ದಿನದ ಸುದ್ದಿ
ರಿಹನ್ನಾಗ್ರೇಟಾ; ಮೀನಾ ಗ್ರೇಟಾ, ಮೋದಿ ಗ್ರೇಟಾ..?
- ನಾಗೇಶ್ ಹೆಗಡೆ, ಹಿರಿಯ ಪತ್ರಕರ್ತರು
[ಮೂವರು ಯುವತಿಯರು ಭಾರತ ಸರಕಾರವನ್ನು ಕಂಗೆಡಿಸಿ ದಂಗುಬಡಿಸಿ, ಭಕ್ತರ ನಿದ್ದೆಗೆಡಿಸಿದ ಕತೆ]
ರೈತರ ಟ್ರ್ಯಾಕ್ಟರ್ಗಳು ಮತ್ತೊಮ್ಮೆ ದಿಲ್ಲಿಗೆ ಬಾರದಂತೆ, ಕೇಂದ್ರ ಸರಕಾರ ಮೊಳ ಉದ್ದ ಮೊಳೆಗಳನ್ನು, ಮೈಲುದ್ದದ ಮುಳ್ಳುಬೇಲಿಯನ್ನು ಹಾಕಿದ್ದನ್ನು ನೋಡಿ ಜಗತ್ತೇ ಬೆರಗಾಯಿತು.
ಪ್ರಜಾಪ್ರಭುತ್ವದ ಬಾಯಿಗೇ ಹೊಲಿಗೆ ಹಾಕುವಂತೆ ರೈತರ ಮೊಬೈಲ್ಗಳಿಗೆ ಸಿಗ್ನಲ್ಲೇ ಬಾರದಂತೆ ಮಾಡಿ, ರೈತರ ಟಾಯ್ಲೆಟ್ಗೂ ನೀರಿಲ್ಲದಂತೆ, ಧ್ವನಿವರ್ಧಕಕ್ಕೂ ಕರೆಂಟ್ ಇಲ್ಲದಂತೆ ಮಾಡಿದ್ದನ್ನು ನೋಡಿ ಜಗತ್ತು ದಂಗಾಯಿತು.
“ರೈತ ಹೋರಾಟಕ್ಕೆ ನನ್ನ ಬೆಂಬಲವಿದೆ” ಎಂದು ಮೂವರು ವಿದೇಶೀ ಯುವತಿಯರು ಟ್ಟೀಟ್ ಮಾಡಿದ್ದೇ ತಡ, ಸರಕಾರ ಧಿಗ್ಗನೆದ್ದಿತು. ಹೀಗೆ ಟ್ವೀಟ್ ಮಾಡಿದ್ದೇ ಭಾರೀ ಕ್ರಿಮಿನಲ್ ಕೆಲಸವೆಂಬಂತೆ ದಿಲ್ಲಿ ಪೊಲೀಸರು ಎಫ್ಐಆರ್ ಹಾಕಿದರು. ಜಗತ್ತು ನಕ್ಕಿತು.
ಟ್ವೀಟ್ ಮಾಡಿದ್ದು ಯಾರು? 1. ರೆಹನ್ನಾ ಹೆಸರಿನ ಒಬ್ಬ ಖ್ಯಾತ ಹಾಡುಗಾರ್ತಿ (ಗ್ಯಾರಿ ಸೋಬರ್ಸ್ ಎಂಬ ಕ್ರಿಕೆಟಿಗನ ತಾಯ್ನಾಡಾದ ಬಾರ್ಬಡೋಸ್ ದೇಶದವಳು). 2. ಹದಿಹರಯದ ಗ್ರೇಟಾ ಥನ್ಬರ್ಗ್ ಎಂಬ ಪರಿಸರ ಹೋರಾಟಗಾರ್ತಿ; 3ನೆಯವಳು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸೊಸೆ (ಅಡ್ವೊಕೇಟ್) ಮೀನಾ ಹ್ಯಾರಿಸ್.
ʼವಿಶ್ವಗುರುʼ ಎನ್ನಿಸಿಕೊಳ್ಳಲು ಪರಿಶ್ರಮಿಸುತ್ತಿರುವ ಭಾರತ ದೇಶ ಈ ಟ್ವೀಟ್ಗಳನ್ನು ಕಡೆಗಣಿಸಬಹುದಿತ್ತು. ಇಷ್ಟಕ್ಕೂ ಈ ಮೂವರಲ್ಲಿ ಯಾರೂ ನಮ್ಮ ದೇಶದ ಶಾಂತಿಯನ್ನು ಕದಡುವ ಯತ್ನ ಮಾಡಲಿಲ್ಲ. ದಂಗೆ ಏಳಿರೆಂದು ಕರೆ ಕೊಟ್ಟಿಲ್ಲ. ಶಸ್ತ್ರ ಕೈಗೆತ್ತಿಕೊಳ್ಳಲು ಪ್ರಚೋದನೆ ನೀಡಲಿಲ್ಲ.
ಜಗತ್ತಿನ ಯಾವ ದೇಶದಲ್ಲಾದರೂ ಅಲ್ಲಿನ ಸರಕಾರ ಕೋಟ್ಯಂತರ ಜನರ ಧ್ವನಿಯನ್ನು ಹತ್ತಿಕ್ಕುವ ಯತ್ನ ನಡೆಸಿದ್ದರೆ ಅಂತಃಕರಣ ಇರುವವರು ಯಾವ ದೇಶದವರಾಗಿದ್ದರೂ ಖಂಡಿಸುತ್ತಾರೆ. ಖಂಡಿಸಬೇಕು. ನಾವು ಮಯನ್ಮಾರ್ ವಿದ್ಯಮಾನವನ್ನು ಖಂಡಿಸುತ್ತೇವೆ. ಈ ಮೂವರು ಮಹಿಳೆಯರು ತಮ್ಮ ಟ್ವೀಟ್ನಲ್ಲಿ ಯಾರನ್ನೂ ಖಂಡಿಸಲೂ ಇಲ್ಲ. ಸುಮ್ಮನೆ ʼಭಾರತದ ರೈತರ ಶಾಂತಿಪೂರ್ಣ ಹೋರಾಟಕ್ಕೆ ನಮ್ಮ ಬೆಂಬಲವಿದೆʼ ಎಂದರು ಅಷ್ಟೆ.
ಕಳೆದ 75 ದಿನಗಳಿಂದ ಲಕ್ಷಾಂತರ ರೈತರು ತಮ್ಮ ಜಾತಿ, ಧರ್ಮ, ಭಾಷೆ, ಪಕ್ಷ ಪಂಥ ಎಲ್ಲವನ್ನೂ ಮರೆತು ಒಗ್ಗಟ್ಟಿನಿಂದ ಚಳಿಮಳೆಗೂ ಬಗ್ಗದೆ ಹರತಾಳ ಆಚರಿಸುತ್ತಿದ್ದಾರೆ. ಸುಮಾರು 120 ಜನರು ಸಾವಪ್ಪಿದ್ದಾರೆ. ಅನುಕಂಪವುಳ್ಳ ಯಾರಾದರೂ ಹೇಳುವ ಮಾತು ಅದು.
ಅಷ್ಟಕ್ಕೇ ಧಿಗ್ಗನೆದ್ದ ಸರಕಾರ, ವಿದೇಶಾಂಗ ಸಚಿವರ ಮೂಲಕ “ಭಾರತದ ವಿರುದ್ಧ ಅಪ ಪ್ರಚಾರ ಕೂಡದು” ಎಂಬರ್ಥದ ಟ್ವೀಟ್ ಮಾಡಿಸಿತು. “ಭಾರತದ ಐಕ್ಯತೆಗೆ ಧಕ್ಕೆ ತರಲೆಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆದ ಭಾರೀ ಕುತಂತ್ರ ಇದು” ಎಂದು ಕಪಿಲ್ ಮಿಶ್ರಾ ಎಂಬ ದಿಲ್ಲಿಯ ಬಿಜೆಪಿ ರಾಜಕಾರಣಿ ಘೋಷಿಸಿದರು (ಈತನ ಉದ್ರೇಕಕಾರಿ ಭಾಷಣದಿಂದಾಗಿಯೇ ಕಳೆದ ವರ್ಷ ದಿಲ್ಲಿಯಲ್ಲಿ ಕೋಮುದಂಗೆ ಭುಗಿಲೆದ್ದು 23 ಜನರು ಪ್ರಾಣ ತೆರುವಂತಾಯಿತು-ಅದಿರಲಿ).
ಈ ಯುವತಿಯರ ಟ್ವೀಟ್ ನಿಂದ ಭಾರತದ ಐಕ್ಯತೆಗೆ ಈಗ ಅದೇನು ಧಕ್ಕೆ ಬಂತೊ?
ಅಷ್ಟಕ್ಕೇ ಮುಗಿದಿದ್ದರೆ ಬೇರೆ ಮಾತಿರಲಿಲ್ಲ. ಆದರೆ , ಭಾರತ ಸರಕಾರ ಬಾಲಿವುಡ್ ಸ್ಟಾರ್ಗಳನ್ನು ಹಿಡಿದು ಅವರ ಮೂಲಕ ಮುಯ್ಯಿ ಮರುಟ್ವೀಟ್ ಮಾಡಿಸಲು ಮುಂದಾಯಿತು.
“ಭಾರತದ ಸಾರ್ವಭೌಮತ್ವದ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ನಮ್ಮ ಸಮಸ್ಯೆಗಳ ಪರಿಹಾರಕ್ಕೆ ಹೊರಗಿನವರು ಬೇಕಾಗಿಲ್ಲ” ಎಂಬರ್ಥದಲ್ಲಿ ಭಾರತರತ್ನದ್ವಯ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಸೇರಿದಂತೆ, ಕ್ರಿಕೆಟಿಗ ಕುಂಬ್ಳೆ, ವಿರಾಟ್ ಕೊಹ್ಲಿ, ಬಾಲಿವುಡ್ ನಟ ಅಕ್ಷಯ ಕುಮಾರ್, ಕರಣ್ ಜೋಹರ್ ಮುಂತಾದವರ ಮೂಲಕ ಆಲ್ಮೋಸ್ಟ್ ಏಕರೂಪದ ಟ್ವೀಟ್ ಮಾಡಿಸಲಾಯಿತು. ಗ್ರೇತಾ ಥನ್ಬರ್ಗ್ ವಿರುದ್ಧ ಎಫ್ಐಆರ್ ಹಾಕಿತು.
ಜಗತ್ತು ಗೊಳ್ಳೆಂದು ನಕ್ಕಿತು.
ಮೂವರು ವನಿತೆಯರಿಂದ ಭಾರತ ಸರಕಾರದ ಜಂಘಾಬಲ ಉಡುಗಿತೆ? ಅಷ್ಟೊಂದು ದುರ್ಬಲವೆ ನಮ್ಮ ದೇಶ? ಕಳೆದ ವರ್ಷ ಇದೇ ದಿನಗಳಲ್ಲಿ ಅಹಮ್ಮದಾಬಾದಿನ ಕೊಳೆಗೇರಿಗಳು ಟ್ರಂಪ್ ಕಣ್ಣಿಗೆ ಬೀಳಬಾರದೆಂದು ಉದ್ದುದ್ದ ಗೋಡೆ ಕಟ್ಟುವ ಕೆಲಸ ನಡೆದಿತ್ತು. ಈಗ ಮುಷ್ಕರನಿರತ ರೈತರು ಮಾಧ್ಯಮಗಳ ಕಣ್ಣಿಗೆ ಬೀಳಬಾರದೆಂದು ಬಂಗಾರ ಬಣ್ಣದ ಲೋಹದ ಗೋಡೆಗಳನ್ನು, ದಿಲ್ಲಿಯ ಹೊರವಲಯದಲ್ಲಿ ನಿರ್ಮಿಸಲಾಗಿದೆ. ಚೀನಾ ಗಡಿಯಲ್ಲೂ ಕಾಣಲಾಗದ ಬಿಗಿ ಭದ್ರತೆಯನ್ನು ಹೆದ್ದಾರಿಯಲ್ಲಿ ಜಡಿದು, ಅಂಬುಲೆನ್ಸ್ ಕೂಡ ಓಡಾಡಲಾಗದಂತೆ ಮಾಡಲಾಗಿದೆ.
ನಮ್ಮ ದೇಶದ ವಾಸ್ತವಗಳನ್ನು ಮರೆಮಾಚಲು ಹೀಗೆಲ್ಲ ಯತ್ನಿಸಿ ನಗೆಪಾಟಲಿಗೆ ತುತ್ತಾಗುವುದರಿಂದ ರಾಷ್ಟ್ರದ ಘನತೆ ಹೆಚ್ಚುತ್ತದೆಯೆ? ಘನತೆಗೆ ವಿಶೇಷ ಮೆರುಗು ಕೊಡಲೆಂದು ಸಚಿನ್ ತೆಂಡೂಲ್ಕರಂಥ ಹೆಕ್ಕಿ ತೆಗೆದ ಹೀರೋಗಳ ಮೂಲಕ ಟ್ವೀಟ್ ಮಾಡಿಸಲು ಹೋಗಿ ಅವರನ್ನೂ ನಗೆಪಾಟಲಿಗೆ ತುತ್ತಾಗಿಸಿದ್ದು ಸರಿಯೆ?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ4 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ3 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ2 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

