ದಿನದ ಸುದ್ದಿ
ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಅರಿವು ಮೂಡಿಸಿ ; ಕೋಳಿ-ಕುರಿ ಮಾಂಸ ಉತ್ಪಾದನೆಗೆ ಹೆಚ್ಚು ಗಮನಹರಿಸಿ : ಸಚಿವ ಪ್ರಭು ಚವ್ಹಾಣ್
ಸುದ್ದಿದಿನ,ಮಂಡ್ಯ : ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಜಾರಿಗೆ ಬಂದಿದ್ದು, ಈ ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜೊತೆಗೆ ಕಾಯ್ದೆಯ ಉಲ್ಲಂಘನೆ ನಡೆಯದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಿ ಎಂದು ಪಶುಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ರವರು ಸೂಚಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪಶುಸಂಗೋಪನೆ ಇಲಾಖೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸಿಬ್ಬಂದಿ ಕೊರತೆ ಇರುವುದು ನನ್ನ ಗಮನಕ್ಕೆ ಇದೆ,ಈ ಸಂಬಂಧ ಶೀಘ್ರದಲ್ಲಿ ಇದನ್ನು ಪರಿಹರಿಸುತ್ತೇವೆ ಎಂದು ಸಚಿವರು ಅಧಿಕಾರಿಗಳಿಗೆ ಹೇಳಿದರು.
ಇದ್ದ ಸಂಪನ್ಮೂಲದಲ್ಲೇ ಸದ್ಯ ಕಾರ್ಯನಿರ್ವಹಿಸುವ ಸವಾಲು ನಮ್ಮಮುಂದಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಪಶುಪಾಲನೆ ಮೇಲೆ ಬಹಳಷ್ಟು ಕುಟುಂಬಗಳು ಅವಲಂಬಿತವಾಗಿವೆ. ಪಶುಪಾಲಕರ ಬಹುದೊಡ್ಡ ಶಕ್ತಿಯೆಂದರೆ ಪಶುವೈದ್ಯರು ನೀವು ಮೂಕ ಪ್ರಾಣಿಗಳ ನೋವನ್ನು ಅರ್ಥಮಾಡಿಕೊಂಡು ಅವುಗಳ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿ ಎಂದು ಅಧಿಕಾರಿಗಳಿಗೆ ಸಚಿವರು ಕಿವಿಮಾತು ಹೇಳಿದರು.
ಕೋಳಿ-ಕುರಿ ಮಾಂಸ ಉತ್ಪಾದನೆಗೆ ಹೆಚ್ಚು ಗಮನಹರಿಸಿ
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಾಗಿರುವುದರಿಂದ ಕೋಳಿ, ಕುರಿಗಳ ಮಾಂಸ ಉತ್ಪಾದನೆಗೆ ಜಿಲ್ಲಾ ಮಟ್ಟದಲ್ಲಿ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹೆಚ್ಚು ಗಮನಹರಿಸಿ ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಗೋಹತ್ಯೆ ನಿಷೇಧ ಹಿನ್ನೆಲೆಯಲ್ಲಿ ಗೋಮಾಳಗಳನ್ನು ಗುರುತಿಸಿ ಗೋಶಾಲೆಗಳ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳು ಸಹಕರಿಸಬೇಕು ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ಗಂಡುಕರುಗಳನ್ನು ರೈತರು ಹಾಗೆ ಸಂತೆಗಳಲ್ಲಿ ಬಿಡುತ್ತಿರುವುದು ಗಮನಕ್ಕೆ ಬಂದಿದೆ. ಇಲಾಖೆಯ ಅಧಿಕಾರಿಗಳು ರೈತರೊಂದಿಗೆ ಸಮಾಲೋಚನೆ ನಡೆಸಿ ಕನಿಷ್ಠ ಮೂರು ತಿಂಗಳುಗಳ ವರೆಗೆ ಗಂಡು ಕರುಗಳನ್ನು ಸಾಕಿ ಗೋಶಾಲೆಗಳಿಗೆ ಬಿಡಲು ರೈತರಿಗೆ ಮನವಲಿಸಲು ಪ್ರಯತ್ನ ಮಾಡಿ ಎಂದು ಸಚಿವರು ಹೇಳಿದರು.
ಪ್ರಾಣಿ ಕಲ್ಯಾಣ ಮಂಡಳಿಯ ಸ್ಥಾಪನೆ
ಪ್ರಾಣಿ ಹಿಂಸೆ ತಡೆಯುವ ಕಾನೂನುಗಳನ್ನು ಬಿಗಿಗೊಳಿಸಲು ಕ್ರಮವಹಿಸಿ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕರ್ನಾಟಕ ಪ್ರಾಣಿಕಲ್ಯಾಣ ಮಂಡಳಿಯನ್ನು ಸ್ಥಾಪನೆ ಮಾಡಲಾಗಿದೆ ಎಂದು ಹೇಳಿದರು. ಎಲ್ಲಾ ಜಾನುವಾರುಗಳ ಆರೋಗ್ಯರಕ್ಷಣೆಗಾಗಿ 4214 ಪಶುವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದರು
ಪ್ರಾಣಿಗಳನ್ನು ಕರುಣೆಯಿಂದ ನೋಡಿಕೊಳ್ಳಲು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದು ಹೇಳಿದರು.
ಪಶುಪಾಲಕರ ಸಹಾಯವಾಣಿ ಸಂಖ್ಯೆ 1962 ಸಂಯೋಜಿಸಿ ಅವಶ್ಯಕ ಮತ್ತು ತುರ್ತು ಸೇವೆ ನೀಡಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.
ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ ನಬಾರ್ಡ್ ಮೂಲಕ 44.63 ಕೋಟಿ ವೆಚ್ಚದಲ್ಲಿ ವಧಾಗಾರ (ಕುರಿ ಮತ್ತು ಮೇಕೆ ಮಾಂಸ ಸಂಸ್ಕರಣಾ ಘಟಕ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು. ಗೋ ರಕ್ಷಣೆಗೆ ಶ್ರಮಿಸುವವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದರು.
13 ವರ್ಷಕ್ಕೆ ಮೇಲ್ಪಟ್ಟ ಎಮ್ಮೆ ಮತ್ತು ಕೋಣಗಳನ್ನು ಸೂಕ್ತ ಪ್ರಾಧಿಕಾರದ ಪರವಾನಿಗೆ ಪಡೆದು ವಧೆ ಮಾಡಬಹುದು. ಇದಕ್ಕೆ ಪಶು ವೈದ್ಯಾಧಿಕಾರಿಯ ಪ್ರಮಾಣ ಪತ್ರ ಕಡ್ಡಾಯ. ಗೋಹತ್ಯೆಯ ಉದ್ದೇಶದಿಂದ ಹೊರ ರಾಜ್ಯಗಳಿಗೆ ಸಾಗಣೆ ಮಾಡುತ್ತಿರುವುದು ಕಂಡು ಬಂದಿದ್ದು, ಈ ಸಂಬಂಧ ಪೋಲೀಸ್ ಇಲಾಖೆಯವರು ಕ್ರಮ ವಹಿಸಿ ಎಂದರು.
ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳಾದ ಎಸ್.ಅಶ್ವಥಿರವರು, ಪೆÇಲೀಸ್ ವರಿಷ್ಠಾಧಿಕಾರಿಗಳಾದ ಕೆ.ಪರಶುರಾಮರವರು, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥರವರು, ಮತ್ತು ಇಲಾಖೆ ಅಧಿಕಾರಿಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243