Connect with us

ಲೈಫ್ ಸ್ಟೈಲ್

ಜಾನುವಾರುಗಳ ಗೆರಸಲು(ಕಾಲು-ಬಾಯಿ ಜ್ವರ) ರೋಗವೂ,.. ಕರುವುಗಲ್ಲಮ್ಮ ದೇವತೆಯೂ..

Published

on

ರೈತರ ಮಕ್ಕಳು ದಯಮಾಡಿ ಈ ಲೇಖನವನ್ನು ತಪ್ಪದೇ ಓದಿರಿ…

  • ಡಾ.ವಡ್ಡಗೆರೆ ನಾಗರಾಜಯ್ಯ

ಮ್ಮದು ರೈತಾಪಿ ಕುಟುಂಬ. ಕೃಷಿ ಕೆಲಸ ಮತ್ತು ಕರಾವಿಗಾಗಿ ನಮ್ಮ ಮನೆಯಲ್ಲಿ ಸದಾ ಒಂದು ಜೊತೆ ನಾಟಿ ಹಸುಗಳು ಮತ್ತು ಕರುಗಳು ಇರುತ್ತಿದ್ದವು. ಅವುಗಳನ್ನು ನಾವು ಸಾಕುತ್ತಿದ್ದೆವು ಎಂಬುದಕ್ಕಿಂತಲೂ ಆ ‘ಜೀವಧನ’ಗಳು ನಮ್ಮನ್ನು ಸಾಕುತ್ತಿದ್ದವು ಎಂದು ಹೇಳಿದರೆ ಸರಿಯಾದೀತು. ಜಾನುವಾರುಗಳನ್ನು ನಮ್ಮ ಪೂರ್ವಿಕರು ‘ಜೀವಧನ’ ಎಂದು ಕರೆದಿರುವುದು ಅನ್ವರ್ಥಕವಾಗಿದೆ.

ಜೀವಧನ ಎಂದರೆ ಜೀವಂತ ಹಣ! ಈ ಜೀವಧನಗಳು ಜೀವಂತ ಹಣ ಮಾತ್ರವಾಗಿರದೆ ಹಣಕ್ಕಿಂತಲೂ ಮಿಗಿಲಾಗಿ ನಮ್ಮ ಜೀವಭಾವದೊಂದಿಗೆ ನಂಟು ಬೆಸೆದುಕೊಂಡಿರುತ್ತಿದ್ದವು. ಜಾನುವಾರುಗಳನ್ನು ನೋಟುಗಳ ರೂಪದ ಆರ್ಥಿಕ ದೃಷ್ಟಿಯಿಂದ ನೋಡುವುದೇ ಅಮಾನವೀಯ ಅನ್ನಿಸುತ್ತದೆ.

ಪುರಾತನ ಕಾಲದ ಚೇಗಿದ ಮರವೊಂದನ್ನು ನಾವು ಹಣದ ರೂಪದಲ್ಲಿ ಬೆಲೆಕಟ್ಟಲು ಹೋದರೆ, ಆ ಮರವು ಇಷ್ಟೂ ದೀರ್ಘ ವರ್ಷಗಳ ಕಾಲ ನೀಡಿದ ನೆರಳು, ಒದಗಿಸಿದ ಆಶ್ರಯ, ಕಣ್ಮನಗಳಿಗೆ ತಂಪು ತುಂಬಿದ ಸೌಂದರ್ಯ, ಪಸರಿಸಿದ ಗಾಳಿಗಮಲು, ಕರುಣಿಸಿದ ಹಣ್ಣುಹಂಪಲು ಮುಂತಾದವುಗಳಿಗೆ ಯಾವ ಬೆಲೆ ಕಟ್ಟಲು ಸಾಧ್ಯ?

ದನಕರು ಕುರಿಮೇಕೆ ಕೋಳಿಗಳನ್ನು ಸಾಕುತ್ತಾ ಅವುಗಳೊಂದಿಗೆ ನಾವು ಬದುಕು ಕಟ್ಟಿಕೊಂಡಿದ್ದೆವು. ಅವುಗಳು ಖಾಯಿಲೆ-ಕಸಾಲೆ ಮುಂತಾದ ಕಾರಣಗಳಿಂದ ಅಕಾಲ ಮರಣಕ್ಕೀಡಾದರೆ ನಮ್ಮದೇ ಕಳ್ಳುಬಳ್ಳಿಯನ್ನು ಕಳೆದುಕೊಂಡಂತೆ ತೀವ್ರ ದುಃಖ ನಮ್ಮನ್ನು ಆವರಿಸುತ್ತಿತ್ತು.

ಜಾನುವಾರುಗಳಿಗೆ ಬಾಧಿಸುವ ಗೆರಸಲು ರೋಗ (ಕಾಲು – ಬಾಯಿ ಜ್ವರ), ಕುಂದು, ಚಪ್ಪೆರೋಗ ಮುಂತಾದವು ಕಾಣಿಸಿಕೊಂಡರಂತೂ ನಮ್ಮ ಕರುಳು ಬಾಯಿಗೆ ಬಂದಂತೆ ನಡುಗಿಹೋಗುತ್ತಿದ್ದೆವು. ಅವುಗಳ ನರಳಾಟ ನೋಡಿ ಕಣ್ಣೀರಾಕುತ್ತಿದ್ದ ನನ್ನ ಅಪ್ಪ, ಊಟ ನೀರು ನಿದ್ದೆ ಎಲ್ಲವನ್ನೂ ಬಿಟ್ಟು ಒದ್ದಾಡುತ್ತಿದ್ದ. ತನಗೆ ತೋಚಿದ ಗಿಡಮೂಲಿಕೆ ಮುಂತಾದ ಮುದ್ದುಗಳನ್ನು ಬಳಸುವುದರ ಜೊತೆಗೆ, ರೋಗಪೀಡಿತ ದನಗಳಿಗೆ ನಾಟಿ ಔಷಧ ನೀಡುವ ಪಂಡಿತರನ್ನು ಹುಡುಕಾಡಿಕೊಂಡು ಅಲೆದಾಡುತ್ತಿದ್ದ.

ತಿಗಳರ ಬೈಲಪ್ಪ, ಬುಡ್ಡೆ ಈರಣ್ಣ, ಮಂತ್ರವಾದಿ ವೆಂಕಟಸ್ವಾಮಯ್ಯ, ಬಡಗಿ ಮುದ್ಧಣ್ಣ ಮುಂತಾದ ಪಂಡಿತರು ನಮ್ಮೂರ ದನಗಳಿಗೆ ನಾಟಿಮದ್ದು ನೀಡುತ್ತಿದ್ದರು. ನಾಟಿಮದ್ದು ಕೊಡಿಸುವುದರ ಜೊತೆಗೆ ಇಂಗ್ಲೀಷ್ ಔಷಧವನ್ನೂ ಕೊಡಿಸಬೇಕೆಂದು ಆಲೋಚಿಸುತ್ತಿದ್ದ ನಾನು, ನಮ್ಮೂರಿನಲ್ಲಿಯೇ ಇದ್ದ ಪಶುಸಂಗೋಪನೆ ಇಲಾಖೆಯ ಸರ್ಕಾರಿ ಪಶು ಚಿಕಿತ್ಸಾಲಯದ ‘ದನಿನ ಡಾಕ್ಟರ್’ ಡಾ.ಹುಲಿಯಪ್ಪನ ಬರುವಿಕೆಗಾಗಿ ದಾರಿ ಕಾಯುತ್ತಾ ಆಸ್ಪತ್ರೆಯ ಬಾಗಿಲಲ್ಲಿ ನಿಲ್ಲುತ್ತಿದ್ದೆ.

ಪುಟಗೋಸಿ ಬಿಗಿಮಾಡಿಕೊಂಡು ಲಾಡಿದಾರದಲ್ಲಿಯೋ ಉಡುದಾರದಲ್ಲಿಯೋ ಕಟ್ಟಿಕೊಂಡಿದ್ದ ಪುಡಿಕಾಸನ್ನು ಔಷಧ ಇಂಜೆಕ್ಷನ್ ಪೌಡರ್ ಮುಂತಾದವುಗಳಿಗಾಗಿ ಅಪ್ಪ ಸುರಿಯುತ್ತಿದ್ದ. ಅಮ್ಮನೂ ತನ್ನ ಕೂಲಿನಾಲಿಯ ದುಡ್ಡನ್ನು ಎಲೆಅಡಕೆಯ ಸಂಚಿಯಿಂದ ತೆಗೆದು ಕೊಡುತ್ತಿದ್ದಳು. ದಿಕ್ಕುದೇವರುಗಳಿಗೆಲ್ಲಾ ಕಾಸಿನ ಮುಡುಪು ಕಟ್ಟಿ ಹರಕೆ ಹೊರುತ್ತಿದ್ದಳು.

ವಿಶೇಷವಾಗಿ ಮುದುಗೆರೆ ಸಪ್ಪಲಮ್ಮ ಹಾಗೂ ಮಚ್ಚೇನಹಳ್ಳಿ(ದನಿನ) ಮಾರಮ್ಮ ದೇವರ ಹೆಸರುಗಳಲ್ಲಿ ಹರಿಷಿಣದ ಬಟ್ಟೆಯಲ್ಲಿ ಮುಡುಪು ಕಟ್ಟಿದ ಕಾಸನ್ನು ದೇವರ ಪಟದ ಮುಂದಿನ ಮೊಳೆ ಅಥವಾ ನಿಲದ(ನೆಲುವು) ನೇಕೆಹುರಿಗಳಿಗೆ ಗಂಟು ಹೂಡುತ್ತಿದ್ದಳು.ಸ್ಥಳೀಯ ದೇವರ ಗುಡಿಗಳಿಗೆ ಹೋಗಿ ಪೂಜೆ ಮಾಡಿಸಿ ತೆಂಗಿನಕಾಯಿಯ ತೀರ್ಥವನ್ನು ದನಗಳ ಮೈಮೇಲೆ, ನಮಗೆ ಮತ್ತು ಕೊಟ್ಟಿಗೆಗೆ ಚುಮುಕಿಸಿ ಎಲ್ಲರ ಹಣೆಗಳಿಗೂ ಬೊಟ್ಟಿಕ್ಕುತ್ತಿದ್ದಳು.

ಗೆರಸಲು ರೋಗ ಅಥವಾ ಕಾಲು- ಬಾಯಿ ಜ್ವರ ಎಂಬ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಒಂದು ರೋಗಗ್ರಸ್ತ ರಾಸಿನಿಂದ ಇನ್ನೊಂದು ಆರೋಗ್ಯವಂತ ರಾಸಿಗೆ ನೇರ ಸಂಪರ್ಕದಿಂದಲೂ, ಮೂತ್ರ ಗಂಜಳದ ವಾಸನೆ ತುಂಬಿಕೊಂಡ ಗಾಳಿಯ ಮೂಲಕವೂ ಹರಡಿಕೊಂಡು ಇಡೀ ಊರಿನ ಜಾನುವಾರುಗಳಿಗೆ ಅತೀ ಶೀಘ್ರವಾಗಿ ಹಬ್ಬಿಬಿಡುತ್ತಿತ್ತು.

ಕಲುಷಿತಗೊಂಡ ಮೇವು ಮತ್ತು ಮಲೆತ ನೀರನ್ನು ಸೇವಿಸುವುದರ ಮೂಲಕವೂ ಗೆರಸಲು ರೋಗಾಣುಗಳು ಹರಡುತ್ತವೆಂಬ ವೈಜ್ಞಾನಿಕ ತಿಳಿವಳಿಕೆ ಇರದಿದ್ದ ನಮ್ಮ ಪೂರ್ವಿಕರು, ಇವೆಲ್ಲವೂ ದೇವರುಗಳೇ ತಂದೊಡ್ಡುವ ದೊಡ್ಡ ರೋಗಗಳೆಂದು ನಂಬಿದ್ದರು.

ನಮ್ಮದು ಚಿಕ್ಕ ಮನೆ. ದನಗಳ ಗ್ವಾಂದಿಗೆ ಎದುರಿನಲ್ಲಿಯೇ ನಾವು ರಾತ್ರಿ ಹೊತ್ತು ಮಲಗಿರುತ್ತಿದ್ದೆವು. ದನಗಳು ಒಮ್ಮೊಮ್ಮೆ ಹಾಯ್ದಾಡುತ್ತಾ ಕೊಂಬುಗಳಿಂದ ಬಡಿದಾಡಿಕೊಂಡರೆ ಸಾಕು ಅಪ್ಪ ದಡಕ್ಕನೆ ಎದ್ದು ಕೂರುತ್ತಿದ್ದ. ಹಾಯ್ದಾಡುವ ದನಗಳನ್ನು ನಾವು ಸಾಕಿದ್ದೇ ಅಪರೂಪ. ನಮ್ಮ ಮನೆಯಲ್ಲಿದ್ದದ್ದು ಹಸುಮಕ್ಕಳಂತಹ ದನಗಳು.

ನಾನು ಒಮ್ಮೊಮ್ಮೆ ನೇರವಾಗಿ ಹಸುವಿನ ಕೆಚ್ಚಲಿಗೆ ಬಾಯಿಹಾಕಿ ಹಾಲು ಕುಡಿಯುತ್ತಿದ್ದೆನು. ನಮ್ಮ ಮನೆಯಲ್ಲಿದ್ದ ದನಗಳು ಅಂತಹ ಸಾಧುಜೀವಿಗಳಾಗಿದ್ದವು. ಇಂಥಾ ಹಸುಗಳಿಗೆ ಗೆರಸಲು ರೋಗ ತಗುಲಿದಾಗ ರೋಗಗ್ರಸ್ತ ರಾಸಿನಲ್ಲಿ ಮೊದಲಿಗೆ ತೀವ್ರ ಜ್ವರ ಕಾಣಿಸುಕೊಂಡು ಮೇವು ತಿನ್ನುವುದನ್ನು ನಿಲ್ಲಿಸಿಬಿಡುತ್ತಿತ್ತು. ಬಾಯಲ್ಲಿ ನೊರೆ ಎಂಜಲು ಸುರಿಸಿಕೊಂಡು ಮೂಗಿನಲ್ಲಿ ಸಿಂಬಳ ಸುರಿಸಿಕೊಂಡು ನೀರನ್ನೂ ಕೂಡಾ ಮುಟ್ಟದೆ ಮೈಕೂದಲು ಮುಳ್ಳೆದ್ದು ನಿಂತುಬಿಡುತ್ತಿತ್ತು.

ನಾವು ಹಾಲಿಂಡುವ ಮಾತಿರಲಿ ಕರುವಿಗೂ ಹಾಲೂಡುವುದನ್ನು ನಿಲ್ಲಿಸುತ್ತಿದ್ದ ಹಸುವಿಗೆ ನೋಡನೋಡುತ್ತಲೇ ಕಾಲು ಕುಂಟು ಬೀಳುತ್ತಿತ್ತು. ಮುಸುಡಿಯ ಮೇಲೆ ಚಿಕ್ಕ ಚಿಕ್ಕ ಗುಳ್ಳೆಗಳೆದ್ದು ಆ ಗುಳ್ಳೆಗಳೊಡೆದು ಬಾಯಿಯ ಜೊಲ್ಲು ವಾಸನೆ ನಮ್ಮ ಮನೆ ತುಂಬಾ ಹರಡಿಕೊಳ್ಳುತ್ತಿತ್ತು. ನನ್ನ ಅಪ್ಪನು ಹಸುವಿನ ಬಾಯಿಯನ್ನು ಭದ್ರವಾಗಿ ಹಿಡಿದು ಕೈಗಳಿಂದ ಮುಸುಡಿಯನ್ನು ವಸಡುಗಳನ್ನೂ ಅಗಲವಾಗಿ ತೆಗೆದು ಬಾಯಿಯ ಮತ್ತು ನಾಲಗೆಯ ಹುಣ್ಣುಗಳನ್ನು ಗಮನಿಸುತ್ತಿದ್ದ.

ವಸಡು ನಾಲಗೆ ಮುಸುಡಿಯ ಮೇಲೆಲ್ಲಾ ಅಲ್ಸರ್ ಬೊಬ್ಬೆಗಳೆದ್ದು ಈರುಳ್ಳಿ ಪೊರೆ ತೆಗೆದಂತೆ ಅಲ್ಸರ್ ಪೊರೆಯುದುರಿದ ಜಾಗಗಳೆಲ್ಲಾ ಕೆಂಪಗೆ ಕಾಣಿಸುತ್ತಿದ್ದವು. ಚಿಕ್ಕ ಮಕ್ಕಳಾಗಿದ್ದ ನಾವು, ನಮ್ಮ ಹಸುವಿಗೆ ಒದಗಿದ ಪಾಡನ್ನು ಕಂಡು ಮನೆ ತುಂಬಾ ಅಳುತ್ತಿದ್ದೆವು. ನಾವು ಎಷ್ಟೇ ಪ್ರಯತ್ನಸಿದರೂ ಆ ಹಸು ಮೇವು ತಿನ್ನಲು ನೀರು ಕುಡಿಯಲು ನಿರಾಕರಿಸುತ್ತಿತ್ತು. ಪಾದಗಳ ಗೊರಸಿನ ಸೀಳುಗಳಲ್ಲಿಯೂ ಹುಣ್ಣುಗಳಾಗಿ ನೊಣ ಸೊಳ್ಳೆ ಜೀರುಂಡೆಗಳು ಕುಳಿತು ಹುಣ್ಣುಗಳು ದೊಡ್ಡ ವ್ರಣಗಳಾಗಿ ಹುಳುಗಳು ಬೀಳುತ್ತಿದ್ದವು. ಕೆಲವೊಮ್ಮೆ ಮೊಲೆತೊಟ್ಟು ಮತ್ತು ಕೆಚ್ಚಲಿಗೂ ಗುಳ್ಳೆಗಳು ಹಬ್ಬುತ್ತಿದ್ದವು.

ಅಪ್ಪನು ಬೆಟ್ಟ ಗುಡ್ಡ ಬಯಲು ಅಲೆದಾಡಿ ಲೋಳೆಸರ (ಆಲೋವೆರಾ) ತಂದು ಬೆಂಬೂದಿಯಲ್ಲಿ ಸುಟ್ಟು, ಹಿಂಡಿ ತೆಗೆದ ರಸವನ್ನು ದನಗಳ ಬಾಯಿ ನಾಲಗೆ ವಸಡು ಗೊರಸುಗಳ ಮೇಲೆ ಸವರಿ ಬಿಳಿ ಪಾವುಡದಲ್ಲಿ ಒರೆಸುತ್ತಿದ್ದ. ಗೊರಸಿನ ಗಾಯಗಳನ್ನು ಬಿಸಿನೀರಿನಲ್ಲಿ ತೊಳೆದು, ಸೀಳುಗಳಿಗೆ ಹೊಂಗೆಣ್ಣೆ, ಹಿಪ್ಪೆ ಎಣ್ಣೆ ಅಥವಾ ಬೇವಿನೆಣ್ಣೆ ಸುರಿಯುತ್ತಿದ್ದೆವು ಕೋಳಿಪುಕ್ಕ ಅಥವಾ ಗರಿಕೆ ಎಸಳನ್ನು ಬೇವಿನೆಣ್ಣೆಯಲ್ಲಿ ಅದ್ದಿ ಸೀಳುಸೀಳಿಗೂ ಹಚ್ಚಿದರೆ ನೊಣ ಕೂರುತ್ತಿರಲಿಲ್ಲ.

ಗುಡಾಣದಲ್ಲಿ ಬಿಸಿನೀರು ಕಾಯಿಸಿ ಮೈತೊಳೆಯುತ್ತಿದ್ದೆವು. ಬಲು ಎಚ್ಚರದಿಂದ ದನದ ಕೊಟ್ಟಿಗೆಯಲ್ಲಿ ತೆಂಗಿನ ಗರಿಗಳಿಗೆ ಬೆಂಕಿ ಹಚ್ಚಿ ಧಗಧಗಿಸುವ ಜ್ವಾಲೆಯ ಮೇಲೆ ಬೇವಿನಸೊಪ್ಪು ಲಕಲಿಸೊಪ್ಪು ತಂಗಡಿಸೊಪ್ಪು ಕಕ್ಕೆಸೊಪ್ಪು ಮುಂತಾದ ನಾಲ್ಕಾರು ಬಗೆಯ ಹಸಿರು ತೊಪ್ಪಲು ಹಾಕಿ ಉರಿಸಿ ಹೊಗೆ ತುಂಬಿಸಿ, ಹಸಿರೆಲೆ ಹೊಗೆಯ ಕಾವಿನಲ್ಲಿ ದನಗಳನ್ನು ನಿಲ್ಲಿಸುತ್ತಿದ್ದೆವು.

ಗೆರಸಲು ರೋಗದಿಂದ ನಮ್ಮ ಹಸುಗಳು ನರಳುವಾಗ ಅಮ್ಮನು ಮೂರ್ನಾಲ್ಕು ಸೇರಿನಷ್ಟು ಹುರುಳಿಕಾಳನ್ನು ನೀರಿನಲ್ಲಿ ನೆನೆಸಿ, ರುಬ್ಬು ಗುಂಡಿನಿಂದ ರುಬ್ಬಿ ಹುರುಳಿಕಾಳಿನ ಹಾಲನ್ನು ಸೋಸಿಕೊಡುತ್ತಿದ್ದಳು. ಕೆಲವೊಮ್ಮೆ ರಾಗಿ ಅಂಬಲಿಯನ್ನು ಕಾಯಿಸಿ ತಂದುಕೊಡುತ್ತಿದ್ದಳು. ಅಪ್ಪ ಅದೆಲ್ಲವನ್ನೂ ಬಿದಿರಿನ ಗೊಟ್ಟದಿಂದ ದನಗಳಿಗೆ ಕುಡಿಸುತ್ತಿದ್ದ. ಸ್ವಲ್ಪ ಚೇತರಿಕೆ ಕಾಣಿಸಿದಾಗ ಹಸಿ ಹುಲ್ಲು, ಹುರುಳಿ ಹೊಟ್ಟು, ತೊಗರಿ ಹೊಟ್ಟು, ಅವರೆ ಹೊಟ್ಟು, ಸಾವೆ ಹುಲ್ಲು, ಆರಕದ ಹುಲ್ಲು, ಕೊರಲೆ ಹುಲ್ಲು ಮುಂತಾದ ಮೆತ್ತನೆ ಮೇವನ್ನು ತಿನ್ನಿಸುತ್ತಿದ್ದ.

ನಾನು ನನ್ನ ಅಕ್ಕ ಮತ್ತು ತಮ್ಮಂದಿರು ಹಸಿ ಹುಲ್ಲನ್ನು ಹೊಲಮಾಳದಲ್ಲಿ ಕಿತ್ತು ತರುತ್ತಿದ್ದೆವು. ಅಂತೂ ಇಂತೂ ನಾಟಿಮದ್ದು, ಇಂಗ್ಲೀಷ್ ಮದ್ದು, ದೇಶಿಜ್ಞಾನದ ಚಿಕಿತ್ಸೆ, ಮೆತ್ತನೆಯ ಮೇವು ಮುಂತಾದ ಆರೈಕೆಗಳು ಫಲಿಸಿ ನಮ್ಮ ದನಗಳು ಮತ್ತೆ ಹೊಸ ಜೀವಕಳೆ ತುಂಬಿಕೊಳ್ಳುತ್ತಿದ್ದವು.ನಮ್ಮ ಮುಖದಲ್ಲೂ ನಗು ತರಿಸಿ ಬದುಕಿಗೆ ಕಳೆ ತುಂಬುತ್ತಿದ್ದವು.

ಇಲ್ಲಿ ನನ್ನದೇ ಅನುಭವಗಳನ್ನು ದಾಖಲಿಸಲು ನನಗೆ ಪ್ರೇರಣೆ ನೀಡಿದ್ದು ನಾನು ಇತ್ತೀಚೆಗೆ ಸಂಶೋಧಿಸಿದ ಒಂದು ಜಾನಪದ ಸ್ಥಳಪುರಾಣ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿ ದೇವರತೋಪು ಎಂಬ ಗ್ರಾಮದಲ್ಲಿರುವ ಕರುವುಗಲ್ಲಮ್ಮ ಎಂಬ ಗೋಕಲ್ಲನ್ನು ಕುರಿತ ಈ ಸ್ಥಳಪುರಾಣವು ಹದಿಮೂರು ಶತಮಾನಗಳಷ್ಟು ಹಿಂದಕ್ಕೆ ಸರಿಯುತ್ತದೆ. ಜಯಮಂಗಲಿ ನದಿಯ ತಟದಲ್ಲಿರುವ ದೇವರತೋಪು ಗ್ರಾಮದ ಪುರಾತನ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಅಂಗಳದಲ್ಲಿರುವ ಕರುವುಗಲ್ಲು ಆ ಊರಿನ ಹುಟ್ಟಿನ ಕಥೆಯನ್ನು ಹೇಳುತ್ತದೆ.

ಸೀಮಾಂಧ್ರದ ರಾಯಲಸೀಮಾ ಕರ್ನೂಲು ಜಿಲ್ಲೆಯ ಆಹೋಬಲಂ ಮೂಲದ ವೈಷ್ಣವ ಪಂಥೀಯ ಕಾಪುರೆಡ್ಡಿ ಸಮುದಾಯದ ಕೆಲವು ಕುಟುಂಬಗಳು ಆರು ಎತ್ತಿನ ಬಂಡಿಗಳನ್ನು ಕಟ್ಟಿಕೊಂಡು ದಕ್ಷಿಣ ಮಾರ್ಗವಾಗಿ ಮಧುಗಿರಿ ಸೀಮೆಗೆ ವಲಸೆ ಬಂದರು. ಕಡಪ – ಕದಿರಿ ಮಾರ್ಗವಾಗಿ ಪಿನಾಕಿನಿ ನದಿಯ ತೋಳುಗಳನ್ನಿಡಿದು ತಮ್ಮ ವಲಸೆ ದಾರಿಯನ್ನು ಮುಂದುವರೆಸಿ ನಡೆಯುತ್ತಿರುವಾಗ ಪಿನಾಕಿನಿಯು ಮೈದುಂಬಿದಳು.

ಕುಲದೇವತೆಯಾದ ಆಹೋಬಲ ನರಸಿಂಹಸ್ವಾಮಿಯ ಹೆಸರೆತ್ತಿ ಪೂಜಿಸಿದ ಅವರು, ಪಿನಾಕಿನಿಯನ್ನು ಪ್ರಾರ್ಥಿಸಲು ಮೈದುಂಬಿ ಹರಿಯುತ್ತಿದ್ದ ಅವಳು ಬಂಡಿಜಾಡಿನಷ್ಟು ಓಣಿಯನ್ನು ಬಿಟ್ಟು ಹರಿದಳು. ಬಂಡಿಗಳು ಸಾಗಲು ಬಂಡಿಜಾಡಿನಷ್ಟು ಅಗಲ ಅವಕಾಶ ನೀಡಿದ ಪಿನಾಕಿನಿಗೆ ಕೈಮುಗಿದು ಪ್ರಯಾಣ ಮುಂದುವರೆಸಿದ ಕಾಪುರೆಡ್ಡಿಗಳು ದೊಡ್ಡದಾಳವಟ್ಟ ಎಂಬ ಊರಿನ ಸಮೀಪಕ್ಕೆ ಬಂದು ತಲುಪಿದಾಗ ಸಂಜೆಯಾಗಿತ್ತು.

ಬಂಡಿಗೆ ಹೂಡಿದ್ದ ಬಿಳಿ ಎತ್ತೊಂದು ಸತ್ತ ಕಾರಣ ಬಿಳಿ ಎತ್ತುಗಳ ಬಂಡಿಗಳಲ್ಲಿದ್ದ ಕುಟುಂಬದವರೆಲ್ಲರೂ ಅಲ್ಲಿಯೇ ಹಳ್ಳದ ದಿಡ್ಡೆಯಲ್ಲಿ ನೆಲೆಸಬೇಕೆಂದು ಹಾಗೂ ಕರಿ ಎತ್ತಿನ ಬಂಡಿಗಳ ಕುಟುಂಬಗಳು ತಮ್ಮ ಪ್ರಯಾಣವನ್ನು ಮುಂದಕ್ಕೆ ಬೆಳೆಸಬೇಕೆಂದು ತೀರ್ಮಾನಿಸಲಾಯಿತು. ಬಿಳಿ ಎತ್ತಿನ ಬಂಡಿಯ ಕುಟುಂಬಗಳು ಅಲ್ಲಿಯೇ ನೆಲೆಸಿ ತಮ್ಮ ಕುಲದೇವತೆ ನರಸಿಂಹಸ್ವಾಮಿಯ ಗುಡಿಯನ್ನು ಕಟ್ಟಿಕೊಂಡರು.

ಕರಿ ಎತ್ತಿನ ಬಂಡಿಯಲ್ಲಿದ್ದ ಕಾಪುರೆಡ್ಡಿ ಕುಟುಂಬದವರು ಕೊಡಿಗೇನಹಳ್ಳಿ ಹತ್ತಿರದ ತೋಪಿಗೆ ಬಂದಾಗ ಜಯಮಂಗಲಿಯು ಮೈದುಂಬಿ ಹರಿಯುತ್ತಿದ್ದಳು. ಆ ರಾತ್ರಿ ಅಲ್ಲಿಯೇ ಒಲೆಗುಂಡು ಹೂಡಿ ಅಟ್ಟುಂಡು ಬೆಳಗಾದಾಗ ಪ್ರಯಾಣ ಮುಂದುವರಿಸಲೆಂದು ಬಂಡಿಹೂಡಲು ಹೋದಾಗ ಕರಿ ಎತ್ತೊಂದು ತಾನು ಕಳೆದುಕೊಂಡ ಬಿಳಿ ಎತ್ತನ್ನು ನೆನೆದು ದುಃಖಿಸುತ್ತಾ ಮೇವು ನೀರು ಸೇವಿಸುವುದನ್ನು ನಿರಾಕರಿಸಿತು.

ಜ್ವರ ಬಂದು ಬಂಡಿಯ ನೊಗಕ್ಕೆ ಹೆಗಲು ಕೊಡಲೊಪ್ಪದೆ ಪಡಾವು ಮಲಗಿಬಿಟ್ಟಿತು. ಆಗ ಬಿಳಿ ಎತ್ತಿನ ನೆನಪಿಗಾಗಿ ಬೆಣಚುಕಲ್ಲಿನ ಬಿಳಿ ಗೋಕಲ್ಲನ್ನು ತಂದು ನಿಲ್ಲಿಸಲು ದುಃಖ ಮರೆತ ಆ ಎತ್ತು ಲವಲವಿಕೆಯಿಂದ ಮೇವುಕಚ್ಚಿ ನೊಮರು ಹಾಕಿತು. ಮೈದುಂಬಿ ಹರಿಯುತ್ತಿದ್ದ ಜಯಮಂಗಲಿ ನದಿಯ ದಂಡೆಯಲ್ಲಿ ತಮ್ಮ ಕುಲದೇವತೆಯಾದ ಲಕ್ಷ್ಮೀನರಸಿಂಹಸ್ವಾಮಿಯ ಹೆಸರೆತ್ತಿ ಪೂಜಿಸಿ ಅವನಿಗೊಂದು ಗುಡಿಯನ್ನು ಕಟ್ಟಿ ಅಲ್ಲಿಯೇ ನೆಲೆಸಿದರು.

ಮುಂದೆ ಕರಿ ಎತ್ತು ತೀರಿಕೊಂಡಾಗ ಅದನ್ನು ಅಲ್ಲಿಯೇ ಸಮಾಧಿ ಮಾಡಿದರು. ಅಂದು ಸಮಾಧಿಗುಡ್ಡೆಯ ಗುರುತಿಗೆ ನೆಟ್ಟ ಗೋಕಲ್ಲು ಅಂದಿನಿಂದಲೂ ಕರುವುಗಲ್ಲಮ್ಮ ಎಂಬ ಹೆಸರಿನಲ್ಲಿ ಪೂಜಿಸಲ್ಪಡುತ್ತಿದೆ. ಇಲ್ಲಿನ ಸುತ್ತೇಳು ಊರುಗಳ ರೈತಾಪಿಗಳು ತಮ್ಮ ಜಾನುವಾರುಗಳಿಗೆ ಶ್ರೇಯಸ್ಕರವಾಗಲೆಂದು ಹಾಗೂ ಜಾನುವಾರುಗಳಿಗೆ ರೋಗರುಜಿನಗಳು ಬಂದಾಗ ಈ ಗೋಕಲ್ಲಿಗೆ ಹರಕೆ ಹೊತ್ತು ಪೂಜಿಸುತ್ತಿದ್ದಾರೆ. ಕರಿ ಗೋಕಲ್ಲಿನ ಪಕ್ಕದಲ್ಲಿಯೇ ಬಿಳಿ ಗೋಕಲ್ಲು ಕೂಡಾ ಇದೆ. ಇದು ಸ್ಥಳಪುರಾಣ.

ದಕ್ಷಿಣ ಕರ್ನಾಟಕದ ಬಹುತೇಕ ಊರುಗಳಲ್ಲಿ ಕರುವುಗಲ್ಲಮ್ಮ ಹೆಸರಿನಿಂದ ಪೂಜಿಸುವ ಗೋಕಲ್ಲುಗಳಿವೆ. ಜಾನುವಾರುಗಳಿಗೆ ಗೆರಸು ರೋಗ (ಕಾಲು – ಬಾಯಿ ಜ್ವರ) ಬಂದಾಗ, ಪ್ರತಿ ಕುಟುಂಬದ ರೈತರು ಕರುವುಗಲ್ಲಮ್ಮನ ಮೇಲೆ ಕೊಡಗಟ್ಟಲೆ ನೀರು ಸುರಿದು ಪೂಜಿಸುತ್ತಾರೆ. ನೀರು ಹರಿದ ದಾರಿಗುಂಟ ಬುರುದೆಯಲ್ಲಿ ತಮ್ಮ ಜಾನುವಾರುಗಳನ್ನು ಮೂರು ಸುತ್ತು ಓಡಾಡಿಸುತ್ತಾರೆ.

ಆಶ್ಚರ್ಯವೆಂಬಂತೆ ಗೊರಸಿನ ಸಂದಿಯಲ್ಲಿ ಹುಣ್ಣುಗಳಾಗಿ ಹುಳು ತುಂಬಿದ ಗೋಪಾದಗಳು ಬುರುದೆ ತುಂಬಿಕೊಂಡು ಹುಳು-ಹುಣ್ಣು ನೀಗಿಕೊಂಡು ಗೆಲುವಾಗುತ್ತಿದ್ದವು. ಮುಸುಡಿಮೂತಿ ನಾಲಗೆಯ ಹುಣ್ಣುಗಳೂ ವಾಸಿಯಾಗಿ ಮೇವು ತಿಂದು ಲವಲವಿಕೆಯಿಂದ ನೊಮರು ಹಾಕುತ್ತಿದ್ದವು. ಪಶು ಸಂಗೋಪನೆ ಇಲಾಖೆಯ ‘ದನಿನ ಡಾಕ್ಟರ್’ ದೇವತೆಗಳಿಗೂ ಸ್ಥಳೀಯ ನಾಟಿಔಷಧಿ ಪಂಡಿತ ದೇವತೆಗಳಿಗೂ ನಮಸ್ಕಾರ. ಈಗಿನ ಖಾಯಿಲೆ ಮತ್ತು ದೇವರ ಸ್ವರೂಪ ಬೇರೆ ಬೇರೆಯೇ ಆಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending