ದಿನದ ಸುದ್ದಿ
ಕೋವಿಡ್ ಮಾರ್ಗಸೂಚಿಯನ್ವಯ ಸರಳ ಹಬ್ಬಗಳ ಆಚರಣೆಗೆ ಸೂಚನೆ
ಸುದ್ದಿದಿನ,ದಾವಣಗರೆ : ಕೋವಿಡ್ ಮಾರ್ಗಸೂಚಿಗಳನ್ವಯ ಹಬ್ಬಗಳನ್ನು ಆಚರಿಸಬೇಕಿರುವುದರಿಂದ ಯಾವುದೇ ಕಾರಣಕ್ಕೂ ಸಾಮೂಹಿಕ ಪ್ರಾರ್ಥನೆ, ಮೆರವಣಿಗೆ, ಗುಂಪು ಸೇರಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ದಸರಾ, ದೀಪಾವಳಿ ಮತ್ತು ಈದ್ ಮಿಲಾದ್ ಆಚರಣೆ ಕುರಿತ ನಾಗರೀಕ ಶಾಂತಿ ಸೌಹಾರ್ಧ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬ ಹರಿದಿನಗಳು ಧಾರ್ಮಿಕ ಆಚರಣೆಯಾಗಿದ್ದು, ವೈಯಕ್ತಿಕವಾಗಿ ತಮ್ಮ ಮನೆಗಳಲ್ಲಿಯೇ ಭಕ್ತಿಯಿಂದ ಆಚರಿಸೋಣ ಎಂದು ಕರೆ ನೀಡಿದರು.
ಕೋವಿಡ್ ಮಾರ್ಗಸೂಚಿಯನ್ವಯ ಹಗಲು, ರಾತ್ರಿ ಪ್ರವಚನ ಕಾರ್ಯಕ್ರಮ, ಸಾಂಸ್ಕøತಿಕ ಕಾರ್ಯಕ್ರಮ, ಸಭೆ, ಸಮಾರಂಭ ಮಾಡದಂತೆ ನಿಷೇಧಿಸಲಾಗಿದೆ. ಒಂದು ವೇಳೆ ಜಿಲ್ಲಾ ಮಟ್ಟದಲ್ಲಿ ಇದಕ್ಕೆ ಅವಕಾಶ ನೀಡಿದರೆ ನಮ್ಮ ಮೇಲೆ ಕ್ರಮ ಜರುಗಿಸಲಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ನಿಮ್ಮೊಂದಿಗೆ ಇವೆ. ನೀವು ಕೂಡ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ವಿವಿಧ ಸಮಾಜದ ಮುಖಂಡರಿಗೆ ಮನವಿ ಮಾಡಿದರು.
ಕೊರೊನಾ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ಸರ್ಟಿಫಿಕೇಟ್ ಹೊಂದಿದ್ದವರಿಗೆ ಮಾತ್ರ ಸಂಘ ಸಂಸ್ಥೆಗಳಲ್ಲಿ, ದೇವಸ್ಥಾನಗಳಲ್ಲಿ ಒಳಗೆ ಪ್ರವೇಶ ಎನ್ನುವುದನ್ನು ಕಡ್ಡಾಯ ಎನ್ನುವ ನಿಯಮ ಜಾರಿ ಮಾಡಿದರೆ ಅಥವಾ ಪರೀಕ್ಷೆ ನಂತರ ಈ ತರಹದ ಸೌಲಭ್ಯ ನೀಡುತ್ತೇವೆ ಇಲ್ಲದಿದ್ದರೆ ಇಲ್ಲ ಎನ್ನುವ ನಿಯಮ ಮಾಡಿದರೆ ಸ್ವಾಭಾವಿಕವಾಗಿ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುತ್ತಾರೆ. ಇದನ್ನು ನಾವು ಸರ್ಕಾರಿ ಆದೇಶವಾಗಿ ಹೊರಡಿಸಲು ಸಾಧ್ಯವಾಗದೇ ಇದ್ದರೂ ಕೂಡ ಎಲ್ಲ ಸಂಘ, ಸಂಸ್ಥೆಗಳಲ್ಲಿ ಈ ಪ್ರಯೋಗ ಮಾಡಿದಲ್ಲಿ ಜಿಲ್ಲಾಡಳಿತಕ್ಕೆ ಸಹಕಾರಿಯಾಗುತ್ತದೆ ಎಂದ ಅವರು ಜನರು ಕೊರೊನಾ ಕುರಿತು ನಿರ್ಲಕ್ಷ್ಯ ಭಾವನೆಯಿಂದ ಹೊರಬರಬೇಕು ಎಂದು ತಿಳಿಸಿದರು.
ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಕಡಿಮೆ ಪ್ರಕರಣಗಳು ಬರುತ್ತಿವೆ. ಇದು ಇನ್ನು ಮುಂದೆ ಕಡಿಮೆ ಆಗಲಿದೆ. ಹಾಗಾಗಿ ನಮ್ಮನ್ನು ಏನೂ ಮಾಡದು ಎಂದು ತಿಳಿದುಕೊಂಡಿದ್ದಾರೆ. ಆದರೆ ವಾಸ್ತವ ಸ್ಥಿತಿಯೇ ಬೇರೆ. ನಿತ್ಯ 3 ಸಾವಿರ ಪರೀಕ್ಷೆ ಮಾಡಲಾಗುತ್ತಿತ್ತು. ಆದರೆ ನಿನ್ನೆ 900 ಮಾತ್ರ ಮಾಡಿದ್ದಾರೆ. ಹಾಗಾಗಿ ಕಡಿಮೆ ಪ್ರಕರಣಗಳು ದೃಢಪಟ್ಟಿವೆಯೇ ಹೊರತು ಕಡಿಮೆಯಾಗಿಲ್ಲ ಎಂದರು.
ಕಡಿಮೆ ಪ್ರಕರಣಗಳು ದೃಢಪಟ್ಟಾಕ್ಷಣ ಕೊರೊನಾ ಕಡಿಮೆಯಾಗುತ್ತಿದೆ ಎಂದು ಮೈ ಮರೆಯದೇ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕಿದೆ. ಪರೀಕ್ಷೆಗಾಗಿ 31 ಮೊಬೈಲ್ ತಂಡಗಳನ್ನು ಹಾಗೂ 23 ಸ್ಥಿರ ತಂಡಗಳನ್ನು ಗಂಟಲು ದ್ರವ ಸಂಗ್ರಹಕ್ಕೆ ನಿಯೋಜನೆ ಮಾಡಲಾಗಿದೆ. ಆದರೂ ಜನ ಪರೀಕ್ಷೆ ಮಾಡಿಸಲು ಮುಂದೆ ಬರುತ್ತಿಲ್ಲ. ಕೆಲವರು ನಮಗೆ ಏನೂ ಆಗಿಲ್ಲ ಎಂದು ಮುಚ್ಚಿಡುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗೆ ಮುಚ್ಚಿಟ್ಟರೆ ಅದು ನಮ್ಮನ್ನು ಬಿಡುವುದಿಲ್ಲ. ತನ್ನೊಂದಿಗೆ ಕರೆದೊಯ್ಯುತ್ತದೆ. ಆದ್ದರಿಂದ ಪರೀಕ್ಷಾ ತಂಡಗಳಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್ ಮಾತನಾಡಿ, ದೇವಸ್ಥಾನ, ಪ್ರಾರ್ಥನಾ ಮಂದಿರಗಳಿಗೆ ತೆರಳುವ ಭಕ್ತರು ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು, ತಾಜ್ ಮಹಲ್ ಸೇರಿದಂತೆ ಇತರೆ ಐತಿಹಾಸಿಕ ಸ್ಮಾರಕಗಳನ್ನು ನೋಡಲು ಹೋಗವವರ ಕಾಲಿಗೆ ಬಟ್ಟೆಯ ಚೀಲ ನೀಡುವಂತೆ ನಮ್ಮಲ್ಲೂ ವ್ಯವಸ್ಥೆ ಆಗಬೇಕು ಎಂದರು.
ದುರ್ಗಾಂಬಿಕಾ ದೇವಿ ದೇವಸ್ಥಾನದ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಸಾಂಪ್ರಾದಾಯಿಕ ಕಾರ್ಯಕ್ರಮಗಳನ್ನು ರದ್ದುಪಡಿಸಿ ಸರಳ ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈದ್ ಮಿಲಾದ್ ಕಮಿಟಿ ಕಾರ್ಯದರ್ಶಿ ಯಾಸೀನ್ ಪೀರ್ ತಾಜ್ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯವೇ ಹಬ್ಬ ಆಚರಿಸಲು ಸಮಾಜದ ಬಾಂಧವರು ಮುಂದಾಗಿದ್ದು, ಈ ಸಂಬಂಧ ಸಮಿತಿಯಲ್ಲಿ ತೀರ್ಮಾನಿಸಲಾಗುವುದು ಎಂದರು.
ಪಾಲಿಕೆ ಸದಸ್ಯರಾದ ಶಿವಪ್ರಕಾಶ್, ಚಮನ್ ಸಾಬ್, ಶಿರಾಜ್ ಅಹಮದ್, ಹಿಂದೂಪರ ಸಂಘಟನೆಯ ಸತೀಶ್ ಪೂಜಾರ್ ಮಾತನಾಡಿ, ಸರ್ಕಾರದ ಮಾರ್ಗಸೂಚಿಯನ್ನು ಎಲ್ಲರೂ ಒಪ್ಪಿಕೊಂಡು ಮನೆಗಳಲ್ಲಿಯೇ ಸರಳವಾಗಿ ಹಬ್ಬಗಳನ್ನು ಆಚರಿಸಲಾಗುವುದು ಎಂದರು.
ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿ ರಾಜೀವ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಸೇರಿದಂತೆ ವಿವಿಧ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

-
ದಿನದ ಸುದ್ದಿ7 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ7 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ7 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ7 days agoಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
-
ದಿನದ ಸುದ್ದಿ7 days agoದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ
-
ದಿನದ ಸುದ್ದಿ15 hours agoನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ



