ಲೈಫ್ ಸ್ಟೈಲ್
ಜನೌಷಧ ! ಜನರಿಕ್ ಔಷಧ ?! ಏನು ಎತ್ತ..?
ಈಗಷ್ಟೇ ಜನೌಷಧಿ ಸಾಪ್ತಾಹ ಮುಗಿದಿದೆ. ದೇಶದ ಮೂಲೆಗಳಲ್ಲೂ ಸಹ ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ಬೆಲೆಗೆ ದೊರಕುವ ಜನರಿಕ್ ಔಷಧಿಗಳನ್ನು ಮಾರಲು ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಜನರಿಕ್ ಔಷಧಗಳನ್ನು ಮಾರುವ ಜನೌಷಧಿ ಕೇಂದ್ರಗಳನ್ನು ಹೆಚ್ಚು ಹೆಚ್ಚಾಗಿ ಸ್ಥಾಪಿಸಲು ಸರ್ಕಾರವು ಪ್ರೋತ್ಸಾಹಿಸುತ್ತಿದೆ. ಹಾಗಿದ್ದರೆ ಈ “ಜನರಿಕ್” ಔಷಧಿಗಳೆಂದರೇನು? ಜನೌಷಧಿಗಳೆಂದರೇನು? ಅವುಗಳ ಬೆಲೆ ಏಕೆ ಕಡಿಮೆ? ಅವುಗಳು ಕಾರ್ಯಕ್ಷಮತೆ ಹೇಗಿರುತ್ತದೆ? ಅವುಗಳಿಗೆ ಲೈಸೆನ್ಸ್ ನೀಡುವವರು ಯಾರು? ಇವುಗಳ ನಿಯಂತ್ರಣ ಹೇಗೆ? ಇತ್ಯಾದಿ ಹಲವು ಪ್ರಶ್ನೆಗಳಿಗೆ ಉತ್ತರ ಬೇಕಲ್ಲವೇ? ಪ್ರಯತ್ನಿಸೋಣ.
- ಡಾ.ಎನ್.ಬಿ.ಶ್ರೀಧರ, ಶಿವಮೊಗ್ಗ
“ಜನರಿಕ್ ಔಷಧವಂತೆ!!. ಕೆಲಸ ಮಾಡ್ತದೋ ಏನೋ? ಅಲ್ರಿ.. ಅಷ್ಟು ಕಡಿಮೆ ಬೆಲೆಗೆ ಹ್ಯಾಗ್ ಮಾರ್ತಾರೆ? ಅದ್ರಲ್ಲಿ ಔಷಧಿನೇ ಕಡಿಮೆ ಇರಬಹುದು ಅಲ್ವೆ?. ಇದು ಒಂದಿಷ್ಟು ಜನರ ಅಭಿಪ್ರಾಯ.
“ಜನರಿಕ್ ಔಷಧಿ ಕೆಲಸ ಮಾಡಲ್ವಂತೆ. ಅದಕ್ಕೆ ಬ್ರಾಂಡೆಡ್ ಔಷಧಿ ತರ್ಸಿ ಕೊಂಡಿದ್ದೇನೆ. ದುಡ್ಡು ಜಾಸ್ತಿ ಆದರೂ ಪರ್ವಾಗಿಲ್ಲ. ಒಟ್ನಲ್ಲಿ ಚೆನ್ನಾಗಿ ಕೆಲಸ ಮಾಡಬೇಕು. ಇದು ಕೆಲವರ ಅಭಿಪ್ರಾಯ.
ಇತ್ತೀಚೆಗಂತೂ ದುಬಾರಿ ಔಷಧಗಳು ಉತ್ತಮವಾಗಿ ಕೆಲಸ ಮಾಡುತ್ತವೆಂಬ “ಪ್ಲಾಸೆಬೋ” ಪರಿಣಾಮ ಜನರ ತಲೆ ಹೊಕ್ಕುಬಿಟ್ಟಿದೆ. ಅದಕ್ಕೆ “ಡಾಕ್ಟ್ರೇ.. ಔಷಧಿ ದುಬಾರಿಯಾದರೂ ಪರವಾಗಿಲ್ಲ. ರೋಗ ಬೇಗ ಗುಣವಾಗಬೇಕು. ದುಬಾರಿ ಔಷಧಿ ಬರೆದುಕೊಡಿ” ಎನ್ನುವವರ ಸಂಖ್ಯೆಗೇನೂ ಕಡಿಮೆ ಇಲ್ಲ.
ಜನೌಷಧಿ ಕೇಂದ್ರಗಳನ್ನು ಹೆಚ್ಚು ಹೆಚ್ಚಾಗಿ ಸ್ಥಾಪಿಸಲು ಸರ್ಕಾರಗಳೇ ಪ್ರೋತ್ಸಾಹಿಸುತ್ತಿದ್ದಾವೆ. ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ಬೆಲೆಗೆ ದೊರಕುವ ಜನರಿಕ್ ಔಷಧಿಗಳನ್ನು ಮಾರುತ್ತಾರೆ. ಹಾಗಿದ್ದರೆ ಈ ಜನರಿಕ್ ಔಷಧಿಗಳೆಂದರೇನು? ಜನೌಷಧಿಗಳೆಂದರೇನು? ಅವುಗಳ ಬೆಲೆ ಏಕೆ ಕಡಿಮೆ? ಅವುಗಳು ಕಾರ್ಯಕ್ಷಮತೆ ಹೇಗಿರುತ್ತದೆ? ಅವುಗಳಿಗೆ ಲೈಸೆನ್ಸ್ ನೀಡುವವರು ಯಾರು? ಇತ್ಯಾದಿ ಹಲವು ಪ್ರಶ್ನೆಗಳಿಗೆ ಉತ್ತರ ಬೇಕಲ್ಲವೇ? ಪ್ರಯತ್ನಿಸೋಣ…
ಸರಳವಾಗಿ ಉದಾಹರಣೆ ನೀಡಬೇಕೆಂದರೆ “ಕ್ರೋಸಿನ್” ಇದು ತಲೆನೋವಿಗೆ ಉಪಯೋಗಿಸುವ ಔಷಧದ ಬ್ರಾಂಡೆಡ್ ಹೆಸರು. ಇದು ಜಿ.ಎಸ್.ಕೆ ಕಂಪನಿಯ ಬ್ರಾಂಡೆಡ್ ಉತ್ಪನ್ನವಾದರೆ “ಪ್ಯಾರಸೆಟಮಾಲ್” ಇದು ಕ್ರೋಸಿನ್ನಲ್ಲಿರುವ “ಜನರಿಕ್” ಔಷಧಿಯ ಹೆಸರು. ಜನರಿಕ್ ಔಷಧಿಯಾದ “ಪ್ಯಾರಾಸೆಟಮಾಲ್” ಅನ್ನು ಅನೇಕ ಕಂಪನಿಗಳು ಅನೇಕ ಬ್ರಾಂಡೆಡ್ ಹೆಸರಿನಲ್ಲಿಯೂ ತಯಾರಿಸುತ್ತವೆ. ಜನರಿಕ್ ಪ್ಯಾರಸೆಟಮಾಲ್ 15 ಗುಳಿಗೆಗೆ ರೂ: 5 ಇದ್ದರೆ ಕ್ರೋಸಿನ್ 15 ಗುಳಿಗೆಗಳಿಗೆ ರೂ: 30.24 ಇರುತ್ತದೆ. ಅಂದರೆ ಬೆಲೆಯು ಬ್ರಾಂಡೆಡ್ ಔಷಧಿಗೆ ಕನೀಷ್ಟ 6 ಪಟ್ಟು ಜಾಸ್ತಿ !!. ಎರಡರ ಪರಿಣಾಮವೂ ಒಂದೇ. ಇದು ಅನೇಕ ಜನರಿಗೆ ಗೊತ್ತಿರುವುದಿಲ್ಲ.
ಇದನ್ನೂ ಓದಿ | ‘ಮೈತ್ರಿ ಸೇತು’ ಸೇತುವೆಯ ವೈಶಿಷ್ಟ್ಯತೆ..!
ಸಾಮಾನ್ಯವಾಗಿ ಒಂದು ಔಷಧ ಕಂಪನಿ ‘ಹೊಸ ಔಷಧ’ ಕಂಡುಹಿಡಿಯಿತೆಂದರೆ ಇಂತಿಷ್ಟು ವರ್ಷಗಳ ಕಾಲ ಅದರ ಸ್ವಾಮ್ಯತೆ ಅಥವಾ ಹಕ್ಕು ಹೊಂದಿರುತ್ತದೆ. ಅಂದರೆ ಈ ಪೇಟಂಟ್ ಅವಧಿಯಲ್ಲಿ ಬೇರೆ ಯಾವ ಔಷಧ ಕಂಪನಿಗಳೂ ಸಹ ಈ ಹೊಸ ಔಷಧವನ್ನು ಬಳಸಿ ಹೊಸ ಕಂಪನಿ ಹೆಸರಿನೊಂದಿಗೆ ಮಾರುವಂತಿಲ್ಲ. ಪೇಟಂಟ್ ಅವಧಿ ಮುಗಿದ ನಂತರ ಯಾವ ಕಂಪನಿ ಬೇಕಾದರೂ ಈ ಔಷಧವನ್ನು ಸಿದ್ದಪಡಿಸಿ ಹೊಸ ಬ್ರಾಂಡ್ ಹೆಸರಿನಿಂದ ಮಾರುಕಟ್ಟೆಯಲ್ಲಿ ಮುಕ್ತವಾಗಿ ಮಾರಬಹುದು.
ಇದಕ್ಕೆ ಮೂಲ ಕಂಪನಿ/ ಪೇಟಂಟ್ ಪಡೆದಿದ್ದ ಕಂಪನಿಯ ಪರವಾನಗಿ ಬೇಕಾಗಿರುವುದಿಲ್ಲ. ರಾಸಾಯನಿಕ ಹೆಸರು, ಜನರಿಕ್ ಹೆಸರು (ಮೂಲ ಹೆಸರು) ಮತ್ತು ಬ್ರಾಂಡೆಡ್ ಹೆಸರು / ಟ್ರೇಡ್ ನೇಮ್/ ಪ್ರೊಪ್ರೈಟರಿ ಹೆಸರುಗಳಿಂದ ಒಂದು ಔಷಧವನ್ನು ಗುರುತಿಸಬಹುದು. ಇವುಗಳಲ್ಲಿ ಔಷಧದ ರಾಸಾಯನಿಕ ಹೆಸರು ಮತ್ತು ಜನರಿಕ್ ಹೆಸರುಗಳು ಎಂದಿಗೂ ಬದಲಾಗುವುದಿಲ್ಲ. ರಾಸಾಯನಿಕ ಹೆಸರುಗಳನ್ನು ಓದುವುದು ಮತ್ತು ನೆನಪಿಟ್ಟುಕೊಳ್ಳುವುದು ಸಾಮಾನ್ಯವಾಗಿ ಕಷ್ಟ ಸಾದ್ಯ, ಆದರೆ ಜನರಿಕ್ ಹೆಸರುಗಳನ್ನು ಸುಲಭವಾಗಿ ಓದಬಹುದು ಮತ್ತು ನೆನಪಿಟ್ಟುಕೊಳ್ಳಬಹುದು.
ಬ್ರಾಂಡೆಡ್ ಔಷಧಗಳಿಗೆ ಪರ್ಯಾಯವಾಗಿ ಬಳಸುವ ಉದ್ದೇಶದಿಂದ ಸ್ವಾಮ್ಯತೆ ಅಥವಾ ಪೇಟಂಟ್ ಅವಧಿಯ ನಂತರ ಮಾರುಕಟ್ಟೆಯಲ್ಲಿ ಔಷಧದ ಮೂಲ ಹೆಸರಿನಲ್ಲಿ ಲಭ್ಯವಿರುವ ಔಷಧಗಳಿಗೆ “ಜನರಿಕ್ ಔಷಧ” ಗಳು ಎನ್ನುತ್ತಾರೆ.ಸಾರ್ವಜನಿಕರಿಗೆ ಇರುವಂತೆ ಬಹುತೇಕ ಜನರಿಗೆ ಜನರಿಕ್ ಔಷಧಿಗಳ ಬಗ್ಗೆ ಈ ಕೆಳಗಿನ ಸಂಶಯಗಳಿವೆ.
ಜನರಿಕ್ ಔಷಧಗಳು ಏಕೆ ಅಗ್ಗ?
- ಬ್ರಾಂಡೆಡ್ ಔಷಧಿಗಳಿಗೆ ಲೈಸನ್ಸ್ ಕೊಡುವಾಗ ಅನುಸರಿವಷ್ಟು ಕಠಿಣ ಕ್ರಮವನ್ನು ಜನರಿಕ್ ಔಷಧಿಗಳಿಗೆ ಅನುಮತಿ ನೀಡುವಾಗ ಅನುಸರಿಸುವುದಿಲ್ಲ.
- ಜನರಿಕ್ ಔಷಧಿಗಳು ಬ್ರಾಂಡೆಡ್ ಔಷಧಗಳಷ್ಟು ಕಾರ್ಯಕ್ಷಮತೆ ಹೊಂದಿಲ್ಲ.
- ಜನರಿಕ್ ಔಷಧಗಳು ಬ್ರಾಂಡೆಡ್ ಔಷಧಗಳಂತೆ ಉತ್ತಮವಾಗಿ ಉತ್ಪಾದನಾ ಗುಣಮಟ್ಟ ಹೊಂದಿಲ್ಲ.
- ಜನರಿಕ್ ಔಷಧಗಳ ಗುಣಮತ್ತ, ಪರಿಣಾಮ, ಅಡ್ಡ ಪರಿಣಾಮ ಇವುಗಳನ್ನು ತಪಾಸಣೆ ಮಾಡಲು ಉತ್ತಮ ಸಂಸ್ಥೆಗಳಿಲ್ಲ.
- ಇವುಗಳ ಬೆಲೆ ಕಡಿಮೆ. ಕಾರಣ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿರಬಹುದು.
- ಜನರಿಕ್ ಔಷಧಿಗಳಿಗೆ ಅಡ್ಡ ಪರಿಣಾಮಗಳಾದರೆ ತಯಾರಿಕರು ಹೊಣೆಗಾರಿಕೆ ವಹಿಸಿಕೊಳ್ಳುವುದಿಲ್ಲ.
ಈ ಪ್ರಶ್ನೆಗಳಿಗೆಲ್ಲ ಕೆಳಗೆ ಉತ್ತರವಿದೆ.
ಜನರಿಕ್ ಔಷಧಗಳೇಕೆ ಬ್ರಾಂಡೆಡ್ ಔಷಧಗಳಿಗಿಂತ ಅಗ್ಗ?
ಮಾರುಕಟ್ಟೆಗೆ ಹೊಸ ಔಷಧಿ ಲಗ್ಗೆ ಇಡುವ ಮುನ್ನ ಅಮೇರಿಕಾ ಸರ್ಕಾರದ ಅಧೀನದ ಸಂಸ್ಥೆಯಾದ ಆಹಾರ ಮತ್ತು ಔಷಧ ಪರವಾನಗಿ ಪ್ರಾಧಿಕಾರದ (ಎಫ್ಡಿಎ) ಕಠಿಣ ಕಣ್ಗಾವಲಿನಲ್ಲಿ ಪುನರಾವಲೋಕನಗೊಂಡಿರುತ್ತದೆ. ಕಂಪನಿಗಳು ಹೊಸ ಔಷಧಗಳನ್ನು ಕಂಡುಹಿಡಿಯುವಲ್ಲಿ ಸಾಕಷ್ಟು ಸಮಯ (ಸುಮಾರು 6-12 ವರ್ಷಗಳು) ಮತ್ತು ಸುಮಾರು 200 ಬಿಲಿಯನ್ ಹಣವನ್ನು ವ್ಯಯಿಸಿರುತ್ತವೆ.
ಎಫ್ಡಿಎಯು ಈ ಕಂಪಗಳಿಗೆ ತಾವು ತೊಡಗಿಸಿದ ಹಣವನ್ನು ಹಿಂಪಡೆಯಲು ನೆರವಾಗುವಂತೆ ಪೇಟಂಟ್ ಅವಧಿಯನ್ನು ನೀಡಿ ಮಾರುಕಟ್ಟೆಯಲ್ಲಿ ಏಕಸ್ವಾಮ್ಯವನ್ನು ಸಾಧಿಸಲು ನೆರವಾಗುತ್ತದೆ, ಹಾಗಾಗಿ ಬ್ರಾಂಡೆಡ್ ಔಷಧಗಳು ತುಸು ತುಟ್ಟಿ. ಆದರೆ ಜನರಿಕ್ ಔಷಧಗಳು ಹಾಗಲ್ಲ, ಪೇಟಂಟ್ ಅವಧಿಯ ನಂತರವೇ ಜನರಿಕ್ ಔಷಧಿಗಳನ್ನು ಸಿದ್ದಪಡಿಸಲು ಎಫ್ಡಿಎಯು ಪರವಾನಗಿ ನೀಡುವುದರಿಂದ , ಮತ್ತೊಮ್ಮೆ ಪ್ರಾಣಿಗಳ ಮತ್ತು ಮಾನವನ ಮೇಲೆ ಪ್ರಯೋಗ ಮಾಡಿ ಇದರ ಸುರಕ್ಷತೆ ಮತ್ತು ಪರಿಣಾಮದ ಬಗ್ಗೆ ಪರೀಕ್ಷಿಸುವ ಅವಶ್ಯಕತೆ ಇರುವುದಿಲ್ಲ.
ಹಾಗಾಗಿ ಜನರಿಕ್ ಔಷಧಿಗಳು ಅಗ್ಗ. ಬಹು ಮುಖ್ಯವಾಗಿ ಯಾವುದೇ ಕಂಪನಿ ತಯಾರಿಸಿದರೂ ಔಷಧದ ಮೂಲ ಹೆಸರಿನಲ್ಲೆ (ಜನರಿಕ್ ಹೆಸರಿನಲ್ಲಿ) ಮಾರಾಟ ಮಾಡಬೇಕಾಗಿರುವುದರಿಂದ ಮಾರುಕಟ್ಟೆಯಲ್ಲಿ ಕಂಪನಿ ದರ ಪೈಪೋಟಿಗೆ ಇಳಿದುಬಿಡುತ್ತದೆ. ಈ ಕಾರಣಗಳಿಂದ ಜನರಿಕ್ ಔಷಧಗಳು ಬ್ರಾಂಡೆಡ್ ಔಷಧಗಳಿಗಿಂತ ಕೆಲವೊಮ್ಮೆ ಶೇ: 70-85 ರಷ್ಟು ಕಡಿಮೆ ದರದಲ್ಲಿ ಲಭ್ಯವಾಗುತ್ತವೆ.
ಜನರಿಕ್ ಔಷಧಗಳು ಹೇಗೆ ಅನುಮೋದನೆ ಪಡೆಯುತ್ತವೆ?
ಯಾವುದೇ ಕಂಪನಿ ಹೊಸದಾಗಿ ಜನರಿಕ್ ಔಷಧಗಳನ್ನು ಸಿದ್ದಪಡಿಸಿ ಮಾರುಕಟ್ಟೆಗೆ ತರುವ ಮುನ್ನ ಹೊಸ ಅರ್ಜಿಯನ್ನು ಎಫ್ಡಿಎಗೆ ಸಲ್ಲಿಸಿರುತ್ತದೆ. ಆಗ ಎಪ್ಡಿಎ ವಿವಿಧ ಮೂಲಬೂತ ಪರೀಕ್ಷೆಗಳನ್ನು ನಡೆಸಿದ ನಂತರವೇ ಅನುಮೋದನೆ ನೀಡುತ್ತದೆ.
ಔಷಧದ ಅಡ್ಡಪರಿಣಾಮ ಮತ್ತು ಸುರಕ್ಷತೆಯ ತಪಾಸಣೆ ನಡೆಯುತ್ತದೆಯೇ?
ಹೌದು. ಜನರಿಕ್ ಅಥವಾ ಬೇರೆ ಯಾವುದೇ ಔಷಧ ಇರಲಿ, ಅವು ಎಲ್ಲಿಯವರೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುತ್ತವೆಯೋ ಅಲ್ಲಿಯವರೆಗೆ ಎಪ್ಡಿಎಯ ಕಣ್ಗಾವಲಿನಲ್ಲಿರುತ್ತವೆ. ಔಷಧಗಳು ಸಿದ್ದವಾಗಿ ಬಳಕೆದಾರರಿಗೆ ಲಭ್ಯವಾಗುವ ತನಕದ ಎಲ್ಲಾ ಹಂತದಲ್ಲೂ ಎಪ್ಡಿಎಯು ಕಾಲಕಾಲಕ್ಕೆ ನಿರಂತರವಾಗಿ ಮೇಲ್ವಿಚಾರಣೆ ಮಾಡುವ ಮೂಲಕ ಔಷಧಗಳ ಸುರಕ್ಷತೆ ಮತ್ತು ಗುಣಮಟ್ಟವನ್ನು ಧೃಢಪಡಿಸುತ್ತದೆ. ಚಿಕಿತ್ಸಾ ವೈಫಲ್ಯ ಅಥವಾ ವೈಪರಿತ್ಯಗಳು ಕಂಡುಬಂದಲ್ಲಿ , ಸಾರ್ವಜನಿಕರಿಗೆ ಹಾಗೂ ಆರೋಗ್ಯ ಕ್ಷೇತ್ರ ವೃತ್ತಿಪರರಿಗೆ ಸೂಚನೆ/ ಸಲಹೆ/ ಶಿಫಾರಸ್ಸುಗಳನ್ನು ನೀಡುವ ಹೊಣೆಗಾರಿಕೆಯನ್ನು ಎಪ್ಡಿಎ ಹೊಂದಿದೆ.
ಭಾರತದಲ್ಲಿ ಜನರಿಕ್ ಔಷಧಗಳ ಪರಿಸ್ಥಿತಿ ಏನು?
ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ ಜಗತ್ತಿನ 30% ಜನರಿಗೆ ಅವಶ್ಯಕ ಔಷಧಗಳು ಕೈಗೆಟುಕುತ್ತಿಲ್ಲ. ಇದರ ಪ್ರಮಾಣ ಆಫ್ರಿಕಾ ಮತ್ತು ಏಷಿಯಾದಲ್ಲಿ 50%. ಭಾರತದಲ್ಲಿ ಒಟ್ಟು ಉತ್ಪನ್ನದ ಶೇ 1.2 ರಷ್ಟನ್ನು ಭಾರತೀಯರು ತಮ್ಮ ಆರೋಗ್ಯದ ಮೇಲೆ ಖರ್ಚು ಮಾಡುತ್ತಾರೆ. ವಾರ್ಷಿಕ ವೈದ್ಯಕೀಯ ವೆಚ್ಚವನ್ನು ತಗ್ಗಿಸುವ ಉದ್ದೇಶದಿಂದ ಜನರಿಕ್ ಔಷಧಗಳನ್ನು ಭಾರತದಲ್ಲಿ ಪರಿಚಯಿಸಲಾಗಿದೆ.
ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ
ಪ್ರಯೋಗಾಲಯಗಳಿಗಾಗಿ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್ಎಬಿಎಲ್) ಸರ್ಕಾರಿ ಮತ್ತು ಖಾಸಗಿ ತಯಾರಕರಿಂದ ಆಯ್ದ ಬ್ಯಾಚಿನ ಔಷಧಗಳನ್ನು ತಂದು ವಿವಿಧ ಪರೀಕ್ಷೆಗೆ ಒಳಪಡಿಸುವ ಮೂಲಕ ಗುಣಮಟ್ಟ, ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಧೃಢಪಡಿಸಿಕೊಳ್ಳುತ್ತದೆ.
ಕೇಂದ್ರ ಸರ್ಕಾರದಿಂದ ಸಹಾಯಧನ ಪಡೆದ ಸರ್ಕಾರೇತರ ಅಥವಾ ಲಾಭ ನಿರಪೇಕ್ಷಿತ ಸಂಘಟನೆಗಳೇ ಸಾಮಾನ್ಯವಾಗಿ ಭಾರತದಲ್ಲಿ ಜನರಿಕ್ ಔಷಧ ತಯಾರಕರು. ಜನರಿಕ್ ಔಷಧಗಳಲ್ಲಿ ದರ ವ್ಯತ್ಯಾಸಗಳಿದ್ದರೂ ಅವುಗಳ ಪರಿಣಾಮಕಾರಿತ್ವವನ್ನು ಹೋಲಿಕೆ ಮಾಡಬಹುದು.
ಜನರಿಕ್ ಮತ್ತು ಬ್ರಾಂಡೆಡ್ ಔಷಧಗಳ ಪರಿಣಾಮಕಾರಿತ್ವದಲ್ಲಿ ವ್ಯತ್ಯಾಸವಿಲ್ಲ ಎಂಬುದು ಸಾಬೀತಾಗಿದ್ದರೂ ಸಹ ಅನೇಕ ಆರೋಗ್ಯ ಸಂಭಂಧಿ ವೃತ್ತಿಪರರು, ಹೆಸರಾಂತ ಕಂಪನಿಗಳ ಔಷಧಗಳನ್ನೇ ಬರೆದುಕೊಡುತ್ತಾರೆ. ಆದರೆ ಅವರಿಗೆ ಕಡಿಮೆ ಹೆಸರಿರುವ ಕಂಪನಿಗಳು ಜನರಿಕ ಔಷಧಗಳನ್ನು ತಯಾರಿಸುತ್ತವೆ ಎಂಬುದೇ ತಿಳಿದಿರುವುದಿಲ್ಲ!
ಔಷಧ ತಯಾರಿಕೆಯಲ್ಲಿ ಬಳಸುವ ಉಪವಸ್ತುಗಳಿಂದ ಅಲ್ಪ ಸ್ವಲ್ಪ ಗುಣಮಟ್ಟದಲ್ಲಿ ವ್ಯತ್ಯಾಸವಾಗಬಹುದೇ ಹೊರತು ಮೂಲ ಔಷಧಿಯಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎನ್ನುತ್ತಾರೆ ಸಂಶೋಧಕರು. ಕೆಲವು ಔಷಧಿಗಳ ಗುಣಮಟ್ಟ ಸ್ವಲ್ಪ ಕಡಿಮೆ ಎಂಬ ಅಪವಾದ ಬಿಟ್ಟರೆ ಬಹುತೇಕ ಜನರಿಕ್ ಔಷಧಿಗಳು ಬ್ರಾಂಡೆಡ್ ಔಷಧಿಗಳಿಗಿಂತ ಗುಣ ಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿರುವುದಿಲ್ಲ ಎಂಬುದು ಅಂಬೋಣ.
ಜಾನುವಾರುಗಳಲ್ಲಿಯೂ ಜನರಿಕ್ ಔಷಧಿ ಇದೆಯೇ?
ಇದೆ. ಜನರಿಕ್ ಔಷಧಿಗಳು ಜಾನುವಾರು ಚಿಕಿತ್ಸೆಯಲ್ಲೂ ಇವೆ. ಆದರೆ ಭಾರತದಲ್ಲಿ ಇನ್ನೂ ಇದರ ಜನೌಷಧಿ ಕೇಂದ್ರಗಳು ಇಲ್ಲ. ಈ ಔಷಧಿಗಳಿಗೆ ಅಷ್ಟು ಪರಿಣಾಮ ಹೊಂದಿಲ್ಲ ಎಂಬ ಭಾವನೆಯಿಂದ ಇವುಗಳನ್ನು ಬರೆದುಕೊಡುವುದಿಲ್ಲ ಎನ್ನುತ್ತದೆ ಸಮೀಕ್ಷೆ. ಆದರೆ ಜಾನುವಾರುಗಳ ಜನರಿಕ್ ಔಷಧಿಗಳಿಗೂ ಸಹ ಅಮೇರಿಕದಲ್ಲಿ ಎಫ್ ಡಿ ಎ ಅತ್ಯಂತ ಕಠಿಣ ತಪಾಸಣೆಗಳ ನಂತರವೇ ರಹದಾರಿ ನೀಡುತ್ತದೆ.ಭಾರತದಲ್ಲಿಯೂ ಸಹ ಪಶು ಜನೌಷಧಿ ಕೇಂದ್ರಗಳು ಬಂದರೆ ಜಾನುವಾರುಗಳ ಔಷಧಿ ಕಡಿಮೆ ದರದಲ್ಲಿ ದೊರಕಬಹುದು.
ಜನೌಷಧಿ ಕೇಂದ್ರಗಳೆಂದರೇನು?
ಭಾರತ ಸರ್ಕಾರವು ಜನರಿಕ್ ಔಷಧಿಗಳು ಜನಸಾಮಾನ್ಯರಿಗೆ ಕಡಿಮೆ ಬೆಲೆಗೆ ದೊರೆಯುವಂತೆ ಮಾಡಿದ ವ್ಯವಸ್ಥೆಯೇ ಜನೌಷಧಿ ಕೇಂದ್ರಗಳು. ಇಲ್ಲಿ ದೊರೆಯುವ ಜನರಿಕ್ ಔಷಧಿಗಳು ಬ್ರಾಂಡೆಡ್ ಔಷಧಿಗಳಷ್ಟೇ ಪರಿಣಾಮಕಾರಿಯಾಗಿರಬೇಕು. ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಭಾರತ ಸರ್ಕಾರದ ಔಷಧ ಇಲಾಖೆಯ ಸುಪರ್ಧಿಯಲ್ಲಿ ನಿಯಂತ್ರಣದಲ್ಲಿವೆ. ಬ್ಯೂರೋ ಆಫ್ ಫಾರ್ಮಾ ಪಬ್ಲಿಕ್ ಸೆಕ್ಟರ್ ಅಂಡರ್ಟೇಕಿಂಗ್ಸ್ ಆಫ್ ಇಂಡಿಯಾ ಇದು ಜನೌಷಧಿಗಳ, ತಯಾರಿಕೆ, ಸಾಗಣೆ ಮತ್ತು ಗುಣಮಟ್ಟದ ಹೊಣೆ ಹೊತ್ತಿದೆ.
1. ಪ್ರತಿ ಔಷಧಿ ಬ್ಯಾಚಿನ ಔಷಧಿಗಳ ಗುಣಮಟ್ಟವು ಎನ್.ಎ.ಬಿ.ಎಲ್ ಪ್ರಯೋಗಶಾಲೆಗಳಿಂದ ದೃಢಪಟ್ಟಿರಬೇಕು.
2. ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳು ದೃಢೀಕರಿಸಲ್ಪಟ್ಟ ಸಂಸ್ಥೆಗಳಿಂದ ಮಾತ್ರ ಔಷಧ ಖರೀದಿಸಬೇಕು.
ಈ ವರೆಗೆ ಸುಮಾರು 4700 ಕ್ಕಿಂತ ಜಾಸ್ತಿ ಜನೌಷಧ ಕೇಂದ್ರಗಳು ದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಈ ವರ್ಷದ ಆಯವ್ಯಯದಲ್ಲಿ ಇನ್ನೂ ಜಾಸ್ತಿ ಕೇಂದ್ರಗಳನ್ನು ತೆರೆಯಲು ಭಾರತ ಸರ್ಕಾರ ಉದ್ದೇಶಿಸಿದೆ.
ಯಾರು ಜನೌಷಧಿ ಕೇಂದ್ರಗಳನ್ನು ತೆರೆಯಬಹುದು?
ಸರ್ಕಾರದಿಂದ ಮಾನ್ಯತೆ ಪಡೆದ ಜನಕಲ್ಯಾಣ ಕಾರ್ಯಕ್ರಮದಲ್ಲಿ ಕನೀಷ್ಟ 3 ವರ್ಷ ಅನುಭವವಿರುವ, ಸರ್ಕಾರೇತರ ಸಂಸ್ಥೆಗಳು, ಸಹಕಾರಿ ಸಂಘಗಳು ಸರ್ಕಾರಿ ಸಂಸ್ಥೆಗಳ ಆವರಣದಲ್ಲಿ ಉಚಿತವಾಗಿ ನೀಡಲ್ಪಡುವ ಸ್ಥಳದಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯಬಹುದು.
ಅಲ್ಲದೇ ಫಾರ್ಮಾ ಪದವೀದರರು ಸೇರಿದಂತೆ ಯಾವುದೇ ನಿರುದ್ಯೋಗಿ ಪದವೀಧರರು ಅವಶ್ಯಕ ಸ್ಥಳ, ಕನೀಷ್ಟ ಬಂಡವಾಳ, ಶೀತಲಿಕರಣ ಯಂತ್ರ, ಗೋದಾಮು, ಔಷಧಿ ಅಂಗಡಿ ತೆರೆಯಲು ಮೂಲಭೂತ ಸೌಲಭ್ಯ ಮತ್ತಿತರ ರಹದಾರಿ ಹೊಂದಿದ್ದರೆ ಜನೌಷಧಿ ಕೇಂದ್ರಗಳನ್ನು ತೆರೆಯಬಹುದು. ಪ್ರತಿ ಔಷಧಿಯ ಮೇಲೆ ಶೇ: 20 ರಷ್ಟು ಲಾಭ ಇದ್ದೇ ಇದೆ. ಸರ್ಕಾರದಿಂದ ರೂ:1.5 ಲಕ್ಷದ ವರೆಗೆ ಸಹಾಯವೂ ಸಹ ದೊರೆಯುವುದು.
ಹೊಸ ಔಷಧಿಗಳು ಮಾರುಕಟ್ಟೆಗೆ ಬಂದಾಗ ಅವುಗಳ ಕಂಪನಿಯವರು ಹಾಕಿದ ಬಂಡವಾಳ ಮತ್ತು ಲಾಭವನ್ನು ಹಿಂದಿರುಗಿ ಪಡೆಯಲು ಜಾಸ್ತಿ ದುಬಾರಿ ಬೆಲೆಗೆ ಮಾರುವುದು ಸಹಜ. ಅವುಗಳನ್ನು ಖರೀದಿಸುವುದು ಅನಿವಾರ್ಯ ಸಹ. ಆದರೆ ಪೇಟೆಂಟ್ ಅವಧಿ ಮುಗಿದು ಔಷಧಿಯು “ಜನರಿಕ್” ರೂಪದಲ್ಲಿ ದೊರೆಯತೊಡಗಿದಾಗ ಅವುಗಳನ್ನೇ ಖರೀದಿಸುವುದು ಒಳ್ಳೆಯದಲ್ಲವೇ?
ಜನರಿಕ್ ಔಷಧಗಳು ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡಲೆಂದೇ ಬಂದವುಗಳು. ವ್ಯವಸ್ಥೆಯಲ್ಲಿ ಸಣ್ಣ ಪುಟ್ಟ ದೋಷಗಳಿರಬಹುದು.ಕೆಲವೊಮ್ಮೆ ಕಳಪೆ ಔಷಧಿಯೂ ಸಹ ಪತ್ತೆಯಾಗಿರಬಹುದು. ಇದು ವ್ಯಾಪಾರಿ ವೃತ್ತಿಯ ಎಲ್ಲ ರಂಗಗಳಲ್ಲಿದೆ. ಹೀಗಂದ ಮಾತ್ರಕ್ಕೆ ಅವುಗಳನ್ನೆಲ್ಲಾ ಸಂಶಯ ದೃಷ್ಟಿಯಿಂದ ನೋಡುವುದು ಒಳಿತಲ್ಲ. ರಾಷ್ಟ್ರೀಯ ವೈದ್ಯಕೀಯ ಆಯೋಗ (ಹಿಂದಿನ ಭಾರತೀಯ ಭಾರತೀಯ ವೈದ್ಯಕೀಯ ಮಂಡಳಿ) ಸಹ ಜನರಿಕ್ ಔಷಧಿಗಳನ್ನೇ ಬರದು ಕೊಡಬೇಕು ಎಂಬ ನಿಯಮ ಮಾಡಿದೆ.ಇದೇ ನಿಯಮವನ್ನು ಭಾರತೀಯ ಪಶುವೈದ್ಯಕೀಯ ಪರಿಷತ್ತು ಸಹ ಕಾಲಕ್ರಮೇಣ ಅನುಕರಿಸಬಹುದು.
ಬಹುತೇಕ ಜನ ಸಾಮಾನ್ಯರು ಸರ್ವೇ ಸಾಮಾನ್ಯವಾಗಿ ಬಳಸಿಲು ಪ್ರಾರಂಭಿಸಿದ ಮೇಲೆ ಮಾತ್ರ ಜನರಿಕ್ ಔಷಧಿಗಳಿಗೆ ಒಂದು ಉತ್ತಮ ಕಾಲ ಬಂದು ಸರ್ಕಾರದ ಆಶಯ ಈಡೇರಬಹುದು.
-(ಡಾ:ಎನ್.ಬಿ.ಶ್ರೀಧರ
ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು,
ಪಶುವೈದ್ಯಕೀಯ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಭಾಗ
ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ3 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ2 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ


