ದಿನದ ಸುದ್ದಿ
ಶ್ರೀಲಂಕಾಕ್ಕೆ ಆರ್ಥಿಕ ನೆರವು ; ಐಎಂಎಫ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ಒತ್ತಾಯ
ಸುದ್ದಿದಿನ ಡೆಸ್ಕ್ : ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾ ದ್ವೀಪ ರಾಷ್ಟ್ರಕ್ಕೆ ತುರ್ತಾಗಿ ಹಣಕಾಸಿನ ನೆರವು ಒದಗಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಅಂತಾರಾಷ್ಟ್ರೀಯ ಹಣಕಾಸು ನಿಧಿ ಐಎಂಎಫ್ ಅನ್ನು ಒತ್ತಾಯಿಸಿದ್ದಾರೆ.
ಹಿಂದೆಂದೂ ಕಾಣದ ಆರ್ಥಿಕ ಹಿಂಜರಿತಕ್ಕೆ ಒಳಗಾಗಿರುವ ಶ್ರೀಲಂಕಾವು, 51 ಶತಕೋಟಿ ಡಾಲರ್ ವಿದೇಶಿ ಸಾಲ ಮರುಪಾವತಿಯಲ್ಲಿ ಸುಸ್ತಿದಾರನಾಗಿದ್ದು, ಈ ನಿಟ್ಟಿನಲ್ಲಿ 4 ಶತಕೋಟಿ ಡಾಲರ್ ಪರಿಹಾರ ಪ್ಯಾಕೇಜ್ ಒದಗಿಸಬೇಕು ಎಂದು ದ್ವೀಪ ರಾಷ್ಟ್ರವು ಐಎಂಎಫ್ಗೆ ಮನವಿ ಮಾಡಿದೆ.
ವಾಷಿಂಗ್ಟನ್ ಡಿಸಿಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ನಡುವೆ ನಡೆದ ಮಾತುಕತೆ ವೇಳೆ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಪ್ರಮುಖ ಚರ್ಚೆ ನಡೆದಿದೆ. ಶ್ರೀಲಂಕಾಕ್ಕೆ ಆರ್ಥಿಕ ನೆರವು ಒದಗಿಸುವಂತೆ ನಿರ್ಮಲಾ ಸೀತಾರಾಮನ್ ಒತ್ತಾಯಿಸಿದರು. ಅದಕ್ಕೆ ಸ್ಪಂಧಿಸಿದ ಜಾರ್ಜಿವಾ, ಶ್ರೀಲಂಕಾ ಜೊತೆ ಸಕ್ರಿಯವಾಗಿ ತೊಡಗಿಸಿಕೊಳ್ಳುವುದನ್ನು ಮುಂದುವರೆಸಲಾಗಿದೆ ಎಂದು ಭರವಸೆ ನೀಡಿದರು.
ಅಲ್ಲದೇ, ಸೀತಾರಾಮನ್ ಅವರು, ಶ್ರೀಲಂಕಾ ಹಣಕಾಸು ಸಚಿವರಾದ ಅಲಿ ಸಬ್ರಿ ಅವರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಮಿತ್ರ ರಾಷ್ಟ್ರ ಶ್ರೀಲಂಕಾಗೆ ಸಾಧ್ಯವಾದ ಎಲ್ಲ ನೆರವು ಮತ್ತು ಸಹಕಾರ ನೀಡುವುದಾಗಿ ಸೀತಾರಾಮನ್ ಭರವಸೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243