ಬಹಿರಂಗ
ರೈತ ಪ್ರತಿಭಟನೆಯ ಜಾಗತಿಕ ಆಯಾಮ
- ಮೂಲ : ಉತ್ಸಾ ಪಟ್ನಾಯಕ್( ಹಿಂದೂ ದಿನಪತ್ರಿಕೆ 30-12-20) ಅನುವಾದ : ನಾ ದಿವಾಕರ
ರೈತರೊಂದಿಗೆ ಮಾತುಕತೆಯನ್ನೂ ನಡೆಸದೆ, ಕೇಂದ್ರ ಸರ್ಕಾರ ಸಂಸತ್ತಿನಲ್ಲಿಯೂ ಚರ್ಚೆ ನಡೆಸದೆ ಅವಸರದಲ್ಲಿ ಜಾರಿಗೊಳಿಸಿರುವ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲು ಆಗ್ರಹಿಸಿ ದೇಶದ ರೈತರು ನಡೆಸುತ್ತಿರುವ ಆಂದೋಲನ ಎರಡನೆ ತಿಂಗಳಿಗೆ ಕಾಲಿಟ್ಟಿದೆ. ರೈತರ ಈ ಆಂದೋಲನ ಚಾರಿತ್ರಿಕ ಮಹತ್ವ ಪಡೆದಿದೆ.
ರೈತಾಪಿಯ ಈ ಮುಷ್ಕರ ಕೇವಲ ಕನಿಷ್ಠ ಬೆಂಬಲ ಬೆಲೆಗೆ ಸೀಮಿತವಾದದ್ದಲ್ಲ. ಸಾರ್ವಜನಿಕ ಆಹಾರ ಧಾನ್ಯಗಳ ಸಾರ್ವಜನಿಕ ಸಂಗ್ರಹಣೆ ಮತ್ತು ವಿತರಣೆಯ ವ್ಯವಸ್ಥೆಯ ಉಳಿವಿಗೂ ಈ ಹೋರಾಟ ನಿರ್ಣಾಯಕವಾಗಿದೆ. ಭಾರತದ ಆಹಾರ ಕಣಜ ಎಂದೇ ಹೇಳಬಹುದಾದ ಉತ್ತರ ಭಾರತದ ಆಹಾರ ಧಾನ್ಯ ಉತ್ಪಾದನೆಯ ಆರ್ಥಿಕ ಸಕ್ಷಮತೆಯನ್ನು ಕಾಪಾಡದೆ ಹೋದಲ್ಲಿ ಇಡೀ ದೇಶದ ಸಾರ್ವಜನಿಕ ಆಹಾರ ಸಂಗ್ರಹಣೆ ವಿತರಣೆಯ ಪ್ರಕ್ರಿಯೆ ದುರ್ಬಲವಾಗುತ್ತದೆ. ಪ್ರಸ್ತುತ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಏನೇ ಕೊರತೆ, ಲೋಪದೋಷಗಳಿದ್ದರೂ ಇದು ದೇಶದ ಬಹುಸಂಖ್ಯೆಯ ಜನರಿಗೆ ಜೀವನಾಧಾರ ಒದಗಿಸುತ್ತಿರುವುದನ್ನು ಇಲ್ಲಿ ಗಮನಿಸಬೇಕಿದೆ.
ವಸಾಹತುಕಾಲ ಸ್ಥಿತಿಯ ಮರುನಿರ್ಮಾಣ
ಉತ್ತರದ ಔದ್ಯಮಿಕ ದೇಶಗಳಾದ ಅಮೆರಿಕ, ಕೆನಡಾ ಮತ್ತು ಐರೋಪ್ಯ ಸಂಘಟನೆಯ ರಾಷ್ಟ್ರಗಳಲ್ಲಿ ಅಲ್ಲಿನ ಗ್ರಾಹಕರಿಂದಲೇ ಹೆಚ್ಚಿನ ಬೇಡಿಕೆ ಇರುವ ಉಷ್ಣವಲಯದ ಮತ್ತು ಉಪ ಉಷ್ಣವಲಯದ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುವುದಿಲ್ಲ. ಆದರೆ ಈ ದೇಶಗಳ ಹವಾಮಾನಕ್ಕೆ ಅನುಗುಣವಾಗಿ ಅಲ್ಲಿನ ಏಕ ಬೆಳೆಯ ಭೂಮಿಯಲ್ಲಿ ಬೆಳೆಯಲಾಗುವ ಆಹಾರ ಧಾನ್ಯಗಳು ಮತ್ತು ಹೈನು ಉತ್ಪನ್ನಗಳು ಹೇರಳವಾಗಿ ಸಂಗ್ರಹವಾಗಿರುತ್ತವೆ.
ಈ ಧಾನ್ಯಗಳಿಗೆ ಮತ್ತು ಉತ್ಪನ್ನಗಳಿಗೆ ರಫ್ತು ಮಾರುಕಟ್ಟೆಯನ್ನು ಕಂಡುಕೊಳ್ಳುವುದು ಈ ದೇಶಗಳಿಗೆ ಅನಿವಾರ್ಯವಾಗಿರುತ್ತದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಈ ಶ್ರೀಮಂತ ರಾಷ್ಟ್ರಗಳು ಭಾರತ ಮತ್ತಿತರ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಒತ್ತಡ ಹೇರುತ್ತಿದ್ದು ಆಹಾರ ಧಾನ್ಯ ಸಂಗ್ರಹಣೆಯ ಪದ್ಧತಿಯನ್ನು ಕೈಬಿಡುವಂತೆ ಒತ್ತಾಯಿಸುತ್ತಿವೆ.
ಬದಲಾಗಿ ಈ ರಾಷ್ಟ್ರಗಳು ಶ್ರೀಮಂತ ರಾಷ್ಟ್ರಗಳಿಂದ ಆಹಾರಧಾನ್ಯಗಳನ್ನು ಆಮದು ಮಾಡಿಕೊಂಡು,ಇಲ್ಲಿನ ಆಹಾರ ಧಾನ್ಯ ಬೆಳೆಯುವ ಭೂಮಿಯನ್ನು ಗುತ್ತಿಗೆ ಕೃಷಿ ಪದ್ಧತಿಗೆ ಒಳಪಡಿಸಿ ರಫ್ತು ಬೆಳೆಗಳನ್ನು ಬೆಳೆಯುವಂತೆ ಒತ್ತಡ ಹೇರಲಾಗುತ್ತಿದೆ. ಈ ರೀತಿಯ ಒತ್ತಡಕ್ಕೆ ಕಾರಣವೇನೆಂದರೆ ಈ ಔದ್ಯಮಿಕ ರಾಷ್ಟ್ರಗಳಲ್ಲಿ ಭಾರತದಲ್ಲಿ ಬೆಳೆಯುವಂತಹ ಆಹಾರ ಧಾನ್ಯಗಳನ್ನು ಬೆಳೆಯಲಾಗುವುದಿಲ್ಲ. ಅಂದರೆ ವಸಾಹತು ಕಾಲಘಟ್ಟದ ಆರ್ಥಿಕ ಸನ್ನಿವೇಶವನ್ನು ಪುನರ್ ಸೃಷ್ಟಿಸುವತ್ತ ಔದ್ಯಮಿಕ ರಾಷ್ಟ್ರಗಳು ಮುನ್ನಡೆದಿವೆ.
1990ರ ದಶಕದಲ್ಲಿ ಫಿಲಿಪೈನ್ಸ್ ಮತ್ತು ಹತ್ತು ವರ್ಷಗಳ ನಂತರ ಆಫ್ರಿಕಾ ಖಂಡದ ಬೋಸ್ಟ್ವಾನಾ ದೇಶಗಳು ಈ ರೀತಿಯ ಒತ್ತಡಕ್ಕೆ ಬಲಿಯಾಗಿದ್ದವು. ಈ ಸಂದರ್ಭದಲ್ಲೇ ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳಲ್ಲಿ ಧಾನ್ಯಗಳ ಬೆಳೆಯನ್ನು ಎಥನಾಲ್ ಉತ್ಪಾದನೆಗೆ ಬಳಸಲು ಆರಂಭಿಸಿದ್ದರ ಪರಿಣಾಮವಾಗಿ 2007ರ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಬೆಲೆಗಳು ಗಗನಕ್ಕೇರಿದವು. ಆಹಾರ ಧಾನ್ಯಗಳಿಗಾಗಿ ಆಮದು ಪದಾರ್ಥಗಳನ್ನೇ ಅವಲಂಬಿಸಿದ್ದ 37 ದೇಶಗಳಲ್ಲಿ ಹಾಹಾಕಾರ ಉಂಟಾಗಿದ್ದು, ಆಹಾರಕ್ಕಾಗಿ ದಂಗೆಗಳು ಉಂಟಾಗಿದ್ದವು. ನಗರ ಪ್ರದೇಶದ ಜನರು ಹೆಚ್ಚಿನ ಬಡತನಕ್ಕೆ ನೂಕಲ್ಪಟ್ಟರು.
ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಆಹಾರ ಭದ್ರತೆ ಅತ್ಯಂತ ಮಹತ್ವದ ಸಂಗತಿಯಾಗಿದ್ದು ಇದನ್ನು ಜಾಗತಿಕ ಮಾರುಕಟ್ಟೆಯ ನಿಯಂತ್ರಣಕ್ಕೆ ಒಪ್ಪಿಸುವುದು ಅಪಾಯಕಾರಿಯಾಗುತ್ತದೆ. ಆದಾಗ್ಯೂ ಆಹಾರ ಭದ್ರತೆಯನ್ನು ಸಾಧಿಸಲು ಈ ದೇಶಗಳ ಸಾರ್ವಜನಿಕ ಆಹಾರ ಸಂಗ್ರಹಗಳ ಮೇಲೆ ನಿರಂತರ ದಾಳಿ ನಡೆಯುತ್ತಲೇ ಇದೆ. ಒಂದು ದಶಕದ ಹಿಂದೆಯಷ್ಟೇ ಭಾರತ ಈ ನಿಟ್ಟಿನಲ್ಲಿ ಜಾಗೃತವಾಗಿ ತನ್ನ ಆಹಾರ ಸಂಗ್ರಹವನ್ನು ಸಂರಕ್ಷಿಸಲು ಯಶಸ್ವಿಯಾಗಿತ್ತು.
2008ರ ಬೆಲೆ ಏರಿಕೆಗೂ ಮುನ್ನ ಆರು ವರ್ಷಗಳ ಕಾಲ ತಟಸ್ಥವಾಗಿದ್ದ ಬೆಂಬಲ ಬೆಲೆಗಳನ್ನು ಹೆಚ್ಚಿಸಲಾಗಿತ್ತು. ಆರ್ಥಿಕ ಪುನಶ್ಚೇತನದ ಪರಿಣಾಮ ಪಂಜಾಬ್ ನಲ್ಲಿ ಜಡಗಟ್ಟಿದ್ದ ಆಹಾರ ಧಾನ್ಯ ಉತ್ಪಾದನೆ ಹೆಚ್ಚಾಗಿತ್ತು. ಆದರೆ ಬಹುಸಂಖ್ಯೆಯ ಬಡಜನತೆಯನ್ನು “ ಬಡತನ ರೇಖೆಯ ಕೆಳಗಿರುವ ” ಪಡಿತರ ವ್ಯವಸ್ಥೆಯಿಂದ ಹೊರಗುಳಿಯುವಂತೆ ಮಾಡಿದ ಪರಿಣಾಮ ಆಹಾರ ಧಾನ್ಯಗಳ ಬಳಕೆ ಹೆಚ್ಚಾಗಲಿಲ್ಲ. 2016ರ ನೋಟು ರದ್ದತಿಯಿಂದ ಉಂಟಾದ ನಿರುದ್ಯೋಗ ಮತ್ತು 2020ರ ಕೋವಿದ್ ಪರಿಣಾಮದಿಂದ ಸೃಷ್ಟಿಯಾದ ಉದ್ಯೋಗ ಕೊರತೆ ಆಹಾರ ಧಾನ್ಯಗಳ ಒಟ್ಟಾರೆ ಬೇಡಿಕೆಯ ಪ್ರಮಾಣ ಚಾರಿತ್ರಿಕ ಕುಸಿತ ಕಾಣುವಂತೆ ಮಾಡಿವೆ.
ಭಾರತದ ರೈತಾಪಿ ಯಾವುದೇ ತರ್ಕಬದ್ಧ ಕಾರಣಗಳೇ ಇಲ್ಲದೆ ಅಪ್ರಾಮಾಣಿಕ ವ್ಯಾಪಾರದ ತಂತ್ರಗಾರಿಕೆಗಳಿಗೆ ಬಲಿಯಾಗಬೇಕಾಯಿತು. ಜಾಗತಿಕ ಬೆಲೆಗಳ ಏರುಪೇರುಗಳ ಪರಿಣಾಮ ಭಾರತದ ರೈತರು ತೀವ್ರ ಸಾಲದ ಹೊರೆಗೆ ಸಿಲುಕಿ ಸಂಕಷ್ಟಕ್ಕೀಡಾಗಬೇಕಾಯಿತು. ಪಂಜಾಬ್ ನ ಒಂದು ಗ್ರಾಮದಲ್ಲಿ ಆತ್ಮಹತ್ಯೆಯಿಂದ ತಮ್ಮ ಗಂಡಂದಿರನ್ನು ಕಳೆದುಕೊಂಡ 59 ವಿಧವೆಯರಿದ್ದಾರೆ.
ಅಭಿವೃದ್ಧಿ ಹೊಂದಿದ ದೇಶಗಳೊಡನೆ ಭಾರತ ಪೈಪೋಟಿ ನಡೆಸುವುದು ತರವಲ್ಲ. ಏಕೆಂದರೆ 1990ರ ದಶಕದಲ್ಲಿ ಈ ಶ್ರೀಮಂತ ರಾಷ್ಟ್ರಗಳು ತಮ್ಮ ಬೆಂಬಲ ಬೆಲೆ ಪದ್ಧತಿಯನ್ನು ಪರಿಷ್ಕರಿಸುವ ಮೂಲಕ ಅಲ್ಲಿನ ರೈತರಿಗೆ ಸಹಾಯಧನವನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡಲು ಆರಂಭಿಸಿದ್ದವು.
ಅಂತಾರಾಷ್ಟ್ರೀಯ ಕೃಷಿ ಒಡಂಬಡಿಕೆಯ ಸಹಾಯಧನವನ್ನು ಕಡಿಮೆ ಮಾಡುವ ಒಪ್ಪಂದದ ಅನುಸಾರ ಈ ರೀತಿ ನೇರ ನಗದು ನೀಡುವುದು ನಿಯಮಗಳ ಉಲ್ಲಂಘನೆಯಾಗಿದ್ದರೂ, ಇದು ಒಡಂಬಡಿಕೆಯಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳದಂತೆ ಈ ದೇಶಗಳು ಎಚ್ಚರವಹಿಸಿದ್ದವು. ಇದರಿಂದ ಉಂಟಾಗಬಹುದಾದ ಪರಿಣಾಮವನ್ನು ಗಮನಿಸದೆಯೇ ಭಾರತ ಮತ್ತಿತರ ರಾಷ್ಟ್ರಗಳು ಈ ಒಡಂಬಡಿಕೆಗೆ ಸಹಿ ಹಾಕಿದ್ದವು.
ಅಮೆರಿಕದ 20 ಲಕ್ಷ ರೈತರಿಗೆ ನೀಡುವ ನೇರ ನಗದು ಸಹಾಯಧನದ ಪ್ರಮಾಣ ಆ ದೇಶದ ಒಟ್ಟು ಕೃಷಿ ಉತ್ಪನ್ನದ ಮೌಲ್ಯದಲ್ಲಿ ಅರ್ಧದಷ್ಟಾಗುತ್ತದೆ. ಇದಕ್ಕೆ ಅಮೆರಿಕದ ಬಜೆಟ್ ನ ಶೇ 1ರಷ್ಟು ನಿದಿ ಬಳಕೆಯಾಗುತ್ತದೆ. ಭಾರತದಲ್ಲಿ ಇದೇ ರೀತಿ ಒಟ್ಟು ಕೃಷಿ ಉತ್ಪಾದನಾ ಮೌಲ್ಯದ ಶೇ 25ರಷ್ಟು ಪ್ರಮಾಣವನ್ನು ಒಂದು ಕೋಟಿ 20 ಲಕ್ಷ ರೈತರಿಗೆ ಸಹಾಯಧನದ ರೂಪದಲ್ಲಿ ನೀಡಿದರೂ ಕೇಂದ್ರ ಬಜೆಟ್ ನಲ್ಲಿ ಶೇ 50ರಷ್ಟು ನಿಧಿಯ ಬಳಕೆಯಾಗುತ್ತದೆ. ಇದು ಆರ್ಥಿಕವಾಗಿ ಅಸಾಧ್ಯವಾಗಿದ್ದು ಆಡಳಿತ ವ್ಯವಸ್ಥೆಗೆ ಮಾರಕವಾಗಿ ಪರಿಣಮಿಸುತ್ತದೆ.
ಸಮರ್ಪಕ ಬೆಲೆಯ ನಿಷ್ಕರ್ಷೆ
ತಮಗೆ ಅಲ್ಪ ಪ್ರಮಾಣದ ನಗದು ಪಾವತಿ ಮಾಡುವುದನ್ನು ಭಾರತದ ರೈತರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ದೇಶದ ಸಮಸ್ತ ಜನತೆಗಾಗಿ ತಾವು ಬೆಳೆಯುವ ಆಹಾರ ಧಾನ್ಯಗಳಿಗೆ ಸಮರ್ಪಕವಾದ, ತರ್ಕಬದ್ಧವಾದ ಬೆಲೆ ನೀಡುವಂತೆ ರೈತರು ಆಗ್ರಹಿಸುತ್ತಿದ್ದಾರೆ. ಹಾಗಾದಲ್ಲಿ ಮಾತ್ರ ರೈತರು ತಮ್ಮ ಬೇಸಾಯದ ವೆಚ್ಚವನ್ನು ಸರಿದೂಗಿಸಿ ಸಾಧಾರಣ ಬದುಕು ನಡೆಸಲು ಸಾಧ್ಯವಾಗುತ್ತದೆ.
ಭಾರತದ ಸಂದರ್ಭದಲ್ಲಿ ಬೆಂಬಲ ಬೆಲೆ ಪದ್ಧತಿಯೊಂದೇ ನ್ಯಾಯಯುತವಾಗಿ ಕಾಣುತ್ತದೆ. ಪಂಜಾಬ್ ನಲ್ಲಿ ಅಂತರ್ಜಲ ಕುಸಿಯುತ್ತಿರುವುದು ಆತಂಕಕಾರಿ ವಿಷಯವೇ ಆದರೂ ಇಲ್ಲಿ ನೂತನ ಕೃಷಿ ತಂತ್ರಜ್ಞಾನಗಳನ್ನು ಅಳವಡಿಸುವುದು ಮುಖ್ಯವಾಗುತ್ತದೆ. ಕಡಿಮೆ ನೀರು ಬಳಕೆಯಾಗುವಂತಹ ಮಾದರಿಗಳನ್ನು ಬಳಸಬೇಕಾಗುತ್ತದೆ. ( ಕೃಷಿ ವಿಜ್ಞಾನಿಗಳು ಕಂಡುಹಿಡಿದಿರುವ Rice Intensification ಪದ್ಧತಿಯಲ್ಲಿ ಭತ್ತ ಬೆಳೆಯಲು ಹೆಚ್ಚಿನ ಸಾವಯವ ಗೊಬ್ಬರವನ್ನು ಬಳಸುವುದು ಮತ್ತು ಹೆಚ್ಚಿನ ಅಂತರದಲ್ಲಿ ಭತ್ತದ ನಾಟಿ ಮಾಡುವುದು, ಚೌಕಾಕಾರದಲ್ಲಿ ನಾಟಿ ಮಾಡುವುದರ ಮೂಲಕ ನಡುವೆ ಹೆಚ್ಚಿನ ಜಲಸಾಂದ್ರತೆಯನ್ನು ತಡೆಗಟ್ಟಿ, ತೇವಾಂಶವನ್ನು ಉಳಿಸಿಕೊಳ್ಳುವುದು, ಅಂತರ್ಜಲ ಸಂರಕ್ಷಣೆಯ ಒಂದು ವಿಧಾನವಾಗಿದೆ-ಅನುವಾದಕ)
ಅಂತಾರಾಷ್ಟ್ರೀಯ ಕೃಷಿ ಒಡಂಬಡಿಕೆಗಳಲ್ಲಿ ಅಭಿವೃದ್ಧಿ ಹೊಂದಿದ ಶ್ರೀಮಂತ ರಾಷ್ಟ್ರಗಳು ಅಸಂಬದ್ಧ ರೀತಿಯಲ್ಲಿ, ನಿಷ್ಪ್ರಮಾಣವಾದ ನಿಯಮಗಳನ್ನು ರೂಪಿಸಿದ್ದು, ಈ ನಿಯಮಗಳ ಅಡಿಯಲ್ಲೇ ಆಹಾರ ಧಾನ್ಯಗಳ ಬೆಂಬಲ ಬೆಲೆ ನಿರ್ಧರಿಸುವುದನ್ನೂ ಅಳವಡಿಸಲಾಗಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿರುವ ಒಂದು ನಿಯಮವಾಗಿದೆ.
2018ರಲ್ಲಿ ವಿಶ್ವ ವಾಣಿಜ್ಯ ಸಂಸ್ಥೆಗೆ ಭಾರತದ ವಿರುದ್ಧ ದೂರು ಸಲ್ಲಿಸಿದ್ದ ಅಮೆರಿಕ ಸರ್ಕಾರ, ಭಾರತದಲ್ಲಿ 1986-88ರ ಮೂಲ ಬೆಲೆಯನ್ನೇ ಆಧಾರವಾಗಿಟ್ಟುಕೊಂಡು, ಅಂದಿನ ಡಾಲರ್ ಮೌಲ್ 12.5 ರೂಗಳಿಗೆ ಅನುಗುಣವಾಗಿ ಭಾರತ 2013-14ರಲ್ಲಿ ಭತ್ತ ಮತ್ತು ಗೋಧಿಗೆ ಒಂದು ಕ್ವಿಂಟಾಲಿಗೆ ಕ್ರಮವಾಗಿ 235 ರೂ ಮತ್ತು 354 ರೂ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಕೋರಿತ್ತು. ಆದರೆ ಭಾರತದಲ್ಲಿ ಈ ವೇಳೆಗೆ ಬೆಂಬಲ ಬೆಲೆ ಕ್ರಮವಾಗಿ 1348 ರೂ ಮತ್ತು 1386 ರೂಗಳಷ್ಟಿತ್ತು.
ಕ್ವಿಂಟಲ್ಗೆ ಒಂದು ಸಾವಿರ ರೂ ಹೆಚ್ಚಾಗಿತ್ತು. ಇದನ್ನು 2013-14ರ ಭತ್ತ ಮತ್ತು ಗೋಧಿ ಉತ್ಪನ್ನದ ಒಟ್ಟು ಮೌಲ್ಯದೊಡನೆ ಗುಣಾಕಾರ ಮಾಡಿದರೆ ಇದು ಒಟ್ಟು ಉತ್ಪಾದನೆಯ ಶೇ 77 ಮತ್ತು ಶೇ 67ರಷ್ಟಾಗುತ್ತದೆ. ಈ ಲೆಕ್ಕಾಚಾರವನ್ನು ವಿಶ್ವ ವಾಣಿಜ್ಯ ಸಂಸ್ಥೆಯ ಮುಂದಿರಿಸಿದ್ದ ಅಮೆರಿಕ ಸರ್ಕಾರ , ಭಾರತದ ಈ ನೀತಿ ಅಂತಾರಾಷ್ಟ್ರೀಯ ಒಪ್ಪಂದದಲ್ಲಿ ನಿಗದಿಪಡಿಸಿರುವ ಗರಿಷ್ಟ ಶೇ 10ರಷ್ಟು ಬೆಂಬಲ ನೀಡುವ ನಿಯಮದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿತ್ತು.
ಎರಡು ತಿಂಗಳ ಹಿಂದೆ ಅಮೆರಿಕ ಭಾರತಕ್ಕೆ ಮತ್ತಷ್ಟು ಹೊಸ ಸವಾಲುಗಳನ್ನು ಹಾಕಿದೆ. ದುರ್ಬಲ ಅಭಿವೃದ್ಧಿಶೀಲ ದೇಶಗಳನ್ನು ನಿಯಂತ್ರಿಸುವ ಉದ್ದೇಶದಿಂದಲೇ ಕೃಷಿ ಒಡಂಬಡಿಕೆಯಲ್ಲಿ ಅಪ್ರಮಾಣಿಕವಾದ, ಅಸಂಬದ್ಧ ನಿಯಮಗಳನ್ನು ಅಳವಡಿಸಲಾಗಿದೆ.
ಭಾರತದ ರೈತರು ವಿಶ್ವದಲ್ಲೇ ಅತಿ ಕಡಿಮೆ ವೆಚ್ಚದಲ್ಲಿ ಆಹಾರ ಉತ್ಪನ್ನ ಮಾಡುತ್ತಿದ್ದು 2013-14ರಲ್ಲಿ 60.5ರಷ್ಟಿದ್ದ ಡಾಲರ್ ಮೌಲ್ಯಕ್ಕೆ ತುಲನೆ ಮಾಡಿದರೆ ಭಾರತ ನೀಡುತ್ತಿರುವ ಬೆಂಬಲ ಬೆಲೆ ಜಾಗತಿಕ ಬೆಲೆಗಳಿಗಿಂತಲೂ ಸಾಕಷ್ಟು ಕಡಿಮೆ ಪ್ರಮಾಣದಲ್ಲಿದೆ. ಅಂದರೆ ವಾಸ್ತವವಾಗಿ ಬೆಂಬಲ ಬೆಲೆ ನಕಾರಾತ್ಮಕವಾಗಿಯೇ ಕಂಡುಬರುತ್ತದೆ.
ಪ್ರಸ್ತುತ ಸಂದರ್ಭದಲ್ಲಿ ಜಾಗತಿಕ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ನೋಡಿದಾಗ ಭತ್ತ ಮತ್ತು ಗೋಧಿಯ ಬೆಲೆಗಳು ಚಾರಿತ್ರಿಕ ಕುಸಿತ ಕಂಡಿವೆ. ಇದೇ ವೇಳೆ ಅಭಿವೃದ್ಧಿ ಹೊಂದಿದ ಶ್ರೀಮಂತ ದೇಶಗಳಲ್ಲಿ ಕೃಷಿ ಸಹಾಯಧನ ತೀವ್ರ ಹೆಚ್ಚಳ ಕಂಡಿದೆ. ಈ ಹಿನ್ನೆಲೆಯಲ್ಲೇ ಈ ದೇಶಗಳು ತಮ್ಮ ಕೃಷಿ ಉತ್ಪನ್ನಗಳನ್ನು ಭಾರತದಂತಹ ದೇಶಗಳ ಮಾರುಕಟ್ಟೆಗಳಲ್ಲಿ ತಂದು ಸುರಿಯಲು ಹತಾಶರಾಗಿವೆ.
ಈ ದೃಷ್ಟಿಯಿಂದ ನೋಡಿದಾಗ ಭಾರತದ ರೈತ ಸಂಘಟನೆಗಳು ತಾವು ವಿರೋಧಿಸುತ್ತಿರುವ ಮೂರು ಕೃಷಿ ಮಸೂದೆಗಳಿಂದ ಸ್ಥಳೀಯ ಉದ್ಯಮಿಗಳಿಗೆ ಹೆಚ್ಚು ಲಾಭವಾಗುತ್ತದೆ ಎನ್ನುವುದನ್ನು ಸರಿಯಾಗಿ ಗುರುತಿಸಿದ್ದು, ವಿದೇಶಿ ಕೃಷಿ ಉದ್ದಿಮೆಗಳು ಭಾರತದ ಕೃಷಿ ವ್ಯವಸ್ಥೆಗೆ ಮಾರಕವಾಗುವುದನ್ನೂ ಸಮರ್ಪಕವಾಗಿ ಗುರುತಿಸಿವೆ.
ಪಂಜಾಬ್ ಮತ್ತು ಹರಿಯಾಣದಲ್ಲಿ ಈಗಾಗಲೇ ರೈತರು ವಿದೇಶಿ ಕೃಷಿ ಉದ್ದಿಮೆಗಳೊಡನೆ ಗುತ್ತಿಗೆ ಕೃಷಿಯನ್ನು ನಡೆಸಿ ಅದರ ದುಷ್ಪರಿಣಾಮಗಳನ್ನು ಎದುರಿಸಿದ್ದಾರೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಬೆಲೆ ಮತ್ತು ಗುಣಮಟ್ಟದ ಬಗ್ಗೆ ಒಪ್ಪಿತ ನಿಯಮಗಳನ್ನೂ ಉಲ್ಲಂಘಿಸುವ ಮೂಲಕ ರೈತರಿಗೆ ವಂಚಿಸುವ ಈ ಅಗೋಚರ ಖಾಸಗಿ ಕಾರ್ಪೋರೇಟ್ ಉದ್ದಿಮೆಗಳೊಡನೆ ತಾವು ಯಾವುದೇ ರೀತಿಯಲ್ಲೂ ವ್ಯವಹರಿಸಲು ಸಿದ್ಧರಾಗಿಲ್ಲ ಎಂದು ರೈತ ಸಮುದಾಯ ಸ್ಪಷ್ಟವಾಗಿ ಹೇಳಿದೆ.
ಎಷ್ಟೇ ಅದಕ್ಷತೆ ಇದ್ದರೂ, ಹಣ ಪಾವತಿಯಲ್ಲಿ ವಿಳಂಬ ಉಂಟಾದರೂ, ತಮ್ಮ ಉತ್ಪನ್ನಗಳನ್ನು ಸರ್ಕಾರಿ ಏಜೆಂಟರಿಗೆ ನಿಗದಿತ ಬೆಂಬಲ ಬೆಲೆಗೆ ಮಾರಾಟ ಮಾಡಲು ರೈತರು ಸಿದ್ಧರಾಗಿದ್ದಾರೆ. ನೂತನ ಕೃಷಿ ಕಾಯ್ದೆಗಳ ಅನುಸಾರ ಮಾರುಕಟ್ಟೆ ನಿಯಂತ್ರಣ ನಿಯಮಗಳನ್ನು ಸಡಿಲಗೊಳಿಸಿದರೆ ಕೃಷಿ ಕ್ಷೇತ್ರದಲ್ಲಿ ಸ್ಥಳೀಯ ಉದ್ದಿಮೆಗಳೊಡನೆ ವಿದೇಶಿ ಕೃಷಿ ಉದ್ದಿಮೆಗಳೂ ಪ್ರವೇಶಿಸುತ್ತವೆ, ಇದರಿಂದ ಕನಿಷ್ಟ ಬೆಂಬಲ ಬೆಲೆ ಪದ್ಧತಿಗೂ ಪೆಟ್ಟಾಗುವುದಲ್ಲದೆ, ಸಾರ್ವಜನಿಕ ಸಂಗ್ರಹಣೆಯ ಪದ್ಧತಿಯೂ ಇಲ್ಲವಾಗುತ್ತದೆ ಎನ್ನುವ ರೈತರ ಆತಂಕ ನ್ಯಾಯಯುತವಾಗಿದೆ.
ಸಹಾಯಧನ ಪಡೆಯುವ ವಿದೇಶಿ ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳುವುದರಿಂದ ಭಾರತದಲ್ಲಿನ ಬಡ ಗ್ರಾಹಕರಿಗೆ ಅನುಕೂಲವಾಗುತ್ತದೆ ಎಂದು ಹಲವು ಕೃಷಿ ವಿಶ್ಲೇಷಕರು ಪ್ರತಿಪಾದಿಸುತ್ತಾರೆ. ಆದರೆ ಈ ಅಭಿವೃದ್ಧಿ ಹೊಂದಿದ ಶ್ರೀಮಂತ ರಾಷ್ಟ್ರಗಳಲ್ಲಿ ಹಸಿರು ಇಂಧನ ಬಳಕೆಯ ಆಗ್ರಹ ಹೆಚ್ಚಾಗುತ್ತಿದ್ದು ಹೆಚ್ಚಿನ ಪ್ರಮಾಣದ ಆಹಾರ ಧಾನ್ಯಗಳನ್ನು ಎಥನಾಲ್ ಉತ್ಪಾದನೆಗೆ ಬಳಕೆಯಾಗುತ್ತದೆ ಎನ್ನುವ ವಾಸ್ತವಾಂಶವನ್ನು ಈ ತಜ್ಞರು ಮರೆಮಾಚುತ್ತಿದ್ದಾರೆ.
ಹಾಗಾಗಿ ಇಂದು ಕಡಿಮೆ ಬೆಲೆಯ ಆಹಾರ ಧಾನ್ಯಗಳ ಆಮದು ಪ್ರಕ್ರಿಯೆಗೆ ಅವಕಾಶ ನೀಡಿದರೆ ಮುಂಬರುವ ದಿನಗಳಲ್ಲಿ ಇದರಿಂದ ಭಾರತದ ರೈತರು ವಿನಾಶದ ಅಂಚಿಗೆ ತಲುಪುವುದೇ ಅಲ್ಲದೆ, ಬೆಲೆ ಏರಿಕೆ ತೀವ್ರವಾಗಿ ಈ ಹಿಂದೆ ಕೆಲವು ಅಭಿವೃದ್ಧಿಶೀಲ ದೇಶಗಳು ಎದುರಿಸಿದ್ದ ಸಂಕಷ್ಟಗಳನ್ನೇ ಭಾರತವೂ ಎದುರಿಸಬೇಕಾಗುತ್ತದೆ. ತಮ್ಮ ಬೆವರು ಹರಿಸಿ ವ್ಯವಸಾಯದಲ್ಲಿ ತೊಡಗಿರುವ ಭಾರತದ ರೈತಾಪಿಯ ಬಗ್ಗೆ ಕಾಳಜಿ ಇರುವ ಯಾರೇ ಆದರೂ ಈ ಕೃಷಿ ಮಸೂದೆಗಳನ್ನು ವಿರೋಧಿಸುವುದೇ ಅಲ್ಲದೆ, ಸ್ಥಳೀಯ ಮತ್ತು ವಿದೇಶಿ ಉದ್ಯಮಿಗಳ ಕುತಂತ್ರಗಳ ವಿರುದ್ಧ ದನಿ ಎತ್ತಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
- ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
- ಇಂಡಿಯಾ ಗೇಟ್ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
- NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
- “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.
CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
http://Visit : www.suddidina.com
ಇಂಡಿಯಾ ಗೇಟ್ನಿಂದ ಮೆರವಣಿಗೆ
ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.
‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’
ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.
“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.
“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ”
|
ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ
ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.
ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.
ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

ದಿನದ ಸುದ್ದಿ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್
-
658 OMR ಕಾರ್ಬನ್ ಶೀಟ್ಗಳು FSLಗೆ
-
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ
-
₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ
-
ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ
ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
http://Visit : www.suddidina.com
329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?
ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.
ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
IAS ಅಧಿಕಾರಿಯತ್ತ ತನಿಖೆಯ ಚಿತ್ತ
ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.
ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.
ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ
ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.
ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.
KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.
ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

ದಿನದ ಸುದ್ದಿ
₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ
- 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ
ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.
http://Visit : www.suddidina.com
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:
ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.
ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.
https://x.com/BDAOfficialGok/status/2092121239175512436?s=20
ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:
ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.
ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ
ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.
ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

-
ಅಂತರಂಗ7 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ7 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ4 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ12 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ13 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ13 hours agoಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !
-
ದಿನದ ಸುದ್ದಿ9 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ







