ದಿನದ ಸುದ್ದಿ

ಗಾಂಧೀಜಿ, ಶಾಸ್ತ್ರೀಜಿ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳ ಬೇಕು | ಸಚಿವ ಸಿ.ಎಸ್.ಪುಟ್ಟರಾಜು

Published

on

ಸುದ್ದಿದಿನ,ಮಂಡ್ಯ : ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಮಹನೀಯರಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನೆಹರು ಯುವ ಕೇಂದ್ರ, ಮಂಡ್ಯ ಇವರ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದ ಕಾವೇರಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಮುಂಭಾಗದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ಗಾಂಧೀಜಿ ತನ್ನ ಚಿಂತನೆ, ಜೀವನ ಸಂದೇಶಗಳಿಂದಲೇ ಜಗತ್ತಿನುದ್ದಕ್ಕೂ ವ್ಯಾಪಿಸಿ ನಿಂತ ಈ ಮಹಾನ್ ಚೇತನವಾದ ಇವರುಗಳ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅದರಂತೆ ನಡೆದಾಗ ಮಾತ್ರ ಅವರಿಗೆ ನಾವು ಸಲ್ಲಿಸುವ ಗೌರವ ಎಂದು ಹೇಳಿದರು.

ಮಹಾತ್ಮ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರು ನುಡಿದಂತೆ ನಡೆದವರು. ಜಗತ್ತಿನ ಎಲ್ಲಾ ಶ್ರೇಷ್ಠ ಧರ್ಮಗಳು ಮಾನವತೆಯ ಸಮಾನತೆ, ಭಾತೃತ್ವ ಹಾಗೂ ಸಹನೆಯ ಸದ್ಗುಣಗಳನ್ನು ಸಾರಿ ಸಾರಿ ಹೇಳುತ್ತವೆ. ಇದನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ ಸಚಿವರು ಸೇವೆ ಮಾಡುವುದರ ಮೂಲಕ ನಿನ್ನನ್ನು ನೀನು ಕಾಣಬಹುದಾಗಿದೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಶೆಟ್ಟಿ ಅವರು ಸತ್ಯ, ಶಾಂತಿ, ಅಹಿಂಸೆ, ಸತ್ಯಾಗ್ರಹ ಮತ್ತು ಹೋರಾಟದ ಮೂಲಕವೇ ಜಗತ್ತನ್ನು ಗೆದ್ದವರು ಗಾಂಧೀಜಿ. ಯುಗ ಪುರುಷ, ಫಾದರ್ ಆಫ್ ದಿ ನೇಷನ್ ಎಂದು ಕರೆಸಿಕೊಂಡಿದ್ದು ಗಾಂಧೀಜೀಯವರ ಹೆಚ್ಚುಗಾರಿಕೆಯಾಗಿದೆ ಎಂದು ತಿಳಿಸಿದ ಅವರು ಶಾಸ್ತ್ರೀಜಿ ಅವರು ಕೇವಲ 19 ತಿಂಗಳು ಪ್ರಧಾನ ಮಂತ್ರಿಯಾಗಿದ್ದರೂ ಇಡೀ ಪ್ರಪಂಚವೇ ಮೆಚ್ಚುವಂತಹ ಆಳ್ವಿಕೆ ನಡೆಸಿದರು ಎಂದು ತಿಳಿಸಿದರು.

ಗಾಂಧೀಜಿ ಅವರ ಆದರ್ಶಗಳು ಹಾಗೂ ತತ್ವಗಳನ್ನು ಇಂದಿನ ಯುವಜನತೆ ಮೈಗೂಡಿಸಿಕೊಳ್ಳಬೇಕು. ಇದರಿಂದ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದ ಅವರು ತನ್ನ ಚಿಂತನೆ, ಜೀವನ ಸಂದೇಶಗಳಿಂದಲೇ ಜಗತ್ತಿನುದ್ದಕ್ಕೂ ವ್ಯಾಪಿಸಿ ನಿಂತ ಈ ಮಹಾನ್ ಚೇತನವನ್ನು ತಿಳಿಯಬೇಕಾದರೆ ಅವರು ನಡೆಸಿದ ಜೀವನವನ್ನು ತಿಳಿಯಬೇಕು ಎಂದು ಅವರು ತಿಳಿಸಿದರು.
ಜನಮನ ಸೆಳದ ಛಾಯಾಚಿತ್ರ ಪ್ರದರ್ಶನ

ಕಾವೇರಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಮುಂಭಾಗದಲ್ಲಿ ಹಮ್ಮಿಕೊಳ್ಳಲಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾತ್ಮ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳು ವಿಶೇಷವಾಗಿತು. ಬಾಪು ಹುಟ್ಟು, ಶಿಕ್ಷಣ, ಬಾಲ್ಯಾ ಜೀವನ, ಕರ್ನಾಟಕದಲ್ಲಿ ಗಾಂಧೀಜಿ, ಅವರು ಆರಂಭಿಸಿದ ಸತ್ಯಾಗ್ರಹ, ಉಪವಾಸ ಈ ವಿಷಯಗಳ ಛಾಯಾಚಿತ್ರಗಳು ಹೆಚ್ಚಿನ ಸಾರ್ವಜನಿಕರನ್ನು ಆಕರ್ಷಿಸಿತು.

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಹಾಗೂ ಜನಪ್ರತಿಧಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಿರ್ಮಿಸಲಾದ ಗಾಂಧಿ ಆತ್ಮಚರಿತ್ರೆ ಕುರಿತ ಸಾಕ್ಷ್ಯಚಿತ್ರ ಹಾಗೂ ಛಾಯಾಚಿತ್ರವನ್ನು ವಿಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿಕ್ಕೆ ಅಭಿನಂದನೆ ಸಲ್ಲಿಸಿದರು.

ಅಲ್ಲದೇ ಆಯುಷ್ ಇಲಾಖೆಯಿಂದ ಆಯುರ್ವೇದ ಆರೋಗ್ಯ ಶಿಬಿರ ಈ ಬಾರಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ ಹಾಗೂ ಭಜನೆ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಕೆ.ಟಿ.ಶ್ರೀಕಂಠೇಗೌಡ, ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ, ಅಪರ ಜಿಲ್ಲಾಧಿಕಾರಿಗಳಾದ ಬಿ.ಪಿ.ವಿಜಯ್, ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಾವಣ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version