ದಿನದ ಸುದ್ದಿ
ಮಧ್ಯ ಕರ್ನಾಟಕದ ಕೇಂದ್ರಬಿಂದು ದಾವಣಗೆರೆ ಕೈಗಾರಿಕೆ, ಐಟಿಬಿಟಿ ಹಬ್ ಆಗದಿರುವುದು ದುರದೃಷ್ಟಕರ : ಜಿ. ಬಿ. ವಿನಯ್ ಕುಮಾರ್ ವಿಷಾದ
ಸುದ್ದಿದಿನ,ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯು ನಿಜವಾಗಿಯೂ ಇಂಡಸ್ಟ್ರಿಯಲ್, ಐಟಿಬಿಟಿ ಹಬ್ ಇಷ್ಟರೊಳಗೆ ಆಗಬೇಕಿತ್ತು. ಮ್ಯಾಂಚೆಸ್ಟರ್ ಆಫ್ ಕರ್ನಾಟಕ ಖ್ಯಾತಿ ಹೊಂದಿದ್ದ ಇಲ್ಲಿ ಯಾವುದೇ ದೊಡ್ಡ ಕೈಗಾರಿಕೆಗಳಿಲ್ಲ, ಐಟಿಬಿಟಿ ಇಲ್ಲದಿರುವುದು ದುರದೃಷ್ಟಕರ. ವಿಶ್ವದರ್ಜೆಯ ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಬರಲು ಬಿಡುತ್ತಿಲ್ಲ. ಹಾಗಾಗಿ, ಬೆಳೆಯಲು ಅವಕಾಶ ಇಲ್ಲದಂತಾಗಿದೆ ಎಂದು ಇನ್ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ. ಬಿ. ವಿನಯ್ ಕುಮಾರ್ ಅವರು ವಿಷಾದ ವ್ಯಕ್ತಪಡಿಸಿದರು.
ನಗರದ ಯುಬಿಡಿಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ “ಎಲೆಕ್ಟ್ರಾನಿಕ್ ಅಂಡ್ ಇನ್ಸ್ಟ್ರುಮೆಂಟೇಶನ್” ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ವಿಶೇಷ ಉಪನ್ಯಾಸಕರಾಗಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆ ಕಾಟನ್ ಮಿಲ್ ಗಳು, ಹತ್ತಿ ಮಿಲ್ ಗಳು, ರೈಸ್ ಮಿಲ್ ಗಳು ಹೆಚ್ಚಾಗಿದ್ದವು. ಆದ್ರೆ, ಇಂದು ಕಡಿಮೆಯಾಗಿದೆ. ಈಗ ಕೆಲ ಸಕ್ಕರೆ ಕಾರ್ಖಾನೆಗಳು, ಹೈಸ್ಕೂಲ್ ಗಳು, ಸರ್ಕಾರಿ ಶಾಲೆಗಳು, ಖಾಸಗಿ ಶಾಲೆ ಮತ್ತು ಕಾಲೇಜುಗಳು, ಆಸ್ಪತ್ರೆಗಳು ಹೆಚ್ಚಾಗಿವೆ. ಎಲೆಕ್ಟ್ರಾನಿಕ್ ವಿಭಾಗದ ಯಾವ ಕೈಗಾರಿಕೆಗಳೂ ಇಲ್ಲ. ಐಟಿಬಿಟಿ ಬೆಳೆದೇ ಇಲ್ಲ. ಇದು ಆಗದಿರುವುದಕ್ಕೆ ಕಾರಣವೇನು ಎಂಬುದನ್ನು ಪ್ರತಿಯೊಬ್ಬರೂ ಯೋಚಿಸಬೇಕಾದ ತುರ್ತು ಅಗತ್ಯತೆ ಇದೆ ಎಂದು ಪ್ರತಿಪಾದಿಸಿದರು.
ವಿಶ್ವದಲ್ಲಿನ ಉತ್ಕೃಷ್ಟ ಗುಣಮಟ್ಟದ ವಿಶ್ವವಿದ್ಯಾನಿಲಯಗಳಲ್ಲಿ ಓದಲು ಪ್ರಯತ್ನ ಪಡಿ. ಒಂದು ವೇಳೆ ಆಗದಿದ್ದರೆ ಇಲ್ಲಿಯೇ ಸಿಗುವ ಆಯ್ದ ಶಿಕ್ಷಣ ಸಂಸ್ಥೆಗಳಲ್ಲಿ ಸೇರಿಕೊಂಡು ಕಷ್ಟಪಟ್ಟು ಓದಿ. ತಂತ್ರಜ್ಞಾನ, ಆಗುತ್ತಿರುವ ಬದಲಾವಣೆ, ಬರುತ್ತಿರುವ ಹೊಸ ಹೊಸ ಟೆಕ್ನಾಲಜಿ ಬಗ್ಗೆ ಜ್ಞಾನ ಪಡೆದುಕೊಳ್ಳಿ. ಆಗದು ಎಂದು ಕುಳಿತರೆ ಏನೂ ಆಗುವುದಿಲ್ಲ. ನಮ್ಮ ಕೈಯಲ್ಲಿ ಸಾಧ್ಯವೆಂದುಕೊಂಡು ಮುನ್ನಡೆದರೆ ಖಂಡಿತವಾಗಿಯೂ ಆಗಿಯೇ ಆಗುತ್ತದೆ. ಮನಸ್ಸಿದ್ದರೆ ಮಾರ್ಗ ಎಂಬ ಮಾತಿನಂತೆ ಮುನ್ನುಗ್ಗಿ ಎಂದು ಕರೆ ನೀಡಿದರು.
ಅತ್ಯುನ್ನತ ಸಂಸ್ಥೆಗಳಲ್ಲಿ ಪ್ರತಿಭೆ ಅನಾವರಣಗೊಳಿಸಲು, ಹೊಸದಾಗಿ ಆವಿಷ್ಕರಿಸಲು, ಜ್ಞಾನ ಹೆಚ್ಚಿಸಿಕೊಳ್ಳಲು ಹೆಚ್ಚಿನ ಅವಕಾಶ ಸಿಗುತ್ತವೆ. ಹಾಗಾಗಿ, ಇಲ್ಲಿ ವಿದ್ಯಾರ್ಥಿಗಳು ಸೇರಬೇಕೆಂಬ ಹೆಬ್ಬಯಕೆ ಹೊಂದಿರುತ್ತಾರೆ. ಪೋಷಕರೂ ಸಹ ಮಕ್ಕಳನ್ನು ಸೇರಿಸಲು ಆಸಕ್ತಿ ತೋರುತ್ತಾರೆ. ಹೊಸ ಹೊಸ ಸಂಶೋಧನೆ ಜೊತೆಗೆ ಪಠ್ಯೇತರ ಚಟುವಟಿಕೆಗಳು, ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡರೆ ಅವಕಾಶಗಳು ನಿಮ್ಮನ್ನೇ ಹುಡುಕಿಕೊಂಡು ಬರುತ್ತವೆ ಎಂದು ವಿನಯ್ ಕುಮಾರ್ ಅವರು ಕಿವಿಮಾತು ಹೇಳಿದರು.
ನಾನು ಪಿಡಿಒ ಅಧಿಕಾರಿಯಾಗಿ ಇದುವರೆಗೆ ಮುಂದುವರಿದಿದ್ದರೆ ಹೆಚ್ಚಿನದ್ದು ಎಂದರೆ ಎಕ್ಸಿಕ್ಯೂಟಿವ್ ಆಫೀಸರ್ ಆಗಿರುತ್ತಿದ್ದೆ. ನಾನು ಐಎಎಸ್ ಇನ್ಸೈಟ್ಸ್ ಸಂಸ್ಥೆ ಶುರು ಮಾಡಿದ ಬಳಿಕ ಕರ್ನಾಟಕದ ಅರ್ಧದಷ್ಟು ಜಿಲ್ಲೆಗಳಲ್ಲಿ ನನ್ನ ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿದ್ದಾರೆ. ಹದಿನಾರು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಡಿಸಿಪಿ, ಎಎಸ್ಪಿ, ತಹಶೀಲ್ದಾರ್, ಎಸಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದು ಇಷ್ಟಪಟ್ಟು, ಶ್ರದ್ಧೆ, ಪ್ರಾಮಾಣಿಕತೆ, ನಿರಂತರ ಪರಿಶ್ರಮದಿಂದ ಸಾಧ್ಯವಾಯಿತು. ಯುವಪೀಳಿಗೆ ದೊಡ್ಡ ದೊಡ್ಡ ಕನಸು ಕಾಣಬೇಕು. ಆಗ ಕನಸು ನನಸಾಗುತ್ತದೆ. ಯಾವುದೇ ಜಿಲ್ಲೆಗಳಲ್ಲಿದ್ದರೂ ನಾನು ಯಾರಿಗೂ ಸಚಿವರಿಗೆ ಹಣ ಕೊಟ್ಟು ಹುದ್ದೆ ಕೊಡಿಸಬೇಕಿಲ್ಲ. ಇನ್ಸೈಟ್ಸ್ ಸಂಸ್ಥೆಯಲ್ಲಿ ಓದಿದವರು ಅವರ ಪರಿಶ್ರಮದಿಂದಲೇ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಎಂಜಿನಿಯರಿಂಗ್ ಓದಿದ ಮೇಲೆ ಕೆಲಸ ಸಿಗುತ್ತೋ ಇಲ್ಲವೋ, ಅಂಕ ಎಷ್ಟು ಬರುತ್ತದೆಯೋ ಏನೋ, ಕ್ಯಾಂಪಸ್ ನಲ್ಲಿ ಉದ್ಯೋಗ ಸಿಗುತ್ತದೆಯೋ ಇಲ್ಲವೋ ಎಂಬ ಗೊಂದಲದಲ್ಲಿಯೇ ಇರಬೇಕಾಗುತ್ತದೆ. ಯಾವ ಕ್ಷೇತ್ರದಲ್ಲಿ ಹೆಚ್ಚು ಆಸಕ್ತಿ ಇರುತ್ತದೆಯೋ ಆ ಕ್ಷೇತ್ರದಲ್ಲಿ ಹೆಚ್ಚು ಅವಕಾಶಗಳನ್ನು ಗಿಟ್ಟಿಸಿಕೊಳ್ಳಬಹುದು. ಕೌಶಲ್ಯ, ಸತತ ಪರಿಶ್ರಮ, ತಿಳಿದುಕೊಳ್ಳುವ ಆಸಕ್ತಿ, ಹುಡುಕುವ ತುಡಿತ, ಉತ್ತಮ ವ್ಯಕ್ತಿತ್ವ ಸೇರಿದಂತೆ ಅತ್ಯುತ್ತಮ ಗುಣಗಳನ್ನು ಬೆಳೆಸಿಕೊಂಡರೆ ಜೀವನದಲ್ಲಿ ಉನ್ನತ ಹುದ್ದೆಗೇರಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಯುಬಿಡಿಟಿ ಕಾಲೇಜಿನ ಪ್ರಾಚಾರ್ಯರಾದ ಡಾ. ಡಿ.ಪಿ. ನಾಗರಾಜಪ್ಪ, ಉಪನ್ಯಾಸಕರು, ಸಿಬ್ಬಂದಿ ವರ್ಗದವರು, ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ವೇಳೆ ಜಿ. ಬಿ. ವಿನಯ್ ಕುಮಾರ್ ಅವರು ಕಾಲೇಜಿನ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ನನ್ನ ಬೆಸ್ಟ್ ಫ್ರೆಂಡ್ಸ್ ಬುಕ್ಸ್: ಜಿಬಿವಿ
ನನಗೆ ಪುಸ್ತಕ ಓದುವ ಹವ್ಯಾಸ ಮೊದಲಿನಿಂದಲೂ ಇತ್ತು. ನಾನು ಬೆಳೆದಿದ್ದು ಬಡತನದಲ್ಲಿ. ನಮ್ಮದು ಸಾಮಾನ್ಯ ಕುಟುಂಬ. ಪುಸ್ತಕ ಖರೀದಿಸಲು ತೊಂದರೆ ಇಲ್ಲ. ಪುಸ್ತಕಗಳು ನನ್ನ ಒಳ್ಳೆಯ ಗೆಳೆಯ. ಬೆಳಿಗ್ಗೆ ಮತ್ತು ರಾತ್ರಿಯ ವೇಳೆಯಲ್ಲಿ ಪುಸ್ತಕ ಹೆಚ್ಚಾಗಿ ಓದಿದ್ದರಿಂದ ನನಗೆ ಆತ್ಮವಿಶ್ವಾಸ, ಜ್ಞಾನ, ಪರಿಪಕ್ವತೆಗೆ ಅನುಕೂಲವಾಯಿತು. ಇಷ್ಟೊಂದು ಸಾಧನೆ ಮಾಡಲು ಪ್ರೇರಣೆ ನೀಡಿದ್ದೇ ಬುಕ್ಸ್ ಗಳು ಎಂದು ಜಿ. ಬಿ. ವಿನಯ್ ಕುಮಾರ್ ಅವರು ತಿಳಿಸಿದರು.
ನಾನು ಕಳೆದ ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೆ. ಇದು ನನ್ನ ಜೀವನದ ಅತ್ಯಂತ ಕಠಿಣ ನಿರ್ಧಾರ ಆಗಿತ್ತು. ಇಂಥ ತೀರ್ಮಾನಕ್ಕೆ ಬರುವುದು ಅಷ್ಟು ಸುಲಭವಲ್ಲ. ಇದರಿಂದ ಸಾಕಷ್ಟು ನಾನು ಕಲಿತಿದ್ದೇನೆ. ನಮ್ಮ ವ್ಯಕ್ತಿತ್ವವನ್ನು ಹೆಚ್ಚಿಸಿಕೊಳ್ಳಲು ಹೆಚ್ಚಾಗಿ ಪುಸ್ತಕ ಓದಲೇಬೇಕು. ಕೇವಲ ಓದಿನಲ್ಲೇ ಮುಳುಗದೇ ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚಾಗಿ ತೊಡಗಿಸಿಕೊಂಡರೆ ಅಕಾಡೆಮಿಕ್ ವಿಚಾರದಲ್ಲಿ ಯಶಸ್ಸು ಗಳಿಸಬಹುದು. ನಮ್ಮಲ್ಲಿ ಯಾವುದೇ ಕಾರಣಕ್ಕೂ ಅನಿಶ್ಚಿತತೆ ಇರಬಾರದು ಎಂದು ಕಿವಿಮಾತು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


