ದಿನದ ಸುದ್ದಿ
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ
ಸುದ್ದಿದಿನ ಡೆಸ್ಕ್ : ಕುರಿ, ಮೇಕೆಗಳು ಆಕಸ್ಮಿಕವಾಗಿ ಸತ್ತರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ “ಅನುಗ್ರಹ” ಯೋಜನೆಯನ್ನು ರಾಜ್ಯ ಬಿಜೆಪಿ ಸರ್ಕಾರ ಮರು ಜಾರಿಗೊಳಿಸಿದ್ದರೆ ವಿಧಾನಸಭೆಯಲ್ಲಿ ಹೋರಾಟ ನಡೆಸಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಕುರಿಗಳನ್ನು ಕಾಡಿನಲ್ಲಿ ಮೇಯಿಸಲು ಹಾಗೂ ಅವುಗಳಿಗೆ ಕಾಯಿಲೆ ಕಾಣಿಸಿಕೊಂಡಾಗ ಕಡ್ಡಾಯವಾಗಿ ಚಿಕಿತ್ಸೆ ಮತ್ತು ಔಷಧ ನೀಡಲು ಅವಕಾಶ ಕಲ್ಪಿಸಿದ್ದು ನಮ್ಮ ಸರ್ಕಾರ. ಇದರ ಜೊತೆಗೆ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಳ ರಚನೆಯಾಗಿದ್ದೂ ನಮ್ಮ ಸರ್ಕಾರದ ಅವಧಿಯಲ್ಲಿ ಎಂದರು.
ಇದನ್ನೂ ಓದಿ | ಅಧಿಕಾರಿಗಳ ನಿರ್ಲಕ್ಷ್ಯ; ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲೇ ಓಪನ್ ಆಗಿದೆ ಡ್ರೈನೇಜ್ , ಆಪಾಯ ಕಟ್ಟಿಟ್ಟ ಬುತ್ತಿ..!
ಕುರಿ, ಮೇಕೆ, ದನ ಮತ್ತು ಎಮ್ಮೆಗಳು ಸಾವಿಗೀಡಾದಾಗ ಅದರ ಮಾಲೀಕರಿಗೆ ನೆರವಾಗುವ ದೃಷ್ಟಿಯಿಂದ ನಾನು ಮುಖ್ಯಮಂತ್ರಿಯಾಗಿದ್ದಾಗ ಅನುಗ್ರಹ ಯೋಜನೆ ಜಾರಿಗೆ ತಂದಿದ್ದೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎರಡು ವರ್ಷದಿಂದ ಯೋಜನೆ ಸ್ಥಗಿತಗೊಳಿಸಿದೆ ಹಾಗೂ ರೂ.30 ಕೋಟಿ ಬಾಕಿಯನ್ನೂ ಪಾವತಿ ಮಾಡಿಲ್ಲ ಎಂದು ಕಿಡಿಕಾರಿದರು.
ಕುರಿ ಸಾಕಾಣಿಕೆ ಈಗ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ತೋಟದಲ್ಲಿ 500 ಕುರಿಗಳನ್ನು ಸಾಕಣೆ ಮಾಡುತ್ತಿದ್ದಾರೆ. ಕುರಿ ಸಾಕಣೆ ಎಂಬುದು ಬದುಕಿಗೆ ಒಂದು ದಾರಿ.
ಒಂದು ಕುರಿಗೆ ಹತ್ತರಿಂದ ಇಪ್ಪತ್ತು ಸಾವಿರ ರೂ.ಗಳ ಬೆಲೆಯಿದೆ. ಆ ಕುರಿ ಸತ್ತರೆ ಕುರಿಗಾರರ ಬದುಕಿನ ದಾರಿಯೇ ಮುಚ್ಚಿಹೋಗುತ್ತದೆ. ಹಾಗಾಗಿ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪರಿಹಾರದ ಮೊತ್ತವನ್ನು ಹತ್ತು ಸಾವಿರ ರೂ.ಗಳಿಗೆ ಏರಿಕೆ ಮಾಡುತ್ತೇವೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243