ಲೈಫ್ ಸ್ಟೈಲ್
ಜನೌಷಧ ! ಜನರಿಕ್ ಔಷಧ ?! ಏನು ಎತ್ತ..?
ಈಗಷ್ಟೇ ಜನೌಷಧಿ ಸಾಪ್ತಾಹ ಮುಗಿದಿದೆ. ದೇಶದ ಮೂಲೆಗಳಲ್ಲೂ ಸಹ ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ಬೆಲೆಗೆ ದೊರಕುವ ಜನರಿಕ್ ಔಷಧಿಗಳನ್ನು ಮಾರಲು ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಜನರಿಕ್ ಔಷಧಗಳನ್ನು ಮಾರುವ ಜನೌಷಧಿ ಕೇಂದ್ರಗಳನ್ನು ಹೆಚ್ಚು ಹೆಚ್ಚಾಗಿ ಸ್ಥಾಪಿಸಲು ಸರ್ಕಾರವು ಪ್ರೋತ್ಸಾಹಿಸುತ್ತಿದೆ. ಹಾಗಿದ್ದರೆ ಈ “ಜನರಿಕ್” ಔಷಧಿಗಳೆಂದರೇನು? ಜನೌಷಧಿಗಳೆಂದರೇನು? ಅವುಗಳ ಬೆಲೆ ಏಕೆ ಕಡಿಮೆ? ಅವುಗಳು ಕಾರ್ಯಕ್ಷಮತೆ ಹೇಗಿರುತ್ತದೆ? ಅವುಗಳಿಗೆ ಲೈಸೆನ್ಸ್ ನೀಡುವವರು ಯಾರು? ಇವುಗಳ ನಿಯಂತ್ರಣ ಹೇಗೆ? ಇತ್ಯಾದಿ ಹಲವು ಪ್ರಶ್ನೆಗಳಿಗೆ ಉತ್ತರ ಬೇಕಲ್ಲವೇ? ಪ್ರಯತ್ನಿಸೋಣ.
- ಡಾ.ಎನ್.ಬಿ.ಶ್ರೀಧರ, ಶಿವಮೊಗ್ಗ
“ಜನರಿಕ್ ಔಷಧವಂತೆ!!. ಕೆಲಸ ಮಾಡ್ತದೋ ಏನೋ? ಅಲ್ರಿ.. ಅಷ್ಟು ಕಡಿಮೆ ಬೆಲೆಗೆ ಹ್ಯಾಗ್ ಮಾರ್ತಾರೆ? ಅದ್ರಲ್ಲಿ ಔಷಧಿನೇ ಕಡಿಮೆ ಇರಬಹುದು ಅಲ್ವೆ?. ಇದು ಒಂದಿಷ್ಟು ಜನರ ಅಭಿಪ್ರಾಯ.
“ಜನರಿಕ್ ಔಷಧಿ ಕೆಲಸ ಮಾಡಲ್ವಂತೆ. ಅದಕ್ಕೆ ಬ್ರಾಂಡೆಡ್ ಔಷಧಿ ತರ್ಸಿ ಕೊಂಡಿದ್ದೇನೆ. ದುಡ್ಡು ಜಾಸ್ತಿ ಆದರೂ ಪರ್ವಾಗಿಲ್ಲ. ಒಟ್ನಲ್ಲಿ ಚೆನ್ನಾಗಿ ಕೆಲಸ ಮಾಡಬೇಕು. ಇದು ಕೆಲವರ ಅಭಿಪ್ರಾಯ.
ಇತ್ತೀಚೆಗಂತೂ ದುಬಾರಿ ಔಷಧಗಳು ಉತ್ತಮವಾಗಿ ಕೆಲಸ ಮಾಡುತ್ತವೆಂಬ “ಪ್ಲಾಸೆಬೋ” ಪರಿಣಾಮ ಜನರ ತಲೆ ಹೊಕ್ಕುಬಿಟ್ಟಿದೆ. ಅದಕ್ಕೆ “ಡಾಕ್ಟ್ರೇ.. ಔಷಧಿ ದುಬಾರಿಯಾದರೂ ಪರವಾಗಿಲ್ಲ. ರೋಗ ಬೇಗ ಗುಣವಾಗಬೇಕು. ದುಬಾರಿ ಔಷಧಿ ಬರೆದುಕೊಡಿ” ಎನ್ನುವವರ ಸಂಖ್ಯೆಗೇನೂ ಕಡಿಮೆ ಇಲ್ಲ.
ಜನೌಷಧಿ ಕೇಂದ್ರಗಳನ್ನು ಹೆಚ್ಚು ಹೆಚ್ಚಾಗಿ ಸ್ಥಾಪಿಸಲು ಸರ್ಕಾರಗಳೇ ಪ್ರೋತ್ಸಾಹಿಸುತ್ತಿದ್ದಾವೆ. ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ಬೆಲೆಗೆ ದೊರಕುವ ಜನರಿಕ್ ಔಷಧಿಗಳನ್ನು ಮಾರುತ್ತಾರೆ. ಹಾಗಿದ್ದರೆ ಈ ಜನರಿಕ್ ಔಷಧಿಗಳೆಂದರೇನು? ಜನೌಷಧಿಗಳೆಂದರೇನು? ಅವುಗಳ ಬೆಲೆ ಏಕೆ ಕಡಿಮೆ? ಅವುಗಳು ಕಾರ್ಯಕ್ಷಮತೆ ಹೇಗಿರುತ್ತದೆ? ಅವುಗಳಿಗೆ ಲೈಸೆನ್ಸ್ ನೀಡುವವರು ಯಾರು? ಇತ್ಯಾದಿ ಹಲವು ಪ್ರಶ್ನೆಗಳಿಗೆ ಉತ್ತರ ಬೇಕಲ್ಲವೇ? ಪ್ರಯತ್ನಿಸೋಣ…
ಸರಳವಾಗಿ ಉದಾಹರಣೆ ನೀಡಬೇಕೆಂದರೆ “ಕ್ರೋಸಿನ್” ಇದು ತಲೆನೋವಿಗೆ ಉಪಯೋಗಿಸುವ ಔಷಧದ ಬ್ರಾಂಡೆಡ್ ಹೆಸರು. ಇದು ಜಿ.ಎಸ್.ಕೆ ಕಂಪನಿಯ ಬ್ರಾಂಡೆಡ್ ಉತ್ಪನ್ನವಾದರೆ “ಪ್ಯಾರಸೆಟಮಾಲ್” ಇದು ಕ್ರೋಸಿನ್ನಲ್ಲಿರುವ “ಜನರಿಕ್” ಔಷಧಿಯ ಹೆಸರು. ಜನರಿಕ್ ಔಷಧಿಯಾದ “ಪ್ಯಾರಾಸೆಟಮಾಲ್” ಅನ್ನು ಅನೇಕ ಕಂಪನಿಗಳು ಅನೇಕ ಬ್ರಾಂಡೆಡ್ ಹೆಸರಿನಲ್ಲಿಯೂ ತಯಾರಿಸುತ್ತವೆ. ಜನರಿಕ್ ಪ್ಯಾರಸೆಟಮಾಲ್ 15 ಗುಳಿಗೆಗೆ ರೂ: 5 ಇದ್ದರೆ ಕ್ರೋಸಿನ್ 15 ಗುಳಿಗೆಗಳಿಗೆ ರೂ: 30.24 ಇರುತ್ತದೆ. ಅಂದರೆ ಬೆಲೆಯು ಬ್ರಾಂಡೆಡ್ ಔಷಧಿಗೆ ಕನೀಷ್ಟ 6 ಪಟ್ಟು ಜಾಸ್ತಿ !!. ಎರಡರ ಪರಿಣಾಮವೂ ಒಂದೇ. ಇದು ಅನೇಕ ಜನರಿಗೆ ಗೊತ್ತಿರುವುದಿಲ್ಲ.
ಇದನ್ನೂ ಓದಿ | ‘ಮೈತ್ರಿ ಸೇತು’ ಸೇತುವೆಯ ವೈಶಿಷ್ಟ್ಯತೆ..!
ಸಾಮಾನ್ಯವಾಗಿ ಒಂದು ಔಷಧ ಕಂಪನಿ ‘ಹೊಸ ಔಷಧ’ ಕಂಡುಹಿಡಿಯಿತೆಂದರೆ ಇಂತಿಷ್ಟು ವರ್ಷಗಳ ಕಾಲ ಅದರ ಸ್ವಾಮ್ಯತೆ ಅಥವಾ ಹಕ್ಕು ಹೊಂದಿರುತ್ತದೆ. ಅಂದರೆ ಈ ಪೇಟಂಟ್ ಅವಧಿಯಲ್ಲಿ ಬೇರೆ ಯಾವ ಔಷಧ ಕಂಪನಿಗಳೂ ಸಹ ಈ ಹೊಸ ಔಷಧವನ್ನು ಬಳಸಿ ಹೊಸ ಕಂಪನಿ ಹೆಸರಿನೊಂದಿಗೆ ಮಾರುವಂತಿಲ್ಲ. ಪೇಟಂಟ್ ಅವಧಿ ಮುಗಿದ ನಂತರ ಯಾವ ಕಂಪನಿ ಬೇಕಾದರೂ ಈ ಔಷಧವನ್ನು ಸಿದ್ದಪಡಿಸಿ ಹೊಸ ಬ್ರಾಂಡ್ ಹೆಸರಿನಿಂದ ಮಾರುಕಟ್ಟೆಯಲ್ಲಿ ಮುಕ್ತವಾಗಿ ಮಾರಬಹುದು.
ಇದಕ್ಕೆ ಮೂಲ ಕಂಪನಿ/ ಪೇಟಂಟ್ ಪಡೆದಿದ್ದ ಕಂಪನಿಯ ಪರವಾನಗಿ ಬೇಕಾಗಿರುವುದಿಲ್ಲ. ರಾಸಾಯನಿಕ ಹೆಸರು, ಜನರಿಕ್ ಹೆಸರು (ಮೂಲ ಹೆಸರು) ಮತ್ತು ಬ್ರಾಂಡೆಡ್ ಹೆಸರು / ಟ್ರೇಡ್ ನೇಮ್/ ಪ್ರೊಪ್ರೈಟರಿ ಹೆಸರುಗಳಿಂದ ಒಂದು ಔಷಧವನ್ನು ಗುರುತಿಸಬಹುದು. ಇವುಗಳಲ್ಲಿ ಔಷಧದ ರಾಸಾಯನಿಕ ಹೆಸರು ಮತ್ತು ಜನರಿಕ್ ಹೆಸರುಗಳು ಎಂದಿಗೂ ಬದಲಾಗುವುದಿಲ್ಲ. ರಾಸಾಯನಿಕ ಹೆಸರುಗಳನ್ನು ಓದುವುದು ಮತ್ತು ನೆನಪಿಟ್ಟುಕೊಳ್ಳುವುದು ಸಾಮಾನ್ಯವಾಗಿ ಕಷ್ಟ ಸಾದ್ಯ, ಆದರೆ ಜನರಿಕ್ ಹೆಸರುಗಳನ್ನು ಸುಲಭವಾಗಿ ಓದಬಹುದು ಮತ್ತು ನೆನಪಿಟ್ಟುಕೊಳ್ಳಬಹುದು.
ಬ್ರಾಂಡೆಡ್ ಔಷಧಗಳಿಗೆ ಪರ್ಯಾಯವಾಗಿ ಬಳಸುವ ಉದ್ದೇಶದಿಂದ ಸ್ವಾಮ್ಯತೆ ಅಥವಾ ಪೇಟಂಟ್ ಅವಧಿಯ ನಂತರ ಮಾರುಕಟ್ಟೆಯಲ್ಲಿ ಔಷಧದ ಮೂಲ ಹೆಸರಿನಲ್ಲಿ ಲಭ್ಯವಿರುವ ಔಷಧಗಳಿಗೆ “ಜನರಿಕ್ ಔಷಧ” ಗಳು ಎನ್ನುತ್ತಾರೆ.ಸಾರ್ವಜನಿಕರಿಗೆ ಇರುವಂತೆ ಬಹುತೇಕ ಜನರಿಗೆ ಜನರಿಕ್ ಔಷಧಿಗಳ ಬಗ್ಗೆ ಈ ಕೆಳಗಿನ ಸಂಶಯಗಳಿವೆ.
ಜನರಿಕ್ ಔಷಧಗಳು ಏಕೆ ಅಗ್ಗ?
- ಬ್ರಾಂಡೆಡ್ ಔಷಧಿಗಳಿಗೆ ಲೈಸನ್ಸ್ ಕೊಡುವಾಗ ಅನುಸರಿವಷ್ಟು ಕಠಿಣ ಕ್ರಮವನ್ನು ಜನರಿಕ್ ಔಷಧಿಗಳಿಗೆ ಅನುಮತಿ ನೀಡುವಾಗ ಅನುಸರಿಸುವುದಿಲ್ಲ.
- ಜನರಿಕ್ ಔಷಧಿಗಳು ಬ್ರಾಂಡೆಡ್ ಔಷಧಗಳಷ್ಟು ಕಾರ್ಯಕ್ಷಮತೆ ಹೊಂದಿಲ್ಲ.
- ಜನರಿಕ್ ಔಷಧಗಳು ಬ್ರಾಂಡೆಡ್ ಔಷಧಗಳಂತೆ ಉತ್ತಮವಾಗಿ ಉತ್ಪಾದನಾ ಗುಣಮಟ್ಟ ಹೊಂದಿಲ್ಲ.
- ಜನರಿಕ್ ಔಷಧಗಳ ಗುಣಮತ್ತ, ಪರಿಣಾಮ, ಅಡ್ಡ ಪರಿಣಾಮ ಇವುಗಳನ್ನು ತಪಾಸಣೆ ಮಾಡಲು ಉತ್ತಮ ಸಂಸ್ಥೆಗಳಿಲ್ಲ.
- ಇವುಗಳ ಬೆಲೆ ಕಡಿಮೆ. ಕಾರಣ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿರಬಹುದು.
- ಜನರಿಕ್ ಔಷಧಿಗಳಿಗೆ ಅಡ್ಡ ಪರಿಣಾಮಗಳಾದರೆ ತಯಾರಿಕರು ಹೊಣೆಗಾರಿಕೆ ವಹಿಸಿಕೊಳ್ಳುವುದಿಲ್ಲ.
ಈ ಪ್ರಶ್ನೆಗಳಿಗೆಲ್ಲ ಕೆಳಗೆ ಉತ್ತರವಿದೆ.
ಜನರಿಕ್ ಔಷಧಗಳೇಕೆ ಬ್ರಾಂಡೆಡ್ ಔಷಧಗಳಿಗಿಂತ ಅಗ್ಗ?
ಮಾರುಕಟ್ಟೆಗೆ ಹೊಸ ಔಷಧಿ ಲಗ್ಗೆ ಇಡುವ ಮುನ್ನ ಅಮೇರಿಕಾ ಸರ್ಕಾರದ ಅಧೀನದ ಸಂಸ್ಥೆಯಾದ ಆಹಾರ ಮತ್ತು ಔಷಧ ಪರವಾನಗಿ ಪ್ರಾಧಿಕಾರದ (ಎಫ್ಡಿಎ) ಕಠಿಣ ಕಣ್ಗಾವಲಿನಲ್ಲಿ ಪುನರಾವಲೋಕನಗೊಂಡಿರುತ್ತದೆ. ಕಂಪನಿಗಳು ಹೊಸ ಔಷಧಗಳನ್ನು ಕಂಡುಹಿಡಿಯುವಲ್ಲಿ ಸಾಕಷ್ಟು ಸಮಯ (ಸುಮಾರು 6-12 ವರ್ಷಗಳು) ಮತ್ತು ಸುಮಾರು 200 ಬಿಲಿಯನ್ ಹಣವನ್ನು ವ್ಯಯಿಸಿರುತ್ತವೆ.
ಎಫ್ಡಿಎಯು ಈ ಕಂಪಗಳಿಗೆ ತಾವು ತೊಡಗಿಸಿದ ಹಣವನ್ನು ಹಿಂಪಡೆಯಲು ನೆರವಾಗುವಂತೆ ಪೇಟಂಟ್ ಅವಧಿಯನ್ನು ನೀಡಿ ಮಾರುಕಟ್ಟೆಯಲ್ಲಿ ಏಕಸ್ವಾಮ್ಯವನ್ನು ಸಾಧಿಸಲು ನೆರವಾಗುತ್ತದೆ, ಹಾಗಾಗಿ ಬ್ರಾಂಡೆಡ್ ಔಷಧಗಳು ತುಸು ತುಟ್ಟಿ. ಆದರೆ ಜನರಿಕ್ ಔಷಧಗಳು ಹಾಗಲ್ಲ, ಪೇಟಂಟ್ ಅವಧಿಯ ನಂತರವೇ ಜನರಿಕ್ ಔಷಧಿಗಳನ್ನು ಸಿದ್ದಪಡಿಸಲು ಎಫ್ಡಿಎಯು ಪರವಾನಗಿ ನೀಡುವುದರಿಂದ , ಮತ್ತೊಮ್ಮೆ ಪ್ರಾಣಿಗಳ ಮತ್ತು ಮಾನವನ ಮೇಲೆ ಪ್ರಯೋಗ ಮಾಡಿ ಇದರ ಸುರಕ್ಷತೆ ಮತ್ತು ಪರಿಣಾಮದ ಬಗ್ಗೆ ಪರೀಕ್ಷಿಸುವ ಅವಶ್ಯಕತೆ ಇರುವುದಿಲ್ಲ.
ಹಾಗಾಗಿ ಜನರಿಕ್ ಔಷಧಿಗಳು ಅಗ್ಗ. ಬಹು ಮುಖ್ಯವಾಗಿ ಯಾವುದೇ ಕಂಪನಿ ತಯಾರಿಸಿದರೂ ಔಷಧದ ಮೂಲ ಹೆಸರಿನಲ್ಲೆ (ಜನರಿಕ್ ಹೆಸರಿನಲ್ಲಿ) ಮಾರಾಟ ಮಾಡಬೇಕಾಗಿರುವುದರಿಂದ ಮಾರುಕಟ್ಟೆಯಲ್ಲಿ ಕಂಪನಿ ದರ ಪೈಪೋಟಿಗೆ ಇಳಿದುಬಿಡುತ್ತದೆ. ಈ ಕಾರಣಗಳಿಂದ ಜನರಿಕ್ ಔಷಧಗಳು ಬ್ರಾಂಡೆಡ್ ಔಷಧಗಳಿಗಿಂತ ಕೆಲವೊಮ್ಮೆ ಶೇ: 70-85 ರಷ್ಟು ಕಡಿಮೆ ದರದಲ್ಲಿ ಲಭ್ಯವಾಗುತ್ತವೆ.
ಜನರಿಕ್ ಔಷಧಗಳು ಹೇಗೆ ಅನುಮೋದನೆ ಪಡೆಯುತ್ತವೆ?
ಯಾವುದೇ ಕಂಪನಿ ಹೊಸದಾಗಿ ಜನರಿಕ್ ಔಷಧಗಳನ್ನು ಸಿದ್ದಪಡಿಸಿ ಮಾರುಕಟ್ಟೆಗೆ ತರುವ ಮುನ್ನ ಹೊಸ ಅರ್ಜಿಯನ್ನು ಎಫ್ಡಿಎಗೆ ಸಲ್ಲಿಸಿರುತ್ತದೆ. ಆಗ ಎಪ್ಡಿಎ ವಿವಿಧ ಮೂಲಬೂತ ಪರೀಕ್ಷೆಗಳನ್ನು ನಡೆಸಿದ ನಂತರವೇ ಅನುಮೋದನೆ ನೀಡುತ್ತದೆ.
ಔಷಧದ ಅಡ್ಡಪರಿಣಾಮ ಮತ್ತು ಸುರಕ್ಷತೆಯ ತಪಾಸಣೆ ನಡೆಯುತ್ತದೆಯೇ?
ಹೌದು. ಜನರಿಕ್ ಅಥವಾ ಬೇರೆ ಯಾವುದೇ ಔಷಧ ಇರಲಿ, ಅವು ಎಲ್ಲಿಯವರೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುತ್ತವೆಯೋ ಅಲ್ಲಿಯವರೆಗೆ ಎಪ್ಡಿಎಯ ಕಣ್ಗಾವಲಿನಲ್ಲಿರುತ್ತವೆ. ಔಷಧಗಳು ಸಿದ್ದವಾಗಿ ಬಳಕೆದಾರರಿಗೆ ಲಭ್ಯವಾಗುವ ತನಕದ ಎಲ್ಲಾ ಹಂತದಲ್ಲೂ ಎಪ್ಡಿಎಯು ಕಾಲಕಾಲಕ್ಕೆ ನಿರಂತರವಾಗಿ ಮೇಲ್ವಿಚಾರಣೆ ಮಾಡುವ ಮೂಲಕ ಔಷಧಗಳ ಸುರಕ್ಷತೆ ಮತ್ತು ಗುಣಮಟ್ಟವನ್ನು ಧೃಢಪಡಿಸುತ್ತದೆ. ಚಿಕಿತ್ಸಾ ವೈಫಲ್ಯ ಅಥವಾ ವೈಪರಿತ್ಯಗಳು ಕಂಡುಬಂದಲ್ಲಿ , ಸಾರ್ವಜನಿಕರಿಗೆ ಹಾಗೂ ಆರೋಗ್ಯ ಕ್ಷೇತ್ರ ವೃತ್ತಿಪರರಿಗೆ ಸೂಚನೆ/ ಸಲಹೆ/ ಶಿಫಾರಸ್ಸುಗಳನ್ನು ನೀಡುವ ಹೊಣೆಗಾರಿಕೆಯನ್ನು ಎಪ್ಡಿಎ ಹೊಂದಿದೆ.
ಭಾರತದಲ್ಲಿ ಜನರಿಕ್ ಔಷಧಗಳ ಪರಿಸ್ಥಿತಿ ಏನು?
ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ ಜಗತ್ತಿನ 30% ಜನರಿಗೆ ಅವಶ್ಯಕ ಔಷಧಗಳು ಕೈಗೆಟುಕುತ್ತಿಲ್ಲ. ಇದರ ಪ್ರಮಾಣ ಆಫ್ರಿಕಾ ಮತ್ತು ಏಷಿಯಾದಲ್ಲಿ 50%. ಭಾರತದಲ್ಲಿ ಒಟ್ಟು ಉತ್ಪನ್ನದ ಶೇ 1.2 ರಷ್ಟನ್ನು ಭಾರತೀಯರು ತಮ್ಮ ಆರೋಗ್ಯದ ಮೇಲೆ ಖರ್ಚು ಮಾಡುತ್ತಾರೆ. ವಾರ್ಷಿಕ ವೈದ್ಯಕೀಯ ವೆಚ್ಚವನ್ನು ತಗ್ಗಿಸುವ ಉದ್ದೇಶದಿಂದ ಜನರಿಕ್ ಔಷಧಗಳನ್ನು ಭಾರತದಲ್ಲಿ ಪರಿಚಯಿಸಲಾಗಿದೆ.
ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ
ಪ್ರಯೋಗಾಲಯಗಳಿಗಾಗಿ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್ಎಬಿಎಲ್) ಸರ್ಕಾರಿ ಮತ್ತು ಖಾಸಗಿ ತಯಾರಕರಿಂದ ಆಯ್ದ ಬ್ಯಾಚಿನ ಔಷಧಗಳನ್ನು ತಂದು ವಿವಿಧ ಪರೀಕ್ಷೆಗೆ ಒಳಪಡಿಸುವ ಮೂಲಕ ಗುಣಮಟ್ಟ, ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಧೃಢಪಡಿಸಿಕೊಳ್ಳುತ್ತದೆ.
ಕೇಂದ್ರ ಸರ್ಕಾರದಿಂದ ಸಹಾಯಧನ ಪಡೆದ ಸರ್ಕಾರೇತರ ಅಥವಾ ಲಾಭ ನಿರಪೇಕ್ಷಿತ ಸಂಘಟನೆಗಳೇ ಸಾಮಾನ್ಯವಾಗಿ ಭಾರತದಲ್ಲಿ ಜನರಿಕ್ ಔಷಧ ತಯಾರಕರು. ಜನರಿಕ್ ಔಷಧಗಳಲ್ಲಿ ದರ ವ್ಯತ್ಯಾಸಗಳಿದ್ದರೂ ಅವುಗಳ ಪರಿಣಾಮಕಾರಿತ್ವವನ್ನು ಹೋಲಿಕೆ ಮಾಡಬಹುದು.
ಜನರಿಕ್ ಮತ್ತು ಬ್ರಾಂಡೆಡ್ ಔಷಧಗಳ ಪರಿಣಾಮಕಾರಿತ್ವದಲ್ಲಿ ವ್ಯತ್ಯಾಸವಿಲ್ಲ ಎಂಬುದು ಸಾಬೀತಾಗಿದ್ದರೂ ಸಹ ಅನೇಕ ಆರೋಗ್ಯ ಸಂಭಂಧಿ ವೃತ್ತಿಪರರು, ಹೆಸರಾಂತ ಕಂಪನಿಗಳ ಔಷಧಗಳನ್ನೇ ಬರೆದುಕೊಡುತ್ತಾರೆ. ಆದರೆ ಅವರಿಗೆ ಕಡಿಮೆ ಹೆಸರಿರುವ ಕಂಪನಿಗಳು ಜನರಿಕ ಔಷಧಗಳನ್ನು ತಯಾರಿಸುತ್ತವೆ ಎಂಬುದೇ ತಿಳಿದಿರುವುದಿಲ್ಲ!
ಔಷಧ ತಯಾರಿಕೆಯಲ್ಲಿ ಬಳಸುವ ಉಪವಸ್ತುಗಳಿಂದ ಅಲ್ಪ ಸ್ವಲ್ಪ ಗುಣಮಟ್ಟದಲ್ಲಿ ವ್ಯತ್ಯಾಸವಾಗಬಹುದೇ ಹೊರತು ಮೂಲ ಔಷಧಿಯಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎನ್ನುತ್ತಾರೆ ಸಂಶೋಧಕರು. ಕೆಲವು ಔಷಧಿಗಳ ಗುಣಮಟ್ಟ ಸ್ವಲ್ಪ ಕಡಿಮೆ ಎಂಬ ಅಪವಾದ ಬಿಟ್ಟರೆ ಬಹುತೇಕ ಜನರಿಕ್ ಔಷಧಿಗಳು ಬ್ರಾಂಡೆಡ್ ಔಷಧಿಗಳಿಗಿಂತ ಗುಣ ಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿರುವುದಿಲ್ಲ ಎಂಬುದು ಅಂಬೋಣ.
ಜಾನುವಾರುಗಳಲ್ಲಿಯೂ ಜನರಿಕ್ ಔಷಧಿ ಇದೆಯೇ?
ಇದೆ. ಜನರಿಕ್ ಔಷಧಿಗಳು ಜಾನುವಾರು ಚಿಕಿತ್ಸೆಯಲ್ಲೂ ಇವೆ. ಆದರೆ ಭಾರತದಲ್ಲಿ ಇನ್ನೂ ಇದರ ಜನೌಷಧಿ ಕೇಂದ್ರಗಳು ಇಲ್ಲ. ಈ ಔಷಧಿಗಳಿಗೆ ಅಷ್ಟು ಪರಿಣಾಮ ಹೊಂದಿಲ್ಲ ಎಂಬ ಭಾವನೆಯಿಂದ ಇವುಗಳನ್ನು ಬರೆದುಕೊಡುವುದಿಲ್ಲ ಎನ್ನುತ್ತದೆ ಸಮೀಕ್ಷೆ. ಆದರೆ ಜಾನುವಾರುಗಳ ಜನರಿಕ್ ಔಷಧಿಗಳಿಗೂ ಸಹ ಅಮೇರಿಕದಲ್ಲಿ ಎಫ್ ಡಿ ಎ ಅತ್ಯಂತ ಕಠಿಣ ತಪಾಸಣೆಗಳ ನಂತರವೇ ರಹದಾರಿ ನೀಡುತ್ತದೆ.ಭಾರತದಲ್ಲಿಯೂ ಸಹ ಪಶು ಜನೌಷಧಿ ಕೇಂದ್ರಗಳು ಬಂದರೆ ಜಾನುವಾರುಗಳ ಔಷಧಿ ಕಡಿಮೆ ದರದಲ್ಲಿ ದೊರಕಬಹುದು.
ಜನೌಷಧಿ ಕೇಂದ್ರಗಳೆಂದರೇನು?
ಭಾರತ ಸರ್ಕಾರವು ಜನರಿಕ್ ಔಷಧಿಗಳು ಜನಸಾಮಾನ್ಯರಿಗೆ ಕಡಿಮೆ ಬೆಲೆಗೆ ದೊರೆಯುವಂತೆ ಮಾಡಿದ ವ್ಯವಸ್ಥೆಯೇ ಜನೌಷಧಿ ಕೇಂದ್ರಗಳು. ಇಲ್ಲಿ ದೊರೆಯುವ ಜನರಿಕ್ ಔಷಧಿಗಳು ಬ್ರಾಂಡೆಡ್ ಔಷಧಿಗಳಷ್ಟೇ ಪರಿಣಾಮಕಾರಿಯಾಗಿರಬೇಕು. ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಭಾರತ ಸರ್ಕಾರದ ಔಷಧ ಇಲಾಖೆಯ ಸುಪರ್ಧಿಯಲ್ಲಿ ನಿಯಂತ್ರಣದಲ್ಲಿವೆ. ಬ್ಯೂರೋ ಆಫ್ ಫಾರ್ಮಾ ಪಬ್ಲಿಕ್ ಸೆಕ್ಟರ್ ಅಂಡರ್ಟೇಕಿಂಗ್ಸ್ ಆಫ್ ಇಂಡಿಯಾ ಇದು ಜನೌಷಧಿಗಳ, ತಯಾರಿಕೆ, ಸಾಗಣೆ ಮತ್ತು ಗುಣಮಟ್ಟದ ಹೊಣೆ ಹೊತ್ತಿದೆ.
1. ಪ್ರತಿ ಔಷಧಿ ಬ್ಯಾಚಿನ ಔಷಧಿಗಳ ಗುಣಮಟ್ಟವು ಎನ್.ಎ.ಬಿ.ಎಲ್ ಪ್ರಯೋಗಶಾಲೆಗಳಿಂದ ದೃಢಪಟ್ಟಿರಬೇಕು.
2. ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳು ದೃಢೀಕರಿಸಲ್ಪಟ್ಟ ಸಂಸ್ಥೆಗಳಿಂದ ಮಾತ್ರ ಔಷಧ ಖರೀದಿಸಬೇಕು.
ಈ ವರೆಗೆ ಸುಮಾರು 4700 ಕ್ಕಿಂತ ಜಾಸ್ತಿ ಜನೌಷಧ ಕೇಂದ್ರಗಳು ದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಈ ವರ್ಷದ ಆಯವ್ಯಯದಲ್ಲಿ ಇನ್ನೂ ಜಾಸ್ತಿ ಕೇಂದ್ರಗಳನ್ನು ತೆರೆಯಲು ಭಾರತ ಸರ್ಕಾರ ಉದ್ದೇಶಿಸಿದೆ.
ಯಾರು ಜನೌಷಧಿ ಕೇಂದ್ರಗಳನ್ನು ತೆರೆಯಬಹುದು?
ಸರ್ಕಾರದಿಂದ ಮಾನ್ಯತೆ ಪಡೆದ ಜನಕಲ್ಯಾಣ ಕಾರ್ಯಕ್ರಮದಲ್ಲಿ ಕನೀಷ್ಟ 3 ವರ್ಷ ಅನುಭವವಿರುವ, ಸರ್ಕಾರೇತರ ಸಂಸ್ಥೆಗಳು, ಸಹಕಾರಿ ಸಂಘಗಳು ಸರ್ಕಾರಿ ಸಂಸ್ಥೆಗಳ ಆವರಣದಲ್ಲಿ ಉಚಿತವಾಗಿ ನೀಡಲ್ಪಡುವ ಸ್ಥಳದಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯಬಹುದು.
ಅಲ್ಲದೇ ಫಾರ್ಮಾ ಪದವೀದರರು ಸೇರಿದಂತೆ ಯಾವುದೇ ನಿರುದ್ಯೋಗಿ ಪದವೀಧರರು ಅವಶ್ಯಕ ಸ್ಥಳ, ಕನೀಷ್ಟ ಬಂಡವಾಳ, ಶೀತಲಿಕರಣ ಯಂತ್ರ, ಗೋದಾಮು, ಔಷಧಿ ಅಂಗಡಿ ತೆರೆಯಲು ಮೂಲಭೂತ ಸೌಲಭ್ಯ ಮತ್ತಿತರ ರಹದಾರಿ ಹೊಂದಿದ್ದರೆ ಜನೌಷಧಿ ಕೇಂದ್ರಗಳನ್ನು ತೆರೆಯಬಹುದು. ಪ್ರತಿ ಔಷಧಿಯ ಮೇಲೆ ಶೇ: 20 ರಷ್ಟು ಲಾಭ ಇದ್ದೇ ಇದೆ. ಸರ್ಕಾರದಿಂದ ರೂ:1.5 ಲಕ್ಷದ ವರೆಗೆ ಸಹಾಯವೂ ಸಹ ದೊರೆಯುವುದು.
ಹೊಸ ಔಷಧಿಗಳು ಮಾರುಕಟ್ಟೆಗೆ ಬಂದಾಗ ಅವುಗಳ ಕಂಪನಿಯವರು ಹಾಕಿದ ಬಂಡವಾಳ ಮತ್ತು ಲಾಭವನ್ನು ಹಿಂದಿರುಗಿ ಪಡೆಯಲು ಜಾಸ್ತಿ ದುಬಾರಿ ಬೆಲೆಗೆ ಮಾರುವುದು ಸಹಜ. ಅವುಗಳನ್ನು ಖರೀದಿಸುವುದು ಅನಿವಾರ್ಯ ಸಹ. ಆದರೆ ಪೇಟೆಂಟ್ ಅವಧಿ ಮುಗಿದು ಔಷಧಿಯು “ಜನರಿಕ್” ರೂಪದಲ್ಲಿ ದೊರೆಯತೊಡಗಿದಾಗ ಅವುಗಳನ್ನೇ ಖರೀದಿಸುವುದು ಒಳ್ಳೆಯದಲ್ಲವೇ?
ಜನರಿಕ್ ಔಷಧಗಳು ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡಲೆಂದೇ ಬಂದವುಗಳು. ವ್ಯವಸ್ಥೆಯಲ್ಲಿ ಸಣ್ಣ ಪುಟ್ಟ ದೋಷಗಳಿರಬಹುದು.ಕೆಲವೊಮ್ಮೆ ಕಳಪೆ ಔಷಧಿಯೂ ಸಹ ಪತ್ತೆಯಾಗಿರಬಹುದು. ಇದು ವ್ಯಾಪಾರಿ ವೃತ್ತಿಯ ಎಲ್ಲ ರಂಗಗಳಲ್ಲಿದೆ. ಹೀಗಂದ ಮಾತ್ರಕ್ಕೆ ಅವುಗಳನ್ನೆಲ್ಲಾ ಸಂಶಯ ದೃಷ್ಟಿಯಿಂದ ನೋಡುವುದು ಒಳಿತಲ್ಲ. ರಾಷ್ಟ್ರೀಯ ವೈದ್ಯಕೀಯ ಆಯೋಗ (ಹಿಂದಿನ ಭಾರತೀಯ ಭಾರತೀಯ ವೈದ್ಯಕೀಯ ಮಂಡಳಿ) ಸಹ ಜನರಿಕ್ ಔಷಧಿಗಳನ್ನೇ ಬರದು ಕೊಡಬೇಕು ಎಂಬ ನಿಯಮ ಮಾಡಿದೆ.ಇದೇ ನಿಯಮವನ್ನು ಭಾರತೀಯ ಪಶುವೈದ್ಯಕೀಯ ಪರಿಷತ್ತು ಸಹ ಕಾಲಕ್ರಮೇಣ ಅನುಕರಿಸಬಹುದು.
ಬಹುತೇಕ ಜನ ಸಾಮಾನ್ಯರು ಸರ್ವೇ ಸಾಮಾನ್ಯವಾಗಿ ಬಳಸಿಲು ಪ್ರಾರಂಭಿಸಿದ ಮೇಲೆ ಮಾತ್ರ ಜನರಿಕ್ ಔಷಧಿಗಳಿಗೆ ಒಂದು ಉತ್ತಮ ಕಾಲ ಬಂದು ಸರ್ಕಾರದ ಆಶಯ ಈಡೇರಬಹುದು.
-(ಡಾ:ಎನ್.ಬಿ.ಶ್ರೀಧರ
ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು,
ಪಶುವೈದ್ಯಕೀಯ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಭಾಗ
ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

ದಿನದ ಸುದ್ದಿ
ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್ಗಳನ್ನು ವಶಪಡಿಸಿಕೊಳ್ಳಲಾಗುವುದು.
ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ3 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ4 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ಅಂಕಣ2 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ4 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ2 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

