ಬಹಿರಂಗ
ರೈತ ಪ್ರತಿಭಟನೆಯ ಜಾಗತಿಕ ಆಯಾಮ
- ಮೂಲ : ಉತ್ಸಾ ಪಟ್ನಾಯಕ್( ಹಿಂದೂ ದಿನಪತ್ರಿಕೆ 30-12-20) ಅನುವಾದ : ನಾ ದಿವಾಕರ
ರೈತರೊಂದಿಗೆ ಮಾತುಕತೆಯನ್ನೂ ನಡೆಸದೆ, ಕೇಂದ್ರ ಸರ್ಕಾರ ಸಂಸತ್ತಿನಲ್ಲಿಯೂ ಚರ್ಚೆ ನಡೆಸದೆ ಅವಸರದಲ್ಲಿ ಜಾರಿಗೊಳಿಸಿರುವ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲು ಆಗ್ರಹಿಸಿ ದೇಶದ ರೈತರು ನಡೆಸುತ್ತಿರುವ ಆಂದೋಲನ ಎರಡನೆ ತಿಂಗಳಿಗೆ ಕಾಲಿಟ್ಟಿದೆ. ರೈತರ ಈ ಆಂದೋಲನ ಚಾರಿತ್ರಿಕ ಮಹತ್ವ ಪಡೆದಿದೆ.
ರೈತಾಪಿಯ ಈ ಮುಷ್ಕರ ಕೇವಲ ಕನಿಷ್ಠ ಬೆಂಬಲ ಬೆಲೆಗೆ ಸೀಮಿತವಾದದ್ದಲ್ಲ. ಸಾರ್ವಜನಿಕ ಆಹಾರ ಧಾನ್ಯಗಳ ಸಾರ್ವಜನಿಕ ಸಂಗ್ರಹಣೆ ಮತ್ತು ವಿತರಣೆಯ ವ್ಯವಸ್ಥೆಯ ಉಳಿವಿಗೂ ಈ ಹೋರಾಟ ನಿರ್ಣಾಯಕವಾಗಿದೆ. ಭಾರತದ ಆಹಾರ ಕಣಜ ಎಂದೇ ಹೇಳಬಹುದಾದ ಉತ್ತರ ಭಾರತದ ಆಹಾರ ಧಾನ್ಯ ಉತ್ಪಾದನೆಯ ಆರ್ಥಿಕ ಸಕ್ಷಮತೆಯನ್ನು ಕಾಪಾಡದೆ ಹೋದಲ್ಲಿ ಇಡೀ ದೇಶದ ಸಾರ್ವಜನಿಕ ಆಹಾರ ಸಂಗ್ರಹಣೆ ವಿತರಣೆಯ ಪ್ರಕ್ರಿಯೆ ದುರ್ಬಲವಾಗುತ್ತದೆ. ಪ್ರಸ್ತುತ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಏನೇ ಕೊರತೆ, ಲೋಪದೋಷಗಳಿದ್ದರೂ ಇದು ದೇಶದ ಬಹುಸಂಖ್ಯೆಯ ಜನರಿಗೆ ಜೀವನಾಧಾರ ಒದಗಿಸುತ್ತಿರುವುದನ್ನು ಇಲ್ಲಿ ಗಮನಿಸಬೇಕಿದೆ.
ವಸಾಹತುಕಾಲ ಸ್ಥಿತಿಯ ಮರುನಿರ್ಮಾಣ
ಉತ್ತರದ ಔದ್ಯಮಿಕ ದೇಶಗಳಾದ ಅಮೆರಿಕ, ಕೆನಡಾ ಮತ್ತು ಐರೋಪ್ಯ ಸಂಘಟನೆಯ ರಾಷ್ಟ್ರಗಳಲ್ಲಿ ಅಲ್ಲಿನ ಗ್ರಾಹಕರಿಂದಲೇ ಹೆಚ್ಚಿನ ಬೇಡಿಕೆ ಇರುವ ಉಷ್ಣವಲಯದ ಮತ್ತು ಉಪ ಉಷ್ಣವಲಯದ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುವುದಿಲ್ಲ. ಆದರೆ ಈ ದೇಶಗಳ ಹವಾಮಾನಕ್ಕೆ ಅನುಗುಣವಾಗಿ ಅಲ್ಲಿನ ಏಕ ಬೆಳೆಯ ಭೂಮಿಯಲ್ಲಿ ಬೆಳೆಯಲಾಗುವ ಆಹಾರ ಧಾನ್ಯಗಳು ಮತ್ತು ಹೈನು ಉತ್ಪನ್ನಗಳು ಹೇರಳವಾಗಿ ಸಂಗ್ರಹವಾಗಿರುತ್ತವೆ.
ಈ ಧಾನ್ಯಗಳಿಗೆ ಮತ್ತು ಉತ್ಪನ್ನಗಳಿಗೆ ರಫ್ತು ಮಾರುಕಟ್ಟೆಯನ್ನು ಕಂಡುಕೊಳ್ಳುವುದು ಈ ದೇಶಗಳಿಗೆ ಅನಿವಾರ್ಯವಾಗಿರುತ್ತದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಈ ಶ್ರೀಮಂತ ರಾಷ್ಟ್ರಗಳು ಭಾರತ ಮತ್ತಿತರ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಒತ್ತಡ ಹೇರುತ್ತಿದ್ದು ಆಹಾರ ಧಾನ್ಯ ಸಂಗ್ರಹಣೆಯ ಪದ್ಧತಿಯನ್ನು ಕೈಬಿಡುವಂತೆ ಒತ್ತಾಯಿಸುತ್ತಿವೆ.
ಬದಲಾಗಿ ಈ ರಾಷ್ಟ್ರಗಳು ಶ್ರೀಮಂತ ರಾಷ್ಟ್ರಗಳಿಂದ ಆಹಾರಧಾನ್ಯಗಳನ್ನು ಆಮದು ಮಾಡಿಕೊಂಡು,ಇಲ್ಲಿನ ಆಹಾರ ಧಾನ್ಯ ಬೆಳೆಯುವ ಭೂಮಿಯನ್ನು ಗುತ್ತಿಗೆ ಕೃಷಿ ಪದ್ಧತಿಗೆ ಒಳಪಡಿಸಿ ರಫ್ತು ಬೆಳೆಗಳನ್ನು ಬೆಳೆಯುವಂತೆ ಒತ್ತಡ ಹೇರಲಾಗುತ್ತಿದೆ. ಈ ರೀತಿಯ ಒತ್ತಡಕ್ಕೆ ಕಾರಣವೇನೆಂದರೆ ಈ ಔದ್ಯಮಿಕ ರಾಷ್ಟ್ರಗಳಲ್ಲಿ ಭಾರತದಲ್ಲಿ ಬೆಳೆಯುವಂತಹ ಆಹಾರ ಧಾನ್ಯಗಳನ್ನು ಬೆಳೆಯಲಾಗುವುದಿಲ್ಲ. ಅಂದರೆ ವಸಾಹತು ಕಾಲಘಟ್ಟದ ಆರ್ಥಿಕ ಸನ್ನಿವೇಶವನ್ನು ಪುನರ್ ಸೃಷ್ಟಿಸುವತ್ತ ಔದ್ಯಮಿಕ ರಾಷ್ಟ್ರಗಳು ಮುನ್ನಡೆದಿವೆ.
1990ರ ದಶಕದಲ್ಲಿ ಫಿಲಿಪೈನ್ಸ್ ಮತ್ತು ಹತ್ತು ವರ್ಷಗಳ ನಂತರ ಆಫ್ರಿಕಾ ಖಂಡದ ಬೋಸ್ಟ್ವಾನಾ ದೇಶಗಳು ಈ ರೀತಿಯ ಒತ್ತಡಕ್ಕೆ ಬಲಿಯಾಗಿದ್ದವು. ಈ ಸಂದರ್ಭದಲ್ಲೇ ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳಲ್ಲಿ ಧಾನ್ಯಗಳ ಬೆಳೆಯನ್ನು ಎಥನಾಲ್ ಉತ್ಪಾದನೆಗೆ ಬಳಸಲು ಆರಂಭಿಸಿದ್ದರ ಪರಿಣಾಮವಾಗಿ 2007ರ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಬೆಲೆಗಳು ಗಗನಕ್ಕೇರಿದವು. ಆಹಾರ ಧಾನ್ಯಗಳಿಗಾಗಿ ಆಮದು ಪದಾರ್ಥಗಳನ್ನೇ ಅವಲಂಬಿಸಿದ್ದ 37 ದೇಶಗಳಲ್ಲಿ ಹಾಹಾಕಾರ ಉಂಟಾಗಿದ್ದು, ಆಹಾರಕ್ಕಾಗಿ ದಂಗೆಗಳು ಉಂಟಾಗಿದ್ದವು. ನಗರ ಪ್ರದೇಶದ ಜನರು ಹೆಚ್ಚಿನ ಬಡತನಕ್ಕೆ ನೂಕಲ್ಪಟ್ಟರು.
ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಆಹಾರ ಭದ್ರತೆ ಅತ್ಯಂತ ಮಹತ್ವದ ಸಂಗತಿಯಾಗಿದ್ದು ಇದನ್ನು ಜಾಗತಿಕ ಮಾರುಕಟ್ಟೆಯ ನಿಯಂತ್ರಣಕ್ಕೆ ಒಪ್ಪಿಸುವುದು ಅಪಾಯಕಾರಿಯಾಗುತ್ತದೆ. ಆದಾಗ್ಯೂ ಆಹಾರ ಭದ್ರತೆಯನ್ನು ಸಾಧಿಸಲು ಈ ದೇಶಗಳ ಸಾರ್ವಜನಿಕ ಆಹಾರ ಸಂಗ್ರಹಗಳ ಮೇಲೆ ನಿರಂತರ ದಾಳಿ ನಡೆಯುತ್ತಲೇ ಇದೆ. ಒಂದು ದಶಕದ ಹಿಂದೆಯಷ್ಟೇ ಭಾರತ ಈ ನಿಟ್ಟಿನಲ್ಲಿ ಜಾಗೃತವಾಗಿ ತನ್ನ ಆಹಾರ ಸಂಗ್ರಹವನ್ನು ಸಂರಕ್ಷಿಸಲು ಯಶಸ್ವಿಯಾಗಿತ್ತು.
2008ರ ಬೆಲೆ ಏರಿಕೆಗೂ ಮುನ್ನ ಆರು ವರ್ಷಗಳ ಕಾಲ ತಟಸ್ಥವಾಗಿದ್ದ ಬೆಂಬಲ ಬೆಲೆಗಳನ್ನು ಹೆಚ್ಚಿಸಲಾಗಿತ್ತು. ಆರ್ಥಿಕ ಪುನಶ್ಚೇತನದ ಪರಿಣಾಮ ಪಂಜಾಬ್ ನಲ್ಲಿ ಜಡಗಟ್ಟಿದ್ದ ಆಹಾರ ಧಾನ್ಯ ಉತ್ಪಾದನೆ ಹೆಚ್ಚಾಗಿತ್ತು. ಆದರೆ ಬಹುಸಂಖ್ಯೆಯ ಬಡಜನತೆಯನ್ನು “ ಬಡತನ ರೇಖೆಯ ಕೆಳಗಿರುವ ” ಪಡಿತರ ವ್ಯವಸ್ಥೆಯಿಂದ ಹೊರಗುಳಿಯುವಂತೆ ಮಾಡಿದ ಪರಿಣಾಮ ಆಹಾರ ಧಾನ್ಯಗಳ ಬಳಕೆ ಹೆಚ್ಚಾಗಲಿಲ್ಲ. 2016ರ ನೋಟು ರದ್ದತಿಯಿಂದ ಉಂಟಾದ ನಿರುದ್ಯೋಗ ಮತ್ತು 2020ರ ಕೋವಿದ್ ಪರಿಣಾಮದಿಂದ ಸೃಷ್ಟಿಯಾದ ಉದ್ಯೋಗ ಕೊರತೆ ಆಹಾರ ಧಾನ್ಯಗಳ ಒಟ್ಟಾರೆ ಬೇಡಿಕೆಯ ಪ್ರಮಾಣ ಚಾರಿತ್ರಿಕ ಕುಸಿತ ಕಾಣುವಂತೆ ಮಾಡಿವೆ.
ಭಾರತದ ರೈತಾಪಿ ಯಾವುದೇ ತರ್ಕಬದ್ಧ ಕಾರಣಗಳೇ ಇಲ್ಲದೆ ಅಪ್ರಾಮಾಣಿಕ ವ್ಯಾಪಾರದ ತಂತ್ರಗಾರಿಕೆಗಳಿಗೆ ಬಲಿಯಾಗಬೇಕಾಯಿತು. ಜಾಗತಿಕ ಬೆಲೆಗಳ ಏರುಪೇರುಗಳ ಪರಿಣಾಮ ಭಾರತದ ರೈತರು ತೀವ್ರ ಸಾಲದ ಹೊರೆಗೆ ಸಿಲುಕಿ ಸಂಕಷ್ಟಕ್ಕೀಡಾಗಬೇಕಾಯಿತು. ಪಂಜಾಬ್ ನ ಒಂದು ಗ್ರಾಮದಲ್ಲಿ ಆತ್ಮಹತ್ಯೆಯಿಂದ ತಮ್ಮ ಗಂಡಂದಿರನ್ನು ಕಳೆದುಕೊಂಡ 59 ವಿಧವೆಯರಿದ್ದಾರೆ.
ಅಭಿವೃದ್ಧಿ ಹೊಂದಿದ ದೇಶಗಳೊಡನೆ ಭಾರತ ಪೈಪೋಟಿ ನಡೆಸುವುದು ತರವಲ್ಲ. ಏಕೆಂದರೆ 1990ರ ದಶಕದಲ್ಲಿ ಈ ಶ್ರೀಮಂತ ರಾಷ್ಟ್ರಗಳು ತಮ್ಮ ಬೆಂಬಲ ಬೆಲೆ ಪದ್ಧತಿಯನ್ನು ಪರಿಷ್ಕರಿಸುವ ಮೂಲಕ ಅಲ್ಲಿನ ರೈತರಿಗೆ ಸಹಾಯಧನವನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡಲು ಆರಂಭಿಸಿದ್ದವು.
ಅಂತಾರಾಷ್ಟ್ರೀಯ ಕೃಷಿ ಒಡಂಬಡಿಕೆಯ ಸಹಾಯಧನವನ್ನು ಕಡಿಮೆ ಮಾಡುವ ಒಪ್ಪಂದದ ಅನುಸಾರ ಈ ರೀತಿ ನೇರ ನಗದು ನೀಡುವುದು ನಿಯಮಗಳ ಉಲ್ಲಂಘನೆಯಾಗಿದ್ದರೂ, ಇದು ಒಡಂಬಡಿಕೆಯಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳದಂತೆ ಈ ದೇಶಗಳು ಎಚ್ಚರವಹಿಸಿದ್ದವು. ಇದರಿಂದ ಉಂಟಾಗಬಹುದಾದ ಪರಿಣಾಮವನ್ನು ಗಮನಿಸದೆಯೇ ಭಾರತ ಮತ್ತಿತರ ರಾಷ್ಟ್ರಗಳು ಈ ಒಡಂಬಡಿಕೆಗೆ ಸಹಿ ಹಾಕಿದ್ದವು.
ಅಮೆರಿಕದ 20 ಲಕ್ಷ ರೈತರಿಗೆ ನೀಡುವ ನೇರ ನಗದು ಸಹಾಯಧನದ ಪ್ರಮಾಣ ಆ ದೇಶದ ಒಟ್ಟು ಕೃಷಿ ಉತ್ಪನ್ನದ ಮೌಲ್ಯದಲ್ಲಿ ಅರ್ಧದಷ್ಟಾಗುತ್ತದೆ. ಇದಕ್ಕೆ ಅಮೆರಿಕದ ಬಜೆಟ್ ನ ಶೇ 1ರಷ್ಟು ನಿದಿ ಬಳಕೆಯಾಗುತ್ತದೆ. ಭಾರತದಲ್ಲಿ ಇದೇ ರೀತಿ ಒಟ್ಟು ಕೃಷಿ ಉತ್ಪಾದನಾ ಮೌಲ್ಯದ ಶೇ 25ರಷ್ಟು ಪ್ರಮಾಣವನ್ನು ಒಂದು ಕೋಟಿ 20 ಲಕ್ಷ ರೈತರಿಗೆ ಸಹಾಯಧನದ ರೂಪದಲ್ಲಿ ನೀಡಿದರೂ ಕೇಂದ್ರ ಬಜೆಟ್ ನಲ್ಲಿ ಶೇ 50ರಷ್ಟು ನಿಧಿಯ ಬಳಕೆಯಾಗುತ್ತದೆ. ಇದು ಆರ್ಥಿಕವಾಗಿ ಅಸಾಧ್ಯವಾಗಿದ್ದು ಆಡಳಿತ ವ್ಯವಸ್ಥೆಗೆ ಮಾರಕವಾಗಿ ಪರಿಣಮಿಸುತ್ತದೆ.
ಸಮರ್ಪಕ ಬೆಲೆಯ ನಿಷ್ಕರ್ಷೆ
ತಮಗೆ ಅಲ್ಪ ಪ್ರಮಾಣದ ನಗದು ಪಾವತಿ ಮಾಡುವುದನ್ನು ಭಾರತದ ರೈತರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ದೇಶದ ಸಮಸ್ತ ಜನತೆಗಾಗಿ ತಾವು ಬೆಳೆಯುವ ಆಹಾರ ಧಾನ್ಯಗಳಿಗೆ ಸಮರ್ಪಕವಾದ, ತರ್ಕಬದ್ಧವಾದ ಬೆಲೆ ನೀಡುವಂತೆ ರೈತರು ಆಗ್ರಹಿಸುತ್ತಿದ್ದಾರೆ. ಹಾಗಾದಲ್ಲಿ ಮಾತ್ರ ರೈತರು ತಮ್ಮ ಬೇಸಾಯದ ವೆಚ್ಚವನ್ನು ಸರಿದೂಗಿಸಿ ಸಾಧಾರಣ ಬದುಕು ನಡೆಸಲು ಸಾಧ್ಯವಾಗುತ್ತದೆ.
ಭಾರತದ ಸಂದರ್ಭದಲ್ಲಿ ಬೆಂಬಲ ಬೆಲೆ ಪದ್ಧತಿಯೊಂದೇ ನ್ಯಾಯಯುತವಾಗಿ ಕಾಣುತ್ತದೆ. ಪಂಜಾಬ್ ನಲ್ಲಿ ಅಂತರ್ಜಲ ಕುಸಿಯುತ್ತಿರುವುದು ಆತಂಕಕಾರಿ ವಿಷಯವೇ ಆದರೂ ಇಲ್ಲಿ ನೂತನ ಕೃಷಿ ತಂತ್ರಜ್ಞಾನಗಳನ್ನು ಅಳವಡಿಸುವುದು ಮುಖ್ಯವಾಗುತ್ತದೆ. ಕಡಿಮೆ ನೀರು ಬಳಕೆಯಾಗುವಂತಹ ಮಾದರಿಗಳನ್ನು ಬಳಸಬೇಕಾಗುತ್ತದೆ. ( ಕೃಷಿ ವಿಜ್ಞಾನಿಗಳು ಕಂಡುಹಿಡಿದಿರುವ Rice Intensification ಪದ್ಧತಿಯಲ್ಲಿ ಭತ್ತ ಬೆಳೆಯಲು ಹೆಚ್ಚಿನ ಸಾವಯವ ಗೊಬ್ಬರವನ್ನು ಬಳಸುವುದು ಮತ್ತು ಹೆಚ್ಚಿನ ಅಂತರದಲ್ಲಿ ಭತ್ತದ ನಾಟಿ ಮಾಡುವುದು, ಚೌಕಾಕಾರದಲ್ಲಿ ನಾಟಿ ಮಾಡುವುದರ ಮೂಲಕ ನಡುವೆ ಹೆಚ್ಚಿನ ಜಲಸಾಂದ್ರತೆಯನ್ನು ತಡೆಗಟ್ಟಿ, ತೇವಾಂಶವನ್ನು ಉಳಿಸಿಕೊಳ್ಳುವುದು, ಅಂತರ್ಜಲ ಸಂರಕ್ಷಣೆಯ ಒಂದು ವಿಧಾನವಾಗಿದೆ-ಅನುವಾದಕ)
ಅಂತಾರಾಷ್ಟ್ರೀಯ ಕೃಷಿ ಒಡಂಬಡಿಕೆಗಳಲ್ಲಿ ಅಭಿವೃದ್ಧಿ ಹೊಂದಿದ ಶ್ರೀಮಂತ ರಾಷ್ಟ್ರಗಳು ಅಸಂಬದ್ಧ ರೀತಿಯಲ್ಲಿ, ನಿಷ್ಪ್ರಮಾಣವಾದ ನಿಯಮಗಳನ್ನು ರೂಪಿಸಿದ್ದು, ಈ ನಿಯಮಗಳ ಅಡಿಯಲ್ಲೇ ಆಹಾರ ಧಾನ್ಯಗಳ ಬೆಂಬಲ ಬೆಲೆ ನಿರ್ಧರಿಸುವುದನ್ನೂ ಅಳವಡಿಸಲಾಗಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿರುವ ಒಂದು ನಿಯಮವಾಗಿದೆ.
2018ರಲ್ಲಿ ವಿಶ್ವ ವಾಣಿಜ್ಯ ಸಂಸ್ಥೆಗೆ ಭಾರತದ ವಿರುದ್ಧ ದೂರು ಸಲ್ಲಿಸಿದ್ದ ಅಮೆರಿಕ ಸರ್ಕಾರ, ಭಾರತದಲ್ಲಿ 1986-88ರ ಮೂಲ ಬೆಲೆಯನ್ನೇ ಆಧಾರವಾಗಿಟ್ಟುಕೊಂಡು, ಅಂದಿನ ಡಾಲರ್ ಮೌಲ್ 12.5 ರೂಗಳಿಗೆ ಅನುಗುಣವಾಗಿ ಭಾರತ 2013-14ರಲ್ಲಿ ಭತ್ತ ಮತ್ತು ಗೋಧಿಗೆ ಒಂದು ಕ್ವಿಂಟಾಲಿಗೆ ಕ್ರಮವಾಗಿ 235 ರೂ ಮತ್ತು 354 ರೂ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಕೋರಿತ್ತು. ಆದರೆ ಭಾರತದಲ್ಲಿ ಈ ವೇಳೆಗೆ ಬೆಂಬಲ ಬೆಲೆ ಕ್ರಮವಾಗಿ 1348 ರೂ ಮತ್ತು 1386 ರೂಗಳಷ್ಟಿತ್ತು.
ಕ್ವಿಂಟಲ್ಗೆ ಒಂದು ಸಾವಿರ ರೂ ಹೆಚ್ಚಾಗಿತ್ತು. ಇದನ್ನು 2013-14ರ ಭತ್ತ ಮತ್ತು ಗೋಧಿ ಉತ್ಪನ್ನದ ಒಟ್ಟು ಮೌಲ್ಯದೊಡನೆ ಗುಣಾಕಾರ ಮಾಡಿದರೆ ಇದು ಒಟ್ಟು ಉತ್ಪಾದನೆಯ ಶೇ 77 ಮತ್ತು ಶೇ 67ರಷ್ಟಾಗುತ್ತದೆ. ಈ ಲೆಕ್ಕಾಚಾರವನ್ನು ವಿಶ್ವ ವಾಣಿಜ್ಯ ಸಂಸ್ಥೆಯ ಮುಂದಿರಿಸಿದ್ದ ಅಮೆರಿಕ ಸರ್ಕಾರ , ಭಾರತದ ಈ ನೀತಿ ಅಂತಾರಾಷ್ಟ್ರೀಯ ಒಪ್ಪಂದದಲ್ಲಿ ನಿಗದಿಪಡಿಸಿರುವ ಗರಿಷ್ಟ ಶೇ 10ರಷ್ಟು ಬೆಂಬಲ ನೀಡುವ ನಿಯಮದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿತ್ತು.
ಎರಡು ತಿಂಗಳ ಹಿಂದೆ ಅಮೆರಿಕ ಭಾರತಕ್ಕೆ ಮತ್ತಷ್ಟು ಹೊಸ ಸವಾಲುಗಳನ್ನು ಹಾಕಿದೆ. ದುರ್ಬಲ ಅಭಿವೃದ್ಧಿಶೀಲ ದೇಶಗಳನ್ನು ನಿಯಂತ್ರಿಸುವ ಉದ್ದೇಶದಿಂದಲೇ ಕೃಷಿ ಒಡಂಬಡಿಕೆಯಲ್ಲಿ ಅಪ್ರಮಾಣಿಕವಾದ, ಅಸಂಬದ್ಧ ನಿಯಮಗಳನ್ನು ಅಳವಡಿಸಲಾಗಿದೆ.
ಭಾರತದ ರೈತರು ವಿಶ್ವದಲ್ಲೇ ಅತಿ ಕಡಿಮೆ ವೆಚ್ಚದಲ್ಲಿ ಆಹಾರ ಉತ್ಪನ್ನ ಮಾಡುತ್ತಿದ್ದು 2013-14ರಲ್ಲಿ 60.5ರಷ್ಟಿದ್ದ ಡಾಲರ್ ಮೌಲ್ಯಕ್ಕೆ ತುಲನೆ ಮಾಡಿದರೆ ಭಾರತ ನೀಡುತ್ತಿರುವ ಬೆಂಬಲ ಬೆಲೆ ಜಾಗತಿಕ ಬೆಲೆಗಳಿಗಿಂತಲೂ ಸಾಕಷ್ಟು ಕಡಿಮೆ ಪ್ರಮಾಣದಲ್ಲಿದೆ. ಅಂದರೆ ವಾಸ್ತವವಾಗಿ ಬೆಂಬಲ ಬೆಲೆ ನಕಾರಾತ್ಮಕವಾಗಿಯೇ ಕಂಡುಬರುತ್ತದೆ.
ಪ್ರಸ್ತುತ ಸಂದರ್ಭದಲ್ಲಿ ಜಾಗತಿಕ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ನೋಡಿದಾಗ ಭತ್ತ ಮತ್ತು ಗೋಧಿಯ ಬೆಲೆಗಳು ಚಾರಿತ್ರಿಕ ಕುಸಿತ ಕಂಡಿವೆ. ಇದೇ ವೇಳೆ ಅಭಿವೃದ್ಧಿ ಹೊಂದಿದ ಶ್ರೀಮಂತ ದೇಶಗಳಲ್ಲಿ ಕೃಷಿ ಸಹಾಯಧನ ತೀವ್ರ ಹೆಚ್ಚಳ ಕಂಡಿದೆ. ಈ ಹಿನ್ನೆಲೆಯಲ್ಲೇ ಈ ದೇಶಗಳು ತಮ್ಮ ಕೃಷಿ ಉತ್ಪನ್ನಗಳನ್ನು ಭಾರತದಂತಹ ದೇಶಗಳ ಮಾರುಕಟ್ಟೆಗಳಲ್ಲಿ ತಂದು ಸುರಿಯಲು ಹತಾಶರಾಗಿವೆ.
ಈ ದೃಷ್ಟಿಯಿಂದ ನೋಡಿದಾಗ ಭಾರತದ ರೈತ ಸಂಘಟನೆಗಳು ತಾವು ವಿರೋಧಿಸುತ್ತಿರುವ ಮೂರು ಕೃಷಿ ಮಸೂದೆಗಳಿಂದ ಸ್ಥಳೀಯ ಉದ್ಯಮಿಗಳಿಗೆ ಹೆಚ್ಚು ಲಾಭವಾಗುತ್ತದೆ ಎನ್ನುವುದನ್ನು ಸರಿಯಾಗಿ ಗುರುತಿಸಿದ್ದು, ವಿದೇಶಿ ಕೃಷಿ ಉದ್ದಿಮೆಗಳು ಭಾರತದ ಕೃಷಿ ವ್ಯವಸ್ಥೆಗೆ ಮಾರಕವಾಗುವುದನ್ನೂ ಸಮರ್ಪಕವಾಗಿ ಗುರುತಿಸಿವೆ.
ಪಂಜಾಬ್ ಮತ್ತು ಹರಿಯಾಣದಲ್ಲಿ ಈಗಾಗಲೇ ರೈತರು ವಿದೇಶಿ ಕೃಷಿ ಉದ್ದಿಮೆಗಳೊಡನೆ ಗುತ್ತಿಗೆ ಕೃಷಿಯನ್ನು ನಡೆಸಿ ಅದರ ದುಷ್ಪರಿಣಾಮಗಳನ್ನು ಎದುರಿಸಿದ್ದಾರೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಬೆಲೆ ಮತ್ತು ಗುಣಮಟ್ಟದ ಬಗ್ಗೆ ಒಪ್ಪಿತ ನಿಯಮಗಳನ್ನೂ ಉಲ್ಲಂಘಿಸುವ ಮೂಲಕ ರೈತರಿಗೆ ವಂಚಿಸುವ ಈ ಅಗೋಚರ ಖಾಸಗಿ ಕಾರ್ಪೋರೇಟ್ ಉದ್ದಿಮೆಗಳೊಡನೆ ತಾವು ಯಾವುದೇ ರೀತಿಯಲ್ಲೂ ವ್ಯವಹರಿಸಲು ಸಿದ್ಧರಾಗಿಲ್ಲ ಎಂದು ರೈತ ಸಮುದಾಯ ಸ್ಪಷ್ಟವಾಗಿ ಹೇಳಿದೆ.
ಎಷ್ಟೇ ಅದಕ್ಷತೆ ಇದ್ದರೂ, ಹಣ ಪಾವತಿಯಲ್ಲಿ ವಿಳಂಬ ಉಂಟಾದರೂ, ತಮ್ಮ ಉತ್ಪನ್ನಗಳನ್ನು ಸರ್ಕಾರಿ ಏಜೆಂಟರಿಗೆ ನಿಗದಿತ ಬೆಂಬಲ ಬೆಲೆಗೆ ಮಾರಾಟ ಮಾಡಲು ರೈತರು ಸಿದ್ಧರಾಗಿದ್ದಾರೆ. ನೂತನ ಕೃಷಿ ಕಾಯ್ದೆಗಳ ಅನುಸಾರ ಮಾರುಕಟ್ಟೆ ನಿಯಂತ್ರಣ ನಿಯಮಗಳನ್ನು ಸಡಿಲಗೊಳಿಸಿದರೆ ಕೃಷಿ ಕ್ಷೇತ್ರದಲ್ಲಿ ಸ್ಥಳೀಯ ಉದ್ದಿಮೆಗಳೊಡನೆ ವಿದೇಶಿ ಕೃಷಿ ಉದ್ದಿಮೆಗಳೂ ಪ್ರವೇಶಿಸುತ್ತವೆ, ಇದರಿಂದ ಕನಿಷ್ಟ ಬೆಂಬಲ ಬೆಲೆ ಪದ್ಧತಿಗೂ ಪೆಟ್ಟಾಗುವುದಲ್ಲದೆ, ಸಾರ್ವಜನಿಕ ಸಂಗ್ರಹಣೆಯ ಪದ್ಧತಿಯೂ ಇಲ್ಲವಾಗುತ್ತದೆ ಎನ್ನುವ ರೈತರ ಆತಂಕ ನ್ಯಾಯಯುತವಾಗಿದೆ.
ಸಹಾಯಧನ ಪಡೆಯುವ ವಿದೇಶಿ ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳುವುದರಿಂದ ಭಾರತದಲ್ಲಿನ ಬಡ ಗ್ರಾಹಕರಿಗೆ ಅನುಕೂಲವಾಗುತ್ತದೆ ಎಂದು ಹಲವು ಕೃಷಿ ವಿಶ್ಲೇಷಕರು ಪ್ರತಿಪಾದಿಸುತ್ತಾರೆ. ಆದರೆ ಈ ಅಭಿವೃದ್ಧಿ ಹೊಂದಿದ ಶ್ರೀಮಂತ ರಾಷ್ಟ್ರಗಳಲ್ಲಿ ಹಸಿರು ಇಂಧನ ಬಳಕೆಯ ಆಗ್ರಹ ಹೆಚ್ಚಾಗುತ್ತಿದ್ದು ಹೆಚ್ಚಿನ ಪ್ರಮಾಣದ ಆಹಾರ ಧಾನ್ಯಗಳನ್ನು ಎಥನಾಲ್ ಉತ್ಪಾದನೆಗೆ ಬಳಕೆಯಾಗುತ್ತದೆ ಎನ್ನುವ ವಾಸ್ತವಾಂಶವನ್ನು ಈ ತಜ್ಞರು ಮರೆಮಾಚುತ್ತಿದ್ದಾರೆ.
ಹಾಗಾಗಿ ಇಂದು ಕಡಿಮೆ ಬೆಲೆಯ ಆಹಾರ ಧಾನ್ಯಗಳ ಆಮದು ಪ್ರಕ್ರಿಯೆಗೆ ಅವಕಾಶ ನೀಡಿದರೆ ಮುಂಬರುವ ದಿನಗಳಲ್ಲಿ ಇದರಿಂದ ಭಾರತದ ರೈತರು ವಿನಾಶದ ಅಂಚಿಗೆ ತಲುಪುವುದೇ ಅಲ್ಲದೆ, ಬೆಲೆ ಏರಿಕೆ ತೀವ್ರವಾಗಿ ಈ ಹಿಂದೆ ಕೆಲವು ಅಭಿವೃದ್ಧಿಶೀಲ ದೇಶಗಳು ಎದುರಿಸಿದ್ದ ಸಂಕಷ್ಟಗಳನ್ನೇ ಭಾರತವೂ ಎದುರಿಸಬೇಕಾಗುತ್ತದೆ. ತಮ್ಮ ಬೆವರು ಹರಿಸಿ ವ್ಯವಸಾಯದಲ್ಲಿ ತೊಡಗಿರುವ ಭಾರತದ ರೈತಾಪಿಯ ಬಗ್ಗೆ ಕಾಳಜಿ ಇರುವ ಯಾರೇ ಆದರೂ ಈ ಕೃಷಿ ಮಸೂದೆಗಳನ್ನು ವಿರೋಧಿಸುವುದೇ ಅಲ್ಲದೆ, ಸ್ಥಳೀಯ ಮತ್ತು ವಿದೇಶಿ ಉದ್ಯಮಿಗಳ ಕುತಂತ್ರಗಳ ವಿರುದ್ಧ ದನಿ ಎತ್ತಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ4 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ3 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ2 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

