ಲೈಫ್ ಸ್ಟೈಲ್
ಜಾನುವಾರುಗಳ ಗೆರಸಲು(ಕಾಲು-ಬಾಯಿ ಜ್ವರ) ರೋಗವೂ,.. ಕರುವುಗಲ್ಲಮ್ಮ ದೇವತೆಯೂ..
ರೈತರ ಮಕ್ಕಳು ದಯಮಾಡಿ ಈ ಲೇಖನವನ್ನು ತಪ್ಪದೇ ಓದಿರಿ…
- ಡಾ.ವಡ್ಡಗೆರೆ ನಾಗರಾಜಯ್ಯ
ನಮ್ಮದು ರೈತಾಪಿ ಕುಟುಂಬ. ಕೃಷಿ ಕೆಲಸ ಮತ್ತು ಕರಾವಿಗಾಗಿ ನಮ್ಮ ಮನೆಯಲ್ಲಿ ಸದಾ ಒಂದು ಜೊತೆ ನಾಟಿ ಹಸುಗಳು ಮತ್ತು ಕರುಗಳು ಇರುತ್ತಿದ್ದವು. ಅವುಗಳನ್ನು ನಾವು ಸಾಕುತ್ತಿದ್ದೆವು ಎಂಬುದಕ್ಕಿಂತಲೂ ಆ ‘ಜೀವಧನ’ಗಳು ನಮ್ಮನ್ನು ಸಾಕುತ್ತಿದ್ದವು ಎಂದು ಹೇಳಿದರೆ ಸರಿಯಾದೀತು. ಜಾನುವಾರುಗಳನ್ನು ನಮ್ಮ ಪೂರ್ವಿಕರು ‘ಜೀವಧನ’ ಎಂದು ಕರೆದಿರುವುದು ಅನ್ವರ್ಥಕವಾಗಿದೆ.
ಜೀವಧನ ಎಂದರೆ ಜೀವಂತ ಹಣ! ಈ ಜೀವಧನಗಳು ಜೀವಂತ ಹಣ ಮಾತ್ರವಾಗಿರದೆ ಹಣಕ್ಕಿಂತಲೂ ಮಿಗಿಲಾಗಿ ನಮ್ಮ ಜೀವಭಾವದೊಂದಿಗೆ ನಂಟು ಬೆಸೆದುಕೊಂಡಿರುತ್ತಿದ್ದವು. ಜಾನುವಾರುಗಳನ್ನು ನೋಟುಗಳ ರೂಪದ ಆರ್ಥಿಕ ದೃಷ್ಟಿಯಿಂದ ನೋಡುವುದೇ ಅಮಾನವೀಯ ಅನ್ನಿಸುತ್ತದೆ.
ಪುರಾತನ ಕಾಲದ ಚೇಗಿದ ಮರವೊಂದನ್ನು ನಾವು ಹಣದ ರೂಪದಲ್ಲಿ ಬೆಲೆಕಟ್ಟಲು ಹೋದರೆ, ಆ ಮರವು ಇಷ್ಟೂ ದೀರ್ಘ ವರ್ಷಗಳ ಕಾಲ ನೀಡಿದ ನೆರಳು, ಒದಗಿಸಿದ ಆಶ್ರಯ, ಕಣ್ಮನಗಳಿಗೆ ತಂಪು ತುಂಬಿದ ಸೌಂದರ್ಯ, ಪಸರಿಸಿದ ಗಾಳಿಗಮಲು, ಕರುಣಿಸಿದ ಹಣ್ಣುಹಂಪಲು ಮುಂತಾದವುಗಳಿಗೆ ಯಾವ ಬೆಲೆ ಕಟ್ಟಲು ಸಾಧ್ಯ?
ದನಕರು ಕುರಿಮೇಕೆ ಕೋಳಿಗಳನ್ನು ಸಾಕುತ್ತಾ ಅವುಗಳೊಂದಿಗೆ ನಾವು ಬದುಕು ಕಟ್ಟಿಕೊಂಡಿದ್ದೆವು. ಅವುಗಳು ಖಾಯಿಲೆ-ಕಸಾಲೆ ಮುಂತಾದ ಕಾರಣಗಳಿಂದ ಅಕಾಲ ಮರಣಕ್ಕೀಡಾದರೆ ನಮ್ಮದೇ ಕಳ್ಳುಬಳ್ಳಿಯನ್ನು ಕಳೆದುಕೊಂಡಂತೆ ತೀವ್ರ ದುಃಖ ನಮ್ಮನ್ನು ಆವರಿಸುತ್ತಿತ್ತು.
ಜಾನುವಾರುಗಳಿಗೆ ಬಾಧಿಸುವ ಗೆರಸಲು ರೋಗ (ಕಾಲು – ಬಾಯಿ ಜ್ವರ), ಕುಂದು, ಚಪ್ಪೆರೋಗ ಮುಂತಾದವು ಕಾಣಿಸಿಕೊಂಡರಂತೂ ನಮ್ಮ ಕರುಳು ಬಾಯಿಗೆ ಬಂದಂತೆ ನಡುಗಿಹೋಗುತ್ತಿದ್ದೆವು. ಅವುಗಳ ನರಳಾಟ ನೋಡಿ ಕಣ್ಣೀರಾಕುತ್ತಿದ್ದ ನನ್ನ ಅಪ್ಪ, ಊಟ ನೀರು ನಿದ್ದೆ ಎಲ್ಲವನ್ನೂ ಬಿಟ್ಟು ಒದ್ದಾಡುತ್ತಿದ್ದ. ತನಗೆ ತೋಚಿದ ಗಿಡಮೂಲಿಕೆ ಮುಂತಾದ ಮುದ್ದುಗಳನ್ನು ಬಳಸುವುದರ ಜೊತೆಗೆ, ರೋಗಪೀಡಿತ ದನಗಳಿಗೆ ನಾಟಿ ಔಷಧ ನೀಡುವ ಪಂಡಿತರನ್ನು ಹುಡುಕಾಡಿಕೊಂಡು ಅಲೆದಾಡುತ್ತಿದ್ದ.
ತಿಗಳರ ಬೈಲಪ್ಪ, ಬುಡ್ಡೆ ಈರಣ್ಣ, ಮಂತ್ರವಾದಿ ವೆಂಕಟಸ್ವಾಮಯ್ಯ, ಬಡಗಿ ಮುದ್ಧಣ್ಣ ಮುಂತಾದ ಪಂಡಿತರು ನಮ್ಮೂರ ದನಗಳಿಗೆ ನಾಟಿಮದ್ದು ನೀಡುತ್ತಿದ್ದರು. ನಾಟಿಮದ್ದು ಕೊಡಿಸುವುದರ ಜೊತೆಗೆ ಇಂಗ್ಲೀಷ್ ಔಷಧವನ್ನೂ ಕೊಡಿಸಬೇಕೆಂದು ಆಲೋಚಿಸುತ್ತಿದ್ದ ನಾನು, ನಮ್ಮೂರಿನಲ್ಲಿಯೇ ಇದ್ದ ಪಶುಸಂಗೋಪನೆ ಇಲಾಖೆಯ ಸರ್ಕಾರಿ ಪಶು ಚಿಕಿತ್ಸಾಲಯದ ‘ದನಿನ ಡಾಕ್ಟರ್’ ಡಾ.ಹುಲಿಯಪ್ಪನ ಬರುವಿಕೆಗಾಗಿ ದಾರಿ ಕಾಯುತ್ತಾ ಆಸ್ಪತ್ರೆಯ ಬಾಗಿಲಲ್ಲಿ ನಿಲ್ಲುತ್ತಿದ್ದೆ.
ಪುಟಗೋಸಿ ಬಿಗಿಮಾಡಿಕೊಂಡು ಲಾಡಿದಾರದಲ್ಲಿಯೋ ಉಡುದಾರದಲ್ಲಿಯೋ ಕಟ್ಟಿಕೊಂಡಿದ್ದ ಪುಡಿಕಾಸನ್ನು ಔಷಧ ಇಂಜೆಕ್ಷನ್ ಪೌಡರ್ ಮುಂತಾದವುಗಳಿಗಾಗಿ ಅಪ್ಪ ಸುರಿಯುತ್ತಿದ್ದ. ಅಮ್ಮನೂ ತನ್ನ ಕೂಲಿನಾಲಿಯ ದುಡ್ಡನ್ನು ಎಲೆಅಡಕೆಯ ಸಂಚಿಯಿಂದ ತೆಗೆದು ಕೊಡುತ್ತಿದ್ದಳು. ದಿಕ್ಕುದೇವರುಗಳಿಗೆಲ್ಲಾ ಕಾಸಿನ ಮುಡುಪು ಕಟ್ಟಿ ಹರಕೆ ಹೊರುತ್ತಿದ್ದಳು.
ವಿಶೇಷವಾಗಿ ಮುದುಗೆರೆ ಸಪ್ಪಲಮ್ಮ ಹಾಗೂ ಮಚ್ಚೇನಹಳ್ಳಿ(ದನಿನ) ಮಾರಮ್ಮ ದೇವರ ಹೆಸರುಗಳಲ್ಲಿ ಹರಿಷಿಣದ ಬಟ್ಟೆಯಲ್ಲಿ ಮುಡುಪು ಕಟ್ಟಿದ ಕಾಸನ್ನು ದೇವರ ಪಟದ ಮುಂದಿನ ಮೊಳೆ ಅಥವಾ ನಿಲದ(ನೆಲುವು) ನೇಕೆಹುರಿಗಳಿಗೆ ಗಂಟು ಹೂಡುತ್ತಿದ್ದಳು.ಸ್ಥಳೀಯ ದೇವರ ಗುಡಿಗಳಿಗೆ ಹೋಗಿ ಪೂಜೆ ಮಾಡಿಸಿ ತೆಂಗಿನಕಾಯಿಯ ತೀರ್ಥವನ್ನು ದನಗಳ ಮೈಮೇಲೆ, ನಮಗೆ ಮತ್ತು ಕೊಟ್ಟಿಗೆಗೆ ಚುಮುಕಿಸಿ ಎಲ್ಲರ ಹಣೆಗಳಿಗೂ ಬೊಟ್ಟಿಕ್ಕುತ್ತಿದ್ದಳು.
ಗೆರಸಲು ರೋಗ ಅಥವಾ ಕಾಲು- ಬಾಯಿ ಜ್ವರ ಎಂಬ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಒಂದು ರೋಗಗ್ರಸ್ತ ರಾಸಿನಿಂದ ಇನ್ನೊಂದು ಆರೋಗ್ಯವಂತ ರಾಸಿಗೆ ನೇರ ಸಂಪರ್ಕದಿಂದಲೂ, ಮೂತ್ರ ಗಂಜಳದ ವಾಸನೆ ತುಂಬಿಕೊಂಡ ಗಾಳಿಯ ಮೂಲಕವೂ ಹರಡಿಕೊಂಡು ಇಡೀ ಊರಿನ ಜಾನುವಾರುಗಳಿಗೆ ಅತೀ ಶೀಘ್ರವಾಗಿ ಹಬ್ಬಿಬಿಡುತ್ತಿತ್ತು.
ಕಲುಷಿತಗೊಂಡ ಮೇವು ಮತ್ತು ಮಲೆತ ನೀರನ್ನು ಸೇವಿಸುವುದರ ಮೂಲಕವೂ ಗೆರಸಲು ರೋಗಾಣುಗಳು ಹರಡುತ್ತವೆಂಬ ವೈಜ್ಞಾನಿಕ ತಿಳಿವಳಿಕೆ ಇರದಿದ್ದ ನಮ್ಮ ಪೂರ್ವಿಕರು, ಇವೆಲ್ಲವೂ ದೇವರುಗಳೇ ತಂದೊಡ್ಡುವ ದೊಡ್ಡ ರೋಗಗಳೆಂದು ನಂಬಿದ್ದರು.
ನಮ್ಮದು ಚಿಕ್ಕ ಮನೆ. ದನಗಳ ಗ್ವಾಂದಿಗೆ ಎದುರಿನಲ್ಲಿಯೇ ನಾವು ರಾತ್ರಿ ಹೊತ್ತು ಮಲಗಿರುತ್ತಿದ್ದೆವು. ದನಗಳು ಒಮ್ಮೊಮ್ಮೆ ಹಾಯ್ದಾಡುತ್ತಾ ಕೊಂಬುಗಳಿಂದ ಬಡಿದಾಡಿಕೊಂಡರೆ ಸಾಕು ಅಪ್ಪ ದಡಕ್ಕನೆ ಎದ್ದು ಕೂರುತ್ತಿದ್ದ. ಹಾಯ್ದಾಡುವ ದನಗಳನ್ನು ನಾವು ಸಾಕಿದ್ದೇ ಅಪರೂಪ. ನಮ್ಮ ಮನೆಯಲ್ಲಿದ್ದದ್ದು ಹಸುಮಕ್ಕಳಂತಹ ದನಗಳು.
ನಾನು ಒಮ್ಮೊಮ್ಮೆ ನೇರವಾಗಿ ಹಸುವಿನ ಕೆಚ್ಚಲಿಗೆ ಬಾಯಿಹಾಕಿ ಹಾಲು ಕುಡಿಯುತ್ತಿದ್ದೆನು. ನಮ್ಮ ಮನೆಯಲ್ಲಿದ್ದ ದನಗಳು ಅಂತಹ ಸಾಧುಜೀವಿಗಳಾಗಿದ್ದವು. ಇಂಥಾ ಹಸುಗಳಿಗೆ ಗೆರಸಲು ರೋಗ ತಗುಲಿದಾಗ ರೋಗಗ್ರಸ್ತ ರಾಸಿನಲ್ಲಿ ಮೊದಲಿಗೆ ತೀವ್ರ ಜ್ವರ ಕಾಣಿಸುಕೊಂಡು ಮೇವು ತಿನ್ನುವುದನ್ನು ನಿಲ್ಲಿಸಿಬಿಡುತ್ತಿತ್ತು. ಬಾಯಲ್ಲಿ ನೊರೆ ಎಂಜಲು ಸುರಿಸಿಕೊಂಡು ಮೂಗಿನಲ್ಲಿ ಸಿಂಬಳ ಸುರಿಸಿಕೊಂಡು ನೀರನ್ನೂ ಕೂಡಾ ಮುಟ್ಟದೆ ಮೈಕೂದಲು ಮುಳ್ಳೆದ್ದು ನಿಂತುಬಿಡುತ್ತಿತ್ತು.
ನಾವು ಹಾಲಿಂಡುವ ಮಾತಿರಲಿ ಕರುವಿಗೂ ಹಾಲೂಡುವುದನ್ನು ನಿಲ್ಲಿಸುತ್ತಿದ್ದ ಹಸುವಿಗೆ ನೋಡನೋಡುತ್ತಲೇ ಕಾಲು ಕುಂಟು ಬೀಳುತ್ತಿತ್ತು. ಮುಸುಡಿಯ ಮೇಲೆ ಚಿಕ್ಕ ಚಿಕ್ಕ ಗುಳ್ಳೆಗಳೆದ್ದು ಆ ಗುಳ್ಳೆಗಳೊಡೆದು ಬಾಯಿಯ ಜೊಲ್ಲು ವಾಸನೆ ನಮ್ಮ ಮನೆ ತುಂಬಾ ಹರಡಿಕೊಳ್ಳುತ್ತಿತ್ತು. ನನ್ನ ಅಪ್ಪನು ಹಸುವಿನ ಬಾಯಿಯನ್ನು ಭದ್ರವಾಗಿ ಹಿಡಿದು ಕೈಗಳಿಂದ ಮುಸುಡಿಯನ್ನು ವಸಡುಗಳನ್ನೂ ಅಗಲವಾಗಿ ತೆಗೆದು ಬಾಯಿಯ ಮತ್ತು ನಾಲಗೆಯ ಹುಣ್ಣುಗಳನ್ನು ಗಮನಿಸುತ್ತಿದ್ದ.
ವಸಡು ನಾಲಗೆ ಮುಸುಡಿಯ ಮೇಲೆಲ್ಲಾ ಅಲ್ಸರ್ ಬೊಬ್ಬೆಗಳೆದ್ದು ಈರುಳ್ಳಿ ಪೊರೆ ತೆಗೆದಂತೆ ಅಲ್ಸರ್ ಪೊರೆಯುದುರಿದ ಜಾಗಗಳೆಲ್ಲಾ ಕೆಂಪಗೆ ಕಾಣಿಸುತ್ತಿದ್ದವು. ಚಿಕ್ಕ ಮಕ್ಕಳಾಗಿದ್ದ ನಾವು, ನಮ್ಮ ಹಸುವಿಗೆ ಒದಗಿದ ಪಾಡನ್ನು ಕಂಡು ಮನೆ ತುಂಬಾ ಅಳುತ್ತಿದ್ದೆವು. ನಾವು ಎಷ್ಟೇ ಪ್ರಯತ್ನಸಿದರೂ ಆ ಹಸು ಮೇವು ತಿನ್ನಲು ನೀರು ಕುಡಿಯಲು ನಿರಾಕರಿಸುತ್ತಿತ್ತು. ಪಾದಗಳ ಗೊರಸಿನ ಸೀಳುಗಳಲ್ಲಿಯೂ ಹುಣ್ಣುಗಳಾಗಿ ನೊಣ ಸೊಳ್ಳೆ ಜೀರುಂಡೆಗಳು ಕುಳಿತು ಹುಣ್ಣುಗಳು ದೊಡ್ಡ ವ್ರಣಗಳಾಗಿ ಹುಳುಗಳು ಬೀಳುತ್ತಿದ್ದವು. ಕೆಲವೊಮ್ಮೆ ಮೊಲೆತೊಟ್ಟು ಮತ್ತು ಕೆಚ್ಚಲಿಗೂ ಗುಳ್ಳೆಗಳು ಹಬ್ಬುತ್ತಿದ್ದವು.
ಅಪ್ಪನು ಬೆಟ್ಟ ಗುಡ್ಡ ಬಯಲು ಅಲೆದಾಡಿ ಲೋಳೆಸರ (ಆಲೋವೆರಾ) ತಂದು ಬೆಂಬೂದಿಯಲ್ಲಿ ಸುಟ್ಟು, ಹಿಂಡಿ ತೆಗೆದ ರಸವನ್ನು ದನಗಳ ಬಾಯಿ ನಾಲಗೆ ವಸಡು ಗೊರಸುಗಳ ಮೇಲೆ ಸವರಿ ಬಿಳಿ ಪಾವುಡದಲ್ಲಿ ಒರೆಸುತ್ತಿದ್ದ. ಗೊರಸಿನ ಗಾಯಗಳನ್ನು ಬಿಸಿನೀರಿನಲ್ಲಿ ತೊಳೆದು, ಸೀಳುಗಳಿಗೆ ಹೊಂಗೆಣ್ಣೆ, ಹಿಪ್ಪೆ ಎಣ್ಣೆ ಅಥವಾ ಬೇವಿನೆಣ್ಣೆ ಸುರಿಯುತ್ತಿದ್ದೆವು ಕೋಳಿಪುಕ್ಕ ಅಥವಾ ಗರಿಕೆ ಎಸಳನ್ನು ಬೇವಿನೆಣ್ಣೆಯಲ್ಲಿ ಅದ್ದಿ ಸೀಳುಸೀಳಿಗೂ ಹಚ್ಚಿದರೆ ನೊಣ ಕೂರುತ್ತಿರಲಿಲ್ಲ.
ಗುಡಾಣದಲ್ಲಿ ಬಿಸಿನೀರು ಕಾಯಿಸಿ ಮೈತೊಳೆಯುತ್ತಿದ್ದೆವು. ಬಲು ಎಚ್ಚರದಿಂದ ದನದ ಕೊಟ್ಟಿಗೆಯಲ್ಲಿ ತೆಂಗಿನ ಗರಿಗಳಿಗೆ ಬೆಂಕಿ ಹಚ್ಚಿ ಧಗಧಗಿಸುವ ಜ್ವಾಲೆಯ ಮೇಲೆ ಬೇವಿನಸೊಪ್ಪು ಲಕಲಿಸೊಪ್ಪು ತಂಗಡಿಸೊಪ್ಪು ಕಕ್ಕೆಸೊಪ್ಪು ಮುಂತಾದ ನಾಲ್ಕಾರು ಬಗೆಯ ಹಸಿರು ತೊಪ್ಪಲು ಹಾಕಿ ಉರಿಸಿ ಹೊಗೆ ತುಂಬಿಸಿ, ಹಸಿರೆಲೆ ಹೊಗೆಯ ಕಾವಿನಲ್ಲಿ ದನಗಳನ್ನು ನಿಲ್ಲಿಸುತ್ತಿದ್ದೆವು.
ಗೆರಸಲು ರೋಗದಿಂದ ನಮ್ಮ ಹಸುಗಳು ನರಳುವಾಗ ಅಮ್ಮನು ಮೂರ್ನಾಲ್ಕು ಸೇರಿನಷ್ಟು ಹುರುಳಿಕಾಳನ್ನು ನೀರಿನಲ್ಲಿ ನೆನೆಸಿ, ರುಬ್ಬು ಗುಂಡಿನಿಂದ ರುಬ್ಬಿ ಹುರುಳಿಕಾಳಿನ ಹಾಲನ್ನು ಸೋಸಿಕೊಡುತ್ತಿದ್ದಳು. ಕೆಲವೊಮ್ಮೆ ರಾಗಿ ಅಂಬಲಿಯನ್ನು ಕಾಯಿಸಿ ತಂದುಕೊಡುತ್ತಿದ್ದಳು. ಅಪ್ಪ ಅದೆಲ್ಲವನ್ನೂ ಬಿದಿರಿನ ಗೊಟ್ಟದಿಂದ ದನಗಳಿಗೆ ಕುಡಿಸುತ್ತಿದ್ದ. ಸ್ವಲ್ಪ ಚೇತರಿಕೆ ಕಾಣಿಸಿದಾಗ ಹಸಿ ಹುಲ್ಲು, ಹುರುಳಿ ಹೊಟ್ಟು, ತೊಗರಿ ಹೊಟ್ಟು, ಅವರೆ ಹೊಟ್ಟು, ಸಾವೆ ಹುಲ್ಲು, ಆರಕದ ಹುಲ್ಲು, ಕೊರಲೆ ಹುಲ್ಲು ಮುಂತಾದ ಮೆತ್ತನೆ ಮೇವನ್ನು ತಿನ್ನಿಸುತ್ತಿದ್ದ.
ನಾನು ನನ್ನ ಅಕ್ಕ ಮತ್ತು ತಮ್ಮಂದಿರು ಹಸಿ ಹುಲ್ಲನ್ನು ಹೊಲಮಾಳದಲ್ಲಿ ಕಿತ್ತು ತರುತ್ತಿದ್ದೆವು. ಅಂತೂ ಇಂತೂ ನಾಟಿಮದ್ದು, ಇಂಗ್ಲೀಷ್ ಮದ್ದು, ದೇಶಿಜ್ಞಾನದ ಚಿಕಿತ್ಸೆ, ಮೆತ್ತನೆಯ ಮೇವು ಮುಂತಾದ ಆರೈಕೆಗಳು ಫಲಿಸಿ ನಮ್ಮ ದನಗಳು ಮತ್ತೆ ಹೊಸ ಜೀವಕಳೆ ತುಂಬಿಕೊಳ್ಳುತ್ತಿದ್ದವು.ನಮ್ಮ ಮುಖದಲ್ಲೂ ನಗು ತರಿಸಿ ಬದುಕಿಗೆ ಕಳೆ ತುಂಬುತ್ತಿದ್ದವು.
ಇಲ್ಲಿ ನನ್ನದೇ ಅನುಭವಗಳನ್ನು ದಾಖಲಿಸಲು ನನಗೆ ಪ್ರೇರಣೆ ನೀಡಿದ್ದು ನಾನು ಇತ್ತೀಚೆಗೆ ಸಂಶೋಧಿಸಿದ ಒಂದು ಜಾನಪದ ಸ್ಥಳಪುರಾಣ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿ ದೇವರತೋಪು ಎಂಬ ಗ್ರಾಮದಲ್ಲಿರುವ ಕರುವುಗಲ್ಲಮ್ಮ ಎಂಬ ಗೋಕಲ್ಲನ್ನು ಕುರಿತ ಈ ಸ್ಥಳಪುರಾಣವು ಹದಿಮೂರು ಶತಮಾನಗಳಷ್ಟು ಹಿಂದಕ್ಕೆ ಸರಿಯುತ್ತದೆ. ಜಯಮಂಗಲಿ ನದಿಯ ತಟದಲ್ಲಿರುವ ದೇವರತೋಪು ಗ್ರಾಮದ ಪುರಾತನ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಅಂಗಳದಲ್ಲಿರುವ ಕರುವುಗಲ್ಲು ಆ ಊರಿನ ಹುಟ್ಟಿನ ಕಥೆಯನ್ನು ಹೇಳುತ್ತದೆ.
ಸೀಮಾಂಧ್ರದ ರಾಯಲಸೀಮಾ ಕರ್ನೂಲು ಜಿಲ್ಲೆಯ ಆಹೋಬಲಂ ಮೂಲದ ವೈಷ್ಣವ ಪಂಥೀಯ ಕಾಪುರೆಡ್ಡಿ ಸಮುದಾಯದ ಕೆಲವು ಕುಟುಂಬಗಳು ಆರು ಎತ್ತಿನ ಬಂಡಿಗಳನ್ನು ಕಟ್ಟಿಕೊಂಡು ದಕ್ಷಿಣ ಮಾರ್ಗವಾಗಿ ಮಧುಗಿರಿ ಸೀಮೆಗೆ ವಲಸೆ ಬಂದರು. ಕಡಪ – ಕದಿರಿ ಮಾರ್ಗವಾಗಿ ಪಿನಾಕಿನಿ ನದಿಯ ತೋಳುಗಳನ್ನಿಡಿದು ತಮ್ಮ ವಲಸೆ ದಾರಿಯನ್ನು ಮುಂದುವರೆಸಿ ನಡೆಯುತ್ತಿರುವಾಗ ಪಿನಾಕಿನಿಯು ಮೈದುಂಬಿದಳು.
ಕುಲದೇವತೆಯಾದ ಆಹೋಬಲ ನರಸಿಂಹಸ್ವಾಮಿಯ ಹೆಸರೆತ್ತಿ ಪೂಜಿಸಿದ ಅವರು, ಪಿನಾಕಿನಿಯನ್ನು ಪ್ರಾರ್ಥಿಸಲು ಮೈದುಂಬಿ ಹರಿಯುತ್ತಿದ್ದ ಅವಳು ಬಂಡಿಜಾಡಿನಷ್ಟು ಓಣಿಯನ್ನು ಬಿಟ್ಟು ಹರಿದಳು. ಬಂಡಿಗಳು ಸಾಗಲು ಬಂಡಿಜಾಡಿನಷ್ಟು ಅಗಲ ಅವಕಾಶ ನೀಡಿದ ಪಿನಾಕಿನಿಗೆ ಕೈಮುಗಿದು ಪ್ರಯಾಣ ಮುಂದುವರೆಸಿದ ಕಾಪುರೆಡ್ಡಿಗಳು ದೊಡ್ಡದಾಳವಟ್ಟ ಎಂಬ ಊರಿನ ಸಮೀಪಕ್ಕೆ ಬಂದು ತಲುಪಿದಾಗ ಸಂಜೆಯಾಗಿತ್ತು.
ಬಂಡಿಗೆ ಹೂಡಿದ್ದ ಬಿಳಿ ಎತ್ತೊಂದು ಸತ್ತ ಕಾರಣ ಬಿಳಿ ಎತ್ತುಗಳ ಬಂಡಿಗಳಲ್ಲಿದ್ದ ಕುಟುಂಬದವರೆಲ್ಲರೂ ಅಲ್ಲಿಯೇ ಹಳ್ಳದ ದಿಡ್ಡೆಯಲ್ಲಿ ನೆಲೆಸಬೇಕೆಂದು ಹಾಗೂ ಕರಿ ಎತ್ತಿನ ಬಂಡಿಗಳ ಕುಟುಂಬಗಳು ತಮ್ಮ ಪ್ರಯಾಣವನ್ನು ಮುಂದಕ್ಕೆ ಬೆಳೆಸಬೇಕೆಂದು ತೀರ್ಮಾನಿಸಲಾಯಿತು. ಬಿಳಿ ಎತ್ತಿನ ಬಂಡಿಯ ಕುಟುಂಬಗಳು ಅಲ್ಲಿಯೇ ನೆಲೆಸಿ ತಮ್ಮ ಕುಲದೇವತೆ ನರಸಿಂಹಸ್ವಾಮಿಯ ಗುಡಿಯನ್ನು ಕಟ್ಟಿಕೊಂಡರು.
ಕರಿ ಎತ್ತಿನ ಬಂಡಿಯಲ್ಲಿದ್ದ ಕಾಪುರೆಡ್ಡಿ ಕುಟುಂಬದವರು ಕೊಡಿಗೇನಹಳ್ಳಿ ಹತ್ತಿರದ ತೋಪಿಗೆ ಬಂದಾಗ ಜಯಮಂಗಲಿಯು ಮೈದುಂಬಿ ಹರಿಯುತ್ತಿದ್ದಳು. ಆ ರಾತ್ರಿ ಅಲ್ಲಿಯೇ ಒಲೆಗುಂಡು ಹೂಡಿ ಅಟ್ಟುಂಡು ಬೆಳಗಾದಾಗ ಪ್ರಯಾಣ ಮುಂದುವರಿಸಲೆಂದು ಬಂಡಿಹೂಡಲು ಹೋದಾಗ ಕರಿ ಎತ್ತೊಂದು ತಾನು ಕಳೆದುಕೊಂಡ ಬಿಳಿ ಎತ್ತನ್ನು ನೆನೆದು ದುಃಖಿಸುತ್ತಾ ಮೇವು ನೀರು ಸೇವಿಸುವುದನ್ನು ನಿರಾಕರಿಸಿತು.
ಜ್ವರ ಬಂದು ಬಂಡಿಯ ನೊಗಕ್ಕೆ ಹೆಗಲು ಕೊಡಲೊಪ್ಪದೆ ಪಡಾವು ಮಲಗಿಬಿಟ್ಟಿತು. ಆಗ ಬಿಳಿ ಎತ್ತಿನ ನೆನಪಿಗಾಗಿ ಬೆಣಚುಕಲ್ಲಿನ ಬಿಳಿ ಗೋಕಲ್ಲನ್ನು ತಂದು ನಿಲ್ಲಿಸಲು ದುಃಖ ಮರೆತ ಆ ಎತ್ತು ಲವಲವಿಕೆಯಿಂದ ಮೇವುಕಚ್ಚಿ ನೊಮರು ಹಾಕಿತು. ಮೈದುಂಬಿ ಹರಿಯುತ್ತಿದ್ದ ಜಯಮಂಗಲಿ ನದಿಯ ದಂಡೆಯಲ್ಲಿ ತಮ್ಮ ಕುಲದೇವತೆಯಾದ ಲಕ್ಷ್ಮೀನರಸಿಂಹಸ್ವಾಮಿಯ ಹೆಸರೆತ್ತಿ ಪೂಜಿಸಿ ಅವನಿಗೊಂದು ಗುಡಿಯನ್ನು ಕಟ್ಟಿ ಅಲ್ಲಿಯೇ ನೆಲೆಸಿದರು.
ಮುಂದೆ ಕರಿ ಎತ್ತು ತೀರಿಕೊಂಡಾಗ ಅದನ್ನು ಅಲ್ಲಿಯೇ ಸಮಾಧಿ ಮಾಡಿದರು. ಅಂದು ಸಮಾಧಿಗುಡ್ಡೆಯ ಗುರುತಿಗೆ ನೆಟ್ಟ ಗೋಕಲ್ಲು ಅಂದಿನಿಂದಲೂ ಕರುವುಗಲ್ಲಮ್ಮ ಎಂಬ ಹೆಸರಿನಲ್ಲಿ ಪೂಜಿಸಲ್ಪಡುತ್ತಿದೆ. ಇಲ್ಲಿನ ಸುತ್ತೇಳು ಊರುಗಳ ರೈತಾಪಿಗಳು ತಮ್ಮ ಜಾನುವಾರುಗಳಿಗೆ ಶ್ರೇಯಸ್ಕರವಾಗಲೆಂದು ಹಾಗೂ ಜಾನುವಾರುಗಳಿಗೆ ರೋಗರುಜಿನಗಳು ಬಂದಾಗ ಈ ಗೋಕಲ್ಲಿಗೆ ಹರಕೆ ಹೊತ್ತು ಪೂಜಿಸುತ್ತಿದ್ದಾರೆ. ಕರಿ ಗೋಕಲ್ಲಿನ ಪಕ್ಕದಲ್ಲಿಯೇ ಬಿಳಿ ಗೋಕಲ್ಲು ಕೂಡಾ ಇದೆ. ಇದು ಸ್ಥಳಪುರಾಣ.
ದಕ್ಷಿಣ ಕರ್ನಾಟಕದ ಬಹುತೇಕ ಊರುಗಳಲ್ಲಿ ಕರುವುಗಲ್ಲಮ್ಮ ಹೆಸರಿನಿಂದ ಪೂಜಿಸುವ ಗೋಕಲ್ಲುಗಳಿವೆ. ಜಾನುವಾರುಗಳಿಗೆ ಗೆರಸು ರೋಗ (ಕಾಲು – ಬಾಯಿ ಜ್ವರ) ಬಂದಾಗ, ಪ್ರತಿ ಕುಟುಂಬದ ರೈತರು ಕರುವುಗಲ್ಲಮ್ಮನ ಮೇಲೆ ಕೊಡಗಟ್ಟಲೆ ನೀರು ಸುರಿದು ಪೂಜಿಸುತ್ತಾರೆ. ನೀರು ಹರಿದ ದಾರಿಗುಂಟ ಬುರುದೆಯಲ್ಲಿ ತಮ್ಮ ಜಾನುವಾರುಗಳನ್ನು ಮೂರು ಸುತ್ತು ಓಡಾಡಿಸುತ್ತಾರೆ.
ಆಶ್ಚರ್ಯವೆಂಬಂತೆ ಗೊರಸಿನ ಸಂದಿಯಲ್ಲಿ ಹುಣ್ಣುಗಳಾಗಿ ಹುಳು ತುಂಬಿದ ಗೋಪಾದಗಳು ಬುರುದೆ ತುಂಬಿಕೊಂಡು ಹುಳು-ಹುಣ್ಣು ನೀಗಿಕೊಂಡು ಗೆಲುವಾಗುತ್ತಿದ್ದವು. ಮುಸುಡಿಮೂತಿ ನಾಲಗೆಯ ಹುಣ್ಣುಗಳೂ ವಾಸಿಯಾಗಿ ಮೇವು ತಿಂದು ಲವಲವಿಕೆಯಿಂದ ನೊಮರು ಹಾಕುತ್ತಿದ್ದವು. ಪಶು ಸಂಗೋಪನೆ ಇಲಾಖೆಯ ‘ದನಿನ ಡಾಕ್ಟರ್’ ದೇವತೆಗಳಿಗೂ ಸ್ಥಳೀಯ ನಾಟಿಔಷಧಿ ಪಂಡಿತ ದೇವತೆಗಳಿಗೂ ನಮಸ್ಕಾರ. ಈಗಿನ ಖಾಯಿಲೆ ಮತ್ತು ದೇವರ ಸ್ವರೂಪ ಬೇರೆ ಬೇರೆಯೇ ಆಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243




