ದಿನದ ಸುದ್ದಿ
ಅಂಜನಾದ್ರಿ ಬೆಟ್ಟದ ಸುತ್ತಮುತ್ತಲು ಜಮೀನು ನೀಡಲು ರೈತರ ಒಪ್ಪಿಗೆ ; 15 ದಿನದೊಳಗೆ ನೀಲನಕ್ಷೆ ಸಿದ್ಧ : ಸಚಿವ ಆನಂದಸಿಂಗ್
ಸುದ್ದಿದಿನ,ಹೊಸಪೇಟೆ: ಅಂಜನೇಯ ಜನ್ಮಸ್ಥಳ ಅಂಜನಾದ್ರಿಯ ಬೆಟ್ಟದ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ವಿಶೇಷ ಮುತುವರ್ಜಿ ವಹಿಸಿದ್ದು, ಇದರ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಣಿತ ವಾಸ್ತುಶಿಲ್ಪತಜ್ಞರಿಂದ 15 ದಿನದೊಳಗೆ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದಸಿಂಗ್ ಅವರು ಹೇಳಿದರು.
ನಗರದ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಣಿತ ವಾಸ್ತುಶಿಲ್ಪ ತಜ್ಞರ ಏಜೆನ್ಸಿಯನ್ನು ಆಹ್ವಾನಿಸಿ ಅವರಿಂದ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಹೇಳಿದ ಸಚಿವ ಸಿಂಗ್ ಅವರು ಶೌಚಾಲಯ,ಸ್ನಾನಗೃಹ,ಪಾರ್ಕಿಂಗ್, ಪ್ರವಾಸಿಗರ ಕೊಠಡಿ, ವಾಣಿಜ್ಯ ಮಳಿಗೆಗಳು ಸೇರಿದಂತೆ ಇನ್ನೀತರ ಸೌಕರ್ಯಗಳನ್ನು ಒಳಗೊಂಡ ನೀಲನಕ್ಷೆಯನ್ನು ಸಿದ್ದಪಡಿಸಲಾಗುವುದು ಮತ್ತು ಮೊದಲ ಹಂತದಲ್ಲಿ ಇವುಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಬಜೆಟ್ನಲ್ಲಿ 100 ಕೋಟಿ ರೂ.ಗಳು ಮೀಸಲಿಟ್ಟಿದ್ದು, ಆ ಹಣವನ್ನು ಹಂತಹಂತವಾಗಿ ಹಣಕಾಸು ಇಲಾಖೆ ಒದಗಿಸಲಿದೆ;ಇನ್ನೂ ಹಣ ಅವಶ್ಯವಿದ್ದಲ್ಲಿ ಸರಕಾರ ಒದಗಿಸಲಿದೆ ಎಂದು ಅವರು ವಿವರಿಸಿದ ಸಚಿವ ಸಿಂಗ್ ಅವರು ಇದೇ 20 ರೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಜನಾದ್ರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದರು.
ಭೂಸ್ವಾಧೀನಕ್ಕೆ ರೈತರ ಒಪ್ಪಿಗೆ
ಅಂಜನಾದ್ರಿ ಸಮಗ್ರ ಅಭಿವೃದ್ಧಿಪಡಿಸುವ ಉದ್ದೇಶದಿಂದ ಅಂಜನಾದ್ರಿ ಬೆಟ್ಟದ ಸುತ್ತಮುತ್ತಲಿನ 62 ಎಕರೆ ರೈತರ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಲಾಗಿದೆ. ಅಂಜನೇಯನ ಮೇಲಿನ ಭಕ್ತಿ ಮತ್ತು ನಂಬಿಕೆಯಿಂದ ರೈತರು ಜಮೀನು ನೀಡಲು ಮುಂದೆ ಬಂದಿದ್ದಾರೆ. ರೈತರಿಗೆ ಪ್ರತಿ ಎಕರೆ ಜಮೀನಿಗೆ ಗರಿಷ್ಠ 42ಲಕ್ಷ ರೂ. ಪರಿಹಾರ ನೀಡಲು ಉದ್ದೇಶಿಸಲಾಗಿದೆ. ಜಿಲ್ಲಾಡಳಿತದ ವತಿಯಿಂದಲೂ ರೈತರಿಗೆ ಈ ಕುರಿತು ಮನವರಿಕೆ ಮಾಡಿಕೊಡಲಾಗಿದೆ ಎಂದು ಸಚಿವ ಆನಂದಸಿಂಗ್ ಅವರು ಹೇಳಿದರು.
ತಾವು ಕೂಡ ತಮ್ಮ ತಾಲೂಕಿನ ರೈತರೊಂದಿಗೆ ಸಮಾಲೋಚನೆ ನಡೆಸಿ ಮನವರಿಕೆ ಮಾಡಿಕೊಡಿ ಎಂದು ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಅವರಿಗೆ ಸೂಚನೆ ನೀಡಿದರು. ಇನ್ನೂ ಹೆಚ್ಚಿನ ಹಣಕ್ಕೆ ರೈತರು ಪಟ್ಟುಹಿಡಿದಲ್ಲಿ ಮುಖ್ಯಮಂತ್ರಿಗಳು ನಿರ್ಧಾರಕೈಗೊಳ್ಳಬೇಕಾಗುತ್ತದೆ ಎಂದರು.
ಅಂಜನಾದ್ರಿ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಹಾಗೂ ಇನ್ನೀತರ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಾಥಮಿಕ ಅಧಿಸೂಚನೆ ಹೊರಡಿಸುವಂತೆ ಸ್ಥಳದಲ್ಲಿದ್ದ ಕೊಪ್ಪಳ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಸೂಚನೆ ನೀಡಿದರು.
ನಿತ್ಯ ಅಂಜನಾದ್ರಿ ಬೆಟ್ಟದಲ್ಲಿನ ಅಂಜನೇಯನ ದರ್ಶನಕ್ಕೆ 5 ಸಾವಿರ ಜನರು ಆಗಮಿಸಲಿದ್ದಾರೆ;ವಾರಂತ್ಯದಲ್ಲಿ 25 ಸಾವಿರದಷ್ಟು ಜನರಿದ್ದರೇ ಹಬ್ಬ-ಹರಿದಿನಗಳ ಸಂದರ್ಭದಲ್ಲಿ 50 ಸಾವಿರದಷ್ಟು ಜನರು ದರ್ಶನಕ್ಕೆ ಬರುತ್ತಿದ್ದಾರೆ;ಅವರೆಲ್ಲರಿಗೂ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಕಲ್ಪಿಸುವುದು ಆದ್ಯ ಕರ್ತವ್ಯವಾಗಿದ ಎಂದು ಹೇಳಿದ ಸಚಿವ ಆನಂದಸಿಂಗ್ ಅವರು ಮೊದಲ ಹಂತದಲ್ಲಿ ಭೂಸ್ವಾಧೀನಕ್ಕೆ ಹೆಚ್ಚು ಹಣ ಖರ್ಚಾಗಲಿದೆ;ಉಳಿದ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ ಎಂದರು.
ಪಿಪಿಪಿ ಮಾಡಲ್ನಲ್ಲಿ ರೋಪ್ ವೇ
ಅಂಜನಾದ್ರಿ ಬೆಟ್ಟಕ್ಕೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ರೋಪ್ ವೇ ಅಳವಡಿಸಲು ಉದ್ದೇಶಿಸಲಾಗಿದ್ದು,ಐಡೆಕ್ ಸಂಸ್ಥೆ ವತಿಯಿಂದ ವಿಸಿಬಲಿಟಿ ಸ್ಟಡೀಸ್ ಮಾಡಿದ ನಂತರ ಟೆಂಡರ್ ಹಾಗೂ ಇನ್ನೀತರ ಪ್ರಕ್ರಿಯೆಗಳನ್ನು ಆರಂಭಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಭಾರತ ಸರಕಾರವು ಪರ್ವತ ಮಾಲಾ ಯೋಜನೆ ಅಡಿ ರಾಜ್ಯದಲ್ಲಿ ಅಂಜನಾದ್ರಿ ಮತ್ತು ಕೊಡಚಾದ್ರಿಗೆ ರೋಪ್ ವೇ ನಿರ್ಮಿಸಲು ಯೋಜನೆ ಹಾಕಿಕೊಂಡು ಟೆಂಡರ್ ಕರೆಯಲು ಉದ್ದೇಶಿಸಿದೆ;ಮೊದಲ ಹಂತವಾಗಿ ವಿಸಿಬಲಿಟಿ ಸ್ಟಡೀಸ್ಗೆ ತಂಡ ಆಗಮಿಸಲಿದೆ ಎಂದು ಕೇಂದ್ರ ಸರಕಾರದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ವೆಂಕಟೇಶ ಅವರು ಸಭೆಯಲ್ಲಿ ಪ್ರಸ್ತಾಪಿಸಿದರು. ಭಾರತ ಸರಕಾರದ ವತಿಯಿಂದ ಅಂಜನಾದ್ರಿಗೆ ರೋಪ್ವೇ ನಿರ್ಮಿಸುವ ಅಗತ್ಯವಿಲ್ಲ;ಅದನ್ನು ನಮ್ಮ ರಾಜ್ಯ ಸರಕಾರದ ವತಿಯಿಂದಲೇ ಪಿಪಿಪಿ ಮಾಡಲ್ ನಡಿ ರೋಪ್ ವೇ ನಿರ್ಮಿಸೋಣ;ಇದನ್ನು ಸದರಿ ಅಧಿಕಾರಿಗಳಿಗೆ ತಿಳಿಸಿ ಎಂದು ಸಚಿವ ಸಿಂಗ್ ಅವರು ಸೂಚನೆ ನೀಡಿದರು.
400 ಕೋಟಿ ರೂ.ವೆಚ್ಚದಲ್ಲಿ 35 ಕಿ.ಮೀ ರಸ್ತೆ ಅಭಿವೃದ್ಧಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ತಿಂಗಳು ಸಭೆ ನಡೆಸಿ ನೀಡಿದ ಸೂಚನೆ ಅನ್ವಯ ಅಂಜನಾದ್ರಿಗೆ ಸಂಪರ್ಕ ಕಲ್ಪಿಸಲು ಹಿಟ್ನಾಳ್ ಕ್ರಾಸ್ನಿಂದ ಗಂಗಾವತಿಯವರೆಗಿನ 35 ಕಿ.ಮೀ ಚತುಷ್ಪತ ರಸ್ತೆ ನಿರ್ಮಿಸಲು ಉದ್ದೇಶಿಸಿ ವಿಸೃತವರದಿ ಸಿದ್ದಪಡಿಸಲಾಗಿದೆ. 148 ಎಕರೆ ಭೂಸ್ವಾಧೀನ ಸೇರಿ 400ಕೋಟಿ ರೂ. ಈ ರಸ್ತೆ ನಿರ್ಮಾಣಕ್ಕೆ ಅಂದಾಜು ವೆಚ್ಚವಾಗಲಿದೆ ಎಂದು ಸಚಿವ ಆನಂದಸಿಂಗ್ ಅವರು ತಿಳಿಸಿದರು.
ಹಿಟ್ನಾಳ್ ಕ್ರಾಸ್ನಿಂದ ಗಂಗಾವತಿಯವರೆಗೆ 10 ಹಳ್ಳಿಗಳು ಬರಲಿದ್ದು,ಹಳ್ಳಿಗಳ ಹತ್ತಿರ ಮಾತ್ರ ಈಗಿರುವ ದ್ವಿಪಥದ ರಸ್ತೆಯನ್ನೇ ಬಳಸಿಕೊಳ್ಳಲಾಗುತ್ತದೆ. ಈ ವಿಸ್ತøತ ವರದಿಯನ್ನು ಸಿಎಂ ಬೊಮ್ಮಾಯಿ ಅವರ ಗಮನಕ್ಕೆ ತರಲಾಗುವುದು;ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಕೊಪ್ಪಳ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಇದುವರೆಗಿನ ಪ್ರಗತಿಯನ್ನು ಸಭೆಯಲ್ಲಿ ವಿವರಿಸಿದರು. ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಂಕಮ್ಮ, ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ವಿಜಯನಗರ ಎಸ್.ಪಿ ಡಾ.ಅರುಣ್ ಕೆ, ಕೊಪ್ಪಳ ಎಸ್.ಪಿ ಅರುಣಾಂಗ್ಷು ಗಿರಿ, ವಿಜಯನಗರ ಜಿ.ಪಂ. ಸಿಇಒ ಹರ್ಷಲ್ ಬೋಯೇರ್ ನಾರಾಯಣರಾವ್ ಮತ್ತಿತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243