ಲೈಫ್ ಸ್ಟೈಲ್
ಜಾನುವಾರುಗಳ ಗೆರಸಲು(ಕಾಲು-ಬಾಯಿ ಜ್ವರ) ರೋಗವೂ,.. ಕರುವುಗಲ್ಲಮ್ಮ ದೇವತೆಯೂ..
![](https://suddidina.com/wp-content/uploads/2019/12/Cow-Davangere-7.jpg)
ರೈತರ ಮಕ್ಕಳು ದಯಮಾಡಿ ಈ ಲೇಖನವನ್ನು ತಪ್ಪದೇ ಓದಿರಿ…
- ಡಾ.ವಡ್ಡಗೆರೆ ನಾಗರಾಜಯ್ಯ
ನಮ್ಮದು ರೈತಾಪಿ ಕುಟುಂಬ. ಕೃಷಿ ಕೆಲಸ ಮತ್ತು ಕರಾವಿಗಾಗಿ ನಮ್ಮ ಮನೆಯಲ್ಲಿ ಸದಾ ಒಂದು ಜೊತೆ ನಾಟಿ ಹಸುಗಳು ಮತ್ತು ಕರುಗಳು ಇರುತ್ತಿದ್ದವು. ಅವುಗಳನ್ನು ನಾವು ಸಾಕುತ್ತಿದ್ದೆವು ಎಂಬುದಕ್ಕಿಂತಲೂ ಆ ‘ಜೀವಧನ’ಗಳು ನಮ್ಮನ್ನು ಸಾಕುತ್ತಿದ್ದವು ಎಂದು ಹೇಳಿದರೆ ಸರಿಯಾದೀತು. ಜಾನುವಾರುಗಳನ್ನು ನಮ್ಮ ಪೂರ್ವಿಕರು ‘ಜೀವಧನ’ ಎಂದು ಕರೆದಿರುವುದು ಅನ್ವರ್ಥಕವಾಗಿದೆ.
ಜೀವಧನ ಎಂದರೆ ಜೀವಂತ ಹಣ! ಈ ಜೀವಧನಗಳು ಜೀವಂತ ಹಣ ಮಾತ್ರವಾಗಿರದೆ ಹಣಕ್ಕಿಂತಲೂ ಮಿಗಿಲಾಗಿ ನಮ್ಮ ಜೀವಭಾವದೊಂದಿಗೆ ನಂಟು ಬೆಸೆದುಕೊಂಡಿರುತ್ತಿದ್ದವು. ಜಾನುವಾರುಗಳನ್ನು ನೋಟುಗಳ ರೂಪದ ಆರ್ಥಿಕ ದೃಷ್ಟಿಯಿಂದ ನೋಡುವುದೇ ಅಮಾನವೀಯ ಅನ್ನಿಸುತ್ತದೆ.
ಪುರಾತನ ಕಾಲದ ಚೇಗಿದ ಮರವೊಂದನ್ನು ನಾವು ಹಣದ ರೂಪದಲ್ಲಿ ಬೆಲೆಕಟ್ಟಲು ಹೋದರೆ, ಆ ಮರವು ಇಷ್ಟೂ ದೀರ್ಘ ವರ್ಷಗಳ ಕಾಲ ನೀಡಿದ ನೆರಳು, ಒದಗಿಸಿದ ಆಶ್ರಯ, ಕಣ್ಮನಗಳಿಗೆ ತಂಪು ತುಂಬಿದ ಸೌಂದರ್ಯ, ಪಸರಿಸಿದ ಗಾಳಿಗಮಲು, ಕರುಣಿಸಿದ ಹಣ್ಣುಹಂಪಲು ಮುಂತಾದವುಗಳಿಗೆ ಯಾವ ಬೆಲೆ ಕಟ್ಟಲು ಸಾಧ್ಯ?
ದನಕರು ಕುರಿಮೇಕೆ ಕೋಳಿಗಳನ್ನು ಸಾಕುತ್ತಾ ಅವುಗಳೊಂದಿಗೆ ನಾವು ಬದುಕು ಕಟ್ಟಿಕೊಂಡಿದ್ದೆವು. ಅವುಗಳು ಖಾಯಿಲೆ-ಕಸಾಲೆ ಮುಂತಾದ ಕಾರಣಗಳಿಂದ ಅಕಾಲ ಮರಣಕ್ಕೀಡಾದರೆ ನಮ್ಮದೇ ಕಳ್ಳುಬಳ್ಳಿಯನ್ನು ಕಳೆದುಕೊಂಡಂತೆ ತೀವ್ರ ದುಃಖ ನಮ್ಮನ್ನು ಆವರಿಸುತ್ತಿತ್ತು.
ಜಾನುವಾರುಗಳಿಗೆ ಬಾಧಿಸುವ ಗೆರಸಲು ರೋಗ (ಕಾಲು – ಬಾಯಿ ಜ್ವರ), ಕುಂದು, ಚಪ್ಪೆರೋಗ ಮುಂತಾದವು ಕಾಣಿಸಿಕೊಂಡರಂತೂ ನಮ್ಮ ಕರುಳು ಬಾಯಿಗೆ ಬಂದಂತೆ ನಡುಗಿಹೋಗುತ್ತಿದ್ದೆವು. ಅವುಗಳ ನರಳಾಟ ನೋಡಿ ಕಣ್ಣೀರಾಕುತ್ತಿದ್ದ ನನ್ನ ಅಪ್ಪ, ಊಟ ನೀರು ನಿದ್ದೆ ಎಲ್ಲವನ್ನೂ ಬಿಟ್ಟು ಒದ್ದಾಡುತ್ತಿದ್ದ. ತನಗೆ ತೋಚಿದ ಗಿಡಮೂಲಿಕೆ ಮುಂತಾದ ಮುದ್ದುಗಳನ್ನು ಬಳಸುವುದರ ಜೊತೆಗೆ, ರೋಗಪೀಡಿತ ದನಗಳಿಗೆ ನಾಟಿ ಔಷಧ ನೀಡುವ ಪಂಡಿತರನ್ನು ಹುಡುಕಾಡಿಕೊಂಡು ಅಲೆದಾಡುತ್ತಿದ್ದ.
ತಿಗಳರ ಬೈಲಪ್ಪ, ಬುಡ್ಡೆ ಈರಣ್ಣ, ಮಂತ್ರವಾದಿ ವೆಂಕಟಸ್ವಾಮಯ್ಯ, ಬಡಗಿ ಮುದ್ಧಣ್ಣ ಮುಂತಾದ ಪಂಡಿತರು ನಮ್ಮೂರ ದನಗಳಿಗೆ ನಾಟಿಮದ್ದು ನೀಡುತ್ತಿದ್ದರು. ನಾಟಿಮದ್ದು ಕೊಡಿಸುವುದರ ಜೊತೆಗೆ ಇಂಗ್ಲೀಷ್ ಔಷಧವನ್ನೂ ಕೊಡಿಸಬೇಕೆಂದು ಆಲೋಚಿಸುತ್ತಿದ್ದ ನಾನು, ನಮ್ಮೂರಿನಲ್ಲಿಯೇ ಇದ್ದ ಪಶುಸಂಗೋಪನೆ ಇಲಾಖೆಯ ಸರ್ಕಾರಿ ಪಶು ಚಿಕಿತ್ಸಾಲಯದ ‘ದನಿನ ಡಾಕ್ಟರ್’ ಡಾ.ಹುಲಿಯಪ್ಪನ ಬರುವಿಕೆಗಾಗಿ ದಾರಿ ಕಾಯುತ್ತಾ ಆಸ್ಪತ್ರೆಯ ಬಾಗಿಲಲ್ಲಿ ನಿಲ್ಲುತ್ತಿದ್ದೆ.
ಪುಟಗೋಸಿ ಬಿಗಿಮಾಡಿಕೊಂಡು ಲಾಡಿದಾರದಲ್ಲಿಯೋ ಉಡುದಾರದಲ್ಲಿಯೋ ಕಟ್ಟಿಕೊಂಡಿದ್ದ ಪುಡಿಕಾಸನ್ನು ಔಷಧ ಇಂಜೆಕ್ಷನ್ ಪೌಡರ್ ಮುಂತಾದವುಗಳಿಗಾಗಿ ಅಪ್ಪ ಸುರಿಯುತ್ತಿದ್ದ. ಅಮ್ಮನೂ ತನ್ನ ಕೂಲಿನಾಲಿಯ ದುಡ್ಡನ್ನು ಎಲೆಅಡಕೆಯ ಸಂಚಿಯಿಂದ ತೆಗೆದು ಕೊಡುತ್ತಿದ್ದಳು. ದಿಕ್ಕುದೇವರುಗಳಿಗೆಲ್ಲಾ ಕಾಸಿನ ಮುಡುಪು ಕಟ್ಟಿ ಹರಕೆ ಹೊರುತ್ತಿದ್ದಳು.
ವಿಶೇಷವಾಗಿ ಮುದುಗೆರೆ ಸಪ್ಪಲಮ್ಮ ಹಾಗೂ ಮಚ್ಚೇನಹಳ್ಳಿ(ದನಿನ) ಮಾರಮ್ಮ ದೇವರ ಹೆಸರುಗಳಲ್ಲಿ ಹರಿಷಿಣದ ಬಟ್ಟೆಯಲ್ಲಿ ಮುಡುಪು ಕಟ್ಟಿದ ಕಾಸನ್ನು ದೇವರ ಪಟದ ಮುಂದಿನ ಮೊಳೆ ಅಥವಾ ನಿಲದ(ನೆಲುವು) ನೇಕೆಹುರಿಗಳಿಗೆ ಗಂಟು ಹೂಡುತ್ತಿದ್ದಳು.ಸ್ಥಳೀಯ ದೇವರ ಗುಡಿಗಳಿಗೆ ಹೋಗಿ ಪೂಜೆ ಮಾಡಿಸಿ ತೆಂಗಿನಕಾಯಿಯ ತೀರ್ಥವನ್ನು ದನಗಳ ಮೈಮೇಲೆ, ನಮಗೆ ಮತ್ತು ಕೊಟ್ಟಿಗೆಗೆ ಚುಮುಕಿಸಿ ಎಲ್ಲರ ಹಣೆಗಳಿಗೂ ಬೊಟ್ಟಿಕ್ಕುತ್ತಿದ್ದಳು.
ಗೆರಸಲು ರೋಗ ಅಥವಾ ಕಾಲು- ಬಾಯಿ ಜ್ವರ ಎಂಬ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಒಂದು ರೋಗಗ್ರಸ್ತ ರಾಸಿನಿಂದ ಇನ್ನೊಂದು ಆರೋಗ್ಯವಂತ ರಾಸಿಗೆ ನೇರ ಸಂಪರ್ಕದಿಂದಲೂ, ಮೂತ್ರ ಗಂಜಳದ ವಾಸನೆ ತುಂಬಿಕೊಂಡ ಗಾಳಿಯ ಮೂಲಕವೂ ಹರಡಿಕೊಂಡು ಇಡೀ ಊರಿನ ಜಾನುವಾರುಗಳಿಗೆ ಅತೀ ಶೀಘ್ರವಾಗಿ ಹಬ್ಬಿಬಿಡುತ್ತಿತ್ತು.
ಕಲುಷಿತಗೊಂಡ ಮೇವು ಮತ್ತು ಮಲೆತ ನೀರನ್ನು ಸೇವಿಸುವುದರ ಮೂಲಕವೂ ಗೆರಸಲು ರೋಗಾಣುಗಳು ಹರಡುತ್ತವೆಂಬ ವೈಜ್ಞಾನಿಕ ತಿಳಿವಳಿಕೆ ಇರದಿದ್ದ ನಮ್ಮ ಪೂರ್ವಿಕರು, ಇವೆಲ್ಲವೂ ದೇವರುಗಳೇ ತಂದೊಡ್ಡುವ ದೊಡ್ಡ ರೋಗಗಳೆಂದು ನಂಬಿದ್ದರು.
ನಮ್ಮದು ಚಿಕ್ಕ ಮನೆ. ದನಗಳ ಗ್ವಾಂದಿಗೆ ಎದುರಿನಲ್ಲಿಯೇ ನಾವು ರಾತ್ರಿ ಹೊತ್ತು ಮಲಗಿರುತ್ತಿದ್ದೆವು. ದನಗಳು ಒಮ್ಮೊಮ್ಮೆ ಹಾಯ್ದಾಡುತ್ತಾ ಕೊಂಬುಗಳಿಂದ ಬಡಿದಾಡಿಕೊಂಡರೆ ಸಾಕು ಅಪ್ಪ ದಡಕ್ಕನೆ ಎದ್ದು ಕೂರುತ್ತಿದ್ದ. ಹಾಯ್ದಾಡುವ ದನಗಳನ್ನು ನಾವು ಸಾಕಿದ್ದೇ ಅಪರೂಪ. ನಮ್ಮ ಮನೆಯಲ್ಲಿದ್ದದ್ದು ಹಸುಮಕ್ಕಳಂತಹ ದನಗಳು.
ನಾನು ಒಮ್ಮೊಮ್ಮೆ ನೇರವಾಗಿ ಹಸುವಿನ ಕೆಚ್ಚಲಿಗೆ ಬಾಯಿಹಾಕಿ ಹಾಲು ಕುಡಿಯುತ್ತಿದ್ದೆನು. ನಮ್ಮ ಮನೆಯಲ್ಲಿದ್ದ ದನಗಳು ಅಂತಹ ಸಾಧುಜೀವಿಗಳಾಗಿದ್ದವು. ಇಂಥಾ ಹಸುಗಳಿಗೆ ಗೆರಸಲು ರೋಗ ತಗುಲಿದಾಗ ರೋಗಗ್ರಸ್ತ ರಾಸಿನಲ್ಲಿ ಮೊದಲಿಗೆ ತೀವ್ರ ಜ್ವರ ಕಾಣಿಸುಕೊಂಡು ಮೇವು ತಿನ್ನುವುದನ್ನು ನಿಲ್ಲಿಸಿಬಿಡುತ್ತಿತ್ತು. ಬಾಯಲ್ಲಿ ನೊರೆ ಎಂಜಲು ಸುರಿಸಿಕೊಂಡು ಮೂಗಿನಲ್ಲಿ ಸಿಂಬಳ ಸುರಿಸಿಕೊಂಡು ನೀರನ್ನೂ ಕೂಡಾ ಮುಟ್ಟದೆ ಮೈಕೂದಲು ಮುಳ್ಳೆದ್ದು ನಿಂತುಬಿಡುತ್ತಿತ್ತು.
ನಾವು ಹಾಲಿಂಡುವ ಮಾತಿರಲಿ ಕರುವಿಗೂ ಹಾಲೂಡುವುದನ್ನು ನಿಲ್ಲಿಸುತ್ತಿದ್ದ ಹಸುವಿಗೆ ನೋಡನೋಡುತ್ತಲೇ ಕಾಲು ಕುಂಟು ಬೀಳುತ್ತಿತ್ತು. ಮುಸುಡಿಯ ಮೇಲೆ ಚಿಕ್ಕ ಚಿಕ್ಕ ಗುಳ್ಳೆಗಳೆದ್ದು ಆ ಗುಳ್ಳೆಗಳೊಡೆದು ಬಾಯಿಯ ಜೊಲ್ಲು ವಾಸನೆ ನಮ್ಮ ಮನೆ ತುಂಬಾ ಹರಡಿಕೊಳ್ಳುತ್ತಿತ್ತು. ನನ್ನ ಅಪ್ಪನು ಹಸುವಿನ ಬಾಯಿಯನ್ನು ಭದ್ರವಾಗಿ ಹಿಡಿದು ಕೈಗಳಿಂದ ಮುಸುಡಿಯನ್ನು ವಸಡುಗಳನ್ನೂ ಅಗಲವಾಗಿ ತೆಗೆದು ಬಾಯಿಯ ಮತ್ತು ನಾಲಗೆಯ ಹುಣ್ಣುಗಳನ್ನು ಗಮನಿಸುತ್ತಿದ್ದ.
ವಸಡು ನಾಲಗೆ ಮುಸುಡಿಯ ಮೇಲೆಲ್ಲಾ ಅಲ್ಸರ್ ಬೊಬ್ಬೆಗಳೆದ್ದು ಈರುಳ್ಳಿ ಪೊರೆ ತೆಗೆದಂತೆ ಅಲ್ಸರ್ ಪೊರೆಯುದುರಿದ ಜಾಗಗಳೆಲ್ಲಾ ಕೆಂಪಗೆ ಕಾಣಿಸುತ್ತಿದ್ದವು. ಚಿಕ್ಕ ಮಕ್ಕಳಾಗಿದ್ದ ನಾವು, ನಮ್ಮ ಹಸುವಿಗೆ ಒದಗಿದ ಪಾಡನ್ನು ಕಂಡು ಮನೆ ತುಂಬಾ ಅಳುತ್ತಿದ್ದೆವು. ನಾವು ಎಷ್ಟೇ ಪ್ರಯತ್ನಸಿದರೂ ಆ ಹಸು ಮೇವು ತಿನ್ನಲು ನೀರು ಕುಡಿಯಲು ನಿರಾಕರಿಸುತ್ತಿತ್ತು. ಪಾದಗಳ ಗೊರಸಿನ ಸೀಳುಗಳಲ್ಲಿಯೂ ಹುಣ್ಣುಗಳಾಗಿ ನೊಣ ಸೊಳ್ಳೆ ಜೀರುಂಡೆಗಳು ಕುಳಿತು ಹುಣ್ಣುಗಳು ದೊಡ್ಡ ವ್ರಣಗಳಾಗಿ ಹುಳುಗಳು ಬೀಳುತ್ತಿದ್ದವು. ಕೆಲವೊಮ್ಮೆ ಮೊಲೆತೊಟ್ಟು ಮತ್ತು ಕೆಚ್ಚಲಿಗೂ ಗುಳ್ಳೆಗಳು ಹಬ್ಬುತ್ತಿದ್ದವು.
ಅಪ್ಪನು ಬೆಟ್ಟ ಗುಡ್ಡ ಬಯಲು ಅಲೆದಾಡಿ ಲೋಳೆಸರ (ಆಲೋವೆರಾ) ತಂದು ಬೆಂಬೂದಿಯಲ್ಲಿ ಸುಟ್ಟು, ಹಿಂಡಿ ತೆಗೆದ ರಸವನ್ನು ದನಗಳ ಬಾಯಿ ನಾಲಗೆ ವಸಡು ಗೊರಸುಗಳ ಮೇಲೆ ಸವರಿ ಬಿಳಿ ಪಾವುಡದಲ್ಲಿ ಒರೆಸುತ್ತಿದ್ದ. ಗೊರಸಿನ ಗಾಯಗಳನ್ನು ಬಿಸಿನೀರಿನಲ್ಲಿ ತೊಳೆದು, ಸೀಳುಗಳಿಗೆ ಹೊಂಗೆಣ್ಣೆ, ಹಿಪ್ಪೆ ಎಣ್ಣೆ ಅಥವಾ ಬೇವಿನೆಣ್ಣೆ ಸುರಿಯುತ್ತಿದ್ದೆವು ಕೋಳಿಪುಕ್ಕ ಅಥವಾ ಗರಿಕೆ ಎಸಳನ್ನು ಬೇವಿನೆಣ್ಣೆಯಲ್ಲಿ ಅದ್ದಿ ಸೀಳುಸೀಳಿಗೂ ಹಚ್ಚಿದರೆ ನೊಣ ಕೂರುತ್ತಿರಲಿಲ್ಲ.
ಗುಡಾಣದಲ್ಲಿ ಬಿಸಿನೀರು ಕಾಯಿಸಿ ಮೈತೊಳೆಯುತ್ತಿದ್ದೆವು. ಬಲು ಎಚ್ಚರದಿಂದ ದನದ ಕೊಟ್ಟಿಗೆಯಲ್ಲಿ ತೆಂಗಿನ ಗರಿಗಳಿಗೆ ಬೆಂಕಿ ಹಚ್ಚಿ ಧಗಧಗಿಸುವ ಜ್ವಾಲೆಯ ಮೇಲೆ ಬೇವಿನಸೊಪ್ಪು ಲಕಲಿಸೊಪ್ಪು ತಂಗಡಿಸೊಪ್ಪು ಕಕ್ಕೆಸೊಪ್ಪು ಮುಂತಾದ ನಾಲ್ಕಾರು ಬಗೆಯ ಹಸಿರು ತೊಪ್ಪಲು ಹಾಕಿ ಉರಿಸಿ ಹೊಗೆ ತುಂಬಿಸಿ, ಹಸಿರೆಲೆ ಹೊಗೆಯ ಕಾವಿನಲ್ಲಿ ದನಗಳನ್ನು ನಿಲ್ಲಿಸುತ್ತಿದ್ದೆವು.
ಗೆರಸಲು ರೋಗದಿಂದ ನಮ್ಮ ಹಸುಗಳು ನರಳುವಾಗ ಅಮ್ಮನು ಮೂರ್ನಾಲ್ಕು ಸೇರಿನಷ್ಟು ಹುರುಳಿಕಾಳನ್ನು ನೀರಿನಲ್ಲಿ ನೆನೆಸಿ, ರುಬ್ಬು ಗುಂಡಿನಿಂದ ರುಬ್ಬಿ ಹುರುಳಿಕಾಳಿನ ಹಾಲನ್ನು ಸೋಸಿಕೊಡುತ್ತಿದ್ದಳು. ಕೆಲವೊಮ್ಮೆ ರಾಗಿ ಅಂಬಲಿಯನ್ನು ಕಾಯಿಸಿ ತಂದುಕೊಡುತ್ತಿದ್ದಳು. ಅಪ್ಪ ಅದೆಲ್ಲವನ್ನೂ ಬಿದಿರಿನ ಗೊಟ್ಟದಿಂದ ದನಗಳಿಗೆ ಕುಡಿಸುತ್ತಿದ್ದ. ಸ್ವಲ್ಪ ಚೇತರಿಕೆ ಕಾಣಿಸಿದಾಗ ಹಸಿ ಹುಲ್ಲು, ಹುರುಳಿ ಹೊಟ್ಟು, ತೊಗರಿ ಹೊಟ್ಟು, ಅವರೆ ಹೊಟ್ಟು, ಸಾವೆ ಹುಲ್ಲು, ಆರಕದ ಹುಲ್ಲು, ಕೊರಲೆ ಹುಲ್ಲು ಮುಂತಾದ ಮೆತ್ತನೆ ಮೇವನ್ನು ತಿನ್ನಿಸುತ್ತಿದ್ದ.
ನಾನು ನನ್ನ ಅಕ್ಕ ಮತ್ತು ತಮ್ಮಂದಿರು ಹಸಿ ಹುಲ್ಲನ್ನು ಹೊಲಮಾಳದಲ್ಲಿ ಕಿತ್ತು ತರುತ್ತಿದ್ದೆವು. ಅಂತೂ ಇಂತೂ ನಾಟಿಮದ್ದು, ಇಂಗ್ಲೀಷ್ ಮದ್ದು, ದೇಶಿಜ್ಞಾನದ ಚಿಕಿತ್ಸೆ, ಮೆತ್ತನೆಯ ಮೇವು ಮುಂತಾದ ಆರೈಕೆಗಳು ಫಲಿಸಿ ನಮ್ಮ ದನಗಳು ಮತ್ತೆ ಹೊಸ ಜೀವಕಳೆ ತುಂಬಿಕೊಳ್ಳುತ್ತಿದ್ದವು.ನಮ್ಮ ಮುಖದಲ್ಲೂ ನಗು ತರಿಸಿ ಬದುಕಿಗೆ ಕಳೆ ತುಂಬುತ್ತಿದ್ದವು.
ಇಲ್ಲಿ ನನ್ನದೇ ಅನುಭವಗಳನ್ನು ದಾಖಲಿಸಲು ನನಗೆ ಪ್ರೇರಣೆ ನೀಡಿದ್ದು ನಾನು ಇತ್ತೀಚೆಗೆ ಸಂಶೋಧಿಸಿದ ಒಂದು ಜಾನಪದ ಸ್ಥಳಪುರಾಣ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿ ದೇವರತೋಪು ಎಂಬ ಗ್ರಾಮದಲ್ಲಿರುವ ಕರುವುಗಲ್ಲಮ್ಮ ಎಂಬ ಗೋಕಲ್ಲನ್ನು ಕುರಿತ ಈ ಸ್ಥಳಪುರಾಣವು ಹದಿಮೂರು ಶತಮಾನಗಳಷ್ಟು ಹಿಂದಕ್ಕೆ ಸರಿಯುತ್ತದೆ. ಜಯಮಂಗಲಿ ನದಿಯ ತಟದಲ್ಲಿರುವ ದೇವರತೋಪು ಗ್ರಾಮದ ಪುರಾತನ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಅಂಗಳದಲ್ಲಿರುವ ಕರುವುಗಲ್ಲು ಆ ಊರಿನ ಹುಟ್ಟಿನ ಕಥೆಯನ್ನು ಹೇಳುತ್ತದೆ.
ಸೀಮಾಂಧ್ರದ ರಾಯಲಸೀಮಾ ಕರ್ನೂಲು ಜಿಲ್ಲೆಯ ಆಹೋಬಲಂ ಮೂಲದ ವೈಷ್ಣವ ಪಂಥೀಯ ಕಾಪುರೆಡ್ಡಿ ಸಮುದಾಯದ ಕೆಲವು ಕುಟುಂಬಗಳು ಆರು ಎತ್ತಿನ ಬಂಡಿಗಳನ್ನು ಕಟ್ಟಿಕೊಂಡು ದಕ್ಷಿಣ ಮಾರ್ಗವಾಗಿ ಮಧುಗಿರಿ ಸೀಮೆಗೆ ವಲಸೆ ಬಂದರು. ಕಡಪ – ಕದಿರಿ ಮಾರ್ಗವಾಗಿ ಪಿನಾಕಿನಿ ನದಿಯ ತೋಳುಗಳನ್ನಿಡಿದು ತಮ್ಮ ವಲಸೆ ದಾರಿಯನ್ನು ಮುಂದುವರೆಸಿ ನಡೆಯುತ್ತಿರುವಾಗ ಪಿನಾಕಿನಿಯು ಮೈದುಂಬಿದಳು.
ಕುಲದೇವತೆಯಾದ ಆಹೋಬಲ ನರಸಿಂಹಸ್ವಾಮಿಯ ಹೆಸರೆತ್ತಿ ಪೂಜಿಸಿದ ಅವರು, ಪಿನಾಕಿನಿಯನ್ನು ಪ್ರಾರ್ಥಿಸಲು ಮೈದುಂಬಿ ಹರಿಯುತ್ತಿದ್ದ ಅವಳು ಬಂಡಿಜಾಡಿನಷ್ಟು ಓಣಿಯನ್ನು ಬಿಟ್ಟು ಹರಿದಳು. ಬಂಡಿಗಳು ಸಾಗಲು ಬಂಡಿಜಾಡಿನಷ್ಟು ಅಗಲ ಅವಕಾಶ ನೀಡಿದ ಪಿನಾಕಿನಿಗೆ ಕೈಮುಗಿದು ಪ್ರಯಾಣ ಮುಂದುವರೆಸಿದ ಕಾಪುರೆಡ್ಡಿಗಳು ದೊಡ್ಡದಾಳವಟ್ಟ ಎಂಬ ಊರಿನ ಸಮೀಪಕ್ಕೆ ಬಂದು ತಲುಪಿದಾಗ ಸಂಜೆಯಾಗಿತ್ತು.
ಬಂಡಿಗೆ ಹೂಡಿದ್ದ ಬಿಳಿ ಎತ್ತೊಂದು ಸತ್ತ ಕಾರಣ ಬಿಳಿ ಎತ್ತುಗಳ ಬಂಡಿಗಳಲ್ಲಿದ್ದ ಕುಟುಂಬದವರೆಲ್ಲರೂ ಅಲ್ಲಿಯೇ ಹಳ್ಳದ ದಿಡ್ಡೆಯಲ್ಲಿ ನೆಲೆಸಬೇಕೆಂದು ಹಾಗೂ ಕರಿ ಎತ್ತಿನ ಬಂಡಿಗಳ ಕುಟುಂಬಗಳು ತಮ್ಮ ಪ್ರಯಾಣವನ್ನು ಮುಂದಕ್ಕೆ ಬೆಳೆಸಬೇಕೆಂದು ತೀರ್ಮಾನಿಸಲಾಯಿತು. ಬಿಳಿ ಎತ್ತಿನ ಬಂಡಿಯ ಕುಟುಂಬಗಳು ಅಲ್ಲಿಯೇ ನೆಲೆಸಿ ತಮ್ಮ ಕುಲದೇವತೆ ನರಸಿಂಹಸ್ವಾಮಿಯ ಗುಡಿಯನ್ನು ಕಟ್ಟಿಕೊಂಡರು.
ಕರಿ ಎತ್ತಿನ ಬಂಡಿಯಲ್ಲಿದ್ದ ಕಾಪುರೆಡ್ಡಿ ಕುಟುಂಬದವರು ಕೊಡಿಗೇನಹಳ್ಳಿ ಹತ್ತಿರದ ತೋಪಿಗೆ ಬಂದಾಗ ಜಯಮಂಗಲಿಯು ಮೈದುಂಬಿ ಹರಿಯುತ್ತಿದ್ದಳು. ಆ ರಾತ್ರಿ ಅಲ್ಲಿಯೇ ಒಲೆಗುಂಡು ಹೂಡಿ ಅಟ್ಟುಂಡು ಬೆಳಗಾದಾಗ ಪ್ರಯಾಣ ಮುಂದುವರಿಸಲೆಂದು ಬಂಡಿಹೂಡಲು ಹೋದಾಗ ಕರಿ ಎತ್ತೊಂದು ತಾನು ಕಳೆದುಕೊಂಡ ಬಿಳಿ ಎತ್ತನ್ನು ನೆನೆದು ದುಃಖಿಸುತ್ತಾ ಮೇವು ನೀರು ಸೇವಿಸುವುದನ್ನು ನಿರಾಕರಿಸಿತು.
ಜ್ವರ ಬಂದು ಬಂಡಿಯ ನೊಗಕ್ಕೆ ಹೆಗಲು ಕೊಡಲೊಪ್ಪದೆ ಪಡಾವು ಮಲಗಿಬಿಟ್ಟಿತು. ಆಗ ಬಿಳಿ ಎತ್ತಿನ ನೆನಪಿಗಾಗಿ ಬೆಣಚುಕಲ್ಲಿನ ಬಿಳಿ ಗೋಕಲ್ಲನ್ನು ತಂದು ನಿಲ್ಲಿಸಲು ದುಃಖ ಮರೆತ ಆ ಎತ್ತು ಲವಲವಿಕೆಯಿಂದ ಮೇವುಕಚ್ಚಿ ನೊಮರು ಹಾಕಿತು. ಮೈದುಂಬಿ ಹರಿಯುತ್ತಿದ್ದ ಜಯಮಂಗಲಿ ನದಿಯ ದಂಡೆಯಲ್ಲಿ ತಮ್ಮ ಕುಲದೇವತೆಯಾದ ಲಕ್ಷ್ಮೀನರಸಿಂಹಸ್ವಾಮಿಯ ಹೆಸರೆತ್ತಿ ಪೂಜಿಸಿ ಅವನಿಗೊಂದು ಗುಡಿಯನ್ನು ಕಟ್ಟಿ ಅಲ್ಲಿಯೇ ನೆಲೆಸಿದರು.
ಮುಂದೆ ಕರಿ ಎತ್ತು ತೀರಿಕೊಂಡಾಗ ಅದನ್ನು ಅಲ್ಲಿಯೇ ಸಮಾಧಿ ಮಾಡಿದರು. ಅಂದು ಸಮಾಧಿಗುಡ್ಡೆಯ ಗುರುತಿಗೆ ನೆಟ್ಟ ಗೋಕಲ್ಲು ಅಂದಿನಿಂದಲೂ ಕರುವುಗಲ್ಲಮ್ಮ ಎಂಬ ಹೆಸರಿನಲ್ಲಿ ಪೂಜಿಸಲ್ಪಡುತ್ತಿದೆ. ಇಲ್ಲಿನ ಸುತ್ತೇಳು ಊರುಗಳ ರೈತಾಪಿಗಳು ತಮ್ಮ ಜಾನುವಾರುಗಳಿಗೆ ಶ್ರೇಯಸ್ಕರವಾಗಲೆಂದು ಹಾಗೂ ಜಾನುವಾರುಗಳಿಗೆ ರೋಗರುಜಿನಗಳು ಬಂದಾಗ ಈ ಗೋಕಲ್ಲಿಗೆ ಹರಕೆ ಹೊತ್ತು ಪೂಜಿಸುತ್ತಿದ್ದಾರೆ. ಕರಿ ಗೋಕಲ್ಲಿನ ಪಕ್ಕದಲ್ಲಿಯೇ ಬಿಳಿ ಗೋಕಲ್ಲು ಕೂಡಾ ಇದೆ. ಇದು ಸ್ಥಳಪುರಾಣ.
ದಕ್ಷಿಣ ಕರ್ನಾಟಕದ ಬಹುತೇಕ ಊರುಗಳಲ್ಲಿ ಕರುವುಗಲ್ಲಮ್ಮ ಹೆಸರಿನಿಂದ ಪೂಜಿಸುವ ಗೋಕಲ್ಲುಗಳಿವೆ. ಜಾನುವಾರುಗಳಿಗೆ ಗೆರಸು ರೋಗ (ಕಾಲು – ಬಾಯಿ ಜ್ವರ) ಬಂದಾಗ, ಪ್ರತಿ ಕುಟುಂಬದ ರೈತರು ಕರುವುಗಲ್ಲಮ್ಮನ ಮೇಲೆ ಕೊಡಗಟ್ಟಲೆ ನೀರು ಸುರಿದು ಪೂಜಿಸುತ್ತಾರೆ. ನೀರು ಹರಿದ ದಾರಿಗುಂಟ ಬುರುದೆಯಲ್ಲಿ ತಮ್ಮ ಜಾನುವಾರುಗಳನ್ನು ಮೂರು ಸುತ್ತು ಓಡಾಡಿಸುತ್ತಾರೆ.
ಆಶ್ಚರ್ಯವೆಂಬಂತೆ ಗೊರಸಿನ ಸಂದಿಯಲ್ಲಿ ಹುಣ್ಣುಗಳಾಗಿ ಹುಳು ತುಂಬಿದ ಗೋಪಾದಗಳು ಬುರುದೆ ತುಂಬಿಕೊಂಡು ಹುಳು-ಹುಣ್ಣು ನೀಗಿಕೊಂಡು ಗೆಲುವಾಗುತ್ತಿದ್ದವು. ಮುಸುಡಿಮೂತಿ ನಾಲಗೆಯ ಹುಣ್ಣುಗಳೂ ವಾಸಿಯಾಗಿ ಮೇವು ತಿಂದು ಲವಲವಿಕೆಯಿಂದ ನೊಮರು ಹಾಕುತ್ತಿದ್ದವು. ಪಶು ಸಂಗೋಪನೆ ಇಲಾಖೆಯ ‘ದನಿನ ಡಾಕ್ಟರ್’ ದೇವತೆಗಳಿಗೂ ಸ್ಥಳೀಯ ನಾಟಿಔಷಧಿ ಪಂಡಿತ ದೇವತೆಗಳಿಗೂ ನಮಸ್ಕಾರ. ಈಗಿನ ಖಾಯಿಲೆ ಮತ್ತು ದೇವರ ಸ್ವರೂಪ ಬೇರೆ ಬೇರೆಯೇ ಆಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ
![](https://suddidina.com/wp-content/uploads/2024/06/crocodile_suddidina.jpg)
- ಸಂಜಯ್ ಹೊಯ್ಸಳ
ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ..
ಉಪ್ಪು ನೀರಿನ ಮೊಸಳೆ (Saltwater crocodile)
ಮಗ್ಗರ್/ಮಾರ್ಷ್ (Mugger)
ಘಾರಿಯಲ್ (Gharial)
ಇವುಗಳಲ್ಲಿ ಕರ್ನಾಟಕದಲ್ಲಿನ ನದಿಗಳಲ್ಲಿ, ಕೆಲವು ದೊಡ್ಡ ಕೆರೆಗಳಲ್ಲಿ ಕಂಡುಬರುವ ಮೊಸಳೆಗಳು ಮಗ್ಗರ್/ಮಾರ್ಷ್ ಮೊಸಳೆಗಳಾಗಿವೆ. ಕರ್ನಾಟಕದಲ್ಲಿ ಮೊಸಳೆಗಳು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಪಾತ್ರದಲ್ಲಿ ಕಂಡುಬರುತ್ತವೆ. ಇತ್ತೀಚೆಗೆ ಮೊಸಳೆಯ ದವಣೆಗೆ ಸಿಲುಕಿ ಕೆಲವು ಸಾವು ನೋವಿನ ಪ್ರಕರಣಗಳು ಆ ಭಾಗದಲ್ಲಿ ವರದಿಯಾಗಿವೆ.
ಇನ್ನು ಉತ್ತರ ಕರ್ನಾಟಕದ ಭಾಗದ ಕೆಲವು ಪ್ರಮುಖ ನದಿಗಳ ಪಾತ್ರದಲ್ಲೂ ಮೊಸಳೆಗಳು ಆಗಾಗ್ಗೆ ಕಂಡುಬರುತ್ತವೆ. ನಾನು ನೋಡಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊಸಳೆಗಳ ದಾಳಿ ಪ್ರಕರಣಗಳು ತುಂಬಾ ಕಡಿಮೆ ಎನ್ನಬಹುದು. ಈ ಭಾಗದ ನದಿಗಳಲ್ಲಿ ಮೊಸಳೆಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರ ಇರಬಹುದು.
ಕಾವೇರಿ ನದಿಯಲ್ಲಿ ಅತಿಹೆಚ್ಚು ಮೊಸಳೆಗಳು ಕಂಡು ಬರುವುದು ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಪಕ್ಷಿ ಧಾಮವಾದ ರಂಗನತಿಟ್ಟು ಪಕ್ಷಿಧಾಮದಲ್ಲಿ. ಹಿಂದೆ ಪಂಚತಂತ್ರದಲ್ಲಿ ಮೊಸಳೆ ಮತ್ತು ಕೋತಿಕತೆಯಲ್ಲಿ ಮೊಸಳೆಯ ಹೆಂಡತಿಗೆ ಕೋತಿ ನೇರಳೆ ಹಣ್ಣುಗಳನ್ನು ಹೊತ್ತೊಯ್ಯುವ ಕತೆಯಲ್ಲಿ ಗಂಡ ಮತ್ತು ಹೆಂಡತಿ ಮೊಸಳೆಯನ್ನು ಕಲ್ಪಿಸಿಕೊಂಡು ಮಾತ್ರ ನಾನು ಮೊದಲು ಅವುಗಳ ಸಹಜ ಆವಾಸಸ್ಥಾನದಲ್ಲಿ ಮೊಸಳೆಯನ್ನು ನೋಡಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ. ನಂತರ ಬಂಡೀಪುರ ದಟ್ಟಡವಿಯಲ್ಲಿ ಹರಿಯುವ ಮೂಲೆಹೊಳೆ/ ನುಗು ನದಿಯಲ್ಲಿ… ನಂತರದ ದಿನಗಳಲ್ಲಿ ಕಬಿನಿ, ಪಾಲರ್ ಸೇರಿ ಬಹಳಷ್ಟು ಕಡೆ ಬಹಳಷ್ಟು ಮೊಸಳೆಗಳನ್ನು ನೋಡುವ ಅವಕಾಶ ಸಿಕ್ಕಿತು.
ಘಾರಿಯಲ್ ಗಳು ತುಂಬಾ ಅಪರೂಪದ ಮೊಸಳೆ ಸಂತತಿಗಳಾಗಿದ್ದು, ಸದ್ಯ ಉತ್ತರ ಭಾರತದ ಕೆಲವು ನದಿಗಳು ಹಾಗೂ ನೇಪಾಳದಲ್ಲಿ ಮಾತ್ರ ಇವು ಕಾಣಸಿಗುತ್ತಿವೆ. ಇವುಳನ್ನು IUCN red list ಗೆ ಸೇರಿಸಿದ್ದು, ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ.
ನಮಗೆಲ್ಲಾ ಗೊತ್ತಿರುವಂತೆ ಜೀವವೈವಿಧ್ಯತೆಯ ರಕ್ಷಣೆಯಲ್ಲಿ ಎಲ್ಲಾ ಜೀವಿಗಳ ಇರುವಿಕೆ ಬಹಳ ಮುಖ್ಯ. ಜಲಚರಗಳಲ್ಲಿ ಅಗ್ರ ಪರಪಕ್ಷಕಗಳಲ್ಲಿ ಒಂದೆನಿಸಿದ ಮೊಸಳೆ ಜಲಚರ ಜೀವಿಗಳ ಸಮತೋಲನ ಸಾಧಿಸಿ ಅಲ್ಲಿನ ಜೀವವೈವಿಧ್ಯ ಕಾಪಾಡುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ನಾವು ಮೊಸಳೆಗಳನ್ನು ಕೂಡ ಇತರ ಪ್ರಾಣಿಗಳಂತೆ ರಕ್ಷಿಸಬೇಕು.
ಮುಖ್ಯವಾಗಿ ಅವುಗಳ ಆವಾಸಸ್ಥಾನವಾದ ನದಿ, ಸರೋವರದಂತಹ ಜಲಮೂಲಗಳನ್ನು ಸಂರಕ್ಷಿಸಬೇಕು. ಅಲ್ಲಿ ಅಕ್ರಮ ಮರಳುಗಾರಿಗೆ ತಡೆದು, ಜಲಮಾಲಿನ್ಯ ನಿಯಂತ್ರಣ ಮಾಡಬೇಕು. ಹಾಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ, ಸರೋವರಗಳನ್ನು ಸೇರದಂತೆ ಕ್ರಮವಹಿಸಬೇಕು. ಹಾಗೆಯೇ ಎಲ್ಲಾದರೂ ಮೊಸಳೆಗಳು ಕಂಡುಬಂದರೆ ಗಾಬರಿಯಾಗದೆ ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. (ಬರಹ:ಸಂಜಯ್ ಹೊಯ್ಸಳ,ಫೇಸ್ ಬುಕ್ ನಿಂದ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಅಂತರಂಗ
ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು
![](https://suddidina.com/wp-content/uploads/2024/06/Runadagani_part7_suddidina.jpg)
- ರುದ್ರಪ್ಪ ಹನಗವಾಡಿ
ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ ತೋರಿಸಬೇಕೆಂದು ಯೋಚಿಸಿದ್ದೆ. ಅಪ್ಪನು ಓಡಾಡಲು ಶಕ್ತಿ ಇದ್ದ ಕಾಲದಲ್ಲಿ ಎಲೆ ವ್ಯಾಪಾರಕ್ಕಾಗಿ ಧಾರವಾಡ, ಕಂಪ್ಲಿ, ಗಂಗಾವತಿ, ಹೊಸಪೇಟೆ, ಹರಿಹರ, ದಾವಣಗೆರೆ ಸಂತೆಗಳಲ್ಲಿ ಓಡಾಡುತ್ತಿದ್ದನು. ಇತ್ತೀಚೆಗೆ ಅವರಿಗೆ ಇದ್ದ ಕೆಮ್ಮು ದಮ್ಮುಗಳಿಂದ ಹೊರ ಊರುಗಳಿಗೆಲ್ಲೂ ಹೋಗುತ್ತಿರಲಿಲ್ಲ. ಅಪ್ಪನ ಹೆಚ್ಚಾದ ವಯಸ್ಸಿನ ಕಾರಣದಿಂದಲೇ ಹರಿಹರದಲ್ಲಿ ಹೈಸ್ಕೂಲಿಗೆ ಸೇರಿದ್ದ ಅಣ್ಣ ತಿಪ್ಪಣ್ಣನನ್ನು ಶಾಲೆ ಬಿಡಿಸಿ ತೋಟದ ಕೆಲಸಕ್ಕೆ ಹಾಕಿಕೊಂಡಿದ್ದ. ಹಾಗಾಗಿ ಈಗೆಲ್ಲ ಸಂತೆಗಳಿಗೆ ಅಣ್ಣನನ್ನೇ ಕಳಿಸುತ್ತಿದ್ದ.
ನಾನು ಮೈಸೂರಿನಲ್ಲಿ ಮತ್ತೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪುನಃ ನನ್ನ ಉಪನ್ಯಾಸಕ ಹುದ್ದೆಯನ್ನು ವಿಶ್ವವಿದ್ಯಾಲಯ ಮುಂದುವರೆಸಿತು. ಈ ನಡುವೆ ಪಾಲ್ ಇ ಸೈಮನ್ಸ್ ಅವರ ಪ್ರಾಜೆಕ್ಟ್ ಪೂರ್ಣಗೊಂಡಿತ್ತು. ಹಾಗಾಗಿ ಅವರು ವಾಪಸ್ ಅಮೇರಿಕೆಗೆ ಹೊರಟುಹೋದರು. ಹೋಗುವ ಮುನ್ನ ತಮ್ಮಲ್ಲಿದ್ದ ರ್ಯಾಲೀ ಬೈಸಿಕಲ್ ಮತ್ತು ಆರಾಮವಾಗಿ ಕೂರಲು ತೆಗೆದುಕೊಂಡಿದ್ದ `ಇಸೀ ಚೇರ್’ನ್ನು ನನಗೆ ಇಟ್ಟುಕೊಳ್ಳಲು ಹೇಳಿದರು. ಉಳಿದಂತೆ ತನ್ನೆಲ್ಲ ವಸ್ತುಗಳನ್ನು ಅಚ್ಚುಕಟ್ಟಾಗಿ ಪ್ಯಾಕ್ ಮಾಡಿಕೊಳ್ಳಲು ನಾನು ಸಹಕರಿಸಿದೆ.
ಈ ಸಮಯಕ್ಕಾಗಲೇ ಮಹೇಶ ರಾಜ್ಯಶಾಸ್ತçದಲ್ಲಿ ಎಂ.ಎ. ಮುಗಿಸಿದ್ದ. ಅವನು ಮುಂದೆ ಕಾನೂನು ವ್ಯಾಸಂಗ ಮಾಡಲು ಮೈಸೂರಿನಲ್ಲಿಯೇ ಇರುವ ತೀರ್ಮಾನ ಮಾಡಿದ್ದ. ಹಾಗಾಗಿ ಹಾಲಿ ಇದ್ದ ಮನೆಯನ್ನು ನಾನು ಬಿಟ್ಟು
ಕೆ.ಜಿ. ಕೊಪ್ಪಲಲ್ಲಿ ನಾನು ಅವನೂ ಸೇರಿ ಬಾಡಿಗೆ ಮನೆ ಮಾಡಿದೆವು. ನಂತರದಲ್ಲಿ ನಮ್ಮ ಊರಿನಲ್ಲಿ ಪಿಯುಸಿ ಪಾಸು ಮಾಡಿ ಊರಲ್ಲಿದ್ದ ಬಾರಿಕರ ಮಾಂತೇಶಿ, ಐನೇರ ಮುಕ್ತಾಯಕ್ಕ ಇವರುಗಳು ಕೂಡ ಮೈಸೂರಿಗೆ ಬಂದು ಓದು ಮುಂದುವರೆಸಲು ನನ್ನ ಸಹಾಯ ಕೋರಿದ್ದರು. ನಾನು ಅವರನ್ನೂ ಸಹ ನನ್ನ ಜೊತೆಗೆ ಮೈಸೂರಿಗೆ ಕರೆತಂದು, ಮುಕ್ತಾಯಕ್ಕನಿಗೆ ಸರಸ್ವತಿಪುರಂನಲ್ಲಿ ಸಣ್ಣ ಬಾಡಿಗೆ ಮನೆ ಮಾಡಿಕೊಟ್ಟು ಮಾಂತೇಶಿಗೆ ಮಹಾರಾಜ ಕಾಲೇಜಿನಲ್ಲಿ ಮತ್ತು ಬಿ.ಸಿ.ಎಂ. ಹಾಸ್ಟೆಲ್ನಲ್ಲಿ ಸೀಟು ಕೊಡಿಸಿ ಬಿ.ಎ. ಮುಂದುವರೆಸಲು ಅವಕಾಶ ಮಾಡಿಕೊಟ್ಟೆ. ಈ ನಡುವೆ ನಾನು ಊರಿಗೆ ಹೋದಾಗ ನನ್ನ ಅವ್ವನ ತಂಗಿ ಮಗ ಸಿರಿಗೇರಿ ರಾಮಣ್ಣ ಬಿ.ಎ. ಪದವಿ ಕೋರ್ಸು ಮುಗಿಸಿ ಕೆಲವು ವಿಷಯಗಳಲ್ಲಿ ಫೇಲಾಗಿ ತನ್ನ ಊರಿನಲ್ಲಿದ್ದ. ಅವನನ್ನು ಕೂಡ ಮೈಸೂರಿಗೆ ಕರೆದುಕೊಂಡು ಬಂದು ನಾವಿದ್ದ ಮನೆಯಲ್ಲಿಟ್ಟುಕೊಂಡು, ಬಾಕಿ ಉಳಿದ ವಿಷಯಗಳಿಗಾಗಿ ಟ್ಯೂಷನ್ ತೆಗೆದುಕೊಳ್ಳಲು ವ್ಯವಸ್ಥೆ ಮಾಡಿದೆ. ನಂತರ ಬಿ.ಎ. ಪಾಸು ಮಾಡಿಕೊಂಡು ಮುಂದೆ ಕೆ.ಇ.ಬಿ.ಯಲ್ಲಿ ಸರ್ಕಾರಿ ಕೆಲಸಕ್ಕೆ ಸೇರಿದ.
ಕೆ.ಜಿ. ಕೊಪ್ಪಲ ಮನೆಯಲ್ಲಿ ನಾನು ಮಹೇಶ ಅಧಿಕೃತ ಬಾಡಿಗೆದಾರರಾದರೂ ಅನಧಿಕೃತವಾಗಿ ವಿದ್ಯಾರ್ಥಿ ಬಳಗ ಮತ್ತು ನಿರುದ್ಯೋಗಿಗಳ ಬಳಗದ ಸದಸ್ಯರು ಯಾರಾದರೊಬ್ಬರು ಇರುತ್ತಿದ್ದರು. ನಮ್ಮಿಬ್ಬರಿಗೆ ಅಡಿಗೆ ಮಾಡಿಡಲು ಒಪ್ಪಿಕೊಂಡಿದ್ದ ಶಿವಪ್ಪ ಎನ್ನುವ ಅಡಿಗೆಯವನು ನಮ್ಮಲ್ಲಿ ದಿನವೂ ಏರುಪೇರಾಗುತ್ತಿದ್ದ ಸಂಖ್ಯೆ ಮತ್ತು ಹೊಲೆ ಮಾದಿಗರೆಗೆಲ್ಲ ನಾನು ಅಡಿಗೆ ಮಾಡುವುದಿಲ್ಲ ಎಂದು ಹೇಳಿ ಹೊರಟು ಹೋಗಿದ್ದ. ಈ ನಡುವೆ ಹಾಸ್ಟೆಲ್ನಲ್ಲಿ ಸೀಟು ಸಿಗುವವರೆಗೆ ಮಾಂತೇಶಿ ಮತ್ತು ರಾಮಣ್ಣನೇ ತೋಚಿದಂತೆ ಅಡುಗೆ ಮಾಡುತ್ತಿದ್ದರು. ಅದನ್ನೇ ಎಲ್ಲರೂ ಹಂಚಿ ಉಣ್ಣುತ್ತಿದ್ದೆವು. ಇದನ್ನೆಲ್ಲ ನೆನಪಿಸಿಕೊಳ್ಳುವ ಸಮಯಕ್ಕೆ ರಾಮಣ್ಣ ಮತ್ತು ಮಾಂತೇಶಿ ಇಬ್ಬರೂ ತೀರಿಕೊಂಡಿದ್ದಾರೆ. ಮುಕ್ತಾಯಕ್ಕ ಹೊಳೆ ದಾಟಿದ ಮನುಷ್ಯ ಸ್ವಭಾವದಂತೆ ಗುರ್ತಿಲ್ಲದವರಂತೆ ದಾವಣಗೆರೆಯಲ್ಲಿ ಅರಾಮ ಇದ್ದಾಳೆ.
ಇದೇ ಸಮಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಇಂದಿರಾ ಗಾಂಧಿ ಅವರ ಬಗ್ಗೆ ಅಲಹಾಬಾದ್ ಕೈಕೋರ್ಟ್ ನೀಡಿದ ತೀರ್ಪಿನಂತೆ ಪಾರ್ಲಿಮೆಂಟ್ ಸದಸ್ಯತ್ವವನ್ನು ರದ್ದುಗೊಳಿಸಿದ ಕಾರಣ ದೇಶದಾದ್ಯಂತ ಆಂತರಿಕ ತುರ್ತು ಪರಿಸ್ಥಿತಿ ಘೋಷಣೆಯಿಂದಾಗಿ ಧಾರವಾಡದಲ್ಲಿದ್ದು ಪತ್ರಿಕೆ ನಡೆಸುತ್ತಿದ್ದ ರಾಜಶೇಖರ ಕೋಟಿ ಕೂಡ ಮೈಸೂರಿಗೆ ಬಂದಿದ್ದರು ಹಾಗೂ ನಮ್ಮ ಈ ಬಾಡಿಗೆ ಮನೆಯ ಗೌರವಾನ್ವಿತ ಸದಸ್ಯರಾಗಿದ್ದರು.
ನನಗೆ ಬರುತ್ತಿದ್ದ 600ರೂಗಳ ಸಂಬಳ ಮತ್ತು ಮಹೇಶನ ಊರಿನಿಂದ ಬರುತ್ತಿದ್ದ ಅಕ್ಕಿ ಮತ್ತು ಸಾಂಬಾರು ಪದಾರ್ಥಗಳು ಸೇರಿಕೊಂಡು ಎಲ್ಲರಿಗೂ ಊಟ-ತಿಂಡಿಗಳು ಸಾಧಾರಣವಾಗಿ ನಡೆಯುತ್ತಿದ್ದವು. ಬಿ.ಎ. ಮತ್ತು ಎಂ.ಎ.ಗಳಲ್ಲಿ ಹಾಸ್ಟೆಲ್ನಲ್ಲಿನ ಸೊಗಸಾದ ಊಟ ನಂತರ ಪಾಲ್ ಸೈಮನ್ಸ್ ಜೊತೆ ಅಡಿಗೆ ಭಟ್ಟನ ಕೈರುಚಿ ನೋಡಿದ್ದ ನನಗೆ ಇಲ್ಲಿನ ಅನಿಶ್ಚಿತವಾದ ಊಟೋಪಚಾರಗಳನ್ನು ಸಹಿಸಿಕೊಳ್ಳುವುದು ಕಷ್ಟವಾಗುತ್ತಿತ್ತು. ಆದರೇನು? ನಮ್ಮ ಮಿತ್ರ ಬಳಗದ ಬೆಚ್ಚಗಿನ ಸೆಳೆತಗಳು ಇದನ್ನೆಲ್ಲ ಮೀರಿ ಒಬ್ಬರಿಗೊಬ್ಬರು ಸಹಕರಿಸಿಕೊಂಡು ಕಾಲ ಹಾಕುತ್ತಿದ್ದೆವು.
ದಸರಾ ರಜೆ ಬಂದು ಊರಿಗೆ ಹೋದಾಗ ಅಪ್ಪನನ್ನು ಒಮ್ಮೆ ಮೈಸೂರಿಗೆ ಕರೆತಂದು ದಸರಾ ಹಬ್ಬ ಮತ್ತು ನಮ್ಮ ಕಾಲೇಜು ತೋರಿಸಬೇಕೆಂಬ ಆಸೆಯಾಯಿತು. ಈ ಬಾರಿ ದಸರೆಯಲ್ಲಿ ಊರಿಗೆ ಹೋದಾಗ ಸೈಕಲ್ ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ನಮ್ಮ ಅಜ್ಜಿ (ಅಪ್ಪನ ತಾಯಿ) ಪಕ್ಕೀರಜ್ಜಿಯ ಹೆಸರಿಗಿದ್ದ ಹಳ್ಳದಾಚೆಗಿನ ಹೊಲದಲ್ಲಿನ ಬೆಳೆ ನೋಡಲು ಹೋಗಿದ್ದೆವು. ಅಣ್ಣ ಸರಿಯಾಗಿ ಕೆಲಸ ಮಾಡದೆ ಎಲ್ಲಾ ಕಡೆ ನಿರೀಕ್ಷಿತ ಉತ್ಪಾದನೆ ಇಲ್ಲವೆಂದು ನನ್ನ ಬಳಿ ಅಪ್ಪ ಅಲವತ್ತುಕೊಂಡಿದ್ದ. ಅವನೂ ಆಗ ತಾನೆ ಓದುವುದನ್ನು ಬಿಟ್ಟು ತೋಟದ ಕೆಲಸಗಳಲ್ಲಿ ತೊಡಗಿದ್ದರಿಂದಲೋ ಏನೋ ವ್ಯವಸಾಯದಲ್ಲಾಗಲೀ, ತೋಟ ಮಾಡುವುದರಲ್ಲಾಗಲೀ, ಅಪ್ಪನ ನಿರೀಕ್ಷಿತ ಮಟ್ಟದ ಕೆಲಸಗಾರನಾಗಿರಲಿಲ್ಲ. ಅದಕ್ಕೆ ನಮ್ಮವ್ವನ ಕಟಿಪಿಟಿಯೂ ಕಾರಣವಾಗಿತ್ತು. ನಮ್ಮ ಸೈಕಲ್ ಸವಾರಿ ಮುಗಿದು ಮನೆಗೆ ಬಂದಾಗ ಮೈಸೂರು ದಸರಾ ನೋಡಲು ಕರೆದುಕೊಂಡು ಹೋಗುವ ತೀರ್ಮಾನ ಅಪ್ಪನಿಗೆ ಹೇಳಿ ಒಪ್ಪಿಸಿದೆ. ನಂತರ ರೈಲಿನಲ್ಲಿ ಮಾರನೇ ದಿನ ಅಪ್ಪನೊಡನೆ ಮೈಸೂರಿಗೆ ಪ್ರಯಾಣ ಬೆಳೆಸಿದೆ.
ಮೈಸೂರು ನಗರ ದಸರಾ ಹಬ್ಬದ ಸಂಭ್ರಮದಲ್ಲಿ ಗಿಜುಗುಡುತ್ತಿತ್ತು. ವಿದ್ಯುತ್ ಅಲಂಕಾರದಿಂದ ಶೃಂಗಾರಗೊಂಡಿದ್ದರಿಂದ ಚಾಮುಂಡೇಶ್ವರಿ ಬೆಟ್ಟ, ಸಂಜೆ ವೇಳೆ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ನಮ್ಮ ಕಾಲೇಜನ್ನು ಎಲ್ಲಾ ತೋರಿಸಿದೆ. ನಾನು ಈಗ್ಗೆ 2-3 ವರ್ಷಗಳ ಹಿಂದೆ ಇಲ್ಲಿಯೇ ಓದಿ ಈಗ ಅಲ್ಲಿಯೇ ಮೇಷ್ಟರಾಗಿ ಕೆಲಸ ಮಾಡುತ್ತಿರುವುದನ್ನು ಕಣ್ಣಾರೆ ಕಂಡ ಅಪ್ಪ ಖುಷಿಗೊಂಡಿದ್ದ. ಅರಮನೆ, ಚಾಮುಂಡಿ ಬೆಟ್ಟ, ನಮ್ಮ ಕಾಲೇಜು, ಎಲ್ಲ ನೋಡಿದ ಅಪ್ಪ `ನಾನಿನ್ನು ಸತ್ತರೂ ಚಿಂತೆಯಿಲ್ಲ, ನೀನೊಂದು ದಡ ಸೇರಿದೆ’ ಎಂದು ಹೇಳಿ ಪುಳಕಗೊಂಡಿದ್ದ. ಮಾರನೇ ದಿನ ಸಂಜೆ ಕೃಷ್ಣರಾಜ ಸಾಗರ ಅಣೆಕಟ್ಟು ವೀಕ್ಷಣೆಗೆ ಹೋಗುವ ಮಾತಾಡಿದಾಗ ಅವನು ಆಸಕ್ತಿ ತೋರಲಿಲ್ಲ. ಹಾಗಾಗಿ ಅವನನ್ನು ರಾಮನಗರದಲ್ಲಿದ್ದ ಅಕ್ಕನ ಮನೆಗೆ ಬಸ್ಸಿನಲ್ಲಿ ಹತ್ತಿಸಿ ಕಳಿಸಿದೆ.
ದೇಶಾದಾದ್ಯಂತ ತುರ್ತು ಪರಿಸ್ಥಿತಿ, ದೇವರಾಜ ಅರಸರ 20 ಅಂಶದ ಕಾರ್ಯಕ್ರಮಗಳು, ಈ ಬಗ್ಗೆ ರಾಷ್ಟ್ರಮಟ್ಟದಲ್ಲಿ ಜೆಪಿ ಅವರು ಸೇರಿದಂತೆ ವಿರೋಧ ಪಕ್ಷಗಳ ಧುರೀಣರನ್ನು ಬಂಧಿಸಿ ಜೈಲಿನಲ್ಲಿಡುವಂತಾದ ವಿಷಯಗಳ ಚರ್ಚೆ ನಮ್ಮ ಕೆ.ಜಿ.ಕೊಪ್ಪಲ ಮನೆಯಲ್ಲಿ ನಡೆಯುತ್ತಿತ್ತು. ತುರ್ತು ಪರಿಸ್ಥಿತಿಯ ಕಾರಣದಿಂದಾಗಿ ವಿದ್ಯಾರ್ಥಿಗಳಿಂದ ಆಗಾಗ ನಡೆಯುತ್ತಿದ್ದ ಮುಷ್ಕರಗಳಾಗಲಿ, ವಿದ್ಯಾರ್ಥಿ ಸಂಘದ ಚುನಾವಣೆಗಳಾಗಲೀ ನಡೆಯದೆ, ಎಲ್ಲರೂ ಬೆದರಿದಂತೆ, ಸ್ವಯಂ ನಿಯಂತ್ರಿತರಾದವರಂತೆ ಕೆಲಸ ಮಾಡುವ ವಾತಾವರಣ, ಶೈಕ್ಷಣಿಕ ಮತ್ತು ಸರ್ಕಾರಿ ಕಛೇರಿಗಳಲ್ಲಿ ಮೂಡಿದಂತೆ ತೋರುತ್ತಿತ್ತು.
ಅಪ್ಪನನ್ನು ಊರಿಗೆ ಕಳಿಸಿ, ನಂತರದ ದಿನಗಳಲ್ಲಿ ಓದು, ತರಗತಿಗಳ ಪಾಠ ಮತ್ತು ಸಮಾಜವಾದಿ ಯುವಜನ ಸಭಾ, ಲೋಹಿಯಾ, ಅಂಬೇಡ್ಕರ್ ಚಿಂತನೆಗಳ ಕಡೆ ವಾಲಿಕೊಂಡಿದ್ದೆ. ಅಪ್ಪನಿಗೆ 80-85 ವರ್ಷಗಳಾಗಿರಬಹುದು. ಆಗಿದ್ದರೂ ಎಂದೂ ಮನೆಯಲ್ಲಿ ಕೂತು ವಿಶ್ರಾಂತಿ ಪಡೆಯುವ ಪರಿಪಾಟ ಅಪ್ಪನಿಗಿರಲಿಲ್ಲ. ಬೆಳಿಗ್ಗೆ ಎದ್ದು ದನಕರುಗಳ ಕೊಟ್ಟಿಗೆಯ ಕಸವನ್ನು ತಿಪ್ಪೆಗೆ ಹಾಕಿ, ಚಾ ಕುಡಿದು ತೋಟಕ್ಕೆ ಹೋದರೆ ಮತ್ತೆ ಬರುವುದು ರಾತ್ರಿಗೆ, ಬಂದು ಬಿಸಿನೀರಿನಲ್ಲಿ ಸ್ನಾನ ಮಾಡಿ ಊಟ ಮಾಡಿದರೆ ಅವನ ದಿನಚರಿ ಮುಗಿಯುತ್ತಿತ್ತು. ಯಾರಾದರೂ ಊರಿನಿಂದಲೋ ಇಲ್ಲ ನಮ್ಮ ಚಿಕ್ಕಪ್ಪಂದಿರಾಗಿದ್ದ ನಾಗಪ್ಪ, ಮಹಾದೇವಪ್ಪ ಮತ್ತು ಭೀಮಪ್ಪ ಇವರುಗಳು ಏನಾದರೂ ಮಾತಾಡೋ ನೆಪದಲ್ಲಿ ಸಂಜೆ ಸೇರಿಕೊಂಡರೆ ಸಾರಾಯಿ ಸಮಾರಾಧನೆ ಆಗಿ ಊಟ ಮಾಡುತ್ತಿದ್ದರು. ಇಲ್ಲ ಊರಲ್ಲಿನ ಲಿಂಗಾಯತ ಸ್ನೇಹಿತರಲ್ಲಿ ವಾರಕ್ಕೋ 15ದಿನಗಳಿಗೊಮ್ಮೆಯೋ ಗೌಪ್ಯವಾಗಿ ನಮ್ಮಲ್ಲಿನ ಕೋಣೆಯೊಂದರಲ್ಲಿ ಕೂತು ಪಾರ್ಟಿ ಮಾಡುತ್ತಿದ್ದರು. ಅವ್ವ ಲೊಟಗುಡುತ್ತಾ ಜೋಳದ ಹಪ್ಪಳವನ್ನೋ ಇಲ್ಲ ಮನೆಯಲ್ಲಿದ್ದ ಮೊಟ್ಟೆಗಳನ್ನು ಹುರಿದು ಅವರ ಪಾರ್ಟಿಗೆ ನೆಂಚಿಗೆ ಮಾಡಿ ಕೊಡುತ್ತಿದ್ದಳು.
ಅಪ್ಪನ ಅಣ್ಣ ರಂಗಪ್ಪಜ್ಜ ಇದ್ದು, ಅವನು ಮದುವೆಯಾಗಿ, ಮಕ್ಕಳು ಮನಿ ಎಂತೆಲ್ಲಾ ಆದ ಮೇಲೆ ಖಾವಿ ಧರಿಸಿ ಸಾಧುವಾಗಿದ್ದ. ಅವನು ಊರ ಹೊರಗಿನ ಗೋಮಾಳದಲ್ಲಿ ನಮ್ಮಜ್ಜಿ ಫಕ್ಕೀರಜ್ಜಿಯನ್ನು ಸಮಾಧಿ ಮಾಡಿದ್ದು. ಅಲ್ಲಿಯೇ ಒಂದು ವಿಶಾಲ ಗುಡಿಸಲು ಕಟ್ಟಿಕೊಂಡು, ದಿನವೂ ಅಜ್ಜಿಯ ಸಮಾಧಿಯನ್ನು ಪೂಜೆ ಮಾಡಿಕೊಂಡು, ನಮ್ಮ ಊರಿನ ಲಿಂಗಾಯತರ ಮನೆಯಿಂದ ಕಂತೆ ಭಿಕ್ಷೆ ಎತ್ತಿ ಅದರಲ್ಲಿಯೇ ಊಟ ಮಾಡಿಕೊಂಡಿದ್ದ. ಕ್ರಮೇಣ ಎಲ್ಲ ಜನರೂ ಸಾಧು ರಂಗಜ್ಜನ ಮಠ ಎಂದು ಗುರುತಿಸುತ್ತಿದ್ದರು. ಊರಿನ ಲಿಂಗಾಯತರು ಮತ್ತು ಇತರೆ ಜಾತಿಯ ಪ್ರಮುಖರೆಲ್ಲ ಶ್ರಾವಣಮಾಸದಲ್ಲಿ ದೇವಿಪುರಾಣವನ್ನೋ, ಭಜನೆಯನ್ನೋ ಮಾಡುತ್ತಾ ಕೊನೆಯಲ್ಲಿ ಕರಿಯ ಕೊಳವೆಯಂತಹ ವುದರಲ್ಲಿ ಸಾಂಬ್ರಾಣಿಯಂತಹದನ್ನು ನಾದಿ ಚಿಲುಮೆಯಲ್ಲಿ ತುಂಬಿ ಒಂದು ತುದಿಯಲ್ಲಿ ಬಟ್ಟೆಯನ್ನು ಸುತ್ತಿ ಎಡಗೈಯಲ್ಲಿ ಒಂದು ವಿಶೇಷ ಸ್ಟೈಲ್ನಲ್ಲಿ ಹಿಡಿದು ಜೋರಾಗಿ ದಮ್ಮು ಎಳೆಯುತ್ತಿದ್ದರು. ಬಲಕ್ಕೊ ಎಡಕ್ಕೊ ಕೂತವನೊಬ್ಬನು ಕಡ್ಡಿ ಗೀರಿ ಬೆಂಕಿ ಹಚ್ಚಿದರೆ ಉಸಿರು ಬಿಗಿ ಹಿಡಿದು ಎಳದಾಗ ರೈಲ್ವೆ ಉಗಿ ಬಂಡಿ ಹೊಗೆ ಉಗುಳಿದಂತೆ, ಮೂಗು ಬಾಯಿಯಿಂದ ಪುಂಖಾನುಪುಂಖವಾಗಿ ಹೊಗೆ ಹೊರಬರುತ್ತಿತ್ತು. ಹಾಗೆ ಎಳೆದವನು ಮತ್ತೊಬ್ಬನಿಗೆ ಭಯ ಮಿಶ್ರಿತ ಭಕ್ತಿಯಿಂದ ನಮಸ್ಕರಿಸಿ `ಗುರುವೇ ತಿಪ್ಪೇಶಾ’ ಎಂಬ ಉದ್ಘಾರದೊಂದಿಗೆ ಕೊಡುತ್ತಿದ್ದನು. ಆತನೂ ಸೇದಿ ಭಗವಂತನ ಕೃಪೆ, ದೇವಿಯ ಮಹಾತ್ಮೆ ಎಂದೇನೇನೋ ಮಾತಾಡಿಕೊಳ್ಳುತ್ತಿದ್ದರು. ಈ ಪಾರ್ಟಿಯಲ್ಲಿ ಅಪ್ಪನೂ ಆಗಾಗ ಅಲ್ಲಿ ಸೇರಿಕೊಳ್ಳುತ್ತಿದ್ದನು. ನಾವೆಲ್ಲ ಕೆಲವು ಹುಡುಗರು ನಮ್ಮ ಕೇರಿಯಿಂದ ಪ್ರಸಾದದ ಆಸೆಗಾಗಿ ಅಲ್ಲಿಗೆ ಹೋಗುತ್ತಿದ್ದೆವು. ಏಕೆಂದರೆ ಪ್ರತಿ ಭಜನೆ ಮುಗಿದಾಕ್ಷಣ ಪೂಜೆಗಾಗಿ ಒಡೆದ ತೆಂಗಿನ ಕಾಯಿಯ ಹಸಿ ಕೊಬ್ಬರಿಯ ಚೂರುಗಳು, ಜೊತೆಗೆ ಕತ್ತರಿಸಿದ ಬಾಳೆಯ ಹಣ್ಣು ಮಂಡಕ್ಕಿ ಕಾರ ಎಲ್ಲ ಸೇರಿಸಿ ಎಲ್ಲರಿಗೂ ಹಂಚುತ್ತಿದ್ದರು.
ಮಠದ ರಂಗಪ್ಪಜ್ಜ ನಮಗೆ ಸ್ವಂತ ಅಪ್ಪನ ಅಣ್ಣ, ದೊಡ್ಡಪ್ಪನಾಗಿದ್ದವರು ಎನ್ನುವ ವಿಷಯ ನಮಗಾರಿಗೂ ನಮ್ಮ ಬಾಲ್ಯ ಕಳೆಯುವವರೆಗೂ ಗೊತ್ತೇ ಇರಲಿಲ್ಲ. ನಾನು ಮತ್ತೆ ನಮ್ಮ ಕೇರಿಯ ಕಡೆಮನೆ ತಿಪ್ಪಣ್ಣ, ಕರಿಬಸಪ್ಪ, ಕುಬೇರ ಜೋಗಪ್ಪ ತುಂಗಣ್ಣ ಸಂಜೆ 4-5 ಗಂಟೆಯ ಸಮಯಕ್ಕೆ ಮಠದ ಕಡೆಗೆ ಹೋಗಿ ಅಲ್ಲಿಯೇ ಇದ್ದ ಬಾವಿಯಿಂದ ನೀರು ಸೇದಿ ಮಠದಲ್ಲಿನ ಗಿಡಬಳ್ಳಿಗಳಿಗೆ ಹೊಯ್ಯುತ್ತಿದ್ದವು. ನೀರು ಸೇದಿ ಹಾಕಿದ ನಾಟಕ ಮುಗಿದ ಮೇಲೆ ಎಲ್ಲರಿಗೂ ಅಲ್ಲಿದ್ದ ಮಣ್ಣಿನ ಮುಚ್ಚಳಗಳಲ್ಲಿ ಊರಲ್ಲಿನ ಕಂತೆ ಭಿಕ್ಷೆಯಲ್ಲಿ ತಂದ ರೊಟ್ಟಿ ಮತ್ತು ಎಲ್ಲರ ಮನೆಯ ಸಾರನ್ನು ಒಂದೇ ಮಡಕೆಯಲ್ಲಿ ಕುದಿಸಿಟ್ಟದ್ದನ್ನು ಬಡಿಸುತ್ತಿದ್ದರು. ಅದನ್ನೆಲ್ಲ ನಾವು ತುಂಬಾ ಖುಷಿಯಿಂದ ಉಣ್ಣುತ್ತಿದ್ದೆವು. ನಂತರ ಎಲ್ಲ ಮಣ್ಣಿನ ಮುಚ್ಚಳದಂತಿದ್ದ ತಟ್ಟೆಯನ್ನು ತೊಳೆದಿಟ್ಟು ಅವರ ಕಾಲಿಗೆ ನಮಸ್ಕರಿಸಿ ಮನೆಗೆ ಹೋಗುತ್ತಿದ್ದೆವು. ನಮ್ಮಲ್ಲೆಲ್ಲ ದೊಡ್ಡವನಾಗಿದ್ದ ಕಡೆಮನೆ ತಿಪ್ಪಣ್ಣನೇ ನಮ್ಮ ಎಲ್ಲರನ್ನೂ ಕೂಡಿಸಿ ಕರೆದುಕೊಂಡು ಹೋಗುತ್ತಿದ್ದ. ಎಲ್ಲರಿಗೂ ಬೇರೆ ಬೇರೆ ನೀಡಿದ ಮೇಲೆ ಮಠದೊಳಗೆ ಅಜ್ಜ ಹೋಗುತ್ತಿದ್ದರು. ನಮಗೆ ನೀಡಿದ ರೊಟ್ಟಿಯಲ್ಲಿ ಕಡೆಮನೆ ತಿಪ್ಪಣ್ಣನಿಗೆ ಹೆಚ್ಚುವರಿಯಾಗಿ ತನಗೆ ಕೊಡುವುದರ ಬಗ್ಗೆ ಬಂದವರಿಗೆಲ್ಲ ಮೊದಲೇ ಕೊಡುವಂತೆ ತಾಕೀತು ಮಾಡಿರುತ್ತಿದ್ದ. ಕೆಲವು ಸಮಯ ತಟ್ಟೆಗಳು ಕಡಿಮೆ ಇದ್ದುದರಿಂದ ಒಂದೇ ತಟ್ಟೆಯಲ್ಲಿ ಇಬ್ಬರು ಅಥವಾ ಮೂವರು ಕೂತು ಉಣ್ಣುವುದಾದರೆ, ನಮಗೆ ಸಾಕೆಂದು ಮೊದಲೇ ಎದ್ದು ಅವನಿಗೆ ಹೆಚ್ಚಿನ ರೊಟ್ಟಿ ಉಣ್ಣಲು ಅವಕಾಶ ಮಾಡಿಕೊಡಬೇಕಾಗಿತ್ತು. ಹಾಗೆ ಮಾಡದಿದ್ದರೆ ನಾಳೆ ಮತ್ತೆ ನಿಮ್ಮನ್ನು ಇಲ್ಲಿಗೆ ಕರೆತರುವುದಿಲ್ಲ ಎನ್ನೋ ಧಮಕಿ ಹಾಕುತ್ತಿದ್ದ. ಅವನು ನಮ್ಮೆಲ್ಲರಿಗಿಂತಲೂ 2-3 ವರ್ಷಕ್ಕೂ ಹಿರಿಯವನು, ನಮ್ಮ ಚಿಕ್ಕಪ್ಪ ಭೀಮಪ್ಪನ ಮಗನಾಗಿದ್ದ ಅವರಿಗೆ ಮನೆಯಲ್ಲಿ ಆರೇಳು ಹೆಣ್ಣು ಮಕ್ಕಳ ನಂತರ ಹುಟ್ಟಿದ ಕಾರಣ ಇವನಿಗೆ ಯಾವ ಕೆಲಸವನ್ನೂ ಹೇಳುತ್ತಿರಲಿಲ್ಲ. ವಿಶೇಷವಾಗಿ ಬುಗುರಿ, ಚಿನ್ನಿ ದಾಂಡು, ಕೀಳಾಪಟ್ಟಿ ಆಟಗಳಲ್ಲಿ ನಮಗೆ ಗುರುವಾಗಿದ್ದವನು. ಆದರೆ ಊರ ಎಲ್ಲರ ದೃಷ್ಟಿಯಲ್ಲಿ ದಂಡಪಿಂಡ ಎಂಬಂತೆ ಅವನನ್ನು ಅವರ ಮನೆಯವರೂ ಸೇರಿದಂತೆ ಊರಿನಲ್ಲಿ ಜನ ಪರಿಗಣಿಸಿದ್ದರು. ಆದರೀಗ ಒಂದು ದಂಡನ್ನೇ ಕಟ್ಟುವಷ್ಟು ಮಕ್ಕಳನ್ನು, ಮೊಮ್ಮಕ್ಕಳನ್ನು ಪಡೆದು ದುಡಿಮೆ ಮಾಡಿಕೊಂಡು ಹಾಯಾಗಿದ್ದಾನೆ. ಊರಲ್ಲಿರುವಾಗಲೆಲ್ಲ ನನ್ನನ್ನು ಸೆಳೆದುಕೊಂಡಿದ್ದ ಅವನು ನಂತರದ ದಿನಗಳಲ್ಲಿ ಸಣ್ಣ ವ್ಯತ್ಯಾಸದಿಂದ ದೂರವಾಗಿದ್ದಾನೆ. ಈಗ ಮತ್ತೆ ಕರೆದು ಮಾತಾಡಿಸಬೇಕೆಂದು ನೆನಪಾದಾಗ ಅನ್ನಿಸುತ್ತಿದೆ.
ಅಜ್ಜನ ಗುಡಿಸಲು ಅರ್ಥಾತ್ ಮಠ ಸುಮಾರು ಅರ್ಧ ಎಕರೆಯಲ್ಲಿ ಸುತ್ತ ಬೇಲಿಯ ಮಧ್ಯದಲ್ಲಿನ ಅಜ್ಜಿ ಸಮಾದಿಗೆ ಮತ್ತು ಅಜ್ಜಯ್ಯ ಇರುವಿಕೆಗೆ ತೆಂಗಿನ ಗರಿ ಮತ್ತು ಭತ್ತದ ಹುಲ್ಲಿನ ಮುಚ್ಚಳಿಕೆಯಿಂದ ಗಾಳಿ ಬಿಸಿಲು ಮಳೆಗಳಿಂದ ರಕ್ಷಣೆ ಪಡೆದಿತ್ತು. ಆಗಾಗ ಅಜ್ಜಯ್ಯ ಮಠ ಕಟ್ಟುತ್ತೇನೆಂದು ಹಣ ಸಂಗ್ರಹದಲ್ಲಿ ತೊಡಗಿದ್ದರೆಂದು, ಅಪ್ಪ ಮನೆಯಲ್ಲಿ ಮಾತಾಡುತ್ತಿದ್ದರು. ಹಬ್ಬ ಹರಿದಿನಗಳಲ್ಲಿ ದೊಡ್ಡಪ್ಪ ಮನೆಗೆ ಬಂದರೆ ಅವರಿಗೆ ವಿಶೇಷವಾಗಿ ಪಾದಪೂಜೆ ಮಾಡಿ ಆ ನೀರನ್ನೆಲ್ಲ ಮನೆಯ ಎಲ್ಲ ದಿಕ್ಕುಗಳಿಗೂ ಪ್ರೋಕ್ಷಿಸುತ್ತಿದ್ದರು. ಹಾಗೆ ನಮ್ಮಲ್ಲಿನ ಇತರೆ ನಾಲ್ಕು ಚಲವಾದಿ ಮನೆತನದವರೂ ಕರೆದು ಪಾದಪೂಜೆ ಮಾಡುತ್ತಿದ್ದರು. ನಮ್ಮೂರ ಹತ್ತಿರದ ಕಡ್ಲಬಾಳ ಊರಿನ ತೇರಿಗೆ ಮತ್ತು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಯ ರಥೋತ್ಸವಕ್ಕೆ ಹೋಗಿ ವಾರಗಟ್ಟಲೇ ಅಲ್ಲಿದ್ದು, ಅನೇಕ ಇತರೆ ಸಾಧು ಸಂತರ ಸಂಗಡದಲ್ಲಿ ಭಜನೆ ಮತ್ತು ಗಾಂಜಾ ಸೇವನೆ ಮಾಡುತ್ತಿದ್ದುದರ ಬಗ್ಗೆ ಅವರ ಜೊತೆ ಹೋಗಿ ಬಂದವರು ಆಗಾಗ ಮಾತಾಡಿಕೊಳ್ಳುತ್ತಿದ್ದರು.
ಈ ರೀತಿಯಲ್ಲಿ ಇದ್ದ ದೊಡ್ಡಪ್ಪ ನಾನು ಸಾಗರದ ಹೈಸ್ಕೂಲಿನಲ್ಲಿ ಓದುವ ಸಮಯದಲ್ಲಿ ಒಂದೆರಡು ದಿನಗಳ ಅಸ್ವಸ್ಥತೆಯಿಂದ ಹರಿಹರದ ಹತ್ತಿರವಿರುವ ಗುತ್ತೂರಿನ ಗುರು ಬಸಜ್ಜನ ಮಠದಲ್ಲಿ ತೀರಿಹೋಗಿದ್ದರು. ಅಲ್ಲಿಯ ಮಠದಲ್ಲಿಯೇ ಅವರ ಸಮಾಧಿ ಮಾಡಿದ್ದಾರೆ. ಅದೇ ಮಠದಲ್ಲಿ ನನ್ನ ಗುರುಗಳಾಗಿದ್ದ
ಪ್ರೊ. ಬಿ. ಕೃಷ್ಣಪ್ಪನವರು ಮತ್ತವರ ತಂಗಿ ಹಾಲಮ್ಮ ತಮ್ಮ ಬಾಲ್ಯದ ದಿನಗಳಲ್ಲಿ ಗಿಡಗಳಿಗೆ ನೀರು ಹಾಕುವುದು, ಹೂ ಕೀಳುವ ಸೇವೆ ಮಾಡುತ್ತಿದ್ದರು ಎಂಬುದನ್ನು ಕೃಷ್ಣಪ್ಪನವರ ತಂಗಿ ಹಾಲಜ್ಜಿ ಆಗಾಗ ನಮ್ಮೂರಿಗೆ ಬಂದಾಗ ಜ್ಞಾಪಿಸಿಕೊಳ್ಳುತ್ತಿದ್ದರು. ಅಪ್ಪನ ಅಣ್ಣ ಈ ರೀತಿಯ ಜೀವನ ಸಾಗಿಸುತ್ತಾ ಕಾಲವಾದರೆ ಅಪ್ಪ ಒಂದಲ್ಲವೆಂದರೂ ಎರಡು ಮದುವೆಯಾಗಿ, ಮ್ಯಾಳ ಮಾಡುತ್ತಾ ಅವರೆಲ್ಲರಿಗೂ ನಾಯಕನಾಗಿ, ಮಾಡಿದ ಹೊಲಮನಿ ಕೆಲಸಗಳಲ್ಲಿ ಸೈ ಎನಿಸಿಕೊಂಡು, ನಾನು ಎಂ.ಎ. ಮಾಡಿ ಅಧ್ಯಾಪಕನಾಗಿರುವವರೆಗೆ ಬದುಕಿದ್ದೇ ಒಂದು ಪವಾಡ. ಸದಾ ಕೆಲಸದಲ್ಲಿ ತೊಡಗಿರುತ್ತಿದ್ದ ಅಪ್ಪ ಸಣ್ಣಪುಟ್ಟ ಖಾಯಿಲೆಗಳಿಗೆ ಜಗ್ಗುತ್ತಿರಲಿಲ್ಲ ಯವ್ವನದ ಕಾಲಘಟ್ಟದಲ್ಲಿ ಎಲೆ ಅಡಿಕೆ ತಂಬಾಕು ಬೀಡಿ ಸೇದುತ್ತಿದ್ದ ಅಪ್ಪ ನಂತರದ ದಿನಗಳಲ್ಲಿ ಕೆಮ್ಮು ದಮ್ಮುಗಳ ಕಾಟದಿಂದ ಅವನ್ನೆಲ್ಲ ಬಿಟ್ಟು ಬಿಟ್ಟಿದ್ದನು. ನಾನು ಕೆಲಸಕ್ಕೆ ಸೇರಿ ಊರಿಗೆ ಹೋದಾಗ ಅವ್ವನಿಗೆ, ಓಬಜ್ಜನಿಗೆ, ಅಪ್ಪನಿಗೆ ವಿಶೇಷವಾಗಿ ಸಣ್ಣ ಮೊತ್ತದ ಹಣ ಕೊಡಲು ಹೋದಾಗಲೆಲ್ಲ `ನನಗ್ಯಾಕೆ ಕೊಡುತ್ತೀ, ನಿಮ್ಮವ್ವನಿಗೇ ಕೊಡು’ ಎಂದು ಹೇಳಿ ಸುಮ್ಮನಾಗುತ್ತಿದ್ದ. ಇಂತಹ ಅಪ್ಪನನ್ನು ನಾನು ಅಧ್ಯಾಪಕನಾಗಿ ಕೆಲಸಕ್ಕೆ ಸೇರಿದ ಒಂದು ವರ್ಷ ತುಂಬಿದ ದಿನ (4.12.1975)ರಲ್ಲಿ ನಾನು ಎರಡನೇ ಬಿ.ಎ. ಕ್ಲಾಸ್ ರೂಮ್ನಲ್ಲಿ ಪಾಠ ಮಾಡುವಾಗ ತಂತಿ ಸಂದೇಶದಲ್ಲಿ ಅಪ್ಪ ತೀರಿದ ಸುದ್ದಿ ಹೊತ್ತು ತಂದಿತ್ತು. ಅಂದಿಗೆ ಸಂಬಳ ಬಂದು 4 ದಿನಗಳಾಗಿದ್ದರೂ ಎಲ್ಲಾ ಬಟವಾಡೆ ಮಾಡಿ ನನ್ನಲ್ಲಿ 50ರೂಗಳು ಮಾತ್ರ ಜೇಬಿನಲ್ಲಿದ್ದವು. ನೇರ ರಮಾವಿಲಾಸ್ ರಸ್ತೆಯಲ್ಲಿದ್ದ ಮಯೂರ ಪ್ರಿಂರ್ಸ್ನಲ್ಲಿಗೆ ಹೋಗಿ ಪಿ. ಮಲ್ಲೇಶ್ ಅವರಿಂದ 100 ರೂಗಳ ಸಾಲ ಪಡೆದು ನಾನು ಮತ್ತು ನನ್ನ ಕಾಲೇಜಿನಲ್ಲಿಯೇ ಓದುತ್ತಿದ್ದ ನಮ್ಮೂರಿನ ಹುಡುಗ ಮಾಂತೇಶಿಯನ್ನು ಕರೆದುಕೊಂಡು ರಾತ್ರಿಯ ಬಸ್ ಹತ್ತಿ ಬೆಳಗಿನ ಜಾವಕ್ಕೆ ಊರಿಗೆ ಬಂದು ಸೇರಿದೆ. ಅಪ್ಪನ ಸೋತ ಮುಖನೋಡಿ ನಾನು ತೀವ್ರ ಮೌನಕ್ಕೆ ಜಾರಿದೆ. ಎಂದೂ ಏನಲೇ ಎಂದು ಗದರಿಸದೆ ತನ್ನೆಲ್ಲ ಶಕ್ತಿ ಮೀರಿದ ದುಡಿಮೆಯಿಂದ, ಪ್ರೀತಿಯಿಂದ ನಮ್ಮನ್ನು ಸಾಕಿದ ಅಪ್ಪ, ಅವನ ಜೀವನದ ಹೋರಾಟಕ್ಕೆ ಅಂತ್ಯ ಹಾಡಿದ್ದ. ನಮ್ಮೆಲ್ಲರನ್ನು ತಿದ್ದಿ ಬೆಳೆಸಿ ಬದುಕಲು ನಮಗೆ ಅನುವು ಮಾಡಿ ಇಹಲೋಕದ ವ್ಯಾಪಾರ ಮುಗಿಸಿದ್ದ ಅಪ್ಪನ ನೆನಪು ನನ್ನ ಮನಸ್ಸಿನಾಳದಲ್ಲಿ ದಿನವೂ ಸ್ಫೂರ್ತಿಯಾಗಿ, ಸಾಮಾನ್ಯ ನ್ಯಾಯದ ದೊಂದಿಯಾಗಿ ಅನುರಣಿಸುತ್ತಿರುತ್ತಾನೆ.
ನಾನು ಕೆ.ಜಿ. ಕೊಪ್ಪಲಿನ ಮನೆಯಿಂದ ಮಹಾರಾಜ ಕಾಲೇಜಿಗೆ ಹೋಗಿ ಬರುತ್ತಿದ್ದೆ. ಬಿಡುವಿನ ವೇಳೆಯಲ್ಲಿ ನಾನು ಮಹೇಶ ಇತರೆ ಸ್ನೇಹಿತರು ಜೆಪಿ ಚಳುವಳಿ ನವನಿರ್ಮಾಣ ಕ್ರಾಂತಿ, ಜಾತಿ ವಿನಾಶ ಸಮ್ಮೇಳನ, ಬೂಸಾ ಚಳುವಳಿಗಳಲ್ಲಿ ಭಾಗವಹಿಸಿದ್ದೆವು. ಈ ಎಲ್ಲ ಸಂಘಟನೆಗಳ ಮೂಲ ಹೋರಾಟಗಾರರು ಮೈಸೂರಿನಲ್ಲಿದ್ದ ಎಂ.ಡಿ. ನಂಜುಂಡಸ್ವಾಮಿ, ಪಿ. ಮಲ್ಲೇಶ್, ಕೆ. ರಾಮದಾಸ್, ಮಾದೇವ, ಭಕ್ತ, ರಾಜಶೇಖರ ಕೋಟಿ, ರಾಮದೇವ ರಾಕೆ, ನಂಜುಂಡೇ ಗೌಡ, ಗೋವಿಂದಯ್ಯ, ಶಂಕರಲಿಂಗಪ್ಪ, ಗೊಟ್ಟಿಗೆರೆ ಶಿವರಾಜು, ಇಂದೂಧರ ಹೊನ್ನಾಪುರ, ದೇವನೂರ ಶಿವಮಲ್ಲು, ವಿಶ್ವವಿದ್ಯಾಲಯದ ಗಂಗೋತ್ರಿಯಿಂದ ಪ್ರೊ. ರಾಮಲಿಂಗಂ, ಕೆ.ಎಂ. ಜಯರಾಮಯ್ಯ, ಹೊರೆಯಾಲ ದೊರೆಸ್ವಾಮಿ, ಚಂದ್ರಶೇಖರ ತಾಳ್ಯ, ಎಲ್ಲರೂ ಇದೇ ಪೂರ್ಣಾವಧಿ ಕೆಲಸವೆಂಬಂತೆ ತೊಡಗಿಸಿಕೊಂಡಿದ್ದರು. ಹಾಗೆಯೇ ರಾಷ್ಟ್ರ ಮತ್ತು ರಾಜ್ಯ ಸರ್ಕಾರಗಳಲ್ಲಿನ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಇಂತಹ ವಿಷಯಗಳ ಬಗ್ಗೆ ಬೆಳಕು ಚೆಲ್ಲುವ `ಮ್ಯಾನ್ ಕೈಂಡ್’, `ಬಂಡಾಯ’, `ಶೋಷಿತ’, `ನರ’, `ಪಂಚಮ’ ಎಂಬ ಅಕಾಲಿಕ ಪತ್ರಿಕೆಗಳನ್ನು ಅಸಾಧ್ಯ ಹಣಕಾಸಿನ ತೊಂದರೆಗಳ ನಡುವೆಯೂ ಹೊರ ತರುತ್ತಿದ್ದರು.
ಆ ದಿನಗಳಲ್ಲಿ ಇಂತಹದೇ ಪತ್ರಿಕೆಯಲ್ಲಿ ನಮ್ಮೂರಿನಲ್ಲಿ ನಡೆದ ಹಿಂದುಳಿದ ಜಾತಿಯ ಹುಡುಗಿಯೊಬ್ಬಳನ್ನು ಲಿಂಗಾಯತರ ಹುಡುಗನೊಬ್ಬ ಕೆಣಕಿದ ಬಗ್ಗೆ ನಾನು ಊರಿಗೆ ಹೋದಾಗ ತಿಳಿಯಿತು. ಈ ಕೃತ್ಯ ಎಸಗಿದವನನ್ನು ಯಾರೂ ವಿಚಾರಿಸುವಂತಿರಲಿಲ್ಲ. ಹುಡುಗಿಯ ಕಡೆಯವರು ಯಾರೂ ಅದನ್ನು ಪ್ರಶ್ನಿಸಲೂ ಇಲ್ಲ. ಇದೆಲ್ಲ ಗೊತ್ತಾದ ನಾನು ನರ ಬಂಡಾಯದ ಪತ್ರಿಕೆಗೆ ಬರೆದು ಪ್ರಕಟಿಸಿದ್ದೆ. ಆ ಪ್ರತಿಗಳನ್ನು ಮಾಂತೇಶಿ ಊರಿಗೆ ತೆಗೆದುಕೊಂಡು ಹೋಗಿ ಊರಲ್ಲೆಲ್ಲಾ ಹಂಚಿದನು. ವಿಷಯ ತಿಳಿದ ಊರಿನ ಪ್ರಮುಖರು, ಈ ರುದ್ರಪ್ಪ ಊರ ಮಾನ ಹರಾಜು ಹಾಕಿದ ಎಂದೆಲ್ಲ ಕೂಗಾಡಿದ್ದರು.
`ಅವನು ಊರಿಗೆ ಬರಲಿ ವಿಚಾರಿಸುತ್ತೇವೆ’ ಎಂದೆಲ್ಲಾ ಕೂಗಾಡಿದರು. ನಾನು ತಿಂಗಳೊಪ್ಪತ್ತಿನಲ್ಲಿ ಊರಿಗೆ ಹೋದಾಗ ಯಾರೂ ಆ ಬಗ್ಗೆ ಮಾತಾಡಲಿಲ್ಲ. ಮುಖ್ಯ ಕಾರಣ ಬರೆದುದೆಲ್ಲ ನಿಜವಾದ ಘಟನೆಯಾಗಿತ್ತು. ಮತ್ತೆ ಹೆಚ್ಚು ಕೆದಕಿದರೆ ತಮಗೆ ಇದು ಅವಮಾನದ ಘಟನೆಯ ಮರು ಪ್ರಸ್ತಾಪವಾಗಿ ವಿಪರೀತಕ್ಕೆ ಹೋಗಬಹುದೆಂದು ಸುಮ್ಮನಾಗಿದ್ದರು. ಹೀಗೆ ನಾನು ಮೈಸೂರಲ್ಲಿದ್ದಾಗ ಊರ ಘಟನೆಗಳಿಗೆ ಸ್ಪಂದಿಸುತ್ತಾ ಇರುವುದು ಮೈಸೂರಿನಲ್ಲಿದ್ದ ಪ್ರಗತಿಪರ ಸಂಘಟನೆಗಳ ಮತ್ತು ವಿಚಾರವಂತರ ಒಡನಾಟವೇ ಅದಕ್ಕೆ ಕಾರಣವಾಗಿತ್ತು ಎಂಬುದನ್ನ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.
ಮುಂದುವರಿಯುವುದು
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಅಂತರಂಗ
ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ
![](https://suddidina.com/wp-content/uploads/2024/06/sb_ranganth_davangere_suddidina.jpg)
ಸುದ್ದಿದಿನ,ದಾವಣಗೆರೆ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಕ ಸಾ ಪ ಮಾಜಿ ಅಧ್ಯಕ್ಷ ಪ್ರೊ . ಎಸ್ ಬಿ ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿನಿಧಿ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ತರಳಬಾಳು ಬಡಾವಣೆಯ ಅವರ ನಿವಾಸದಲ್ಲಿ ಜಿಲ್ಲಾ ಕ ಸಾ ಪ ಅಧ್ಯಕ್ಷ ಬಿ ವಾಮದೇವಪ್ಪ ಮತ್ತು ಪದಾಧಿಕಾರಿಗಳು ಇಂದು ಪ್ರದಾನ ಮಾಡಿ ಗೌರವಿಸಿದರು.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಅನುವಾದ ಸಾಹಿತ್ಯಕ್ಕಾಗಿ ನೀಡುವ 2023ರ ‘ಶ್ರೀಮತಿ ಭಾರತಿ ಮೋಹನ ಕೋಟಿ ದತ್ತಿ ಪಶಸ್ತಿ’ ಗೆ ಪ್ರೊ. ಎಸ್.ಬಿ.ರಂಗನಾಥ್ ಅನುವಾದಿಸಿದ ಖ್ಯಾತ ಲೇಖಕ ಶಶಿ ತರೂರು ಅವರ ‘ಕಗ್ಗತ್ತಲ ಕಾಲ’ ಕೃತಿಯು ಆಯ್ಕೆಯಾಗಿತ್ತು. ಶಶಿ ತರೂರ್ ಅವರ ಇಂಗ್ಲಿಷ್ An Era of Darkness ಎಂಬ ಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದ ಇದನ್ನು ಪ್ರೊ. ರಂಗನಾಥ್ ಅವರು ಕೊರೊನಾ ಕಾಲದ ಲಾಕ್ ಡೌನ್ ಸಂದರ್ಭದಲ್ಲಿ ಕನ್ನಡಕ್ಕೆ ಅನುವಾದಿಸಿದ್ದರು. 2022ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಈ ಕೃತಿಯನ್ನು ಪ್ರಕಟಿಸಿತ್ತು.
ಪ್ರೊ. ರಂಗನಾಥ್ ಇದುವರೆಗೂ ‘ಪ್ರಜಾವಾಣಿ ‘ ಯ ಅಂಕಣ ಬರಹಗಳ ಸಂಗ್ರಹ ‘ಎಲೆಲೆ ಮಧುಬಾಲೆ’, ‘ಕಚಗುಳಿ(ಗೆ) ಕಾಲ’ ಸೇರಿದಂತೆ ಹತ್ತು ಕೃತಿಗಳ ಲೇಖಕರು. ಬಂಗಾಳಿಯ ಪ್ರಸಿದ್ಧ ಕಾದಂಬರಿಗಳಾದ ‘ಭುವನ್ ಸೋಮ್’ , ‘ಪ್ರತಿದ್ವಂದಿ’ ಮುಂತಾದ ಏಳು ಕೃತಿಗಳನ್ನು ಅನುವಾದಿಸಿದ್ದಾರೆ. ಇವರ ‘ ಟಿಪ್ಪು ಸುಲ್ತಾನನ ಖಡ್ಗ’ ಕೃತಿಯು ಮೂರು ಮುದ್ರಣಗಳನ್ನು ಕಂಡಿದೆ. ಇತ್ತೀಚೆಗೆ ಅನುವಾದಿಸಿದ ನಿವೃತ್ತ ಐ ಎ ಎಸ್ ಅಧಿಕಾರಿ ಎಂ ಮದನಗೋಪಾಲ್ ಅವರ ‘ಕಾಮನ ಬಿಲ್ಲನು ಬಂಬತ್ತಿ’ ಕೃತಿಯು ರಾಯಚೂರಿನಲ್ಲಿ ಲೋಕಾರ್ಪಣೆಗೊಂಡಿತ್ತು.
ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಪ್ರೊ.ಎಸ್.ಬಿ.ರಂಗನಾಥ್ ಅವರು ತಮ್ಮ ತೀವ್ರ ಅನಾರೋಗ್ಯದ ಕಾರಣದಿಂದ ಹಾಜರಿರಲು ಸಾಧ್ಯವಾಗಿರಲಿಲ್ಲ. ಈಗ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಎಸ್.ಬಿ.ರಂಗನಾಥ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಪ್ರಶಸ್ತಿ ಫಲಕ ಮತ್ತು ಹತ್ತು ಸಾವಿರ ನಗದನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪರಿಷತ್ತಿನ ಪದಾಧಿಕಾರಿಗಳಾದ ರಾಘವೇಂದ್ರ ನಾಯರ್, ಎಸ್ ಎಂ ಮಲ್ಲಮ್ಮ, ರುದ್ರಾಕ್ಷಿ ಬಾಯಿ ಪುಟ್ಟನಾಯಕ್, ತಾಲ್ಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಕಾರ್ಯದರ್ಶಿಗಳಾದ ನಾಗರಾಜ ಸಿರಿಗೆರೆ, ದಾಗಿನಕಟ್ಟೆ ಪರಮೇಶ್ವರಪ್ಪ, ನಿರ್ದೇಶಕರಾದ ಷಡಾಕ್ಷರಪ್ಪ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
-
ದಿನದ ಸುದ್ದಿ7 days ago
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಮಸ್ಕಿ | ಬಿಜೆಪಿ ಕಚೇರಿಯಲ್ಲಿ ಆತ್ಮಾವಲೋಕನ ಸಭೆ
-
ದಿನದ ಸುದ್ದಿ6 days ago
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
-
ದಿನದ ಸುದ್ದಿ6 days ago
ಭಾರೀ ಮಳೆ ; ಡ್ಯಾಂಗಳಿಗೆ ಹರಿದು ಬಂದ ನೀರೆಷ್ಟು..? ಇಲ್ಲಿದೆ ಸಂಪೂರ್ಣ ಮಾಹಿತಿ
-
ಅಂತರಂಗ5 days ago
ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ
-
ದಿನದ ಸುದ್ದಿ5 days ago
ನಕಲಿ ವೈದ್ಯರ ಹಾವಳಿಗೆ ಬ್ರೇಕ್ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮ
-
ದಿನದ ಸುದ್ದಿ7 days ago
SC – ST | ಕುರಿ,ಮೇಕೆ ಹಾಗೂ ಕೋಳಿ ಸಾಕಾಣಿಕೆ ತರಬೇತಿ