ದಿನದ ಸುದ್ದಿ
ರಿಹನ್ನಾಗ್ರೇಟಾ; ಮೀನಾ ಗ್ರೇಟಾ, ಮೋದಿ ಗ್ರೇಟಾ..?
- ನಾಗೇಶ್ ಹೆಗಡೆ, ಹಿರಿಯ ಪತ್ರಕರ್ತರು
[ಮೂವರು ಯುವತಿಯರು ಭಾರತ ಸರಕಾರವನ್ನು ಕಂಗೆಡಿಸಿ ದಂಗುಬಡಿಸಿ, ಭಕ್ತರ ನಿದ್ದೆಗೆಡಿಸಿದ ಕತೆ]
ರೈತರ ಟ್ರ್ಯಾಕ್ಟರ್ಗಳು ಮತ್ತೊಮ್ಮೆ ದಿಲ್ಲಿಗೆ ಬಾರದಂತೆ, ಕೇಂದ್ರ ಸರಕಾರ ಮೊಳ ಉದ್ದ ಮೊಳೆಗಳನ್ನು, ಮೈಲುದ್ದದ ಮುಳ್ಳುಬೇಲಿಯನ್ನು ಹಾಕಿದ್ದನ್ನು ನೋಡಿ ಜಗತ್ತೇ ಬೆರಗಾಯಿತು.
ಪ್ರಜಾಪ್ರಭುತ್ವದ ಬಾಯಿಗೇ ಹೊಲಿಗೆ ಹಾಕುವಂತೆ ರೈತರ ಮೊಬೈಲ್ಗಳಿಗೆ ಸಿಗ್ನಲ್ಲೇ ಬಾರದಂತೆ ಮಾಡಿ, ರೈತರ ಟಾಯ್ಲೆಟ್ಗೂ ನೀರಿಲ್ಲದಂತೆ, ಧ್ವನಿವರ್ಧಕಕ್ಕೂ ಕರೆಂಟ್ ಇಲ್ಲದಂತೆ ಮಾಡಿದ್ದನ್ನು ನೋಡಿ ಜಗತ್ತು ದಂಗಾಯಿತು.
“ರೈತ ಹೋರಾಟಕ್ಕೆ ನನ್ನ ಬೆಂಬಲವಿದೆ” ಎಂದು ಮೂವರು ವಿದೇಶೀ ಯುವತಿಯರು ಟ್ಟೀಟ್ ಮಾಡಿದ್ದೇ ತಡ, ಸರಕಾರ ಧಿಗ್ಗನೆದ್ದಿತು. ಹೀಗೆ ಟ್ವೀಟ್ ಮಾಡಿದ್ದೇ ಭಾರೀ ಕ್ರಿಮಿನಲ್ ಕೆಲಸವೆಂಬಂತೆ ದಿಲ್ಲಿ ಪೊಲೀಸರು ಎಫ್ಐಆರ್ ಹಾಕಿದರು. ಜಗತ್ತು ನಕ್ಕಿತು.
ಟ್ವೀಟ್ ಮಾಡಿದ್ದು ಯಾರು? 1. ರೆಹನ್ನಾ ಹೆಸರಿನ ಒಬ್ಬ ಖ್ಯಾತ ಹಾಡುಗಾರ್ತಿ (ಗ್ಯಾರಿ ಸೋಬರ್ಸ್ ಎಂಬ ಕ್ರಿಕೆಟಿಗನ ತಾಯ್ನಾಡಾದ ಬಾರ್ಬಡೋಸ್ ದೇಶದವಳು). 2. ಹದಿಹರಯದ ಗ್ರೇಟಾ ಥನ್ಬರ್ಗ್ ಎಂಬ ಪರಿಸರ ಹೋರಾಟಗಾರ್ತಿ; 3ನೆಯವಳು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸೊಸೆ (ಅಡ್ವೊಕೇಟ್) ಮೀನಾ ಹ್ಯಾರಿಸ್.
ʼವಿಶ್ವಗುರುʼ ಎನ್ನಿಸಿಕೊಳ್ಳಲು ಪರಿಶ್ರಮಿಸುತ್ತಿರುವ ಭಾರತ ದೇಶ ಈ ಟ್ವೀಟ್ಗಳನ್ನು ಕಡೆಗಣಿಸಬಹುದಿತ್ತು. ಇಷ್ಟಕ್ಕೂ ಈ ಮೂವರಲ್ಲಿ ಯಾರೂ ನಮ್ಮ ದೇಶದ ಶಾಂತಿಯನ್ನು ಕದಡುವ ಯತ್ನ ಮಾಡಲಿಲ್ಲ. ದಂಗೆ ಏಳಿರೆಂದು ಕರೆ ಕೊಟ್ಟಿಲ್ಲ. ಶಸ್ತ್ರ ಕೈಗೆತ್ತಿಕೊಳ್ಳಲು ಪ್ರಚೋದನೆ ನೀಡಲಿಲ್ಲ.
ಜಗತ್ತಿನ ಯಾವ ದೇಶದಲ್ಲಾದರೂ ಅಲ್ಲಿನ ಸರಕಾರ ಕೋಟ್ಯಂತರ ಜನರ ಧ್ವನಿಯನ್ನು ಹತ್ತಿಕ್ಕುವ ಯತ್ನ ನಡೆಸಿದ್ದರೆ ಅಂತಃಕರಣ ಇರುವವರು ಯಾವ ದೇಶದವರಾಗಿದ್ದರೂ ಖಂಡಿಸುತ್ತಾರೆ. ಖಂಡಿಸಬೇಕು. ನಾವು ಮಯನ್ಮಾರ್ ವಿದ್ಯಮಾನವನ್ನು ಖಂಡಿಸುತ್ತೇವೆ. ಈ ಮೂವರು ಮಹಿಳೆಯರು ತಮ್ಮ ಟ್ವೀಟ್ನಲ್ಲಿ ಯಾರನ್ನೂ ಖಂಡಿಸಲೂ ಇಲ್ಲ. ಸುಮ್ಮನೆ ʼಭಾರತದ ರೈತರ ಶಾಂತಿಪೂರ್ಣ ಹೋರಾಟಕ್ಕೆ ನಮ್ಮ ಬೆಂಬಲವಿದೆʼ ಎಂದರು ಅಷ್ಟೆ.
ಕಳೆದ 75 ದಿನಗಳಿಂದ ಲಕ್ಷಾಂತರ ರೈತರು ತಮ್ಮ ಜಾತಿ, ಧರ್ಮ, ಭಾಷೆ, ಪಕ್ಷ ಪಂಥ ಎಲ್ಲವನ್ನೂ ಮರೆತು ಒಗ್ಗಟ್ಟಿನಿಂದ ಚಳಿಮಳೆಗೂ ಬಗ್ಗದೆ ಹರತಾಳ ಆಚರಿಸುತ್ತಿದ್ದಾರೆ. ಸುಮಾರು 120 ಜನರು ಸಾವಪ್ಪಿದ್ದಾರೆ. ಅನುಕಂಪವುಳ್ಳ ಯಾರಾದರೂ ಹೇಳುವ ಮಾತು ಅದು.
ಅಷ್ಟಕ್ಕೇ ಧಿಗ್ಗನೆದ್ದ ಸರಕಾರ, ವಿದೇಶಾಂಗ ಸಚಿವರ ಮೂಲಕ “ಭಾರತದ ವಿರುದ್ಧ ಅಪ ಪ್ರಚಾರ ಕೂಡದು” ಎಂಬರ್ಥದ ಟ್ವೀಟ್ ಮಾಡಿಸಿತು. “ಭಾರತದ ಐಕ್ಯತೆಗೆ ಧಕ್ಕೆ ತರಲೆಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆದ ಭಾರೀ ಕುತಂತ್ರ ಇದು” ಎಂದು ಕಪಿಲ್ ಮಿಶ್ರಾ ಎಂಬ ದಿಲ್ಲಿಯ ಬಿಜೆಪಿ ರಾಜಕಾರಣಿ ಘೋಷಿಸಿದರು (ಈತನ ಉದ್ರೇಕಕಾರಿ ಭಾಷಣದಿಂದಾಗಿಯೇ ಕಳೆದ ವರ್ಷ ದಿಲ್ಲಿಯಲ್ಲಿ ಕೋಮುದಂಗೆ ಭುಗಿಲೆದ್ದು 23 ಜನರು ಪ್ರಾಣ ತೆರುವಂತಾಯಿತು-ಅದಿರಲಿ).
ಈ ಯುವತಿಯರ ಟ್ವೀಟ್ ನಿಂದ ಭಾರತದ ಐಕ್ಯತೆಗೆ ಈಗ ಅದೇನು ಧಕ್ಕೆ ಬಂತೊ?
ಅಷ್ಟಕ್ಕೇ ಮುಗಿದಿದ್ದರೆ ಬೇರೆ ಮಾತಿರಲಿಲ್ಲ. ಆದರೆ , ಭಾರತ ಸರಕಾರ ಬಾಲಿವುಡ್ ಸ್ಟಾರ್ಗಳನ್ನು ಹಿಡಿದು ಅವರ ಮೂಲಕ ಮುಯ್ಯಿ ಮರುಟ್ವೀಟ್ ಮಾಡಿಸಲು ಮುಂದಾಯಿತು.
“ಭಾರತದ ಸಾರ್ವಭೌಮತ್ವದ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ನಮ್ಮ ಸಮಸ್ಯೆಗಳ ಪರಿಹಾರಕ್ಕೆ ಹೊರಗಿನವರು ಬೇಕಾಗಿಲ್ಲ” ಎಂಬರ್ಥದಲ್ಲಿ ಭಾರತರತ್ನದ್ವಯ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಸೇರಿದಂತೆ, ಕ್ರಿಕೆಟಿಗ ಕುಂಬ್ಳೆ, ವಿರಾಟ್ ಕೊಹ್ಲಿ, ಬಾಲಿವುಡ್ ನಟ ಅಕ್ಷಯ ಕುಮಾರ್, ಕರಣ್ ಜೋಹರ್ ಮುಂತಾದವರ ಮೂಲಕ ಆಲ್ಮೋಸ್ಟ್ ಏಕರೂಪದ ಟ್ವೀಟ್ ಮಾಡಿಸಲಾಯಿತು. ಗ್ರೇತಾ ಥನ್ಬರ್ಗ್ ವಿರುದ್ಧ ಎಫ್ಐಆರ್ ಹಾಕಿತು.
ಜಗತ್ತು ಗೊಳ್ಳೆಂದು ನಕ್ಕಿತು.
ಮೂವರು ವನಿತೆಯರಿಂದ ಭಾರತ ಸರಕಾರದ ಜಂಘಾಬಲ ಉಡುಗಿತೆ? ಅಷ್ಟೊಂದು ದುರ್ಬಲವೆ ನಮ್ಮ ದೇಶ? ಕಳೆದ ವರ್ಷ ಇದೇ ದಿನಗಳಲ್ಲಿ ಅಹಮ್ಮದಾಬಾದಿನ ಕೊಳೆಗೇರಿಗಳು ಟ್ರಂಪ್ ಕಣ್ಣಿಗೆ ಬೀಳಬಾರದೆಂದು ಉದ್ದುದ್ದ ಗೋಡೆ ಕಟ್ಟುವ ಕೆಲಸ ನಡೆದಿತ್ತು. ಈಗ ಮುಷ್ಕರನಿರತ ರೈತರು ಮಾಧ್ಯಮಗಳ ಕಣ್ಣಿಗೆ ಬೀಳಬಾರದೆಂದು ಬಂಗಾರ ಬಣ್ಣದ ಲೋಹದ ಗೋಡೆಗಳನ್ನು, ದಿಲ್ಲಿಯ ಹೊರವಲಯದಲ್ಲಿ ನಿರ್ಮಿಸಲಾಗಿದೆ. ಚೀನಾ ಗಡಿಯಲ್ಲೂ ಕಾಣಲಾಗದ ಬಿಗಿ ಭದ್ರತೆಯನ್ನು ಹೆದ್ದಾರಿಯಲ್ಲಿ ಜಡಿದು, ಅಂಬುಲೆನ್ಸ್ ಕೂಡ ಓಡಾಡಲಾಗದಂತೆ ಮಾಡಲಾಗಿದೆ.
ನಮ್ಮ ದೇಶದ ವಾಸ್ತವಗಳನ್ನು ಮರೆಮಾಚಲು ಹೀಗೆಲ್ಲ ಯತ್ನಿಸಿ ನಗೆಪಾಟಲಿಗೆ ತುತ್ತಾಗುವುದರಿಂದ ರಾಷ್ಟ್ರದ ಘನತೆ ಹೆಚ್ಚುತ್ತದೆಯೆ? ಘನತೆಗೆ ವಿಶೇಷ ಮೆರುಗು ಕೊಡಲೆಂದು ಸಚಿನ್ ತೆಂಡೂಲ್ಕರಂಥ ಹೆಕ್ಕಿ ತೆಗೆದ ಹೀರೋಗಳ ಮೂಲಕ ಟ್ವೀಟ್ ಮಾಡಿಸಲು ಹೋಗಿ ಅವರನ್ನೂ ನಗೆಪಾಟಲಿಗೆ ತುತ್ತಾಗಿಸಿದ್ದು ಸರಿಯೆ?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ
ಸುದ್ದಿದಿನ,ದಾವಣಗೆರೆ:ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಅಪಾರ ಜನಸ್ತೋಮದೊಂದಿಗೆ ಸೋಮವಾರ ಸಂಜೆ ಜರುಗಿತು.
ಡಾ; ಶಾಮನೂರು ಶಿವಶಂಕರಪ್ಪನವರಿಗೆ 95 ವರ್ಷವಾಗಿದ್ದು ವಯೋಸಹಜ ಅನಾರೋಗ್ಯದಿಂದ ಡಿಸೆಂಬರ್ 14 ರಂದು ನಿಧನ ಹೊಂದಿದ್ದರು. 6 ಭಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ಸುಧೀರ್ಘ ರಾಜಕೀಯ ಸೇವೆಯಲ್ಲಿದ್ದ ಇವರು ರಾಜ್ಯ ಸೇರಿದಂತೆ ದಾವಣಗೆರೆಗೆ ಹೊಸ ರೂಪಕೊಟ್ಟಿದ್ದರು.
ಸೋಮವಾರ ಬೆಳಗ್ಗೆ 7.30 ಗಂಟೆಯಿಂದ ಪಾರ್ಥಿವ ಶರೀರಕ್ಕೆ ಸ್ವಗೃಹದಲ್ಲಿ ಕುಟುಂಬಸ್ಥರ ವಿವಿಧ ಪೂಜೆ ಪುನಸ್ಕಾರಗಳೊಂದಿಗೆ ವಿಧಿ ವಿಧಾನಗಳು ನಡೆದು, ಮಧ್ಯಾಹ್ನದಿಂದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಸಾವಿರಾರು ಜನರು ಆಗಮಿಸಿ ಸರತಿ ಸಾಲಿನಲ್ಲಿ ಅಂತಿಮ ದರ್ಶನ ಪಡೆದರು.
ಮಧ್ಯಾಹ್ನ 3.30 ರಿಂದ ಹೈಸ್ಕೂಲ್ ಮೈದಾನದಿಂದ ಹೊರಟು ಹಳೇ ದಾವಣಗೆರೆ ಮಂಡಿಪೇಟೆ, ಕಾಯಿಪೇಟೆ, ಅರಳಿವೃತ್ತದ ಮೂಲಕ ಕಲ್ಲೇಶ್ವರ ಮಿಲ್ಗೆ ಪಾರ್ಥಿವ ಶರೀರ ತಲುಪಿತು. ಸಂಜೆ 4.30 ರಿಂದ ಅಂತಿಮ ವಿಧಿ ವಿಧಾನಗಳು ನಡೆದವು.
ಅಂತಿಮ ಸಂಸ್ಕಾರದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಉಪ ಮುಖ್ಯಮಂತ್ರಿಯವರಾದ ಡಿ.ಕೆ.ಶಿವಕುಮಾರ್ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು, ಇಂಧನ ಸಚಿವರಾದ ಕೆ.ಜೆ.ಜಾರ್ಜ್ರವರು, ಸಮಾಜ ಕಲ್ಯಾಣ ಸಚಿವರಾದ ಡಾ; ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ.ಎಸ್.ಪಾಟೀಲ, ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಸೇರಿದಂತೆ ಶಾಸಕರು ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.
ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ರಾಷ್ಟ್ರಧ್ವಜವನ್ನು ಪಾರ್ಥಿವ ಶರೀರಕ್ಕೆ ಹೊದಿಸಿ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ನಂತರ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿ ಅಂತಿಮವಾಗಿ ಶೋಕ ವ್ಯಕ್ತಪಡಿಸಲಾಯಿತು. ರಾಷ್ಟ್ರಧ್ವಜವನ್ನು ಅವರ ಪುತ್ರರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಸ್ತಾಂತರಿಸಿದರು. ನಂತರ ಸಾಂಪ್ರದಾಯಿಕ ಪೂಜೆ, ವಿಧಿ, ವಿಧಾನಗಳೊಂದಿಗೆ ಪಾರ್ಥಿವ ಶರೀರವನ್ನು ಐಕ್ಯ ಮಂಟಪದಲ್ಲಿ ಇಡಲಾಯಿತು.
ಡಾ; ಶಾಮನೂರು ಶಿವಶಂಕರಪ್ಪನವರ ಪುತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸೊಸೆ ಹಾಗೂ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್, ಇನ್ನಿಬ್ಬರು ಪುತ್ರರಾದ ಎಸ್.ಎಸ್.ಬಕ್ಕೇಶ್, ಎಸ್.ಎಸ್.ಗಣೇಶ್ ಸೇರಿದಂತೆ ಶಾಮನೂರು ಶಿವಶಂಕರಪ್ಪನವರ ಕುಟುಂಬಸ್ಥರು ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಸ್.ಆರ್.ಬೊಮ್ಮಾಯಿ, ಗೃಹ ಸಚಿವರಾದ ಜಿ.ಪರಮೇಶ್ವರ್, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಬಿ.ಜೆ.ಪಿ.ಪಕ್ಷದ ರಾಜ್ಯಾದ್ಯಕ್ಷರಾದ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಶಾಸಕರು, ವಿಧಾನ ಪರಿಷತ್ ಸದಸ್ಯರು ಅಂತಿಮ ದರ್ಶನ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ7 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ4 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ3 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ3 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
-
ದಿನದ ಸುದ್ದಿ4 hours agoಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ

