Connect with us

ಅಂತರಂಗ

ರೈತ ಚಳುವಳಿ : ಒಂದು ಟಿಪ್ಪಣಿ

Published

on

  • ಪುರುಷೋತ್ತಮ ಬಿಳಿಮಲೆ

ದೇಶದ ರಾಜಧಾನಿಯ ವಿವಿಧ ಗಡಿ ಭಾಗಗಳಲ್ಲಿ ಲಕ್ಷಾಂತರು ರೈತರು ಚಳುವಳಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಚಳುವಳಿಯ ಬಗ್ಗೆ ಪ್ರಾಥಮಿಕ ತಿಳಿವಳಿಕೆಯನ್ನು ನೀಡುವುದು ಈ ಟಿಪ್ಪಣಿಯ ಉದ್ದೇಶ.

ಕೃಷಿ ಸುಧಾರಣೆ

ಪಾಶ್ಚಾತ್ಯ ದೇಶಗಳಲ್ಲಿ ಅಲ್ಲಿನ ಕೃಷಿ ಪದ್ಧತಿಯು ಸಾಧಿಸಿದ ಪ್ರಗತಿಯನ್ನು ನಮ್ಮ ದೇಶದ ಸಾಂಪ್ರದಾಯಕ, ಕೃಷಿ ಪದ್ಧತಿಯೊಡನೆ ಹೋಲಿಸಿ ನೋಡಿದಾಗ, ನಮ್ಮ ಕೃಷಿ ಪದ್ಧತಿಯಲ್ಲಿ ಸುಧಾರಣೆ ಅಗತ್ಯ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. 1990ರ ದಶಕದಲ್ಲಿ ಜ್ಯಾರಿಗೆ ಬಂದ ಉದಾರೀಕರಣ, ಜಾಗತೀಕರಣ ಮತ್ತು ಖಾಸಗೀಕರಣ ಪ್ರಕ್ರಿಯೆಗಳು ಅನ್ನದಾತನ ಬದುಕಲ್ಲಿ ಬದಲಾವಣೆಗಳನ್ನು ತರಲಿವೆ ಎಂದು ಈಗಿನಂತೆಯೇ ಆಗಲೂ ಹೇಳಲಾಗಿತ್ತು.

ಆದರೆ ಅಂತ ಬದಲಾವಣೆಗಳೇನೂ ಸಂಭವಿಸಲಿಲ್ಲ ಎಂಬುದನ್ನು ನಾವು ಗಮನಿಸಿದ್ದೇವೆ. ಸರಕಾರವೇ ನೀಡಿದ ಅಂಕಿ ಅಂಶಗಳ ಪ್ರಕಾರ1995ರಿಂದ 2019ರ ನಡುವೆ ಒಟ್ಟು 296438 ರೈತರು ನಮ್ಮ ದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ ಸರಕಾರದ ಲೆಕ್ಕಕ್ಕೆ ಸಿಗದ ಸಾವುಗಳು ಇದಕ್ಕಿಂತಲೂ ಹೆಚ್ಚಿರುತ್ತವೆ.

ರೈತರು ದಿಕ್ಕೆಟ್ಟಿದ್ದಾರೆ, ತಮ್ಮ ಜಮೀನನ್ನು ಕಳೆದುಕೊಂಡಿದ್ದಾರೆ. ಇದರ ಪರಿಣಾಮವೋ ಎಂಬಂತೆ2014 ರಿಂದ ರೈತ ಹೋರಾಟಗಳು ಶೇಕಡಾ 700ರಷ್ಟು ಹೆಚ್ಚಿವೆ. ಈಗ ನಡೆಯುತ್ತಿರುವುದು ಅವುಗಳ ಮುಂದುವರಿಕೆಯಾಗಿದೆ.

ಇಂಥ ಪರಿಸ್ಥಿತಿಯಲ್ಲಿ ಕೃಷಿ ಸುಧಾರಣೆಯನ್ನು ಹೇಗೆ ಮಾಡಬೇಕೆಂಬುದು ಬಹಳ ಮುಖ್ಯ ಪ್ರಶ್ನೆ. ಈ ಕುರಿತು 2006ರಷ್ಟು ಹಿಂದೆಯೇ ಸ್ವಾಮಿನಾಥನ್‌ ವರದಿ ತನ್ನ ಶಿಫಾರಸುಗಳನ್ನು ಸರಕಾರಕ್ಕೆ ಸಲ್ಲಿಸಿತ್ತು.

ಅದರಲ್ಲಿ ಭೂಮಿಯ ಹಂಚಿಕೆ, ನೀರಾವರಿ, ರೈತರ ಭೂಮಿಯ ಮಾರಾಟ ಇತ್ಯಾದಿ ವಿಷಯಗಳ ಕುರಿತು ಅತ್ಯಂತ ಉಪಯುಕ್ತವಾದ ಸಲಹೆಗಳಿದ್ದುವು. ಆದರೆ ಆ ಮೇಲೆ ಅಧಿಕಾರಕ್ಕೆ ಬಂದ ಯುಪಿಎ ಮತ್ತು ಎನ್‌ಡಿಯೆ ಸರಕಾರಗಳು ಸ್ವಾಮಿನಾಥನ್‌ ವರದಿಯನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಯಾಕೆ ಪರಿಗಣಿಸುವುದಿಲ್ಲ ಎಂದು ಹೇಳಲೂ ಇಲ್ಲ, ನಾವು ಕೇಳಲೂ ಇಲ್ಲ.

ಮೂರು ಹೊಸ ಕಾಯ್ದೆಗಳು

ಕೃಷಿ ವಿಷಯಕವಾದ ಪ್ರಶ್ನೆಗಳ ಗಹನತೆಯನ್ನು ಅರ್ಥಮಾಡಿಕೊಳ್ಳದ ಪ್ರಸ್ತುತ ಸರಕಾರವು ಜನರೆಲ್ಲ ಕೊರೋನಾ ಭಯದಿಂದ ತತ್ತರಿಸುತ್ತಿರುವಾಗ, ಲೋಕ ಸಭೆ, ರಾಜ್ಯ ಸಭೆಗಳಲ್ಲಿ ವಿಸ್ತೃತ ಚರ್ಚೆಯನ್ನೂ ಮಾಡದೆ, ಈಗ ವಿವಾದಾಸ್ಪದವಾಗಿರುವ ಮೂರು ಕಾಯ್ದೆಗಳನ್ನು ತರಾತುರಿಯಿಂದ ( 2019ರ ಸಪ್ಟಂಬರ ತಿಂಗಳ 20ರಂದು) ಅಂಗೀಕರಿಸಿತು. ಈ ಮೂರು ಕಾಯ್ದೆಗಳನ್ನು ಸಂಕ್ಷಿಪ್ತವಾಗಿ ಈ ಕೆಳಗಿನಂತೆ ವಿವರಿಸಬಹುದು.

1. ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಸುಗ್ರೀವಾಜ್ಞೆ 2020

ಇದರ ಪ್ರಕಾರ, ಎಪಿಎಂಸಿ-ನಿಯಂತ್ರಿತ ಮಂಡಿಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಲ್ಲಿಯೂ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸಾಧ್ಯವಿದೆ. ಮೇಲ್ನೋಟಕ್ಕೆ ಇದು ಮುಕ್ತ ವ್ಯವಸ್ಥೆಯಂತೆ ಕಂಡರೂ ನಿಧಾನವಾಗಿ ಅದು ಎಪಿಎಂಸಿಗಳನ್ನು ಸ್ಥಗಿತಗೊಳಿಸುತ್ತದೆ.

ಜೊತೆಗೆ ಸರಕಾರವು ಈಗ ನೀಡುತ್ತಿರುವ ಅನೇಕ ಬಗೆಯ ಸಬ್ಸಿಡಿಗಳನ್ನು ನಿಧಾನವಾಗಿ ಕೊನೆಗೊಳಿಸುತ್ತದೆ. ಕೃಷಿಯು ಸರಕಾರದ ಕೈ ತಪ್ಪಿದ ತಕ್ಷಣ ಖಾಸಗಿಯವರು ರೈತರೊಡನೆ ಆಟವಾಡಲು ಸುರು ಮಾಡುತ್ತಾರೆ. ಈ ಆಟಕ್ಕೆ ಕೊನೆಯೇ ಇರುವುದಿಲ್ಲ. ನಮ್ಮ ದೇಶದಲ್ಲಿ ಇನ್ನೂ 68.8 ಶೇಕಡಾ ಜನರು ( ಸುಮಾರು 80 ಕೋಟಿ) ಬಡತನದ ರೇಖೆಯಿಂದ ಕೆಳಗಿರುವಾಗ ಸರಕಾರವು ಇಂತ ಜವಾಬ್ದಾರಿಗಳಿಂದ ತನ್ನನ್ನು ಈಗಲೇ ಮುಕ್ತಗೊಳಿಸಿಕೊಂಡರೆ ಇನ್ನಷ್ಟು ಅಪಾಯಗಳು ಸಂಭವಿಸುತ್ತವೆ.

2. ಅಗತ್ಯ ಸರಕುಗಳ (ತಿದ್ದುಪಡಿ) ಸುಗ್ರೀವಾಜ್ಞೆ, 2020

ಇದನ್ನು ʼಕೃಷಿ ಉದ್ಯಮದ ಮೂಲಕ ಆಹಾರ ಸಂಗ್ರಹಣೆ ಸ್ವಾತಂತ್ರ್ಯದ ಸುಗ್ರೀವಾಜ್ಞೆʼ ಎಂದು ಕರೆಯಬಹುದು. ಈ ಕಾಯ್ದೆಯ ಪ್ರಕಾರ, ಆರ್ಥಿಕ ಏಜೆಂಟರು ಯಾವುದೇ ಕಾನೂನು ಕ್ರಮದ ಭಯವಿಲ್ಲದೆ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿಡಬಹುದು. ಒಬ್ಬ ರೈತನಿಗೆ ಏನಾದರೂ ಅನ್ಯಾಯವಾದರೆ, ಆತ ನ್ಯಾಯಾಲಯಕ್ಕೆ ಹೋಗುವಂತಿಲ್ಲ, ಬದಲು ಸ್ಥಳೀಯವಾಗಿಯೇ ಪರಿಹರಿಸಿಕೊಳ್ಳಬೇಕು.

ಒಂದು ಕಾಯ್ದೆಯನ್ನು ಹೀಗೆ ನ್ಯಾಯಾಂಗ ವ್ಯವಸ್ಥೆಯಿಂದಲೇ ಹೊರಗಿಟ್ಟಿರುವುದು ಇದುವೇ ಪ್ರಥಮ. ಇಂಥಲ್ಲಿ ದಾಸ್ತಾನುಗಾರರು ಕೃತಕ ಅಭಾವ ಸೃಷ್ಟಿಸಿ, ಬೆಲೆ ಏರಿಕೆ ಮಾಡಿದರೆ ಸರಕಾರವೂ ಸೇರಿದಂತೆ ಯಾರಿಗೂ ಏನೂ ಮಾಡಲಾಗದು. ದಾಸ್ತಾನುಗಾರರು ದೇಶದ ಹಲವು ಕಡೆಗಳಲ್ಲಿ ನೀರುಳ್ಳಿಯ ಕೃತಕ ಅಭಾವ ಸೃಷ್ಟಿಸಿ ಕಿಲೋ ಒಂದಕ್ಕೆ 300 ರೂಪಾಯಿ ವಸೂಲಿ ಮಾಡುವಾಗ ಯಾವ ಸರಕಾರಗಳಿಗೂ ಏನೂ ಮಾಡಲಾಗಲಿಲ್ಲ.

ನಾಳೆ ಅಕ್ಕಿ, ಗೋಧಿ, ಎಣ್ಣೆ, ಬೇಳೆಗಳಿಗೆ ಹೀಗಾಗುವ ಸಾಧ್ಯತೆಗಳು ನಮ್ಮ ಕಣ್ಣ ಮುಂದೆಯೇ ನಿಂತಿವೆ. ಅಗತ್ಯ ವಸ್ತು ಬೆಲೆ ನಿಯಂತ್ರಣ ಇಲ್ಲವಾಗುವುದರಿಂದ ರೈತರೂ ಸೇರಿದಂತೆ ಎಲ್ಲರೂ ವಿಪರೀತ ಬೆಲೆ ಏರಿಕೆಗೆ ಬಲಿಯಾಗಬೇಕಾಗುತ್ತದೆ.

3 . ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆಗಳ ಖಾತರಿ ಒಪ್ಪಂದದ ಭರವಸೆ ಮತ್ತು ಕೃಷಿ ಸೇವೆಗಳ ಸುಗ್ರೀವಾಜ್ಞೆ 2020

ಇದನ್ನು ಗುತ್ತಿಗೆ ಕೃಷಿ ಸುಗ್ರೀವಾಜ್ಞೆಯೆಂದು ಹೇಳಲಾಗುತ್ತಿದೆ. ಈ ಕಾಯ್ದೆಯು ಕಾರ್ಪೋರೇಟ್‌ ಕಂಪೆನಿಗಳು ಕೃಷಿಗೆ ಪ್ರವೇಶಿಸಲು ಒಂದು ಚೌಕಟ್ಟನ್ನು ಒದಗಿಸಿಕೊಡುತ್ತದೆ. ಇದರ ಪ್ರಕಾರ ಆರೋಗ್ಯಕರ ಸಂಭಾವನೆಗೆ ಪ್ರತಿಯಾಗಿ ಕಂಪೆನಿಯು ಬಯಸಿದ್ದನ್ನು ಉತ್ಪಾದಿಸಲು ಕಂಪನಿಯೊಂದಿಗೆ ರೈತರು ಲಿಖಿತ ಒಪ್ಪಂದಕ್ಕೆ ಸಹಿ ಹಾಕಬೇಕು.

ಈ ಸಹಿಯು ರೈತನ ಭೂಮಿಯ ಹಕ್ಕನ್ನು ಕಿತ್ತುಕೊಳ್ಳುವುದಿಲ್ಲ, ಬದಲು ಬೆಳೆಯ ಹಕ್ಕನ್ನು ಕಿತ್ತುಕೊಳ್ಳುತ್ತದೆ. ಪರೋಕ್ಷವಾಗಿ ತಮ್ಮದೇ ಜಮೀನಿಗೆ ರೈತರು ತಾವೇ ಕೂಲಿಯಾಳುಗಳಾಗುತ್ತಾರೆ. ಕ್ಷಿಪ್ರವಾಗಿ ಹಣ ಮಾಡುವ ಕಲೆಯಲ್ಲಿ ನುರಿತರಾಗಿರುವ ಕಾರ್ಪೊರೇಟ್‌ ಕಂಪೆನಿಗಳು, ಹೆಚ್ಚು ಉತ್ಪಾದಿಸಲು ಬಗೆ ಬಗೆಯ ರಾಸಾಯನಿಕಗಳನ್ನು ಬಳಸಿ, ಭೂಮಿಯನ್ನು ಬಂಜರುಗೊಳಿಸುತ್ತವೆ. ಪಂಜಾಬ್‌, ಹರಿಯಾಣಗಳಲ್ಲಿ ಈಗ ಆದದ್ದು ಇದುವೇ. ಇದರಿಂದ ಅಲ್ಲಿಯ ರೈತರು ಎಚ್ಚತ್ತಿದ್ದಾರೆ, ಆದರೆ ಉಳಿದವರಿಗೆ ಅಪಾಯದ ಅರಿವಿದ್ದಂತಿಲ್ಲ.

ಇತರ ಸಮಸ್ಯೆಗಳು

ಕಾಯ್ದೆಗಳ ಈ ಸಮಸ್ಯೆಗಳೊಂದಿಗೆ ಇನ್ನಷ್ಟು ಪ್ರಶ್ನೆಗಳೂ ಸೇರಿಕೊಂಡು ಈಗ ಸಂಕೀರ್ಣವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲಿ ಬಹಳ ಮುಖ್ಯವಾದದ್ದೆಂದರೆ, ಸಂವಿಧಾನದ ಪ್ರಕಾರ ಕೃಷಿಯು ರಾಜ್ಯ ಸರಕಾರದ ಆಧೀನದಲ್ಲಿ ಬರುತ್ತದೆ. ಅದು ಸರಿ ಕೂಡಾ ಹೌದು. ಏಕೆಂದರೆ ರಾಜ್ಯ ಸರಕಾರಗಳಿಗೆ ತಮ್ಮ ರಾಜ್ಯದ ವ್ಯಾಪ್ತಿಯಲ್ಲಿ ಬರುವ ಭೂಮಿಯ ಗುಣ, ಬೆಳೆಗಳು, ನೀರಾವರಿ, ಬೇಸಾಯದ ಕ್ರಮಗಳು, ರೈತರ ನಂಬುಗೆಗಳು ಇತ್ಯಾದಿಗಳ ಬಗ್ಗೆ ಸಾಕಷ್ಟು ತಿಳಿವಳಿಕೆ ಇರುತ್ತದೆ.

ಹೀಗಿರುವಾಗ, ಕೇಂದ್ರ ಸರಕಾರವು ಏಕಾ ಏಕಿ ಕೃಷಿ ಕಾಯ್ದೆಗಳನ್ನು ತಾನು ಚಾಲ್ತಿಗೆ ತಂದದ್ದು ಸಂವಿಧಾನ ವಿರೋಧೀ ನಡೆಯಾಗುತ್ತದೆ. ಈ ಕುರಿತ ಕೇಸೊಂದು ಸುಪ್ರೀಂ ಕೋರ್ಟಲ್ಲಿ ದಾಖಲಾಗಿದೆ. ಆದರೆ ಸುಪ್ರೀಂ ಕೋರ್ಟು ಅದನ್ನು ಆದ್ಯತೆಯ ಮೇಲೆ ಚರ್ಚೆಗೆ ತೆಗೆದುಕೊಳ್ಳದ್ದರಿಂದ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇದೆ.

ಸರಕಾರವು ಇದೇ ರೀತಿ ವಿದ್ಯುತ್‌ ಕಾಯ್ದೆಯಲ್ಲಿಯೂ ಬದಲಾವಣೆ ತಂದಿದೆ. ಸಂವಿಧಾನದ ಪ್ರಕಾರ ವಿದ್ಯುತ್‌, ರಾಜ್ಯ ಮತ್ತು ಕೇಂದ್ರ ಸರಕಾರಗಳು ಜಂಟಿಯಾಗಿ ನಿರ್ವಹಿಸಬೇಕಾದ ಕನ್ಕರೆಂಟ್‌ ಪಟ್ಟಿಯಲ್ಲಿ ಬರುತ್ತದೆ. ಆದರೆ ಕೇಂದ್ರ ಸರಕಾರ ಇದನ್ನು ಪರಿಗಣಿಸದೆ, ಏಕಾ ಏಕಿ ತಾನೇ ನಿರ್ಧಾರ ತೆಗೆದುಕೊಂಡಿರುವುದೂ ಸಂವಿಧಾನ ಬಾಹಿರ ಕ್ರಮವಾಗಿದೆ.

ಕೇಂದ್ರೀಕರಣ

ದೇಶದ ಅತಿ ಮುಖ್ಯ ಸಂಗತಿಗಳೆಲ್ಲ ಹೀಗೆ ಕೇಂದ್ರ ಸರಕಾರದ ಕೈ ಕೆಳಗೆ ಬಂದರೆ ಖಾಸಗಿಯವರ ಕೆಲಸ ಸುಲಭವಾಗುತ್ತದೆ. ಅವರಿಗೆ ಈಗ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಆಗಬೇಕಿಲ್ಲ. ಬದಲು ಒಂದು ಕೇಂದ್ರದ ಮೂಲಕ ಇಡೀ ದೇಶವನ್ನೇ ಆಕ್ರಮಿಸಿಕೊಳ್ಳಬಹುದು. ಸಾಮಾಜಿಕ ನ್ಯಾಯಕ್ಕಾಗಿ ಇನ್ನೂ ಹಪಹಪಿಸುತ್ತಿರುವ ಭಾರತದಂಥ ದೇಶದಲ್ಲಿ ಇಂಥ ಬೆಳವಣಿಗೆಗಳು ಬಡತನವನ್ನು ಇನ್ನಷ್ಟು ಹೆಚ್ಚು ಮಾಡಿ ಆಳದಲ್ಲಿ ದೇಶವನ್ನು ದುರ್ಬಲಗೊಳಿಸುತ್ತದೆ.

ಕೊನೆಮಾತು

ಇವತ್ತು ಭಾರದಲ್ಲಿ ನಡೆಯುತ್ತಿರುವ ರೈತ ಚಳುವಳಿಯು ಅತ್ಯಂತ ಮಹತ್ವದ ಘಟನೆ ಎಂಬುದನ್ನು ಜಗತ್ತು ಒಪ್ಪಿಕೊಂಡಿದೆ. ಇದು ಕೇಂದ್ರ ಮತ್ತು ರಾಜ್ಯಗಳ ನಡುವಣ ಸಂಬಂಧಗಳನ್ನು (ಫೆಡರಲ್‌ ರಚನೆ) ಪರಿಶೀಲಿಸಲು ಒತ್ತಾಯಿಸಿದೆ. ಕೃಷಿಭೂಮಿಯ ಖಾಸಗೀಕರಣವು ಭಾರತದಂಥ ಅಭಿವೃದ್ಧಿ ಶೀಲ ದೇಶದಲ್ಲಿ ಉಂಟು ಮಾಡಬಹುದಾದ ಅನಾಹುತಗಳ ಬಗ್ಗೆ ಎಲ್ಲೆಡೆಯೂ ಚರ್ಚೆ ನಡೆಯುತ್ತಿದೆ.

ತತ್ಕಾಲೀನ ರಾಜಕೀಯ ಲಾಭಗಳನ್ನು ಬದಿಗಿರಿಸಿ ಎಲ್ಲರೂ ಈ ಕುರಿತು ಯೋಚಿಸಿದರೆ ಬಹಳ ಪ್ರಯೋಜನವಿದೆ. ಇದು ಸಾಧ್ಯವಾಗಲು, ಸರಕಾರವು ಈಗ ಗಡಿಬಿಡಿಯಿಂದ ಜ್ಯಾರಿಗೆ ತಂದ ಮೂರೂ ಕಾಯ್ದೆಗಳನ್ನು ಹಿಂಪಡೆಯಬೇಕು. ಕೃಷಿ ಅಭಿವೃದ್ಧಿಯ ಕುರಿತು ಚರ್ಚಿಸಲೆಂದೇ ವಿಶೇಷ ಪಾರ್ಲಿಮೆಂಟ್‌ ಅಧಿವೇಶನವನ್ನು ಕರೆಯಬೇಕು. ಅದಕ್ಕೂ ಮುನ್ನ ರೈತರೊಂದಿಗೆ, ಕೃಷಿ ತಜ್ಞರೊಂದಿಗೆ, ರಾಜ್ಯ ಸರಕಾರಗಳೊಂದಿಗೆ ಕೇಂದ್ರವು ಮುಕ್ತವಾದ ಚರ್ಚೆಯನ್ನು ನಡೆಸಬೇಕು. ಸ್ವಾಮಿನಾಥನ್‌ ವರದಿ ಯಾಕೆ ಬೇಡವೆಂದು ಜನರಿಗೆ ಹೇಳಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending