Connect with us

ಲೈಫ್ ಸ್ಟೈಲ್

ಪ್ರವಾಸ ಕಥನ | ಗೋಕಾಕ್ ನಲ್ಲೊಂದು ಸುತ್ತು..!

Published

on

Õಪ್ರವಾಸ ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ಮಗುವಿನಿಂದ ಹಿಡಿದು ಮುದುಕರವರೆಗೆ ಎಲ್ಲರೂ ಪ್ರವಾಸವನ್ನು ಆನಂದಿಸುವವರೇ ಹೆಚ್ಚು. ಅದರಲ್ಲೂ ನಾನು ಒಬ್ಳು ಪ್ರವಾಸ ಪ್ರೇಮಿ. ಪ್ರವಾಸ ಕಥನಗಳೆಂದರೆ ಅಚ್ಚುಮೆಚ್ಚು. ಹಾಗಂತ ನಾ ಏನು ಹೆಚ್ಚು ಪ್ರವಾಸ ಮಾಡಿಲ್ಲ. ನನಗೆ ಪ್ರಕೃತಿಯ ಸೊಬಗು ಹಾಗೂ ಹಳ್ಳಿಯ ಸೊಬಗನ್ನು ಸಂಪೂರ್ಣವಾಗಿ ಅನುಭವಿಸ್ಬೇಕು ಎಂಬ ಮಹಾದಾಸೆ. ನಾ ಹೋಗುವ ಪ್ರವಾಸಕ್ಕೆ ಇಂಥದ್ದೇ ಜಾಗವಾಗಬೇಕು ಎಂಬ ಅಭಿಲಾಶೆ ಏನಿಲ್ಲ. ಬಂಧುಗಳ ಮನೆಗಳನ್ನ ಹೊರತು ಪಡಿಸಿ ಕಾಡಿನ ಬುಡಕಟ್ಟು ಜನಾಂಗ, ಶೋಷಿತರ, ದಲಿತರ ಮನೆಗಳಿಗೆ ಹೋಗಿ ಅವರ ಜೀವನವನ್ನು ಗಮನಿಸುವುದರಲ್ಲಿ ನನಗದು ಹೆಚ್ಚು ಖುಷಿ.

ಆದರೆ ನಗರ ವಾಸಿಯಾದ ನನಗೆ ಹಳ್ಳಿಯ ಸೊಬಗನಾಗಲಿ ಪ್ರಕೃತಿಯ ಸೊಬಗನ್ನಾಗಲಿ ಅನುಭವಿಸುವುದಕ್ಕೆ ಅವಕಾಶಗಳು ದೊರೆಯಲೇ ಇಲ್ಲ. ಪುಸ್ತಕ ಪ್ರೇಮಿಯಾದ ನನಗೆ ಹಳ್ಳಿಯ ವಾತಾವರಣ, ಬಡವರ ಬವಣೆ, ಶೋಷಿತರ ಜೀವನದ ಕುರಿತ ಕಲ್ಪನೆಗಳು ನನಗಿವೆ. ಹೀಗಿರುವಾಗ ನಾನು ವಿಮಾನದಲ್ಲಿ ಹಾರುವುದು ಬಿಡಿ ಅದನ್ನ ಹತ್ತಿರದಿಂದಲೂ ಒಮ್ಮೆಯೂ ನೋಡಿಲ್ಲ; ವೋಲ್ವೋ ಬಸ್ಸಲ್ಲೂ ಕೂತಿಲ್ಲ. ಸ್ಲೀಪಿಂಗ್ ಕೋಚ್ ಬಸ್ಸಿನ ಮೆತ್ತನೆ ಹಾಸಿಗೆಯಲ್ಲೂ ನಿದ್ರಾ ಸುಖ ಅನುಭವಿಸಿಲ್ಲ. ಆದರೆ ಸಾಕಷ್ಟು ಬಾರಿ ರೈಲು ಪ್ರಯಾಣ ಮಾಡಿದ್ದೇನೆ ಅಷ್ಟೇ.

ಅಂತದ್ದೇ ಒಂದು ರೈಲು ಪ್ರಯಾಣ ಮತ್ತೊಮ್ಮೆ ದೊರಕಿತು. ಇಲ್ಲಿಯವರೆಗೂ ಅಪ್ಪ ಅಮ್ಮನನ್ನು ಬಿಟ್ಟು ದೂರದೂರಿಗೆ ಎಲ್ಲಿಯೂ ಹೋಗದ ನಾನು ಮೊದಲ ಬಾರಿಗೆ ಸ್ನೇಹಿತರೊಡನೆ ಕೂಡಿ ಗೋಕಾಕ್ ಕಡೆ ಪ್ರವಾಸ ಹೋಗುತ್ತಿರುವುದು ಮನಸಿಗೆ ಹೆಚ್ಚು ಖುಷಿ ನೀಡಿತು. ಕಾಯುತ್ತಿದ್ದ ಆ ದಿನವೂ ಬಂತು. ಅಪ್ಪ ಅಮ್ಮನಿಗೆ ಟಾಟಾ ಹೇಳಿ ಆಶೀರ್ವಾದವನ್ನು ಪಡೆದುಕೊಂಡು ಮಧ್ಯರಾತ್ರಿ 1.30ಕ್ಕೆ 7 ಜನರ ತಂಡ ಮನೆ ಬಿಟ್ಟೆವೂ. ಅದರಲ್ಲಿ ಶರತ್,ಶಿವರಾಜ್, ಚಂದ್ರಶೇಖರ್ ದೊಡ್ಡಮನಿ, ಗುರುಸ್ವಾಮಿ, ಗೌತಮಿ ಸೇರಿದಂತೆ ಇವರೆಲ್ಲಾ ನನ್ನ ಸೀನಿಯರ್ಸ್ ಆಗಿದ್ದರು. ವಿಶೇಷ ಅಂದ್ರೆ ನಮ್ಮೊಂದಿಗೆ ನನ್ನ ತಂಗಿ ಯುಗಶ್ರೀಯು ಬಂದಿದ್ದಳು. ಟ್ರೈನ್ ತುಂಬಾ ರೆಷ್ ಆಗಿದ್ದರಿಂದ ನಮಗೆ ಕುಳಿತುಕೊಳ್ಳಲು ಸ್ಥಳ ಸಿಗಲಿಲ್ಲ. ಕೊನೆಯ ಭೋಗಿಯಲ್ಲಿ ಸ್ಥಳ ಸಿಕ್ಕಿತು. ಇನ್ನೆನ್ನೂ ನಿದ್ದೆ ಜೋಂಪಿಗೆ ಹೋದ ನಮಗೆ ಯಾರೋ ಬಂದು ಹೊಡೆದು ಎಬ್ಬಿಸಿದ ಹಾಗಾಯ್ತು. ಕಣ್ಣು ಬಿಟ್ಟು ನೋಡಿದರೆ ನಾವು ಹುಬ್ಬಳ್ಳಿಯಲ್ಲಿ ಇದ್ದೆವು.

ರೈಲು ತನ್ನ ಕೊನೆ ಭೋಗಿಯನ್ನ ಕಳಚುವುದರ ಪರಿಣಾಮ ಆ ಭೋಗಿಯನ್ನು ಬಿಟ್ಟು ಬೇರೆಯ ಕಡೆ ಹೋಗಬೇಕಾಯ್ತು ಆದರೆ ಕುಳಿತುಕೊಳ್ಳಲು ಸ್ಥಳ ಸಿಗದೆ ಹೇಗೋ ನಾವು ಮುಂಜಾನೆ 10 ಗಂಟೆಗೆ ಗೋಕಾಕ್ ಸ್ಥಳಕ್ಕೆ ಬಂದಿಳಿದ್ದೆವು. ಕರ್ನಾಟಕದ ಹಲವೆಡೆ ಓಡಾಡಿದ್ದರೂ ಬೆಳಗಾವಿ ಜಿಲ್ಲೆಗೆ ಬಂದದ್ದು ಇದೇ ಮೊದಲು. ಬೆಳಗಾವಿ ಜಿಲ್ಲೆಯಲ್ಲಿ ಎರಡನೇ ಅತೀ ದೊಡ್ಡ ನಗರವಾದ ಗೋಕಾಕ್ ಪಶ್ಚಿಮ ಘಟ್ಟಗಳಿಂದ ಸುತ್ತುವರೆದಿದೆ. ಹಚ್ಚ ಹಸಿರು ವಾತಾವರಣ ಹಾಗೂ ಏಸಿಯ ಹಾಗೆ ಸದಾ ಕೂಲ್ ಅಗಿರುವಂತಹ ಸ್ಥಳಕ್ಕೆ ನಮ್ಮನ್ನ ನಾವು ಮೈಗೂಡಿಸಿಕೊಂಡು ನಡೆಯಲಾರಂಭಿಸಿದೇವು.ಗೋಕಾಕ್‍ದಲ್ಲಿಯೂ ಹಳದಿ ಕೆಂಪು ತೋರಣಗಳು, ಬಾವುಟಗಳು ನಮಗೆ ಸ್ವಾಗತ ಕೋರಿದವು.

ತುಂಬಾ ಹಸಿದಿದ್ದ ನಾವು ಅಲ್ಲೇ ಒಂದು ಅಂಗಡಿಯಲ್ಲಿ ಮೆಣಸಿನಕಾಯಿ ಬಜ್ಜಿ, ಪೂರಿ, ಪಲಾವ್ ತಿಂದು ಟೀ ಕುಡಿದು ಗೋಕಾಕ್ ಅರಬ್ಬಿಯ ಕಡೆಗೆ ನಡೆದೆವು. ನಮ್ಮ ರಾಜ್ಯ ಜಲಪಾತಗಳ ತವರೂರು. ಸಿರಿ ಸೌಂದರ್ಯದ ರುದ್ರರಮಣೀಯ ಖಣಜಗಳು ಎಂದರೆ ಇಲ್ಲಿನ ಫಾಲ್ಸ್. ನಿಸರ್ಗ ಪ್ರಿಯರ ಆಕರ್ಷಣಿಯ ಕೇಂದ್ರ ಬಿಂದುವೂ ಹೌದು. ಪ್ರಕೃತಿಯ ಸುಂದರ ತಾಣಗಳಲ್ಲಿ ಒಂದಾದ ಹಾಗೂ ಮಳೆಗಾಲದಲ್ಲಿ ಮೈದುಂಬಿ ಹರಿಯುವುದು ಗೋಕಾಕ್ ಜಲಪಾತದ ವಿಶೇಷ. ಮಳೆಗಾಲ ಇದೀಗ ಪ್ರಾರಂಭವಾದರಿಂದ ನೀರು ತೀರಾ ಕಡಿಮೆ ಇತ್ತು.

ಗೋಕಾಕ್ ಜಲಪಾತವನ್ನು ಪ್ರವೇಶಿಸುತ್ತಿದ್ದಾಗೆ ನಮ್ಮ ಕಣ್ಣಿಗೆ ಕಂಡದ್ದು ಹಳೆಕಾಲದ ಕಾಟನ್ ಮಿಲ್ ಅದು ನೋಡುವುದ್ದಕ್ಕೆ ಡಿಟೋ ಇಂಡಿಯನ್ ಆಕ್ಸ್‍ಫಾರ್ಡ್ ವಿಶ್ವವಿದ್ಯಾನಿಲಯದ ತರನೆ ಇತ್ತು. ಅಲ್ಲಿಂದ ಕೆಳಗಿಳಿದು ಹೋದರೆ ನಮ್ಮ ಕಣ್ಣಿಗೆ ಕಾಣಸಿಗುವುದು ತೂಗು ಸೇತುವೆ.

ಅಪರೂಪದ ತೂಗು ಸೇತುವೆ

ಪೂರ್ವಭಿಮುಖವಾಗಿ ಹರಿಯುವ ಘಟಪ್ರಭೆಗೆ, ದಕ್ಷಿಣೋತ್ತರವಾಗಿ ತಂತಿಯ ತೂಗು ಸೇತುವೆಯನ್ನು ನಿರ್ಮಿಸಲಾಗಿದೆ. ಅಪರೂಪದ ತೂಗುವ ತಂತಿಯ ಸೇತುವೆ ಕರ್ನಾಟಕದಲ್ಲಿ ಬೇರಾವ ನದಿಗೂ ನಿರ್ಮಿಸಿಲ್ಲ. ಇದರ ಮೇಲೆ ನಿಂತು ನದಿಯ ಅಂದವನ್ನು ವೀಕ್ಷಿಸುವುದೇ ಒಂದು ಭಾಗ್ಯ. ಈ ಸೇತುವೆಯ ಮೇಲೆ ನಡೆದಾಡುವುದರೊಂದಿಗೆ ಪುಳಕಗೊಳ್ಳುವ ಅವಕಾಶ ಇರುವುದು ಗೋಕಾಕ್ ಜಲಪಾತದಲ್ಲಿ ಮಾತ್ರ.

1 ಮೀ ಅಗಲ, 210ಮೀ (659 ಅಡಿ) ಉದ್ದವಿರುವ ಅಪರೂಪದ ಈ ತಂತಿ ಸೇತುವೆ ಅದ್ಭುತವಾಗಿದೆ. ನದಿಯ ಒಂದು ದಂಡೆಯಿಂದ ಇನ್ನೊಂದು ದಂಡೆಗೆ ಕಾಲ್ನಡಿಗೆಯಲ್ಲಿ ತಲುಪಲು ಈ ತೂಗುಸೇತುವೆ ಸರಳ ದಾರಿಯಾಗಿದೆ. ನದಿಯ ಕಲ್ಲುಬಂಡೆ ಹಾಸಿಗೆಯಿಂದ 14ಮೀ (46 ಅಡಿ) ಎತ್ತರದಲ್ಲಿ ಈ ತೂಗು ಸೇತುವೆ ನಿರ್ಮಿಸಲಾಗಿದ್ದು, ನದಿಯಲ್ಲಿ ಭರ್ತಿ ನೀರು ಬಂದಾಗ ಸೇತುವೆ ಮೇಲಿಂದ ಅಡ್ಡಾಡುವುದೇ ಒಂದು ರಸಘಳಿಗೆ. ಇದರ ಮೇಲೆ ಚಲಿಸುವಾಗ ಹೊಸಬರಾದ ನಮಗೆ ಭಯವಾದದ್ದು ಸಹಜ. ಕೆಳಗೆ ರಭಸದಿಂದ ಹರಿಯುವ ಕತ್ತಿ(ನೀರು ಅತ್ಯಂತ ರಭಸವಾಗಿ ಹರಿಯುವುದರಿಂದ ಕತ್ತಿ ನದಿಯೆಂಬ ಹೆಸರು ಬಂದಿದೆ) ನದಿಯ ಮೇಲಿನ ನಾವೆಯಲ್ಲಿ ಕುಳಿತು ಪ್ರಯಾಣಿಸಿದ ಅನುಭವವಾಗುತ್ತದೆ.

ಇಂತಹ ಸೇತುವೆ ಮೇಲೆ ನಡೆದಾಡುವುದೇ ಒಂದು ಥ್ರಿಲ್. ಇದರ ಮೇಲೆ ನಡೆದುಕೊಂಡು ಹೋಗುವಾಗ ವಾಯುದೇವನೂ ಕೂಡಾ ಒಂದು ಕ್ಷಣ ಎಂತಹ ಮನಸುಗಳಲ್ಲೂ ಭಯದ ವಾತವರಣವನ್ನು ಸೃಷ್ಟಿಸಿಬಿಡುತ್ತಾನೆ. ರಭಸವಾಗಿ ಗಾಳಿ ಬೀಸಿದರೆ ಸಾಕು ಆಯ ತಪ್ಪಿ ಎಲ್ಲಿ ನಾವೇ ಗಾಳಿಯೊಂದಿಗೆ ತೇಲಿಹೋಗುತ್ತೇವೆಯೋ ಎಂಬ ಭಯದಲ್ಲೊಮ್ಮೆ ಚಿಟಾರನೆ ಚಿರುವುಂತಹ ಘಳಿಗೆ ರಸದೌತಣವಾಗಿರುತ್ತದೆ. ಕತ್ತಿಹೊಳೆಯೆಂದೆ ಖ್ಯಾತಿಪಡೆದ ಘಟಪ್ರಭೆ ಬೆಳಗಾವಿ ಜಿಲ್ಲೆಯಲ್ಲಿ ಎರಡನೇ ಅತೀ ದೊಡ್ಡ ನಗರವಾಗಿದ್ದು ಪಶ್ಚಿಮ ಘಟ್ಟಗಳಿಂದ ಸುತ್ತುವರೆದಿದೆ. ಘಟಪ್ರಭಾ ನದಿಗೆ ಕತ್ತಿಹೊಳೆ ಎಂದು ಕರೆಯುತ್ತಾರೆ. ತಾಮ್ರಪರ್ಣಿ ಮತ್ತು ಹಿರಣ್ಯಕೇಶಿ ನದಿಗಳು ಘಟಪ್ರಭೆಯನ್ನು ಸೇರುತ್ತವೆ. ಮಳೆಗಾಲದಲ್ಲಿ ಕಾಫಿ ಚಹಾ ವರ್ಣಕ್ಕೆ ತಿರುಗುತ್ತವೆ. ಶ್ವೇತವರ್ಣದಲ್ಲು ತಿಳಿಗೊಂಡು ಹಾಲಿನಂತೆ ನೊರೆ ನೊರೆಯಾಗಿ ಹರಿಯುತ್ತದೆ. ಇದರ ಸೊಬಗನ್ನು ನೋಡಲು ಕಣ್ಣೆರಡು ಸಾಲದು. ನೀರಿನ ರಭಸ, ಹಾಲ್ನೊರೆಯಂತಹ ಬಣ್ಣ, ಗಂಭೀರವಾದಂತಹ ಸದ್ದು, ಹತ್ತಿರದ ಸ್ಥಳಗಳಲ್ಲಿ ತಂಪಾದ ನೀರಿನ ಚಿಕ್ಕ ಚಿಕ್ಕ ಹನಿಗಳ ಸಿಂಚನ ಇವೆಲ್ಲವೂ ಸೇರಿ ನಮ್ಮ ಮನದಲ್ಲಿ ರೋಮಾಂಚನದೊಂದಿಗೆ ತಾಜತನದ ಅನುಭವವನ್ನು ನೀಡುತ್ತಿತ್ತು.

ಇದರ ಸುಂದರತೆ ಮತ್ತು ರಮಣೀಯತೆಯನ್ನು ಅತೀ ಸಮೀಪದಿಂದ ಸವಿಯುವಂತಹ ವಾತವರಣವಿದ್ದು, ಧಬಧಬ ಧರೆಗಿಳಿಯುವ ಭಯಂಕರ ಪ್ರವಾಹದಂತೆ ಘಟಪ್ರಭೆ 84 ಅಡಿ ಎತ್ತರದಿಂದ ಧುಮ್ಮಿಕ್ಕುವ ದೃಶ್ಯವನ್ನು ನೋಡಿಯೇ ಸವಿಯಬಹುದು. ಘಟಪ್ರಭೆ ಭಾರಿ ರಭಸದಿಂದ ಪ್ರಪಾತಕ್ಕೆ ಧುಮುಕುವಾಗ, ಸಿಡಿ ಮದ್ದು ಸಿಡಿದಂತೆ ನೀರು ಝಲ್ಲೆಂದು ಪುಟಿದೇಳುತ್ತದೆ. ಪ್ರಕೃತಿಯ ಆ ಅಗಾಧ ಸೌಂದರ್ಯವನ್ನು ಕಣ್ಣಿಂದ ಕಾಣಬೇಕು ಮತ್ತು ಇಂಪಾದ ಸದ್ದನ್ನು ಕಿವಿಂದ ಆಲಿಸಬೇಕು. ಪ್ರವಾಹದಂತೆ ಧುಮುಕುವ ಘಟಪ್ರಭೆ ನಂತರ ಮಂದಗಮನೆಯಾಗಿ ಮೆಲ್ಲನೆ ಚಲಿಸುವ ಈಕೆಯ ಸೌಂದರ್ಯ ನೋಡುವುದೇ ಸಂಭ್ರಮ.
ಭಾರತದ ನಯಾಗರ ಫಾಲ್ಸ್ ಎಂಬ ಹೆಗ್ಗಳಿಕೆ
ಘಟಪ್ರಭೆಯ ಸುತ್ತಲೂ ಎಲ್ಲಿ ನೋಡಿದರೂ ಹಚ್ಚ ಹಸಿರು. ಬೆಟ್ಟ ಗುಡ್ಡಗಳದ್ದೇ ಕಾರುಬಾರು.

ಇಲ್ಲಿಗೆ ಬರುವ ಪ್ರವಾಸಿಗರನ್ನು ಹಸಿರು ದೇವತೆ ಪ್ರೀತಿಸುವ ಬಗೆಯನ್ನು ಕಂಡು ಇಲ್ಲಿಂದ ಹೊರಡಲು ಮನಸ್ಸಾಗದಷ್ಟು ರಮಣೀಯತೆ ಇಲ್ಲಿದೆ. ನಿಸರ್ಗದ ಸಂಧರತೆಯನ್ನು ಸವಿಯುವುದರೊಂದಿಗೆ ಇಲ್ಲಿ ಐತಿಹಾಸಿಕ ಮಹಾಲಿಂಗೇಶ್ವರನ ದೇವಾಲಯವಿದೆ.
177 ಮೀಟರ್ (581 ಅಡಿ) ಅಗಲದ ಬಂಡೆಗಳಲ್ಲಿ ಮೇಲಿಂದ 52 ಮೀಟರ್ (171 ಅಡಿ) ಆಳದ ಕಂದಕಕ್ಕೆ ಘಟಪ್ರಭಾ ನದಿಯ ನೀರು ಧುಮ್ಮಿಕ್ಕುವುದು ಗೋಕಾಕ್ ಜಲಪಾತದ ವೈಶಿಷ್ಟ್ಯ. ವಿಶಾಲ ಬಂಡೆಗಲ್ಲಿನ ಮೇಲಿಂದ ನೀರು ಧುಮ್ಮಿಕ್ಕುವುದರಿಂದ ಈ ಜಲಪಾತವನ್ನು “ಮಿನಿ ನಯಾಗರಾ” ಎಂದು ಕರೆಯಲಾಗುತ್ತದೆ.

ಮೊದಲ ಬಾರಿಗೆ ವಿದ್ಯುತ್ ಉತ್ಪಾದಿಸಿದ ಕೇಂದ್ರ
ನೀರು ಧುಮ್ಮಿಕ್ಕುವ ಕಂದಕದ ಬಳಿ ಇರುವ ವಿದ್ಯುತ್ ಉತ್ಪಾದನೆ ಕೇಂದ್ರವನ್ನು ಬ್ರಿಟೀಷ್ ಕಾಲದಲ್ಲೇ ನಿರ್ಮಿಸಲಾಗಿದೆ. 1887ರಲ್ಲಿ ಕಾರ್ಯರಂಭ ಮಾಡಿದ್ದು, ರಾಜ್ಯದಲ್ಲೇ ಮೊದಲ ಬಾರಿ ವಿದ್ಯುತ್ ಉತ್ಪಾದಿಸಿದ ಕೇಂದ್ರ ಎಂಬ ಹೆಗ್ಗಳಿಕೆ ಪಡೆದಿದೆ. ತದನಂತರ ಬೆಂಗಳೂರಿನಲ್ಲಿ ಆರಂಭಿಸಲಾಯಿತು.ಮಹಾಲಿಂಗೇಶ್ವರ ದೇವಾಸ್ಥಾನ ಇನ್ನೂ ಈ ಸ್ಥಳದ ಕುತೂಹಲಕಾರಿ ಅಂಶವೆಂದರೆ ಚಾಲುಕ್ಯರ ಕಾಲಕ್ಕೆ ಸೇರಿದ ಸ್ಮಾರಕಗಳು ಇಲ್ಲಿನ ಕಲ್ಲಿನ ಕಣಿವೆಯ ಎರಡೂ ದಂಡೆಗಳಲ್ಲಿ ದೊರೆತಿರುವುದು. ಈ ಸ್ಥಳದ ಮತ್ತೊಂದು ಆಕರ್ಷಣೆ ಎಂದರೆ ಚಾಲುಕ್ಯ ವಾಸ್ತುಶೈಲಿಯಲ್ಲಿ ನಿರ್ಮಿಸಲಾದ ಮಹಾಲಿಂಗೇಶ್ವರನ ದೇವಾಸ್ಥಾನ.

ಟ್ರೆಕ್ಕಿಂಗ್ ಗೆ ಹೇಳಿಮಾಡಿಸಿದ ಸ್ಥಳ

ಗೋಕಾಕ್ ಫಾಲ್ಸ್ ಧುಮ್ಮಿಕ್ಕುವುದ್ದನ್ನು ಕೆಳಗಿನಿಂದ ನೋಡಬೇಕೆಂದರೆ ಸುಮಾರು 2 ರಿಂದ 3 ಕಿ.ಮೀ ಕೆಳಗೆ ನಡೆದುಹೋಗಬೇಕು. ಕರ್ನಾಟಕದ ಕರಾವಳಿ ಮತ್ತು ಮಲೆನಾಡಲ್ಲಿ ಧೋ ಧೋ ಎಂದು ಮಳೆಯಾಗಿ ಒಂದು ಹಂತಕ್ಕೆ ಬಂದು ನಿಂತ ಮೇಲೆ ಟ್ರೆಕ್ಕಿಂಗ್‍ಗೆ ಅಣಿಯಾಗುವಂತಹ ಸಾಹಸಿಗರಿಗೆ ಗೋಕಾಕ್ ಜಲಪಾತ ಹೇಳಿಮಾಡಿಸಿದಂತಹ ಸ್ಥಳವಾಗಿದೆ. ಇಲ್ಲಿ ನಡೆಯುತ್ತ ಹೋದರೆ ಡಿಟೋ 6-5=2 ಮೂವೀಯಲ್ಲಿ ಇರುವಂತಹ ಟ್ರೆಕ್ಕಿಂಗ್‍ನ ಅನುಭವ ನೀಡುತ್ತದೆ. ಆದರೆ ಅಲ್ಲಿ ದೆವ್ವ ಇರುತ್ತೆ ಇಲ್ಲಿ ನಾವೇ ದೆವ್ವಗಳಾಗಿರುತ್ತವೆ. ದೊಡ್ಡ ದೊಡ್ಡ ಬಂಡೆಗಳು, ಜಾರುವಂತಹ ಕಲ್ಲುಗಳು, ತೊರೆಗಳು, ಗಿಡ ಮರಗಳು, ನಮ್ಮ ಧ್ವನಿ ನಮಗೆ ಪಿಸುಗುಡುವಂತಹ ನಿಶಬ್ಧ ವಾತವರಣ ಹೀಗೆ ಇವೆಲ್ಲಾ ಸೇರಿ ಎಂತಹವರಿಗೂ ಪ್ರಕೃತಿ ಮೇಲೆ ಲವ್ ಆಗಿಬಿಡುತ್ತದೆ.

ಗೋಕಾಕ್ ಸ್ಪೇಷಲ್ ಕರದಂಟು

ಗೋಕಾಕ್ ಬಗ್ಗೆ ಇಷ್ಟೇಲ್ಲಾ ಹೇಳಿ ಕರದಂಟನ್ನು ಮರೆಯಲು ಸಾಧ್ಯವೇ? ಬೆಳಗಾವಿಯತ್ತ ಪ್ರಯಾಣ ಬೆಳೆಸಿದರೆ ಅಲ್ಲಿಯ ಕುಂದ ಹಾಗೂ ಗೋಕಾಕ್‍ನ ಕರದಂಟು ಅಥವಾ ಅಂಟುಹುಂಡೆಯನ್ನು ಸವಿಯದೆ ಬಂದವರೆ ಇಲ್ಲ. ಅಂಟು ಹಾಕಿ ತಯಾರಿಸುವ ಈ ಉಂಡೆಯನ್ನು ಕರ(ಕೈ)ದಲ್ಲಿ ಉಂಡೆ ಕಟ್ಟುವುದರಿಂದ ಈ ಹೆಸರು ಬಂದಿರಲೂಬಹುದು ಅಲ್ವಾ? ಅದೇನೆ ಇರಲಿ, ಖರ್ಜೂರ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಒಣ ಕೊಬ್ಬರಿ ತುರಿ, ಗಸಗಸೆ, ಅಂಟು, ಬೆಲ್ಲ, ತುಪ್ಪ ಹೀಗೆ ಇವೆಲ್ಲವನ್ನು ಹಾಕಿ ಮಾಡಿದಂತಹ ಕರದಂಟು ಆರೋಗ್ಯಕರವಾದಂತಹ ತಿನಿಸಾಗಿದೆ. ಈ ಗಿರಮಿಟ್ ಜತೆ ಗೋಕಾಕ್‍ನ ಕರದಂಟನ್ನು ಮೆಲ್ಲುತ್ತ ಭೋರ್ಗರೆಯುವ ಜಲಪಾತ ನೋಡುತ್ತಿದ್ದಾರೆ ನಮ್ಮ ಕಣ್ಣಿಗೆ ಹಬ್ಬವಾಗುವುದರೊಂದಿಗೆ ಬಾಯಿಗೆ ಸಿಹಿಯೂ ಆಗುವುದರಲ್ಲಿ ಸಂಶಯವೇ ಇಲ್ಲ!

ಪ್ರವಾಸಿಗರ ತಾಣ

ನೋಡುಗರ ಆಕರ್ಷಣೀಯ ಕೇಂದ್ರ ಬಿಂದುವಾದ ಗೋಕಾಕ್ ಫಾಲ್ಸ್ ಅನ್ನು ನೋಡಲು ಪಕ್ಕದ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ದೂರದೂರದ ಊರಿಂದ ಪ್ರವಾಸಿಗರು ಈ ಸೌಂದರ್ಯವನ್ನು ಸವಿಯಲು ಬರುತ್ತಾರೆ. ಸೆಲ್ಫೀ, ಫೋಟೋ ತೆಗೆಸಿಕೊಳ್ಳುವುದರೊಂದಿಗೆ ಬೆಟ್ಟದ ಇಕ್ಕೆಲ್ಲಗಳಲ್ಲಿ ಜೋಡಿಸಿರುವ ತೂಗು ಸೇತುವೆಯಲ್ಲಿ ಕೇಕೆ ಹೊಡೆದು ಕುಣಿದು ಕುಪ್ಪಳಿಸುತ್ತಾರೆ. ಒಟ್ಟಾರೆಯಾಗಿ ಈ ಸಮಯವೂ ಪ್ರವಾಸಿಗರಿಗೆ ಪ್ರವಾಸ ಮಾಡಲು ಹೇಳಿಮಾಡಿಸಿದಂತಹ ಸ್ಥಳವಾಗಿದೆ.

ಮಾರ್ಗ

ಗೋಕಾಕ್ ಜಲಪಾತ ಬೆಳಗಾವಿಯಿಂದ 58 ಕಿ.ಮೀ. ಹಾಗೂ ಗೋಕಾಕ್ ಪಟ್ಟಣದಿಂದ 6 ಕಿ.ಮೀ ದೂರದಲ್ಲಿದೆ. ಈ ಜಲಪಾತ ಕೊಲ್ಲಾಪುರದಿಂದ 100 ಕಿ.ಮೀ., ಸಾಂಗ್ಲಿಯಿಂದ 66 ಕಿ.ಮೀ ಪಣಜಿಯಿಂದ 140 ಕಿ.ಮೀ ದೂರದಲ್ಲಿದೆ. ಗೋಕಾಕ್ ರೋಡ್ ಮತ್ತು ಘಟಪ್ರಭಾ ರೈಲ್ವೆ ನಿಲ್ದಾಣಗಳು ಜಲಪಾತದಿಂದ 10 ಕಿ.ಮೀ ಅಂತರದಲ್ಲಿದೆ. ಬೆಳಗಾವಿ, ಗೋಕಾಕ್ ಮತ್ತು ನಗರ ಪ್ರದೇಶಗಳಿಂದ ಜಲಪಾತಕ್ಕೆ ಸಾರಿಗೆ ಸಂಸ್ಥೆಯ ಬಸ್ ಸೌಕರ್ಯ ಇದೆ. ಖಾಸಾಗಿ ವಾಹನಗಳ ಮೂಲಕವೂ ಗೋಕಾಕ್ ಜಲಪಾತದ ಸ್ಥಳ ತಲುಪಬಹುದು.

ಪ್ರೀತಿ.ಟಿ.ಎಸ್
ಪತ್ರಿಕೋದ್ಯಮ ವಿದ್ಯಾರ್ಥಿನಿ
3ನೇ ಸೆಮಿಸ್ಟರ್
ದಾವಣಗೆರೆ ವಿಶ್ವವಿದ್ಯಾನಿಲಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂಕಣ

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

Published

on

ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.

ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.

ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.

ನಾಯಕ ನಟನಾಗಿ ​ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.

ಇನ್ನು 2022ರಲ್ಲಿ ​ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ​ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪರಿಶ್ರಮ ಮತ್ತು ಫಿಟ್ನೆಸ್

ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.

ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್

ಕುಚುಕು ನಾಯಕ ನಟ ಚೌಹಾಣ್

ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
​ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ

ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ಬಂಜಾರ ಹವೇಲಿಯ ಹರಿಕಾರ

ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.

​ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.

ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ...

ದಿನದ ಸುದ್ದಿ3 days ago

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

ಗಿರೀಶ್ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ...

ದಿನದ ಸುದ್ದಿ3 days ago

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

~ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ...

ಅಂಕಣ3 days ago

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ....

ದಿನದ ಸುದ್ದಿ4 days ago

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ...

ದಿನದ ಸುದ್ದಿ4 days ago

ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು...

ದಿನದ ಸುದ್ದಿ6 days ago

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ...

ದಿನದ ಸುದ್ದಿ6 days ago

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ....

ದಿನದ ಸುದ್ದಿ6 days ago

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ...

ದಿನದ ಸುದ್ದಿ1 week ago

ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್

ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ...

Trending