ಬಹಿರಂಗ
ರೈತ ಪ್ರತಿಭಟನೆಯ ಜಾಗತಿಕ ಆಯಾಮ
- ಮೂಲ : ಉತ್ಸಾ ಪಟ್ನಾಯಕ್( ಹಿಂದೂ ದಿನಪತ್ರಿಕೆ 30-12-20) ಅನುವಾದ : ನಾ ದಿವಾಕರ
ರೈತರೊಂದಿಗೆ ಮಾತುಕತೆಯನ್ನೂ ನಡೆಸದೆ, ಕೇಂದ್ರ ಸರ್ಕಾರ ಸಂಸತ್ತಿನಲ್ಲಿಯೂ ಚರ್ಚೆ ನಡೆಸದೆ ಅವಸರದಲ್ಲಿ ಜಾರಿಗೊಳಿಸಿರುವ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲು ಆಗ್ರಹಿಸಿ ದೇಶದ ರೈತರು ನಡೆಸುತ್ತಿರುವ ಆಂದೋಲನ ಎರಡನೆ ತಿಂಗಳಿಗೆ ಕಾಲಿಟ್ಟಿದೆ. ರೈತರ ಈ ಆಂದೋಲನ ಚಾರಿತ್ರಿಕ ಮಹತ್ವ ಪಡೆದಿದೆ.
ರೈತಾಪಿಯ ಈ ಮುಷ್ಕರ ಕೇವಲ ಕನಿಷ್ಠ ಬೆಂಬಲ ಬೆಲೆಗೆ ಸೀಮಿತವಾದದ್ದಲ್ಲ. ಸಾರ್ವಜನಿಕ ಆಹಾರ ಧಾನ್ಯಗಳ ಸಾರ್ವಜನಿಕ ಸಂಗ್ರಹಣೆ ಮತ್ತು ವಿತರಣೆಯ ವ್ಯವಸ್ಥೆಯ ಉಳಿವಿಗೂ ಈ ಹೋರಾಟ ನಿರ್ಣಾಯಕವಾಗಿದೆ. ಭಾರತದ ಆಹಾರ ಕಣಜ ಎಂದೇ ಹೇಳಬಹುದಾದ ಉತ್ತರ ಭಾರತದ ಆಹಾರ ಧಾನ್ಯ ಉತ್ಪಾದನೆಯ ಆರ್ಥಿಕ ಸಕ್ಷಮತೆಯನ್ನು ಕಾಪಾಡದೆ ಹೋದಲ್ಲಿ ಇಡೀ ದೇಶದ ಸಾರ್ವಜನಿಕ ಆಹಾರ ಸಂಗ್ರಹಣೆ ವಿತರಣೆಯ ಪ್ರಕ್ರಿಯೆ ದುರ್ಬಲವಾಗುತ್ತದೆ. ಪ್ರಸ್ತುತ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಏನೇ ಕೊರತೆ, ಲೋಪದೋಷಗಳಿದ್ದರೂ ಇದು ದೇಶದ ಬಹುಸಂಖ್ಯೆಯ ಜನರಿಗೆ ಜೀವನಾಧಾರ ಒದಗಿಸುತ್ತಿರುವುದನ್ನು ಇಲ್ಲಿ ಗಮನಿಸಬೇಕಿದೆ.
ವಸಾಹತುಕಾಲ ಸ್ಥಿತಿಯ ಮರುನಿರ್ಮಾಣ
ಉತ್ತರದ ಔದ್ಯಮಿಕ ದೇಶಗಳಾದ ಅಮೆರಿಕ, ಕೆನಡಾ ಮತ್ತು ಐರೋಪ್ಯ ಸಂಘಟನೆಯ ರಾಷ್ಟ್ರಗಳಲ್ಲಿ ಅಲ್ಲಿನ ಗ್ರಾಹಕರಿಂದಲೇ ಹೆಚ್ಚಿನ ಬೇಡಿಕೆ ಇರುವ ಉಷ್ಣವಲಯದ ಮತ್ತು ಉಪ ಉಷ್ಣವಲಯದ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುವುದಿಲ್ಲ. ಆದರೆ ಈ ದೇಶಗಳ ಹವಾಮಾನಕ್ಕೆ ಅನುಗುಣವಾಗಿ ಅಲ್ಲಿನ ಏಕ ಬೆಳೆಯ ಭೂಮಿಯಲ್ಲಿ ಬೆಳೆಯಲಾಗುವ ಆಹಾರ ಧಾನ್ಯಗಳು ಮತ್ತು ಹೈನು ಉತ್ಪನ್ನಗಳು ಹೇರಳವಾಗಿ ಸಂಗ್ರಹವಾಗಿರುತ್ತವೆ.
ಈ ಧಾನ್ಯಗಳಿಗೆ ಮತ್ತು ಉತ್ಪನ್ನಗಳಿಗೆ ರಫ್ತು ಮಾರುಕಟ್ಟೆಯನ್ನು ಕಂಡುಕೊಳ್ಳುವುದು ಈ ದೇಶಗಳಿಗೆ ಅನಿವಾರ್ಯವಾಗಿರುತ್ತದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಈ ಶ್ರೀಮಂತ ರಾಷ್ಟ್ರಗಳು ಭಾರತ ಮತ್ತಿತರ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಒತ್ತಡ ಹೇರುತ್ತಿದ್ದು ಆಹಾರ ಧಾನ್ಯ ಸಂಗ್ರಹಣೆಯ ಪದ್ಧತಿಯನ್ನು ಕೈಬಿಡುವಂತೆ ಒತ್ತಾಯಿಸುತ್ತಿವೆ.
ಬದಲಾಗಿ ಈ ರಾಷ್ಟ್ರಗಳು ಶ್ರೀಮಂತ ರಾಷ್ಟ್ರಗಳಿಂದ ಆಹಾರಧಾನ್ಯಗಳನ್ನು ಆಮದು ಮಾಡಿಕೊಂಡು,ಇಲ್ಲಿನ ಆಹಾರ ಧಾನ್ಯ ಬೆಳೆಯುವ ಭೂಮಿಯನ್ನು ಗುತ್ತಿಗೆ ಕೃಷಿ ಪದ್ಧತಿಗೆ ಒಳಪಡಿಸಿ ರಫ್ತು ಬೆಳೆಗಳನ್ನು ಬೆಳೆಯುವಂತೆ ಒತ್ತಡ ಹೇರಲಾಗುತ್ತಿದೆ. ಈ ರೀತಿಯ ಒತ್ತಡಕ್ಕೆ ಕಾರಣವೇನೆಂದರೆ ಈ ಔದ್ಯಮಿಕ ರಾಷ್ಟ್ರಗಳಲ್ಲಿ ಭಾರತದಲ್ಲಿ ಬೆಳೆಯುವಂತಹ ಆಹಾರ ಧಾನ್ಯಗಳನ್ನು ಬೆಳೆಯಲಾಗುವುದಿಲ್ಲ. ಅಂದರೆ ವಸಾಹತು ಕಾಲಘಟ್ಟದ ಆರ್ಥಿಕ ಸನ್ನಿವೇಶವನ್ನು ಪುನರ್ ಸೃಷ್ಟಿಸುವತ್ತ ಔದ್ಯಮಿಕ ರಾಷ್ಟ್ರಗಳು ಮುನ್ನಡೆದಿವೆ.
1990ರ ದಶಕದಲ್ಲಿ ಫಿಲಿಪೈನ್ಸ್ ಮತ್ತು ಹತ್ತು ವರ್ಷಗಳ ನಂತರ ಆಫ್ರಿಕಾ ಖಂಡದ ಬೋಸ್ಟ್ವಾನಾ ದೇಶಗಳು ಈ ರೀತಿಯ ಒತ್ತಡಕ್ಕೆ ಬಲಿಯಾಗಿದ್ದವು. ಈ ಸಂದರ್ಭದಲ್ಲೇ ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳಲ್ಲಿ ಧಾನ್ಯಗಳ ಬೆಳೆಯನ್ನು ಎಥನಾಲ್ ಉತ್ಪಾದನೆಗೆ ಬಳಸಲು ಆರಂಭಿಸಿದ್ದರ ಪರಿಣಾಮವಾಗಿ 2007ರ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಬೆಲೆಗಳು ಗಗನಕ್ಕೇರಿದವು. ಆಹಾರ ಧಾನ್ಯಗಳಿಗಾಗಿ ಆಮದು ಪದಾರ್ಥಗಳನ್ನೇ ಅವಲಂಬಿಸಿದ್ದ 37 ದೇಶಗಳಲ್ಲಿ ಹಾಹಾಕಾರ ಉಂಟಾಗಿದ್ದು, ಆಹಾರಕ್ಕಾಗಿ ದಂಗೆಗಳು ಉಂಟಾಗಿದ್ದವು. ನಗರ ಪ್ರದೇಶದ ಜನರು ಹೆಚ್ಚಿನ ಬಡತನಕ್ಕೆ ನೂಕಲ್ಪಟ್ಟರು.
ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಆಹಾರ ಭದ್ರತೆ ಅತ್ಯಂತ ಮಹತ್ವದ ಸಂಗತಿಯಾಗಿದ್ದು ಇದನ್ನು ಜಾಗತಿಕ ಮಾರುಕಟ್ಟೆಯ ನಿಯಂತ್ರಣಕ್ಕೆ ಒಪ್ಪಿಸುವುದು ಅಪಾಯಕಾರಿಯಾಗುತ್ತದೆ. ಆದಾಗ್ಯೂ ಆಹಾರ ಭದ್ರತೆಯನ್ನು ಸಾಧಿಸಲು ಈ ದೇಶಗಳ ಸಾರ್ವಜನಿಕ ಆಹಾರ ಸಂಗ್ರಹಗಳ ಮೇಲೆ ನಿರಂತರ ದಾಳಿ ನಡೆಯುತ್ತಲೇ ಇದೆ. ಒಂದು ದಶಕದ ಹಿಂದೆಯಷ್ಟೇ ಭಾರತ ಈ ನಿಟ್ಟಿನಲ್ಲಿ ಜಾಗೃತವಾಗಿ ತನ್ನ ಆಹಾರ ಸಂಗ್ರಹವನ್ನು ಸಂರಕ್ಷಿಸಲು ಯಶಸ್ವಿಯಾಗಿತ್ತು.
2008ರ ಬೆಲೆ ಏರಿಕೆಗೂ ಮುನ್ನ ಆರು ವರ್ಷಗಳ ಕಾಲ ತಟಸ್ಥವಾಗಿದ್ದ ಬೆಂಬಲ ಬೆಲೆಗಳನ್ನು ಹೆಚ್ಚಿಸಲಾಗಿತ್ತು. ಆರ್ಥಿಕ ಪುನಶ್ಚೇತನದ ಪರಿಣಾಮ ಪಂಜಾಬ್ ನಲ್ಲಿ ಜಡಗಟ್ಟಿದ್ದ ಆಹಾರ ಧಾನ್ಯ ಉತ್ಪಾದನೆ ಹೆಚ್ಚಾಗಿತ್ತು. ಆದರೆ ಬಹುಸಂಖ್ಯೆಯ ಬಡಜನತೆಯನ್ನು “ ಬಡತನ ರೇಖೆಯ ಕೆಳಗಿರುವ ” ಪಡಿತರ ವ್ಯವಸ್ಥೆಯಿಂದ ಹೊರಗುಳಿಯುವಂತೆ ಮಾಡಿದ ಪರಿಣಾಮ ಆಹಾರ ಧಾನ್ಯಗಳ ಬಳಕೆ ಹೆಚ್ಚಾಗಲಿಲ್ಲ. 2016ರ ನೋಟು ರದ್ದತಿಯಿಂದ ಉಂಟಾದ ನಿರುದ್ಯೋಗ ಮತ್ತು 2020ರ ಕೋವಿದ್ ಪರಿಣಾಮದಿಂದ ಸೃಷ್ಟಿಯಾದ ಉದ್ಯೋಗ ಕೊರತೆ ಆಹಾರ ಧಾನ್ಯಗಳ ಒಟ್ಟಾರೆ ಬೇಡಿಕೆಯ ಪ್ರಮಾಣ ಚಾರಿತ್ರಿಕ ಕುಸಿತ ಕಾಣುವಂತೆ ಮಾಡಿವೆ.
ಭಾರತದ ರೈತಾಪಿ ಯಾವುದೇ ತರ್ಕಬದ್ಧ ಕಾರಣಗಳೇ ಇಲ್ಲದೆ ಅಪ್ರಾಮಾಣಿಕ ವ್ಯಾಪಾರದ ತಂತ್ರಗಾರಿಕೆಗಳಿಗೆ ಬಲಿಯಾಗಬೇಕಾಯಿತು. ಜಾಗತಿಕ ಬೆಲೆಗಳ ಏರುಪೇರುಗಳ ಪರಿಣಾಮ ಭಾರತದ ರೈತರು ತೀವ್ರ ಸಾಲದ ಹೊರೆಗೆ ಸಿಲುಕಿ ಸಂಕಷ್ಟಕ್ಕೀಡಾಗಬೇಕಾಯಿತು. ಪಂಜಾಬ್ ನ ಒಂದು ಗ್ರಾಮದಲ್ಲಿ ಆತ್ಮಹತ್ಯೆಯಿಂದ ತಮ್ಮ ಗಂಡಂದಿರನ್ನು ಕಳೆದುಕೊಂಡ 59 ವಿಧವೆಯರಿದ್ದಾರೆ.
ಅಭಿವೃದ್ಧಿ ಹೊಂದಿದ ದೇಶಗಳೊಡನೆ ಭಾರತ ಪೈಪೋಟಿ ನಡೆಸುವುದು ತರವಲ್ಲ. ಏಕೆಂದರೆ 1990ರ ದಶಕದಲ್ಲಿ ಈ ಶ್ರೀಮಂತ ರಾಷ್ಟ್ರಗಳು ತಮ್ಮ ಬೆಂಬಲ ಬೆಲೆ ಪದ್ಧತಿಯನ್ನು ಪರಿಷ್ಕರಿಸುವ ಮೂಲಕ ಅಲ್ಲಿನ ರೈತರಿಗೆ ಸಹಾಯಧನವನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡಲು ಆರಂಭಿಸಿದ್ದವು.
ಅಂತಾರಾಷ್ಟ್ರೀಯ ಕೃಷಿ ಒಡಂಬಡಿಕೆಯ ಸಹಾಯಧನವನ್ನು ಕಡಿಮೆ ಮಾಡುವ ಒಪ್ಪಂದದ ಅನುಸಾರ ಈ ರೀತಿ ನೇರ ನಗದು ನೀಡುವುದು ನಿಯಮಗಳ ಉಲ್ಲಂಘನೆಯಾಗಿದ್ದರೂ, ಇದು ಒಡಂಬಡಿಕೆಯಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳದಂತೆ ಈ ದೇಶಗಳು ಎಚ್ಚರವಹಿಸಿದ್ದವು. ಇದರಿಂದ ಉಂಟಾಗಬಹುದಾದ ಪರಿಣಾಮವನ್ನು ಗಮನಿಸದೆಯೇ ಭಾರತ ಮತ್ತಿತರ ರಾಷ್ಟ್ರಗಳು ಈ ಒಡಂಬಡಿಕೆಗೆ ಸಹಿ ಹಾಕಿದ್ದವು.
ಅಮೆರಿಕದ 20 ಲಕ್ಷ ರೈತರಿಗೆ ನೀಡುವ ನೇರ ನಗದು ಸಹಾಯಧನದ ಪ್ರಮಾಣ ಆ ದೇಶದ ಒಟ್ಟು ಕೃಷಿ ಉತ್ಪನ್ನದ ಮೌಲ್ಯದಲ್ಲಿ ಅರ್ಧದಷ್ಟಾಗುತ್ತದೆ. ಇದಕ್ಕೆ ಅಮೆರಿಕದ ಬಜೆಟ್ ನ ಶೇ 1ರಷ್ಟು ನಿದಿ ಬಳಕೆಯಾಗುತ್ತದೆ. ಭಾರತದಲ್ಲಿ ಇದೇ ರೀತಿ ಒಟ್ಟು ಕೃಷಿ ಉತ್ಪಾದನಾ ಮೌಲ್ಯದ ಶೇ 25ರಷ್ಟು ಪ್ರಮಾಣವನ್ನು ಒಂದು ಕೋಟಿ 20 ಲಕ್ಷ ರೈತರಿಗೆ ಸಹಾಯಧನದ ರೂಪದಲ್ಲಿ ನೀಡಿದರೂ ಕೇಂದ್ರ ಬಜೆಟ್ ನಲ್ಲಿ ಶೇ 50ರಷ್ಟು ನಿಧಿಯ ಬಳಕೆಯಾಗುತ್ತದೆ. ಇದು ಆರ್ಥಿಕವಾಗಿ ಅಸಾಧ್ಯವಾಗಿದ್ದು ಆಡಳಿತ ವ್ಯವಸ್ಥೆಗೆ ಮಾರಕವಾಗಿ ಪರಿಣಮಿಸುತ್ತದೆ.
ಸಮರ್ಪಕ ಬೆಲೆಯ ನಿಷ್ಕರ್ಷೆ
ತಮಗೆ ಅಲ್ಪ ಪ್ರಮಾಣದ ನಗದು ಪಾವತಿ ಮಾಡುವುದನ್ನು ಭಾರತದ ರೈತರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ದೇಶದ ಸಮಸ್ತ ಜನತೆಗಾಗಿ ತಾವು ಬೆಳೆಯುವ ಆಹಾರ ಧಾನ್ಯಗಳಿಗೆ ಸಮರ್ಪಕವಾದ, ತರ್ಕಬದ್ಧವಾದ ಬೆಲೆ ನೀಡುವಂತೆ ರೈತರು ಆಗ್ರಹಿಸುತ್ತಿದ್ದಾರೆ. ಹಾಗಾದಲ್ಲಿ ಮಾತ್ರ ರೈತರು ತಮ್ಮ ಬೇಸಾಯದ ವೆಚ್ಚವನ್ನು ಸರಿದೂಗಿಸಿ ಸಾಧಾರಣ ಬದುಕು ನಡೆಸಲು ಸಾಧ್ಯವಾಗುತ್ತದೆ.
ಭಾರತದ ಸಂದರ್ಭದಲ್ಲಿ ಬೆಂಬಲ ಬೆಲೆ ಪದ್ಧತಿಯೊಂದೇ ನ್ಯಾಯಯುತವಾಗಿ ಕಾಣುತ್ತದೆ. ಪಂಜಾಬ್ ನಲ್ಲಿ ಅಂತರ್ಜಲ ಕುಸಿಯುತ್ತಿರುವುದು ಆತಂಕಕಾರಿ ವಿಷಯವೇ ಆದರೂ ಇಲ್ಲಿ ನೂತನ ಕೃಷಿ ತಂತ್ರಜ್ಞಾನಗಳನ್ನು ಅಳವಡಿಸುವುದು ಮುಖ್ಯವಾಗುತ್ತದೆ. ಕಡಿಮೆ ನೀರು ಬಳಕೆಯಾಗುವಂತಹ ಮಾದರಿಗಳನ್ನು ಬಳಸಬೇಕಾಗುತ್ತದೆ. ( ಕೃಷಿ ವಿಜ್ಞಾನಿಗಳು ಕಂಡುಹಿಡಿದಿರುವ Rice Intensification ಪದ್ಧತಿಯಲ್ಲಿ ಭತ್ತ ಬೆಳೆಯಲು ಹೆಚ್ಚಿನ ಸಾವಯವ ಗೊಬ್ಬರವನ್ನು ಬಳಸುವುದು ಮತ್ತು ಹೆಚ್ಚಿನ ಅಂತರದಲ್ಲಿ ಭತ್ತದ ನಾಟಿ ಮಾಡುವುದು, ಚೌಕಾಕಾರದಲ್ಲಿ ನಾಟಿ ಮಾಡುವುದರ ಮೂಲಕ ನಡುವೆ ಹೆಚ್ಚಿನ ಜಲಸಾಂದ್ರತೆಯನ್ನು ತಡೆಗಟ್ಟಿ, ತೇವಾಂಶವನ್ನು ಉಳಿಸಿಕೊಳ್ಳುವುದು, ಅಂತರ್ಜಲ ಸಂರಕ್ಷಣೆಯ ಒಂದು ವಿಧಾನವಾಗಿದೆ-ಅನುವಾದಕ)
ಅಂತಾರಾಷ್ಟ್ರೀಯ ಕೃಷಿ ಒಡಂಬಡಿಕೆಗಳಲ್ಲಿ ಅಭಿವೃದ್ಧಿ ಹೊಂದಿದ ಶ್ರೀಮಂತ ರಾಷ್ಟ್ರಗಳು ಅಸಂಬದ್ಧ ರೀತಿಯಲ್ಲಿ, ನಿಷ್ಪ್ರಮಾಣವಾದ ನಿಯಮಗಳನ್ನು ರೂಪಿಸಿದ್ದು, ಈ ನಿಯಮಗಳ ಅಡಿಯಲ್ಲೇ ಆಹಾರ ಧಾನ್ಯಗಳ ಬೆಂಬಲ ಬೆಲೆ ನಿರ್ಧರಿಸುವುದನ್ನೂ ಅಳವಡಿಸಲಾಗಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿರುವ ಒಂದು ನಿಯಮವಾಗಿದೆ.
2018ರಲ್ಲಿ ವಿಶ್ವ ವಾಣಿಜ್ಯ ಸಂಸ್ಥೆಗೆ ಭಾರತದ ವಿರುದ್ಧ ದೂರು ಸಲ್ಲಿಸಿದ್ದ ಅಮೆರಿಕ ಸರ್ಕಾರ, ಭಾರತದಲ್ಲಿ 1986-88ರ ಮೂಲ ಬೆಲೆಯನ್ನೇ ಆಧಾರವಾಗಿಟ್ಟುಕೊಂಡು, ಅಂದಿನ ಡಾಲರ್ ಮೌಲ್ 12.5 ರೂಗಳಿಗೆ ಅನುಗುಣವಾಗಿ ಭಾರತ 2013-14ರಲ್ಲಿ ಭತ್ತ ಮತ್ತು ಗೋಧಿಗೆ ಒಂದು ಕ್ವಿಂಟಾಲಿಗೆ ಕ್ರಮವಾಗಿ 235 ರೂ ಮತ್ತು 354 ರೂ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಕೋರಿತ್ತು. ಆದರೆ ಭಾರತದಲ್ಲಿ ಈ ವೇಳೆಗೆ ಬೆಂಬಲ ಬೆಲೆ ಕ್ರಮವಾಗಿ 1348 ರೂ ಮತ್ತು 1386 ರೂಗಳಷ್ಟಿತ್ತು.
ಕ್ವಿಂಟಲ್ಗೆ ಒಂದು ಸಾವಿರ ರೂ ಹೆಚ್ಚಾಗಿತ್ತು. ಇದನ್ನು 2013-14ರ ಭತ್ತ ಮತ್ತು ಗೋಧಿ ಉತ್ಪನ್ನದ ಒಟ್ಟು ಮೌಲ್ಯದೊಡನೆ ಗುಣಾಕಾರ ಮಾಡಿದರೆ ಇದು ಒಟ್ಟು ಉತ್ಪಾದನೆಯ ಶೇ 77 ಮತ್ತು ಶೇ 67ರಷ್ಟಾಗುತ್ತದೆ. ಈ ಲೆಕ್ಕಾಚಾರವನ್ನು ವಿಶ್ವ ವಾಣಿಜ್ಯ ಸಂಸ್ಥೆಯ ಮುಂದಿರಿಸಿದ್ದ ಅಮೆರಿಕ ಸರ್ಕಾರ , ಭಾರತದ ಈ ನೀತಿ ಅಂತಾರಾಷ್ಟ್ರೀಯ ಒಪ್ಪಂದದಲ್ಲಿ ನಿಗದಿಪಡಿಸಿರುವ ಗರಿಷ್ಟ ಶೇ 10ರಷ್ಟು ಬೆಂಬಲ ನೀಡುವ ನಿಯಮದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿತ್ತು.
ಎರಡು ತಿಂಗಳ ಹಿಂದೆ ಅಮೆರಿಕ ಭಾರತಕ್ಕೆ ಮತ್ತಷ್ಟು ಹೊಸ ಸವಾಲುಗಳನ್ನು ಹಾಕಿದೆ. ದುರ್ಬಲ ಅಭಿವೃದ್ಧಿಶೀಲ ದೇಶಗಳನ್ನು ನಿಯಂತ್ರಿಸುವ ಉದ್ದೇಶದಿಂದಲೇ ಕೃಷಿ ಒಡಂಬಡಿಕೆಯಲ್ಲಿ ಅಪ್ರಮಾಣಿಕವಾದ, ಅಸಂಬದ್ಧ ನಿಯಮಗಳನ್ನು ಅಳವಡಿಸಲಾಗಿದೆ.
ಭಾರತದ ರೈತರು ವಿಶ್ವದಲ್ಲೇ ಅತಿ ಕಡಿಮೆ ವೆಚ್ಚದಲ್ಲಿ ಆಹಾರ ಉತ್ಪನ್ನ ಮಾಡುತ್ತಿದ್ದು 2013-14ರಲ್ಲಿ 60.5ರಷ್ಟಿದ್ದ ಡಾಲರ್ ಮೌಲ್ಯಕ್ಕೆ ತುಲನೆ ಮಾಡಿದರೆ ಭಾರತ ನೀಡುತ್ತಿರುವ ಬೆಂಬಲ ಬೆಲೆ ಜಾಗತಿಕ ಬೆಲೆಗಳಿಗಿಂತಲೂ ಸಾಕಷ್ಟು ಕಡಿಮೆ ಪ್ರಮಾಣದಲ್ಲಿದೆ. ಅಂದರೆ ವಾಸ್ತವವಾಗಿ ಬೆಂಬಲ ಬೆಲೆ ನಕಾರಾತ್ಮಕವಾಗಿಯೇ ಕಂಡುಬರುತ್ತದೆ.
ಪ್ರಸ್ತುತ ಸಂದರ್ಭದಲ್ಲಿ ಜಾಗತಿಕ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ನೋಡಿದಾಗ ಭತ್ತ ಮತ್ತು ಗೋಧಿಯ ಬೆಲೆಗಳು ಚಾರಿತ್ರಿಕ ಕುಸಿತ ಕಂಡಿವೆ. ಇದೇ ವೇಳೆ ಅಭಿವೃದ್ಧಿ ಹೊಂದಿದ ಶ್ರೀಮಂತ ದೇಶಗಳಲ್ಲಿ ಕೃಷಿ ಸಹಾಯಧನ ತೀವ್ರ ಹೆಚ್ಚಳ ಕಂಡಿದೆ. ಈ ಹಿನ್ನೆಲೆಯಲ್ಲೇ ಈ ದೇಶಗಳು ತಮ್ಮ ಕೃಷಿ ಉತ್ಪನ್ನಗಳನ್ನು ಭಾರತದಂತಹ ದೇಶಗಳ ಮಾರುಕಟ್ಟೆಗಳಲ್ಲಿ ತಂದು ಸುರಿಯಲು ಹತಾಶರಾಗಿವೆ.
ಈ ದೃಷ್ಟಿಯಿಂದ ನೋಡಿದಾಗ ಭಾರತದ ರೈತ ಸಂಘಟನೆಗಳು ತಾವು ವಿರೋಧಿಸುತ್ತಿರುವ ಮೂರು ಕೃಷಿ ಮಸೂದೆಗಳಿಂದ ಸ್ಥಳೀಯ ಉದ್ಯಮಿಗಳಿಗೆ ಹೆಚ್ಚು ಲಾಭವಾಗುತ್ತದೆ ಎನ್ನುವುದನ್ನು ಸರಿಯಾಗಿ ಗುರುತಿಸಿದ್ದು, ವಿದೇಶಿ ಕೃಷಿ ಉದ್ದಿಮೆಗಳು ಭಾರತದ ಕೃಷಿ ವ್ಯವಸ್ಥೆಗೆ ಮಾರಕವಾಗುವುದನ್ನೂ ಸಮರ್ಪಕವಾಗಿ ಗುರುತಿಸಿವೆ.
ಪಂಜಾಬ್ ಮತ್ತು ಹರಿಯಾಣದಲ್ಲಿ ಈಗಾಗಲೇ ರೈತರು ವಿದೇಶಿ ಕೃಷಿ ಉದ್ದಿಮೆಗಳೊಡನೆ ಗುತ್ತಿಗೆ ಕೃಷಿಯನ್ನು ನಡೆಸಿ ಅದರ ದುಷ್ಪರಿಣಾಮಗಳನ್ನು ಎದುರಿಸಿದ್ದಾರೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಬೆಲೆ ಮತ್ತು ಗುಣಮಟ್ಟದ ಬಗ್ಗೆ ಒಪ್ಪಿತ ನಿಯಮಗಳನ್ನೂ ಉಲ್ಲಂಘಿಸುವ ಮೂಲಕ ರೈತರಿಗೆ ವಂಚಿಸುವ ಈ ಅಗೋಚರ ಖಾಸಗಿ ಕಾರ್ಪೋರೇಟ್ ಉದ್ದಿಮೆಗಳೊಡನೆ ತಾವು ಯಾವುದೇ ರೀತಿಯಲ್ಲೂ ವ್ಯವಹರಿಸಲು ಸಿದ್ಧರಾಗಿಲ್ಲ ಎಂದು ರೈತ ಸಮುದಾಯ ಸ್ಪಷ್ಟವಾಗಿ ಹೇಳಿದೆ.
ಎಷ್ಟೇ ಅದಕ್ಷತೆ ಇದ್ದರೂ, ಹಣ ಪಾವತಿಯಲ್ಲಿ ವಿಳಂಬ ಉಂಟಾದರೂ, ತಮ್ಮ ಉತ್ಪನ್ನಗಳನ್ನು ಸರ್ಕಾರಿ ಏಜೆಂಟರಿಗೆ ನಿಗದಿತ ಬೆಂಬಲ ಬೆಲೆಗೆ ಮಾರಾಟ ಮಾಡಲು ರೈತರು ಸಿದ್ಧರಾಗಿದ್ದಾರೆ. ನೂತನ ಕೃಷಿ ಕಾಯ್ದೆಗಳ ಅನುಸಾರ ಮಾರುಕಟ್ಟೆ ನಿಯಂತ್ರಣ ನಿಯಮಗಳನ್ನು ಸಡಿಲಗೊಳಿಸಿದರೆ ಕೃಷಿ ಕ್ಷೇತ್ರದಲ್ಲಿ ಸ್ಥಳೀಯ ಉದ್ದಿಮೆಗಳೊಡನೆ ವಿದೇಶಿ ಕೃಷಿ ಉದ್ದಿಮೆಗಳೂ ಪ್ರವೇಶಿಸುತ್ತವೆ, ಇದರಿಂದ ಕನಿಷ್ಟ ಬೆಂಬಲ ಬೆಲೆ ಪದ್ಧತಿಗೂ ಪೆಟ್ಟಾಗುವುದಲ್ಲದೆ, ಸಾರ್ವಜನಿಕ ಸಂಗ್ರಹಣೆಯ ಪದ್ಧತಿಯೂ ಇಲ್ಲವಾಗುತ್ತದೆ ಎನ್ನುವ ರೈತರ ಆತಂಕ ನ್ಯಾಯಯುತವಾಗಿದೆ.
ಸಹಾಯಧನ ಪಡೆಯುವ ವಿದೇಶಿ ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳುವುದರಿಂದ ಭಾರತದಲ್ಲಿನ ಬಡ ಗ್ರಾಹಕರಿಗೆ ಅನುಕೂಲವಾಗುತ್ತದೆ ಎಂದು ಹಲವು ಕೃಷಿ ವಿಶ್ಲೇಷಕರು ಪ್ರತಿಪಾದಿಸುತ್ತಾರೆ. ಆದರೆ ಈ ಅಭಿವೃದ್ಧಿ ಹೊಂದಿದ ಶ್ರೀಮಂತ ರಾಷ್ಟ್ರಗಳಲ್ಲಿ ಹಸಿರು ಇಂಧನ ಬಳಕೆಯ ಆಗ್ರಹ ಹೆಚ್ಚಾಗುತ್ತಿದ್ದು ಹೆಚ್ಚಿನ ಪ್ರಮಾಣದ ಆಹಾರ ಧಾನ್ಯಗಳನ್ನು ಎಥನಾಲ್ ಉತ್ಪಾದನೆಗೆ ಬಳಕೆಯಾಗುತ್ತದೆ ಎನ್ನುವ ವಾಸ್ತವಾಂಶವನ್ನು ಈ ತಜ್ಞರು ಮರೆಮಾಚುತ್ತಿದ್ದಾರೆ.
ಹಾಗಾಗಿ ಇಂದು ಕಡಿಮೆ ಬೆಲೆಯ ಆಹಾರ ಧಾನ್ಯಗಳ ಆಮದು ಪ್ರಕ್ರಿಯೆಗೆ ಅವಕಾಶ ನೀಡಿದರೆ ಮುಂಬರುವ ದಿನಗಳಲ್ಲಿ ಇದರಿಂದ ಭಾರತದ ರೈತರು ವಿನಾಶದ ಅಂಚಿಗೆ ತಲುಪುವುದೇ ಅಲ್ಲದೆ, ಬೆಲೆ ಏರಿಕೆ ತೀವ್ರವಾಗಿ ಈ ಹಿಂದೆ ಕೆಲವು ಅಭಿವೃದ್ಧಿಶೀಲ ದೇಶಗಳು ಎದುರಿಸಿದ್ದ ಸಂಕಷ್ಟಗಳನ್ನೇ ಭಾರತವೂ ಎದುರಿಸಬೇಕಾಗುತ್ತದೆ. ತಮ್ಮ ಬೆವರು ಹರಿಸಿ ವ್ಯವಸಾಯದಲ್ಲಿ ತೊಡಗಿರುವ ಭಾರತದ ರೈತಾಪಿಯ ಬಗ್ಗೆ ಕಾಳಜಿ ಇರುವ ಯಾರೇ ಆದರೂ ಈ ಕೃಷಿ ಮಸೂದೆಗಳನ್ನು ವಿರೋಧಿಸುವುದೇ ಅಲ್ಲದೆ, ಸ್ಥಳೀಯ ಮತ್ತು ವಿದೇಶಿ ಉದ್ಯಮಿಗಳ ಕುತಂತ್ರಗಳ ವಿರುದ್ಧ ದನಿ ಎತ್ತಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

-
ದಿನದ ಸುದ್ದಿ3 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ2 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ3 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ3 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ಅಂಕಣ1 day agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ2 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ1 day agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ


