ಬಹಿರಂಗ
ರೈತ ಪ್ರತಿಭಟನೆಯ ಜಾಗತಿಕ ಆಯಾಮ
- ಮೂಲ : ಉತ್ಸಾ ಪಟ್ನಾಯಕ್( ಹಿಂದೂ ದಿನಪತ್ರಿಕೆ 30-12-20) ಅನುವಾದ : ನಾ ದಿವಾಕರ
ರೈತರೊಂದಿಗೆ ಮಾತುಕತೆಯನ್ನೂ ನಡೆಸದೆ, ಕೇಂದ್ರ ಸರ್ಕಾರ ಸಂಸತ್ತಿನಲ್ಲಿಯೂ ಚರ್ಚೆ ನಡೆಸದೆ ಅವಸರದಲ್ಲಿ ಜಾರಿಗೊಳಿಸಿರುವ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲು ಆಗ್ರಹಿಸಿ ದೇಶದ ರೈತರು ನಡೆಸುತ್ತಿರುವ ಆಂದೋಲನ ಎರಡನೆ ತಿಂಗಳಿಗೆ ಕಾಲಿಟ್ಟಿದೆ. ರೈತರ ಈ ಆಂದೋಲನ ಚಾರಿತ್ರಿಕ ಮಹತ್ವ ಪಡೆದಿದೆ.
ರೈತಾಪಿಯ ಈ ಮುಷ್ಕರ ಕೇವಲ ಕನಿಷ್ಠ ಬೆಂಬಲ ಬೆಲೆಗೆ ಸೀಮಿತವಾದದ್ದಲ್ಲ. ಸಾರ್ವಜನಿಕ ಆಹಾರ ಧಾನ್ಯಗಳ ಸಾರ್ವಜನಿಕ ಸಂಗ್ರಹಣೆ ಮತ್ತು ವಿತರಣೆಯ ವ್ಯವಸ್ಥೆಯ ಉಳಿವಿಗೂ ಈ ಹೋರಾಟ ನಿರ್ಣಾಯಕವಾಗಿದೆ. ಭಾರತದ ಆಹಾರ ಕಣಜ ಎಂದೇ ಹೇಳಬಹುದಾದ ಉತ್ತರ ಭಾರತದ ಆಹಾರ ಧಾನ್ಯ ಉತ್ಪಾದನೆಯ ಆರ್ಥಿಕ ಸಕ್ಷಮತೆಯನ್ನು ಕಾಪಾಡದೆ ಹೋದಲ್ಲಿ ಇಡೀ ದೇಶದ ಸಾರ್ವಜನಿಕ ಆಹಾರ ಸಂಗ್ರಹಣೆ ವಿತರಣೆಯ ಪ್ರಕ್ರಿಯೆ ದುರ್ಬಲವಾಗುತ್ತದೆ. ಪ್ರಸ್ತುತ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಏನೇ ಕೊರತೆ, ಲೋಪದೋಷಗಳಿದ್ದರೂ ಇದು ದೇಶದ ಬಹುಸಂಖ್ಯೆಯ ಜನರಿಗೆ ಜೀವನಾಧಾರ ಒದಗಿಸುತ್ತಿರುವುದನ್ನು ಇಲ್ಲಿ ಗಮನಿಸಬೇಕಿದೆ.
ವಸಾಹತುಕಾಲ ಸ್ಥಿತಿಯ ಮರುನಿರ್ಮಾಣ
ಉತ್ತರದ ಔದ್ಯಮಿಕ ದೇಶಗಳಾದ ಅಮೆರಿಕ, ಕೆನಡಾ ಮತ್ತು ಐರೋಪ್ಯ ಸಂಘಟನೆಯ ರಾಷ್ಟ್ರಗಳಲ್ಲಿ ಅಲ್ಲಿನ ಗ್ರಾಹಕರಿಂದಲೇ ಹೆಚ್ಚಿನ ಬೇಡಿಕೆ ಇರುವ ಉಷ್ಣವಲಯದ ಮತ್ತು ಉಪ ಉಷ್ಣವಲಯದ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುವುದಿಲ್ಲ. ಆದರೆ ಈ ದೇಶಗಳ ಹವಾಮಾನಕ್ಕೆ ಅನುಗುಣವಾಗಿ ಅಲ್ಲಿನ ಏಕ ಬೆಳೆಯ ಭೂಮಿಯಲ್ಲಿ ಬೆಳೆಯಲಾಗುವ ಆಹಾರ ಧಾನ್ಯಗಳು ಮತ್ತು ಹೈನು ಉತ್ಪನ್ನಗಳು ಹೇರಳವಾಗಿ ಸಂಗ್ರಹವಾಗಿರುತ್ತವೆ.
ಈ ಧಾನ್ಯಗಳಿಗೆ ಮತ್ತು ಉತ್ಪನ್ನಗಳಿಗೆ ರಫ್ತು ಮಾರುಕಟ್ಟೆಯನ್ನು ಕಂಡುಕೊಳ್ಳುವುದು ಈ ದೇಶಗಳಿಗೆ ಅನಿವಾರ್ಯವಾಗಿರುತ್ತದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಈ ಶ್ರೀಮಂತ ರಾಷ್ಟ್ರಗಳು ಭಾರತ ಮತ್ತಿತರ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಒತ್ತಡ ಹೇರುತ್ತಿದ್ದು ಆಹಾರ ಧಾನ್ಯ ಸಂಗ್ರಹಣೆಯ ಪದ್ಧತಿಯನ್ನು ಕೈಬಿಡುವಂತೆ ಒತ್ತಾಯಿಸುತ್ತಿವೆ.
ಬದಲಾಗಿ ಈ ರಾಷ್ಟ್ರಗಳು ಶ್ರೀಮಂತ ರಾಷ್ಟ್ರಗಳಿಂದ ಆಹಾರಧಾನ್ಯಗಳನ್ನು ಆಮದು ಮಾಡಿಕೊಂಡು,ಇಲ್ಲಿನ ಆಹಾರ ಧಾನ್ಯ ಬೆಳೆಯುವ ಭೂಮಿಯನ್ನು ಗುತ್ತಿಗೆ ಕೃಷಿ ಪದ್ಧತಿಗೆ ಒಳಪಡಿಸಿ ರಫ್ತು ಬೆಳೆಗಳನ್ನು ಬೆಳೆಯುವಂತೆ ಒತ್ತಡ ಹೇರಲಾಗುತ್ತಿದೆ. ಈ ರೀತಿಯ ಒತ್ತಡಕ್ಕೆ ಕಾರಣವೇನೆಂದರೆ ಈ ಔದ್ಯಮಿಕ ರಾಷ್ಟ್ರಗಳಲ್ಲಿ ಭಾರತದಲ್ಲಿ ಬೆಳೆಯುವಂತಹ ಆಹಾರ ಧಾನ್ಯಗಳನ್ನು ಬೆಳೆಯಲಾಗುವುದಿಲ್ಲ. ಅಂದರೆ ವಸಾಹತು ಕಾಲಘಟ್ಟದ ಆರ್ಥಿಕ ಸನ್ನಿವೇಶವನ್ನು ಪುನರ್ ಸೃಷ್ಟಿಸುವತ್ತ ಔದ್ಯಮಿಕ ರಾಷ್ಟ್ರಗಳು ಮುನ್ನಡೆದಿವೆ.
1990ರ ದಶಕದಲ್ಲಿ ಫಿಲಿಪೈನ್ಸ್ ಮತ್ತು ಹತ್ತು ವರ್ಷಗಳ ನಂತರ ಆಫ್ರಿಕಾ ಖಂಡದ ಬೋಸ್ಟ್ವಾನಾ ದೇಶಗಳು ಈ ರೀತಿಯ ಒತ್ತಡಕ್ಕೆ ಬಲಿಯಾಗಿದ್ದವು. ಈ ಸಂದರ್ಭದಲ್ಲೇ ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳಲ್ಲಿ ಧಾನ್ಯಗಳ ಬೆಳೆಯನ್ನು ಎಥನಾಲ್ ಉತ್ಪಾದನೆಗೆ ಬಳಸಲು ಆರಂಭಿಸಿದ್ದರ ಪರಿಣಾಮವಾಗಿ 2007ರ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಬೆಲೆಗಳು ಗಗನಕ್ಕೇರಿದವು. ಆಹಾರ ಧಾನ್ಯಗಳಿಗಾಗಿ ಆಮದು ಪದಾರ್ಥಗಳನ್ನೇ ಅವಲಂಬಿಸಿದ್ದ 37 ದೇಶಗಳಲ್ಲಿ ಹಾಹಾಕಾರ ಉಂಟಾಗಿದ್ದು, ಆಹಾರಕ್ಕಾಗಿ ದಂಗೆಗಳು ಉಂಟಾಗಿದ್ದವು. ನಗರ ಪ್ರದೇಶದ ಜನರು ಹೆಚ್ಚಿನ ಬಡತನಕ್ಕೆ ನೂಕಲ್ಪಟ್ಟರು.
ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಆಹಾರ ಭದ್ರತೆ ಅತ್ಯಂತ ಮಹತ್ವದ ಸಂಗತಿಯಾಗಿದ್ದು ಇದನ್ನು ಜಾಗತಿಕ ಮಾರುಕಟ್ಟೆಯ ನಿಯಂತ್ರಣಕ್ಕೆ ಒಪ್ಪಿಸುವುದು ಅಪಾಯಕಾರಿಯಾಗುತ್ತದೆ. ಆದಾಗ್ಯೂ ಆಹಾರ ಭದ್ರತೆಯನ್ನು ಸಾಧಿಸಲು ಈ ದೇಶಗಳ ಸಾರ್ವಜನಿಕ ಆಹಾರ ಸಂಗ್ರಹಗಳ ಮೇಲೆ ನಿರಂತರ ದಾಳಿ ನಡೆಯುತ್ತಲೇ ಇದೆ. ಒಂದು ದಶಕದ ಹಿಂದೆಯಷ್ಟೇ ಭಾರತ ಈ ನಿಟ್ಟಿನಲ್ಲಿ ಜಾಗೃತವಾಗಿ ತನ್ನ ಆಹಾರ ಸಂಗ್ರಹವನ್ನು ಸಂರಕ್ಷಿಸಲು ಯಶಸ್ವಿಯಾಗಿತ್ತು.
2008ರ ಬೆಲೆ ಏರಿಕೆಗೂ ಮುನ್ನ ಆರು ವರ್ಷಗಳ ಕಾಲ ತಟಸ್ಥವಾಗಿದ್ದ ಬೆಂಬಲ ಬೆಲೆಗಳನ್ನು ಹೆಚ್ಚಿಸಲಾಗಿತ್ತು. ಆರ್ಥಿಕ ಪುನಶ್ಚೇತನದ ಪರಿಣಾಮ ಪಂಜಾಬ್ ನಲ್ಲಿ ಜಡಗಟ್ಟಿದ್ದ ಆಹಾರ ಧಾನ್ಯ ಉತ್ಪಾದನೆ ಹೆಚ್ಚಾಗಿತ್ತು. ಆದರೆ ಬಹುಸಂಖ್ಯೆಯ ಬಡಜನತೆಯನ್ನು “ ಬಡತನ ರೇಖೆಯ ಕೆಳಗಿರುವ ” ಪಡಿತರ ವ್ಯವಸ್ಥೆಯಿಂದ ಹೊರಗುಳಿಯುವಂತೆ ಮಾಡಿದ ಪರಿಣಾಮ ಆಹಾರ ಧಾನ್ಯಗಳ ಬಳಕೆ ಹೆಚ್ಚಾಗಲಿಲ್ಲ. 2016ರ ನೋಟು ರದ್ದತಿಯಿಂದ ಉಂಟಾದ ನಿರುದ್ಯೋಗ ಮತ್ತು 2020ರ ಕೋವಿದ್ ಪರಿಣಾಮದಿಂದ ಸೃಷ್ಟಿಯಾದ ಉದ್ಯೋಗ ಕೊರತೆ ಆಹಾರ ಧಾನ್ಯಗಳ ಒಟ್ಟಾರೆ ಬೇಡಿಕೆಯ ಪ್ರಮಾಣ ಚಾರಿತ್ರಿಕ ಕುಸಿತ ಕಾಣುವಂತೆ ಮಾಡಿವೆ.
ಭಾರತದ ರೈತಾಪಿ ಯಾವುದೇ ತರ್ಕಬದ್ಧ ಕಾರಣಗಳೇ ಇಲ್ಲದೆ ಅಪ್ರಾಮಾಣಿಕ ವ್ಯಾಪಾರದ ತಂತ್ರಗಾರಿಕೆಗಳಿಗೆ ಬಲಿಯಾಗಬೇಕಾಯಿತು. ಜಾಗತಿಕ ಬೆಲೆಗಳ ಏರುಪೇರುಗಳ ಪರಿಣಾಮ ಭಾರತದ ರೈತರು ತೀವ್ರ ಸಾಲದ ಹೊರೆಗೆ ಸಿಲುಕಿ ಸಂಕಷ್ಟಕ್ಕೀಡಾಗಬೇಕಾಯಿತು. ಪಂಜಾಬ್ ನ ಒಂದು ಗ್ರಾಮದಲ್ಲಿ ಆತ್ಮಹತ್ಯೆಯಿಂದ ತಮ್ಮ ಗಂಡಂದಿರನ್ನು ಕಳೆದುಕೊಂಡ 59 ವಿಧವೆಯರಿದ್ದಾರೆ.
ಅಭಿವೃದ್ಧಿ ಹೊಂದಿದ ದೇಶಗಳೊಡನೆ ಭಾರತ ಪೈಪೋಟಿ ನಡೆಸುವುದು ತರವಲ್ಲ. ಏಕೆಂದರೆ 1990ರ ದಶಕದಲ್ಲಿ ಈ ಶ್ರೀಮಂತ ರಾಷ್ಟ್ರಗಳು ತಮ್ಮ ಬೆಂಬಲ ಬೆಲೆ ಪದ್ಧತಿಯನ್ನು ಪರಿಷ್ಕರಿಸುವ ಮೂಲಕ ಅಲ್ಲಿನ ರೈತರಿಗೆ ಸಹಾಯಧನವನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡಲು ಆರಂಭಿಸಿದ್ದವು.
ಅಂತಾರಾಷ್ಟ್ರೀಯ ಕೃಷಿ ಒಡಂಬಡಿಕೆಯ ಸಹಾಯಧನವನ್ನು ಕಡಿಮೆ ಮಾಡುವ ಒಪ್ಪಂದದ ಅನುಸಾರ ಈ ರೀತಿ ನೇರ ನಗದು ನೀಡುವುದು ನಿಯಮಗಳ ಉಲ್ಲಂಘನೆಯಾಗಿದ್ದರೂ, ಇದು ಒಡಂಬಡಿಕೆಯಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳದಂತೆ ಈ ದೇಶಗಳು ಎಚ್ಚರವಹಿಸಿದ್ದವು. ಇದರಿಂದ ಉಂಟಾಗಬಹುದಾದ ಪರಿಣಾಮವನ್ನು ಗಮನಿಸದೆಯೇ ಭಾರತ ಮತ್ತಿತರ ರಾಷ್ಟ್ರಗಳು ಈ ಒಡಂಬಡಿಕೆಗೆ ಸಹಿ ಹಾಕಿದ್ದವು.
ಅಮೆರಿಕದ 20 ಲಕ್ಷ ರೈತರಿಗೆ ನೀಡುವ ನೇರ ನಗದು ಸಹಾಯಧನದ ಪ್ರಮಾಣ ಆ ದೇಶದ ಒಟ್ಟು ಕೃಷಿ ಉತ್ಪನ್ನದ ಮೌಲ್ಯದಲ್ಲಿ ಅರ್ಧದಷ್ಟಾಗುತ್ತದೆ. ಇದಕ್ಕೆ ಅಮೆರಿಕದ ಬಜೆಟ್ ನ ಶೇ 1ರಷ್ಟು ನಿದಿ ಬಳಕೆಯಾಗುತ್ತದೆ. ಭಾರತದಲ್ಲಿ ಇದೇ ರೀತಿ ಒಟ್ಟು ಕೃಷಿ ಉತ್ಪಾದನಾ ಮೌಲ್ಯದ ಶೇ 25ರಷ್ಟು ಪ್ರಮಾಣವನ್ನು ಒಂದು ಕೋಟಿ 20 ಲಕ್ಷ ರೈತರಿಗೆ ಸಹಾಯಧನದ ರೂಪದಲ್ಲಿ ನೀಡಿದರೂ ಕೇಂದ್ರ ಬಜೆಟ್ ನಲ್ಲಿ ಶೇ 50ರಷ್ಟು ನಿಧಿಯ ಬಳಕೆಯಾಗುತ್ತದೆ. ಇದು ಆರ್ಥಿಕವಾಗಿ ಅಸಾಧ್ಯವಾಗಿದ್ದು ಆಡಳಿತ ವ್ಯವಸ್ಥೆಗೆ ಮಾರಕವಾಗಿ ಪರಿಣಮಿಸುತ್ತದೆ.
ಸಮರ್ಪಕ ಬೆಲೆಯ ನಿಷ್ಕರ್ಷೆ
ತಮಗೆ ಅಲ್ಪ ಪ್ರಮಾಣದ ನಗದು ಪಾವತಿ ಮಾಡುವುದನ್ನು ಭಾರತದ ರೈತರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ದೇಶದ ಸಮಸ್ತ ಜನತೆಗಾಗಿ ತಾವು ಬೆಳೆಯುವ ಆಹಾರ ಧಾನ್ಯಗಳಿಗೆ ಸಮರ್ಪಕವಾದ, ತರ್ಕಬದ್ಧವಾದ ಬೆಲೆ ನೀಡುವಂತೆ ರೈತರು ಆಗ್ರಹಿಸುತ್ತಿದ್ದಾರೆ. ಹಾಗಾದಲ್ಲಿ ಮಾತ್ರ ರೈತರು ತಮ್ಮ ಬೇಸಾಯದ ವೆಚ್ಚವನ್ನು ಸರಿದೂಗಿಸಿ ಸಾಧಾರಣ ಬದುಕು ನಡೆಸಲು ಸಾಧ್ಯವಾಗುತ್ತದೆ.
ಭಾರತದ ಸಂದರ್ಭದಲ್ಲಿ ಬೆಂಬಲ ಬೆಲೆ ಪದ್ಧತಿಯೊಂದೇ ನ್ಯಾಯಯುತವಾಗಿ ಕಾಣುತ್ತದೆ. ಪಂಜಾಬ್ ನಲ್ಲಿ ಅಂತರ್ಜಲ ಕುಸಿಯುತ್ತಿರುವುದು ಆತಂಕಕಾರಿ ವಿಷಯವೇ ಆದರೂ ಇಲ್ಲಿ ನೂತನ ಕೃಷಿ ತಂತ್ರಜ್ಞಾನಗಳನ್ನು ಅಳವಡಿಸುವುದು ಮುಖ್ಯವಾಗುತ್ತದೆ. ಕಡಿಮೆ ನೀರು ಬಳಕೆಯಾಗುವಂತಹ ಮಾದರಿಗಳನ್ನು ಬಳಸಬೇಕಾಗುತ್ತದೆ. ( ಕೃಷಿ ವಿಜ್ಞಾನಿಗಳು ಕಂಡುಹಿಡಿದಿರುವ Rice Intensification ಪದ್ಧತಿಯಲ್ಲಿ ಭತ್ತ ಬೆಳೆಯಲು ಹೆಚ್ಚಿನ ಸಾವಯವ ಗೊಬ್ಬರವನ್ನು ಬಳಸುವುದು ಮತ್ತು ಹೆಚ್ಚಿನ ಅಂತರದಲ್ಲಿ ಭತ್ತದ ನಾಟಿ ಮಾಡುವುದು, ಚೌಕಾಕಾರದಲ್ಲಿ ನಾಟಿ ಮಾಡುವುದರ ಮೂಲಕ ನಡುವೆ ಹೆಚ್ಚಿನ ಜಲಸಾಂದ್ರತೆಯನ್ನು ತಡೆಗಟ್ಟಿ, ತೇವಾಂಶವನ್ನು ಉಳಿಸಿಕೊಳ್ಳುವುದು, ಅಂತರ್ಜಲ ಸಂರಕ್ಷಣೆಯ ಒಂದು ವಿಧಾನವಾಗಿದೆ-ಅನುವಾದಕ)
ಅಂತಾರಾಷ್ಟ್ರೀಯ ಕೃಷಿ ಒಡಂಬಡಿಕೆಗಳಲ್ಲಿ ಅಭಿವೃದ್ಧಿ ಹೊಂದಿದ ಶ್ರೀಮಂತ ರಾಷ್ಟ್ರಗಳು ಅಸಂಬದ್ಧ ರೀತಿಯಲ್ಲಿ, ನಿಷ್ಪ್ರಮಾಣವಾದ ನಿಯಮಗಳನ್ನು ರೂಪಿಸಿದ್ದು, ಈ ನಿಯಮಗಳ ಅಡಿಯಲ್ಲೇ ಆಹಾರ ಧಾನ್ಯಗಳ ಬೆಂಬಲ ಬೆಲೆ ನಿರ್ಧರಿಸುವುದನ್ನೂ ಅಳವಡಿಸಲಾಗಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿರುವ ಒಂದು ನಿಯಮವಾಗಿದೆ.
2018ರಲ್ಲಿ ವಿಶ್ವ ವಾಣಿಜ್ಯ ಸಂಸ್ಥೆಗೆ ಭಾರತದ ವಿರುದ್ಧ ದೂರು ಸಲ್ಲಿಸಿದ್ದ ಅಮೆರಿಕ ಸರ್ಕಾರ, ಭಾರತದಲ್ಲಿ 1986-88ರ ಮೂಲ ಬೆಲೆಯನ್ನೇ ಆಧಾರವಾಗಿಟ್ಟುಕೊಂಡು, ಅಂದಿನ ಡಾಲರ್ ಮೌಲ್ 12.5 ರೂಗಳಿಗೆ ಅನುಗುಣವಾಗಿ ಭಾರತ 2013-14ರಲ್ಲಿ ಭತ್ತ ಮತ್ತು ಗೋಧಿಗೆ ಒಂದು ಕ್ವಿಂಟಾಲಿಗೆ ಕ್ರಮವಾಗಿ 235 ರೂ ಮತ್ತು 354 ರೂ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಕೋರಿತ್ತು. ಆದರೆ ಭಾರತದಲ್ಲಿ ಈ ವೇಳೆಗೆ ಬೆಂಬಲ ಬೆಲೆ ಕ್ರಮವಾಗಿ 1348 ರೂ ಮತ್ತು 1386 ರೂಗಳಷ್ಟಿತ್ತು.
ಕ್ವಿಂಟಲ್ಗೆ ಒಂದು ಸಾವಿರ ರೂ ಹೆಚ್ಚಾಗಿತ್ತು. ಇದನ್ನು 2013-14ರ ಭತ್ತ ಮತ್ತು ಗೋಧಿ ಉತ್ಪನ್ನದ ಒಟ್ಟು ಮೌಲ್ಯದೊಡನೆ ಗುಣಾಕಾರ ಮಾಡಿದರೆ ಇದು ಒಟ್ಟು ಉತ್ಪಾದನೆಯ ಶೇ 77 ಮತ್ತು ಶೇ 67ರಷ್ಟಾಗುತ್ತದೆ. ಈ ಲೆಕ್ಕಾಚಾರವನ್ನು ವಿಶ್ವ ವಾಣಿಜ್ಯ ಸಂಸ್ಥೆಯ ಮುಂದಿರಿಸಿದ್ದ ಅಮೆರಿಕ ಸರ್ಕಾರ , ಭಾರತದ ಈ ನೀತಿ ಅಂತಾರಾಷ್ಟ್ರೀಯ ಒಪ್ಪಂದದಲ್ಲಿ ನಿಗದಿಪಡಿಸಿರುವ ಗರಿಷ್ಟ ಶೇ 10ರಷ್ಟು ಬೆಂಬಲ ನೀಡುವ ನಿಯಮದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿತ್ತು.
ಎರಡು ತಿಂಗಳ ಹಿಂದೆ ಅಮೆರಿಕ ಭಾರತಕ್ಕೆ ಮತ್ತಷ್ಟು ಹೊಸ ಸವಾಲುಗಳನ್ನು ಹಾಕಿದೆ. ದುರ್ಬಲ ಅಭಿವೃದ್ಧಿಶೀಲ ದೇಶಗಳನ್ನು ನಿಯಂತ್ರಿಸುವ ಉದ್ದೇಶದಿಂದಲೇ ಕೃಷಿ ಒಡಂಬಡಿಕೆಯಲ್ಲಿ ಅಪ್ರಮಾಣಿಕವಾದ, ಅಸಂಬದ್ಧ ನಿಯಮಗಳನ್ನು ಅಳವಡಿಸಲಾಗಿದೆ.
ಭಾರತದ ರೈತರು ವಿಶ್ವದಲ್ಲೇ ಅತಿ ಕಡಿಮೆ ವೆಚ್ಚದಲ್ಲಿ ಆಹಾರ ಉತ್ಪನ್ನ ಮಾಡುತ್ತಿದ್ದು 2013-14ರಲ್ಲಿ 60.5ರಷ್ಟಿದ್ದ ಡಾಲರ್ ಮೌಲ್ಯಕ್ಕೆ ತುಲನೆ ಮಾಡಿದರೆ ಭಾರತ ನೀಡುತ್ತಿರುವ ಬೆಂಬಲ ಬೆಲೆ ಜಾಗತಿಕ ಬೆಲೆಗಳಿಗಿಂತಲೂ ಸಾಕಷ್ಟು ಕಡಿಮೆ ಪ್ರಮಾಣದಲ್ಲಿದೆ. ಅಂದರೆ ವಾಸ್ತವವಾಗಿ ಬೆಂಬಲ ಬೆಲೆ ನಕಾರಾತ್ಮಕವಾಗಿಯೇ ಕಂಡುಬರುತ್ತದೆ.
ಪ್ರಸ್ತುತ ಸಂದರ್ಭದಲ್ಲಿ ಜಾಗತಿಕ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ನೋಡಿದಾಗ ಭತ್ತ ಮತ್ತು ಗೋಧಿಯ ಬೆಲೆಗಳು ಚಾರಿತ್ರಿಕ ಕುಸಿತ ಕಂಡಿವೆ. ಇದೇ ವೇಳೆ ಅಭಿವೃದ್ಧಿ ಹೊಂದಿದ ಶ್ರೀಮಂತ ದೇಶಗಳಲ್ಲಿ ಕೃಷಿ ಸಹಾಯಧನ ತೀವ್ರ ಹೆಚ್ಚಳ ಕಂಡಿದೆ. ಈ ಹಿನ್ನೆಲೆಯಲ್ಲೇ ಈ ದೇಶಗಳು ತಮ್ಮ ಕೃಷಿ ಉತ್ಪನ್ನಗಳನ್ನು ಭಾರತದಂತಹ ದೇಶಗಳ ಮಾರುಕಟ್ಟೆಗಳಲ್ಲಿ ತಂದು ಸುರಿಯಲು ಹತಾಶರಾಗಿವೆ.
ಈ ದೃಷ್ಟಿಯಿಂದ ನೋಡಿದಾಗ ಭಾರತದ ರೈತ ಸಂಘಟನೆಗಳು ತಾವು ವಿರೋಧಿಸುತ್ತಿರುವ ಮೂರು ಕೃಷಿ ಮಸೂದೆಗಳಿಂದ ಸ್ಥಳೀಯ ಉದ್ಯಮಿಗಳಿಗೆ ಹೆಚ್ಚು ಲಾಭವಾಗುತ್ತದೆ ಎನ್ನುವುದನ್ನು ಸರಿಯಾಗಿ ಗುರುತಿಸಿದ್ದು, ವಿದೇಶಿ ಕೃಷಿ ಉದ್ದಿಮೆಗಳು ಭಾರತದ ಕೃಷಿ ವ್ಯವಸ್ಥೆಗೆ ಮಾರಕವಾಗುವುದನ್ನೂ ಸಮರ್ಪಕವಾಗಿ ಗುರುತಿಸಿವೆ.
ಪಂಜಾಬ್ ಮತ್ತು ಹರಿಯಾಣದಲ್ಲಿ ಈಗಾಗಲೇ ರೈತರು ವಿದೇಶಿ ಕೃಷಿ ಉದ್ದಿಮೆಗಳೊಡನೆ ಗುತ್ತಿಗೆ ಕೃಷಿಯನ್ನು ನಡೆಸಿ ಅದರ ದುಷ್ಪರಿಣಾಮಗಳನ್ನು ಎದುರಿಸಿದ್ದಾರೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಬೆಲೆ ಮತ್ತು ಗುಣಮಟ್ಟದ ಬಗ್ಗೆ ಒಪ್ಪಿತ ನಿಯಮಗಳನ್ನೂ ಉಲ್ಲಂಘಿಸುವ ಮೂಲಕ ರೈತರಿಗೆ ವಂಚಿಸುವ ಈ ಅಗೋಚರ ಖಾಸಗಿ ಕಾರ್ಪೋರೇಟ್ ಉದ್ದಿಮೆಗಳೊಡನೆ ತಾವು ಯಾವುದೇ ರೀತಿಯಲ್ಲೂ ವ್ಯವಹರಿಸಲು ಸಿದ್ಧರಾಗಿಲ್ಲ ಎಂದು ರೈತ ಸಮುದಾಯ ಸ್ಪಷ್ಟವಾಗಿ ಹೇಳಿದೆ.
ಎಷ್ಟೇ ಅದಕ್ಷತೆ ಇದ್ದರೂ, ಹಣ ಪಾವತಿಯಲ್ಲಿ ವಿಳಂಬ ಉಂಟಾದರೂ, ತಮ್ಮ ಉತ್ಪನ್ನಗಳನ್ನು ಸರ್ಕಾರಿ ಏಜೆಂಟರಿಗೆ ನಿಗದಿತ ಬೆಂಬಲ ಬೆಲೆಗೆ ಮಾರಾಟ ಮಾಡಲು ರೈತರು ಸಿದ್ಧರಾಗಿದ್ದಾರೆ. ನೂತನ ಕೃಷಿ ಕಾಯ್ದೆಗಳ ಅನುಸಾರ ಮಾರುಕಟ್ಟೆ ನಿಯಂತ್ರಣ ನಿಯಮಗಳನ್ನು ಸಡಿಲಗೊಳಿಸಿದರೆ ಕೃಷಿ ಕ್ಷೇತ್ರದಲ್ಲಿ ಸ್ಥಳೀಯ ಉದ್ದಿಮೆಗಳೊಡನೆ ವಿದೇಶಿ ಕೃಷಿ ಉದ್ದಿಮೆಗಳೂ ಪ್ರವೇಶಿಸುತ್ತವೆ, ಇದರಿಂದ ಕನಿಷ್ಟ ಬೆಂಬಲ ಬೆಲೆ ಪದ್ಧತಿಗೂ ಪೆಟ್ಟಾಗುವುದಲ್ಲದೆ, ಸಾರ್ವಜನಿಕ ಸಂಗ್ರಹಣೆಯ ಪದ್ಧತಿಯೂ ಇಲ್ಲವಾಗುತ್ತದೆ ಎನ್ನುವ ರೈತರ ಆತಂಕ ನ್ಯಾಯಯುತವಾಗಿದೆ.
ಸಹಾಯಧನ ಪಡೆಯುವ ವಿದೇಶಿ ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳುವುದರಿಂದ ಭಾರತದಲ್ಲಿನ ಬಡ ಗ್ರಾಹಕರಿಗೆ ಅನುಕೂಲವಾಗುತ್ತದೆ ಎಂದು ಹಲವು ಕೃಷಿ ವಿಶ್ಲೇಷಕರು ಪ್ರತಿಪಾದಿಸುತ್ತಾರೆ. ಆದರೆ ಈ ಅಭಿವೃದ್ಧಿ ಹೊಂದಿದ ಶ್ರೀಮಂತ ರಾಷ್ಟ್ರಗಳಲ್ಲಿ ಹಸಿರು ಇಂಧನ ಬಳಕೆಯ ಆಗ್ರಹ ಹೆಚ್ಚಾಗುತ್ತಿದ್ದು ಹೆಚ್ಚಿನ ಪ್ರಮಾಣದ ಆಹಾರ ಧಾನ್ಯಗಳನ್ನು ಎಥನಾಲ್ ಉತ್ಪಾದನೆಗೆ ಬಳಕೆಯಾಗುತ್ತದೆ ಎನ್ನುವ ವಾಸ್ತವಾಂಶವನ್ನು ಈ ತಜ್ಞರು ಮರೆಮಾಚುತ್ತಿದ್ದಾರೆ.
ಹಾಗಾಗಿ ಇಂದು ಕಡಿಮೆ ಬೆಲೆಯ ಆಹಾರ ಧಾನ್ಯಗಳ ಆಮದು ಪ್ರಕ್ರಿಯೆಗೆ ಅವಕಾಶ ನೀಡಿದರೆ ಮುಂಬರುವ ದಿನಗಳಲ್ಲಿ ಇದರಿಂದ ಭಾರತದ ರೈತರು ವಿನಾಶದ ಅಂಚಿಗೆ ತಲುಪುವುದೇ ಅಲ್ಲದೆ, ಬೆಲೆ ಏರಿಕೆ ತೀವ್ರವಾಗಿ ಈ ಹಿಂದೆ ಕೆಲವು ಅಭಿವೃದ್ಧಿಶೀಲ ದೇಶಗಳು ಎದುರಿಸಿದ್ದ ಸಂಕಷ್ಟಗಳನ್ನೇ ಭಾರತವೂ ಎದುರಿಸಬೇಕಾಗುತ್ತದೆ. ತಮ್ಮ ಬೆವರು ಹರಿಸಿ ವ್ಯವಸಾಯದಲ್ಲಿ ತೊಡಗಿರುವ ಭಾರತದ ರೈತಾಪಿಯ ಬಗ್ಗೆ ಕಾಳಜಿ ಇರುವ ಯಾರೇ ಆದರೂ ಈ ಕೃಷಿ ಮಸೂದೆಗಳನ್ನು ವಿರೋಧಿಸುವುದೇ ಅಲ್ಲದೆ, ಸ್ಥಳೀಯ ಮತ್ತು ವಿದೇಶಿ ಉದ್ಯಮಿಗಳ ಕುತಂತ್ರಗಳ ವಿರುದ್ಧ ದನಿ ಎತ್ತಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ3 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ55 minutes agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


