ಗ್ರಾಮೀಣಾಭಿವೃದ್ಧಿಗೆ ಕಳೆದ ಬಾರಿ 1.21% ಅನುದಾನ ಮೀಸಲಿತ್ತು, ಈ ಬಾರಿ 1.23% ಗೆ ಹೆಚ್ಚಿಸಲಾಗಿದೆ.

ಈ ಬಜೆಟ್‌ನಲ್ಲಿ ಕೃಷಿಗೆ ಅತ್ಯಧಿಕ‌ ಮಹತ್ವ ನೀಡುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದರೂ ಕೂಡ ಕೃಷಿಗೆ ಒಟ್ಟು ಬಜೆಟ್ ಅನುದಾನದಲ್ಲಿ ಮೀಸಲಾದ ಪಾಲು ಕೇವಲ 1.50% ಮಾತ್ರ. ಕಳೆದ ಬಾರಿ ಇದು 1.46% ಇತ್ತು. ಈ ಬಾರಿಯೂ ಕೃಷಿ ಕಡೆಗಣಿಸಲ್ಪಟ್ಟಿರುವುದು ದುರದೃಷ್ಟಕರ.

ಗ್ರಾಮೀಣ ಭಾಗದ ನಿರುದ್ಯೋಗ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನರೇಗಾ ಯೋಜನೆಗೆ ರೂ.10 ಸಾವಿರ ಕೋಟಿ ಹಣ ಕಡಿತಗೊಳಿಸಲಾಗಿದೆ. ಕಳೆದ ವರ್ಷ ರೂ.71,000 ಕೋಟಿ ನೀಡಿದ್ದರೆ, ಈ ಬಾರಿ ರೂ.61,000 ಕೋಟಿ ನಿಗದಿಗೊಳಿಸಲಾಗಿದೆ. ಇದರಿಂದ ಗ್ರಾಮೀಣ ಭಾರತ ಇನ್ನಷ್ಟು ಸೊರಗಿಹೋಗಲಿದೆ ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರು ನಗರದ ಉಪನಗರ ರೈಲು ಯೋಜನೆ ಬಗ್ಗೆ ಕಳೆದ ಬಜೆಟ್‌ನಲ್ಲಿಯೇ ಪ್ರಸ್ತಾಪವಿದ್ದರೂ ಈವರೆಗೂ ಒಂದು ಸ್ಟೇಷನ್ ಆಗಲಿ, ಹಳಿ ನಿರ್ಮಾಣ ಕಾರ್ಯವಾಗಲಿ ಆಗಿಲ್ಲ. ಮತ್ತೆ ಈ ಬಾರಿಯೂ ಅದೇ ರಾಗ, ಅದೇ ಹಾಡು. ಈ ಬಜೆಟ್‌ನಲ್ಲಿ ಕೂಡ ಅನುದಾನವನ್ನು ಮೀಸಲಿಟ್ಟಿಲ್ಲ ಜೊತೆಗೆ ಅನುದಾನದ ಬಗ್ಗೆ ಸ್ಪಷ್ಟತೆ ಕೂಡ ಇಲ್ಲ.

ದೇಶದ ಅಭಿವೃದ್ಧಿಯ ದರ 42 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ತೆರಿಗೆ ಸಂಗ್ರಹ ಎರಡು ಲಕ್ಷ ಕೋಟಿ ರೂಪಾಯಿಯಷ್ಟು ಕಡಿಮೆಯಾಗಿದೆ. ಕಾರ್ಪೋರೇಟ್ ತೆರಿಗೆ ಶೇಕಡಾ 15ರಷ್ಟು ಕಡಿಮೆಯಾಗಿದೆ. ಸಂಪನ್ಮೂಲ ಸಂಗ್ರಹದ ಯಾವ ಹೊಸ ಮಾರ್ಗಗಳ ಬಗ್ಗೆಯೂ ಬಜೆಟ್ ನಲ್ಲಿಯೂ ಪ್ರಸ್ತಾಪ ಇಲ್ಲ ಎಂದರು.

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಸಕ್ತ ಬಜೆಟ್‌ನಲ್ಲಿ ಎಲ್‌ಐಸಿ ಶೇರುಗಳನ್ನು ಸಹ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಇದೊಂದು ರೀತಿ ಕುತ್ತಿಗೆಯಲ್ಲಿರುವ ತಾಳಿ ಮಾರಾಟಕ್ಕಿಟ್ಟ ಪರಿಸ್ಥಿತಿ. ದೇಶದ ಸದ್ಯದ ಆರ್ಥಿಕ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದುಕ್ಕೆ ಸರ್ಕಾರದ ಈ ನಿರ್ಧಾರ ಸಾಕ್ಷಿ.

ವಿತ್ತೀಯ ಶಿಸ್ತು ಕಳೆದ ಬಾರಿ ಬಜೆಟ್‌ನಲ್ಲಿ 3.3 ಎಂದು ನಿಗದಿಪಡಿಸಲಾಗಿತ್ತು. ವರ್ಷಾಂತ್ಯದ ವೇಳೆಗೆ ಇದು 3.6 ತಲುಪಿತ್ತು. ಬರುವ ವರ್ಷಕ್ಕೆ ಸರ್ಕಾರವೇ 3.5 ಎಂದು ಗುರಿ ಇಟ್ಟುಕೊಂಡಿದೆ.‌ ಅಂದರೆ ಈಗಿರುವ ಸಾಲದ ಜೊತೆಗೆ ಇನ್ನಷ್ಟು ಸಾಲ ಮಾಡಿ ದೇಶವನ್ನು ದಿವಾಳಿ ಮಾಡಲು ಸರ್ಕಾರ ನಿರ್ಧರಿಸಿದಂತಿದೆ ಎಂದು ಕೆಂಡಾಮಂಡಲರಾದರು.

ಒಟ್ಟಿನಲ್ಲಿ ಇದು ದೇಶದ ಮುನ್ನಡೆಗೆ ಬೇಕಾದ ಯಾವ ಮುನ್ನೋಟವೂ ಇಲ್ಲದ, ಭವಿಷ್ಯದ ಮೇಲಿನ ಭರವಸೆಯನ್ನು ಕಳೆದುಕೊಂಡಿರುವ ಸಾಮಾನ್ಯ ಜನರು, ರೈತರು, ಯುವಜನರು, ಉದ್ಯಮಿಗಳು ಹೀಗೆ ಯಾವ ಜನ ಸಮುದಾಯದಲ್ಲಿಯೂ ವಿಶ್ವಾಸ-ಭರವಸೆಯನ್ನು ಹುಟ್ಟಿಸದ ನಿರಾಶದಾಯಕ ಬಜೆಟ್ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್‌ ಖರೀದಿಗೂ ಎದುರಾಗುತ್ತಿದೆ ಒತ್ತಡ

Published

on

ಶಕ್ತಿ ಯೋಜನೆಗೆ ಸರ್ಕಾರದ ಬೆಂಬಲ, ಸಾರಿಗೆ ನಿಗಮಗಳಿಗೆ ಬಾಕಿ ಹೊರೆ; ₹5,651 ಕೋಟಿ ಟಿಕೆಟ್‌ ಹಣ ಯಾವಾಗ?

ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ ಬಂದಿದೆ. ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ನೀಡಿರುವ ಉಚಿತ ಟಿಕೆಟ್‌ಗಳ ಮೊತ್ತದಲ್ಲಿ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ₹5,651.24 ಕೋಟಿ ಬಾಕಿ ಉಳಿಸಿಕೊಂಡಿರುವುದು ನಿಗಮಗಳ ಆರ್ಥಿಕ ನಿರ್ವಹಣೆಗೆ ಸವಾಲಾಗಿ ಪರಿಣಮಿಸಿದೆ. ಬಾಕಿ ಮೊತ್ತದ ಮರುಪಾವತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ವೇತನ, ಡೀಸೆಲ್‌, ಬಿಡಿಭಾಗಗಳ ಖರೀದಿ ಸೇರಿದಂತೆ ದೈನಂದಿನ ವೆಚ್ಚಗಳನ್ನು ನಿರ್ವಹಿಸುವ ಒತ್ತಡ ಹೆಚ್ಚಾಗಿದೆ.

ಶಕ್ತಿ ಯೋಜನೆಗೆ ಮೂರು ವರ್ಷಗಳ ಪಯಣ

ಕಾಂಗ್ರೆಸ್‌ ಸರ್ಕಾರ 2023ರ ಜೂನ್‌ 11ರಂದು ಶಕ್ತಿ ಯೋಜನೆಯನ್ನು ಜಾರಿಗೆ ತಂದಿತ್ತು. ರಾಜ್ಯದ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಾರಿಗೆ ನಿಗಮಗಳ ಮೇಲೆ ಸೇವಾ ಹೊರೆ ಕೂಡ ವಿಸ್ತರಿಸಿದೆ.

2023-24ರಿಂದ 2026ರ ಜುಲೈ ಅಂತ್ಯದವರೆಗೆ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರು 797.16 ಕೋಟಿ ಪ್ರಯಾಣ ಕೈಗೊಂಡಿದ್ದಾರೆ. ಈ ಪ್ರಯಾಣಗಳಿಗೆ ನೀಡಲಾದ ಉಚಿತ ಟಿಕೆಟ್‌ಗಳ ಒಟ್ಟು ಮೌಲ್ಯ ₹20,955.99 ಕೋಟಿ ಎಂದು ಅಂಕಿ-ಅಂಶಗಳು ತಿಳಿಸುತ್ತವೆ.

₹15,304 ಕೋಟಿ ಪಾವತಿ, ಇನ್ನೂ ₹5,651 ಕೋಟಿ ಬಾಕಿ

ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್‌ ಮೊತ್ತವನ್ನು ಸರ್ಕಾರ ಸಾರಿಗೆ ನಿಗಮಗಳಿಗೆ ಮರುಪಾವತಿ ಮಾಡಬೇಕಿದೆ. ಇದುವರೆಗೆ ₹15,304.76 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ₹5,651.24 ಕೋಟಿ ಪಾವತಿಯಾಗಬೇಕಿದೆ.

ಈ ಬಾಕಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಪಾಲುದಾರರಾಗಿವೆ.

ನಿಗಮಗಳಿಗೆ ಆರ್ಥಿಕ ಒತ್ತಡ ಏಕೆ?

ಈಗಾಗಲೇ ಹಲವು ವರ್ಷಗಳಿಂದ ಸಾರಿಗೆ ನಿಗಮಗಳು ನಷ್ಟದ ಒತ್ತಡದಲ್ಲಿವೆ. ಶಕ್ತಿ ಯೋಜನೆಯ ಟಿಕೆಟ್‌ ಮೊತ್ತ ಸಕಾಲದಲ್ಲಿ ಪಾವತಿಯಾಗದಿರುವುದು ನಗದು ಹರಿವಿನ ಮೇಲೆ ಪರಿಣಾಮ ಬೀರುತ್ತಿದೆ. ಸಿಬ್ಬಂದಿಯ ವೇತನ, ಡೀಸೆಲ್‌ ಖರೀದಿ, ಬಸ್‌ಗಳ ನಿರ್ವಹಣೆ, ಬಿಡಿಭಾಗಗಳ ಪೂರೈಕೆ ಹಾಗೂ ನಿವೃತ್ತ ನೌಕರರ ಬಾಕಿ ಪಾವತಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿಗಮಗಳು ನಿರ್ವಹಿಸಬೇಕಿದೆ.

₹18,459 ಕೋಟಿ ನೆರವು ನೀಡಿದರೂ ನಷ್ಟದ ಹೊರೆ

ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರವು ವಿವಿಧ ಕಾರಣಗಳಿಗಾಗಿ ಸಾರಿಗೆ ನಿಗಮಗಳಿಗೆ ₹18,459.37 ಕೋಟಿ ನೆರವು ನೀಡಿದೆ. ಶಕ್ತಿ ಯೋಜನೆ, ವಿದ್ಯಾರ್ಥಿ ಪಾಸ್‌ಗಳ ಸಹಾಯಧನ, ಸಾಲ ಮತ್ತು ಬಡ್ಡಿ ಮರುಪಾವತಿ, ಬಸ್‌ ಖರೀದಿ, ವೇತನ, ಡೀಸೆಲ್‌, ಪಿಎಫ್‌ ಹಾಗೂ ರಜೆ ನಗದೀಕರಣ ಸೇರಿದಂತೆ ಹಲವು ವೆಚ್ಚಗಳಿಗೆ ಈ ನೆರವು ಬಳಕೆಯಾಗಿದೆ.

ಆದರೂ ನಿಗಮಗಳ ಆರ್ಥಿಕ ಸಂಕಷ್ಟ ಸಂಪೂರ್ಣವಾಗಿ ದೂರವಾಗಿಲ್ಲ. ಡೀಸೆಲ್‌ ಬಸ್‌ಗಳ ಜತೆಗೆ ಎಲೆಕ್ಟ್ರಿಕ್‌ ಬಸ್‌ಗಳ ಕಾರ್ಯಾಚರಣೆಯಿಂದಲೂ ನಿರೀಕ್ಷಿತ ಮಟ್ಟದ ಆದಾಯ ಬರುತ್ತಿಲ್ಲ ಎಂಬುದು ಮತ್ತೊಂದು ಸವಾಲಾಗಿದೆ.

ಸಕಾಲಿಕ ಪಾವತಿಯೇ ಪರಿಹಾರವೇ?

ಶಕ್ತಿ ಯೋಜನೆಯ ಸಾಮಾಜಿಕ ಮಹತ್ವವನ್ನು ಪ್ರಶ್ನಿಸುವುದಕ್ಕಿಂತ, ಅದರ ಆರ್ಥಿಕ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಮುಖ್ಯವಾಗಿದೆ. ಸರ್ಕಾರದಿಂದ ಬಾಕಿ ಮೊತ್ತ ಸಕಾಲದಲ್ಲಿ ಬಿಡುಗಡೆಯಾದರೆ ನಿಗಮಗಳ ನಗದು ಹರಿವು ಸುಧಾರಿಸಿ, ವೇತನ, ಇಂಧನ ಮತ್ತು ನಿರ್ವಹಣಾ ವೆಚ್ಚಗಳನ್ನು ನಿರ್ವಹಿಸಲು ಹೆಚ್ಚಿನ ಬಲ ದೊರೆಯಬಹುದು.

Continue Reading

ದಿನದ ಸುದ್ದಿ

ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!

Published

on

ನೀರು ತುಂಬಿದರೆ ಹಬ್ಬ, ಬರಿದಾದರೆ ಆತಂಕ; ಕೃಷಿ, ಕುಡಿಯುವ ನೀರು, ವಿದ್ಯುತ್‌ ಹಾಗೂ ಪರಿಸರಕ್ಕೆ ಭದ್ರೆಯೇ ಆಧಾರ

ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ ಪಯಣವು ರೈತರ ಕೃಷಿ, ಜನರ ಕುಡಿಯುವ ನೀರು, ಸ್ಥಳೀಯ ಆರ್ಥಿಕತೆ, ವಿದ್ಯುತ್‌ ಉತ್ಪಾದನೆ ಹಾಗೂ ಪರಿಸರದೊಂದಿಗೆ ನೇರ ಸಂಬಂಧ ಹೊಂದಿದೆ. ಜಲಾಶಯ ತುಂಬಿದರೆ ಹಲವು ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿದರೆ, ನೀರಿನ ಕೊರತೆ ಎದುರಾದಾಗ ಇದೇ ಪ್ರದೇಶಗಳಲ್ಲಿ ಆತಂಕ ಹೆಚ್ಚುತ್ತದೆ.

http://Visit : www.suddidina.com

ಪಶ್ಚಿಮಘಟ್ಟದಿಂದ ಬಯಲುಸೀಮೆಯವರೆಗೆ ಭದ್ರೆಯ ಪಯಣ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ–ವರಾಹ ಪರ್ವತ ಶ್ರೇಣಿಗಳ ಗಂಗಾಮೂಲದಲ್ಲಿ ಹುಟ್ಟುವ ಭದ್ರಾ ನದಿ ಕಳಸ, ಕೊಪ್ಪ, ನರಸಿಂಹರಾಜಪುರ, ತರೀಕೆರೆ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ಹರಿದು ಕೂಡಲಿ ಬಳಿ ತುಂಗಾ ನದಿಯನ್ನು ಸೇರುತ್ತದೆ. ಬಳಿಕ ತುಂಗಾಭದ್ರೆಯಾಗಿ ಮುಂದುವರಿದು ಕೃಷ್ಣಾ ನದಿಯನ್ನು ಸೇರುತ್ತದೆ.

ತರೀಕೆರೆ ತಾಲೂಕಿನ ಲಕ್ಕವಳ್ಳಿ ಬಳಿ ನಿರ್ಮಿಸಲಾಗಿರುವ ಭದ್ರಾ ಜಲಾಶಯ 1,708 ಮೀಟರ್‌ ಉದ್ದ ಹಾಗೂ 59.14 ಮೀಟರ್‌ ಎತ್ತರ ಹೊಂದಿದೆ. ಇದರ ಒಟ್ಟು ಸಂಗ್ರಹ ಸಾಮರ್ಥ್ಯ 71.50 ಟಿಎಂಸಿ. 1,968.40 ಚದರ ಕಿಲೋಮೀಟರ್‌ ಜಲಾನಯನ ಪ್ರದೇಶ ಹೊಂದಿರುವ ಈ ಯೋಜನೆಗೆ ಸ್ವಾತಂತ್ರ್ಯಾನಂತರ 1947ರಲ್ಲಿ ಚಾಲನೆ ದೊರೆತಿದ್ದು, ಅಣೆಕಟ್ಟು ಕಾಮಗಾರಿ 1959ರಲ್ಲಿ ಹಾಗೂ ನಾಲೆಗಳ ಕಾಮಗಾರಿ 1966ರಲ್ಲಿ ಪೂರ್ಣಗೊಂಡಿತು.

ಒಣಭೂಮಿಗೆ ಹಸಿರು ಹೊದಿಸಿದ ನೀರು

ಭದ್ರಾ ನೀರಾವರಿ ಯೋಜನೆಯು ಮಧ್ಯ ಕರ್ನಾಟಕದ ಕೃಷಿಯ ಚಿತ್ರಣವನ್ನೇ ಬದಲಿಸಿದೆ. ಎಡದಂಡೆ ನಾಲೆ 77.24 ಕಿ.ಮೀ. ಹರಿದು ಸುಮಾರು 8,300 ಹೆಕ್ಟೇರ್‌ ಪ್ರದೇಶಕ್ಕೆ ನೀರು ಒದಗಿಸಿದರೆ, ಬಲದಂಡೆ ನಾಲೆ 366.90 ಕಿ.ಮೀ. ಉದ್ದಕ್ಕೆ ಹರಿದು ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರುಣಿಸುತ್ತದೆ.

ಒಂದು ಕಾಲದಲ್ಲಿ ಭತ್ತ ಮತ್ತು ಕಬ್ಬು ಪ್ರಧಾನವಾಗಿದ್ದ ಪ್ರದೇಶಗಳಲ್ಲಿ ಇದೀಗ ಅಡಕೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳ ವಿಸ್ತರಣೆ ಕಂಡುಬಂದಿದೆ. ಹೀಗಾಗಿ ಭದ್ರಾ ನೀರು ಕೃಷಿ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ.

ಕುಡಿಯುವ ನೀರಿಗೂ ಭದ್ರೆಯೇ ಆಸರೆ

ಮಧ್ಯ ಕರ್ನಾಟಕದ ಹಲವು ನಗರಗಳು, ಪಟ್ಟಣಗಳು ಹಾಗೂ ಸಾವಿರಾರು ಹಳ್ಳಿಗಳ ಕುಡಿಯುವ ನೀರಿನ ವ್ಯವಸ್ಥೆಯಲ್ಲೂ ಭದ್ರಾ ಜಲಾಶಯ ಪ್ರಮುಖ ಪಾತ್ರ ವಹಿಸುತ್ತದೆ. ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 8.50 ಟಿಎಂಸಿ ನೀರನ್ನು ಮೀಸಲಿಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಸೇರಿದಂತೆ ಹಲವು ಪ್ರದೇಶಗಳ ಜನಜೀವನಕ್ಕೆ ಈ ನೀರು ಆಸರೆಯಾಗಿದೆ.

ಹೂಳು, ಮೇಲ್ದಂಡೆ ಯೋಜನೆ: ಭವಿಷ್ಯದ ಸವಾಲು

ಜಲಾಶಯದ ಸಂಗ್ರಹ ಸಾಮರ್ಥ್ಯದ ಮೇಲೆ ಹೂಳು ಕೂಡ ಪರಿಣಾಮ ಬೀರುತ್ತಿದೆ. ಮೂಲ ಸಂಗ್ರಹಕ್ಕೆ ಹೋಲಿಸಿದರೆ ಸುಮಾರು 95.74 ಮಿಲಿಯನ್‌ ಘನ ಮೀಟರ್‌ ಹೂಳು ಸೇರಿಕೊಂಡಿದೆ ಎನ್ನಲಾಗುತ್ತದೆ. ಸದ್ಯ ಡೆಡ್‌ ಸ್ಟೋರೇಜ್‌ ಇರುವುದರಿಂದ ತಕ್ಷಣದ ಬಳಕೆಗೆ ದೊಡ್ಡ ತೊಂದರೆ ಇಲ್ಲವಾದರೂ, ಭವಿಷ್ಯದ ಜಲಭದ್ರತೆ ದೃಷ್ಟಿಯಿಂದ ಹೂಳು ನಿರ್ವಹಣೆ ಮಹತ್ವದ್ದಾಗಿದೆ.

ಇದರ ನಡುವೆ ಭದ್ರಾ ಮೇಲ್ದಂಡೆ ಯೋಜನೆ ಬರಪೀಡಿತ ಪ್ರದೇಶಗಳಿಗೆ ನೀರೊದಗಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಸೂಕ್ಷ್ಮ ನೀರಾವರಿ ಹಾಗೂ ಕೆರೆಗಳ ಭರ್ತಿಗೆ ಯೋಜನೆ ರೂಪಿಸಲಾಗಿದೆ. ಜತೆಗೆ ನಾಲೆಗಳ ಮೂಲಕ 37.2 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯೂ ನಡೆಯುತ್ತಿದೆ. ಮೀನು ಮರಿ ಸಾಕಣೆ ಕೇಂದ್ರವೂ ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡುತ್ತಿದೆ.

ಭದ್ರೆಯ ಅಂಕಿ-ಅಂಶಗಳು

  • ಜಲಾನಯನ ಪ್ರದೇಶ: 1,968.40 ಚ.ಕಿ.ಮೀ.
  • ಅಣೆಕಟ್ಟು ಎತ್ತರ: 59.14 ಮೀಟರ್‌
  • ಅಣೆಕಟ್ಟು ಉದ್ದ: 1,708 ಮೀಟರ್‌
  • ನೀರು ಸಂಗ್ರಹ ಸಾಮರ್ಥ್ಯ: 71.50 ಟಿಎಂಸಿ
  • ಅಚ್ಚುಕಟ್ಟು ಪ್ರದೇಶ: 1,05,570 ಹೆಕ್ಟೇರ್‌
  • ನಾಲೆಗಳ ಒಟ್ಟು ಉದ್ದ: 444.14 ಕಿ.ಮೀ.
Continue Reading

ದಿನದ ಸುದ್ದಿ

ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ

Published

on

ಜಾತಿಯ ಗೋಡೆ ಒಡೆದು ಮದುವೆಯಾದ ಜೋಡಿಗೆ ಹೊಸ ಸಂಕಷ್ಟ: ಪ್ರೋತ್ಸಾಹಧನಕ್ಕೆ ಅರ್ಜಿ ಹಾಕಿದರೂ ಹಣ ಮಾತ್ರ ಮರೀಚಿಕೆ!

ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ ಇದೀಗ ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ. ಸಮಾಜದ ವಿರೋಧವನ್ನು ಎದುರಿಸಿ ಹೊಸ ಬದುಕು ಕಟ್ಟಿಕೊಳ್ಳುವ ದಂಪತಿಗಳಿಗೆ ನೆರವಾಗಬೇಕಿದ್ದ ಯೋಜನೆಯಲ್ಲಿ ಹಣ ಬಿಡುಗಡೆ ವಿಳಂಬವಾಗುತ್ತಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ನೆರವಿಗಾಗಿ ಕಾಯುವಂತಾಗಿದೆ.

ಹೈಲೈಟ್ಸ್: 
  • SC/ST ಪುರುಷ–ಬೇರೆ ಜಾತಿಯ ಮಹಿಳೆ ವಿವಾಹಕ್ಕೆ ₹2.50 ಲಕ್ಷ ನೆರವು
  • SC/ST ಮಹಿಳೆ–ಬೇರೆ ಜಾತಿಯ ಪುರುಷ ವಿವಾಹಕ್ಕೆ ₹3 ಲಕ್ಷ ಪ್ರೋತ್ಸಾಹಧನ
  • 2025-26ರಲ್ಲಿ 5,612 ಅರ್ಜಿಗಳ ಪೈಕಿ 3,997 ಅರ್ಜಿಗಳು ಬಾಕಿ
  • 2026-27ರಲ್ಲಿ 2,194 ಅರ್ಜಿಗಳು; 61ಕ್ಕೆ ಅನುಮೋದನೆ, ಆದರೆ ಹಣ ಪಾವತಿ ಶೂನ್ಯ
  • ಅನುದಾನ ಕೊರತೆ ಮತ್ತು ಅಪೂರ್ಣ ದಾಖಲೆಗಳಿಂದ ಯೋಜನೆ ಅನುಷ್ಠಾನಕ್ಕೆ ವಿಳಂಬ

http://Visit : www.suddidina.com

ಅಂತರ್ಜಾತಿ ವಿವಾಹಕ್ಕೆ ಎಷ್ಟು ಪ್ರೋತ್ಸಾಹಧನ?

ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಪುರುಷ ಬೇರೆ ಜಾತಿಯ ಮಹಿಳೆಯನ್ನು ವಿವಾಹವಾದರೆ ₹2.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿಯ ಪುರುಷನನ್ನು ವಿವಾಹವಾದರೆ ₹3 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.

ಆದರೆ, ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಹಣ ಪಾವತಿ ಮಾತ್ರ ಅದೇ ವೇಗದಲ್ಲಿ ನಡೆಯುತ್ತಿಲ್ಲ. 2025-26ನೇ ಸಾಲಿನಲ್ಲಿ 5,612 ಅರ್ಜಿಗಳು ಸಲ್ಲಿಕೆಯಾಗಿದ್ದು, 1,615 ಅರ್ಜಿಗಳಿಗೆ ಮೊದಲ ಹಂತದ ಪ್ರೋತ್ಸಾಹಧನಕ್ಕೆ ಅನುಮೋದನೆ ದೊರೆತಿದೆ. ಆದರೆ ಕೇವಲ 39 ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಯಾಗಿದ್ದು, 3,997 ಅರ್ಜಿಗಳು ಇನ್ನೂ ಬಾಕಿ ಉಳಿದಿವೆ. 909 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿಯಾಗಿವೆ.

ಹೊಸ ಸಾಲಿನಲ್ಲೂ ಅದೇ ಕಥೆ

2026-27ನೇ ಸಾಲಿನಲ್ಲಿ ಇದುವರೆಗೆ 2,194 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 61 ಅರ್ಜಿಗಳಿಗೆ ಅನುಮೋದನೆ ದೊರೆತಿದ್ದರೂ, ಮೊದಲ ಕಂತಿನ ಹಣ ಯಾರಿಗೂ ಪಾವತಿಯಾಗಿಲ್ಲ. 392 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿ ಉಳಿದಿವೆ.

ಅನುದಾನ ಹೆಚ್ಚಳವಾಗದಿರುವುದು ದೊಡ್ಡ ಸಮಸ್ಯೆ

ಅಂತರ್ಜಾತಿ ವಿವಾಹಗಳ ಸಾಮಾಜಿಕ ಸ್ವೀಕಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಏರಿಕೆಯಾಗಿದೆ. ಆದರೆ, ಅರ್ಜಿಗಳ ಸಂಖ್ಯೆಗೆ ಅನುಗುಣವಾಗಿ ಯೋಜನೆಯ ಅನುದಾನ ಹೆಚ್ಚಳವಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಹಿಂದಿನ ವರ್ಷದ ಅರ್ಜಿಗಳೇ ಬಾಕಿ ಉಳಿಯುತ್ತಿರುವಾಗ ಹೊಸ ಅರ್ಜಿಗಳ ವಿಲೇವಾರಿಯೂ ವಿಳಂಬವಾಗುತ್ತಿದೆ.

2018-19ರಲ್ಲಿ ₹64.27 ಕೋಟಿ, 2019-20ರಲ್ಲಿ ₹90.42 ಕೋಟಿ, 2020-21ರಲ್ಲಿ ₹99.9 ಕೋಟಿ, 2021-22ರಲ್ಲಿ ₹171.84 ಕೋಟಿ ಹಾಗೂ 2022-23ರಲ್ಲಿ ₹94.62 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ವಾರ್ಷಿಕವಾಗಿ ಬರುತ್ತಿರುವ ಅರ್ಜಿಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಎದುರಾಗಿದೆ.

2026-27ನೇ ಸಾಲಿನ ಈವರೆಗಿನ ಅಂತರ್ಜಾತಿ ಪ್ರೋತ್ಸಾಹಧನ ಯೋಜನೆಯ ವಿವರ

  • 2026-27ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳು: 2,194
  • ಮೊದಲ ಕಂತಿಗೆ ಅನುಮೋದನೆ: 61
  • ಪ್ರೋತ್ಸಾಹ ಧನ ಪಾವತಿ: 00
  • ಅಪೂರ್ಣ ಅರ್ಜಿಗಳು: 392
  • ತಿರಸ್ಕಾರಗೊಂಡ ಅರ್ಜಿಗಳು: 02

ಸಾಮಾಜಿಕ ಧೈರ್ಯಕ್ಕೆ ಆರ್ಥಿಕ ಬೆಂಬಲ ಬೇಕಿದೆ

ಅಂತರ್ಜಾತಿ ವಿವಾಹದ ನಿರ್ಧಾರ ಕೈಗೊಳ್ಳುವ ಜೋಡಿಗಳು ಕೆಲವೊಮ್ಮೆ ಕುಟುಂಬದ ವಿರೋಧ, ಸಾಮಾಜಿಕ ಒತ್ತಡ, ಬಹಿಷ್ಕಾರ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಪ್ರೋತ್ಸಾಹಧನ ಕೇವಲ ಹಣಕಾಸಿನ ನೆರವಲ್ಲ; ಅದು ಹೊಸ ದಂಪತಿಗಳ ನಿರ್ಧಾರಕ್ಕೆ ಸಾಮಾಜಿಕ ಬೆಂಬಲದ ಸಂಕೇತವೂ ಹೌದು.

ಆದರೆ ಅರ್ಜಿ ಸಲ್ಲಿಸಿ ಅನುಮೋದನೆಗಾಗಿ, ನಂತರ ಹಣಕ್ಕಾಗಿ ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ಯೋಜನೆಯ ಮೂಲ ಉದ್ದೇಶವೇ ದುರ್ಬಲವಾಗುತ್ತದೆ. ಹೀಗಾಗಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿ, ದಾಖಲೆ ಪ್ರಕ್ರಿಯೆ ಸರಳೀಕರಣ ಹಾಗೂ ಅಗತ್ಯ ಅನುದಾನ ಹೆಚ್ಚಳಕ್ಕೆ ಸರ್ಕಾರ ಗಮನಹರಿಸಬೇಕಿದೆ.

Continue Reading

Trending